ದಿನದ ಸುದ್ದಿ
ಚಿತ್ರದುರ್ಗ ಕೋಟೆ ಮೇಲೆ ಸಿನಿಮಾ ಶೂಟಿಂಗ್ ಗೆ ವಿರೋಧ !
ಚಿತ್ರದುರ್ಗ: ಚಲನಚಿತ್ರದ ಚಿತ್ರೀಕರಣದ ನೆಪದಲ್ಲಿ ದುರ್ಗದ ಕೋಟೆಯ ಕೆಲವಡೆ ರಸಾಯನಿಕ ಬಣ್ಣಗಳು ಹರಡಿ ಇಡೀ ಕೋಟೆಯ ಪರಿಸರ ಹಾಳಾಗಿದ್ದು, ಇದರ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಪ್ರವಾಸಿಗರು ಮತ್ತು ಸ್ಥಳಿಯರು ಕ್ಷಣ ಚಿತ್ರಕ್ಕಾಗಿ ಪುರಾತನ ಕೋಟೆ ಹಾಳು ಮಾಡುತ್ತಿದ್ದಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅದು ಹಲವು ಶತಮಾನಗಳಷ್ಟು ಹಳೆಯದಾದ ಐತಿಹಾಸಿಕ ಕೋಟೆ, ಅದರ ಮೂಲ ಸ್ವರೂಪಕ್ಕೆ ದಕ್ಕೆ ಉಂಟಾಗದಂತೆ, ಯಾವುದೇ ರೀತಿಯ ಬಣ್ಣಗಳನ್ನ ಬಳಿಯದಂತೆ ಕಾಪಾಡಿಕೊಳ್ಳಬೇಕು. ಆದ್ರೆ ಅಲ್ಲಿ ಚಲನಚಿತ್ರದ ಚಿತ್ರೀಕರಣ ಮಾಡಿದ ತಂಡವೊಂದರ ನಿರ್ಲಕ್ಷ್ಯತೆಯಿಂದ ಕೋಟೆಯ ಬಹುಭಾಗ ರಸಾಯನಿಕ ಬಣ್ಣಗಳು ಹರಡಿ ಇಡೀ ಕೋಟೆಯ ಪರಿಸರ ಹಾಳಾಗಿದ್ದು, ಇದರ ಬಗ್ಗೆ ನಿರ್ಲಕ್ಷ್ಯತೆ ತೋರಿದ್ದ ಅಧಿಕಾರಿ ವಿರುದ್ದ ಸಾರ್ವಜನಿಕರ ಆಕ್ರೋಶ ಕೇಳಿಬಂದ ಹಿನ್ನೆಲೆಯಲ್ಲಿ ಎಚ್ಚತ್ತ ಪುರಾತತ್ವ ಇಲಾಖೆ ಅಧಿಕಾರಿ ತ್ಯಾಪೆ ಸಾರಿಸೋಕೆ ಮುಂದಾಗಿದ್ದಾರೆ.
ಚಿತ್ರದುರ್ಗದ ಕಲ್ಲಿನ ಕೋಟೆ ಹಲವು ಶತಮಾನಗಳಷ್ಟು ಇತಿಹಾಸವನ್ನು ಹೊಂದಿದೆ, ಶಾತವಾಹನರ ಕಾಲದಿಂದ ಪಾಳೇಗಾರರ ಆಳ್ವಿಕೆಯ ಕಾಲದ ವರೆಗೂ ಅಭಿವೃದ್ದಿ ಹೊಂದುತ್ತಲೇ ಬಂದ ಈ ಕೋಟೆ, ಹೈದರಾಲಿ ಮತ್ತು ಟಿಪ್ಪುವಿನ ದಾಳಿಗೆ ಸಿಲುಕಿ ಅಲ್ಪಮಟ್ಟಿಗೆ ನಾಶವಾಗಿತ್ತು. ಸ್ವತಂತ್ರ್ಯಾ ನಂತರ ಭಾರತೀಯ ಪುರಾತತ್ವ ಇಲಾಖೆ ಈ ಕೋಟೆಯನ್ನ ತನ್ನ ಅಧೀನಕ್ಕೆ ಪಡೆದಿದ್ದು, ಇದೀಗ ಕೇಂದ್ರ ಸರ್ಕಾರದ ಆಡಳಿತಕ್ಕೊಳಪಟ್ಟಿದೆ.
ಈ ಕೋಟೆಯ ಸಂರಕ್ಷಣೆ ಹೊಣೆಹೊತ್ತ ಅಧಿಕಾರಿಗಳು, ಕೋಟೆಯ ಮೇಲೆ ಚಲನಚಿತ್ರಗಳನ್ನ ಚಿತ್ರೀಕರಿಸಲು ಅನುಮತಿ ನೀಡುತ್ತಿದ್ದು, ಕಳೆದ ಹದಿನೈದು ದಿನಗಳಿಂದ ಪಡ್ಡೆಹುಲಿ ಚಿತ್ರದ ಚಿತ್ರೀಕರಣ ಮಾಡುತ್ತಿದ್ದ ತಂಡ, ಪುರಾತತ್ವ ಲಾಖೆಯ ನಿಯಮಗಳನ್ನು ಗಾಳಿಗೆ ತೂರಿ, ಕೋಟೆಯ ಮೇಲೆಲ್ಲಾ ರಸಾಯನಿಕ ಮಿಶ್ರಿತ ಬಣ್ಣಗಳನ್ನ ಹರಡಿ, ಇಡೀ ಪರಿಸರವನ್ನೇ ಹಾಳು ಗೆಡವಿದೆ, ಇದನ್ನು ಕಂಡ ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದು, ಐತಿಹಾಸಿಕ ಸ್ಥಳದ ಮೂಲ ಸ್ವರೂಪಕ್ಕೆ ಧಕ್ಕೆ ತಂದವರ ವಿರುದ್ದ ಪ್ರವಾಸಿಗರಾದ ರಂಜಿತಾ ಮತ್ತು ಸ್ಥಳೀಯರಾದ ಸದಾಶಿವ ಆಕ್ರೋಶ ಹೊರಹಾಕಿದ್ದಾರೆ.
ನಿರ್ಮಾಪಕ ಕೆ.ಮಂಜು ಪುತ್ರ ಹಾಗು ಹಿರಿಯ ನಟ ಕ್ರೇಸಿ ಸ್ಟಾರ್ ರವಿಚಂದ್ರನ್ ನಟಿಸುತ್ತಿರುವ ಪಡ್ಡೇಹುಲಿ ಚಿತ್ರದ ಹಾಡಿನ ದೃಷ್ಯದ ಚಿತ್ರೀಕರಣ ಮುಗಿಸಿದ ಚಿತ್ರತಂಡ, ಐತಿಹಾಸಿಕ ಕೋಟೆಯ ಪರಿಸರವನ್ನ ಹಾಳುಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ, ಎಚ್ಚತ್ತ ಪುರಾತತ್ವ ಇಲಾಖೆ ಅಧಿಕಾರಿ, ತಮ್ಮ ಸಿಬ್ಬಂದಿಗಳ ಮೂಲಕ ಕೋಟೆಯ ಮೇಲೆಲ್ಲಾ ಹರಡಿದ್ದ ಬಣ್ಣವನ್ನ ಸ್ವಚ್ಚಗೊಳಿಸಲು ಮುಂದಾಗಿದ್ದಾರೆ.
ಆದರೆ ಕೆಮಿಕಲ್ ಯುಕ್ತ ಬಣ್ಣಗಳು ಕೋಟೆಯ ಕಲ್ಲುಗಳು, ಮೆಟ್ಟಿಲುಗಳು, ಹುಲ್ಲುಹಾಸುಗಳು ಇಡೀ ಕೋಟೆಯ ಸ್ವರೂಪವನ್ನೇ ಬದಲಿಸಿಬಿಟ್ಟಿದ್ದು, ನಿರ್ವಹಣೆಯ ಜವಬ್ದಾರಿ ಹೊತ್ತ ಅಧಿಕಾರಿ ಗಿರೀಶ್, ಹಣ ಕೊಟ್ಟರೆ ಸಾಕು ಕೋಟೆಯನ್ನೆ ಬಾಡಿಗೆ ಕೊಟ್ಟು ಬಿಡುತ್ತಾರೆ, ಅವರಿಗೆ ಸ್ಮಾರಕಗಳ ರಕ್ಷಣೆ ಬಗ್ಗೆ ಜವಬ್ದಾರಿ ಇಲ್ಲ, ಇಂತಹ ಭ್ರಷ್ಟ ಅಧಿಕಾರಿಯನ್ನ ತೊಲಗಿಸಿ, ನಮ್ಮ ಕೋಟೆಯನ್ನ ಉಳಿಸಿ ಎಂದು ದುರ್ಗದ ಜನರು ಮನವಿ ಮಾಡಿದ್ದಾರೆ.
ಒಟ್ಟಾರೆ ಸಿಡಿಲಿಗು ಜಗ್ಗದ ಉಕ್ಕಿನ ಕೋಟೆ ಎಂದೇ ಖ್ಯಾತಿ ಹೊಂದಿರುವ ಚಿತ್ರದುರ್ಗದ ಕೋಟೆ, ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಈ ಐತಿಹಾಸಿಕ ಕೋಟೆ ಇತ್ತೀಚೆಗೆ ಬಿರುಕು ಬಿಡುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಹಲವಾರು ಬಾರಿ ವರದಿ ಪ್ರಸಾರ ಮಾಡಿದರೂ ಎಚ್ಚತ್ತುಕೊಳ್ಳದ ಭಾರತೀಯ ಪುರಾತತ್ವ ಇಲಾಖೆಯ ಸರ್ವಾಧಿಕಾರಿ ಗಿರೀಶ್, ಹಣ ಸಿಗುತ್ತೆ ಅಂದ್ರೆ ಮಾತ್ರ ಕೋಟೆಯ ಮೇಲೆ ಏನು ಬೇಕಾದ್ರೂ ಮಾಡ್ಕೊಳಿ ಅನ್ನೋ ಮಟ್ಟಕ್ಕಿಳಿದಿದ್ದಾರೆ ಎಂಬ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ. ಇನ್ನಾದ್ರೂ ಸಂಬಂಧಪಟ್ಟವರು ಇತ್ತ ಗಮನ ಹರಿಸಿ, ಕೋಟೆಯನ್ನು ಉಳಿಸಬೇಕಿದೆ.
ಅಂತರಂಗ
ದಾವಣಗೆರೆ| ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ : ಜಾನಪದರನ್ನು ಅನಕ್ಷರಸ್ಥರೆನ್ನುವುದು ತಪ್ಪು : ಸಾಹಿತಿ ಕೃಷ್ಣಮೂರ್ತಿ ಹನೂರು
ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ ಬಾರದವರು ಅನಕ್ಷಸ್ಥರು ಎಂಬುದಾಗಿ ಹೇಳುವುದು ತಪ್ಪು ಎಂದು ಹಿರಿಯ ವಿದ್ವಾಂಸರಾದ ಕೃಷ್ಣಮೂರ್ತಿ ಹನೂರು ವಿಷಾದವ್ಯಕ್ತಪಡಿಸಿದರು.
ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿರಿಯಜ್ಜಿ ಪ್ರತಿಷ್ಠಾನ, ಮಾನವ ಬಂಧುತ್ವ ವೇದಿಕೆ ಹಾಗೂ ಅಮಿತ ಪ್ರಕಾಶನದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಾಂಶುಪಾಲ ಎಂ.ಮಂಜಣ್ಣ ಅವರ ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ ಮಾಡಿ ಅವರು ಮಾತನಾಡಿದರು.
ಸಿರಿಯಜ್ಜಿ ಭೇಟಿ ಮಾಡಿ ಸುಮಾರು 50ವರ್ಷ ಆಯಿತು.ಬೆಳೆಗೆರೆ ಕೃಷ್ಣಶಾಸ್ತ್ರಿಗಳ ಜೊತೆಗೆ ಮೊದಲ ಬಾರಿಗೆ ಗುಡಿಸಲಿನ ಭೇಟಿ ಮಾಡಿದ್ದೆ. ಆಡಿನ ಹಾಲು ಕರೆದು ಜತೆಗೆ ಮುದ್ದೆ ಕೊಡುತ್ತಿದ್ದರು. ಅದು 76ರ ಈ ಇಳಿವಯಸ್ಸಿನಲ್ಲೂ ನನಗೆ ಶಕ್ತಿ ಕೊಟ್ಟಿದೆ. ಪಾಶ್ಚಾತ್ಯ ವಿದ್ವಾಂಸರು 1800 ಸಂದರ್ಭದಲ್ಲಿ ದೇಶದಲ್ಲಿ ಹುಡುಕಿ ಹೊತ್ತೊಯ್ಯುವ ಕೆಲಸ ಮಾಡಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ಅವರಿಗೆ ಅಭಿಮಾನ ಇತ್ತು. ಬುಡಕಟ್ಟು ಹಟ್ಟಿಯ ಸಿರಿಯಜ್ಜಿ ದೊಡ್ಡ ವಿದ್ವಾಂಸರು. ಅರೆ ಬರ ಕನ್ನಡ ಓದಿ ಎಲ್ಲವೂ ಗೊತ್ತದೆ ಎನ್ನುತ್ತೇವೆ. ಆದರೆ, ಸಿರಿಯಜ್ಜಿ ತನ್ನ ಬೌದ್ಧಿಕ ಶಕ್ತಿಯನ್ನು ಏನೂ ಅಲ್ಲ ಎಂದು ಹೇಳುತ್ತಿದ್ದರು. ‘ಹತ್ತ ಮಕ್ಕಳ ಹೆತ್ತು ಕತ್ತಿಗೆ ಬಲಿಕೊಟ್ಟೆ’ ಎಂಬ ಮಾತು ದೊಡ್ಡದು. ಇದರಲ್ಲಿ ದೊಡ್ಡ ಸಂದೇಶ ಇತ್ತು ಎಂದು ಸ್ಮರಿಸಿದರು.
ಅವಳ ಹಾಡುಗಾರಿಕೆಯ ಕ್ರಮ ವಿಸ್ಮಯ ಮೂಡಿಸುತ್ತಿತ್ತು. ನೋವಿನ ವಾಕ್ಯದಲ್ಲಿ ಇರುವ ಅರ್ಥ ಬಹಳ ದೊಡ್ಡದು. ಚರಿತ್ರೆಯನ್ನು ನಾಲ್ಕು ಪದಗಳಲ್ಲಿ ವಿಶ್ಲೇಷಣೆ ಮಾಡಿದಳು. . 100ಕ್ಕೂ ಹೆಚ್ಚು ತ್ರಿಪದಿಯಲ್ಲಿ ಸಿರಿಯಜ್ಜಿ ಹಾಡಿದ್ದಾಳೆ. ಸಮಾಜಿಕ, ಐತಿಹಾಸಿಕ, ಸಂತೋಷದ ಸಂಗತಿ, ಮಳೆರಾಯನ ಕುರಿತು ಹಾಡು ಹೇಳಿದ್ದಾಳೆ. ಮದುವೆ ಸಂಭ್ರದ ಸಾವಿರಾರು ತ್ರಿಪದಿ ಅವಳಲ್ಲಿದ್ದವು.ಶಿಷ್ಟ ಮತ್ತು ಜಾನಪದ ಸಾಹಿತ್ಯ ಈ ಎರಡರಲ್ಲೂ ಕೆಟ್ಟದ್ದು ಒಳ್ಳೆಯದು ಇದೆ. ಇದರ ಬಗೆಗೆ ಇನ್ನೂಹೆಚ್ಚಿನ ಅಧ್ಯಯನ ನಡೆಸಿ ಪ್ರಾಧ್ಯಾಪಕರು ಚರ್ಚಿಸಬೇಕಿದೆ. ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು.
ಅನಕ್ಷರಸ್ಥರಲ್ಲಿ ಕೂಡ ವಿದ್ವಾಂಸರು ಇದ್ದಾರೆ. ಸಿರಿಯಜ್ಜಿ ರೀತಿಯವರು ಅಸಂಖ್ಯಾತರಷ್ಟು ಇದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿ ಮಾನವನನ್ನೇ ನಾಶ ಮಾಡುತ್ತಿದೆ. ಜನಪದರ, ಗ್ರಾಮೀಣ ಪ್ರದೇಶದ ಒಳಿತನ್ನು ಸ್ವೀಕರಿಸುವ ಮನೋಭಾವ ಉಳಿಸಿಕೊಳ್ಳೋಣ’.ಎ.ಕೆ.ರಾಮಾನುಜನ್, ಎಸ್.ಎಲ್.ಭೈರಪ್ಪ, ಗುಂಡೂರಾವ್, ಎಚ್.ಕೆ.ರಂಗನಾಥ್ ಸೇರಿ ಅನೇಕರು ಸಿರಿಯಜ್ಜಿ ಹುಡುಕಿಕೊಂಡು ಬಂದಿದ್ದರು. ಪ್ರಾಧ್ಯಾಪಕರು ಇದನ್ನು ಗುರುತಿಸಿ ಹೇಳಬೇಕು. ಮಕ್ಕಳಿಗೆ ಪಾಠ ಮಾಡಿದರೆ ಪ್ರಾಧ್ಯಾಪಕರ ಕಾರ್ಯ ಮುಗಿಯುದಿಲ್ಲ ಎಂದು ಕಿವಿಮಾತು ಹೇಳಿದರು.
ಅನಕ್ಷರಸ್ಥರು ಎಂದು ಹೇಳುವುದು ನಮ್ಮ ಅಜ್ಞಾನ ತೋರಿಸುತ್ತದೆ. ವಿಶ್ವವಿದ್ಯಾಲಯದ್ದು ಸೀಮಿತ ಪಠ್ಯ, ಜಾನಪದದ್ದು ಅಲಿಖಿತ ಸಂವಿಧಾನ, ಅಪರಿಮಿತ ಪಠ್ಯ ಇದು ಕೂಡ ಮುಖ್ಯ.‘ಸಾವಿರದ ಸಿರಿ ಬೆಳಕು’ ಹಂಪಿ ವಿಶ್ವವಿದ್ಯಾಲಯ ಹೊರತಂದಿದೆ. ಅಪ್ರಕಟಿತ ಗೀತೆಗಳು ಇನ್ನೂ ಇವೆ. ಅಕ್ಷರಕ್ಕೆ ಅಳಿವಿಲ್ಲ. ದೇಶದ ಉತ್ತಮ ಸಂಗತಿ, ಪಳಯುಳಿಕೆ ಅಮೆರಿಕಾ, ಇಂಗ್ಲೆಂಡ್ ನಲ್ಲಿವೆ.ಎಚ್ಚರಿಕೆ, ಗಮನ ಹರಿಸಬೇಕು ಪ್ರಾಧ್ಯಾಪಕರು. ಮಕ್ಕಳ ಆಸ್ತಿ ಯಾವುದು ಎಂಬುದನ್ನು ನಾವು ಮನವರಿಕೆ ಮಾಡಿಕೊಡಬೇಕಿದೆ ಎಂದು ಹಂಪಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಎಸ್.ಎಂ.ಮುತ್ತಯ್ಯ ಅಭಿಪ್ರಾಯಪಟ್ಟರು.
ಮನುಷ್ಯರೆಂಬಂತೆ ಸಮಾಜ ಕಾಣದ ಸಮುದಾಯದ ಮಹಿಳೆ ಬಗ್ಗೆ ನಡೆಸಿದ ಅಧ್ಯಯನಕ್ಕೆ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಚಿಕ್ಕ ಸಂಗತಿಗೂ ನಿರ್ಬಂಧ ಹೇರುವ ಸಮುದಾಯದಲ್ಲಿ ದೊಡ್ಡ ಕಲಾವಿದೆಯೊಬ್ಬರೂ ಹೊರಹೊಮ್ಮಿದ ರೀತಿ ವಿಸ್ಮಯ ಮೂಡಿಸುತ್ತದೆ.ಸಿರಿಯಜ್ಜಿ ಸೃಷ್ಟಿಸಿದ್ದು ಸಾಹಿತ್ಯ ಅಲ್ಲ. ಇದು ಸಮುದಾಯಕ್ಕೆ ಪರಂಪರಾಗತವಾಗಿ ಬಂದದ್ದು. ಇದು ಕಾಡುಗೊಲ್ಲ ಮಾತ್ರವಲ್ಲ ಪಶುಪಾಲನಾ ಸಮುದಾಯದ ಅಸ್ಮಿತೆ ಕೂಡ ಹೌದು. ಕಾಡಲ್ಲಿ ಕುರಿ, ಜಾನುವಾರು ಕಾಯುತ್ತ ಬದುಕುತ್ತಿದ್ದ ಸಮುದಾಯದ ಕಲೆಗಳಿಗೆ ಮಾನ್ಯತೆ ಸಿಕ್ಕಿರಲಿಲ್ಲ. ಸಾಹಿತ್ಯ ಪರಂಪರೆಯಲ್ಲಿ ಜಾನಪದಕ್ಕೆ ಮಾನ್ಯತೆ ಸಿಕ್ಕಿದ್ದು ಜಿ.ಶಂ.ಪರಮಶಿವಯ್ಯ ಹಾಗೂ ಹಾ.ಮಾ.ನಾಯಕ ಸಾಕಷ್ಟು ಕಷ್ಟಪಟ್ಟಿದ್ದಾರೆ. ಜಾನಪದ ಸಾಹಿತ್ಯ ಕೂಡ ಸಂಶೋಧನೆಗೆ ಯೋಗ್ಯ ಕ್ಷೇತ್ರ ಮತ್ತು ವಸ್ತು ಎಂಬುದನ್ನು ಒಪ್ಪಿಸಲು ಸಾಕಷ್ಟು ಶ್ರಮಿಸಬೇಕಾಯಿತು ಎಂದು ಮೆಲುಕುಹಾಕಿದರು.
ಜಾನಪದ ಅಧ್ಯಯನ ವಿಸ್ತರಣೆ ಕಂಡ, ಮುಖ್ಯ ವಾಹಿನಿಯಲ್ಲಿ ಸ್ಥಾನ ಪಡೆದುಕೊಂಡ ಮೂರನೇ ಘಟ್ಟವಾಗಿ ಈ ಕೃತಿ ನೋಡಬೇಕು. ಶೈಕ್ಷಣಿಕ ಅಧ್ಯಯನದ ವಸ್ತವಾಗಿ ಸಿರಿಯಜ್ಜಿ ಪರಿಣಿಸಿ ಸಂಶೋಧನೆಗೆ ಒಳಪಡಿಸಿದ್ದಕ್ಕೆ ಹೆಮ್ಮೆ ಪಡಬೇಕು. ಜಾನಪದ ಅಧ್ಯಯನದ ಇತಿಹಾಸದಲ್ಲಿ ಹೊಸದೊಂದು ಪರ್ವ ಶುರು ಆಗಿದೆ.ಕಾಡು ಗೊಲ್ಲರಂತಹ ನಿರ್ಬಂಧಿತ ಸಮುದಾಯದ ಮಹಿಳೆಯೊಬ್ಬರು ಇಷ್ಟು ಎತ್ತರಕ್ಕೆ ಬೆಳೆಯುವ ಅವಕಾಶ ಸಿಕ್ಕಿದ್ದು ವಿಸ್ಮಯ. ಅವರ ಒಳಗಿನ ಆಸಕ್ತಿ, ಪ್ರಯತ್ನ ಹಾಗೂ ಕುಟುಂಬದ ಬೆಂಬಲದ ಕಾರಣಕ್ಕೆ ಅವಳಿಗೆ ಇದು ಸಾಧ್ಯ ಆಯಿತು. ಕಾಡಗೊಲ್ಲರ, ಸಾಂಸ್ಕೃತಿಕ ವೀರರ ಆರಾಧ್ಯ ದೈವ, ಬೇರೆ ಸಮುದಾಯದ ದೈವಗಳ ಬಗ್ಗೆ ಸಿರಿಯಜ್ಜಿ ಹಾಡಿದ್ದಾರೆ. ಹಾಡುವ ಸಾಹಿತ್ಯದಲ್ಲಿ ಭೇದ ಮಾಡಿಲ್ಲ. ಸಾಹಿತ್ಯದ ಪದ-ಪದದ ವಿವರಗಳನ್ನು ಅವಳು ನೀಡುತ್ತಿದ್ದಳು. ಕಾವ್ಯ ಅವಳ ಬದುಕಿನ ಭಾಗ ಆಗಿತ್ತು. ಹೀಗಾಗಿ ಅವಳು ನಿರರ್ಗಳವಾಗಿ ಹಾಡುತ್ತದ್ದಳು. ಆದರೆ, ಒಬ್ಬ ವ್ಯಕ್ತಿ ಇಷ್ಟು ಪದಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೇ ಎಂಬ ಪ್ರಶ್ನೆ ಮೂಡುತ್ತದೆ ಎಂದರು.
ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಎ.ಬಿ.ರಾಮಚಂದ್ರಪ್ಪ, ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ್ ಕಲಮರಹಳ್ಳಿ, ಸಿರಿಯಜ್ಜಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ, ಕಲಾವಿದೆ ಸಿರಿಯಮ್ಮ, ಜಿ.ಕೆ.ಪ್ರೇಮಾ, ಅಮಿತ ಪ್ರಕಾಶನದ ಶಾರದಮ್ಮ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ
ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗದು ರಹಿತ ಚಿಕಿತ್ಸೆ ಯೋಜನೆಯ ತ್ವರಿತ ಜಾರಿಗೆ ಒತ್ತಾಯಿಸುವುದು, 2026ಕ್ಕೆ ಕೇಂದ್ರ ಸರ್ಕಾರದ ಮಾದರಿ ವೇತನಕ್ಕಾಗಿ ಹೋರಾಟ ರೂಪಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಿ ಆಂಡ್ ಆರ್ ನಿಯಮಕ್ಕೆ ತಿದ್ದುಪಡಿ ತರುವಂತೆ ಆಗ್ರಹಿಸಿ, ನಡೆಸಲಾಗುವ ಹೋರಾಟವನ್ನು ಬೆಂಬಲಿಸುವುದು, ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್ಗಳಿಗೆ ಶೀಘ್ರವೇ ಹಣ ಬಿಡುಗಡೆ ಮಾಡಿಸುವ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಿ.ಎಸ್.ಷಡಕ್ಷರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ
ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿದೆ. ಸಂಗೊಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರಾತಃಕಾಲದ ಪೂಜೆ ಸಲ್ಲಿಸಲಾಯಿತು.
ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಜ್ಯೋತಿಯನ್ನು ಸ್ವಾಗತಿಸಿದರು. ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ, ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದ ಆವರಣದಲ್ಲಿ ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು.
ಪೂರ್ಣ ಕುಂಭ ಹೊತ್ತ ಮಹಿಳೆಯರು, ಪೂಜಾ ಕುಣಿತ, ನಂದಿಕೋಲು, ವೀರಗಾಸೆ, ಡೊಳ್ಳು, ಬೊಂಬೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಉತ್ಸವಕ್ಕೆ ಮೆರುಗು ತಂದಿತು. ಸಂಗೊಳ್ಳಿ ರಾಯಣ್ಣ ಸ್ಮಾರಕದ ಬಳಿಯಿಂದ ಆರಂಭಗೊಂಡ ಕಲಾವಾಹಿನಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಇಂದು ಸಂಜೆ 8 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉತ್ಸವದ ಅಧಿಕೃತ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ನಾಳೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವೀರರ ಸ್ಮರಣಾರ್ಥ ದೀಪೋತ್ಸವ, ರಾಯಣ್ಣನ ಕುರಿತಾದ ವಿಚಾರ ಸಂಕಿರಣ, ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಸೇರಿದಂತೆ ಇತರೆ ಸ್ಪರ್ಧೆಗಳು ನಡೆಯಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243