ದಿನದ ಸುದ್ದಿ
ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.
ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ.
ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು.
ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.
ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.
ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.
ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ.
ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.
ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.
ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.
ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.
ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.
ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ.
ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.
ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.
ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.
ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.
ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ.
ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ.
ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ.
ಸತ್ಯಮೇವ ಜಯತೇ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ23 hours agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ23 hours agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

