ದಿನದ ಸುದ್ದಿ

ಪೌರಕಾರ್ಮಿಕರ ಹೋರಾಟಕ್ಕೆ ಕೈಜೋಡಿಸಿದ ಆಮ್‌ ಆದ್ಮಿ ಪಾರ್ಟಿ

Published

on

ಸುದ್ದಿದಿನ ಡೆಸ್ಕ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪೌರಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಪಕ್ಷದ ಮುಖಂಡರು ಕೈಜೋಡಿಸಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ, “ಆಮ್‌ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್‌ನಲ್ಲಿ ಪೌರ ಕಾರ್ಮಿಕರನ್ನು ಚುನಾವಣೆಗೆ ನಿಲ್ಲಿಸಿ, ಶಾಸಕರನ್ನಾಗಿ ಮಾಡಿದೆ. ಈ ಮೂಲಕ ಪೌರ ಕಾರ್ಮಿಕರ ಭಾವನೆಗಳಿಗೆ ರಾಜಕೀಯ ಬಲ ದೊರಕಿಸಿಕೊಟ್ಟಿದೆ. ಆದರೆ ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಗೆ ಪೌರಕಾರ್ಮಿಕರ ನೋವುಗಳನ್ನು ಕಾಣಿಸುತ್ತಿಲ್ಲ. ಪೌರ ಕಾರ್ಮಿಕರು ಪದೇಪದೇ ಪ್ರತಿಭಟನೆ ನಡೆಸುತ್ತಿದ್ದರೂ ಸ್ಪಂದಿಸದೇ ಬಿಜೆಪಿ ಸರ್ಕಾರವು ಮೊಂಡುತನ ಪ್ರದರ್ಶಿಸುತ್ತಿದೆ” ಎಂದು ಹೇಳಿದರು.

“ಪೌರಕಾರ್ಮಿಕರಿಗೆ ಸರ್ಕಾರವು ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು, ಸಮಾನ ಕೆಲಸಕ್ಕೆ ಸಮಾನ ವೇತನ, ಗ್ರಾಚ್ಯುಟಿ, ಹೆರಿಗೆ ಭತ್ಯೆ, ರಜಾ ದಿನಗಳನ್ನು ನೀಡಬೇಕು. ಅವರನ್ನು ನೇರ ನೇಮಕಾತಿ ಮಾಡಿಕೊಳ್ಳುವ ವ್ಯವಸ್ಥೆ ಬರಬೇಕು. ಜೊತೆಗೆ, ಅಗತ್ಯವಿರುವಲ್ಲಿ ಅವರಿಗಾಗಿ ಶೌಚಾಲಯ ನಿರ್ಮಾಣ ಮಾಡಬೇಕು. ಅವರಿಗೆ ರಜಾ ಸೌಲಭ್ಯ ನೀಡಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಹಣ ನೀಡಬೇಕು. ಸರ್ಕಾರವು ಇನ್ನಾದರೂ ಈ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವ ಬಗ್ಗೆ ಗಮನ ನೀಡಬೇಕು” ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಮಾತನಾಡಿ, “ಪ್ರತಿಭಟನಾನಿರತ ಪೌರಕಾರ್ಮಿಕರಿಗೆ ಆಮ್‌ ಆದ್ಮಿ ಪಾರ್ಟಿಯ ಸಂಪೂರ್ಣ ಬೆಂಬಲವಿದೆ. ಒಂದು ದಿನ ಪೌರ ಕಾರ್ಮಿಕರು ಕೆಲಸಕ್ಕೆಂದು ರಸ್ತೆಗಿಳಿಯದೇ ಹೋದರೆ ತ್ಯಾಜ್ಯ ವಿಲೇವಾರಿ ಸಮಸ್ಯೆ ಉಲ್ಭಣಗೊಂಡು ಜನ ಮೂಗು ಮುಚ್ಚಿಕೊಂಡು ಓಡಾಡಬೇಕಾಗುತ್ತದೆ. ಸಫಾಯಿ ಕರ್ಮಾಚಾರಿ, ಸ್ವೀಪರ್ ಸೇರಿದಂತೆ ಪೌರಕಾರ್ಮಿಕರಿಗೆ ಅಲ್ಪ ಪ್ರಮಾಣದ ವೇತನ ನೀಡಲಾಗುತ್ತಿದೆ. ಇದರಿಂದ ಮೂಲ ಅಗತ್ಯಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅವರನ್ನು ಖಾಯಂ ನೇಮಕಾತಿ ಮಾಡಬೇಕು” ಎಂದು ಆಗ್ರಹಿಸಿದರು.

“2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಪೌರಕಾರ್ಮಿಕರ ಖಾಯಮಾತಿಗೆ ಕೇವಲ ಅನುಮೋದನೆ ನೀಡಿತೇ ಹೊರತು ಅನುಷ್ಠಾನಕ್ಕೆ ತರಲಿಲ್ಲ. ಬಳಿಕ ಅಧಿಕಾರಕ್ಕೆ ಬಂದ ಯಾವ ಸರ್ಕಾರಗಳು ಕೂಡ ಈ ಬಗ್ಗೆ ಗಮನಹರಿಸಲಿಲ್ಲ. ಪೌರಕಾರ್ಮಿಕರ ವಿಶೇಷ ನೇಮಕಾತಿ ನಿಯಮ 2017ರಲ್ಲಿ ರಸ್ತೆ ಸ್ವಚ್ಛಗೊಳಿಸುವವರನ್ನು ಮಾತ್ರ ಪೌರಕಾರ್ಮಿಕರೆಂದು ಪರಿಗಣಿಸಲಾಗಿದೆ. ಒಳಚರಂಡಿ ಶುಚಿಗೊಳಿಸುವ ಕಾರ್ಮಿಕರು, ಕಸ ತೆಗೆಯುವವರು, ಕಸದ ಲಾರಿ ಚಾಲಕರು, ಕಸ ಲೋಡ್ ಮಾಡುವವರು, ಸಹಾಯಕರು ಗುತ್ತಿಗೆ ಆಧಾರದಲ್ಲೇ ಕಾರ್ಯನಿರ್ವಹಿಸುತ್ತಿದ್ದು, ಅವರಿಗೂ ಸರ್ಕಾರದ ಸೌಲಭ್ಯಗಳು ಸಿಗುವಂತಾಗಬೇಕು” ಎಂದು ಭಾಸ್ಕರ್‌ ರಾವ್‌ ಒತ್ತಾಯಿಸಿದರು.

ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಮೋಹನ್‌ ದಾಸರಿ, ಜಗದೀಶ್‌ ವಿ ಸದಂ, ಮುಕುಂದ್‌ ಗೌಡ, ಜ್ಯೋತೀಶ್‌ ಕುಮಾರ್‌ ಮತ್ತಿತರರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version