ದಿನದ ಸುದ್ದಿ
ಇಂದು ಕೊಡಗಿನಲ್ಲಿ ಮತ್ತೆ ಸಿ.ಎಂ. ವೈಮಾನಿಕ ಸಮೀಕ್ಷೆ
ಸುದ್ದಿದಿನ ಡೆಸ್ಕ್: ಮೈಸೂರು-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಬೆಳಗ್ಗೆ 10.00 ಗಂಟೆಗೆ ಮೈಸೂರಿನಿಂದ ಹೊರಟು ಕೊಡಗು ಜಿಲ್ಲೆಗೆ ತೆರಳಿ ವೈಮಾನಿಕ ಸಮೀಕ್ಷೆ ನಡೆಸುವರು. ಶನಿವಾರದಂದು ವೈಮಾನಿಕ ಸಮೀಕ್ಷೆ ನಡೆಸಿದ ಅವರು ಅಂದು ವೀಕ್ಷಿಸದ ಸ್ಥಳದಲ್ಲಿ ಇಂದು ವೈಮಾನಿಕ ಸಮೀಕ್ಷೆ ನಡೆಸುವರು. ಹವಾಮಾನ ಪರಿಸ್ಥಿತಿ ಅನುಕೂಲಕರವಾಗಿದ್ದಲ್ಲಿ, ಪಿರಿಯಾಪಟ್ಟಣ ಹೆಲಿಪ್ಯಾಡ್ನಲ್ಲಿ ಇಳಿದು ಕೊಡಗು ಜಿಲ್ಲೆಯ ಪರಿಹಾರ ಕಾಮಗಾರಿಗಳನ್ನು ಪುನರ್ ಪರಿಶೀಲನೆ ನಡೆಸುವರು.
ಇಂದು ಬೆಳಗ್ಗೆ ಮೈಸೂರಿನಲ್ಲಿ ಮೊಕ್ಕ ಮಾಡಿರುವ ಅವರು ಕೊಡಗು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚಿಸಿದರು. ಶನಿವಾರ 317 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು ಭಾನುವಾರ ಮಕ್ಕಂದೂರು ಸುತ್ತಾಮುತ್ತಲ ಪ್ರದೇಶದ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಸೇನಾ ಪಡೆ ಹಾಗೂ ಎನ್.ಡಿ.ಆರ್.ಎಫ್. ತಂಡ ಕಾರ್ಯೋನ್ಮುಖವಾಗಿವೆ.
31 ಗಂಜಿ ಕೇಂದ್ರಗಳಿಗೆ ಅಗತ್ಯವಾದ ಆಹಾರ ವ್ಯವಸ್ಥೆಯನ್ನು ನಿರ್ವಹಿಸಲಾಗಿದೆ. ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಹಾಲು, ಅಕ್ಕಿ, ಬೇಳೆ ಇತರೆ ಧಾನ್ಯಗಳನ್ನು ಪೂರೈಸಲಾಗಿದ್ದು, ಲೋಕೋಪಯೋಗಿ ಸಚಿವರಾದ ಹೆಚ್.ಡಿ. ರೇವಣ್ಣ ಅವರು ಸ್ಥಳಕ್ಕೆ ಆಗಮಿಸಿ, ಪರಿಹಾರ ಕ್ರಮಗಳ ಪರಿಶೀಲನೆ ನಡೆಸಿದ್ದಾರೆ ಎಂದು ಕೊಡಗು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.