ದಿನದ ಸುದ್ದಿ
ಚಿಕ್ಕಮಗಳೂರಿನ ಎಸ್ಪಿ ಅಣ್ಣಾ ಮಲೈ ಬೆಂಗಳೂರಿಗೆ ವರ್ಗ; ಭೂ ಮಾಫಿಯಾಕ್ಕೆ ಬೀಳಲಿದೆಯಾ ಬ್ರೇಕ್..?
ಸುದ್ದಿದಿನ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿ ಅಣ್ಣಾ ಮಲೈ ಸೇರಿ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಮ್ಮಿಶ್ರ ಸರ್ಕಾರ ರಚನೆ ಬಳಿಕ ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಪ್ರಮುಖ ಅಧಿಕಾರಿಗಳ ವರ್ಗಾವಣೆ ಮಾಡಿದ್ದು ಕುತೂಹಲ ಮೂಡಿಸಿದೆ.
ಬೆಂಗಳೂರಿನಲ್ಲಿ ಬೃಹದಾಕಾರವಾಗಿ ತಲೆ ಎತ್ತಿರುವ ಭೂ ಮಾಫಿಯಾಕ್ಕೆ ಕಡಿವಾಣ ಹಾಕಲು ಖಡಕ್ ಅಧಿಕಾರಿ ದಕ್ಷ ಅಧಿಕಾರಿ ಎಂದು ಹೆಸರಾಗಿರುವ ಚಿಕ್ಕಮಗಳೂರಿನ ಎಸ್ಪಿ ಅಣ್ಣಾ ಮಲೈ ಅವರನ್ನು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯನ್ನಾಗಿ ನೇಮಿಸಲಾಗಿದೆ. ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಹರಿಹರನ್, ಕೆಎಸ್ಆರ್ಪಿಯ ಒಂದನೇ ಬೆಟಾಲಿಯನ್.ಗೆ ಹಿಲೋರಿ, ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ರಾಹುಲ್ ಕುಮಾರ್, ಚಿಕ್ಕಮಗಳೂರು ಎಸ್ಪಿಯಾಗಿ ಹರೀಶ್ ಪಾಂಡೆ, ಚನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಗೆ ಜಿನೇಂದ್ರ ಖಣಗಾವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.