Connect with us

ಭಾವ ಭೈರಾಗಿ

ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕಲ್ಕುಳಿ ವಿಠಲ್ ಹೆಗ್ಗಡೆ ಅವರ ಭಾಷಣ ; ಮಿಸ್ ಮಾಡ್ದೆ ಓದಿ

Published

on

  • ಶೃಂಗೇರಿಯಲ್ಲಿ ದಿನಾಂಕ 10- 01- 2020 ರಂದು ನಡೆದ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಶ್ರೀ ಕಲ್ಕುಳಿ ವಿಠಲ್ ಹೆಗ್ಗಡೆ ಅವರ ಭಾಷಣದ ಬರಹ ರೂಪ

ನಮ್ಮ ಶೃಂಗೇರಿಯ ಆದಿಕವಿ ಬಾಹುಬಲಿಯನ್ನು ಸ್ಮರಿಸುತ್ತಾ ನನ್ನ ಭಾಷಣವನ್ನು ಪ್ರಾರಂಭಿಸುತ್ತಿದ್ದೇನೆ.

ಜಿಲ್ಲಾ 19ನೇ ಕನ್ನಡ ಸಾ ಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪದವಿಯ ಈ ಗೌರವವನ್ನು ನಾನು ಬಯಸಿರಲಿಲ್ಲ; ನಿರೀಕ್ಷಿಸಿಯೂ ಇರಲಿಲ್ಲ. ಆದರೂ ನೀವೆಲ್ಲರೂ ಪ್ರೀತಿಯಿಂದ ಈ ಗೌರವ ನೀಡಿದ್ದೀರಿ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಅಭಾರಿಯಾಗಿದ್ದೇನೆ.

ನಾನು ಈ ಮೊದಲು ಸ್ಮರಿಸಿದ ಬಾಹುಬಲಿ ಎಂಬ ಜೈನ ಕವಿಯು, ಶೃಂಗೇರಿಯೂ ಆಡಳಿತಕ್ಕೊಳಪಟ್ಟಿದ್ದ ಕಾರ್ಕಳದ ದೊರೆ ಭೈರವೇಂದ್ರನ ಆಸ್ಥಾನದಲ್ಲಿ ಕವಿಯಾಗಿದ್ದನೆಂದು ಇತಿಹಾಸ ಹೇಳುತ್ತದೆ. ಈತನ ಗ್ರಂಥ ‘ನಾಗಕುಮಾರ ಚರಿತೆ’ಯಲ್ಲಿ ಮುಖ್ಯವಾಗಿ ಕರ್ಮಮಾರ್ಗದ ಪ್ರಸ್ತಾಪ ಬರುತ್ತದೆ. ನನ್ನದೂ ಕರ್ಮಮಾರ್ಗವೇ. ನಮ್ಮ ನೆಲ, ಜಲ ಮತ್ತು ನಮ್ಮ ಜನರಿಗೆ ಸರ್ಕಾರದಿಂದಲೇ ಆಗಲಿ, ಇನ್ಯಾರಿಂದಲೇ ಆಗಲಿ ಸಂಕಷ್ಟ ಬಂದಾಗಲೆ ಧ್ವನಿ ಎತ್ತುವ ಕಾಯಕ ಮಾಡಿದ್ದೇನೆ. ಅಗತ್ಯ ಬಿದ್ದಾಗ ಹೋರಾಟಕ್ಕಿಳಿದಿದ್ದೇನೆ. ಇದು ನನ್ನ ಕರ್ತವ್ಯವಾಗಿದೆ.

ಈ ಅಧ್ಯ ಕ್ಷ ಸ್ಥಾನವು ಈ ಹಿಂದಿನ ನನ್ನ ಹೋರಾಟಕ್ಕೆ ಸಂದ ಗೌರವ ಎಂದು ಭಾವಿಸಿದ್ದೇನೆ. ನನ್ನ ಹೋರಾಟದ ಅನುಭವ ಮತ್ತು ಚಿಂತನೆಗಳು ನನ್ನ ಕೃತಿ, ಪ್ರಬಂಧ, ಲೇಖನಗಳಲ್ಲಿ ಅಭಿವ್ಯಕ್ತಗೊಂಡಿದ್ದು, ಅವೇ ಈ ವೇದಿಕೆಯನ್ನು ತಮ್ಮೆಲ್ಲರ ಅಭಿಮಾನದ ಮೇರೆಗೆ ದೊರಕಿಸಿಕೊಟ್ಟಿತ್ತೆಂದು ಕೊಳ್ಳುತ್ತೇನೆ. ನನ್ನನ್ನು ಆಯ್ಕೆಮಾಡಿದ ಜಿಲ್ಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯ ಕ್ಷರು, ಪದಾಧಿಕಾರಿಗಳಿಗೆ, ಅಭಿಮಾನಿಗಳಿಗೆ, ಸ್ನೇಹಿತರಿಗೆ, ಸಮಸ್ತರಿಗೆ ಮೊದಲಿಗೆ ಅಂತರಾಳದ ನಮಸ್ಕಾರ ತಿಳಿಸುತ್ತೇನೆ.

ಶೃಂಗೇರಿ ಎಂದರೆ ಹಾವು ಗರ್ಭಿಣಿ ಕಪ್ಪೆಗೆ ನೆರಳು ನೀಡಿದ ಜಾಗ. ಸೌಹಾರ್ದತೆಯ ಪರಂಪರೆಗೆ ಇದಕ್ಕಿಂತ ದೊಡ್ಡ ಉದಾಹರಣೆ ನನಗಂತೂ ಸಿಕ್ಕಿಲ್ಲ. ಈ ಕಾರಣದಿಂದ ನನಗೆ ನನ್ನೂರಿನ ಬಗ್ಗೆ ಹೆಮ್ಮೆ ಎಲ್ಲರಿಗಿಂತಲೂ ಒಂದು ಹಿಡಿ ಹೆಚ್ಚು. ಇಂತಹ ನನ್ನೂರಿನಲ್ಲಿ ನಡೆಯುತ್ತಿರುವ ಈ ಕನ್ನಡ ಹಬ್ಬದಲ್ಲಿ ಈ ಗೌರವ ಪಡೆಯುತ್ತಿರುವುದರಿಂದ ಆಗುತ್ತಿರುವ ಸಂತೋಷವನ್ನು ಪದಗಳಲ್ಲಿ ಹೇಳಲಾರೆ.

ಪ್ರಿಯ ಬಂಧುಗಳೇ,

ಇದೊಂದು ಸಾಹಿತ್ಯ ಸಮ್ಮೇಳನ ಎಂಬುದಕ್ಕಿಂತ ಕನ್ನಡಿಗರ ಸ್ವಾಭಿಮಾನದ ಸಮಾವೇಶವಾಗಿ ಇತಿಹಾಸದಲ್ಲಿ ದಾಖಲಾಗಲಿದೆ.ಇದು ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನವಾಗಿದ್ದರೂ, ಬುದ್ದಿಗೇಡಿಗಳಿಂದಾಗಿ ಅಖಿಲ ಕರ್ನಾಟಕ ಮಟ್ಟದಲ್ಲಿ ಸುದ್ದಿ ಮಾಡಿ ಪ್ರಚಾರ ಪಡೆದಿದೆ. ಎಷ್ಟೇ ಅಡೆ-ತಡೆಗಳು ಎದುರಾದರೂ ಇದರ ಯಶಸ್ಸಿಗಾಗಿ ಹಲವಾರು ಕನ್ನಡ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ದ್ದಾರೆ. ಅನೇಕರು ತಮ್ಮ ಕೈಯಲ್ಲಾದಷ್ಟು ಆರ್ಥಿಕ ನೆರವು ನೀಡಿದ್ದಾರೆ. ಆ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಎಸೆದ ಸವಾಲನ್ನು ದಿಟ್ಟವಾಗಿ ಎದುರಿಸಿದ್ದಾರೆ. ಇದು ನನ್ನಲ್ಲಿ ಹೋರಾಟದ ಕಾವನ್ನು ಇನ್ನಷ್ಟು ಹೆಚ್ಚಿಸಿದೆ ಎಂದಷ್ಟೇ ನಾನು ಈ ಸಂದರ್ಭದಲ್ಲಿ ಹೇಳಬಲ್ಲೆ.

ನನ್ನನ್ನು ಈ ಸಮ್ಮೇಳನದ ಅಧ್ಯ ಕ್ಷ ರಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯ ಕ್ಷ ರು ಮಾಹಿತಿ ನೀಡಿದ ಕೂಡಲೇ ನನ್ನ ನೆನಪಿಗೆ ಬಂದವರು, ಪರಂಪರೆಯ ಕಥೆಗಳನ್ನು ಮತ್ತು ಜೀವನಾನುಭವದ ಸಂಗತಿಗಳನ್ನು ಧಾರೆ ಎರೆದು ಪೋಷಿಸಿದ ನನ್ನ ಅಪ್ಪ-ಅಮ್ಮ, ಆನಂತರ ನನ್ನನ್ನು ಬೆಳೆಸಿದ ಪ್ರಗತಿಪರ ಚಳವಳಿ ಗಳು, ಸಾರ್ವಜನಿಕ ಬದುಕಿನ ಬವಣೆಗಳ ಮುಖಾಮುಖಿಗೆ ಬೆನ್ನೆಲುಬಾಗಿ ನಿಂತ ಕುಟುಂಬವರ್ಗ ಮತ್ತು ನನ್ನ ಸಂಗಾತಿಗಳು, ಸ್ನೇಹಿತರು.

ಈ ಎಲ್ಲರಿಗೂ ನನ್ನ ನಮನಗಳು ಸಲ್ಲುತ್ತವೆ. ಈ ಆತಂಕದ ಸಂದರ್ಭದಲ್ಲಿಯೂ ದೂರ ದೂರದ ಊರಿನಿಂದ ಬಂದಿರುವ ಮತ್ತು ಇಲ್ಲಿಯ ಕನ್ನಡಾಭಿಮಾನಿಗಳಿಗೆ ನಾನು ಋಣಿ.
ಏನನ್ನಾದರೂ ಬರೆದು ಓದಬೇಕೆಂದರೆ ನನಗೆ ಎಲ್ಲಿಲ್ಲದ ಹಿಂಜರಿಕೆ. ನಾನೆಂದೂ ಜನರೆದುರು ನಿಂತನಿಲುವಿನಲ್ಲಿ ಆಲೋಚಿಸುತ್ತಲೇ ಹೊಳೆದಂತೆ ಮಾತಾಡುವವನು. ಇಲ್ಲಿಯೂ ಹಾಗೆ ಮಾಡಬೇಕೆಂಬ ಆಸೆ ನನ್ನದಾಗಿತ್ತು. ಆದರೆ ಸತ್‌ಸಂಪ್ರದಾಯವನ್ನು ಮೀರಬಾರದೆಂಬ ಕಾರಣಕ್ಕೆ ಭಾಷಣವನ್ನು ಓದುತ್ತಿದ್ದೇನೆ.

ಭಾಷಣ ಮಾಡುವುದಕ್ಕಿಂತ ಭಾಷಣ ಬರೆಯುವುದು ಹೆಚ್ಚು ತ್ರಾಸದ ಕೆಲಸವೆಂಬುದು ನನಗೆ ಕಳೆದ ಒಂದು ತಿಂಗಳಿನಲ್ಲಿ ಅರಿವಾಗಿದೆ. ನಾನು ಈ ಭಾಷಣವನ್ನು ನನ್ನೊಳಗೇ ಅಂದುಕೊಳ್ಳುತ್ತ, ತಿದ್ದಿಕೊಳ್ಳುತ್ತ, ಆಡಬೇಕೆಂದು ಅನ್ನಿಸುವ ಈ ನನ್ನ ಮಾತುಗಳು ಅವಶ್ಯಕವೇ? ಈಗಿನ ವಿದ್ಯಮಾನದಲ್ಲಿ ಎಷ್ಟು ಪ್ರಸ್ತುತವಾದೀತು ಎಂದು ಆಲೋಚಿಸುತ್ತ, ವಿಶ್ಲೇಷಿಸುತ್ತ ಕಾಲಕಳೆದಿದ್ದೇನೆ. ಅಧ್ಯ ಕ್ಷ ನಾಗಿ ಆಯ್ಕೆಯಾದದ್ದನ್ನು ತಿಳಿದ ದಿನದಿಂದಲೂ ಈಗ ಇಲ್ಲಿ ನಿಮ್ಮೆದುರು ಮಾತಾಡಲು ನಿಂತಿರುವ ಕ್ಷ ಣವನ್ನು ಆತಂಕದಿಂದ ಊಹಿಸಿಕೊಳ್ಳುತ್ತ ಕಳೆದಿ ದ್ದೇನೆ. ಈ ಹೊತ್ತಲ್ಲಿ ನಿಮ್ಮ ಮುಂದೆ ಆಡಲೇ ಬೇಕಾಗಿರುವ ಹಲವು ಮಾತುಗಳು ನನ್ನ ಮುಂದಿವೆ. ಅವುಗಳಲ್ಲಿ ಕೆಲವು ವಿಷಯಗಳನ್ನು ಮಾತ್ರ ನಾನಿಲ್ಲಿ ಪ್ರಸ್ತಾಪಿಸುತ್ತೇನೆ.

ಆತ್ಮೀಯ ಕನ್ನಡ ಪ್ರೇಮಿಗಳೇ,

ಸಾಹಿತ್ಯ ಸಮ್ಮೇಳನಗಳು ಕನ್ನಡ ನುಡಿ ಜಾತ್ರೆಗಳಾಗಿವೆಯೇ ಹೊರತು, ಕನ್ನಡಿಗರ ಧ್ವನಿಯಾದ ಉದಾಹರಣೆಗಳು ಬಹಳ ಕಡಿಮೆ. ಇನ್ನು ಸಮ್ಮೆಳನಾಧ್ಯಕ್ಷರ ಭಾಷಣದಲ್ಲಿನ ವಿಷಯಗಳನ್ನು ಮುಂದಿಟ್ಟುಕೊಂಡು ಗಂಭೀರ ಚರ್ಚೆ ನಡೆಸಿದ್ದಿಲ್ಲ. ಅಧ್ಯಕ್ಷೀಯ ಭಾಷಣದಲ್ಲಿನ ಬೇಡಿಕೆ, ಅಹವಾಲುಗಳಾಗಲೀ, ಅಥವಾ ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ ತೀರ್ಮಾನಿಸಿದ ನಿರ್ಣಯಗಳಾಗಲೀ, ಜಾರಿಗೆ ಬಂದಿದ್ದು, ನಾಡು-ನುಡಿಯ ಸಮಸ್ಯೆಗಳು ಬಗೆಹರಿದಿದ್ದು ಅಪರೂಪ.

ನನ್ನ ಹೋರಾಟದ ಅನುಭವದಲ್ಲಿ ಹೇಳುವುದಾದರೆ ನಾನು ತುಮಕೂರಿನಲ್ಲಿ ಮತ್ತು ಶಿವಮೊಗ್ಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ, ರಾಜ್ಯ ಮತ್ತು ಮಲೆನಾಡಿನ ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ. ಇವುಗಳನ್ನು ಸಮ್ಮೇಳನದ ನಿರ್ಣಯಗಳಲ್ಲಿ ಸೇರಿಸಬೇಕೆಂದು ಒತ್ತಾಯ ಮಾಡಿ, ಪ್ರತಿಭಟನೆ ಕೂಡ ಮಾಡಿ, ಅದರಲ್ಲಿ ಯಶಸ್ವಿಯೂ ಆಗಿದ್ದೇನೆ. ಆದರೆ ಮುಖ್ಯಮಂತ್ರಿಗಳೇ ಭರವಸೆ ನೀಡಿದ್ದರೂ ಈ ನಿರ್ಣಯಗಳು ಕಾರ್ಯರೂಪಕ್ಕೆ ಬಂದಿಲ್ಲವೆಂಬ ಬಹುದೊಡ್ಡ ವಿಷಾದ ನನ್ನಲ್ಲಿದೆ.

ಅಂದ ಮಾತ್ರಕ್ಕೆ ಈ ರೀತಿಯ ಸಮ್ಮೇಳನದಲ್ಲಿ ನ್ಯಾಯಯುತ ಬೇಡಿಕೆಗಳನ್ನು, ಸಮಾಜದ ಸಂಕಟಗಳನ್ನು ಪ್ರಸ್ತಾಪಿಸುವುದು ವ್ಯರ್ಥವೆಂಬುದು ನನ್ನ ಅಭಿಪ್ರಾಯವಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮ್ಮ ಅಹವಾಲನ್ನು, ಬೇಡಿಕೆಗಳನ್ನು ಸಲ್ಲಿಸುವುದು ಸಂವಿಧಾನಾತ್ಮಕ ಹಕ್ಕು. ಜನ ಜಾಗೃತರಾದರೆ ಸರ್ಕಾರಗಳು ಇವುಗಳಿಗೆ ಬೆಲೆ ನೀಡಲೇಬೇಕಾಗುತ್ತದೆ. ಆ ದೃಷ್ಟಿಯಿಂದ ಇಂದು ನಾನಿಲ್ಲಿ ಪ್ರಸ್ತಾಪಿಸುವ ವಿಷಯಗಳು ನಾವೆಲ್ಲರೂ ಸೇರಿ ನೀಡುತ್ತಿರುವ ಆದೇಶವೆಂದೂ, ಇದು ನನ್ನ ಜವಾಬ್ದಾರಿಯೂ ಹೌದೆಂದು ತಿಳಿದು ಈ ಭಾಷಣವನ್ನು ಮುಂದುವರೆಸುತ್ತೇನೆ.

ಈ ಸಾಹಿತ್ಯ ಸಮ್ಮೇಳನದಲ್ಲಿ ನಾನು ವಿನಮ್ರವಾಗಿ ಒಪ್ಪಿಕೊಳ್ಳುವುದೆಂದರೆ ನಾನು ಮೂಲತಃ ಸಾಹಿತ್ಯವನ್ನು ಶಾಸ್ತ್ರೀಯವಾಗಿ ಕಲಿತವನಲ್ಲ. ತಮಗೆಲ್ಲರಿಗೂ ಗೊತ್ತಿರುವಂತೆ ನಾನು ಪರಿಸರ ಮತ್ತು ಸಾಮಾಜಿಕ ಹೋರಾಟದ ಕಾರ್ಯಕರ್ತ. ಕಳೆದ ಭರ್ತಿ ನಾಲ್ಕು ದಶಕಗಳಿಂದ ಒಂದಿಂದು ಹೋರಾಟಗಳಲ್ಲಿ ತೊಡಗಿಸಿಕೊಂಡು ಬಂದಿದ್ದೇನೆ. ಹಾಗೆ ಹೇಳುವುದಾದರೆ ಯಾರಾದರೂ ನನ್ನ ಇತ್ತೀಚಿನ ಕೃತಿಗಳನ್ನು ಓದಿ ನನ್ನನ್ನು ಸಾಹಿತಿ ಎಂದು ಗುರುತಿಸುವುದಕ್ಕಿಂತ ಹೋರಾಟಗಾರನೆಂದರೆ ನನಗೆ ಹೆಚ್ಚು ಖುಷಿಯಾಗುತ್ತದೆ.

ವಾಸ್ತವವೆಂದರೆ ರಾಜ್ಯದಾದ್ಯಂತ ನಡೆದ ಹೋರಾಟಗಳಲ್ಲಿ ಭಾಗವಹಿಸಿದ್ದರಿಂದ ನನಗೆ ಸಿಕ್ಕ ಸ್ನೇಹಿತರು, ಅಭಿಮಾನಿಗಳ ಬೆಂಬಲವೆಷ್ಟೋ ಅಷ್ಟೇ ನನ್ನ ಕೃತಿ ‘ಮಂಗನಬ್ಯಾಟೆ’ಗೂ ವಿಸ್ತೃತವಾದ ಸ್ಪಂದನೆ ಸಿಕ್ಕಿದೆ. ಇದರ ಅರಿವೂ ನನಗಿದೆ. ಹೋರಾಟ ಸಾಹಿತ್ಯದಿಂದ ಹೊರತಲ್ಲ. ಸಾಹಿತ್ಯವೂ ಹೋರಾಟದಿಂದ ಹೊರತಲ್ಲ. ಅವು ಒಂದಕ್ಕೊಂದು ಪೂರಕವೇ. ಸೈದ್ಧಾಂತಿಕ ಪ್ರೇರಣೆಯಿಲ್ಲದ ಹೋರಾಟಗಳಾಗಲೀ; ಸಾಮಾಜಿಕ ಬದ್ಧತೆಯಿಲ್ಲದ ಸಾಹಿತ್ಯವಾಗಲೀ- ಎರಡೂ ಜೊಳ್ಳು. ಜನಸಮಾನ್ಯರ ಸಂಕಟಗಳನ್ನು ಪರಿಹರಿಸುವಲ್ಲಿ ಹೋರಾಟಗಳಿಗೆ ಎಷ್ಟು ಜವಾಬ್ದಾರಿ ಇರುತ್ತದೋ ಅಷ್ಟೇ ಜವಾಬ್ದಾರಿ ಸಾಹಿತ್ಯಕ್ಕೂ ಇರುತ್ತದೆ.

ಮೌಲ್ಯಯುತ ಸಾಹಿತ್ಯ ಸಾಮಾಜಿಕ ಬದ್ಧತೆಯಿಂದ ಕೂಡಿರಬೇಕಾಗುತ್ತದೆ. ಈ ಬದ್ಧತೆಯ ವಿಷಯ ಬಂದಾಗ ನನ್ನ ಆತ್ಮೀಯರಾದ, ಖ್ಯಾತ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಅವರ ಮಾತು ನೆನಪಿಗೆ ಬರುತ್ತದೆ, ಅವರು ‘ಸಾಹಿತ್ಯ ಮತ್ತು ಬದ್ಧತೆ’ ಲೇಖನದಲ್ಲಿ ಹೀಗೆ ಬರೆಯುತ್ತಾರೆ;
ಸಾಮಾಜಿಕ ಕಳಕಳಿಯ ಹಿನ್ನೆಲೆಯುಳ್ಳ ಬದ್ಧತೆ ಈ ಕಾಲದ ಅಗತ್ಯ. ಚರಿತ್ರೆ ಇಚ್ಛಿಸುವ ಸ್ಥಿತಿಯೆಂದರೆ ಸರಿಯಾದೀತು’. ಸಾಹಿತ್ಯ ಒಣ ಹರಟೆ, ಪುಂಡರ ಗೋಷ್ಠಿಯಲ್ಲ. ಅದು ಪ್ರತಿಪಾದಿಸುವುದೇನೆಂದರೆ ಮನುಷ್ಯನನ್ನು ಮನುಷ್ಯನನ್ನಾಗಿ ಕಾಣುವುದು, ಮನಸ್ಸನ್ನು ಅರಳಿಸುವುದು. ಅವನಲ್ಲಿ ಹುದುಗಿರುವ ದುರಾಸೆ, ಕ್ರೌರ್ಯ, ಅಸೂಯೆ, ಆಕ್ರಮಣ ಪ್ರವೃತ್ತಿಗಳನ್ನು ತೊಡೆದು ಉದಾತ್ತತೆಯಿಂದ, ಸುಂದರ ಸುಖಮಯ ನೆಮ್ಮದಿಯನ್ನು ಅಭಿವ್ಯಕ್ತಿಸುವುದು. ಹಾಗೆ ನೋಡಿದರೆ ಈ ಮನುಷ್ಯ ಸಮಾಜವನ್ನು ಆಳುತ್ತಿರುವುದು ಸಾಹಿತ್ಯದ ಮೂಲಕವೇ. ಗೀತೆ, ಬೈಬಲ, ಖುರಾನ್ ನಂತಹ ಮಹತ್ ಧರ್ಮಗ್ರಂಥಗಳು ಕೋಟಿ ಕೋಟಿ ಜನರನ್ನು ನಿಯಂತ್ರಿಸುತ್ತಿವೆ.

ಒಂದು ಕಾಲದಲ್ಲಿ ಪ್ರಪಂಚದ ಮೂರನೇ ಎರಡರಷ್ಟು ಜನರನ್ನು ಮಾನವತಾವಾದಿ ಕಾರ್ಲ್ ಮಾರ್ಕ್ಸ್ ಸಮಾಜವಾದ ಸಿದ್ಧಾಂತದ ಕಮ್ಯುನಿಸಂ (ಪ್ರಣಾಳಿಕೆ) ನಿಯಂತ್ರಿಸುತ್ತಿತ್ತು. ಧರ್ಮ- ಸಿದ್ಧಾಂತಗಳು ತಮ್ಮ ತಮ್ಮ ಅನುಯಾಯಿಗಳನ್ನಷ್ಟೇ ನಿಯಂತ್ರಿಸಿದರೆ ಸಾಹಿತ್ಯ ಸಮಾಜದ ಎಲ್ಲರೂ ಮಾನವಂತರಾಗಿ ಬದುಕಲು ಸಹಾಯ ಮಾಡುತ್ತದೆ.

ಹುಟ್ಟಿದವರಿಗೆ ಸಾವಿದೆ; ಆದರೆ ಬರೆದ ಸಾಹಿತ್ಯಕ್ಕೆಂದೂ ಅಳಿವಿಲ್ಲ ಎಂಬ ಮಾತಿದೆ. ಈ ಮಾತಿಗೆ ಪುಷ್ಟಿದಾಯಕವಾದ ವಿಚಾರವೆಂದರೆ ಯುಗದಕವಿ, ಜಗದ ಕವಿ, ಮಲೆನಾಡಿನ ಕವಿ, ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ. ಕನ್ನಡ ಜೀವಂತವಿರುವವರೆಗೂ ನಮ್ಮ ಈ ಹೆಮ್ಮೆಯ ಕವಿಯ ಸಾಹಿತ್ಯ ಜೀವಂತವಾಗಿರುತ್ತದೆ.

ಕುವೆಂಪು ಎಂದರೆ ಮಲೆನಾಡು. ಅವರು ಈ ನಮ್ಮ ಮಲೆನಾಡಿನ ಪರಿಸರವನ್ನು ರಮ್ಯವಾಗಿ ವರ್ಣಿಸಿ ವಿಜೃಂಭಿಸಿದರು. ‘ಹಕ್ಕಿ ಬಳಗ ಸುತ್ತ ಕೂಡಿ ಬೈಗಂ ಬೆಳಗು ಹಾಡಿ ಹಾಡಿ ಮಲೆನಾಡ ಸಗ್ಗ ಮಾಡಿ’ ಎನ್ನುತ್ತಾ ಅವರು ಬರೆದ ಕವಿತೆ-ಕಾದಂಬರಿಗಳು ನನ್ನನ್ನು, ನನ್ನಂತಹ ಅನೇಕರನ್ನು ಪರಿಸರವಾದಿಯಾಗಿ ರೂಪಿಸಿದೆ ಎಂದರೆ ಸಾಹಿತ್ಯದ ಶಕ್ತಿ ಅಪೂರ್ವವಾದದ್ದು ಎಂದೆನಿಸುವುದಿಲ್ಲವೇ?

ನಾನು ಯಾವುದೇ ಸಾಹಿತ್ಯದ ಕೃತಿಯನ್ನಾದರೂ ವ್ಯಸನಕ್ಕಾಗಿ ಮಾತ್ರ ಓದುವುದಿಲ್ಲ, ಸಂಶೋಧನಾ ದೃಷ್ಟಿಯಿಂದಲೇ ಅಭ್ಯಾಸ ಮಾಡುತ್ತೇನೆ. ಆದ್ದರಿಂದ ನಾನು ಎಂದೆಂದೂ ಸಾಹಿತ್ಯದ ವಿದ್ಯಾರ್ಥಿಯೇ. ನನ್ನ ಹಾಗೂ ನನ್ನಂತಹ ಕೋಟ್ಯಂತರ ಜನರ ಅರಿವನ್ನು ಹೆಚ್ಚಿಸಿದ್ದು, ಹೆಚ್ಚಿಸುತ್ತಿರುವುದು ನಮ್ಮ ಭಾಷೆ ಕನ್ನಡ. ಕನ್ನಡ ಭಾಷೆಯೇ ನಮ್ಮ ಆಸ್ತಿ. ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಈ ಭಾಷೆಯ ಪರಂಪರೆಯೇ ಸೌಹಾದತೆ. ಹತ್ತನೇ ಶತಮಾನದಲ್ಲಿ ಆದಿಕವಿ ಪಂಪ ‘ಮಾನವ ಜಾತಿ ತಾನೊಂದೇ ವಲಂ’ ಎಂದು ಮಾನವತೆಯನ್ನು ಸಾರಿದ. ಸರ್ವಜೀವಿಗಳ ಆತ್ಮದಲ್ಲೂ ಪರಮಾತ್ಮನಿದ್ದಾನೆಂದು ಸಾರಿದ ಶಂಕರಾಚಾರ್ಯರು, ಚಾಂಡಾಲನಲ್ಲಿ ಈಶ್ವರನನ್ನು ಕಂಡರು.

ಕನ್ನಡ ನೆಲದ, ವಿಶ್ವಮಾನ್ಯ ಧಾರ್ಮಿಕ ಹೋರಾಟಗಾರ ಬಸವಣ್ಣ ಮನುಷ್ಯ ಮನುಷ್ಯರಲ್ಲಿ ಬೇಧವು ಸಲ್ಲದು ಎನ್ನುವುದನ್ನು ಸರಳವಾಗಿ ಹೇಳಿದ್ದು ಹೀಗೆ;

ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ.
ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ
ನಿಮ್ಮ ಮನೆಯ ಮಗನೆಂದೆನಿಸಯ್ಯಾ. ಇಂತಹ ಭವ್ಯ ಪರಂಪರೆ ಕನ್ನಡಕ್ಕಿದೆ.

ಕುವೆಂಪು ಅವರ ವಿಶ್ವದೃಷ್ಠಿ, ವಿಶ್ವಮಾನವ ಸಂದೇಶದ ‘ಅನಿಕೇತನ’ ಕವನ ನಮ್ಮೆಲ್ಲರ ಮಂತ್ರವಾಗಬೇಕು.

ನೂರು ಮತದ ಹೊಟ್ಟ ತೂರಿ,ಎಲ್ಲ ತತ್ವವೆಲ್ಲ ಮೀರಿ,ನಿರ್ದಿಗಂತವಾಗಿ ಏರಿ,ಓ ನನ್ನ ಚೇತನ, ಆಗು ನೀ ಅನಿಕೇತನ

ಈ ಕವನದ ಸಾಲುಗಳು ನಮಗೆ ಬೇಕಾದುದು ಆ ಮತ, ಈ ಮತ ಅಲ್ಲ, ಮನುಜಮತ. ಆ ಪಥ ಈ ಪಥ ಅಲ್ಲ, ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ. ಸರ್ವದ ಸರ್ವಸ್ತರ ಉದಯ ಎಂದು ಸಾರುತ್ತವೆ. ಇದು ಎಂದೆಂದಿಗೂ ಸರ್ವಕಾಲಿಕ ಪ್ರೇರಣೆಯಾಗಿದೆ.

“ಕುವೆಂಪು ಅವರು ವಿಶ್ವಮಾನವನಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವ ಪ್ರಣಾಳಿಕೆಯನ್ನು ಈ ಕವನದಲ್ಲಿ ಕೊಟ್ಟಿ ದ್ದಾರೆ” ಎಂದು ನಮ್ಮ ತಾಲೂಕಿನವರೇ ಆದ ಖ್ಯಾತ ಕವಿ ಶೃಂಗೇರಿ ವಿದ್ಯಾರಣ್ಯಪುರ ಪರಮೇಶ್ವರ ಭಟ್ಟ (ಎಸ.ವಿ. ಪರಮೇಶ್ವರ ಭಟ್ಟ) ಹೇಳಿರುವುದನ್ನು ನಾನಿಲ್ಲಿ (ಕೃತಿ: ರಸಋಷಿ ಕುವೆಂಪು) ನೆನಪಿಸುತ್ತೇನೆ. ಅರವತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದ ನಮ್ಮ ತಾಲೂಕಿನ ಈ ಹೆಮ್ಮೆಯ ಸಾಹಿತಿಯನ್ನು ಸ್ಮರಿಸುತ್ತೇನೆ.

ಕುವೆಂಪು ಅವರು ‘ಹೋಗುವೆನು ನಾ’ ಕವನದಲ್ಲಿ;

ಅಲ್ಲಿ ಇಂತಿರಬೇಕು, ಇಂತಿರಬಾರದೆಂಬುವುದಿಲ್ಲವೈ;
ಅಲ್ಲಿ ಹೊರೆ ಹೊಣೆಯಿಲ್ಲ; ಶಾಸ್ತ್ರದ ವಿಧಿ ನಿಷೇಧಗಳಿಲ್ಲವೈ;
ಜಾತಿಗೀತಿಯ ವೇದಭೇದದ ಕಟ್ಟುಕಟ್ಟಳೆ ನಿಲ್ಲದೈ:
ಅಲ್ಲಿ ಪ್ರೀತಿಯೆ ನೀತಿ; ಧರ್ಮಕೆ ಬೇರೆ ಭೀತಿಯೆ ಸಲ್ಲದೈ!
ಎಂದು ಮಲೆನಾಡಿನಲ್ಲಿನ ಸಾಮರಸ್ಯವನ್ನು ದಾರ್ಶನಿಕತೆಯಿಂದ ಅಭಿವ್ಯಕ್ತಪಡಿಸಿರುವುದು ನಮ್ಮ ಬದುಕಿಗೆ, ಶತಮಾನದುದ್ದಕ್ಕೂ ದಾರಿದೀಪವಾಗಿದೆ.

ಮಾನವತಾ ಪ್ರೇಮಿಗಳೇ,

ಹತ್ತು ಹನ್ನೊಂದನೇ ಶತಮಾನದಲ್ಲಿ ಐರೋಪ್ಯ ರಾಷ್ಟ್ರವೊಂದರಲ್ಲಿ ಒಂದು ಜಾನಪದ ಕಥೆ ಪ್ರಚಲಿತದಲ್ಲಿ ಇತ್ತಂತೆ. ಆ ಕತೆಯಲ್ಲಿ ಬರುವ ಗಿಳಿಯೊಂದು ತಾನು ನೋಡಿದ ಭೂಸ್ವರ್ಗದ ಬಗ್ಗೆ ವರ್ಣಿಸುತ್ತದೆ. ವರ್ಣನೆ ಹೇಗಿತ್ತೆಂದರೆ; ದೇವಲೋಕದಲ್ಲಿರುವ ಸ್ವರ್ಗದಂತಹ ಪ್ರದೇಶವೊಂದು ಭೂಮಿಯಲ್ಲಿ ಒಂದು ಕಡೆ ಇದೆ. ಆ ಭೂಮಿಯ ಸ್ವರ್ಗದಲ್ಲಿ ಹಗಲೆ ಸೂರ್ಯ ಪ್ರಜ್ವಲಿಸುತ್ತಾ ದಿನ ಪೂರ್ತಿ ಬೆಳಕು ಹರಿಸುತ್ತಿರುತ್ತಾನೆ.

ಕಾಲಕಾಲಕ್ಕೆ ಮಳೆ, ಸಮೃದ್ಧವಾದ ಬೆಳೆ, ಬೆಚ್ಚಗಿನ ವಾತಾವರಣ ವಿಶಾಲವಾದ ಹಸಿರು, ಹುಲ್ಲಿನ ಬಯಲು, ಆಕಾಶದೆತ್ತರದ ಮರಗಳು, ಹಸಿರು ಉಕ್ಕಿಸುವ ನಿತ್ಯ ಹರಿದ್ವರ್ಣದ ಕಾಡು, ಆಕಾಶಕ್ಕೂ ಭೂಮಿ ಒಂದು ಮಾಡುವ ಪರ್ವತಗಳು, ಸುಂದರ ಗಿರಿ-ವನಗಳು ಪರ್ವತಗಳ ನೆತ್ತಿಯಿಂದ ನಿರಂತರ ಹರಿಯುವ ಜಲಪಾತ, ಬೆಳ್ಳಿಯ ಬೆಟ್ಟ, ಹಾಲಿನ ಹೊಳೆ, ಜೇನಿನ ಮಳೆ, ಅಲ್ಲಿ ಹಸಿವಿಲ್ಲ, ಭಯವಿಲ್ಲ, ಸಿಹಿನೀರಿನ ಬುಗ್ಗೆಗಳು, ಮರಗಳೆಲ್ಲವೂ ಶ್ರೀಗಂಧ, ಸದಾ ಹೂ-ಹಣ್ಣುಗಳಿದ್ದ ಮೇಳೈಸುವ ಗಿಡ-ಗುಂಟೆಗಳು,ಸಸ್ಯಗಳೆಲ್ಲವೂ ಔಷಧಿಯುಕ್ತ.

ಪ್ರಾಣಿ-ಪಕ್ಷಿ ಮನುಷ್ಯರೆಲ್ಲರ ಸೌಹಾರ್ದ ಒಡನಾಟ, ಶತೃಗಳ ಭಯವಿಲ್ಲದ ಸ್ವಚ್ಛಂದ ಓಡಾಟ, ತೂಗುವ ತೆನೆಗಳು, ಹೂಬಿರಿದ ಮೊಗ್ಗುಗಳು,ಬಣ್ಣ ಬಣ್ಣದ ಜಲಚರಗಳು, ಹೀಗೆ ಎಲ್ಲವೂ ಸಮೃದ್ಧವಾಗಿರುವ ಸುಖ-ಶಾಂತಿಯ ನೆಮ್ಮದಿಯ ಪ್ರದೇಶ ಏಳು ಸಾಗರವ ದಾಟಿ ಹೋದರೆ ಭೂಮಿಯ ಈ ಸ್ವರ್ಗವನ್ನು ತಲುಪಬಹುದು. ಈ ಕತೆ ವರ್ಣನೆಯೊಂದಿಗೆ ಹೀಗೆ ಸಾಗುತ್ತದೆ. ಇದು ಕತೆ, ಆದರೆ ಇದನ್ನು ಓದಿದಾಗಲೆ ನನಗೆ ನಮ್ಮ ಮಲೆನಾಡನ್ನೇ ಈ ಕತೆಯಲ್ಲಿ ಕಟ್ಟಿಕೊಡಲಾಗಿತ್ತೇನೋ ಅನಿಸುತ್ತದೆ.

ಇಂತಹ ಮಲೆನಾಡಿಗೆ ಸಾಂಬಾರ ಪದಾರ್ಥಗಳ ಸುವಾಸನೆ ಹುಡುಕಿಕೊಂಡು 15ನೇ ಶತಮಾನದಲ್ಲಿ ಪಾಶ್ಚ್ಯಾತ್ಯರು ಬಂದು ಇನ್ನೂರು ವರ್ಷ ನಮ್ಮನಾಳಿದ್ದು ಎಲ್ಲರಿಗೂ ಗೊತ್ತಿದೆ. ಬ್ರಿಟೀಷರ ಆಳ್ವಿಕೆಯಲ್ಲಿ ಮಲೆನಾಡಿನ ಕಾಡೆಲ್ಲಾ ‘ಫಾರೆಸ್ಟ್’ ಆಯಿತು. ಅವರು ಕಾಡಿನ ಲೂಟಿಗಾಗಿ ರೈಲು, ಲಾರಿಗಳನ್ನು ಓಡಿಸಿದರು. ದಿವಂಗತ ತ್ಯಾನಂದೂರು ಪುಟ್ಟಣ್ಣಯ್ಯ ‘ನಾ ಕಂಡ ಮಲೆನಾಡು’ ಕೃತಿಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ. ಕಷಾಯ ಸಂಸ್ಕೃತಿಯ ಮಲೆನಾಡಿಗೆ ‘ಕಾಫಿ ಸಂಸ್ಕೃತಿ’ ತಂದ ಬ್ರಿಟೀಷರು ಕಾಫಿ-ಟೀ ಎಸ್ಟೇಟ್‌ಗಳಿಗಾಗಿ ಗುಡ್ಡ ಗುಡ್ಡಗಳನ್ನೇ ಬೋಳಿಸಿದರು. ಒಂದು ಅಂದಾಜಿನ ಪ್ರಕಾರ ಈ ಭೂಮಿಯಲ್ಲಿ ಕಾಡು ಸೃಷ್ಟಿಯಾದನಂತರ ಬ್ರಿಟೀಷರು ಭಾರತಕ್ಕೆ ಬರುವವರೆಗೆ ಎಷ್ಟು ಕಾಡು ನಾಶವಾಗಿತ್ತೋ ಅಷ್ಟು ಕಾಡನ್ನು ಬ್ರಿಟೀಷರು ಭಾರತಕ್ಕೆ ಬಂದ ನಂತರ ಎರಡು ಶತಮಾನಗಳಲ್ಲಿ ನಾಶ ಮಾಡಿದ್ದರು.

ತಮಗೆ ಬೇಕಾದಂತೆ ಕಾಡನ್ನು ನಾಶ ಮಾಡಿದ ಬ್ರಿಟಿಷರು ತಮ್ಮ ‘ಶಿಕಾರಿ’ ಹುಚ್ಚಿಗಾಗಿ ಕಾಡನ್ನು ‘ಮೀಸಲು ಅರಣ್ಯ’ಗಳೆಂದು ಘೋಷಿಸಿದರು. ‘ಕಾನ್ ದೈವ’ (ಕಾಡನ್ನೇ ದೇವರೆಂದುಕೊಂಡು) ಎಂದು ಕಾಡನ್ನು ಪೂಜಿಸುತ್ತಿದ್ದವರ ನಂಬಿಕೆಗಳನ್ನು ಬುಡಮೇಲು ಮಾಡಿದರು. ಬ್ರಿಟೀಷರು ಹೇಳಿದರೂ ಕಾಡು ಕಡಿಯದ ‘ಗೌಡ್ಲು’ಗಳು, ಹಾಡ್ಯ, ದರಖಾಸ್ತು ಎಂದು ಹೇಳಿಕೊಂಡು ಕಾಡು ಬೆಳೆಸಿಕೊಂಡೇ ಬಂದ ನಮ್ಮ ರೈತ ವರ್ಗ ಈ ನಮ್ಮ ಕಾಡಿನ ನಿಜವಾದ ವಾರಸುದಾರರು.

ಬ್ರಿಟೀಷರು ಕಾಡನ್ನು ಎಷ್ಟೇ ದೋಚಿದ್ದರೂ ಕಾಡಿನ ಜನರನ್ನು ಮಾತ್ರ ಒಕ್ಕಲೆಬ್ಬಿಸಿರಲಿಲ್ಲ! ಆದರೆ ಈಗ ಪರಿಸರದ ಹೆಸರಿನಲ್ಲಿ ಅರಣ್ಯದೊಂದಿಗೆ ಪರಿಸರ ಸ್ನೇಹಿಯಾಗಿ ಬದುಕುವ ಅರಣ್ಯ ನಿವಾಸಿಗಳನ್ನೆ ಹೊರ ಹಾಕುವ ಪರಿಸರ ಸಾಮ್ರಾಜ್ಯಶಾಹಿ ದಾಳಿ ನಡೆಯುತ್ತಿದೆ. ಇದರ ವಿರುದ್ಧ ಕಳೆದ ಎರಡು ದಶಕಗಳಿಂದ ಪರಿಸರ ಹೋರಾಟಗಾರನಾಗಿ ದನಿ ಎತ್ತಿ ದ್ದೇನೆ. ಈ ನಮ್ಮ ಮಲೆನಾಡು, ಇಲ್ಲಿಯ ಪರಿಸರ ನಮ್ಮದು, ಇದನ್ನು ನಮ್ಮದಾಗಿಯೇ ಉಳಿಸಿಕೊಳ್ಳಬೇಕಾಗಿದೆ. ಇದಕ್ಕಾಗಿ ಹೊರಗಿನವರು ಪರಿಸರ ಸಂರ ಕ್ಷಣೆಯ ಹೆಸರಿನಲ್ಲಿ, ನಮ್ಮ ಕಷ್ಟ-ಸುಖಗಳನ್ನು ಕೇಳದೆ, ವಿಶ್ವಾಸಕ್ಕೆ ತೆಗೆದುಕೊಳ್ಳದೇ ನೀಡಿದ ಕಸ್ತೂರಿ ರಂಗನ್ ವರದಿ, ಗಾಡ್ಗೀಳ್ ವರದಿಯನ್ನು ತಿರಸ್ಕರಿಸಬೇಕೆಂದು ನಾನು ಆಗ್ರಹಿಸುತ್ತೇನೆ.

ನಾನು ಪರಿಸರವಾದಿಯಲ್ಲ, ನನ್ನದು ಜನಪರ ಪರಿಸರವಾದ ಎಂದು ಈ ಹಿಂದಿನಿಂದಲೂ ಸ್ಪಷ್ಟಪಡಿಸುತ್ತಾ ಬಂದಿದ್ದೇನೆ. ಮೊದಲಿನಿಂದಲೂ ಜನರನ್ನು ಹೊರಗಿಟ್ಟು ನೋಡುವ ಪರಿಸರವಾದಕ್ಕೆ ನನ್ನ ವಿರೋಧವಿದೆ. ಪಾಶ್ಚಿಮಾತ್ಯ ಚಿಂತನೆಯ ಈ ಪರಿಸರವಾದದಲ್ಲಿ ಒಂದಿಷ್ಟು ಕಾಡನ್ನು ಉಳಿಸಿ, ಉಳಿದವರೆಲ್ಲಾ ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದಕ್ಕೆ ಮಹತ್ವ ನೀಡಲಾಗುತ್ತದೆ. ಈಗ ಈ ರೀತಿಯ ಪರಿಸರವಾದವನ್ನು ಸಮರ್ಥಿಸುವವರು ನಗರಗಳಲ್ಲಿ ಹೆಚ್ಚಾಗಿದ್ದಾರೆ. ಹಾಗೆಯೇ ಈಗ ನಮ್ಮ ನಡುವೆಯೂ ಸೇರಿಕೊಂಡಿದ್ದಾರೆ. ಇವರಿಗೆ ತಾವು ಕಾಡು ಕಾಪಾಡಲಾಗದ ಮುಂದುವರೆದ ದೇಶಗಳು ದಾರಾಳವಾಗಿ ಹಣಕಾಸಿನ ನೆರವು ನೀಡುತ್ತಿವೆ.

ಭೂಮಿಯ ಕಾವು ದಿನದಿಂದ ದಿನಕ್ಕೆ ಹೆಚ್ಚಲು ಈ ಪಾಶ್ಚ್ಯಾತ್ಯ ಕಲ್ಪನೆಯ ಪರಿಸರವಾದವೇ ಕಾರಣ. ಭೂತಾಪಮಾನ ಏರಬಾರದೆಂದರೆ, ಹವಾಮಾನ ವೈಪರಿತ್ಯದ ಪರಿಣಾಮಗಳು ಕಡಿಮೆಯಾಗಬೇಕಾದರೆ, ಈ ಹಿಂದೆ ಭೂಮಿಯ ಮೇಲೆ ಇದ್ದಂತೆ ಎಲ್ಲೆಡೆಯೂ ಹಸಿರು ಹರಡಬೇಕು. ಹಸಿರಿನೊಂದಿಗೆ ಬೆರೆತ ಬದುಕು ಮನುಷ್ಯನದ್ದಾಗಬೇಕು. ಇದನ್ನು ಅರ್ಥಮಾಡಿಕೊಳ್ಳದೇ, ಎಲ್ಲದಕ್ಕೂ ಮಲೆನಾಡಿಗರನ್ನು ದೂರುವವರಿಗೆ ನನ್ನ ಧಿಕ್ಕಾರವಿದೆ.

ಹೀಗೆ ಹೇಳುವಾಗ ನನಗೆ ನೆನಪಾಗುವುದು 2019ರ ನವೆಂಬರ್ 16ರಂದು ನಮ್ಮ ಜಿಲ್ಲೆಯಲ್ಲಿರುವ ವಿದೇಶಿ ಪರಿಸರ ಸಂಘಟನೆಯೊಂದು ಹದಿನಾಲ್ಕು ರಾಜ್ಯಗಳ ಇಪ್ಪತ್ತೊಂದು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಕಾಡಿನೊಳಗೆ ಬದುಕುವ ಜನರನ್ನು ಹೊರಗೆ ಹಾಕುವುದು ಹೇಗೆಂದು ತರಬೇತಿ ನೀಡಿದ ವಿಷಯ. ಈ ಸಂದರ್ಭದಲ್ಲಿ ಜನರ ಬಳಕೆಯಲ್ಲಿದ್ದ ಒಂದು ಲಕ್ಷ 38ಸಾವಿರ ಎಕರೆ ಕಂದಾಯ ಭೂಮಿಯನ್ನು ರಾತ್ರೋ ರಾತ್ರಿ ಅರಣ್ಯ ಇಲಾಖೆಗೆ ಒಪ್ಪಿಸಿದ ಆಗಿನ ಜಿಲ್ಲಾಧಿಕಾರಿಗಳಿಗೆ ಸನ್ಮಾನವನ್ನೂ ಮಾಡಲಾಗಿದೆಯಂತೆ. ಇವರೆ ಮಲೆನಾಡಿನ ಮೂಲ ನಿವಾಸಿಗಳಾದ ನಮ್ಮನ್ನು ಏನೆಂದು ತಿಳಿದುಕೊಂಡಿದ್ದಾರೆ ಎಂಬುದೇ ನನಗೆ ಅರ್ಥವಾಗುತ್ತಿಲ್ಲ. ಅರಣ್ಯ ಸಂರ ಕ್ಷಣೆಯ ಹೆಸರಿನಲ್ಲಿ ಎಲ್ಲರನ್ನೂ ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆಯೇ?

ನಾವು ಗಿರಿಜನರನ್ನು ಒಕ್ಕಲೆಬ್ಬಿಸುವುದು ಸೇರಿದಂತೆ ಮುಖ್ಯವಾಗಿ ನಾಲ್ಕು ಕಾರಣಗಳನ್ನು ಇಟ್ಟುಕೊಂಡು ಕುದುರೆ ಮುಖ ರಾಷ್ಟ್ರೀಯ ಉದ್ಯಾನಕ್ಕೆ ವಿರೋಧ ವ್ಯಕ್ತಪಡಿಸಿದ್ದೆವು. ಆದರೆ ಕರ್ನಾಟಕದಲ್ಲಿರುವ ಕೇವಲ ಶೇ.36ಸಿಂಗಳಿಕ ಮಂಗಗಳು ‘ಭಗವತಿ’ ಅರಣ್ಯದಲ್ಲಿ ಮಾತ್ರ ಇವೆ ಎಂದು ಸುಳ್ಳು ವರದಿ ಕೊಟ್ಟು ಈ ಯೋಜನೆ ಜಾರಿಗೆ ತರಲಾಯಿತು.

ಇಂದ10-12ಸಾವಿರ ಜನರ ಬದುಕನ್ನು ಕಿತ್ತುಕೊಳ್ಳಲಾಗಿದೆ. ಕುದುರೆ ಮುಖ ರಾಷ್ಟ್ರೀಯ ಉದ್ಯಾನದೊಳಗೆ ಸಿಕ್ಕಿಹಾಕಿಕೊಂಡವರಿಗೆ ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ. ಕಾಡಿನೊಂದಿಗೆ ಬೆರೆತು ಬದುಕುತ್ತಿರುವ ಅವರಿಗೆ ಅಲ್ಲಿಯೇ ಬದುಕಲು ಬಿಡಿ, ಇಲ್ಲವೇ ಆಸುಪಾಸಿನಲ್ಲಿ ಪುನರ್ವಸತಿ ಯೋಜನೆಯಂತೆ ಬದುಕು ರೂಪಿಸಿಕೊಡಿ ಎಂದು ಆಗ್ರಹಿಸುತ್ತೇನೆ.

ನಮ್ಮ ಮಲೆನಾಡಿನಲ್ಲಿ ಕಳೆದ ಒಂದು ಶತಮಾನದಲ್ಲಿ ಎಷ್ಟು ಕಾಡು ನಾಶವಾಗಿದೆ, ಇದು ಮಳೆಯ ಮೇಲೆ ಯಾವ ಪರಿಣಾಮ ಬೀರಿದೆ ಎಂಬುದನ್ನು ನಾನು ದಾಖಲೆ ಸಹಿತ ವಿವರಿಸಬಲ್ಲೆ. ಆದರೆ ಎಲ್ಲದಕ್ಕೂ ಸ್ಥಳಿಯರೇ ಕಾರಣ ಎಂದು ಒಪ್ಪಲಾರೆ. ಈ ರೀತಿಯ ಆರೋಪ ಮಾಡುತ್ತಾ ಇಲ್ಲಿಯ ನಿವಾಸಿಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸದೇ ಇರುವುದು ಘೋರ ಅನ್ಯಾಯ.

ಈ ವಿದೇಶಿ ಪರಿಸರ ವಾದಿಗಳ ಉಪಟಳ ಎಷ್ಟಿದೆಯೆಂದರೆ ಸೊಲ್ಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಅಗತ್ಯ ಇರುವಲ್ಲಿ ಅಗಲ ಮಾಡಲೂ ಬಿಡುತ್ತಿಲ್ಲ. ಈ ಭಾಗದ ಜನತೆ ಆರೋಗ್ಯ, ವ್ಯವಹಾರಗಳಿಗೆ ಮಂಗಳೂರಿಗೆ ಹೋಗಬೇಕಾದರೆ ಇರುವ ಈ ಹೆದ್ದಾರಿಯಲ್ಲಿ ಬರುವ ಕೆರೆಕಟ್ಟೆ ರಸ್ತೆ, ಈ ರಸ್ತೆಯ ಅಕ್ಕಪಕ್ಕ ನಾಲ್ಕು ಅಡಿ ಮಣ್ಣು ಹಾಕಿ ಅಗಲ ಮಾಡಲು ಪರಿಸರ ಕಾಯ್ದೆಯನ್ನು ಬಳಸಿಕೊಂಡು ಅಡ್ಡಿಪಡಿಸುತ್ತಾರೆ ಅಂದರೆ ಮಲೆನಾಡಿಗರ ಪರಿಸ್ಥಿತಿಯ ಬಗ್ಗೆ ಎಲ್ಲರೂ ಯೋಚಿಸಬೇಕು. ವರ್ಷದಲ್ಲಿ ಈ ಹೆದ್ದಾರಿಯ 21 ಕಿ.ಮೀ. ವ್ಯಾಪ್ತಿಯಲ್ಲಿ ಹತ್ತು- ಇಪ್ಪತ್ತು ಅಪಘಾತಗಳಾಗಿ ಅಮಾಯಕರು ಅಸುನೀಗುತ್ತಿ ದ್ದಾರೆ. ಈ ಬಗ್ಗೆ ಜನ ಎಷ್ಟೇ ಹೋರಾಟ ಮಾಡಿದರೂ ಪ್ರಯೋಜನವಿಲ್ಲದಂತಾಗಿದೆ. ಅಗತ್ಯ ರಸ್ತೆ ಅಗಲೀಕರಣಕ್ಕೆ ವಿರೋಧ ವ್ಯಕ್ತಪಡಿಸುವವರು ಶೃಂಗೇರಿ -ಕೊಪ್ಪ ಜನರಿಗೆ 150 ಕಿ.ಮೀ. ಬಳಸಿ ಚಾರ್ಮುಡಿ ಮೂಲಕ ಮಂಗಳೂರಿಗೆ ತೆರಳಲು ಮಾರ್ಗವಿದೆ ಎಂದು ದಾರಿತಪ್ಪಿಸುತ್ತಿರುವುದು ಅಮಾನವೀಯವಲ್ಲವೇ? ಇದನ್ನು ಯಾರಾದರೂ ಪರಿಸರವಾದವೆಂದರೆ ಈ ವಾದ ನನ್ನದಂತೂ ಅಲ್ಲ.

ಪ್ರಪಂಚದ ಪರಿಸರ ಸಮತೋಲನದಲ್ಲಿ ಸದಾ ಹಸಿರಿನ ಮಲೆನಾಡಿಗೆ ವಿಶಿಷ್ಟ ಸ್ಥಾನಮಾನವಿದೆ. ನಮ್ಮ ಮಲೆನಾಡು ಜೀವ ವೈವಿಧ್ಯತೆಯ ಕಣಜ. ಪ್ರಪಂಚದ ಮೆಗಾ ಬಯೋ ಡೈವರ್ಸಿಟಿಗಳಲ್ಲಿ ಒಂದು. ಇಲ್ಲಿನ ಔಷಧಿ ಸಸ್ಯಗಳು ಅಮೂಲ್ಯವಾದವು. ತುಂಗಾ-ಭದ್ರಾ ಸೇರಿದಂತೆ ಪ್ರಮುಖ ನದಿಗಳೆಲ್ಲದರ ಉಗಮ ಸ್ಥಾನ ನಮ್ಮ ಪಶ್ಚಿಮಘಟ್ಟಗಳು.

ಇಂದು ಕರ್ನಾಟಕದ ಬಹುತೇಕ ವಿದ್ಯುತ್ ಮತ್ತು ನೀರಿನ ಅಗತ್ಯ ಪೂರೈಸುತ್ತಿರುವುದು ನಮ್ಮ ಮಲೆನಾಡು. ಅಂದರೆ ಮಲೆನಾಡು ಎಲ್ಲರಿಗೂ, ಎಲ್ಲದಕ್ಕೂ ಬೇಕು. ಮಲೆನಾಡನ್ನು ಅವಲಂಬಿಸದೇ ಇರುವವರು ಯಾರೂ ಇಲ್ಲ. ಆದರೆ ಮಲೆನಾಡಿನ ಪರಿಸರದೊಂದಿಗೆ ಸಹಬಾಳ್ವೆ ನಡೆಸಿದ ನರ ಮನುಷ್ಯನ ಬಗ್ಗೆ ಯಾರಿಗೂ ಜವಾಬ್ದಾರಿ ಇಲ್ಲ.

ಮಲೆನಾಡಿನಲ್ಲಿ ನೆರೆ ಬಾರದಿದ್ದರೆ ಬಯಲು ನಾಡಿನಲ್ಲಿ ಬರ ಬರುತ್ತದೆ. ಮಲೆನಾಡಿನಲ್ಲಿ ನೆರೆ ಎಂದರೆ ಕಣ್ಣೀರ ಧಾರೆ. ಈ ಎಲ್ಲ ಸಂಕಷ್ಟದಲ್ಲಿ ಬದುಕುತ್ತಿರುವ ಜನರನ್ನು ಈಗ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಇನ್ನಷ್ಟು ಕಷ್ಟಕ್ಕೆ ದೂರಲಾಗುತ್ತಿದೆ. ಹುಲಿ, ಹಾವು, ಆನೆ, ಮಂಗ ಇತ್ಯಾದಿ ಪ್ರಾಣಿಗಳ ಹೆಸರಿನಲ್ಲಿ ಹೊಸ ಹೊಸ ಯೋಜನೆಗಳನ್ನು, ಹೊಸ ಹೊಸ ಕಾಯ್ದೆ-ಕಾನೂನುಗಳನ್ನು ಜಾರಿಗೆ ತಂದು ಮಲೆನಾಡನ್ನು ಜನರಹಿತವಾಗಿ ಮಾಡಲಾಗುತ್ತಿದೆ.

ಆತ್ಮೀಯ ಬಂಧುಗಳೇ,

ಅರಣ್ಯ ಯೋಜನೆಗಳಿಂದ ಮಲೆನಾಡಿಗರು ಸಂಕಷ್ಟಕ್ಕೆ ಸಿಲುಕಿರುವ ಹೊತ್ತಿನಲ್ಲಿಯೇ ಇಲ್ಲಿಯ ಕೃಷಿ ಕೂಡ ಬಹುದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಂಕಷ್ಟವನ್ನು ಹೇಗೆ ನಿಭಾಯಿಸಿಕೊಳ್ಳುತ್ತಾರೆ ಎಂಬುದೇ ನನಗಿರುವ ಆತಂಕವಾಗಿದೆ.

ಮಲೆನಾಡೆಂದರೆ ಅಡಿಕೆ- ಅಡಿಕೆಯ ಹೊರತಾಗಿ ಮಲೆನಾಡನ್ನು ಕಲ್ಪಿಸಿಕೊಳ್ಳುವುದು ಕಷ್ಟ. ಮಹಾಕವಿ ಕಾಳಿದಾಸನ ‘ರಘುವಂಶ’ ಕಾವ್ಯದಲ್ಲಿಯೂ ಮಲೆನಾಡಿನ ಅಡಿಕೆ ತೋಟದ ವರ್ಣನೆಗಳಿವೆ. ಆ ಕಾಲದಿಂದಲೂ ಇಲ್ಲಿ ಅಡಿಕೆ ಬೆಳೆಯಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇಂದು ಮಲೆನಾಡಿನಲ್ಲಿ ಹಣ ಓಡಾಡುತ್ತಿದ್ದರೆ ಅದು ಅಡಿಕೆಯದು. ನಮ್ಮಲ್ಲಿ ಬೆಳೆಯುವ ಅಡಿಕೆಯನ್ನು ಈ ಹಿಂದೆ ‘ದೇಶಾವರಿ ಅಡಿಕೆ’ ಎಂದು ಹೊರಗಿನವರು ಗುರುತಿಸುತ್ತಿದ್ದರು.

ಅದರ ಮಾರುಕಟ್ಟೆ ಉತ್ತರ ಭಾರತದಿಂದ ಹಿಡಿದು ಪಾಕಿಸ್ತಾನ, ಅಫ್ಘಾನಿಸ್ತಾನದವರೆಗೂ ಹರಡಿತ್ತು. ತಮಿಳುನಾಡು, ಆಂಧ್ರಗಳಲ್ಲಿ ಮಲೆನಾಡಿನ ಅಡಿಕೆಗೆ ಬಂಗಾರಕ್ಕಿಂತಲೂ ಹೆಚ್ಚಿನ ಮರ್ಯಾದೆ ಇದೆ. ಯಾವುದೇ ಪರಸ್ಪರ ಮಾತುಕತೆಯಲ್ಲಿ, ಗಂಡು ಹೆಣ್ಣಿನ ಸಂಬಂಧ ಮಾಡುವಾಗ ಒಂದು ಬಟ್ಟಲು ‘ದೇಶಾವರಿ ಅಡಿಕೆ’ಯನ್ನು ವಿನಿಮಯ ಮಾಡಿಕೊಳ್ಳುವ ಪದ್ಧತಿಯಿದೆ. ಒಪ್ಪಂದ ಮುರಿದರೆ ‘ಅಡಿಕೆಯಲ್ಲಿ ಹೋದ ಮಾನ ಆನೆ ಕೊಟ್ಟರೂ ಬಾರದು’ ಎಂಬ ಗಾದೆ ಅಲ್ಲಿಯದು.

ಇಂತಹ ಅಡಿಕೆಗೆ ಮಾರಕ ರೋಗವೊಂದು ತಗುಲಿ ಸುಮಾರು ನೂರು ವರ್ಷಗಳಾಗುತ್ತಿವೆ. ಇನ್ನು ಕೆಲವೇ ವರ್ಷದಲ್ಲಿ ಮಲೆನಾಡಿನಲ್ಲಿ ಅಡಿಕೆ ತೋಟ ಸಂಪೂರ್ಣ ನೆಲಸಮವಾಗುವ ಭೀತಿಯಲ್ಲಿದೆ. ಹಾಗಿದ್ದೂ ಇದರ ಸಂಶೋಧನೆಗೆ ಕೋಟಿ ಕೊಟ್ಟು ಸಂಶೋಧನಾ ಕೇಂದ್ರ ತೆರೆದ ಸರ್ಕಾರ ಇಲ್ಲಿಗೆ ವಿಜ್ಞಾನಿಗಳನ್ನೂ ನೇಮಿಸಿಲ್ಲ, ಅವರಿಗೆ ಬೇಕಾದ ಸಲಕರಣೆಗಳನ್ನೂ ಕೊಟ್ಟಿಲ್ಲ.

ನಾನು ಈ ಸಮ್ಮೇಳನದ ಮೂಲಕ ಒತ್ತಾಯಿಸುವುದೇನೆಂದರೆ ಮಲೆನಾಡಿನಿಂದ ಅಡಿಕೆ ಮಾಯವಾಗುವ ಮುಂಚೆ ಈ ರೋಗಕ್ಕೊಂದು ಪರಿಹಾರ ಕಂಡು ಹಿಡಿಯಲೇ ಬೇಕು. ಮಲೆನಾಡಿಗೆ ಅಡಿಕೆಯಂತೆ ಒಪ್ಪುವ ಇನ್ನೊಂದು ಬೆಳೆ ಸದ್ಯಕ್ಕಂತೂ ಇಲ್ಲ. ಮಲೆನಾಡಿನ ಸಂಸ್ಕೃತಿ ಅಡಿಕೆಯೊಂದಿಗೆ ಬೆಸೆದುಕೊಂಡಿದೆ.

ಇನ್ನು ಅಡಿಕೆಗೆ ಮಾರುಕಟ್ಟೆಯ ಸಮಸ್ಯೆಯೂ ಇದೆ. ಈಗಾಗಲೇ ಗುಟ್ಕಾ ಇದರ ಮಾನ ತೆಗೆದಿದೆ. ಈಗ ಅಡಿಕೆಯನ್ನು ಹಾನಿಕಾರಕ ಎಂದು ವ್ಯವಸ್ಥಿತವಾಗಿ ಪ್ರಚಾರ ಮಾಡಿ, ಅದನ್ನು ನಿಷೇಧಿಸುವ ಹುನ್ನಾರ ನಡೆದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದಿರುವ ಈ ಬೆಳವಣಿಗೆಯನ್ನು ಎದುರಿಸಲು ನಮ್ಮ ಸರ್ಕಾರಗಳು ಸಿದ್ಧತೆಯೇ ನಡೆಸಿಲ್ಲ. ವಿಶ್ಚ ಆರೋಗ್ಯ ಸಂಸ್ಥೆ (ಡಬ್ಲುಎಚ್‌ಒ)ಯ ಅಂಗ ಸಂಸ್ಥೆಯಾದ ಐಎಆರ್‌ಸಿ (ಇಂಟರ್ ನ್ಯಾಷನಲ್ ಏಜೆನ್ಸಿ ಫಾರ್ ಕ್ಯಾನ್ಸರ್ ರಿಸರ್ಚ್) ನೀಡಿರುವ ವರದಿ ಅಡಿಕೆಗೆ ಮರಣಶಾಸನವಾಗಿ ಪರಿಣಮಿಸಿದೆ. ಇದನ್ನು ಎದುರಿಸಲು ಸೂಕ್ತ ಸಂಶೋಧನೆಗಳು ನಡೆಯಲೇಬೇಕು ಎಂದು ಎಲ್ಲ ಅಡಿಕೆ ಬೆಳೆಗಾರರ ಪರವಾಗಿ ನಾನು ಈ ಸಮ್ಮೇಳನದ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ.

ಸಾಮಾನ್ಯವಾಗಿ ಸಾಹಿತ್ಯ ಸಮ್ಮೇಳನದಲ್ಲಿ ನಾವು ಭಾಷೆಯ ಬಗ್ಗೆ ಚರ್ಚಿಸುತ್ತೇವೆ. ಭಾಷೆ ಉದ್ಯೋಗ, ಆಹಾರ, ಉತ್ಪನ್ನಗಳನ್ನು ಅವಲಂಬಿಸಿರುತ್ತದೆ. ನಮ್ಮ ಮಲೆನಾಡಿನ ಪ್ರಮುಖ ಬೆಳೆಯಾಗಿದ್ದ ಭತ್ತದ ಕೃಷಿ ಕಣ್ಮರೆಯಾಗುತ್ತಿದೆ. ಭತ್ತ ಬೆಳೆಯುತ್ತಿದ್ದ ಪ್ರದೇಶ ಶೇ.೮೦ ರಷ್ಟು ಕಡಿಮೆಯಾಗಿದೆ ಎಂದರೆ ಪರಿಸ್ಥಿತಿಯ ಗಂಭೀರತೆ ನಿಮಗೆ ಅರ್ಥವಾಗಬಹುದು. ಇದರೊಂದಿಗಿನ ಉಪ ಕಸುಬುಗಳೂ ನಾಶವಾಗಿವೆ.

ಇದಕ್ಕೆ ಹಲವಾರು ಕಾರಣಗಳಿರಬಹುದು. ಆದರೆ ಈ ಕೃಷಿಯೊಂದಿಗೆ ಬಳಕೆಯಾಗುತ್ತಿದ್ದ ಭಾಷೆ, ಆಚರಣೆ, ಸಂಸ್ಕೃತಿಗಳೂ ಮಲೆನಾಡಿನಿಂದ ದೂರವಾಗುತ್ತಿರುವುದನ್ನು ನೋಡಿದಾಗ ಸಂಕಟವಾಗುತ್ತದೆ. ಇದೇ ಪರಿಸ್ಥಿತಿ ಮುಂದೆ ಅಡಿಕೆಗೂ ಬಂದರೆ, ಮಲೆನಾಡಿನ ಸಂಸ್ಕೃತಿಯೇ ನಾಶವಾದಂತೆ, ಅದರೊಂದಿಗೆ ಕನ್ನಡ ಭಾಷೆಯ ಸಾವಿರಾರು ಪದಗಳು, ನೂರಾರು ನುಡಿಗಟ್ಟುಗಳು ಇತಿಹಾಸದ ಪುಟ ಸೇರುತ್ತವೆ. ಹೀಗಾಗಿ ಮಲೆನಾಡಿನಲ್ಲಿ ನಡೆಯುತ್ತಿರುವ ಈ ಸಾಹಿತ್ಯ ಸಮ್ಮೇಳನದಲ್ಲಿ ಈ ಎಲ್ಲ ವಿಷಯಗಳ ಕುರಿತು ಗಂಭೀರ ಚರ್ಚೆಗಳಾಗಬೇಕೆಂದು ನಾನು ಆಶಿಸುತ್ತೇನೆ.

ಇವೆಲ್ಲವೂ ಮಲೆನಾಡಿನ ಸಮಸ್ಯೆ ಮಾತ್ರ ಎಂದು ನನಗನ್ನಿಸುವುದಿಲ್ಲ. ನಮ್ಮ ಜಿಲ್ಲೆಯಲ್ಲಿಯೇ ಮಲೆನಾಡಿನ ತಾಲೂಕುಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿಯೂ ಇದೇ ರೀತಿಯಾದ ಹಲವಾರು ಸಮಸ್ಯೆಗಳಿವೆ. ನನ್ನ ಹೋರಾಟದ ಕ್ಷೇತ್ರ ಮಲೆನಾಡಾಗಿದ್ದರಿಂದ ಇಲ್ಲಿಯ ವಿಷಯಗಳು ಹೆಚ್ಚು ಪ್ರಸ್ತಾಪವಾಗಿವೆ ಅಷ್ಟೇ. ಜಾಗತೀಕರಣ, ಬಾಹ್ಯ ಸಂಸ್ಕೃತಿಯ ಒತ್ತಡ, ಅದರಿಂದ ಸೃಷ್ಟಿಯಾಗತ್ತಿರುವ ಬೇಡಿಕೆಗಳು ನಮ್ಮ ಜೀವನ ಶೈಲಿಯನ್ನು ಬದಲಾಯಿಸಿದೆ, ನಾವು ಮನುಷ್ಯತ್ವವನ್ನು ಕಳೆದುಕೊಂಡು ಯಾರದ್ದೋ ಸೂತ್ರಕ್ಕೆ ಪಾತ್ರದಾರಿಗಳಾಗಿ ಕುಣಿಯುತ್ತಿ ದ್ದೇವೆ. ಹೀಗಾಗಿಯೇ ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ. ಕೋಮುವಾದ ಭುಗಿಲೆದ್ದಿದೆ.

ಬಂಧುಗಳೇ

ಮಾನವತಾ ವಾದಿಗಳನ್ನು ಆತಂಕಕ್ಕೀಡುಮಾಡುವ ಘಟನೆಗಳು ಇಂದು ಮಲೆನಾಡಿನಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಪ್ರತಿದಿನವೂ ನಡೆಯುತ್ತಲೇ ಇದೆ. ಇದೆಲ್ಲದಕ್ಕೆ ನಾವು ಹೆದರಬೇಕಾಗಿಲ್ಲ. ಕುವೆಂಪು ಅವರೇ ‘ರೈತನ ದೃಷ್ಟಿ’ ಕವನದಲ್ಲಿ ಬಡ ರೈತ ಸಾಮ್ರಾಜ್ಯಶಾಹಿಯನ್ನು ಹೇಗೆ ವಿರೋಧಿಸುತ್ತಾನೆ ಎಂಬುದನ್ನು ಕಟ್ಟಿಕೊಟ್ಟಿ ದ್ದಾರೆ. ಆ ಮೂಲಕ ನಮಗೂ ಬೆಳಕಿನ ದಾರಿ ತೋರಿಸಿದ್ದಾರೆ. ನಾವೂ ನಮ್ಮದೇ ಆದ ರೀತಿಯಲ್ಲಿ ಕನಸಿನ ಮಲೆನಾಡನ್ನು ಕಟ್ಟಬೇಕಾಗಿದೆ. ಸೌಹಾರ್ದತೆಯ ಪರಂಪರೆಗೆ ಹೊಸ ಮೆರುಗು ನೀಡಬೇಕಾಗಿದೆ.

ಇಲ್ಲಿಯ ಬಹುತೇಕ ಸಮಸ್ಯೆಗಳಿಗೆ ಮುಖ್ಯ ಕಾರಣಗಳಲ್ಲಿ ಒಂದು, ನಾವು ಆಡಳಿತ ವ್ಯವಸ್ಥೆಯ ಮೇಲೆ ಪ್ರಭಾವ ಬೀರುವಲ್ಲಿ ವಿಫಲವಾಗುತ್ತಿರುವುದು ಎಂಬುದು ನನ್ನ ಅಭಿಪ್ರಾಯ. ಶಾಸನ ಸಭಾ ಕ್ಷೇತ್ರಗಳನ್ನು ಜನಸಂಖ್ಯಾಧಾರಿತ ಮಾಡಿರುವುದರಿಂದ ನಮ್ಮ ವಿರಳ ಜನಸಂಖ್ಯೆಯಿಂದಾಗಿ ಶಾಸನ ಸಭೆಗಳಲ್ಲಿ ನಮ್ಮ ಪ್ರತಿನಿಧಿಗಳ ಸಂಖ್ಯೆ ಕಡಿಮೆಯಾಗಿದೆ. ಇಲ್ಲಿಯ ಸಮಸ್ಯೆಗಳು ವಿಧಾನಸಭೆಗಳಲ್ಲಿ ನಿರೀಕ್ಷೆಯಷ್ಟು ಪ್ರಸ್ತಾಪವಾಗುತ್ತಿಲ್ಲ.

ಓರ್ವ ಶಾಸಕರ ಕ್ಷೇತ್ರ ನೂರು ಕಿ.ಮೀ. ಇದ್ದರೆ ಆಕ್ಷೇತ್ರ ಯಾವ ರೀತಿ ಅಭಿವೃದ್ಧಿ ಕಾಣಬಹುದು? ಇದಕ್ಕೆ ಪರಿಹಾರವೆಂದರೆ ಭೌಗೋಳಿಕ ವಿಸ್ತೀರ್ಣದ ಆಧಾರದ ಮೇಲೆ ವಿಧಾನಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಿಸಬೇಕಾಗಿದೆ. ಅದರ ಜತೆಗೆ ಮಲೆನಾಡಿನ ತಾಲೂಕುಗಳನ್ನು ಮಾತ್ರ ಸೇರಿಸಿ, ಜಿಲ್ಲೆಗಳನ್ನು ಪುನರ್ ರೂಪಿಸಬೇಕಾಗಿದೆ. ಇದೆಲ್ಲದಕ್ಕಿಂತ ಮುಖ್ಯವಾಗಿ, ನಮ್ಮ ನೆಲ, ಜಲದ ಮೇಲೆ ನಮಗೇ ಹಕ್ಕು ಬೇಕಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಇರುವಂತೆ ಮಲೆನಾಡನ್ನು ವಿಶೇಷ ಪ್ರದೇಶವೆಂದು ಘೋಷಿಸಿ, ಮಲೆನಾಡಿನ ಅಭಿವೃದ್ಧಿಗೆ ವಿಶೇಷ ಪ್ರಾಧಿಕಾರವನ್ನು ರಚಿಸಬೇಕು. ಎಲ್ಲೋ ಕುಳಿತು ರೂಪಿಸಿದ ಕಾನೂನುಗಳ ಜಾರಿಗೆ ತಡೆ ಇರಬೇಕು. ಮಲೆನಾಡಿನ ಸರ್ವತೋಮುಖ ಅಭಿವೃದ್ಧಿಯ ನಿಯಂತ್ರಣವನ್ನು ಪ್ರಾಧಿಕಾರಕ್ಕೆ ನೀಡಿ, ಅದಕ್ಕೆ ಸರ್ವಾಧಿಕಾರ ವಹಿಸಬೇಕೆಂದು ಸಮ್ಮೇಳನದ ಈ ವೇದಿಕೆಯಿಂದ ಆಗ್ರಹಿಸುತ್ತೇನೆ.

ಕೊನೆಯದಾಗಿ ಕುವೆಂಪು ಅವರ ಕವನದ ಮೂಲಕವೇ ನಾನು ನನ್ನ ಈ ಭಾಷಣವನ್ನು ಅಂತ್ಯಗೊಳಿಸುತ್ತೇನೆ.

ಸರ್ವಜನಾಂಗದ ಶಾಂತಿಯ ತೋಟ,
ರಸಿಕರ ಕಂಗಳ ಸೆಳೆಯುವ ನೋಟ!

ಎಲ್ಲರಿಗೂ ನಮಸ್ಕಾರ.

ಭಾಷಣದ ವಿಡಿಯೋ ನೋಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ

https://m.facebook.com/story.php?story_fbid=10206532911638026&id=1727784997&sfnsn=scwspmo&s=100000010897769&w=n

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending