ದಿನದ ಸುದ್ದಿ
ಕ್ಯಾನ್ಸರ್ ಖಾಯಿಲೆಯನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಿದರೆ ಗುಣಪಡಿಸಬಹುದು: ಡಾ.ಜಿ.ಡಿ.ರಾಘವನ್
ಸುದ್ದಿದಿನ,ದಾವಣಗೆರೆ: ಕ್ಯಾನ್ಸರ್ ಖಾಯಿಲೆಯನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ನೀಡಿದಾಗ ರೋಗಿಯನ್ನು ಗುಣಮುಖರನ್ನಾಗಿ ಮಾಡಬಹುದು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ದಾವಣಗೆರೆ ಇವರುಗಳ ಸಹಯೋಗದಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕ್ಯಾನ್ಸರ್ ಕುರಿತು ಜನರಲ್ಲಿ ಮಾಹಿತಿ ಮತ್ತು ಅರಿವಿನ ಕೊರತೆ ಇದೆ. ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಮೂಲಕ ಮತ್ತು ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ನೀಡುವುದರಿಂದ ಕ್ಯಾನ್ಸರ್ ಗುಣಪಡಿಸಬಹುದು ಎಂದರು.
ಆಶಾ ಕಾರ್ಯಕರ್ತೆಯರು ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವಂತಹ ಸಮುದಾಯದಲ್ಲಿ ಪ್ರತಿ ಮನೆಗೂ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಸಮುದಾಯ ಆಧಾರಿತ ತಾಳೆ ಪಟ್ಟಿಯನ್ನು ತುಂಬಿ ಅದರಲ್ಲಿ 4 ಕ್ಕಿಂತ ಹೆಚ್ಚು ಅಂಕಗಳನ್ನು ಹೊಂದಿರುವವರನ್ನು ಕಡ್ಡಾಯವಾಗಿ ಹತ್ತಿರದ ಪ್ರಾದೇಶಿಕ ಆರೋಗ್ಯ ಕೇಂದ್ರಕ್ಕೆ ಕರೆದು ತಪಾಸಣೆಗೆ ಒಳಪಡಿಸುವ ಮೂಲಕ ಕ್ಯಾನ್ಸರ್ ರೋಗವನ್ನು ತಡೆಗಟ್ಟಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್.ಎಸ್.ಆಸ್ಪತ್ರೆಯ ಕ್ಯಾನ್ಸರ್ ರೋಗ ಶಸ್ತ್ರಚಿಕಿತ್ಸಕ ವಿಭಾಗದ ವೈದ್ಯಾಧಿಕಾರಿ ಡಾ. ಲಿಂಗನಗೌಡ ಪಾಟೀಲ್ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಲಕ್ಷಣಗಳನ್ನು ಕಂಡುಹಿಡಿಯುವ ಮೂಲಕ ಕ್ಯಾನ್ಸರ್ ರೋಗವನ್ನು ತಡೆಗಟ್ಟಬಹುದು.
ಐಸಿಎಂಆರ್-2020 ರ ಸಮೀಕ್ಷೆ ಪ್ರಕಾರ ನಮ್ಮ ದೇಶದಲ್ಲಿ ಅಂದಾಜು 13,92,179 ಕ್ಯಾನ್ಸರ್ ರೋಗಿಗಳಿದ್ದಾರೆ. ಪ್ರಮುಖವಾಗಿ ಗರ್ಭಕಂಠದ ಕ್ಯಾನ್ಸರ್ ಅತೀ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ನಂತರ ಸ್ತನ ಕ್ಯಾನ್ಸರ್, ತದನಂತರ ಬಾಯಿ ಕ್ಯಾನ್ಸರ್ ರೋಗಿಗಳು ಕಂಡುಬರುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾವಂತರಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ಪಡೆಯಲು ಮಾನಸಿಕವಾಗಿ ಹಿಂಜರಿದು, ಕೊನೆಯ ಎರಡು ಹಂತದಲ್ಲಿ ಬಂದು ತಮ್ಮ ಅಳಲನ್ನು ತೋಡಿಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ವೈದ್ಯರು ಎಷ್ಟೇ ಚಿಕಿತ್ಸೆ ನೀಡಿದರು ಸಹ 5 ರಿಂದ 7 ವರ್ಷದ ವರೆಗೆ ಮಾತ್ರ ಜೀವಿತಾ ಅವಧಿಯನ್ನು ಮುಂದೂಡಲು ಸಾಧ್ಯವಾಗುತ್ತಿದೆಯೇ ಹೊರತು ಪೂರ್ಣ ಪ್ರಮಾಣದಲ್ಲಿ ವಾಸಿಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವಂತಹ ಕೆಲಸಗಳು ಅತೀ ಹೆಚ್ಚಾಗಿ ಆಗಬೇಕು ಎಂದರು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ ಅಧ್ಯಕ್ಷೀಯ ಮಾತುಗಳನ್ನಾಡಿ, ಪ್ರಾದೇಶಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಗ್ರಾಮಗಳ ಜನರಿಗೆ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಬೇಕು. ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಸಂಬಂಧಿಸಿದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಮೊದಲ ಹಂತದಲ್ಲಿ ಚಿಕಿತ್ಸೆ ನೀಡಬೇಕು ಎಂದು ಮನವಿ ಮಾಡಿದರು.
ಶರೀರದ ಯಾವುದೇ ಭಾಗದ ಜೀವಕೋಶಗಳ ಅನಿಯಂತ್ರಿತ ವಿಭಜನೆಯಾದರೆ ಅಥವಾ ರೋಗಿಯ ದೇಹದಲ್ಲಿ ವಿಪರಿತ ತೂಕ ಇಳಿಕೆ, ಹಸಿವು ಆಗದೆ ಇರುವುದು, ಬಾಯಲ್ಲಿ ಬಿಳಿ ಮಚ್ಚೆ ಅಥವಾ ಕೆಂಪು ಮಚ್ಚೆಗಳು ಹೆಚ್ಚಾಗಿ ಕಂಡುಬಂದಲ್ಲಿ, ಧ್ವನಿಯಲ್ಲಿ ಬದಲಾವಣೆ, ಬಾಯಿ ತೆರೆಯಲು ಆಗದೆ ಇರುವುದು, ಸ್ತನದ ಸುತ್ತ ನೋವು, ಊತ ಸ್ತನದ ತೊಟ್ಟಿನಿಂದ ರಕ್ತಸ್ರಾವ, ಮಹಿಳೆಯ ಮುಟ್ಟಿನ ನಂತರ ರಕ್ತಸ್ರಾವದ ವ್ಯತ್ಯಾಸ ಹೀಗೆ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಮುಜುಗರಕ್ಕೆ ಒಳಗಾಗದೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡಬೇಕು. ಹಾಗೆಯೇ ಈ ಲಕ್ಷಣಗಳನ್ನು ಒಳಗೊಂಡ ರೋಗಿಗಳನ್ನು ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ನೀಡಬೇಕು ಎಂದರು.
ಈ ವೇಳೆ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರಾದ ಡಾ. ಎಸ್.ಎ. ಗಿರಿಧರ್, ಸ್ತನ ಕ್ಯಾನ್ಸರ್, ಗರ್ಭ ಕಂಠದ ಕ್ಯಾನ್ಸರ್ ಮತ್ತು ಉಪಶಾಮಕ ಆರೈಕೆ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿದರು. ಕಾಲೇಜ್ ಆಫ್ ಡೆಂಟಲ್ ಸೈನ್ಸ್ನ ಹಿರಿಯ ಪ್ರಾಧ್ಯಾಪಕಿ ಡಾ. ಜಿ.ಪಿ.ಮಮತ ಬಾಯಿ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಕೆ.ಹೆಚ್.ಗಂಗಾಧರ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಪಿ.ಡಿ. ಮುರುಳಿಧರ್, ಜಿಲ್ಲಾ ಮಲೇರಿಯ ನಿಯಂತ್ರಣ ಅಧಿಕಾರಿ ಡಾ.ನಟರಾಜ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರೇಣುಕಾರಾಧ್ಯ ಸೇರಿದಂತೆ ಜಿಲ್ಲೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಸುರೇಶ್ ಭಾರ್ಕಿ ನಿರೂಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ11 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ10 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

