ದಿನದ ಸುದ್ದಿ
ತಂಬಾಕು ಉತ್ಪನ್ನಗಳು ಮಕ್ಕಳಿಗೆ ಸಿಗದಂತೆ ಮಾಡಲು ‘ಮಾರಾಟಗಾರರ ಪರವಾನಗಿ’ ಕಡ್ಡಾಯಕ್ಕೆ ಮಕ್ಕಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರ ಒತ್ತಾಯ
ಸುದ್ದಿದಿನ,ಬೆಂಗಳೂರು: ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳು ಕೈಗೆಟುಕದಂತೆ ಮಾಡುವ ಉದ್ದೇಶದಿಂದ, ಸಾರ್ವಜನಿಕ ಆರೋಗ್ಯ ತಜ್ಞರು, ಶಿಕ್ಷಣ ತಜ್ಞರು, ಪೋಷಕರು ಮತ್ತು ಮಕ್ಕಳು ಕರ್ನಾಟಕದಲ್ಲಿ ತಂಬಾಕು ಮಾರಾಟಕ್ಕೆ ‘ಮಾರಾಟಗಾರರ ಪರವಾನಗಿ’ ಕಡ್ಡಾಯ ಮಾಡಿ ಆದೇಶ ಹೊರಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಕೂಡಲೇ ಅಧಿಸೂಚನೆ ಹೊರಡಿಸಿ ‘ಮಾರಾಟಗಾರರ ಪರವಾನಗಿ’ಯನ್ನು ಶೀಘ್ರವೇ ಜಾರಿಗೆ ತರಬೇಕೆಂದು ತಜ್ಞರು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯನ್ನು ಒತ್ತಾಯಿಸಿದ್ದಾರೆ. ‘ಮಾರಾಟಗಾರರ ಪರವಾನಗಿ’ಯ ಶೀಘ್ರ ಜಾರಿಗೆ ಒತ್ತಾಯಿಸಿ ನಗರಾಭಿವೃದ್ಧಿ ಸಚಿವ ಶ್ರೀ ಭೈರತಿ ಬಸವರಾಜ್ ಅವರಿಗೆ ಈವರೆಗೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು 3,000 ಕ್ಕೂ ಹೆಚ್ಚು ಪತ್ರಗಳನ್ನು ಬರೆದಿದ್ದಾರೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ 21 ಸೆಪ್ಟೆಂಬರ್, 2017ರಂದು (D O No. P – 16012 /14 /2017 –TC)ನೀಡಿರುವ ಸೂಚನೆಯಂತೆ ಸೂಕ್ತ ಅನುಮತಿ ಮತ್ತು ತಂಬಾಕು ಮಾರಾಟಗಾರರ ನೋಂದಣಿ ಮೂಲಕ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸಲು ಹೇಳಿದೆ.
ಕಠಿಣ ನಿಯಮಗಳ ಅನುಪಸ್ಥಿತಿಯಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಬೀಡಿ ಮತ್ತು ಜಗಿಯುವ ತಂಬಾಕು ವಸ್ತುಗಳನ್ನು ರಾಜ್ಯದ ಮೂಲೆಮೂಲೆಗಳಲ್ಲಿ ಗೂಡಂಗಡಿ, ಚಿಲ್ಲರೆ ಅಂಗಡಿ, ಮಿಲ್ಕ್ ಪಾರ್ಲರ್, ಕಾಫಿ-ಟೀ ಅಂಗಡಿ, ಬೇಕರಿ ಮತ್ತು ಇತರೆ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ.
ತಂಬಾಕು ಉದ್ಯಮ ಕಾನೂನುಬಾಹಿರವಾಗಿ ಪ್ರಕಾಶಮಾನ ಬೋರ್ಡ್ ಮತ್ತು ಪೋಸ್ಟರ್ಗಳ ಮೂಲಕ ತಮ್ಮ ಉತ್ಪನ್ನಗಳ ಜಾಹೀರಾತು ಮಾಡುತ್ತವೆ. ತಂಬಾಕು ಉತ್ಪನ್ನಗಳ ಮಾರಾಟ ಮಳಿಗೆಗಳಲ್ಲಿ (ಪಾಯಿಂಟ್ ಆಫ್ ಸೇಲ್) ತಂಬಾಕು ಕಂಪೆನಿಗಳ ತಂತ್ರದಂತೆ ಮಕ್ಕಳು ಸಹಜ ಮತ್ತು ಸಾಮಾನ್ಯವಾಗಿ ಖರೀದಿಸುವಂತಹ ತಿನಿಸುಗಳಾದ ಬಿಸ್ಕತ್ತು, ಮಿಠಾಯಿ, ಚಿಪ್ಸ್, ಇತ್ಯಾದಿಗಳ ಪಕ್ಕದಲ್ಲಿ ತಂಬಾಕು ಪದಾರ್ಥಗಳನ್ನು ಇರಿಸಲಾಗುತ್ತಿದೆ.
ಯುವಜನರಲ್ಲಿ ತಂಬಾಕಿನ ಸೇವನೆ ಮತ್ತು ಚಟಕ್ಕೆ ತಂಬಾಕು ಉತ್ಪನ್ನಗಳ ಸುಲಭ ಲಭ್ಯತೆ, ವಿಶೇಷವಾಗಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ದೊರೆಯುವಿಕೆ, ಮುಖ್ಯ ಕಾರಣಗಳಲ್ಲೊಂದಾಗಿದೆ. ಹದಿಹರೆಯದ ವಯಸ್ಸಿನಲ್ಲೇ ವ್ಯಸನಗಳಿಗೆ ಹೆಚ್ಚು ತುತ್ತಾಗುವುದರಿಂದ ತಂಬಾಕು ಕಂಪನಿಗಳು ಮಕ್ಕಳನ್ನು ಗುರಿಯಾಗಿಸುತ್ತವೆ ಎಂಬುದು ಸಾಬೀತಾಗಿದ್ದು, ತರ್ಕಬದ್ಧ ನಿರ್ಧಾರ ತೆಗೆದುಕೊಳ್ಳುವಲ್ಲಿ ಮಕ್ಕಳ ಅಸಮರ್ಥತೆಯ ಲಾಭ ಪಡೆದು, ಅವರು ತಮ್ಮ ಉತ್ಪನ್ನಗಳೊಂದಿಗೆ ಪ್ರಯೋಗ ಮಾಡಿ ವ್ಯಸನಿಗಳಾಗುವಂತೆ ತಂಬಾಕು ಕಂಪನಿಗಳು ಮಾಡುತ್ತಿವೆ.
ಭಾರತದಲ್ಲಿ ಶೇ. ೧೪.೬ ಕ್ಕಿಂತಲೂ ಹೆಚ್ಚು ಹದಿಹರೆಯದವರು ( 13-15ವರ್ಷದವರು) ಯಾವುದಾದರೊಂದು ರೀತಿಯಲ್ಲಿ ತಂಬಾಕನ್ನು ಬಳಸುತ್ತಾರೆ (GYTS). ಅದರಂತೆ, ಪ್ರತಿದಿನ 5.500ಕ್ಕೂ ಹೆಚ್ಚು ಮಕ್ಕಳು ತಂಬಾಕು ಬಳಕೆಯನ್ನು ಆರಂಭಿಸುತ್ತಿದ್ದಾರೆ.
ರಾಜ್ಯ ಅಬಕಾರಿ ಇಲಾಖೆ ಪರವಾನಗಿ ಮೂಲಕ ಮದ್ಯ ಮಾರಾಟವನ್ನು ಹೇಗೆ ನಿಯಂತ್ರಿಸುತ್ತದೋ, ಹಾಗೆಯೇ ‘ಮಾರಾಟಗಾರರ ಪರವಾನಗಿ’ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸುತ್ತದೆ. ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲು ಇಚ್ಛಿಸುವವರು ಕೇವಲ ‘ವ್ಯಾಪಾರ ಪರವಾನಗಿ’ ಮಾತ್ರವಲ್ಲದೆ, ಆಯಾ ನಗರ ಸ್ಥಳೀಯ ಸಂಸ್ಥೆಗಳಿಂದ ‘ವಿಶೇಷ ಪರವಾನಗಿ’ ಪಡೆಯಬೇಕು.
ಇದರಿಂದ ಸಾಮಾನ್ಯವಾಗಿರುವ ತಂಬಾಕು ನಿಯಂತ್ರಣ ಕಾನೂನುಗಳ ಉಲ್ಲಂಘನೆಗಳನ್ನು ಪರಿಶೀಲಿಸಲು ಸ್ಥಳೀಯ ಸಂಸ್ಥೆಗಳಿಗೆ ಸಹಾಯಕವಾಗುತ್ತದೆ. ‘ಮಾರಾಟಗಾರರ ಪರವಾನಗಿ’ ಜಾರಿಗೊಳಿಸಲು ಸಾರ್ವಜನಿಕ ಆರೋಗ್ಯ ತಜ್ಞರು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದು ತಂಬಾಕು ಉತ್ಪನ್ನಗಳ ಸುಲಭ ಲಭ್ಯತೆಯನ್ನು ತಡೆಗಟ್ಟಿ ಯುವಕರನ್ನು ಆಮಿಷಕ್ಕೆ ಒಡ್ಡುವ ತಂತ್ರಗಳಿಗೆ ಅಂತ್ಯ ಹಾಡಬಹುದು.
“ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ನಮಗೆ ಚೆನ್ನಾಗಿ ತಿಳಿದಿದ್ದರೂ ತಂಬಾಕು ಉದ್ಯಮವು ಅದನ್ನು ಅಗತ್ಯವೆನ್ನುವಂತೆ ಸೇವಿಸಲು ನಮ್ಮನ್ನುದಿಕ್ಕುತಪ್ಪಿಸಿದೆ. ಇದು ಯುವಜನರನ್ನು ಗುರಿಯಾಗಿಸಿಕೊಂಡು ಹೆಣೆದಿರುವ ಮಾರುಕಟ್ಟೆ ತಂತ್ರದ ಫಲ. ಮಾರಾಟಗಾರರ ಪರವಾನಗಿಯು ಈ ಶೋಷಣೆಯ ವಿರುದ್ಧ ಗುರಾಣಿಯಾಗಲಿದ್ದು ಈ ದೇಶದ ರಚನಾತ್ಮಕ ಭವಿಷ್ಯಕ್ಕೆ ಅವಶ್ಯಕವಾಗಿದೆ”, ಎಂದು ಡೆಲ್ಲಿ ಪಬ್ಲಿಕ್ ಸ್ಕೂಲ್, ಬೆಂಗಳೂರು ನಾರ್ಥ್ ನ 12ನೇ ತರಗತಿ ವಿದ್ಯಾರ್ಥಿ ಆದಿತ್ಯ ಹರಿ ಹೇಳಿದರು.
“ಮಕ್ಕಳು ತಂಬಾಕು ಉದ್ಯಮದ ಮುಖ್ಯ ಗುರಿಯಾಗಿದೆ. ತಂಬಾಕು ಉತ್ಪನ್ನಗಳ ಸುಲಭ ಲಭ್ಯತೆ ಯುವಜನರು ತಂಬಾಕಿನೊಂದಿಗೆ ಪ್ರಯೋಗಕ್ಕಿಳಿಯಲು ಆಮಿಷವಾಗಿದ್ದು, ಅಂತಿಮವಾಗಿ ಅದಕ್ಕೆ ವ್ಯಸನಿಯಾಗುತ್ತಾರೆ. ಇದು ಬಹಳ ಅಪಾಯಕಾರಿಯಾಗಿದ್ದು ಯುವಪೀಳಿಗೆಯನ್ನು ತಂಬಾಕು ಉತ್ಪನ್ನಗಳಿಂದ ದೂರವಿರಿಸುವ ತುರ್ತು ಎದುರಾಗಿದೆ.
ಮಾರಾಟಗಾರರ ಪರವಾನಗಿ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆಗಳಲ್ಲೊಂದಾಗಿದ್ದು, ಇದರಿಂದ ತಂಬಾಕು ಮಾರಾಟದ ಮೇಲೆ ನಿಗಾ ಮತ್ತು ನಿಯಂತ್ರಣ ಸಾಧ್ಯವಾಗುವುದಲ್ಲದೆ, ಯುವಜನರನ್ನು ವ್ಯಸನದಿಂದ ರಕ್ಷಿಸಬಹುದು,” ಎಂದು ಪ್ರಸಿದ್ಧ ಕ್ಯಾನ್ಸರ್ ತಜ್ಞರು ಮತ್ತು ಕನ್ಸೋರ್ಟಿಯಂ ಫಾರ್ ಟೊಬ್ಯಾಕೋ ಫ್ರೀ ಕರ್ನಾಟಕದ (ಸಿಎಫ್ಟಿಎಫ್ಕೆ) ಸಲಹೆಗಾರರಾದ ಡಾ. ರಮೇಶ್ ಬಿಳಿಮಗ್ಗ ತಿಳಿಸಿದರು.
ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕೆಎಎಂಎಸ್), ಅವರು ಮಾತನಾಡಿ, “ಮಾರಾಟಗಾರರ ಪರವಾನಗಿ ಜಾರಿಗೆ ಬಂದರೆ, ‘ಬಿಡಿ’ ಸಿಗರೇಟ್ ಮತ್ತು ಬೀಡಿಗಳನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಪ್ರಸ್ತುತ, ನಿಯಮಗಳನ್ನು ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು (ವಿಶೇಷವಾಗಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ) ಮಾರಾಟ ಮಾಡುತ್ತಿರುವವರು ಸಣ್ಣ ಮೊತ್ತದ ದಂಡ ಕಟ್ಟಿ ಬಚಾವಾಗುತ್ತಿದ್ದಾರೆ.
ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ
(COTPA) 2003ರ ಅನ್ವಯ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅವರ ಮಾರಾಟಗಾರರ ಪರವಾನಗಿಯನ್ನು ಸಹ ರದ್ದುಗೊಳಿಸಬಹುದು,” ಎಂದರು.
“ಮಾರಾಟಗಾರರ ಪರವಾನಗಿ ಪ್ರಕ್ರಿಯೆ ಆರಂಭಿಸಿದಕ್ಕೆ ನಾವು ರಾಜ್ಯ ಸರ್ಕಾರವನ್ನು ಪ್ರಶಂಸಿಸುತ್ತೇವೆ ಮತ್ತು ಇದನ್ನು ಕೂಡಲೇ ಕಾರ್ಯಗತಗೊಳಿಸಬೇಕೆಂದು ಒತ್ತಾಯಿಸುತ್ತೇವೆ. ಮಾರಾಟಗಾರರ ಪರವಾನಗಿ ಜಾರಿಯಾದರೆ ರೈತರು ಮತ್ತು ಮಾರಾಟಗಾರರ ಜೀವನೋಪಾಯಕ್ಕೆ ತೊಂದರೆಯಾಗಲಿದೆ ಎಂದು ತಂಬಾಕು ಉದ್ಯಮವು ಬಿಂಬಿಸುತ್ತಾ ಬಂದಿರುವುದರಿಂದ ಮತ್ತು ಅದು ಸುಳ್ಳಾಗಿರುವುದರಿಂದ, ಪೋಷಕರು, ಶಿಕ್ಷಕರು ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಆಸಕ್ತಿಯುಳ್ಳವರು ನಗರಾಭಿವೃದ್ಧಿ ಇಲಾಖೆಗೆ ಪತ್ರಗಳನ್ನು ಬರೆಯುವ ಮೂಲಕ ಬೆಂಬಲ ವ್ಯಕ್ತಪಡಿಸಬೇಕೆಂದು ವಿನಂತಿಸುತ್ತೇವೆ,” ಎಂದು ಶ್ರೀ ಎಸ್ ಜೆ ಚಂದರ್, ಸಂಚಾಲಕರು, ಸಿಎಫ್ಟಿಎಫ್ಕೆ, ತಿಳಿಸಿದರು.
ಈಗಾಗಲೇ ಹಿಮಾಚಲ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟç, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಮಾರಾಟಗಾರರ ಪರವಾನಗಿಯನ್ನು ಜಾರಿಗೆ ತರುವ ಮೂಲಕ ಆದರ್ಶಪ್ರಾಯವಾಗಿವೆ ಎಂದರು.
ವಿಡಿಯೋ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ6 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ6 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ6 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ5 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ6 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ6 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ6 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ6 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



