Connect with us

ದಿನದ ಸುದ್ದಿ

ಮಕ್ಕಳ ಹಕ್ಕುಗಳಿಗೆ ಶ್ರೀರಕ್ಷೆಯಾಗಿದೆ ಮಕ್ಕಳ ರಕ್ಷಣಾ ಆಯೋಗ : ಅಪರ್ಣಾ ಎಂ ಕೊಳ್ಳ

Published

on

ಸುದ್ದಿದಿನ,ದಾವಣಗೆರೆ:ಯಾವುದೇ ಒಂದು ಮಗುವು ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಮಗುವಿನ ಹಕ್ಕುಗಳು ಆರಂಭವಾಗುತ್ತವೆ. ಅವರ ಹಕ್ಕುಗಳ ರಕ್ಷಣೆಗಾಗಿಯೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ ಕೊಳ್ಳ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಶುಕ್ರವಾರ ನಗರದ ಎ. ವಿ.ಕೆ ಕಾಲೇಜ್ ರಸ್ತೆಯಲ್ಲಿನ ಗುರುಭವನದಲ್ಲಿ ಆಯೋಜಿಸಲಾಗಿದ್ದ ನಿಮ್ಮ ಹಕ್ಕು ನಿಮ್ಮ ಧ್ವನಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಿಗೂ ಬದುಕುವ ಹಕ್ಕು, ರಕ್ಷಣೆಯ ಹಕ್ಕು, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಸಮಾನತೆಯ ಹಕ್ಕು ಹೀಗೆ ತಮ್ಮ ಹಕ್ಕುಗಳು ನಾವು ತಾಯಿಯ ಗರ್ಭದಲ್ಲಿರುವಾಗಲೇ ಮಕ್ಕಳ ಹಕ್ಕುಗಳು ಆರಂಭವಾಗುತ್ತದೆ. ಅವುಗಳನ್ನು ರಕ್ಷಿಸುವ ಸಲುವಾಗಿಯೇ ಸರ್ಕಾರ ವಿವಿಧ ಯೋಜನೆ ರೂಪಿಸಿದೆ. ಮಕ್ಕಳ ರಕ್ಷಣಾ ಘಟಕ, ಕಲ್ಯಾಣ ಸಮಿತಿ ರಚಿಸಿದೆ. ನಿಮ್ಮ ಹಕ್ಕುಗಳಿಗೆ ಚ್ಯುತಿ ಉಂಟಾದಾಗ, ಉಲ್ಲಂಘನೆಯಾದಾಗ ಯಾವುದೇ ರೀತಿಯ ಸಮಸ್ಯೆಗಳು ಎದುರಾದಾಗ ಮಕ್ಕಳ ಸಹಾವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112ಗೆ ಸಂಪರ್ಕಿಸಬೇಕು.

ಎಂತಹದೇ ಸಮಸ್ಯೆಗಳಿದ್ದರೂ ಮುಕ್ತವಾಗಿ ಹೇಳಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇದಕ್ಕಾಗಿ ಆಯೋಗವು ಸದಾ ನಿಮ್ಮೊಂದಿಗಿರಲಿದೆ ಎಂದರು.
ಶಿಕ್ಷಣ ಒಂದು ಹರಿತವಾದ ಆಯುಧವಿದ್ದಂತೆ, ಅದನ್ನು ಪ್ರತಿಯೊಬ್ಬರು ಸದ್ವಿನಿಯೋಗ ಪಡೆದು ಉತ್ತಮ ವ್ಯಕ್ತಿಯಾಗಬೇಕು.

ಜಿಲ್ಲೆಯಲ್ಲಿ ಇಂದಿಗೂ ಸಹ ಬಾಲ್ಯ ವಿವಾಹ ಪ್ರಕರಣ ದಾಖಲಾಗುತ್ತಿವೆ. ಇನ್ನು ಮುಂದೆಯೂ ಮಾರ್ಚ್ ಮತ್ತು ಏಪ್ರಿಲ್ ಮಾಹೆಯಲ್ಲಿ ಮದುವೆ ನಡೆಯುತ್ತವೆ. ಈ ಸಂದರ್ಭದಲ್ಲಿ ಬಾಲ್ಯ ವಿವಾಹ ನಡೆಯುವುದು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಇಲಾಖೆ ಸಹಾಯವಾಣಿ ಸಂಖ್ಯೆ 112ಗೆ ಸಂಪರ್ಕಿಸಲು ತಿಳಿಸಿದರು.

ವಿದ್ಯಾರ್ಥಿಯೊಬ್ಬರು ಮಾತನಾಡಿ, ಡ್ರಾಪ್ ಔಟ್ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಕಾರಣವೇನು. ಅದಕ್ಕೆ ಪರಿಹಾರೋಪಾಯ ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಪ್ರಶ್ನೆಗೆ ಡಿಡಿಪಿಐ ಮಾತನಾಡಿ, ವೈಯಕ್ತಿಕ ಹಾಗೂ ಮನೆಯ ಆರ್ಥಿಕ ಪರಿಸ್ಥಿತಿ ಬಡತನ, ಬಾಲಕಾರ್ಮಿಕತೆ ಹೀಗೆ ಮುಂತಾದ ಕಾರಣಗಳಿಂದ ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ ಎಂದರು.

ಇದಕ್ಕೆ ದನಿಗೂಡಿಸಿದ ಎಸ್ಪಿ ಉಮಾಪ್ರಶಾಂತ್, ಜಿಲ್ಲೆಯಲ್ಲಿ ಇಲಾಖೆಯ ಮಾಹಿತಿ ಪ್ರಕಾರ ಪ್ರಸ್ತುತ 820 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಮನೆ ಮನೆಗೆ ಪೊಲೀಸ್ ಭೇಟಿ ನೀಡಿದಾಗ ವಿದ್ಯಾಭ್ಯಾಸದ ಕಡೆ ಒಲವಿಲ್ಲದಿರವುದು. ಬಾಲಕಾರ್ಮಿಕ ಪದ್ಧತಿ, ಬಡತನ ಹಾಗೂ ಪೋಷಕರಿಗೆ ಶಿಕ್ಷಣದ ಮಹತ್ವ ತಿಳಿಯದಿರುವುದು, ಈ ಎಲ್ಲಾ ಕಾರಣಗಳಿಂದ ಹೊರಗುಳಿದಿದ್ದಾರೆ. ಆದರೂ ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಪೋಷಕರ ಮನವೊಲಿಸಿ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ. ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಗುಣಮಟ್ಟದ ಶಿಕ್ಷಣ ಪಡೆದು ನಮ್ಮಂತೆಯೇ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಹುರಿದುಂಬಿಸಿದರು.

ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯೊಬ್ಬರು ಮಾತನಾಡಿ, ಇತ್ತೀಚೆಗೆ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚಲಾಗುತ್ತಿದೆ. ಅದಕ್ಕೆ ಪ್ರಮುಖ ಕಾರಣವೇನು ?. ಹೀಗೆ ಮುಂದುವರೆದರೆ ಬಡತನ ಮತ್ತು ಗ್ರಾಮೀಣ ಭಾಗದ ಮಕ್ಕಳು ಪಾಡೇನು ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಡಿಪಿಐ ಪ್ರಸ್ತುತ ಹೆಚ್ಚಿನ ಮಕ್ಕಳು ನಗರ ಮತ್ತು ಆಂಗ್ಲ ಮಾಧ್ಯಮದ ಮೇಲಿನ ವ್ಯಾಮೋಹದಿಂದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಕುಸಿಯುತ್ತಿದೆ. ಆದ್ದರಿಂದ ಜಿಲ್ಲೆಯಲ್ಲಿ 10 ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ . ಅವುಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ದಾಖಲಾತಿ ಆರಂಭವಾದ ನಂತರ ಪುನಃ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ನಗರದ ಎಸ್‌ಪಿಎಸ್ ಶಾಲೆಯಲ್ಲಿ ಸುಸಜ್ಜಿತ ಕಟ್ಟಡ ಗುಣಮಟ್ಟದ ಶಿಕ್ಷಣವಿದೆ. ಆದರೆ ಆಟದ ಮೈದಾನವಿಲ್ಲ ಎಂದು ಬೇಸರಿಸಿದರು. ಸಂಬAಧಪಟ್ಟ ಅಧಿಕಾರಿಗಳು ಪ್ರತಿಕ್ರಿಯಿಸಿ ನಗರದಲ್ಲಿ ಲಭ್ಯವಿರುವ ಸರ್ಕಾರಿ ನಿವೇಶನ ಪಡೆದು ನೀಡಲಾಗುವುದು ಭರವಸೆ ನೀಡಿದರು.

ಜಿಲ್ಲೆಯ ಸಂತೇಬೆನ್ನೂರಿನ ಎಸ್.ಎಸ್.ಜೆ.ವಿ.ಪಿ ಶಾಲೆಯ ಸುತ್ತಮುತ್ತಲೂ 200 ಮೀಟರ್ ತಂಬಾಕು, ದೂಮಪಾನ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ. ಆದರೂ ಶಾಲೆಯ ತಡೆಗೋಡೆಯ ಸುತ್ತಮುತ್ತ ಎಗ್ಗಿಲ್ಲದೇ ತಂಬಾಕು ಉತ್ಪನ್ನ ಮಾರಾಟ, ಬಳಕೆ ಮಾಡಲಾಗುತ್ತಿದೆ. ಇದರಿಂದ ಶಾಲೆಯ ಮಕ್ಕಳು ಸಹ ದಾರಿ ತಪ್ಪುತ್ತಿದ್ದಾರೆ. ಹಾಗೆಯೇ ಸಂಜೆಯಾದರೆ ಶಾಲಾ ಆವರಣ ಕುಡುಕರ ಹಾಗೂ ಪುಂಡರ ಅಡ್ಡೆಯಾಗಿ ಮಾರ್ಪಾಡಾಗುತ್ತಿದೆ. ಶಾಲೆಯ ಕೂಗಳತೆಯ ದೂರದಲ್ಲಿಯೇ ಪೊಲೀಸ್ ಠಾಣೆ ಇದೆ. ಆದರೂ ಯಾವುದೇ ರೀತಿಯ ಕ್ರಮವಹಿಸುತ್ತಿಲ್ಲ ಎಂದು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲಿಸಿ ಸಂಬAಧಪಟ್ಟವರ ವಿರುದ್ಧ ಕ್ರಮವಹಿಸಲಾಗುವುದು ಎಂದರು.

ಇAದಿನ ಮಕ್ಕಳು ಹೆಚ್ಚು ಟಿವಿ, ಮೊಬೈಲ್ ಬಳಕೆ, ಆನ್ ಲೈನ್ ಗೇಮಿಂಗ್ ಗೀಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಓದುವ ಆಸಕ್ತಿ, ಏಕಾಗ್ರತೆ ಪಠ್ಯಗಳ ಜೊತೆಗಿನ ಒಡನಾಟವನ್ನೇ ಮರೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ ಮಕ್ಕಳು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪಠ್ಯದ ಜೊತೆಗೆ ವಿವಿಧ ರೀತಿಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯೆಗೆ ವಿನಯವೇ ಭೂಷಣ ಎಂಬAತೆ ಉತ್ತಮ ಸಂಸ್ಕಾರ, ಸಂಯಮ ತಾಳ್ಮೆ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡಲ್ಲಿ ಜೀವನದಲ್ಲಿ ಖಂಡಿತಾ ಯಶಸ್ವಿಯಾಗಬಹುದು ಎಂದು ಎಸ್ಪಿ ಉಮಾಪ್ರಶಾಂತ್ ಸಲಹೆ ನೀಡಿದರು.

ಪೋಕ್ಸೋ ಕಾಯ್ದೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಎಸ್ಪಿ ಅವರು ಪ್ರತೀ ವರ್ಷ ಸರಿ ಸುಮಾರು 90 ರಿಂದ 100 ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ಪ್ರಕರಣ ಇತ್ಯರ್ಥಪಡಿಸುವ ಸಲುವಾಗಿ ವಿಶೇಷ ನ್ಯಾಯಾಲಯಗಳು ಸಹ ಸ್ಥಾಪಿಸಲಾಗಿದೆ ಎಂದ ಅವರು, ಪ್ರಸಕ್ತ ವರ್ಷದಲ್ಲಿ ಶೇ.94 ರಷ್ಟು ಪೋಕ್ಸೊ ಪ್ರಕರಣ ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಈ ಪ್ರಕರಣಗಳು ಹೆಚ್ಚಿನದಾಗಿ ಹದಿಹರೆಯದ ವಯಸ್ಸಿನಲ್ಲಿ ಅಥವಾ ಓದುವ ವಯಸ್ಸಿನಲ್ಲಿ ಪ್ರೀತಿ – ಪ್ರೇಮದ ಪಾಶಕ್ಕೆ ಬಲಯಾಗಿ ಅತೀ ಹೆಚ್ಚು ಪ್ರಕರಣ ದಾಖಲಾಗುತ್ತವೆ. ಆದ್ದರಿಂದ ಮಕ್ಕಳು ಓದುವ ವಯಸ್ಸಿನಲ್ಲಿ ಶ್ರದ್ಧೆಯಿಂದ ತಮ್ಮ ಕಾರ್ಯವನ್ನು ನಿರ್ವಹಿಸಬೇಕು. ಈ ಪ್ರೀತಿ ಪ್ರೇಮ ಅಮಲಿಗೆ ಬಿದ್ದು ತಮ್ಮ ಭವಿಷ್ಯದ ಜೀವನ ಆಳು ಮಾಡಿಕೊಳ್ಳಬೇಡಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಸ್ವಾಗತಿಸಿದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೊಟ್ರೇಶ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ಬಡಾವಣೆ ಪೊಲೀಸ್ ಇನ್ಸ್ಪೆಕ್ಟರ್ ಗಾಯತ್ರಿ ಸೇರಿದಂತೆ ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

Trending