ದಿನದ ಸುದ್ದಿ
ಹೈಕಮಾಂಡ್ ನಿರ್ಧಾರದಂತೆ ಸಿಎಂ ಆಯ್ಕೆ : ವಿಪಕ್ಷ ನಾಯಕ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರ. ಯಾರು ಸಿಎಂ ಆಗಬೇಕೆಂದು ಹೊಸದಾಗಿ ಆಯ್ಕೆಯಾದ ಶಾಸಕರ ಅಭಿಪ್ರಾಯದ ಮೇಲೆ ತೀರ್ಮಾನಕ್ಕೆ ಬರಲಾಗುತ್ತದೆ. ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಅವರು ನಾನೇ ಸಿಎಂ ಎಂದು ಎಲ್ಲಿಯೂ ಹೇಳಿಲ್ಲ. ನನಗೇನೂ ಗೊತ್ತಿಲ್ಲ. ನಿಮಗೇನಾದರೂ ಹೇಳಿದ್ದರಾ. ನಾವು ಅಧಿಕಾರಕ್ಕೆ ಬರುವ ಬಗ್ಗೆ ಮಾತ್ರ ನಮ್ಮ ಯೋಚನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಶಾಮನೂರು ಶಿವಶಂಕರಪ್ಪರ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚುನಾವಣೆಗೆ ಎಂಟು ತಿಂಗಳಿದೆ. ಚುನಾವಣೆಗೂ ನನ್ನ ಜನುಮ ದಿನದ ಆಚರಣೆಗೂ ಸಂಬಂಧ ಇಲ್ಲ. ನೂರಕ್ಕೆ ನೂರು ಕಾಂಗ್ರೆಸ್ ಪಕ್ಷ 2023ರ ವಿಧಾನಸಭಾ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ. 150 ಸ್ಥಾನ ಗೆಲ್ಲಬೇಕೆಂಬ ಗುರಿ ಇದೆ ಎಂದು ತಿಳಿಸಿದರು.
ಆಗಸ್ಟ್ 3ಕ್ಕೆ ನನಗೆ 75 ವರ್ಷ ತುಂಬುತ್ತಿದೆ. ಹಾಗಾಗಿ ಅಮೃತ ಮಹೋತ್ಸವ ನಡೆಸಲಾಗುತ್ತಿದೆ. ಇದು ಸಿದ್ದರಾಮೋತ್ಸವ ಅಲ್ಲ. ಮಾಧ್ಯಮದವರು ಹಾಗೂ ಆರ್ ಎಸ್ ಎಸ್ ನವರು ಈ ರೀತಿ ಕರೆಯುತ್ತಿದ್ದಾರೆ. ಯಾವುದೇ ವ್ಯಕ್ತಿಗೆ 75 ಹಾಗೂ ನೂರು ವರ್ಷದ ಜನುಮ ದಿನದ ಆಚರಣೆ ಒಂದು ಮೈಲಿಗಲ್ಲು. ನಾನು ಹಿಂದೆಯೂ ಹುಟ್ಟು ಹಬ್ಬ ಆಚರಿಸಿಲ್ಲ. ಮುಂದೆಯೂ ಮಾಡಿಕೊಳ್ಳುವುದಿಲ್ಲ. ಈ ಗಳಿಗೆ ಸ್ಮರಣೀಯ ಮಾಡಿಕೊಳ್ಳಬೇಕೆಂಬ ದೃಷ್ಟಿಯಿಂದ ಹತೈಷಿಗಳು, ಅಭಿಮಾನಿಗಳು, ಪಕ್ಷದ ನಾಯಕರೆಲ್ಲರೂ ಸೇರಿ ದಾವಣಗೆರೆಯಲ್ಲಿ ಮಾಡುತ್ತಿದ್ದಾರೆ. ಮಾಜಿ ಸಚಿವರಾದ ಆರ್. ವಿ. ದೇಶಪಾಂಡೆ, ಕೆ. ಎನ್. ರಾಜಣ್ಣ, ಬಸವರಾಜ ರಾಯರೆಡ್ಡಿ, ಭೈರತಿ ಸುರೇಶ್, ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್, ಹೆಚ್. ಸಿ. ಮಹಾದೇವಪ್ಪ, ಸಂಸದರು, ಶಾಸಕರು, ರಾಜ್ಯಸಭಾ ಸದಸ್ಯರು, ಅಭಿಮಾನಿಗಳು ಹಾಗೂ ಕಾರ್ಯಕರ್ತರೆಲ್ಲರೂ ಸೇರಿಕೊಂಡು ಈ ಕಾರ್ಯಕ್ರಮ ನಡೆಸುತ್ತಿದ್ದಾರೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243