ದಿನದ ಸುದ್ದಿ
ರಾಜ್ಯದ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆಗೆ ಕೇಂದ್ರ ಭರವಸೆ : ಸಚಿವ ಬಿ.ಸಿ. ಪಾಟೀಲ್
ಸುದ್ದಿದಿನ ಡೆಸ್ಕ್ : ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸುವವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜೊತೆಗೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಸಚಿವರು, ಅಕ್ರಮವಾಗಿ ಸಂಗ್ರಹಿಸುವವರ ಮೇಲೆ ನಿಗಾ ವಹಿಸಲು ಈಗಾಗಲೇ ಜಾಗೃತದಳಕ್ಕೆ ಸೂಚನೆ ನೀಡಲಾಗಿದೆ. ಕಳೆದ ಬಾರಿ ಕೃತಕ ಅಭಾವ ಸೃಷ್ಟಿ ಮಾಡಿದವರ ವಿರುದ್ದ 255ಪ್ರಕರಣಗಳನ್ನು ದಾಖಲಿಸಿ ಸುಮಾರು 24 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ರೈತರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿನ ರಸಗೊಬ್ಬರದ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಮಾಡುವುದಾಗಿ ಕೇಂದ್ರ ಆರೋಗ್ಯ ಮತ್ತು ರಾಸಾಯನಿಕ, ರಸಗೊಬ್ಬರ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ನೀಡಿದ್ದು, ಈಗಾಗಲೇ ಮಂಗಳೂರು ಬಂದರಿಗೆ 26ಸಾವಿರ ಮೆಟ್ರಿಕ್ ಟನ್ ಡಿ ಐ ಪಿ ರಸಗೊಬ್ಬರ ಬಂದಿದೆ. ರಾಜ್ಯದ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243