Connect with us

ಬಹಿರಂಗ

ಮಕ್ಕಳು-ಮಾಧ್ಯಮ ಪ್ರಜ್ಞೆ ಮತ್ತು ಪ್ರಜ್ಞಾವಂತ ಮಾಧ್ಯಮ

Published

on

  • ನಾ ದಿವಾಕರ

ಡಾ. ಎಚ್. ಕೆ. ರಂಗನಾಥ್ ಅವರ ಕರ್ನಾಟಕ ರಂಗಭೂಮಿ ಕೃತಿಯ, ವಿಲಾಸಿ ರಂಗಭೂಮಿ ಅಧ್ಯಾಯದ ಒಂದೆಡೆ ಕೃತಿಕಾರರು ಹೀಗೆ ಹೇಳುತ್ತಾರೆ : “ ಮಕ್ಕಳ ಮನಸ್ಸನ್ನು ಉಲ್ಲಾಸಗೊಳಿಸಿ ವಿಕಾಸಗೊಳಿಸುವ ಪ್ರಯತ್ನವನ್ನು ಕನ್ನಡ ರಂಗಭೂಮಿ ಇತ್ತೀಚಿನವರೆಗೆ ಮಾಡಲಿಲ್ಲ ಅಂದರೆ ಸಲ್ಲುತ್ತದೆ,,,,,,,,ಮಕ್ಕಳ ರಂಗಭೂಮಿಯನ್ನು ನಿರ್ಮಿಸುವಲ್ಲಿ ಕರ್ನಾಟಕ ಹಿಂದೆಯೇ ಉಳಿಯಿತು.

ದೊಡ್ಡವರು ಆಡುತ್ತಿದ್ದ ನಾಟಕಗಳನ್ನೇ ಮಕ್ಕಳೂ ನೋಡಿಕೊಂಡು ತೃಪ್ತಿಪಟ್ಟುಕೊಳ್ಳಬೇಕಾಗಿತ್ತು. ದೊಡ್ಡವರಿಗಾಗಿ ಸಣ್ಣ ಅಕ್ಷರದಲ್ಲಿ ಅಚ್ಚು ಮಾಡಿದ ದಿನಪತ್ರಿಕೆಯನ್ನು ಒಲ್ಲದ ಮಕ್ಕಳೂ ಓದಬೇಕಲ್ಲವೇ ? ಹಾಗೆ ! ಮಕ್ಕಳಿಗಾಗಿಯೇ ಮೀಸಲುಗೊಂಡ ದಿನಪತ್ರಿಕೆ ಚಿತ್ರಗಳೊಡನೆ ದೊಡ್ಡ ಅಕ್ಷರದಲ್ಲಿ ಅಚ್ಚು ಆಗುವವರೆಗೆ “ ನಮ್ಮ ಮಕ್ಕಳಿಗೆ ಪ್ರಪಂಚದ ವಿದ್ಯಮಾನಗಳೇ ಗೊತ್ತಿಲ್ಲ ” ಎಂದುತಪ್ಪು ಹೊರಿಸುವುದು ಅಪರಾಧ ತಾನೇ ? ” (ಪುಟ 393 ಕರ್ನಾಟಕ ರಂಗಭೂಮಿ 1978 ಸುರುಚಿ ಪ್ರಕಾಶನ)

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ನಾ. ಡಿಸೋಜ

ಇಲ್ಲಿ ರಂಗಭೂಮಿಯ ಪ್ರಶ್ನೆಯನ್ನು ಪಕ್ಕಕ್ಕಿಡೋಣ. ಏಕೆಂದರೆ 1978ರ ನಂತರದಲ್ಲಿ ಮಕ್ಕಳಿಗಾಗಿಯೇ ನಾಟಕಗಳನ್ನು ರಚಿಸುವಲ್ಲಿ ಯಶಸ್ವಿ ಪ್ರಯತ್ನಗಳು ನಡೆದಿವೆ. ಈ ಮಾತುಗಳಲ್ಲಿ ನಾವು ಗಮನಿಸಬೇಕಿರುವುದು ದಿನಪತ್ರಿಕೆಗಳ ಬಗ್ಗೆ ರಂಗನಾಥ್ ಅವರು ಹೇಳಿರುವ ಮಾತುಗಳನ್ನು.

ಈ ಪ್ರಶ್ನೆ ಇಂದಿಗೂ ಪ್ರಶ್ನೆಯಾಗೇ ಉಳಿದಿದ್ದರೆ ಅಥವಾ ಉತ್ತರಗಳು ದೊರೆತು ಮತ್ತದೇ ಪ್ರಶ್ನೆಯ ಪುನರಾರ್ತನೆಯಾಗುವ ಪರಿಸ್ಥಿತಿ ಉಂಟಾಗಿದ್ದರೆ ಇದು ಖಂಡಿತವಾಗಿಯೂ ಯೋಚಿಸಬೇಕಾದ ವಿಚಾರ. 1978ರ ಸಂದರ್ಭದ ಮಕ್ಕಳು ಎನ್ನುವ ಪರಿಕಲ್ಪನೆಗೂ ಇಂದಿನ ಪರಿಕಲ್ಪನೆಗೂ ಹೆಚ್ಚಿನ ವ್ಯತ್ಯಾಸವೇನೂ ಆಗಿಲ್ಲ. ನವ ಶತಮಾನದ ಮಕ್ಕಳ ಮನಸ್ಸು ಹೊರ ಪ್ರಪಂಚಕ್ಕೆ ಬೇಗನೆ ತೆರೆದುಕೊಳ್ಳುತ್ತದೆ ಎನ್ನುವುದನ್ನು ಬಿಟ್ಟರೆ ಉಳಿದಂತೆ ಮಕ್ಕಳು ಹಾಗೆಯೇ ಇರಲಿಕ್ಕೆ ಸಾಧ್ಯ.

ನಾವೂ ದಶಕಗಳ ಕಾಲ ದಿನಪತ್ರಿಕೆಗಳನ್ನು ಓದುತ್ತಲೇ ಬಂದಿದ್ದೇವೆ. ಬಹುಶಃ 1970ರ ದಶಕದ ಉತ್ತರಾರ್ಧದಲ್ಲಿ ಮತ್ತು 1980ರ ದಶಕದಲ್ಲಿ ಶಾಲೆಗಳಲ್ಲಿ ದಿನಪತ್ರಿಕೆಗಳ ಮುಖ್ಯ ಸುದ್ದಿ ಓದುವ ಒಂದು ಪ್ರಕ್ರಿಯೆಗೆ ಚಾಲನೆ ದೊರೆತಿತ್ತು. ಇದೂ ಸಹ ಪ್ರೌಢಶಾಲೆಯ ಹಂತದಿಂದ ಆರಂಭವಾಯಿತು ಎನಿಸುತ್ತದೆ. ಪ್ರಾಥಮಿಕ ಶಾಲೆಯ ಹಂತದಲ್ಲಿ ಇತ್ತೀಚೆಗೆ ಇದು ಚಾಲ್ತಿಯಲ್ಲಿರಬಹುದು.

ಇಲ್ಲಿ ರಂಗನಾಥ್ ಅವರು ಎತ್ತಿರುವ ಪ್ರಶ್ನೆ ನಮ್ಮಲ್ಲಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇಂದಿನ ಮಕ್ಕಳು ಪತ್ರಿಕೆಗಳನ್ನು ಓದುವುದಿಲ್ಲ, ನಿತ್ಯ ಸುದ್ದಿಗಳನ್ನು ತಿಳಿದುಕೊಳ್ಳುವುದಿಲ್ಲ, ತಮ್ಮ ಸುತ್ತಲಿನ ಸಾಮಾಜಿಕ, ರಾಜಕೀಯ ವಿದ್ಯಮಾನಗಳ ಪರಿವೆ ಇರುವುದಿಲ್ಲ ಎಂಬ ಆರೋಪ ಕೇಳಿಬರುತ್ತಲೇ ಇದೆ.

ಇಲ್ಲಿ ಮಕ್ಕಳು ಎಂದರೆ ಯಾವ ಓರಿಗೆಯವರು ? ಪ್ರಾತಮಿಕ ಶಾಲೆಯ ಮಕ್ಕಳಿಗೆ ಈ ತಿಳುವಳಿಕೆ ಬೇಕೋ ಬೇಡವೋ ಎನ್ನುವ ಜಿಜ್ಞಾಸೆಯನ್ನು ಬದಿಗಿಟ್ಟು ಯೋಚಿಸಿದಾಗ ಆಧುನಿಕ ಜಗತ್ತಿನ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು, ವಿಕಸನದ ಹಂತದಲ್ಲಿರುವ ಮಕ್ಕಳನ್ನು ತಲುಪುತ್ತಿವೆಯೇ ಎಂಬ ಪ್ರಶ್ನೆ ಹೆಚ್ಚು ಪ್ರಸ್ತುತ ಎನಿಸುತ್ತದೆ.

ಇಂದಿನ ವಿದ್ಯುನ್ಮಾನ ತಂತ್ರಜ್ಞಾನ ಯುಗದಲ್ಲಿ ಪ್ರಾಥಮಿಕ ಶಾಲೆಯ ಮಕ್ಕಳಲ್ಲೂ ಅಂತರ್ಜಾಲ ಕೇಂದ್ರಿತ ಮಾಹಿತಿ ಕಣಜ ಇರುವುದನ್ನು ಕಾಣಬಹುದು. ಗೂಗಲ್ ಇಂದು ಸಕಲ ಜ್ಞಾನದ ಆಕರದಂತೆ ಕಾಣುತ್ತಿದ್ದು ಎಂಟು ಹತ್ತು ವರ್ಷದ ಮಕ್ಕಳೂ ಸಹ ತಮ್ಮ ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳಲು ಗೂಗಲ್ ಹುಡುಕಾಟದಲ್ಲಿ ತೊಡಗಿರುತ್ತಾರೆ.

ತಮ್ಮ ಅಥವಾ ತಮ್ಮ ಪೋಷಕರ, ಕುಟುಂಬದ ಹಿರಿಯ ಕೈಯ್ಯಲ್ಲಿನ ಮೊಬೈಲ್ ಅಥವಾ ಲ್ಯಾಪ್‍ಟಾಪ್ ಈ ಮಕ್ಕಳಿಗೆ ಹೊರ ಜಗತ್ತನ್ನು ಕಂಡುಕೊಳ್ಳುವ ಮಹಾದ್ವಾರದಂತೆ ಕಾಣುತ್ತದೆ. ಕೊರೋನಾ ಸಂದರ್ಭದ ಆನ್ ಲೈನ್ ಶಿಕ್ಷಣದಿಂದ ಈಗ ಮಧ್ಯಮ ವರ್ಗಗಳ ಎಳೆಯ ಮಕ್ಕಳ ಬಳಿಯೂ ಒಂದು ಸ್ಮಾರ್ಟ್ ಫೋನ್ ಇರುವುದು ಸಾಮಾನ್ಯ ಸಂಗತಿಯಾಗಿದೆ.

ಆದರೆ ಈ ಮಕ್ಕಳಲ್ಲಿನ ಪ್ರಾಪಂಚಿಕ ತಿಳುವಳಿಕೆ ಅಥವಾ ಸುತ್ತಲಿನ ನಿತ್ಯದ ವಿದ್ಯಮಾನಗಳ ಬಗ್ಗೆ ಅರಿವು ಮತ್ತು ತಾವು ಬದುಕುತ್ತಿರುವ ಒಂದು ಸಮಾಜದ ಪರಿವೆ ಇವುಗಳನ್ನು ಪರೀಕ್ಷಿಸಲು ಹೋದಾಗ ನಿರಾಸೆಯಾಗುವುದೇ ಹೆಚ್ಚು. ಏಕೆಂದರೆ ಬಹುತೇಕ ಮಕ್ಕಳನ್ನು ಪೋಷಕರು ಶಿಕ್ಷಣ ಬಂಧಿಗಳನ್ನಾಗಿ ಮಾಡಿರುತ್ತಾರೆ.

ಶಾಲೆ-ಟ್ಯೂಷನ್-ಶಾಲೆ ವ್ಯೂಹದಿಂದ ಹೊರಬರಲು ಸಮಯ ಸಿಕ್ಕಾಗಲೆಲ್ಲಾ ಈ ಮಕ್ಕಳು ಪರದೆಯ ಮೊರೆ ಹೋಗುತ್ತಾರೆ. ಟಿವಿ, ಲ್ಯಾಪ್‍ಟಾಪ್ ಅಥವಾ ಸ್ಮಾರ್ಟ್‍ಫೋನ್ ಅವರ ಮತ್ತೊಂದು ಪ್ರಪಂಚವಾಗಿ ಪರಿಣಮಿಸುತ್ತದೆ. ಈ ಪ್ರವೃತ್ತಿಯನ್ನು ನಗರ ಪ್ರದೇಶಗಳ ಕೆಳಮಧ್ಯಮ ವರ್ಗಗಳಲ್ಲೂ ಕಾಣಬಹುದು, ಕೆಲವೆಡೆ ಗ್ರಾಮೀಣ ಪ್ರದೇಶಗಳಲ್ಲೂ ಕಾಣಬಹುದು.

ಇಲ್ಲಿ ಬಲಿಯಾಗುತ್ತಿರುವುದು ಓದು ಮತ್ತು ಓದಿನ ಹವ್ಯಾಸ. ಪಠ್ಯೇತರ ಓದು ಎನ್ನುವುದನ್ನು ನಮ್ಮ ಆಧುನಿಕ ಶಿಕ್ಷಣ ವ್ಯವಸ್ಥೆ ಹಂತಹಂತವಾಗಿ ಕೊಲ್ಲುತ್ತಲೇ ಬಂದಿದ್ದು ಸ್ಮಾರ್ಟ್ ಫೋನ್ ಯುಗದಲ್ಲಿ ಮಕ್ಕಳಿಗೆ ದಿನಪತ್ರಿಕೆಗಳೂ ಸಹ ಓದಿಗೆ ಸಹ್ಯ ಎನಿಸುವುದಿಲ್ಲ. ಈ ಸಂದರ್ಭದಲ್ಲೇ ಡಾ ರಂಗನಾಥ್ ಅವರ ಪ್ರಶ್ನೆ ಮಹತ್ವ ಪಡೆಯುತ್ತದೆ.

ಮಕ್ಕಳ ಚಂಚಲ ಮನಸಿಗೆ ನಿಲುಕುವಂತೆ ದಿನನಿತ್ಯದ ಸುದ್ದಿಗಳನ್ನು ನೀಡುವಂತಹ ಪತ್ರಿಕೆಗಳು ಸಾಧ್ಯವಿಲ್ಲವೇ ? ಮಕ್ಕಳಿಗಾಗಿ ಒಂದು ಪುರವಣಿಯನ್ನೋ ಅಥವಾ ವಾರಪತ್ರಿಕೆಗಳಲ್ಲಿ ಒಂದೆರಡು ಪುಟಗಳನ್ನೋ ಮೀಸಲಿಡುವ ಮೂಲಕ ಮಕ್ಕಳ ಹಾಡು, ಕಥೆ, ವಿನೋದ ಇತ್ಯಾದಿಗಳನ್ನು ನೋಡುತ್ತಿದ್ದೇವೆ.

ಆದರೆ ಇವು ಮನರಂಜನೆಯ ಸರಕುಗಳಷ್ಟೇ. ತಮ್ಮ ಸುತ್ತಲಿನ ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಮಕ್ಕಳ ಗ್ರಹಿಕೆಗೆ ನಿಲುಕುವಂತೆ ಪತ್ರಿಕೆಯನ್ನು ರೂಪಿಸಲು ಸಾಧ್ಯವೇ ? ಇದಕ್ಕೆ ನೇರ ಉತ್ತರ ಕಷ್ಟವಾಗಬಹುದು. ಆದರೆ ಚರ್ಚೆ ಮಾಡಲು ಅಡ್ಡಿಯಿಲ್ಲ.

ಆದರೆ ಸಮಸ್ಯೆಯಿಂದ ಅಥವಾ ಪ್ರಶ್ನೆಯಿಂದ ನಾವು ವಿಮುಖರಾಗುವಂತಿಲ್ಲ. ರಾಜಕೀಯ ಎಂದರೆ ಹೊಲಸು ಎಂದು ಮೂಗುಮುರಿಯುವ ಸಂದರ್ಭದಲ್ಲಿ ನಾವಿರುವಾಗಲೇ ಹೊಲಸು ರಾಜಕಾರಣ ಮನೆಮನೆಯನ್ನೂ ತಲುಪುತ್ತಿದೆ. ಮಕ್ಕಳಿಗೇಕೆ ರಾಜಕೀಯ ಎನ್ನುವ ಕಾಲವೂ ಒಂದಿತ್ತು ಆದರೆ ಇಂದಿನ ಸಾಂಸ್ಕೃತಿಕ-ಮತೀಯ ರಾಜಕಾರಣ ಮಕ್ಕಳ ಮನಸುಗಳನ್ನೂ ಹೊಕ್ಕಿದೆ.

ಪ್ರಾಥಮಿಕ ಶಾಲೆಯ ಮಕ್ಕಳಲ್ಲೂ ಅಸ್ಮಿತೆಗಳ ಲೋಕ ತಾಂಡವಾಡುತ್ತಿದೆ. ‘ ನಮ್ಮವರು ’ ಮತ್ತು ‘ ಅನ್ಯ ’ರನ್ನು ಗುರುತಿಸುವಷ್ಟು ಮಟ್ಟಿಗೆ ಪ್ರಾಥಮಿಕ ಶಾಲೆಯ ಮಕ್ಕಳಲ್ಲೂ ಮತಾಂಧತೆ, ಜಾತೀಯತೆಯ ವಿಷಬೀಜಗಳನ್ನು ಬಿತ್ತಲಾಗುತ್ತಿದೆ. ಈ ವಿಷಬೀಜಗಳಿಂದಲೇ ಮುಗಿಲೆತ್ತರಕೆ ಬೆಳೆದಿರುವ ವಿಷವೃಕ್ಷಗಳೇ ಆಡಳಿತ ವ್ಯವಸ್ಥೆಯ ಮೇಲೆ ಅಧಿಪತ್ಯ ಸಾಧಿಸುತ್ತಿದೆ. ಅಂದರೆ ಇಂದಿನ ಮಕ್ಕಳು ನಾಳಿನ ಪ್ರಜೆಗಳು ಎನ್ನುತ್ತಿದ್ದವರೇ ಈಗ ಆ ಪ್ರಜೆಗಳನ್ನು ಅಸ್ಮಿತೆಗಳ ಮೂಲಕ ಗುರುತಿಸಲು ಸಜ್ಜಾಗಬೇಕಿದೆ.

ಈ ಅಸ್ಮಿತೆಗಳ ವಿಷವರ್ತುಲದಿಂದ ಮಕ್ಕಳನ್ನು ಹೊರತರಬೇಕಾದರೆ ಎಳೆಯ ಮಕ್ಕಳಿಗೂ ತಮ್ಮ ಸುತ್ತಲಿನ ಸಾಮಾಜಿಕ, ಸಾಂಸ್ಕೃತಿಕ , ರಾಜಕೀಯ ವಿದ್ಯಮಾನಗಳು ಅರ್ಥವಾಗುವಂತೆ ತಿಳಿಸಬೇಕಾಗುತ್ತದೆ. ಸಾಂಸ್ಕೃತಿಕ ನೆಲೆಯಲ್ಲಿ, ಮತಧಾರ್ಮಿಕ ಚೌಕಟ್ಟಿನಲ್ಲಿ ಇದು ವ್ಯವಸ್ಥಿತವಾಗಿ ನಡೆಯುತ್ತಿದೆ. ಇದು ಕ್ರಮೇಣ ಸಾಮಾಜಿಕ ಮತ್ತು ರಾಜಕೀಯ ಫಲ ನೀಡುವಷ್ಟರಲ್ಲಿ ವಿಷಬೇರುಗಳು ಮತ್ತಷ್ಟು ವ್ಯಾಪಕವಾಗಿ ಹರಡಿರುತ್ತವೆ.

ಆದರೆ ಇದಕ್ಕೆ ಪ್ರತಿಯಾಗಿ ಸಂವೇದನಾಶೀಲ ಸಾಂಸ್ಕೃತಿಕ ನೆಲೆಗಳನ್ನು ಮಕ್ಕಳ ನಡುವೆ ಸ್ಥಾಪಿಸುವಲ್ಲಿ ಬಹುಶಃ ನಾವು ಎಡವಿದ್ದೇವೆ ಎನಿಸುತ್ತದೆ. ಈ ವೈಫಲ್ಯದ ಪರಿಣಾಮವನ್ನು ಶತಮಾನದ ಮಕ್ಕಳ ಸಮೂಹ ಸಾಂಸ್ಕೃತಿಕ ವಲಸೆಯಲ್ಲಿ ಕಾಣುತ್ತಿದ್ದೇವೆ. ಇಂದಿನ ಎಳೆಯ ಮಕ್ಕಳು ಒಂದು ದಶಕದ ನಂತರ ಇದೇ ವಲಸೆಯ ಮುಂದುವರೆದ ಭಾಗವಾಗಿ ಕಂಡರೆ ಅಚ್ಚರಿಯೇನಿಲ್ಲ ಅಲ್ಲವೇ ?

ಇಲ್ಲಿ ನಮಗೆ ಪ್ರಜಾತಂತ್ರ ವ್ಯವಸ್ಥೆಯ ಮತ್ತು ಪ್ರಜ್ಞಾವಂತ ಸಮಾಜದ ನಾಲ್ಕನೆಯ ಸ್ತಂಭ, ಮಾಧ್ಯಮ ಲೋಕ ಮುಖ್ಯವಾಗುತ್ತದೆ. ಸ್ಮಾರ್ಟ್ ಫೋನ್ ಯುಗದಲ್ಲಿ ಸಾಮಾಜಿಕ ಮಾಧ್ಯಮಗಳು ಇಂದು ಪ್ರತಿಯೊಬ್ಬ ವ್ಯಕ್ತಿಗೂ ನೇರವಾಗಿ ತಲುಪುವ ಸುಲಭ ಸಾಧನಗಳಾಗಿವೆ. ಮಕ್ಕಳೂ ಸಹ ಇದನ್ನೇ ಬಳಸಿಕೊಳ್ಳುತ್ತಿದ್ದಾರೆ. ಇಡೀ ಪ್ರಪಂಚದ ವಿದ್ಯಮಾನಗಳನ್ನು ಒಂದು ಪರದೆಯಲ್ಲಿ ಸೆರೆಹಿಡಿದು ಮಕ್ಕಳ ಮುಂದಿಟ್ಟರೂ ಅವರ ಗಮನ ಹರಿಯುವುದು ಆಕರ್ಷಣೀಯ ಆಟಗಳ ಕಡೆಗೆ.

ಈ ಆಟಗಳೂ ಸಹ ಮಕ್ಕಳಿಗಾಗಿ ದೊಡ್ಡವರ ಮನಸ್ಥಿತಿಯಲ್ಲಿ ರೂಪಿಸಲಾಗಿರುತ್ತದೆ. ಹೊಡೆದುರುಳಿಸುವುದು, ತೊಡೆದುಹಾಕುವುದು, ಗೆಲ್ಲುವ ಹಪಹಪಿ , ಸಾಫಲ್ಯ ಮತ್ತು ವೈಫಲ್ಯ ಹೀಗೆ ವಯಸ್ಕ ಬದುಕಿನ ವಿದ್ಯಮಾನಗಳನ್ನೇ ಮಕ್ಕಳ ಆಟಗಳ ರೂಪದಲ್ಲಿ ಅಳವಡಿಸಲಾಗಿರುತ್ತದೆ. ಮಕ್ಕಳು ಇಡೀ ದಿನ ಇಂತಹ ಆಟಗಳ ನಡುವೆಯೇ ಕಾಲ ಕಳೆಯುತ್ತಾರೆ.

ಕರ್ನಾಟಕದ ಮಟ್ಟಿಗೇ ಹೇಳುವುದಾದರೆ ಮುದ್ರಣ ಮಾಧ್ಯಮದ ಯಾವುದೇ ಪತ್ರಿಕೆಗಳೂ ಮಕ್ಕಳ ಮನಸನ್ನು ತಲುಪುವಂತಹ ಪುಟಗಳನ್ನು ಹೊಂದಿರುವುದಿಲ್ಲ. ಭಾನುವಾರದ ಪುರವಣಿಗಳಲ್ಲಿನ ಹಳೆಯ ವಿನ್ಯಾಸದ ಹಾಡು, ಪದ್ಯ, ಸಣ್ಣ ಕಥೆ ಮತ್ತು ಮನರಂಜನೆಯ ಸರಕುಗಳನ್ನು ಬಿಟ್ಟರೆ ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನಕ್ಕೆ ಪೂರಕವಾದಂತಹ ಸರಕುಗಳು ಇರುವುದಿಲ್ಲ.

ಕೋವಿದ್ 19 ಸಂದರ್ಭದಲ್ಲಿ ಬಹುಪಾಲು ಎಲ್ಲ ಪತ್ರಿಕೆಗಳ ಪುರವಣಿಗಳೇ ತಮ್ಮ ಮೂಲ ಅಸ್ತಿತ್ವ ಕಳೆದುಕೊಂಡಿದ್ದು, ಮಕ್ಕಳ ಅವಶ್ಯಕತೆಗಳು ನಿರ್ಲಕ್ಷಿತವಾಗಿವೆ. ಮಕ್ಕಳಿಗಾಗಿಯೇ ವರುಷಕ್ಕೊಮ್ಮೆ ಹೊರತರುವ ವಿಶೇಷ ಸಂಚಿಕೆಗಳು ಇದ್ದುದರಲ್ಲಿ ಕೊಂಚ ಆಶಾಭಾವನೆ ಮೂಡಿಸುವಂತಿವೆ.

ಆದರೆ ಮುದ್ರಣ ಮಾಧ್ಯಮದಿಂದ ಬಹುಪಾಲು ವಿಮುಖವಾಗಿರುವ ಮಕ್ಕಳಿಗೆ ವಿದ್ಯುನ್ಮಾನ ಮಾಧ್ಯಮಗಳು ಕನಿಷ್ಟ ಮಟ್ಟದಲ್ಲಿ ತಲುಪುವ ಪ್ರಯತ್ನಗಳನ್ನೂ ಮಾಡುತ್ತಿಲ್ಲ ಎನ್ನುವುದು ಸ್ಪಷ್ಟ. ಅನ್ಯ ಭಾಷೆಯ ಮತ್ತು ಕನ್ನಡದಲ್ಲಿ ಡಬ್ ಆದ ಕಾರ್ಟೂನ್ ವಾಹಿನಿಗಳ ಪುನರಾವರ್ತಿತ ಕಾರ್ಯಕ್ರಮಗಳನ್ನು ಹೊರತುಪಡಿಸಿದರೆ, ಬೌದ್ಧಿಕ ವಿಕಸನಕ್ಕೆ ಮತ್ತು ಮಕ್ಕಳ ಪಠ್ಯೇತರ ಜ್ಞಾನಾರ್ಜನೆಗೆ ಪೂರಕವಾದಂತಹ ಕಾರ್ಯಕ್ರಮಗಳು ಯಾವುದೇ ಕಾರ್ಟೂನ್ ವಾಹಿನಿಗಳಲ್ಲೂ ಕಾಣುವುದಿಲ್ಲ. ಸಾಂಪ್ರದಾಯಿಕ ಕಲೆಗಳಾದ ಸೂತ್ರದ ಬೊಂಬೆ, ತೊಗಲು ಬೊಂಬೆ, ಛಾಯಾ ಬೊಂಬೆಯಾಟ ಮುಂತಾದವುಗಳಿಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅವಕಾಶವೇ ಇಲ್ಲದಿರುವುದು ದುರಂತ.

ಶೈಕ್ಷಣಿಕ ನೋಡಿದಾಗಲೂ, ಶಾಲಾ ಪಠ್ಯಗಳಲ್ಲಿ ಈಗಲೂ ಮಕ್ಕಳಿಗೆ ಕಬ್ಬಿಣದ ಕಡಲೆ ಎನಿಸುವ ವಿಜ್ಞಾನ ಮತ್ತು ಗಣಿತವನ್ನು, ಮಕ್ಕಳು ಅನವಶ್ಯಕ ಎಂದು ಭಾವಿಸುವ ಚರಿತ್ರೆಯ ಮಜಲುಗಳನ್ನು, ಅವರ ವಯೋಮಿತಿಗೆ ಅನುಗುಣವಾಗಿ ಮನಮುಟ್ಟುವಂತೆ ತಿಳಿಸಿಕೊಡುವ ಕಾರ್ಯಕ್ರಮಗಳು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕಂಡುಬರುವುದಿಲ್ಲ.

ಮಕ್ಕಳು ತಮ್ಮದೇ ಆದ ಬೌದ್ಧಿಕ ನೆಲೆಯಲ್ಲಿ ಗ್ರಹಣ ಶಕ್ತಿಯನ್ನು ಹೊಂದಿರುತ್ತಾರೆ. ಈ ಗ್ರಹಿಕೆಯ ಸಾಮಥ್ರ್ಯಕ್ಕೆ ಪೂರಕವಾದ ಬೌದ್ಧಿಕ, ಶೈಕ್ಷಣಿಕ ಸರಕುಗಳನ್ನು ಒದಗಿಸುವುದು ಒಂದು ಸ್ವಸ್ಥ ಸಮಾಜದ ಆದ್ಯತೆಯಾಗಿರಬೇಕಲ್ಲವೇ ? ತಂತ್ರಜ್ಞಾನ ಯುಗದ ನಾಗಾಲೋಟದಲ್ಲಿ ಇದನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ.

ಒಂದೆಡೆ ಬೈಜೂದಂತಹ ಶೈಕ್ಷಣಿಕ ವೆಬ್ ಸಾಧನಗಳು ಮಕ್ಕಳಿಗೆ ಅವರ ವಯೋಸಹಜ ಇತಿಮಿತಿಗಳನ್ನೂ ಮೀರಿದಂತೆ ಸರಕುಗಳನ್ನು ಉಣಬಡಿಸುತ್ತಿವೆ, ಮಧ್ಯಮ ವರ್ಗದ ಮಕ್ಕಳ ಮಿದುಳಿನಲ್ಲಿ ಅವಶ್ಯಕತೆಗಿಂತಲೂ ಹೆಚ್ಚು ಸರಕುಗಳನ್ನು ತುಂಬುತ್ತಿವೆ. ಮತ್ತೊಂದೆಡೆ ಮಕ್ಕಳು ತಮ್ಮ ಸಹಜ ವಿಕಸನಕ್ಕೆ ಅತ್ಯವಶ್ಯವಾದ ವಸ್ತುಗಳಿಂದ ವಂಚಿತರಾಗುತ್ತಿದ್ದಾರೆ.

ಕನ್ನಡದ ಹತ್ತಾರು ವಾಹಿನಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನೇ ಮರೆತು ಮಾರುಕಟ್ಟೆಯ ಗುಲಾಮಗಿರಿಗೆ ಒಳಗಾಗಿರುವುದರಿಂದ ಮಕ್ಕಳ ಮನೋವಿಕಾಸಕ್ಕೆ ಪೂರಕವಾದಂತಹ ಯಾವುದೇ ಕಾರ್ಯಕ್ರಮಗಳನ್ನು ನಿರೀಕ್ಷಿಸಲು ಸಾಧ್ಯವೇ ಇಲ್ಲದಂತಾಗಿದೆ.

ಮುಂಜಾನೆಯಲ್ಲಿ ಜ್ಯೋತಿಷ್ಯ, ಆಗಮ, ಆರಾಧನೆ ಮತ್ತು ವಾಸ್ತು ಮುಂತಾದ ಮೌಢ್ಯ ಬಿತ್ತನೆ ಪ್ರಧಾನವಾಗಿದ್ದರೆ ರಾತ್ರಿ ವೇಳೆ ಕದನ ಕುತೂಹಲ ಕೆರಳಿಸುವ ಯುದ್ಧ, ಮಹಾಸಮರ, ಪ್ರವಾಹ, ವಿಶ್ವ ವಿನಾಶ ಹೀಗೆ ಭೀತಿ ಬಿತ್ತನೆಯ ಕಾರ್ಯಕ್ರಮಗಳು ಪ್ರಧಾನವಾಗಿರುತ್ತವೆ. ಈ ನಡುವೆ ಪ್ರಸಾರವಾಗುವ ಧಾರಾವಾಹಿಗಳು ಮಕ್ಕಳಿಗೆ ತಲುಪುವುದಕ್ಕಿಂತಲೂ ಹೆಚ್ಚಾಗಿ ಅವರಲ್ಲಿನ ಸೂಕ್ಷ್ಮತೆಯನ್ನೂ ನಾಶಪಡಿಸುವಂತಿರುತ್ತವೆ.

ಕನ್ನಡದ ಸುದ್ದಿಮನೆಗಳಿಂದ ಮಕ್ಕಳನ್ನು ದೂರ ಇರಿಸುವುದೇ ಕ್ಷೇಮ ಎನ್ನುವ ರೀತಿಯಲ್ಲಿ ಸುದ್ದಿ ವಾಹಿನಿಗಳು ಕಾರ್ಯ ನಿರ್ವಹಿಸುತ್ತಿವೆ. ಯಾವುದೇ ವಾಹಿನಿಯಲ್ಲಿ ಮಕ್ಕಳಿಗಾಗಿ ದಿನಕ್ಕೆ ಕನಿಷ್ಟ ಅರ್ಧಗಂಟೆಯಷ್ಟು ಅವಧಿಯನ್ನೂ ಒದಗಿಸಲು ಕನ್ನಡ ವಾಹಿನಿಗಳಿಗೆ ಸಾಧ್ಯವಾಗದಿರುವುದು ದುರಂತ.

ಚಲನ ಚಿತ್ರ ಕ್ಷೇತ್ರದಲ್ಲಿ ಬಹುಶಃ ಮಕ್ಕಳ ಕಲ್ಪನೆಯೇ ಮಾಯವಾಗಿದೆ. ಕನ್ನಡದಲ್ಲಿ ಒಂದು ಸುಂದರ ಮಕ್ಕಳ ಚಿತ್ರವನ್ನು ಕಂಡು ದಶಕಗಳೇ ಕಳೆದಿರಬಹುದು. ವಯಸ್ಕರಿಗಾಗಿ ಹೆಣೆಯುವ ಕತೆಗಳು, ಹೊಡಿಬಡಿ ದೃಶ್ಯಗಳು, ಅತಿಮಾನುಷ ಶಕ್ತಿಯ ನಾಯಕ ಮತ್ತು ಸತ್ವಹೀನ ನಾಯಕಿ ಹೀಗೆ ಹಳಸಲು ಸೂತ್ರಗಳನ್ನೇ ಬಳಸುತ್ತಿರುವ ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಕೆಲವೇ ಚಿತ್ರಗಳು ಮಕ್ಕಳಿಗೆ ತಲುಪುವಂತಿರುವುದು ದುರಂತ.

ಮಕ್ಕಳಿಗಾಗಿಯೇ ಮನರಂಜನೆಯನ್ನೊಳಗೊಂಡ ಮನೋವಿಕಾಸ ಭೂಮಿಕೆಯ ಚಿತ್ರಗಳು ಕಾಣುತ್ತಲೇ ಇಲ್ಲ. ಇಲ್ಲಿ ಮತ್ತೊಮ್ಮೆ ಡಾ ರಂಗನಾಥ್ ನಾಟಕವನ್ನು ಕುರಿತು ಹೇಳಿದ ಮಾತುಗಳು ಹೆಚ್ಚು ಪ್ರಸ್ತುತ ಎನಿಸುತ್ತವೆ. ನಮ್ಮಲ್ಲಿ ಪ್ರತಿಭೆಗಳ ಕೊರತೆ ಇಲ್ಲ, ಅವಕಾಶಗಳ ಕೊರತೆ ಇದೆ. ಟಿ ಆರ್ ಪಿ ಮತ್ತು ಮಾರುಕಟ್ಟೆಯ ಚೌಕಟ್ಟಿನಿಂದಾಚೆಗೆ ಒಂದು ಉತ್ತಮ ಕೌಟುಂಬಿಕ ಧಾರಾವಾಹಿಯನ್ನೂ ತಯಾರಿಸಲು ಸಾಧ್ಯವಾಗದ ಪರಿಸ್ಥಿತಿ ಇರುವುದು ದುರಂತ.

ವಿಕಸಿಸುವ ಕುಸುಮಗಳ ಪಕಳೆಗಳಿಗೆ ವಿಷದ ಲೇಪನ ಮಾಡುವ ಬೌದ್ಧಿಕ ಪ್ರಕ್ರಿಯೆಯಲ್ಲಿ ಸಾಂಸ್ಕೃತಿಕ ರಾಜಕಾರಣದ ಮತಾಂಧ ಶಕ್ತಿಗಳು ಸಕ್ರಿಯವಾಗಿರುವ ಈ ಸಂದರ್ಭದಲ್ಲಿ ನಮ್ಮ ಆದ್ಯತೆಗಳಿಗೆ ಎರಡು ಆಯಾಮಗಳಿರಬೇಕಾಗುತ್ತದೆ. ಮೊದಲನೆಯದು ಇಂದಿನ ಎಳೆ ಮಕ್ಕಳ ಮಿದುಳಿನಲ್ಲಿ ಸಮ ಸಮಾಜದ ಕಲ್ಪನೆಯನ್ನು ಜೀವಂತವಾಗಿರಿಸುವುದು ಮತ್ತು ವೈಜ್ಞಾನಿಕ-ವೈಚಾರಿಕ ಚಿಂತನೆಯ ನೆಲೆಯನ್ನು ಭವಿಷ್ಯಕ್ಕಾಗಿ ಕಾಪಾಡುವುದು.

ಈ ನಿಟ್ಟಿನಲ್ಲಿ ನಾವು ಯೋಚಿಸದೆ ಹೋದರೆ ಇಡೀ ಪೀಳಿಗೆಯನ್ನೇ ತಮ್ಮ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳಲು ಮತಾಂಧ, ಜಾತಿವಾದಿ ಶಕ್ತಿಗಳು ಆವರಿಸುತ್ತವೆ. ಈ ಬೌದ್ಧಿಕ ವಿಕಸನದ ಮಾರ್ಗಗಳನ್ನು ಮರುಶೋಧಿಸುವ ಪ್ರಯತ್ನ ನಮ್ಮದಾಗಬೇಕಿದೆ. ಮಾಧ್ಯಮಗಳು ಪ್ರಜ್ಞೆ ಕಳೆದುಕೊಂಡಿವೆ ಆದರೆ ನಾಗರಿಕ ಸಮಾಜದ ಪ್ರಜ್ಞೆ ಜೀವಂತವಾಗಿದೆ ಅಲ್ಲವೇ ?

ಕೃಪೆ : ಬೆವರಹನಿ ಪತ್ರಿಕೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

Published

on

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು  ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending