ದಿನದ ಸುದ್ದಿ
ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿ.ಎಂ ಮಾರ್ಗದರ್ಶಿ ಕಾರ್ಯಕ್ರಮ : ಮುಖ್ಯಮಂತ್ರಿ ಬೊಮ್ಮಾಯಿ
ಸುದ್ದಿದಿನ,ಉಡುಪಿ: ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಈ ಬಾರಿಯ ಬಜೆಟ್ನಲ್ಲಿ ಸಿಎಂ ಮಾರ್ಗದರ್ಶಿ ಎಂಬ ಯೋಜನೆ ರೂಪಿಸಿದ್ದು, ಯುವಜನತೆ ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಸೋಮವಾರ ನಗರದ ಅಜ್ಜರಕಾಡು ಪುರಭವನದ ಬಳಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿದ್ಯಾ ವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಮತ್ತು ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಕಟ್ಟಡ ಡಿಜಿಟಲ್ ಗ್ರಂಥಾಲಯ ಹಾಗೂ ಡಾ.ಬನ್ನಂಜೆ ಗೋವಿಂದಾಚಾರ್ಯರವರ ಪುತ್ಥಳಿ ಅನಾವರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಿಎಂ ಮಾರ್ಗದರ್ಶಿ ಯೋಜನೆಯ ಮೂಲಕ, ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು, ಪರೀಕ್ಷಾ ವಿಧಾನ, ಹಿಂದಿನ ಪ್ರಶ್ನೆ ಪತ್ರಿಕೆಗಳನ್ನು ಸಾಫ್ಟ್ವೇರ್ನಲ್ಲಿ ಅಳವಡಿಸಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಮನೆಯಲ್ಲಿ ಕುಳಿತು ತಮ್ಮ ಕಂಪ್ಯೂಟರ್, ಮೊಬೈಲ್, ಲ್ಯಾಪ್ ಟಾಪ್ ಮೂಲಕ ಅಧ್ಯಯನ ಮಾಡಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸಾಧ್ಯವಾಗಲಿದೆ ಎಂದರು.
ಇಂದಿನ ಯುವ ಜನತೆಯಲ್ಲಿ ಬಹಳಷ್ಟು ವಿಚಾರಗಳ ಬಗ್ಗೆ ಸ್ಪಷ್ಟತೆ ಇದೆ. ದೇಶದ ಬಗ್ಗೆ, ನಾಡಿನ ಬಗ್ಗೆ, ಬದುಕಿನ ಬಗ್ಗೆ, ಆದರ್ಶಗಳನ್ನು ತುಂಬಿಕೊಂಡಿದ್ದಾರೆ. ಯುವಕರು ತಾವು ನಂಬಿರುವ ಆದರ್ಶಗಳನ್ನು ಎಂದಿಗೂ ಕೈ ಬಿಡಬಾರದು ಅವೇ ಅವರಿಗೆ ದಾರಿದೀಪ. ನಿಮ್ಮ ಮೇಲೆ ನಂಬಿಕೆ ಇಡಿ, ಯುವಕರು ತಮ್ಮ ಅಸ್ಥಿತ್ವ ಮತ್ತು ಸಾಧನೆ ಮೇಲೆ ನಂಬಿಕೆ ಇಟ್ಟುಕೊಂಡಲ್ಲಿ ಇಡೀ ಜಗತ್ತು ಗೆಲ್ಲಬಹುದು. ಚಾರಿತ್ರ್ಯವಂತ ಸಮಾಜ ನಿರ್ಮಾಣವಾದಲ್ಲಿ ದೇಶ ಸದೃಢವಾಗಲಿದೆ. ಆದ್ದರಿಂದ ಮಹನೀಯರ ಆಚರಣೆಗಳನ್ನು ಪಾಲಿಸಬೇಕು ಎಂದರು.
ತತ್ವಜ್ಞಾನ ಮತ್ತು ವಿಜ್ಞಾನ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ವಿಶ್ವದ ಬಹಳಷ್ಟು ವಿಜ್ಞಾನಿಗಳು ತತ್ವಜ್ಞಾನದಿಂದ ಪ್ರಭಾವಿತರಾಗಿ ಸಾಧನೆಗಳನ್ನು ಮಾಡಿದ್ದಾರೆ. ತತ್ವಜ್ಞಾನದ ಮೂಲಕ ಸರಿ ತಪ್ಪುಗಳು ಚಿಂತನೆ ಮೂಡಲಿದೆ. ಉಡುಪಿಯಲ್ಲಿ ಆರಂಭಿಸಿರುವ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಗ್ರಂಥಾಲಯದಲ್ಲಿ ತತ್ವಜ್ಞಾನ ಮತ್ತು ತಂತ್ರಜ್ಞಾನವನ್ನು ಒಟ್ಟಿಗೆ ಕಲಿಯುವ ಅವಕಾಶವಿದ್ದು, ಡಿಜಿಟಲ್ ಲೈಬ್ರರಿಯಲ್ಲಿನ ಸಾಫ್ಟ್ವೇರ್ ನಿರಂತರವಾಗಿ ಅಪ್ಡೇಟ್ ಆಗುತ್ತಿರುವಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿಗಳು ಹೇಳಿದರು.
ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಶ್ರೀಪಾದರು ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.ಉಡುಪಿ ಶಾಸಕ ರಘುಪತಿ ಭಟ್ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಶಾಸಕ ಲಾಲಾಜಿ.ಆರ್.ಮೆಂಡನ್, ವಿಧಾನಪರಿಷತ್ ಶಾಸಕ ಮಂಜುನಾಥ ಭಂಡಾರಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಎಸ್. ಹೊಸಮನಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಎಸ್ಪಿ ವಿಷ್ಣುವರ್ಧನ್, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ, ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ, ಬನ್ನಂಜೆ ಗೋವಿಂದಾಚಾರ್ಯರ ಪುತ್ರ ವಿನಯ ಭೂಷಣ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


