Connect with us

ರಾಜಕೀಯ

ಕೇಜ್ರಿವಾಲ್ ಮತ್ತು ದೆಹಲಿ ಗಲಭೆ

Published

on

  • ವಿ.ನಟರಾಜ್

ದೆಹಲಿಯ ಮತೀಯ ಗಲಭೆಗಳ ನಿರ್ವಹಣೆಯ ವಿಚಾರದಲ್ಲಿ ಅಗತ್ಯಕ್ಕಿಂತಲೂ ಹೆಚ್ಚಿನ ಅಸಹಾಯಕತೆಯನ್ನು ಪ್ರದರ್ಶಿಸಿರುವ ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರ ಬಗ್ಗೆ‌ ಬಹುತೇಕ ಗೆಳೆಯರು ಧಿಡೀರನೆ ಭ್ರಮನಿರಸನಗೊಂಡಿದ್ದಾರೆ.

ಮತೀಯ ಗಲಭೆ ವಿಚಾರದಲ್ಲಿ ಮೋದಿ-ಶಾ ಜೋಡಿಯ ‘ಎಂದಿನ ಸಂವೇದನಾಶೂನ್ಯತೆ’ಯನ್ನು, ಅದರಲ್ಲಿಯೂ ವಿಶೇಷವಾಗಿ ಕಾಶ್ಮೀರದ ವಿಚಾರದಲ್ಲಿ ತಾನು ಭಲೇ ಭಲೇ ಉಕ್ಕಿನ ಮನುಷ್ಯ ಎಂದು ಸಾಬೀತು ಪಡಿಸಿರುವುದಾಗಿ ತೊಡೆ ತಟ್ಟುತ್ತಿದ್ದ ಗೃಹ ಸಚಿವ ಅಮಿತ್‌ ಶಾ, ದೆಹಲಿ ಗಲಭೆಯ ವಿಚಾರದಲ್ಲಿ ಬೇಕೆಂದೇ ಬೆನ್ನುಮೂಳೆ ಕಳೆದುಕೊಂಡ ಬಗ್ಗೆ ಹೆಚ್ಚಿನ ತಕರಾರು ಪ್ರಗತಿಪರರಿಗೂ ಇದ್ದಂತಿಲ್ಲ.

ಯಾಕೆಂದರೆ, ಇಂಥದ್ದನ್ನೆಲ್ಲಾ ಈ ಜೋಡಿಯ ಆಡಳಿತ ಕಾಲದಲ್ಲಿ ನೋಡಲು ಬಹುಶಃ ಎಲ್ಲ ಪ್ರಗತಿಪರರೂ ಮಾನಸಿಕವಾಗಿ ಸಿದ್ಧರಾಗಿದ್ದಂತಿದೆ. ಆದರೆ, ಕೇಜ್ರಿವಾಲ್‌ ಕೂಡಾ ಇಷ್ಟು ಬೇಗನೇ ಮತೀಯಗಲಭೆಗಳಂತಹ ಗಂಭೀರ ವಿಷಯದಲ್ಲಿ ಶುದ್ಧಾತಿಶುದ್ಧ ರಾಜಕಾರಣಿಯಾಗಿ ಹೊರಹೊಮ್ಮುತ್ತಾರೆ, ಆಪ್ ನ ದೆಹಲಿ ರಾಜಕಾರಣಿಗಳು ರಂಗೋಲಿ ಕೆಳಗೆ ತೂರುವಂತಹ ಮಾತುಗಳನ್ನು ಆಡತೊಡಗುತ್ತಾರೆ ಎನ್ನುವುದನ್ನು ಬಹುತೇಕ ಗೆಳೆಯರು ನಿರೀಕ್ಷಿಸಿರಲಿಲ್ಲ.

ಇದೀಗ ದೇಶದ್ರೋಹ ಪ್ರಕರಣದಲ್ಲಿ ಜೆಎನ್‌ಯು ಮಾಜಿ ಮುಖಂಡ ಕನ್ಹಯ್ಯ ಕುಮಾರ್ ಹಾಗೂ ಸಂಗಡಿಗರ ವಿರುದ್ಧ ದೇಶದ್ರೋಹದ ಪ್ರಕರಣದ ವಿಚಾರಣೆಗೆ ದೆಹಲಿ ಸರ್ಕಾರ ಅನುಮತಿ ನೀಡಿರುವುದು ಸಹ ಅನೇಕರಿಗೆ ಅಚ್ಚರಿ ಉಂಟುಮಾಡಿದೆ. ದೆಹಲಿ ಗಲಭೆಯ ವಿಚಾರದಲ್ಲಿ ಆಪ್‌ ನ ಧೋರಣೆಯನ್ನು ಖಂಡಿಸಿದ್ದ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಪರೋಕ್ಷವಾಗಿ ಕೇಜ್ರಿ ಸರ್ಕಾರ ಚಾಟಿ ಬೀಸಿದೆಯೇ ಎನ್ನುವ ಅನುಮಾನ ಮೇಲುನೋಟಕ್ಕೇ ಗೋಚರಿಸುತ್ತಿದೆ.

ದೆಹಲಿ ಮತೀಯ ಗಲಭೆಗಳ ಮೊದಲ ಮೂರು ದಿನ ಆಪ್ ವರ್ತಿಸಿದ ರೀತಿ ಹೇಗಿತ್ತೆಂದರೆ, ಇಂತಹದ್ದೊಂದು ಗಲಭೆ ಸಂಭವಿಸಿದರೆ ಮಾತ್ರ ದೆಹಲಿ ಸರ್ಕಾರದ ಕೆಳಗೆ ಪೊಲೀಸ್‌ ಇಲಾಖೆ ಹಾಗೂ ಆ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹೊಣೆ ಬರಬೇಕು ಎನ್ನುವ ತನ್ನ ವಾದಕ್ಕೆ ಬಲ ಬರುತ್ತದೆ ಎನ್ನುವಂತಿತ್ತು. ಕೇಜ್ರಿವಾಲ್‌ ಅವರಂತೂ ‘ಹೆಚ್ಚುವರಿ’ ಅಸಹಾಯಕತೆಯನ್ನೇ ತಮ್ಮ ಮೇಲೆ ಆವಾಹಿಸಿಕೊಂಡವರಂತೆ ‘ಪೊಲೀಸ್‌ ಇಲಾಖೆ ನಮ್ಮ ಬಳಿ ಇಲ್ಲ’, ಎನ್ನುವುದನ್ನು ಸಾರಿ ಸಾರಿ ಹೇಳುವಂತೆ ಪ್ರತಿಕ್ರಿಯಿಸಿದರು.

ಇಂತಹದ್ದೊಂದು ‘ಚಾಲಾಕಿತನದ ರಾಜಕಾರಣ’ವನ್ನು ಕೇಜ್ರಿವಾಲ್ ಯಾವತ್ತಿದ್ದರೂ‌ ಪ್ರದರ್ಶಿಸುತ್ತಾರೆ ಎನ್ನುವುದು ಅವರ ಹೋರಾಟಗಳನ್ನು ಹತ್ತಿರದಿಂದ ಗಮನಿಸಿದವರಿಗೆ ತಿಳಿಯದ ವಿಷಯವೇನಲ್ಲ. ಎಷ್ಟಾದರೂ ಕೇಜ್ರಿವಾಲ್ ಇಂದಿನ ಪೀಳಿಗೆ ಬಯಸುವ ಫಟಾಫಟ್ ಕಾರ್ಪೊರೆಟ್‌ ಮಾದರಿ ರಾಜಕಾರಣವನ್ನು ಅನುಸರಿಸುತ್ತಾ‌ ಅಡಳಿತಾತ್ಮಕ ವಿಷಯಗಳ ಮೂಲಕ ಅಂಕಗಳಿಸುವ ರಾಜಕಾರಣಿಯೇ ಹೊರತು ಸೈದ್ಧಾಂತಿಕವಾಗಿ ಗಟ್ಟಿಯಾದ, ದಿಟ್ಟ ಹೆಜ್ಜೆಯನ್ನು ಇಡಬಹುದಾದ ರಾಜಕಾರಣಿ ಅಲ್ಲ.

ಈ ಬಗ್ಗೆ ತಕರಾರು ತೆಗೆಯ ಬಯಸುವವರ ವಾದಗಳಿಗೆ ಕೇಜ್ರಿವಾಲ್ ರ ಈವರೆಗಿನ ನಡೆಗಳಲ್ಲಿ ಹೆಚ್ಚಿನ ಸಾಕ್ಷ್ಯಗಳೂ ಸಿಗುವುದಿಲ್ಲ. ಕೇಜ್ರಿ ಹೀಗೇಕೆ ಎಂದು ಕಾರಣ ಹುಡುಕುತ್ತಾ ಹೊರಟವರಿಗೆ, ಇದೆಲ್ಲದರ ಬೀಜಗಳು ಇರುವುದು ಅವರನ್ನು ಅಧಿಕಾರ ರಾಜಕಾರಣದ ಕೇಂದ್ರಕ್ಕೆ ತಂದ “ಭ್ರಷ್ಟಾಚಾರದ ವಿರುದ್ಧ”ದ ಹೋರಾಟದಲ್ಲಿ ಎನ್ನುವುದನ್ನು ಇಲ್ಲಿ ಮತ್ತೊಮ್ಮೆ ನೆನಪಿಸಬೇಕಾಗುತ್ತದೆ.

ಭ್ರಷ್ಟಾಚಾರದ ವಿರುದ್ಧದ ಹೋರಾಟ ಎನ್ನುವ ಅಣ್ಣಾ ಹಜಾರೆಯವರ ನೇತೃತ್ವದಲ್ಲಿ ನಡೆದ ‘ದೆಹಲಿ ಕೇಂದ್ರಿತ’ ಹೋರಾಟವನ್ನು ಬಿಜೆಪಿ ಹೈಜಾಕ್‌ ಮಾಡದಂತೆ ಕೇಜ್ರಿವಾಲ್‌ ತಡೆದರು ಎನ್ನುವುದನ್ನು ಹೊರತುಪಡಿಸಿದರೆ, ಅವರು ಭ್ರಷ್ಟಾಚಾರದ ಹೋರಾಟವನ್ನು ಮತೀಯವಾದಿ ಮನಸ್ಸುಗಳನ್ನು ದೂರವಿಟ್ಟು ಕಟ್ಟಿದರು ಎಂದು ಯಾರೂ ಎದೆತಟ್ಟಿ ಹೇಳಲಾರರು.

ಒಂದೆಡೆ ಕಾಂಗ್ರೆಸ್‌ನ ಅಹಿಂದ ವೋಟ್‌ ಬ್ಯಾಂಕ್‌, ಮತ್ತೊಂದೆಡೆ ಬಿಜೆಪಿಯ ಮತೀಯವಾದಿ ರಾಜಕಾರಣ ಈ ಎರಡರಿಂದ ಸೈದ್ಧಾಂತಿಕವಾಗಿ ಸಮಾನಾಂತರವಾಗಿ ಇದ್ದುಕೊಂಡು ತಮ್ಮದೇ ಆದ ವೋಟ್‌ ಬ್ಯಾಂಕ್‌ ರೂಪಿಸಿಕೊಳ್ಳುವುದು ಸುದೀರ್ಘ ಅವಧಿಯನ್ನು, ಶ್ರಮವನ್ನು ಬೇಡುವಂತಹ ರಾಜಕಾರಣ ಎನ್ನುವುದನ್ನು ಅರಿತಿದ್ದ ಕೇಜ್ರಿವಾಲ್, ಫಟಾಫಟ್‌ ರಾಜಕಾರಣಕ್ಕೆ ಮೊರೆ ಹೋದರು.

ಈ ಎರಡೂ ರಾಷ್ಟ್ರೀಯ ಪಕ್ಷಗಳಿಂದ ಸುಲಭಕ್ಕೆ‌ ‘ವೋಟು ಕೀಳುವ’ ರಾಜಕಾರಣಕ್ಕೆ ತಮ್ಮನ್ನು ಮುಡಿಪಾಗಿಟ್ಟುಕೊಂಡರು. ಕೇಜ್ರಿವಾಲ್‌ ಭ್ರಷ್ಟಾಚಾರದ ವಿರುದ್ಧ ಮಾತನಾಡಿದಷ್ಟೇ ಉತ್ಸಾಹದಿಂದ ಸಾಮಾಜಿಕ ನ್ಯಾಯ, ಮತೀಯ ಸಾಮರಸ್ಯದಂತಹ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ. ಈ ವಿಚಾರಗಳು ಬಂದಾಗ ಪ್ರಗತಿಪರರ ಮನಸ್ಸಿಗೆ ನೋವಾಗದಂತೆ ಎಚ್ಚರಿಕೆ ವಹಿಸುತ್ತಾರಾದರೂ, ಸ್ಥಳೀಯ ರಾಜಕಾರಣದಲ್ಲಿ ತಮ್ಮನ್ನು ಬೆಂಬಲಿಸುವ ಮೂಲತಃ ಬಿಜೆಪಿಯ ಮತದಾರರ ಆಕ್ರೋಶವನ್ನು ಕಟ್ಟಿಕೊಳ್ಳುವಷ್ಟು ದೂರಕ್ಕೆ ಅವರೆಂದೂ ಹೋಗುವುದಿಲ್ಲ. ಒಂದು ವೇಳೆ ಹೋದರೂ, ಅವಕಾಶ ನೋಡಿ ಚಕ್ಕನೆ ಹಿಂದಕ್ಕೆ ಪಲ್ಟಿ ಹೊಡೆದು ಬಿಡುತ್ತಾರೆ!

ಈ ವಿಷಯದಲ್ಲಿ ಅವರೊಬ್ಬ ಉತ್ತಮ ‘ಅಕ್ರೋಬ್ಯಾಟ್’. ಕೇಜ್ರಿವಾಲ್‌ ಅವರನ್ನು ಮುಂದೆ ಬಿಟ್ಟುಕೊಂಡ ಹಿಂದೆ ಓಡುವುದೆಂದರೆ ಅದೊಂದು ದುಸ್ಸಾಹಸವೇ ಸರಿ. ಕೇಜ್ರಿ, ಯಾವಾಗ ಛಕ್ಕನೆ ಲೇನ್‌ ಬದಲಿಸಿ ಹಿಂದಕ್ಕೆ ತಿರುಗಿ ಓಡಿಬಿಡುತ್ತಾರೋ ಹೇಳಲುಬಾರದು! ಹಾಗಾಗಿಯೇ, ಅವರ ಈ ವರಸೆಗಳನ್ನು ಕಂಡಾಗ, ಸದಾಕಾಲ ಅಧಿಕಾರದ ಕೇಂದ್ರದಲ್ಲಿರಲು ಅತ್ತಿಂದಿತ್ತ ಲಾಗ ಹಾಕುವ ಜೆಡಿಯು ಮುಖಂಡ ನಿತೀಶ್‌ ಕುಮಾರ್ ಅವರ ಸುಧಾರಿತ ಆವೃತ್ತಿಯಂತೆ ಕೇಜ್ರಿ ಭಾಸವಾಗುತ್ತಾರೆ!

ಬಿಜೆಪಿಯನ್ನು ವಿರೋಧಿಸುವ ಕಟ್ಟರ್‌ ಕಾಂಗ್ರೆಸ್ಸಿಗರು ಹಾಗೂ ಸಮಾಜವಾದಿಗಳಿಗೆ, ಅದೇ ರೀತಿ, ಕಾಂಗ್ರೆಸ್‌ ಹಾಗೂ ಸಮಾಜವಾದಿಗಳನ್ನು ಕಂಡರೆ ಉರಿದುಬೀಳುವ ಉಗ್ರ ಹಿಂದುತ್ವವಾದಿಗಳಿಗೆ ಕೇಜ್ರಿವಾಲ್‌ ಒಂದು ತಂಗುದಾಣದಂತೆ. ಹೇಗಾದರೂ ಸರಿ ತಮ್ಮ ವೋಟು ಕಾಂಗ್ರೆಸ್ಸಿಗೆ ಹೋಗಬಾರದು ಎಂದು ಬಯಸುವವರು, ಎಷ್ಟಾದರೂ ಸರಿ, ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದು ಇಚ್ಛಿಸುವವರು ಕೇಜ್ರಿವಾಲ್‌ ರ ಪರಿಣಾಮಕಾರಿ ಆಡಳಿತ ಶೈಲಿಗೆ ಜೈಕಾರ ಹಾಕಿ ಅವರಿಗೆ ಮತ ನೀಡುತ್ತಾರೆ. ಹೀಗೆ ತಮಗೆ ಯಾವುದೇ ಸೈದ್ಧಾಂತಿಕ ಬಲದ ಸಹಾಯವಿಲ್ಲದೆ ಹರಿದುಬರುವ ಮತಗಳಿಂದಾಗಿ, ಕೇಜ್ರಿಯವರು ಯಾವತ್ತೂ ಹ್ಯಾಪಿಯೇ!

ಸೈದ್ಧಾಂತಿಕವಾಗಿ ಪೊಳ್ಳಾದರೂ ಸಹ ಇದು ಅಧಿಕಾರದ ಪಡಸಾಲೆಯಲ್ಲಿ ಬಹುಕಾಲ ಉಳಿಯುವ ವಾಸ್ತವ ರಾಜಕಾರಣದ ತಂತ್ರ ಎನ್ನುವುದನ್ನು ಅವರ ಅರ್ಥ ಮಾಡಿಕೊಂಡು, ಜೀರ್ಣಿಸಿಕೊಂಡಿದ್ದಾರೆ. ಪಾಪ, ಇದಾವುದರ ಅರಿವಿಲ್ಲದೆ, ಕೇಜ್ರಿ ಅವರಲ್ಲಿ ನೆಹರು ಪ್ರಣೀತ ಅಭಿವೃದ್ಧಿ ಮಾದರಿಯನ್ನು, ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ನಿರೀಕ್ಷಿಸಲು ಹೊರಟವರು ಭ್ರಮನಿರಸನಕ್ಕೆ ಒಳಗಾಗುತ್ತಾರೆ…

ಇನ್ನು, ಈ ಭ್ರಷ್ಟಾಚಾರದ ವಿರುದ್ಧದ ಹೋರಾಟ ಎನ್ನುವ ಪರಿಕಲ್ಪನೆ ಇಂದು ಬಹುತೇಕವಾಗಿ ಅವಕಾಶವಾದಿ ರಾಜಕಾರಣದ ಸರಕಾಗಿಬಿಟ್ಟಿದೆ. ಇದು ಎಲ್ಲರನ್ನೂ ಒಳಗೊಳ್ಳುವ, ‘ರಾಜಕೀಯ ಚಲಾವಣೆ’ಯ ಹೋರಾಟ ಎನ್ನುವ ಕಾರಣಕ್ಕೆ ಸುಲಭಕ್ಕೆ ನಮ್ಮ ಅನೇಕ ಭರವಸೆಯ ನಾಯಕರು ಗೊತ್ತಿದ್ದೋ, ಗೊತ್ತಿಲ್ಲದೆಯೋ, ಉದ್ದೇಶಪೂರ್ವಕವಾಗಿಯೋ, ದುರುದ್ದೇಶಪೂರ್ವಕವಾಗಿಯೋ ಇದಕ್ಕೆ ಜೋತು ಬೀಳುತ್ತಾರೆ. ವಿಪರ್ಯಾಸವೆಂದರೆ, ಭ್ರಷ್ಟಾಚಾರವನ್ನು ಅಸಾಮರ್ಥ್ಯದೊಂದಿಗೂ, ಅಸಾಮರ್ಥ್ಯವನ್ನು ಮೀಸಲಾತಿಯೊಂದಿಗೂ, ಮೀಸಲಾತಿಯನ್ನು ಮೇಲ್ಜಾತಿ ವಿರೋಧಿ ರಾಜಕಾರಣದೊಂದಿಗೂ ಚಕಚಕನೆ ಜೋಡಿಸಿ ಬಿಡುವ ದುರಾಲೋಚನಾ ಪ್ರವಾಹವೊಂದನ್ನು ಈ ದೇಶದಲ್ಲಿ ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ.

ಈ ಪ್ರವಾಹದ ಚಾಲಕಶಕ್ತಿಯಾಗಿರುವ ವರ್ಗವು ಯಾವುದೇ ಬಗೆಯ ಸಾಮಾಜಿಕ ಅಸಮಾನತೆಯ ಬಗ್ಗೆ ಅಪ್ಪಿತಪ್ಪಿಯೂ ಬಾಯಿಬಿಡುವುದಿಲ್ಲ, ಬದಲಿಗೆ, ಭ್ರಷ್ಟಾಚಾರದ ಬಗ್ಗೆ ಮಾತ್ರ ಉದ್ದುದ್ದ ಭಾಷಣ ಬಿಡುತ್ತದೆ. ನಿರುದ್ಯೋಗ, ಕುಸಿದಿರುವ ಆರ್ಥಿಕತೆ, ಹೆಚ್ಚುತ್ತಿರುವ ಸಾಮಾಜಿಕ ಉದ್ವಿಗ್ನತೆ, ಕಂದಾಚಾರ, ಮೌಢ್ಯಗಳ ವಿರುದ್ಧ ಇದಕ್ಕೆ ಪ್ರತಿಭಟಿಸುವ ಇರಾದೆ ಇರುವುದಿಲ್ಲ. ಮತೀಯವಾದದ ಬಗ್ಗೆಯಂತೂ ತುಟಿ ಬಿಚ್ಚುವುದೇ ಇಲ್ಲ. ಹೀಗಾಗಿಯೇ ಈ ಬಗೆಯ ಹೋರಾಟಗಳು ಬಹುತೇಕ ಬಾರಿ ಸಂವಿಧಾನ ವಿರೋಧಿಗಳಿಗೆ ಶಕ್ತಿಯನ್ನು ತುಂಬಿವೆ!

ಅಂದಹಾಗೆ, ಕೊನೆಯದಾಗಿ, ಕಾಶ್ಮೀರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ತಿಂಗಳುಗಟ್ಟಲೆ ಮೊಬೈಲ್ ಹಾಗೂ ಇಂಟರ್ನೆಟ್‌ ಸೇವೆಗಳನ್ನು ಬಂದ್‌ ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದ ಕೇಂದ್ರ ಸರ್ಕಾರ ದೆಹಲಿಯಲ್ಲಿ ಸಾಲು ಸಾಲು ಹೆಣಗಳು ಉರುಳಿದರೂ ಇಂತಹ ನಿರ್ಧಾರ ಕೈಗೊಳ್ಳಲಿಲ್ಲ! ಕೇವಲ ಒಂದು ವಾರ ಕಾಲವಾದರೂ ದೆಹಲಿಯಲ್ಲಿ ಮೊಬೈಲ್‌ ಹಾಗೂ ಇಂಟರ್‌ನೆಟ್‌ ಸೇವೆಗಳನ್ನು ಕೇಂದ್ರ ಸರ್ಕಾರ ಬಂದ್‌ ಮಾಡಲಿಲ್ಲವೇಕೆ? ಮೊದಲೇ ಕುಸಿದು ಕೂತಿರುವ ಅರ್ಥಿಕತೆಯ ಈ ಸಂದರ್ಭದಲ್ಲಿ ದೇಶದ ಯಾವುದೇ ಮೊಟ್ರೋ ನಗರಿಯಲ್ಲಿ ಇಂಟರ್ನೆಟ್‌ ಸೇವೆಯನ್ನು ಬ್ಯಾನ್‌ ಮಾಡುವುದು ಕೇಂದ್ರ ಸರ್ಕಾರಕ್ಕೆ ಸಾಧ್ಯವೇ? ಇಲ್ಲ. ಕಾಶ್ಮೀರದ ಪ್ರಯೋಗವನ್ನೇನಾದರೂ ದೇಶದ ಇತರೆಡೆ ಮಾಡಿದರೆ ಅದರಿಂದ ದೇಶದ ಆರ್ಥಿಕತೆಗೆ ಎಂತಹ ಹೊಡೆತ ಬೀಳಬಹುದು ಎನ್ನುವುದು ಅದಕ್ಕೆ ಗೊತ್ತು. ಹಾಗಾಗಿಯೇ ಅಂತಹ ದುಸ್ಸಾಹಸಕ್ಕೆ ಕೈ ಹಾಕಲು ಹೋಗುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending