ದಿನದ ಸುದ್ದಿ
ಚನ್ನಗಿರಿ | ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ವಿ.ಬನ್ನಿಹಟ್ಟಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸದೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸಬೇಕು. ಅವಧಿಯ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿ ಪ್ರಕಟಿಸಿರುವ ವಿ.ಬನ್ನಿಹಟ್ಟಿ ಗ್ರಾಮದಲ್ಲಿ 38 ಅಂತ್ಯೋದಯ, 352 ಬಿಪಿಎಲ್(ಅಕ್ಷಯ) ಮತ್ತು ಎಪಿಎಲ್-04 ಸೇರಿ ಒಟ್ಟು 394 ಪಡಿತರ ಚೀಟಿಗಳನ್ನು ನಿಯೋಜಿಸಿದ್ದು, ಈ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಅವಶ್ಯವಿರುವ ಬ್ಯಾಂಕ್ ಠೇವಣಿ ಒಂದು ತಿಂಗಳಿಗೆ ಪಡಿತರ ಮೊತ್ತ ಕನಿಷ್ಠ ರೂ. 50,000 ಇರುತ್ತದೆ.
ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು/ಸಂಸ್ಥೆಗಳು/ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು ಹಾಗೂ ಇತರ ಸಹಕಾರ ಸಂಘಗಳು ಮತ್ತು ವಿಕಲಚೇತನರು (ಸರ್ಕಾರ ನಿಯಮಾನುಸಾರ), ತೃತೀಯ ಲಿಂಗಿಗಳು ಅರ್ಜಿ ಸಲ್ಲಿಸಬಹುದು. ನ್ಯಾಯಬೆಲೆ ಅಂಗಡಿಯನ್ನು ಮಂಜೂರು ಮಾಡುವಾಗ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ ಆದೇಶ 2018 ರಲ್ಲಿ ತಿಳಿಸಿರುವಂತೆ ಆದ್ಯತೆಗಳನ್ನು ಪರಿಗಣಿಸಲಾಗುವುದು.
ಅರ್ಜಿಯನ್ನು ಜಂಟಿ ನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸತಕ್ಕದ್ದು. ನಿಗದಿತ ಅರ್ಜಿ ನಮೂನೆಯನ್ನು ಕಚೇರಿ ಅಥವಾ ತಹಶೀಲ್ದಾರ್, ಚನ್ನಗಿರಿ ತಾಲ್ಲೂಕು ಕಚೇರಿಯಿಂದ ಪಡೆಯಬಹುದು. ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು: ಅರ್ಜಿ ನಮೂನೆ ‘ಎ’, ಸಹಕಾರ ಸಂಘ/ಸಂಸ್ಥೆಗಳ ಮತ್ತು ಸ್ವಸಹಾಯ ಸಂಘಗಳಾದರೆ ನೋದಾವಣೆ ಪತ್ರ, ಕಳೆದ 3 ವರ್ಷಗಳ ದೃಢೀಕೃತ ಲೆಕ್ಕ ಪರಿಶೋಧನಾ ವರದಿ ಮತ್ತು ಉಪನಿಯಮಗಳು(ಬೈಲಾ), ನ್ಯಾಯಬೆಲೆ ಅಂಗಡಿ ನಡೆಸಲು ಮತ್ತು ಪ್ರಮಾಣ ಪತ್ರ ಸಲ್ಲಿಸಲು ಅಧಿಕಾರ ಪಡೆದಿರುವ ಪ್ರತಿನಿಧಿಯನ್ನು ನೇಮಿಸಿರುವ ಬಗ್ಗೆ ನಿರ್ಣಯ, ಕರ್ನಾಟಕ ಸೊಸೈಟೀಸ್ ರಿಜಿಸ್ಟ್ರೇಷನ್ ಆಕ್ಟ್ 1959 ಅಡಿ ವಿಚಾರಣೆ, ಟ್ರಯಲ್ ಮತ್ತು ಲಿಕ್ವಿಟೇಷನ್ ನಡವಳಿ ನಡೆದಿರುವುದಿಲ್ಲ.
ಎಂಬ ಬಗ್ಗೆ ಸಕ್ಷಮ ಪ್ರಾಧಿಕಾರಿಯು ನೀಡಿರುವ ದೃಡೀಕರಣ ಪತ್ರ, ವ್ಯಾಪಾರದ ಮಳಿಗೆಯ ಖಾತೆ ಅಥವಾ ಬಾಡಿಗೆ/ಕರಾರು ಪತ್ರ, ಹಣಕಾಸು ಹೊಂದಿರುವ ಬಗ್ಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಸಹಕಾರ ಸಂಘದವರು ಅಧಿಕೃತವಾಗಿ ನೇಮಿಸಿರುವ ಪ್ರತಿನಿಧಿಯ ಇತ್ತೀಚಿನ 3 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕೆಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಅವರು, ದೇಶಭಕ್ತಿ ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬರೂ ತಮ್ಮ ಮೂಲಭೂತ ಕರ್ತವ್ಯಗಳನ್ನು ಅರಿತು, ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಅಭಿರುಚಿಗೆ ತಕ್ಕಂತೆ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದರಲ್ಲಿ ಅಡಗಿದೆ ಎಂದು ಕರೆ ನೀಡಿದರು. ಪ್ರಾಮಾಣಿಕ ಪರಿಶ್ರಮ ಮತ್ತು ಜವಾಬ್ದಾರಿಯುತ ನಾಗರಿಕತ್ವವೇ ಬಲಿಷ್ಠ ಭಾರತದ ನಿರ್ಮಾಣಕ್ಕೆ ಅಡಿಪಾಯ ಎಂದರು.
ವಿದ್ಯಾರ್ಥಿಗಳ ಮನೋಜ್ಞ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಪ್ರದರ್ಶನಗಳು ಹಾಗೂ ಶಿಸ್ತುಬದ್ಧ ಮೆರವಣಿಗೆಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ಕೊಡಿಪಾಳ್ಯ ಮತ್ತು ಕೆಂಗೇರಿಯಲ್ಲಿ 445 ಮೀಟರ್ ಇರುವ ವಿಶೇಷ ಧ್ವಜದೊಂದಿಗೆ ವಿದ್ಯಾರ್ಥಿಗಳ ಮೆರವಣಿಗೆ ಗಮನ ಸೆಳೆಯಿತು. ಶತಪ್ರತಿಶತ ಫಲಿತಾಂಶ ಸಾಧಿಸಿದ ಬೋಧಕ ಸಿಬ್ಬಂದಿಯನ್ನು ಮತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನೇರ ಪ್ರಸಾರವೂ ನಡೆಯಿತು. 2,500 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವಿಶೇಷ ಮಧ್ಯಾಹ್ನದ ಊಟ ಮತ್ತು ಸಿಹಿತಿಂಡಿ ವ್ಯವಸ್ಥೆ ಮಾಡಲಾಗಿದ್ದು, ಒಗ್ಗಟ್ಟು ಮತ್ತು ದೇಶಪ್ರೇಮದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.
ಈ ಸಂದರ್ಭದಲ್ಲಿ ವಿವಿಐಎಸ್ ನ ಅಕಾಡೆಮಿಕ್ ಅಡ್ವೈಸರ್ ಡಾ. ರಾಜೇಶ್ವರಿ ದತ್ತಾತ್ರಿ, ವಿವಿ ವಿದ್ಯಾಸಂಸ್ಥೆಯ ಡೀನ್ ಶ್ರೀ ಕಿಶೋರ್ ಕಟ್ಟ, ಪ್ರಾಂಶುಪಾಲೆ ಶ್ರೀಮತಿ ಲಕ್ಷ್ಮಿ ಟಿ.ಎನ್, ಕೆಪಿಸಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ. ಐ. ಚೆನ್ನಾರೆಡ್ಡಿ, ಸಿಬಿಎಸ್ಇ ಪ್ರಾಂಶುಪಾಲರಾದ ಪ್ರೊ. ಪ್ರಹ್ಲಾದ, ಉಪಪ್ರಾಂಶುಪಾಲರಾದ ಶ್ರೀ ಮದನ್ ರಾಜ್, ಪ್ರಾಂಶುಪಾಲರಾದ ಡಾ. ಸುರೇಶ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ24 hours agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ20 hours agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ4 hours agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

