ಬಹಿರಂಗ
ಛತ್ರಪತಿ ಶಾಹುಮಹಾರಾಜ್ : ಸಾಮಾಜಿಕ ಪರಿವರ್ತನೆಯ ಮೇರುಸ್ತಂಭ
- ರಘೋತ್ತಮ ಹೊಬ
1902 ಜುಲೈ 26ರಂದು ಈ ದೇಶದ ಸಂಸ್ಥಾನವೊಂದರ ಅರಸರೋರ್ವರು ಹೊರಡಿಸಿದ್ದ ಆದೇಶ ಈ ರೀತಿ ಇತ್ತು “ಈ ಆದೇಶ ಹೊರಡಿಸಿದಂದಿನಿಂದ ಇನ್ನುಮುಂದೆ ಖಾಲಿಯಾಗುವ ಹುದ್ದೆಗಳಲ್ಲಿ ಶೇ.50ರಷ್ಟು ಹುದ್ದೆಗಳನ್ನು ಹಿಂದುಳಿದ ವರ್ಗದ ಅಭ್ಯರ್ಥಿಗಳಿಂದ ಭರ್ತಿಮಾಡಲಾಗುವುದು.ಹಾಗೆಯೇ ಈ ಆದೇಶದ ಉದ್ದೇಶಕ್ಕಾಗಿ ಬ್ರಾಹ್ಮಣ, ಪ್ರಭು, ಶೇಣಾವಿ, ಪಾರ್ಸಿ ಮತ್ತು ಇತರ ಮುಂದುವರಿದ ವರ್ಗಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಜಾತಿಗಳನ್ನು ‘ಹಿಂದುಳಿದ ವರ್ಗಗಳು’ ಎಂದು ಅರ್ಥೈಸಲಾಗುವುದು”.
ಹೌದು, ಹಿಂದುಳಿದ ವರ್ಗಗಳಿಗೆ(ಓ.ಬಿ.ಸಿ) ಈ ದೇಶದಲ್ಲಿ ಪ್ರಪ್ರಥಮವಾಗಿ ಶೇ.50ರಷ್ಟು ಮೀಸಲಾತಿ ನೀಡಿ ಆಜ್ಞೆ ಹೊರಡಿಸಿ ‘ಮೀಸಲಾತಿಯ ಜನಕ (Father of Reservation) ಖ್ಯಾತಿಗೊಂಡ ಅರಸ ಬೇರಾರು ಅಲ್ಲ, ಕೊಲ್ಲಾಪುರದ ಛತ್ರಿಪತಿ ಶಾಹು ಮಹಾರಾಜರು. ಸಹಜವಾಗಿ ಹೇಳುವುದಾದರೆ “ಭಾರತದ ಸಾಮಾಜಿಕ ಪ್ರಜಾಪ್ರಭುತ್ವದ ಮೇರುಸ್ತಂಭ” (ಆಧಾರ: Chatrapati Shahu the Pillar Of Social Democracy : Published by Education department, Government of Maharashtra , p.146).
ಶಾಹು ಮಹಾರಾಜರು ಹುಟ್ಟಿದ್ದು 1874 ಜುಲೈ 26 ರಂದು. ತಂದೆ ಜಯಸಿಂಗರಾವ್ ಅಪ್ಪಾಸಾಹೇಬ್ ಘಾಟ್ಗೆ, ತಾಯಿ ರಾಧಾಬಾಯಿ. ಹಾಗೆ ಶಾಹು ಮಹಾರಾಜರ ಮೂಲ ಹೆಸರು ಯಶವಂತ್ರಾವ್ ಘಾಟ್ಗೆ. ಮಹಾರಾಜ ಶಾಹುರವರ ಪೂರ್ವಿಕರು ಮೂಲತಃ ಛತ್ರಪತಿ ಶಿವಾಜಿಯ ವಂಶಸ್ಥರು. ಆ ಕಾರಣಕ್ಕಾಗಿ ಶಿವಾಜಿಯವರ ಗೌರವ ಪದವಿಯಾದ ‘ಛತ್ರಪತಿ’ ಬಿರುದು ಮಹಾರಾಜ ಶಾಹುರವರಿಗೆ ಸ್ವಾಭಾವಿಕವಾಗಿ ಸಂದಿತು.
ಪ್ರಶ್ನೆ ಏನೆಂದರೆ ಮಹಾರಾಜ ಶಾಹುರವರು ತಮ್ಮ ಅರಸೊತ್ತಿಗೆಯನ್ನು ಅಂದಿನ ಇತರೆ ಅರಸರುಗಳಂತೆ ಬರೀ ಮೋಜು, ಮಸ್ತಿಗೆ ಬಳಸಿದರೆ? ಖಂಡಿತ ಹಾಗೆ ಪ್ರಶ್ನೆ ಕೇಳುವುದೇ ಮಹಾಪರಾಧವಾಗುತ್ತದೆ. ದಿಟ ಹೇಳಬೇಕೆಂದರೆ ಶಾಹುರವರು ಪ್ರಜಾನುರಾಗಿಯಾದರು. ಯಾವ ತಳವರ್ಗಗಳು, ಬ್ರಾಹ್ಮಣೇತರ ಸಮುದಾಯಗಳು ಶತಶತಮಾನಗಳಿಂದ ವಿದ್ಯೆ, ಆಸ್ತಿ, ಅಧಿಕಾರಗಳಿಂದ ವಂಚಿತಗೊಂಡಿದ್ದವೋ ಅಂತಹದ್ದನ್ನು ವಾಪಸ್ ಕೊಡಿಸಲು ಸ್ವತಃ ಆ ಸಮುದಾಯಗಳ ಪ್ರತಿನಿಧಿಯಾಗಿ ನೋವನ್ನು ಅನುಭವಿಸಿ ಶ್ರಮಿಸಿದರು.
ಅಂತಹ ನೋವಿನ ಪ್ರಕರಣವೊಂದನ್ನು ಇಲ್ಲಿ ದಾಖಲಿಸುವುದಾದರೆ “1900 ರ ವರ್ಷದ ಒಂದು ದಿನ ಬೆಳಿಗ್ಗೆ ಯುವರಾಜ ಶಾಹು ತಮ್ಮ ತಂದೆ ಅಪ್ಪಾಸಾಹೇಬ್ ಘಾಟ್ಗೆ ಮತ್ತು ಇತರರೊಡನೆ ಪಂಚಗಂಗಾ ನದಿಗೆ ಸ್ನಾನ ಮಾಡಲು ಹೋದರು. ಆಗ ಸಂಪ್ರದಾಯದಂತೆ ಮಹಾರಾಜರು ನದಿಯಲ್ಲಿ ಸ್ನಾನಮಾಡುತ್ತಿದ್ದರೆ ಬ್ರಾಹ್ಮಣ ಪೂಜಾರಿಗಳು ಮಂತ್ರ ಹೇಳಬೇಕಾಗಿತ್ತು. ಅಂತೆಯೇ ಯುವರಾಜ ಶಾಹು ಸ್ನಾನ ಮಾಡುತ್ತಿದ್ದಾಗ ಮಂತ್ರ ಹೇಳಲಾಯಿತು.
ಆದರೆ ಆ ಮಂತ್ರ ‘ವೇದ ಪಠಣವಾಗಿರಲಿಲ್ಲ! ಬದಲಿಗೆ ಪುರಾಣದ ಯಾವುದೋ ಒಂದೆರಡು ಶ್ಲೋಕಗಳಾಗಿದ್ದವು. ಅಂದಹಾಗೆ ಇದನ್ನು ಸಹಪಾಠಿಯೋರ್ವರಿಂದ ತಿಳಿದ ಯುವರಾಜ ಶಾಹು ಮಂತ್ರ ಹೇಳಿದ ಪೂಜಾರಿಯನ್ನು ಈ ಬಗ್ಗೆ ಕೇಳಲಾಗಿ ಪೂಜಾರಿ ಹೇಳಿದ್ದೇನೆಂದರೆ ‘ಮಹಾರಾಜರು ಶೂದ್ರ ವರ್ಗಕ್ಕೆ ಸೇರಿದ್ದರಿಂದ ಅವರಿಗೆ ವೇದಗಳ ಮಂತ್ರಗಳನ್ನು ಹೇಳುವ ಹಾಗಿಲ್ಲ’ ಎಂದು! (ಅದೇ ಕೃತಿ, ಪು.114). ಖಂಡಿತ, ಈ ಘಟನೆ ಶಾಹು ಮಹಾರಾಜರಲ್ಲಿ ಆಕ್ರೋಶದ ಅಲೆಯನ್ನೇ ಎಬ್ಬಿಸಿತು. ಯಾಕೆಂದರೆ ಮಹಾರಾಜರಿಂದ ವೇತನ ಪಡೆಯುವ ಪೂಜಾರಿಯೊಬ್ಬ ಅದೇ ಮಹಾರಾಜರಿಗೆ ‘ಅವರು ಶೂದ್ರರು’ ಎಂಬ ಕಾರಣಕ್ಕಾಗಿ ಅವರಿಗೆ ವೇದಗಳನ್ನು ಉಚ್ಛರಿಸುವುದಿಲ್ಲ ಎಂದರೆ?
ವೇದೋಕ್ತ ಪ್ರಕರಣ
ಅಂತೆಯೇ ಇದರಿಂದ ಕೆರಳಿದ ಶಾಹು ಮಹಾರಾಜರು 1901 ಅಕ್ಟೋಬರ್ ತಿಂಗಳಲ್ಲಿ ತಮ್ಮ ಆಸ್ಥಾನದ ಮುಖ್ಯ ಪೂಜಾರಿ ರಾಜೋಪಾಧ್ಯೆಯವರಿಗೆ ತಮ್ಮ ಅರಮನೆಯಲ್ಲಿ ಇನ್ನುಮುಂದೆ ವೇದೋಕ್ತಿಗಳನ್ನೇ ಉಚ್ಛರಿಸಬೇಕೆಂದು ರಾಜಾಜ್ಞೆ ವಿಧಿಸಿದರು.
ಆದರೆ ಮಹಾರಾಜರ ಇಂತಹ ಆಜ್ಞೆ ಮತ್ತು ಈ ಸಂಬಂಧ ಅವರು ನೀಡಿದ ನೋಟೀಸುಗಳಿಗೆ ಮುಖ್ಯಪೂಜಾರಿ ರಾಜೋಪಾಧ್ಯೆಯವರು ತಲೆಕೆಡಿಸಿಕೊಳ್ಳಲೇ ಇಲ್ಲ! ಕಡೆಗೆ ತಮ್ಮ ಅಧಿಕಾರ ದಂಡ ಪ್ರಯೋಗಿಸಿದ ಶಾಹು ಮಹಾರಾಜರು ಆ ರಾಜೋಪಾಧ್ಯೆಯನ್ನು ಪೂಜಾರಿಗಿರಿಯಿಂದ ಕಿತ್ತೆಸೆದರು! ಅವರಿಗೆ ಬಳುವಳಿಯಾಗಿ ನೀಡಿದ್ದ ಇನಾಮು ಗ್ರಾಮ ಮತ್ತು ಭೂಮಿಯನ್ನು ವಾಪಸ್ ಪಡೆದರು.
ಅಲ್ಲದೇ ಸದರಿ ರಾಜೋಪಾಧ್ಯೆಯವರಿಗೆ ನೀಡಿದ್ದ ಕೆಲವು ರೆವಿನ್ಯೂ, ಸಿವಿಲ್ ಮತ್ತು ಕ್ರಿಮಿನಲ್ ಅಧಿಕಾರಗಳನ್ನು ಕಿತ್ತುಕೊಂಡು ಮಹಾರಾಜ ಶಾಹು ಅವರನ್ನು ಅರಮನೆಯಿಂದ ಹೊರಹಾಕಿದರು. ಅಂದಹಾಗೆ ಶಾಹು ಮಹಾರಾಜರ ಇಂತಹ ಕ್ರಮಗಳ ವಿರುದ್ಧ ರಾಜೋಪಾಧ್ಯೆ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಿದನಾದರೂ ಎಲ್ಲಾ ನ್ಯಾಯಾಲಯಗಳೂ ಸಂಸ್ಥಾನವೊಂದರ ರಾಜನಾಗಿ ಶಾಹು ಮಹಾರಾಜರ ಈ ಆಜ್ಞೆ ನ್ಯಾಯಸಮ್ಮತ ಎಂದು ಮಹಾರಾಜರ ಕ್ರಮಗಳನ್ನು ಎತ್ತಿಹಿಡಿದವು.
ಹಾಗೆಯೇ ಸಂಧಾನಗಳ ಮೂಲಕ ಶಾಹುಮಹಾರಾಜರನ್ನು ಕ್ಷತ್ರಿಯ ಎಂದು ಒಪ್ಪಿಕೊಳ್ಳಲಾಯಿತು. ಅಂತೆಯೇ ಅವರ ಅರಮನೆಯಲ್ಲಿ ವೇದಮಂತ್ರಗಳನ್ನು ಉಚ್ಛರಿಸುವ ಪರಿಪಾಠ ಕೂಡ ಆರಂಭವಾಯಿತು! (ಅದೇ ಕೃತಿ, ಪು.136). ಈ ನಿಟ್ಟಿನಲಿ ಈ ಪ್ರಕರಣ ಭಾರತದ ಇತಿಹಾಸದಲ್ಲಿ ‘ವೇದೋಕ್ತ ಪ್ರಕರಣ’ ಎಂದು ಹೆಸರು ಪಡೆಯಿತಲ್ಲದೆ, ಬ್ರಾಹ್ಮಣ್ಯದ ಕಾನೂನಿನ ಪಾರುಪತ್ಯಕ್ಕೆ ಪ್ರಪ್ರಥಮವಾಗಿ ತಡೆಯೊಡ್ಡಿತ್ತು!
ಅಸ್ಪೃಶ್ಯತೆಯ ವಿರುದ್ಧ ಸಮರ
ಶಾಹು ಮಹಾರಾಜರು ಹಿಂದುಳಿದ ವರ್ಗ(ಓ.ಬಿ.ಸಿ)ಗಳಿಗೆ ತಮ್ಮ ಸಂಸ್ಥಾನದಲ್ಲಿ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿದ್ದನ್ನು ತಿಳಿದಿರಿ. ಆದರೆ ಆಗ ಅವರು ಎದುರಿಸಿದ ಟೀಕೆ? ಇಂತಹ ಮೀಸಲಾತಿ ಟೀಕೆಗೆ ಶಾಹುರವರು ಉತ್ತರಿಸಿರುವ ಪರಿ ನೋಡಿ “ಹಿಂದುಳಿದ ವರ್ಗಗಳ ಏಳ್ಗೆಗಾಗಿ ನನ್ನ ರಾಜ್ಯದಲ್ಲಿ ವಿಶೇಷ ಪ್ರಯತ್ನ ನಡೆಯುತ್ತಿರುವುದನ್ನು ಕೆಲವು ಸುಶಿಕ್ಷಿತ ಮೇಲ್ವರ್ಗದ ಜನ ಅಪಮಾನಕಾರಿ ನಡೆ ಎಂದು ಭಾವಿಸುತ್ತಿದ್ದಾರೆ.
ಆದರೆ ಖಾಯಿಲೆಪೀಡಿತ ದುರ್ಬಲ ಮಗುವೊಂದನ್ನು ವೈದ್ಯರು ವಿಶೇಷವಾಗಿ ಮಹಿಳಾ ವೈದ್ಯರು ಹೇಗೆ ನೋಡಿಕೊಳ್ಳುತ್ತಾರೆ? ಈ ನಿಟ್ಟಿನಲಿ ಆ ಕ್ರಮವನ್ನೇ ಉಲ್ಲೇಖಿಸುವುದಾದರೆ ವೈದ್ಯರು ಅಂತಹ ದುರ್ಬಲ ಮಗು ಇತರರಂತೆ ದಷ್ಟಪುಷ್ಟವಾಗಲು ವಿಶೇಷ ಆಹಾರಗಳನ್ನು ನೀಡುತ್ತಾರೆ ಮತ್ತು ಇದನ್ನು ಎಲ್ಲರೂ ಒಪ್ಪುತ್ತಾರೆ.
ದುರಂತವೆಂದರೆ ನಾನು ಇದೇ ಸಿದ್ಧಾಂತವನ್ನು(ದುರ್ಬಲ ಮಗುವಿನ) ಅಸ್ಪೃಶ್ಯರಿಗೆ ಅಪ್ಲೈ ಮಾಡಿದರೆ ನನ್ನನ್ನು ಯಾಕೆ ಟೀಕಿಸುತ್ತಾರೆ ಎಂಬುದೇ ಅರ್ಥವಾಗುತ್ತಿಲ್ಲ!” (ಅದೇ ಕೃತಿ, ಪು.35). ‘ಮೀಸಲಾತಿಯ ಜನಕ’ ಮೀಸಲಾತಿಯನ್ನು ಅದ್ಭುತವಾಗಿ ಸಮರ್ಥಿಸಿದ ಪರಿ ಇದು!
ಕಾಕತಾಳೀಯವೆಂದರೆ ಇದೇ ಮೀಸಲಾತಿಯ ಜನಕ ಅರ್ಥಾತ್ ಶಾಹು ಮಹಾರಾಜರು ಅದೇ ಮೀಸಲಾತಿಯ ಆಧುನಿಕ ಪ್ರವರ್ತಕ ಬಾಬಾಸಾಹೇಬ್ ಅಂಬೇಡ್ಕರರನ್ನು ಈ ದೇಶಕ್ಕೆ ವಿಶೇಷವಾಗಿ ಅಸ್ಪೃಶ್ಯತೆ ಮುಂದೆ 1922 ಫೆಬ್ರವರಿ 22 ರಂದು ದೆಹಲಿಯಲ್ಲಿ ನಡೆದ ‘ಅಖಿಲ ಭಾರತ ಶೋಷಿತ ವರ್ಗಗಳ ಸಮ್ಮೇಳನ’ದಲ್ಲಿ ಪರಿಚಯಿಸುತ್ತಾ ‘You should all keep before you Mr.Bhimrao Ambedkar, Your great leader as your ideal and try to follow him, to be like him’
ಎಂದರು!
ಅಂದರೆ ‘ನಿಮ್ಮ ಶ್ರೇಷ್ಠ ನಾಯಕ ಶ್ರೀ ಭೀಮರಾವ್ ಅಂಬೇಡ್ಕರರಂತೆ ನೀವಾಗಬೇಕು, ಅವರನ್ನು ನೀವು(ಶೋಷಿತ ವರ್ಗಗಳು) ನಿಮ್ಮ ಆದರ್ಶವಾಗಿ ಸ್ವೀಕರಿಸಬೇಕು, ಮುಂದಿಟ್ಟುಕೊಳ್ಳಬೇಕು’ ಎಂದರ್ಥ! (ಅದೇ ಕೃತಿ, ಪು.38). ಖಂಡಿತ, ಶಾಹುರವರು ಅಂಬೇಡ್ಕರರನ್ನು ಅಸ್ಪೃಶ್ಯರಿಗೆ ಬರೀ ಪರಿಚಯಿಸಿದ್ದಷ್ಟೇ ಅಲ್ಲ ಅವರ ಹೋರಾಟಕ್ಕೆ, ಅವರ ಬದುಕಿಗೆ ತಮ್ಮ ಬೆಂಬಲದ ನೆರವನ್ನೂ ನೀಡಿದ್ದಾರೆ.
ಯಾವ ಪರಿ ಎಂದರೆ ಅಂಬೇಡ್ಕರರು 1921ರಲ್ಲಿ ಇಂಗ್ಲೆಂಡಿಗೆ ಎಂಎಸ್ಸಿ, ಡಿಎಸ್ಸಿ ಪದವಿ ಪಡೆಯಲು ತೆರಳಿ ತಮ್ಮ ಶಿಕ್ಷಣಕ್ಕೆ ‘200 ಪೌಂಡ್ ನೆರವು ಬೇಕೆಂದು’ ಶಾಹು ಮಹಾರಾಜರಿಗೆ ಪತ್ರ ಬರೆದಾಗ ಮಹಾರಾಜರು ತಡ ಮಾಡದೆ ಅಂಬೇಡ್ಕರರಿಗೆ ಲಂಡನ್ನಿನ ಅವರ ವಿಳಾಸಕ್ಕೆ ಅಂದಿನ ಭಾರತೀಯ ಕರೆನ್ಸಿಯಲ್ಲಿ 1500ರೂಗಳನ್ನು ಕಳುಹಿಸುತ್ತಾರೆ.
ಅಲ್ಲದೆ ಅಂಬೇಡ್ಕರರು ವಿದೇಶದಲ್ಲಿದ್ದುದರಿಂದ ಅವರ ಶ್ರೀಮತಿ ಮಾತೆ ರಮಾಬಾಯಿಯವರಿಗೆ ನೆರವಾಗಲೆಂದು ಅವರಿಗೂ ಕೂಡ ಶಾಹು ಮಹಾರಾಜರು 750 ರೂಗಳ ಸಹಾಯಧನ ಮಂಜೂರು ಮಾಡುತ್ತಾರೆ. ಹಾಗೆಯೇ ಇದೇ ಸಂದರ್ಭದಲ್ಲಿ ಅಂಬೇಡ್ಕರರು ಈ ದೇಶದ ಶೋಷಿತರ ಪ್ರಥಮ ಪತ್ರಿಕೆ ‘ಮೂಕ ನಾಯಕ’ವನ್ನು ಆರಂಭಿಸಿದಾಗ ಶಾಹುಮಹಾರಾಜರು ಅದಕ್ಕೂ ಕೂಡ 2500ರೂಗಳ ಅನುದಾನ ನೀಡುತ್ತಾರೆ.
ಹಾಗೆ ಅಂಬೇಡ್ಕರರ ಹೋರಾಟಕ್ಕೆ ಹೀಗೆ ಅನುದಾನ ನೀಡಿದ್ದಷ್ಟೇ ಅಲ್ಲ, ಶಾಹು ಮಹಾರಾಜರು 1920ರಲ್ಲಿ ಅಂಬೇಡ್ಕರರ ಶಿಫಾರಸ್ಸಿನ ಮೇರೆಗೆ ಆರ್.ಕೆ.ಕದಂ ಎಂಬ ಅಸ್ಪೃಶ್ಯ ರನ್ನು ನಾಮನಿರ್ದೇಶನದ ಮೂಲಕ ತಮ್ಮ ಸಂಸ್ಥಾನದ ಆಡಳಿತ ಪರಿಷತ್ತಿಗೂ ಕೂಡ ಸದಸ್ಯರನ್ನಾಗಿ ನೇಮಿಸಿಕೊಳ್ಳುತ್ತಾರೆ.
ಅಲ್ಲದೆ ಅಸ್ಪೃಶ್ಯತೆ ವಿರುದ್ಧ ರಾಜಾಜ್ಞೆ ವಿಧಿಸುವ ಅವರು “ಯಾವುದೇ ಮನುಷ್ಯರಿಗೆ ಸಾರ್ವಜನಿಕ ಸ್ಥಳ, ಧರ್ಮಛತ್ರ, ಸರ್ಕಾರಿ ಕಚೇರಿ, ಸಾರ್ವಜನಿಕ ಹೋಟೆಲ್ಲು, ಕೆರೆ, ಬಾವಿ ಇತ್ಯಾದಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶ ನಿರಾಕರಿಸುವಂತಿಲ್ಲ”(ಅದೇ ಕೃತಿ, ಪು.199) ಎನ್ನುತ್ತಾರೆ. ಆ ಮೂಲಕ ಅಸ್ಪøಶ್ಯತೆ ವಿರುದ್ಧ ಶಾಹು ಮಹಾರಾಜರು ಸಮರ ಸಾರುತ್ತಾರೆ.
ಶಾಹು ಸತ್ಯಶೋಧಕ ಸಮಾಜ
ಒಂದು ವಿಷಯವನ್ನಿಲ್ಲಿ ಪ್ರಸ್ತಾಪಿಸಲೇಬೇಕಿದೆ. ಅದು ಮಹಾತ್ಮ ಜ್ಯೋತಿಬಾಫುಲೆಯವರಿಗೆ ಸಂಬಂಧಪಟ್ಟಿದ್ದು. ಹಿಂದುಳಿದ ಫೂಲ್ ಮಾಲಿ(ಹೂವಾಡಿಗ) ಜಾತಿಗೆ ಸೇರಿದ ಜ್ಯೋತಿಬಾಫುಲೆಯವರು ತಮ್ಮ ಧರ್ಮಪತ್ನಿ ಮಾತೆ ಸಾವಿತ್ರಿಬಾಫುಲೆಯವರೊಡಗೂಡಿ ಮಹಾರಾಷ್ಟ್ರದಲ್ಲಿ ತಮ್ಮ ಸತ್ಯಶೋಧಕ ಸಮಾಜ ಚಳುವಳಿಯ ಮೂಲಕ(1873) ಸಾಮಾಜಿಕ ಕ್ರಾಂತಿಯ ಕಿಡಿ ಹಚ್ಚಿದ್ದು ಎಲ್ಲರಿಗೂ ತಿಳಿದಿದೆ (1873).
ಅಂದಹಾಗೆ ಫುಲೆಯವರ ಈ ಚಳುವಳಿಯನ್ನು ‘ಶಾಹು ಸತ್ಯಶೋಧಕ ಸಮಾಜ’ ಹೆಸರಿನಲ್ಲಿ ಸಮರ್ಥವಾಗಿ ಮುಂದುವರಿಸಿದ ಶಾಹು ಮಹಾರಾಜರು ಸಾಮಾಜಿಕ ಪರಿವರ್ತನೆಯ ನೂತನ ಶಕೆಯ ಈ ನಿಟ್ಟಿನಲ್ಲಿ ಭಾರತದಲ್ಲಿ ಫುಲೆಯವರ ಸಶಕ್ತ ಉತ್ತರಾಧಿಕಾರಿಯಾಗುತ್ತಾರೆ. ಈ ದಿಸೆಯಲ್ಲಿ ಶಾಹುರವರ ಈ ಎಲ್ಲಾ ಸಾಮಾಜಿಕ ಪರಿವರ್ತನೆಯ ಕೈಂಕರ್ಯಗಳಲ್ಲಿ ಫುಲೆಯವರ ನೆರಳನ್ನು ನಾವು ಸ್ಪಷ್ಟವಾಗಿ ಗುರುತಿಸಬಹುದು.
ಕಡೆಯದಾಗಿ ಶಾಹು ಮಹಾರಾಜರ ಪ್ರಾಯೋಗಿಕ ಸಾಮಾಜಿಕತೆಯನ್ನಿಲ್ಲಿ ಒಂದು ಉದಾಹರಣೆಯನ್ನಾಗಿ ನೋಡೋಣ. ಅದೆಂದರೆ ‘ತಮ್ಮ ರಾಜ್ಯದ ರಾಜಧಾನಿ ಕೊಲ್ಲಾಪುರ ನಗರದ ಮುಖ್ಯರಸ್ತೆಯೊಂದರಲ್ಲಿ ಮಹಾರಾಜ ಶಾಹುರವರು ಉದ್ದೇಶಪೂರ್ವಕವಾಗಿಯೇ ಗಂಗಾರಾಂ ಕಾಂಬ್ಳೆ ಎಂಬ ಅಸ್ಪೃಶ್ಯನಿಗೆ ಹಣಕಾಸು ನೆರವು ನೀಡಿ ಹೊಟೆಲ್ಲೊಂದನ್ನು ತೆರೆಸಿದ್ದರು.
ಹಾಗೆಯೇ ಆ ಹೊಟೆಲ್ಲಿಗೆ ‘ಶಾಹು ಟೀ ಷಾಪ್’ ಎಂದು ಹೆಸರಿಡಿಸಿದ್ದ ಮಹಾರಾಜರು ಪ್ರತಿದಿನ ತಮ್ಮ ಆಸ್ಥಾನದ ಇತರರೊಡನೆ ಆ ಹೊಟೆಲ್ಲಿಗೆ ಹೋಗಿ ಟೀ ಕುಡಿಯುತ್ತಿದ್ದರು. ಆ ಮೂಲಕ ಜಾತಿ ಆಧಾರದ ಉದ್ಯೋಗ ತೊಲಗಿಸುವುದರ ಜೊತೆಗೆ, ಅಸ್ಪೃಶ್ಯತೆ ಆಚರಣೆ ತಮ್ಮ ರಾಜ್ಯದಲ್ಲಿ ಸಲ್ಲದ್ದೆಂದು ಬಹಿರಂಗವಾಗಿ ಶಾಹು ಮಹಾರಾಜರು ಇಡೀ ಜಗತ್ತಿಗೆ ಪ್ರತಿನಿತ್ಯ ಪ್ರಾಯೋಗಿಕವಾಗಿ ತೋರಿಸಿಕೊಡುತ್ತಿದ್ದರು. ದುರಂತವೆಂದರೆ ಇಂತಹ ಸಾಮಾಜಿಕ ಪ್ರಯೋಗದ ಶ್ರೇಷ್ಠ ಅರಸು ಡಯಾಬಿಟಿಸ್ಗೆ ತುತ್ತಾಗಿ 48ರ ಸಣ್ಣ ಹರೆಯದಲ್ಲೇ ಅಂದರೆ 1922 ಮೇ 6 ರಂದು ನಿಧನರಾದರು.
ಒಂದು ವಾಸ್ತಾವಾಂಶವನ್ನಿಲ್ಲಿ ಪ್ರಸ್ತಾಪಿಸಬೇಕು ಅದೆಂದರೆ ಲೋಕಮಾನ್ಯ ಎಂಬ ಹೆಸರಿನ ಸೋಕಾಲ್ಡ್ ಬಾಲಗಂಗಾಧರ ತಿಲಕರು ಶಾಹು ಮಹಾರಾಜರ ಉಗ್ರ ಟೀಕಾಕಾರರಾಗಿದ್ದರು. ಹಾಗೆಯೇ ತಿಲಕರ ಸಂಪಾದಕತ್ವದ ‘ಕೇಸರಿ’ ಪತ್ರಿಕೆ ಶಾಹು ಮಹಾರಾಜರ ಇಂತಹ ಸಾಮಾಜಿಕ ಕಲ್ಯಾಣ ಕಾರ್ಯ ಕಂಡು ಅವರನ್ನು ಸ್ವರಾಜ್ಯ ದ್ರೋಹಿ ಎಂದಿತ್ತು!
ಆದರೆ ಶಾಹು ಮಹಾರಾಜರು ಮನುವಾದಿಗಳ ಇಂತಹ ಟೀಕೆಗಳಿಗೆಲ್ಲ ಖಂಡಿತ ಜಗ್ಗಲಿಲ್ಲ. ಬದಲಿಗೆ “ನನ್ನನ್ನು ಕೊಲ್ಲಾಪುರದ ಈ ಸಿಂಹಾಸನದಿಂದ ಕಿತ್ತೊಗೆದರೂ ಸರೀ ನಾನು ಈ ದೇಶದ ಶೋಷಿತ ವರ್ಗಗಳು ಮತ್ತು ಹಿಂದುಳಿದ ವರ್ಗಗಳ ಸೇವೆಯನ್ನು ನಿರಂತರ ಮುಂದುವರಿಸುವುದಾಗಿ” ಗುಡುಗಿದರು.
ಒಂದಂತು ನಿಜ, ಭಾರತದ ಸಾಮಾಜಿಕ ಪರಿವರ್ತನೆಯ ಚಳುವಳಿಯ ಇತಿಹಾಸದಲ್ಲಿ ಛತ್ರಪತಿ ಶಾಹು ಮಹಾರಾಜರ ಹೆಸರು ಅಚ್ಚಳಿಯದೇ ಶ್ರೇಷ್ಠತಮವಾಗಿ ದಾಖಲಾಗಿದೆ. ಮಹಾತ್ಮ ಜ್ಯೋತಿಬಾಫುಲೆ, ಶ್ರೀ ನಾರಾಯಣಗುರು, ಪೆರಿಯಾರ್ ರಾಮಸ್ವಾಮಿ ನಾಯ್ಕರ್, ಬಾಬಾಸಾಹೇಬ್ ಅಂಬೇಡ್ಕರ್ ಹೀಗೆ ಧೀಮಂತ ಸಾಮಾಜಿಕ ಪರಿವರ್ತನ ಚಿಂತಕರ ಜೊತೆ ಶಾಹು ಮಹಾರಾಜರ ಹೆಸರು ‘ಸಾಮಾಜಿಕ ಪ್ರಜಾಪ್ರಭುತ್ವದ ಮೇರುಸ್ತಂಭ’ವೆಂದು ಅನ್ವರ್ಥವಾಗಿದೆ. ಈ ನಿಟ್ಟಿನಲ್ಲಿ ಅಂತಹ ಸಾಮಾಜಿಕ ಕೈಂಕರ್ಯದ ಅರಸನ ಕ್ರಾಂತಿಯ ಪಥದಲ್ಲಿ ಈ ದೇಶ, ಈ ಸಮಾಜ ನಿರಂತರ ಸಾಗಬೇಕಷ್ಟೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ಅಂತರಂಗ3 hours agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ18 hours agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್


