Connect with us

ದಿನದ ಸುದ್ದಿ

ಚಿಗಟೇರಿ ಆಸ್ಪತ್ರೆಯಲ್ಲಿ ಮಹಿಳೆ ಮತ್ತು ಮಕ್ಕಳ ನೂತನ ಕಟ್ಟಡದ ಲೋಕಾರ್ಪಣೆ ; ಗ್ರೂಪ್ ಡಿ ಹುದ್ದೆಗಳಿಗೆ ನೇರಪಾವತಿಯಡಿ ನೇಮಕಕ್ಕೆ ಕಾನೂನು ಇಲಾಖೆಗೆ ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್

Published

on

ಸುದ್ದಿದಿನ,ದಾವಣಗೆರೆ:ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕ್ಲಿನಿಕಲ್ ವಿಭಾಗದಲ್ಲಿ ಗ್ರೂಪ್ ಡಿ ಸೇವೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇರ ಪಾವತಿಯಡಿ ನೇಮಕ ಮಾಡಿಕೊಳ್ಳಲು ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು ಸಾಧಕ, ಬಾದಕಗಳ ಪರಿಶೀಲನೆ ನಂತರ ಹೊರಗುತ್ತಿಗೆಯ ಎಲ್ಲಾ ಗ್ರೂಪ್ ಡಿ ಸಿಬ್ಬಂದಿಗಳನ್ನು ನೇರಪಾವತಿಯಡಿ ಪಡೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಅವರು ಬುಧವಾರ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ಮಾಡಿರುವ 200 ಹಾಸಿಗೆಯ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್‍ನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು.

ದಾವಣಗೆರೆಯಲ್ಲಿನ ಚಿಗಟೇರಿ ಆಸ್ಪತ್ರೆ ವಿಶಾಲವಾದ ಸ್ಥಳದಲ್ಲಿದ್ದು 70 ವರ್ಷದ ಹಳೆಯದಾಗಿದೆ. ಇಲ್ಲಿ ಹೊಸ ಕಟ್ಟಡ, ದುರಸ್ಥಿಯಾಗಬೇಕಾಗಿದ್ದು ಮಧ್ಯ ಕರ್ನಾಟಕದಲ್ಲಿನ ಈ ಆಸ್ಪತ್ರೆಯನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡುವ ಮೂಲಕ ಈ ಭಾಗದಲ್ಲಿನ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿಯೇ ಇಲ್ಲಿನ ಮೂಲಭೂತ ಸೌಕರ್ಯಕ್ಕೆ ಮತ್ತು ಹೊಸ ಬ್ಲಾಕ್ ನಿರ್ಮಾಣಕ್ಕೆ ರೂ.17 ಕೋಟಿ ಬಿಡುಗಡೆ ಮಾಡಲಾಗಿದ್ದು ಭವಿಷ್ಯದ ದೃಷ್ಟಿಯಿಂದ ನೂತನ ಯೋಜನೆಯನ್ನು ಸಿದ್ದಪಡಿಸಿ ಅದರಂತೆ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದರು.

ರೂ. 30 ಕೋಟಿಯಲ್ಲಿ ನಿರ್ಮಿಸಲಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 200 ಹಾಸಿಗೆ ಸಾಮಥ್ರ್ಯವಿದ್ದು ಇಲ್ಲಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ಮಂಜೂರು ಮಾಡಲು ಸರ್ಕಾರದ ಮುಂದೆ ಪ್ರಸ್ತಾವನೆ ಇದ್ದು ಇಲ್ಲಿಗೆ ಬೇಕಾಗಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಹುದ್ದೆಗಳಿಗೆ ಮಂಜೂರಾತಿಯನ್ನು ನೀಡಲಾಗುತ್ತದೆ. ಟ್ರಾಮಾ ಕೇರ್ ಸೆಂಟರ್‍ಗೂ ಸಿಬ್ಬಂದಿಗಳ ಅಗತ್ಯವಿದ್ದು ಪರಿಶೀಲಿಸಿ ಮಂಜೂರಾತಿ ನೀಡಲಾಗುತ್ತದೆ. ಆಸ್ಪತ್ರೆ ಕಟ್ಟಿದರೆ ಸಾಲದು, ಇಲ್ಲಿ ಅಗತ್ಯವಿರುವ ಪರಿಕರ, ಸಿಬ್ಬಂದಿಗಳು ಇದ್ದಾಗ ಮಾತ್ರ ಜನರಿಗೆ ಆರೋಗ್ಯ ಸೇವೆ ಸಿಗಲು ಸಾಧ್ಯವಿದೆ ಎಂದರು.

ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳು ಮಾನವ ಸಂಪನ್ಮೂಲ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರವಹಿಸಲಿವೆ. ಆದರೆ ಇವುಗಳಿಗೆ ಸಿಗಬೇಕಾದ ಆದ್ಯತೆ ಸಾಕಾಗುತ್ತಿಲ್ಲ. ಜನರ ಆರೋಗ್ಯ ಸಂರಕ್ಷಣೆ ಮಾಡಿದಾಗ ಆರೋಗ್ಯವಂತ ನಾಗರಿಕನಾಗಲು ಸಾಧ್ಯ, ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆಗಾಗಿ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಆರೋಗ್ಯವು ಗ್ಯಾರಂಟಿ ಯೋಜನೆಯಾಗಬೇಕು, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ಸಿಗಬೇಕಾಗಿದೆ ಎಂದರು.

ಮಾಯಕೊಂಡ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಿದ್ದರೂ ಸಮುದಾಯ ಆರೋಗ್ಯ ಕೇಂದ್ರವಿರುವುದಿಲ್ಲ. ಮುಂದಿನ ದಿನಗಳಲ್ಲಿ ಮಾಯಕೊಂಡಕ್ಕೆ ಸಮುದಾಯ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಗುತ್ತದೆ. ಮೂಲಭೂತ ಸೌಕರ್ಯ ಕೊಟ್ಟರೆ ಸಾಕಾಗುವುದಿಲ್ಲ, ವೈದ್ಯರು ಜನರ ಸೇವೆ ಮಾಡಬೇಕು. ವೈದ್ಯಕೀಯ ಸೇವಾ ಕ್ಷೇತ್ರವಾಗಿದ್ದು ಸಹಾನುಭೂತಿಯಿಂದ ಎಲ್ಲಾ ವೈದ್ಯರು ಕೆಲಸ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ವೈದ್ಯರು, ಸಿಬ್ಬಂದಿಗಳ ಸೇವೆ ಜನರಿಗೆ ಸಿಗುವಂತಾಗಬೇಕೆಂದರು.

ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ ಆಸ್ಪತ್ರೆ ಕಟ್ಟಡದ ಜೊತೆಗೆ ಸಲಕರಣೆಗಳು ಇರಬೇಕಾಗುತ್ತದೆ, ಜೊತೆಗೆ ಸಿಬ್ಬಂದಿಗಳು ಇರಬೇಕು, ಇಲ್ಲವಾದಲ್ಲಿ ವ್ಯರ್ಥವಾಗುತ್ತದೆ. ಚಿಗಟೇರಿ ಆಸ್ಪತ್ರೆಯಿಂದ ಸಾಕಷ್ಟು ಬಡ ಜನರಿಗೆ ಅನುಕೂಲವಾಗಿದೆ. ಇಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳು ಜನರಿಗೆ ಸಿಗುವಂತಾಗಬೇಕು. ಇಲ್ಲಿ ನರ್ಸ್, ಆಯಾಗಳ ಕೊರತೆ ಇದೆ ಎಂದು ತಿಳಿದುಬಂದಿದ್ದು ವ್ಯವಸ್ಥೆ ಸರಿಪಡಿಸಬೇಕು. ಹೊರಗುತ್ತಿಗೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರಪವಾತಿಯಡಿ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿಗಳನ್ನು ಪಡೆಯುವಂತಾಗಬೇಕು. ಸಾರ್ವಜನಿಕ ಸೇವೆ ಮಾಡುವಾಗ ಬಹಳ ಪಾರದರ್ಶಕವಾಗಿ ಕೆಲಸ ಮಾಡಬೇಕಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ಖಾಸಗಿಯಾಗಿ 8 ಕೋಟಿವರೆಗೆ ವೆಚ್ಚ ಮಾಡಲಾಗಿದೆ ಎಂದರು.

ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಯಾಗಿದ್ದ ಸಮಯದಿಂದಲೂ ಚಿಗಟೇರಿ ಆಸ್ಪತ್ರೆಯ ಸ್ಥಿತಿಗತಿ ಗೊತ್ತಿದೆ. ಇಲ್ಲಿ ಸಾಕಷ್ಟು ಮೂಲಭೂತ ಸೌಕರ್ಯಗಳ ಜೊತೆಗೆ ಸುಧಾರಣೆಯಾಗಬೇಕಿದೆ. ಮಾಸ್ಟರ್ ಪ್ಲಾನ್ ತಯಾರಿಸುವ ಮೂಲಕ ಹಂತ ಹಂತವಾಗಿ ಸುಧಾರಣಾ ಕ್ರಮ ಕೈಗೊಳ್ಳಲಾಗುತ್ತದೆ. ಮುಂದಿನ ದಿನಗಳಲ್ಲಿ ಮಾನವ ಹಾಲು ಬ್ಯಾಂಕ್ ಸ್ಥಾಪನೆ ಮಾಡುವ ಮೂಲಕ ಇನ್ನಷ್ಟು ಅನುಕೂಲ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ಮುಖ್ಯ ಅತಿಥಿಗಳಾಗಿ ಮಾತನಾಡಿ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗಿದೆ, ಇದಕ್ಕೆ ಮಾನವ ಸಂಪನ್ಮೂಲ ಕಲ್ಪಿಸಬೇಕು. ಸಿಬ್ಬಂದಿಗಳು ಸಹ ಉಪಕರಣಗಳನ್ನು ನಿಷ್ಕ್ರಿಯೆಗೊಳಿಸದೇ ಉಪಯುಕ್ತ ಮಾಡಿಕೊಳ್ಳಬೇಕು. ಐಸಿಯು ಬೆಡ್ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಬೇಕು. ಶವಗಾರಕ್ಕೆ ಕಾಯಕಲ್ಪ ಮಾಡಬೇಕಾಗಿದ್ದು ಅತ್ಯುತ್ತಮವಾಗಿ ಕೆಲಸ ಮಾಡುವ ಡಾ; ಮೋಹನ್ ರವರನ್ನು ಸನ್ಮಾನಿಸಿ ಗೌರವಿಸಬೇಕೆಂದರು.

ಕಾರ್ಯಕ್ರಮದಲ್ಲಿ ಮೇಯರ್ ಕೆ.ಚಮನ್‍ಸಾಬ್, ದೂಡಾ ಆಧ್ಯಕ್ಷ ಕೆ.ದಿನೇಶ್ ಶೆಟ್ಟಿ, ಉಪ ಮೇಯರ್ ಸೋಗಿ ಶಾಂತಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಶಿವಕುಮಾರ್ ಕೆ.ಬಿ, ಅಭಿಯಾನ ನಿರ್ದೇಶಕರಾದ ಡಾ; ನವೀನ್ ಭಟ್ ರೈ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.ಜಿಲ್ಲಾ ಸರ್ಜನ್ ಡಾ; ನಾಗೇಂದ್ರಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.

ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending