ಲೈಫ್ ಸ್ಟೈಲ್
ಮಕ್ಕಳು ‘ಸ್ಮಾರ್ಟ್ ಪೋನ್’ ಬಳಸುವುದು ಎಷ್ಟರ ಮಟ್ಟಿಗೆ ಸುರಕ್ಷಿತ..?
- ಸಂಧ್ಯಾ ಸಿಹಿಮೊಗೆ
ಈ ಮಾಯಾಜಗತ್ತು ಎಷ್ಟೊಂದು ಸುಂದರ…! ಕುಳಿತ ಜಾಗದಲ್ಲೇ ನಮ್ಮನ್ನು ಕುಳಿತುಕೊಳ್ಳುವಂತೆ ಮಾಡುವ, ದೂರ ಸರಿದರೂ ಮತ್ತೆಮತ್ತೆ ತನ್ನ ಬಳಿಯೆ ಉಳಿಯುವಂತೆ ಮಾಡುವ, ದಿನ ಪೂರ್ತಿ ಊಟ, ನಿದ್ದೆ, ಸ್ನಾನ ಹೀಗೆ ಎಲ್ಲಾ ಕೆಲಸಗಳನ್ನು ಬಿಟ್ಟು ಸುಮ್ಮನೆ ಒಂದೆಡೆ ಮೂಲೆಗೊರಗಿ ಕುಳಿತುಕೊಳ್ಳುವಂತೆ ಮಾಡುವ ಮಾಂತ್ರಿಕ ಶಕ್ತಿ ಹೊಂದಿರುವ ಮಾಯೆ ಈ ಮೊಬೈಲು.
ಇಂದಿನ ವೈಜ್ಞಾನಿಕ ಯುಗದಲ್ಲಿ ಮೊಬೈಲ್, ಸ್ಮಾರ್ಟ್ಪೋನ್, ಐಪ್ಯಾಡ್, ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್ನಂತಹ ವಿನೂತನ ಅತ್ಯಾಧುನಿಕ ವಿದ್ಯುನ್ಮಾನ ಸಾಧನಗಳು ಕೈಲಿದ್ದರೆ ಸಾಕು ಇಡೀ ಜಗತ್ತೇ ನಮ್ಮ ಅಂಗೈಯಲ್ಲಿ. ನಮಗೆ ಅಗತ್ಯವಿರುವ ಎಲ್ಲಾ ಬಗೆಯ ವಿಷಯ, ಜ್ಞಾನ, ಮಾಹಿತಿ, ಸಂಗೀತ, ಮನೋರಂಜನೆ, ಸುದ್ದಿ, ಕ್ರೀಡೆ, ಸಂಪರ್ಕ, ಸಂದೇಶಗಳಂತಹ ತರಹೇವಾರಿ ಮಾಹಿತಿಗಳನ್ನು ಪಡೆಯುವುದರ ಜೊತೆಗೆ ಮಾನಸಿಕ ನೆಮ್ಮದಿ ನೀಡಿ ಮನಸ್ಸನ್ನು ಪುಳಕಗೊಳಿಸಬಲ್ಲ ಸಂಗತಿಗಳನ್ನು ನಾವು ಈ ಮೊಬೈಲ್ ತಂತ್ರಜ್ಞಾನದಿಂದ ಪಡೆಯಬಹುದಾಗಿದೆ.
ಮೊಬೈಲ್ ಅಥವಾ ಸ್ಮಾಟ್ಫೋನ್ನಿಂದ ಅವಶ್ಯಕ ಮಾಹಿತಿ, ಗೇಮ್, ಕಾರ್ಟೂನ್ ಮತ್ತು ಇನ್ನಿತರ ಮನಸ್ಸಿಗೆ ಮುದನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಜೊತೆಗೆ ಬೌದ್ಧಿಕ ವಿಕಾಸ ಹಾಗೂ ಕಲಿತ ವಿದ್ಯೆಯನ್ನು ಒರೆಗೆ ಹಚ್ಚುವಲ್ಲಿಯೂ ಇದು ಸಹಾಯಕವಾಗಿದೆ.
ನಾವು ಸ್ಮಾರ್ಟ್ಫೋನ್ನಂತೆ ಸ್ಮಾರ್ಟ್ ಕೂಡ ಆಗಬಹುದೆಂಬುದೇನೋ ನಿಜ. ಆದರೆ, ಮೊಬೈಲ್ ಮತ್ತು ಸ್ಮಾರ್ಟ್ಫೋನ್ಗಳನ್ನು ಮಕ್ಕಳು ಬಳಸುವುದು ಎಷ್ಟರ ಮಟ್ಟಿಗೆ ಸುರಕ್ಷಿತ ?.. ಅವುಗಳಿಂದ ಆಗಬಹುದಾದ ದುಷ್ಟರಿಣಾಮಗಳ ಅರಿವಿಲ್ಲದೆ ಮೌನವಾಗಿರುವುದು ಅಪಾಯದ ಮುನ್ಸೂಚನೆಯೇ ಅಲ್ಲವೇ?.
ಇಂದಿನ ನಮ್ಮ ಬದುಕು ಮೊಬೈಲ್ಮಯವಾಗುತ್ತಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ಹಿಂದಿನ ಕಾಲದಲ್ಲಿ ಮಕ್ಕಳಿಗೆ ಚಂದಮಾಮ ತೋರಿಸಿ, ಲಾಲಿ ಹಾಡಿ ಊಟ ಮಾಡಿಸುತ್ತಿದ್ದರು. ಆದರೆ ಇಂದಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಇಲ್ಲದೆ ಊಟ ಮಾಡುವುದಿಲ್ಲ ಎನ್ನುವಷ್ಟರ ಮಟ್ಟಿಗೆ ಮೊಬೈಲ್ ಎಂಬ ಮಾಯೆ ತನ್ನ ಪ್ರಭಾವ ಬೀರಿರುವುದು ಅತ್ಯಂತ ಕಳವಳಕಾರಿ ಸಂಗತಿ.
ನಿರಂತರವಾಗಿ ಮೊಬೈಲ್ ಬಳಸುವುದರಿಂದ ಮಕ್ಕಳು ಭವಿಷ್ಯದಲ್ಲಿ ಎದುರಿಸಬಹುದಾದ ಸಮಸ್ಯೆಗಳ ಕುರಿತು ಪೋಷಕರು ಕಿಂಚಿತ್ತು ಗಮನಹರಿಸಿದರೆ ಒಳಿತು. ಪಬ್ಜಿ ಗೇಮ್, ಟಿಕ್ಟಾಕ್, ಸಾಮಾಜಿಕ ಜಾಲತಾಣ, ಆತಂಕಕಾರಿ ಸಾಪ್ಟವೇರ್ಗಳು ಹಾಗೂ ಅಶ್ಲೀಲ ಸಂಗತಿಗಳು ಮಕ್ಕಳ ಕೋಮಲವಾದ ಮನಸ್ಸನ್ನು ಕೆರಳಿಸಿ, ಪ್ರಚೋದಿಸಿ ಅವರ ಗಮನ ಕೇಂದ್ರೀಕರಿಸಿಕೊಂಡು ಕೊನೆಗೆ ಜೀವಹಾನಿಯಂತಹ ಘಟನೆಗಳು ಸಂಭವಿಸುತ್ತಿರುವುದು, ವೈಚಾರಿಕ ನೆಲೆಯಿಂದ ವಿಮುಖರಾಗಿ ಕ್ರೌರ್ಯಗಳಿಗೆ, ದುಷ್ಕøತ್ಯಗಳಿಗೆ ಕಾರಣವಾಗುತ್ತಿರುವುದು ಮೊಬೈಲ್ ಬಳಸುವ ಎಲ್ಲರಿಗೂ ತಿಳಿದ ಸಂಗತಿಯೇ ಆಗಿದೆ.
ಅತಿಯಾದ ಸ್ಮಾಟ್ಫೋನ್ ಬಳಕೆಯಿಂದ ಮಕ್ಕಳ ಆರೋಗ್ಯದ ಜೊತೆಗೆ ಕಲಿಕೆ ಮತ್ತು ಶೈಕ್ಷಣಿಕ ಚಟುವಟಿಕೆಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿ ಫಲಿತಾಂಶ ಕುಂಠಿತವಾಗುವ ಆತಂಕವಿದೆ. ಪ್ರೀತಿ, ವಾತ್ಸಲ್ಯ, ಮಮತೆ, ಜೀವನ, ಸಂಬಂಧಗಳ ಮೌಲ್ಯ ಹಾಗೂ ಸಂಸ್ಕøತಿಗಳ ಪರಿವೆಯೇ ಇಲ್ಲದೇ ಬದುಕುವ ಪರಿಸ್ಥಿತಿ ತಂದೊಡ್ಡಿದೆ.
ದೊಡ್ಡವರು ಮಕ್ಕಳ ಮುಂದೆ ಮೊಬೈಲ್ ಬಳಸುವುದನ್ನು ಕಡಿಮೆ ಮಾಡಿ, ಮಕ್ಕಳ ಬದುಕಿಗೆ ಮಾದರಿಯಾಗಬೇಕು. ನಮ್ಮ ಮಕ್ಕಳ ಭವಿಷ್ಯವನ್ನು ನಾವು ಮಾತ್ರವೇ ಬದಲಾಯಿಸಬಹುದು ಎಂಬುದನ್ನು ಅರಿತು ಜಾಗೃತರಾಗಬೇಕು.ಮಕ್ಕಳನ್ನು ಮೊಬೈಲ್ನಿಂದ ದೂರವಿರಿಸುವುದು ಇಂದು ಕಷ್ಟದ ಕೆಲಸ. ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳ ಮಾನಸಿಕ ಬೆಳವಣಿಗೆ ಕುಂಠಿತವಾಗಬಹುದು ಎಂದು ಅಧ್ಯಯನಗಳು ತಿಳಿಸಿದೆ.
ಹದಿಹರೆಯದ ಮತ್ತು ಯೌವ್ವನಾವಸ್ಥೆಯಲ್ಲಿರುವವರ ಆಲೋಚನಾ ಶಕ್ತಿ ಕುಗ್ಗಲು ಹಾಗೂ ಕ್ಷೀಣಿಸಲು ಮೊಬೈಲ್ನಿಂದಾಗುವ ದುಷ್ಟರಿಣಾಮಗಳು ಕಾರಣವಾಗಿದೆ. ಪಬ್ಜಿ ಗೇಮ್ನಂತಹ ಅವೇಶಭರಿತ ಆಟಗಳ ನಿಯಂತ್ರಣಕ್ಕೊಳಪಟ್ಟು ಕೊನೆಗೆ ಆಟದಲ್ಲಿ ಸೋತ ಮಕ್ಕಳು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಇದರಿಂದ ಮಕ್ಕಳ ಕಣ್ಣು, ಮೆದುಳು ಮತ್ತು ವಿವಿಧ ಶಾರೀರಿಕ ಬೆಳವಣಿಗೆಯ ಮೇಲೆ ಆರೋಗ್ಯದ ಅಡ್ಡ ಪರಿಣಾಮಗಳು ಆಗುತ್ತಿವೆ. ನಿರಂತರ ಮೊಬೈಲ್ ಬಳಕೆಯಿಂದ ರಕ್ತದೊತ್ತಡ ಮತ್ತು ನರರೋಗಕ್ಕೆ ತುತ್ತಾಗುವ ಸಾಧ್ಯತೆಗಳು ಇರುವುದನ್ನು ಇತ್ತೀಚಿನ ಸಂಶೋಧನೆಗಳು ದೃಢಪಡಿಸಿವೆ.
ನಿದ್ದೆ ಮಾಡೋಲ್ಲ ಮತ್ತು ಹೇಳಿದ ಮಾತು ಕೇಳೊಲ್ಲ ಎಂದರೆ ನಾವು ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಗೊಂಬೆಗಳ ಕಾರ್ಯಕ್ರಮ ಮತ್ತು ಗೇಮ್ ಆಡುವುದಕ್ಕೆ ಹೇಳಿ ಸುಮ್ಮನಾಗಿಸುತ್ತೇವೆ. ತಾಂತ್ರಿಕತೆ ಮತ್ತು ತಂತ್ರಜ್ಞಾನ ಯುಗದತ್ತ ಮುಖ ಮಾಡುತ್ತಿರುವ ನಾವು ನಮ್ಮ ಕಾರ್ಯಬಾಹುಳ್ಯದ ಒತ್ತಡದಿಂದಾಗಿ ಮಕ್ಕಳ ಕಡೆಗೆ ಗಮನ ಕೂಡಲು ಸಾಧ್ಯವಾಗುತ್ತಿಲ್ಲ. ಮೊಬೈಲ್ ಬಳಕೆಯಿಂದ ಹಲವಾರು ತೊಂದರೆಗಳು ಎದುರಾಗುತ್ತಿವೆ. ಹೀಗಾಗಿ ಮಕ್ಕಳ ಮನಸ್ಸು ಮತ್ತು ಆರೋಗ್ಯದ ಮೇಲೆ ಭೀಕರವಾದ ಪರಿಣಾಮ ಪರಿಣಾಮ ಬೀರುತ್ತಿವೆ.
ಮೊಬೈಲ್ ಫೋನ್ಗಳು ಮತ್ತು ಅವುಗಳ ಟವರ್ಗಳು ಹೊರಸೂಸುವ ತರಂಗಗಳು ಮಹಿಳೆಯರಲ್ಲಿ ಫಲವತ್ತತೆಯ ನಷ್ಟಕ್ಕೆ ಪ್ರಮುಖ ಕಾರಣವಾಗಿದೆ. ಎಂದು ವಿಶ್ವ ಆರೋಗ್ಯ ಸಂಸ್ಥೆ(WHO)ಯ ಅಧ್ಯಯನವೊಂದು ತಿಳಿಸಿದೆ. ಮೊಬೈಲ್ ಫೋನ್ಗಳ ನಿರಂತರ ಬಳಕೆಯು ಸದಾ ಪ್ರಶ್ನೆಯಲ್ಲಿದೆ. ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕುಸಿತ ಮತ್ತು ಮಹಿಳೆಯರಲ್ಲಿ ಫಲವತ್ತತೆ ಕಂಠಿತ ಸೇರಿದಂತೆ ಮೊಬೈಲ್ ವಿಕಿರಣದ ದುಷ್ಪರಿಣಾಮಗಳನ್ನು ಹಲವಾರು ಅಧ್ಯಯನಗಳು ಮತ್ತು ಸಂಶೋಧನೆಗಳು ಬಹಿರಂಗಗೊಳಿಸಿವೆ. ಅಷ್ಟೇ ಅಲ್ಲ, ಮೊಬೈಲ್ ವಿಕಿರಣವು ಮೆದುಳು ಟ್ಯೂಮರ್ಗಳನ್ನೂ ಉಂಟುಮಾಡುತ್ತದೆ ಎಂಬುದನ್ನು ಖಚಿತಪಡಿಸಿದೆ.
ಸ್ಮಾರ್ಟ್ಫೋನ್ಗಳ ನಿರಂತರ ಬಳಕೆ ನಮ್ಮ ಪ್ರತಿದಿನ ಬದುಕಿನ ಭಾಗವಾಗಿಬಿಟ್ಟಿದೆ. ಆದರೆ ಮನಸ್ಸು ಮತ್ತು ಶರೀರದ ಮೇಲೆ ಅದರ ದುಷ್ಟಪರಿಣಾಮಗಳ ಬಗ್ಗೆಯೂ ಮೊಬೈಲ್ ಬಳಕೆದಾರರು ತಿಳಿದಿರಬೇಕು.ಮೊಬೈಲ್ ಫೋನ್ಗಳು ಹೊರಸೂಸುವ ವಿಕಿರಣಗಳು ಕ್ಯಾನ್ಸರ್ನಂತಹ ಮಾರಣಾಂತಿಕ ಕಾಯಿಲೆಯನ್ನುಂಟು ಮಾಡುವ ಅಪಾಯವಿದೆ ಎನ್ನುವುದನ್ನು WHO ಸಂಶೋಧನೆಯು ಬಹಿರಂಗಗೊಳಿಸಿದೆ. ಸೆಲ್ ಫೋನ್ಗಳನ್ನು ಬಳಸಿದ್ದ ಹಲವಾರು ಯುವಜನರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಿರುವುದನ್ನು ಹಂಗೇರಿಯ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.
ಮೊಬೈಲ್ ಟವರ್ನ 400 ಮೀಟರ್ಗಳ ಪ್ರದೇಶದಲ್ಲಿರುವವರಲ್ಲಿ ಕ್ಯಾನ್ಸರ್ ಅಪಾಯದ ಸಂಭವನೀಯತೆ ಮೂರು ಪಟ್ಟು ಹೆಚ್ಚಾಗಿರುವುದನ್ನು ಜರ್ಮನಿಯಲ್ಲಿ ನಡೆಸಲಾದ ಸಂಶೋಧನೆಯೊಂದು ತೋರಿಸಿದೆ. ಈ 400 ಮೀ. ಪ್ರದೇಶದಲ್ಲಿ ಮೊಬೈಲ್ ಸಿಗ್ನಲ್ಗಳ ಪ್ರಸರಣವು ಇತರ ಕಡೆಗಳಿಂದ 100 ಪಟ್ಟು ಹೆಚ್ಚಾಗಿರುತ್ತದೆ. ಮೊಬೈಲ್ ಫೋನ್ ಟವರ್ಗಳಿಂದ ಹೊರಹೊಮ್ಮುವ ವಿಕಿರಣದಿಂದಾಗಿ ಜೇನುನೊಣಗಳ ಸಂಖ್ಯೆ ಶೇ.60ರಷ್ಟು ಕುಸಿದಿದೆ ಎಂದು ಕೇರಳದಲ್ಲಿ ನಡೆಸಲಾದ ಸಂಶೋಧನೆಯೊಂದು ತಿಳಿಸಿದೆ.
ಸೆಲ್ ಫೋನ್ ಟವರ್ಗಳ ಸಮೀಪದಲ್ಲಿ ಕಾಗೆಗಳು ಇಡುವಂತಹ ಮೊಟ್ಟೆಗಳು 30ದಿನಗಳ ಬಳಿಕವೂ ಮರಿಗಳಾಗಿಲ್ಲ. ಸಾಮಾನ್ಯವಾಗಿ 10ರಿಂದ 14 ದಿನಗಳಲ್ಲಿ ಮೊಟ್ಟೆಗಳು ಒಡೆದು ಮರಿಗಳು ಹೊರಗೆ ಬರುತ್ತವೆ ಎನ್ನುವುದನ್ನೂ ಅಧ್ಯಯನಗಳು ಸೂಚಿಸಿವೆ. ಪೋನ್ ವಿಕಿರಣಗಳು ಆರೋಗ್ಯಕ್ಕೆ ಯಾವ ರೀತಿಯ ಅಪಾಯಗಳನ್ನು ಉಂಟುಮಾಡಬಹುದೆಂದು ತಿಳಿದರೆ ಅಚ್ಚರಿವುಂಟಾಗದಿರದು. ಮೊಬೈಲ್ ಫೋನ್ ವಿಕಿರಣವು ತಲೆನೋವು, ತಲೆಯೊಳಗೆ ಜುಮ್ಮೆನಿಸುವಿಕೆ, ನಿರಂತರ ಬಳಲಿಕೆ, ತಲೆ ಸುತ್ತುವಿಕೆ, ಖಿನ್ನತೆ, ನಿದ್ರಾಹೀನತೆ, ಮಂಪರು ನಿದ್ರೆ, ಕಣ್ಣಿನ ತೊಂದರೆ, ಏಕಾಗ್ರತೆ ನಷ್ಟ, ಕಿವಿಗಳಲ್ಲಿ ಗಂಟೆ ಬಾರಿಸಿದ ಅನುಭವ, ಶ್ರವಣ ಶಕ್ತಿ ಮತ್ತು ಜ್ಞಾಪಕ ಶಕ್ತಿ ನಷ್ಟ, ಅಜೀರ್ಣ ಸಮಸ್ಯೆ, ಅನಿಯಮಿತ ಹೃದಯಬಡಿತ ಇತ್ಯಾದಿ ನೋವುಗಳಿಗೆ ಕಾರಣವಾಗುತ್ತದೆ.
ಮೊಬೈಲ್ ವಿಕಿರಣವು ಫಲವತ್ತತೆ ನಷ್ಟ, ಕ್ಯಾನ್ಸರ್, ಮೆದುಳು ಟ್ಯೂಮರ್ ಮತ್ತು ಗರ್ಭಪಾತಕ್ಕೂ ಕಾರಣವಾಗುತ್ತವೆ ಎನ್ನುವುದನ್ನು ಸಂಶೋಧನೆಗಳು ತಿಳಿಸಿವೆ.
ನಮ್ಮ ಶರೀರದಲ್ಲಿ ಶೇ.70ರಷ್ಟು ಭಾಗ ನೀರಿದೆ ಎನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತು. ನಮ್ಮ ಮೆದುಳಿನ ಶೇ.90ರಷ್ಟು ಭಾಗವೂ ನೀರೇ ಆಗಿದೆ. ಈ ನೀರು ಕ್ರಮೇಣ ವಿಕಿರಣವನ್ನು ಹೀರಿಕೊಳ್ಳುತ್ತದೆ ಮತ್ತು ಇದು ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾಗಿದೆ. ಸದಾಕಾಲ ಮೊಬೈಲ್ ಫೋನ್ ಬಳಸುವವರು ಕ್ಯಾನ್ಸರ್ಗೆ ಗುರಿಯಾಗುವ ಸಾಧ್ಯತೆಗಳಿರುತ್ತವೆ ಎಂದು WHO ವರದಿ ತಿಳಿಸಿದೆ.
1,000 ರಿಂದ 3,000 ಮೆಘಾ ಹರ್ಟ್ಸ್ ಸಾಮಥ್ರ್ಯದವರೆಗಿನ ವಿದ್ಯುತ್ಕಾಂತೀಯ ಅಲೆಗಳು ಮೈಕ್ರೊವೇವ್ ವಿಕಿರಣವನ್ನುಂಟು ಮಾಡುತ್ತದೆ. ಮೈಕ್ರೊವೇವ್ ಓವನ್, ಏರ್ ಕಂಡೀಷನರ್, ನಿಸ್ತಂತು ಕಂಪ್ಯೂಟರ್, ಕಾರ್ಡ್ಲೆಸ್ ಫೋನ್ ಮತ್ತು ಇತರ ವೈರ್ಲೆಸ್ ಸಾಧನಗಳೂ ವಿಕಿರಣಗಳನ್ನು ಸೂಸುತ್ತವೆ. ಆದರೆ ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಮತ್ತು ಮೊಬೈಲ್ ಬಳಕೆಯಿಂದ ಅದರ ಸಾಮೀಪ್ಯದಿಂದಾಗಿ ಮೊಬೈಲ್ ವಿಕಿರಣವು ಶರೀರಕ್ಕೆ ಅತ್ಯಂತ ಅಪಾಯಕಾರಿಯಾಗಿದೆ.
ಆಧುನಿಕತೆ ಮುಂದುವರೆದಂತೆ ನಮ್ಮ ಕೌಟುಂಬಿಕ ಮತ್ತು ಸಾಮಾಜಿಕ ಸಂಬಂಧಗಳು ಸಂಕೀರ್ಣವಾಗಿ ನಾಟಕೀಯತೆ, ಕೃತಕತೆ, ಸಮಯ ಸಾಧಕತನ, ಸ್ವಾರ್ಥಪರತೆ ಇತ್ಯಾದಿಗಳ ವಿಜೃಂಭಣೆಯನ್ನು ಈಗ ಎಲ್ಲೆಲ್ಲೂ ಕಾಣಬಹುದಾಗಿದೆ. ಇದರೊಂದಿಗೆ ಸಾಮಾಜಿಕ ಜಾಲತಾಣಗಳು ಸೇರಿಕೊಂಡು ಕೌಟುಂಬಿಕ ವ್ಯವಸ್ಥೆಯ ಬೇರುಗಳನ್ನು ಅಲುಗಾಡಿಸಲಾರಂಭಿಸಿವೆ ಎಂದರೆ ತಪ್ಪಾಗಲಾರದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



