ದಿನದ ಸುದ್ದಿ
ನುಡಿಯ ಒಡಲು – 16 | ವಿಚಾರ ಸಂವಹನ : ತೊಡಕುಗಳೆಂತಹವು..?
- ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ವಿಚಾರ ಎಂಬ ಪರಿಕಲ್ಪನೆಯ ಅರ್ಥ ವ್ಯಾಪ್ತಿ ದೊಡ್ಡದು. ಇದರ ತಾತ್ವಿಕ ಚೌಕಟ್ಟನ್ನು ಕುರಿತು ವಿಶ್ಲೇಷಣೆ ಮಾಡುವ ಬದಲಾಗಿ, ಈ ಪರಿಕಲ್ಪನೆಯ ತಾತ್ವಿಕ ಪರಿಣಾಮಗಳ ಬಗೆಗೆ ಮಾತ್ರ ಇಲ್ಲಿ ಚರ್ಚಿಸುತ್ತೇನೆ. ಏಕೆಂದರೆ ಬಹುತೇಕ ಸನ್ನಿವೇಶದಲ್ಲಿ ಓದುಗರನ್ನು ಗಮನದಲ್ಲಿಟ್ಟುಕೊಂಡು ಬರೆಯಬೇಕು ಎನ್ನುವ ಅಭಿಪ್ರಾಯಗಳನ್ನು ಕೇಳುತ್ತೇವೆ ಹಾಗೂ ಹೇಳುತ್ತಿರುತ್ತೇವೆ.
ಅಂದರೆ ಬರೆಯುವವರು ಮತ್ತು ಓದುವವರು ಬೇರೆ ಬೇರೆ ವರ್ಗಕ್ಕೆ ಸೇರಿದ್ದೇವೆ ಎಂಬ ಸಾಮಾನ್ಯ ತಿಳಿವಳಿಕೆ ಇಲ್ಲಿದೆ. ಇಂತಹದೊಂದು ನಿಲುವು ಯಾಕೇ ತಲೆಯೆತ್ತಿದೆ ಎಂದು ಕೇಳಿದರೆ, ಈ ಪ್ರಶ್ನೆಗೆ ಉತ್ತರಿಸುವುದು ದುಸ್ತರ. ಸಂವಹನ ನಡೆಸುವ ಪ್ರತೀ ಸಂದರ್ಭದಲ್ಲಿಯೂ ನಾವಾಡುವ ಮಾತುಕತೆ, ಭಾಷಣ, ಪ್ರವಚನ, ಸಂಭಾಷಣೆ ಹಾಗೂ ಬರೆಯುವ ಸಂಕಥನಗಳನ್ನು ಎರಡು ರೀತಿಯಲ್ಲಿ ವಿಂಗಡಿಸುತ್ತೇವೆ.
ಅಂದರೆ ಅರ್ಥ ಮಾಡಿಕೊಳ್ಳುವ ಬಗೆಗಳನ್ನು ಸಾಮಾನ್ಯವಾಗಿ ಸಂವಹನಶೀಲವಾಗಿದೆ ಎಂದು ಇಲ್ಲವೇ ಸಂವಹನ ಸಹಜವಾಗಿಲ್ಲವೆಂದು ಹೇಳುತ್ತಿರುತ್ತೇವೆ. ಸಂವಹನ ಪ್ರಕ್ರಿಯೆಯಲ್ಲಿ ಎದುರಾಗುವ ಬಿಕ್ಕಟ್ಟುಗಳಿಗೆ ಏನು ಕಾರಣಗಳಿರಬಹುದು ಎಂದು ಕೇಳಿದರೆ, ಆಯಾ ವ್ಯಕ್ತಿ ಬಳಸುವ ಭಾಷೆಯ ಸ್ವರೂಪ, ನಿರೂಪಣೆ ಮತ್ತು ವಾಕ್ಯಸರಣಿಗಳಲ್ಲಿಯೇ ತೊಡಕುಗಳಿವೆ ಎಂದು ಹೇಳುತ್ತೇವೆ. ಇಡಿಯಾಗಿ ಇದನ್ನು ಸಂಕೀರ್ಣ ಸ್ಥಿತಿಯೆಂದು ಗುರುತಿಸುತ್ತೇವೆ.
ಈ ಸಂಕೀರ್ಣತೆ ಭಾಷೆಗೆ ಸಂಬಂಧಿಸಿದ ಸಂಗತಿಯೋ? ಇಲ್ಲವೇ ವಿಚಾರಕ್ಕೆ ಸಂಬಂಧಿಸಿದ್ದೋ? ಎನ್ನುವುದರ ಬಗೆಗೆ ನಮಗೆ ಯಾವುದೇ ಖಚಿತತೆ ಇರುವುದಿಲ್ಲ. ಒಟ್ಟಾರೆ ಈ ಸ್ಥಿತಿಯನ್ನು ಸಂವಹನಶೀಲವಲ್ಲದ್ದು ಎಂದು ಭಾವಿಸುತ್ತೇವೆ. ಇದುವೇ ಸರಿಯಾದ ನಿಲುವು ಎಂದೂ ನಂಬಲಾಗುತ್ತದೆ. ಈ ನಿಲುವನ್ನು ಪರಿಶೀಲಿಸುವ ಬದಲಾಗಿ ಸರಿಯಾದುದು ಎಂದು ಒಪ್ಪಿಕೊಳ್ಳಲಾಗುತ್ತದೆ.
ಹೇಳುವವರು, ಕೇಳುವವರು, ಬರೆಯುವವರು ಮತ್ತು ಓದುವವರು ಇವರೆಲ್ಲರಲ್ಲೂ ನುಡಿ ರಚನೆ ಮತ್ತು ಬಳಕೆಯ ನೆಲೆಗಳು ಸಮಾನವಾಗಿರುತ್ತವೆ. ನುಡಿಯ ಕಸುವನ್ನು ಪಡೆಯುವ ಬಗೆಯಲ್ಲಿ ಯಾವುದೇ ಏರುಪೇರುಗಳಿರುವುದಿಲ್ಲ. ಈ ನುಡಿ ಕಸುವು ಎನ್ನುವುದು ಎಲ್ಲರಲ್ಲೂ ಸಮಾನವಾಗಿಯೇ ನೆಲೆಗೊಂಡಿರುತ್ತದೆ. ಆದರೆ ಸಂವಹನದ ಮೂಲಕ ಮಾಡುವ ವಿಶ್ಲೇಷಣೆ, ವ್ಯಾಖ್ಯಾನ ಇಲ್ಲವೇ ನಿರ್ವಚಿಸುವ ಕ್ರಮಗಳಲ್ಲಿ ವ್ಯತ್ಯಾಸಗಳು ಏರ್ಪಡುವುದು ಸಹಜ.
ಏಕೆಂದರೆ, ಪ್ರತೀ ನುಡಿಯೊಳಗೆ ವಿಚಾರ ಸಂವಹನ ಮತ್ತು ಸಾಮಾನ್ಯ ಸಂವಹನವನ್ನು ಏರ್ಪಡಿಸುವ ಬಗೆಗಳನ್ನು ಸಜ್ಜುಗೊಳಿಸುವ ಜರೂರಿರುತ್ತದೆ. ಈ ವಿನ್ಯಾಸ ಸಾರ್ವತ್ರಿಕವಾಗಿ ಎಲ್ಲ ನುಡಿಗಳಲ್ಲಿಯೂ ಒಂದೇ ಬಗೆಯಲ್ಲಿ ಇರುವುದಿಲ್ಲ. ಹಾಗಾಗಿ ತಮ್ಮ ಬದುಕಿಗೆ ಸಂಬಂಧಿಸಿದ ‘ಅರಿವು’ ಮತ್ತು ‘ಅಭಿವ್ಯಕ್ತಿಶೀಲ’ ಚಟುವಟಿಕೆಗಳಲ್ಲಿ ಜನರು ಭಾಷೆ ಮತ್ತು ಭಾಷಿಕ ವಿದ್ಯಮಾನಗಳಿಗೆ ಸಂಬಂಧಿಸಿದ ಬಿಕ್ಕಟ್ಟುಗಳನ್ನು ನಿರಂತರವಾಗಿ ಎದುರಿಸುತ್ತಾರೆ.
ನಾವು ದಿನನಿತ್ಯ ಬದುಕಿನಲ್ಲಿ ಕೆಲವು ನಿರ್ದಿಷ್ಟ ರೂಢಿಗಳಲ್ಲಿಯೇ ಮುಳುಗಿರುತ್ತೇವೆ ಹಾಗೂ ಅಷ್ಟರಲ್ಲಿಯೇ ಪ್ರಪಂಚವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇವೆ. ಇದೆಲ್ಲವೂ ಭಾಷೆಯ ಮೂಲಕ ನಡೆಯುತ್ತದೆ ದಿಟ. ಆದರೆ ಭಾಷೆಯು ಹಲವು ಬಗೆಯ ಸಂಜ್ಞೆ, ಸಂಕೇತಗಳನ್ನು ಬಳಸಿಕೊಳ್ಳುತ್ತದೆ. ಈ ಲೋಕದ ಎಲ್ಲ ವಿದ್ಯಮಾನಗಳನ್ನು ಅರಿಯಲು ಮತ್ತು ಅರ್ಥೈಸಲು ಈ ಸಂಜ್ಞಾ ವ್ಯಾಪಾರಗಳ ಮೂಲಕ ಪ್ರಯತ್ನಿಸುತ್ತೇವೆ.
ಇದೆಲ್ಲವೂ ಕೇವಲ ಭಾಷೆಯ ಮೇಲೆ ಮಾತ್ರ ಕೇಂದ್ರಿಕೃತವಾಗಿರುವುದಿಲ್ಲ. ಬದಲಾಗಿ ಭಾಷೆ ಅಮೂರ್ತ ವಿದ್ಯಮಾನವಾಗಿ ಹೊರಹೊಮ್ಮುತ್ತದೆ. ಸಾಮಾನ್ಯವಾಗಿ ಭಾಷೆಯು ಏಕಕಾಲಕ್ಕೆ ಪಾರದರ್ಶಕವೂ ಮತ್ತು ಅಗೋಚರವೂ ಆಗಿರುತ್ತದೆ. ಈ ಇಕ್ಕಟ್ಟಿನಲ್ಲಿಯೇ ನಾವು ಲೋಕದ ಎಲ್ಲ ವ್ಯವಹಾರಗಳನ್ನು ಗ್ರಹಿಸುತ್ತೇವೆ, ಅರ್ಥೈಸುತ್ತೇವೆ ಮತ್ತು ಅವುಗಳ ಬಗೆಗೆ ಮಾತ್ನಾಡುತ್ತೇವೆ. ಮಾತು, ಮಾತಿಗೆ ಸಂಬಂಧಿಸಿದ ವಿಷಯ ಮತ್ತು ವ್ಯಕ್ತಿಗಳ ನಡುವಣ ಸಂಬಂಧಗಳ ಮೂಲಕವೇ ನಮ್ಮ ಬಹುತೇಕ ಸಂವಹನ ಚಟುವಟಿಕೆಗಳು ಏರ್ಪಡುತ್ತವೆ.
ಹಾಗಾದರೆ, ಭಾಷೆಯನ್ನು ಪಾರದರ್ಶಕ ಮತ್ತು ಕ್ರಿಯಾಶೀಲ ವ್ಯಾಪಾರವನ್ನಾಗಿ ಗ್ರಹಿಸಲು ಹೇಗೆ ಸಾಧ್ಯ? ಏಕೆಂದರೆ ನುಡಿ ಕಸುವು ಪ್ರಕಟಗೊಳ್ಳುವ ಇಡೀ ಪ್ರಕ್ರಿಯೆಯಲ್ಲಿ ಕೇವಲ ಭಾಷಿಕ ವಿವರಗಳು ಮಾತ್ರ ಪಾಲ್ಗೊಳ್ಳುವುದಿಲ್ಲ. ಹೊರತಾಗಿ ಸಾಂಸ್ಕೃತಿಕ, ಮಾನಸಿಕ ಹಾಗೂ ಸಾಂಕೇತಿಕ ವಿದ್ಯಮಾನಗಳು ಸೇರಿರುತ್ತವೆ. ಯಾವುದೇ ಅಮೂರ್ತ ರೂಪ, ವಿದ್ಯಮಾನ, ವಸ್ತುಗಳನ್ನು ಗುರುತಿಸುವುದು ಮಾತ್ರ ಇದೇ ಭಾಷಿಕ ವ್ಯಾಪಾರಗಳಿಂದ. ಈ ಭಾಷಿಕ ವ್ಯವಹಾರಗಳನ್ನು ‘ಕ್ರಿಯೆ’ ಮತ್ತು ‘ರಚನೆ’ಗಳ ಸ್ವರೂಪದಲ್ಲಿ ಗುರುತಿಸಲಾಗುತ್ತೆ. ಆದ್ದರಿಂದ ಈ ಭಾಷಿಕ ವಿದ್ಯಮಾನಗಳನ್ನು ಅತ್ಯಂತ ಸಮಂಜಸವಾದ ನೆಲೆಗಳನ್ನಾಗಿ ಒಪಿಕೊಳ್ಳಲಾಗುತ್ತದೆ.
ನಾವು ಮಾತ್ನಾಡುವ, ಕೇಳುವ, ಯಾವುದೇ ಮಾತಿಗೆ ಪ್ರತಿಕ್ರಿಯಿಸುವ ಬಗೆಗಳು ‘ಸಂವಾದದಲ್ಲಿ ಮಾತಿಗೆ’ ತೊಡಗಿಕೊಳ್ಳುವ ಬಗೆಯಾಗಿದೆ. ಸಂವಾದ ಕೇವಲ ಭಾಷಿಕ ವ್ಯವಹಾರವಲ್ಲ. ಅದು ಸಾಮಾಜಿಕ, ಮಾನಸಿಕ ನಂಟುಗಳನ್ನು ಪಡೆದಿರುತ್ತದೆ. ಇಡೀ ಲೋಕಾನುಭವನ್ನು ಗ್ರಹಿಸುವ, ಅಭಿವ್ಯಕ್ತಿಸುವ ಸಾಮರ್ಥ್ಯವನ್ನು ನಾವು ಪ್ರತಿಭಾನ (ಇಂಟ್ಯೂಶನ್) ಹಾಗೂ ಬುದ್ಧಿವ್ಯಾಪಾರ (ರೀಸನ್)ಗಳಿಂದ ಪಡೆಯುತ್ತೇವೆ ಎಂಬ ವಾದವು ಪ್ರಬಲವಾಗಿದೆ. ಆದರೆ ಮನುಷ್ಯನ ಮಾನಸಿಕ ತಂತ್ರಗಾರಿಕೆಗೆ ಹೊರತಾದ ವಿಶೇಷ ಭಾಷಿಕ ಸಾಮರ್ಥ್ಯವು ಮನುಷ್ಯರಲ್ಲಿ ಅಂತಸ್ಥವಾಗಿದೆ. ಪರಿಣಾಮವಾಗಿ ಭಾಷೆಯ ಮೂಲ ವಿಷಯ ಹಾಗೂ ಅರ್ಥಗಳು, ಮಾನವನ ಆಲೋಚನಾಕ್ರಮಕ್ಕೆ ಆಳವಾದ ಅಂಶಗಳಾಗಿವೆ ಎನ್ನುವ ಚಿಂತನೆಗೆ ಬಲಬಂದಿದೆ.
ಫ್ರೆಂಚ್ ತತ್ವಜ್ಞಾನಿಯ ರೆನೆ ಡೆಕಾರ್ಟಸ್ನ ‘ಐ ಥಿಂಕ್ ದೇರ್ಫೋರ್ ಐ ಆ್ಯಮ್’ ಎನ್ನುವ ಪ್ರಸಿದ್ಧ ಮಾತಿದೆ. ಇದು ಮನುಷ್ಯನ ಅಸ್ತಿತ್ವದ ಮೂಲ ಚಹರೆಯಾಗಿದೆ. ಮನುಷ್ಯ ಯೋಚಿಸಬಲ್ಲ ಎಂಬೀ ನೆಲೆಯೇ ಆತನ/ಅವಳ ಪ್ರಾಥಮಿಕ ಗುರುತಾಗಿದೆ. ಬುದ್ಧಿವ್ಯಾಪಾರ (ರೀಸನ್) ಮತ್ತು ವಿಜ್ಞಾನ (ಸೈಯನ್ಸ್) ಎಂಬ ಪರಿಕಲ್ಪನೆಗಳು ಮನುಷ್ಯನ ಚಿಂತನೆಯ ತಳಹದಿಯಾಗಿದೆ. ಈ ಇಡೀ ಆಲೋಚನಾ ಕ್ರಮವು ‘ವೈಚಾರಿಕ ಅನುಮಾನ’ (ರಾಡಿಕಲ್ ಡೌಟ್)ಎನ್ನುವ ತಾತ್ವಿಕ ಪರಿಕಲ್ಪನೆಯ ಆಧಾರದ ಮೇಲೆ ನಿಂತಿದೆ.
ಯಾವುದೇ ತಿಳಿವು ಒಂದು ಆತ್ಯಂತಿಕ ಸತ್ಯವೆಂದು ನಿರ್ದರಿಸಲು ಆಗುವುದಿಲ್ಲ ಎಂಬುದನ್ನು ಈ ಮಾತು ಸೂಚಿಸುತ್ತದೆ. ಕೇವಲ ಮನಸ್ಸು ಇಲ್ಲವೇ ಪ್ರಜ್ಞೆಯ ಮೂಲಕ ಮಾತ್ರ ಗ್ರಹಿಕೆಗಳನ್ನು ನಂಬುವ, ಅನುಮಾನಿಸುವ ನೆಲೆಯಿರುತ್ತದೆ. ಈ ಇಡೀ ನೆಲೆಯನ್ನು ಡೆಕಾರ್ಟಸ್ ‘ಐ ಥಿಂಕ್ ದೇರ್ಫೋರ್ ಐ ಆ್ಯಮ್’ ಎಂದು ಸೂತ್ರೀಕರಿಸಿದ್ದಾನೆ. ಇದನ್ನೇ ಇತಾಲಿಯ ಭಾಷಾ ಚಿಂತಕ ಆಂಡ್ರಿಯಾ ಮೋರೊ ‘ಐ ಸ್ಪೀಕ್ ದೇರ್ಫೋರ್ ಐ ಆ್ಯಮ್’ ಎಂದೂ ಗುರುತಿಸಿದ್ದಾನೆ.
ಮನಸ್ಸು (ಮೈಂಡ್) ಮತ್ತು ದೇಹ (ಬಾಡಿ) ಎರಡು ಭಿನ್ನ ಮತ್ತು ವಿಶಿಷ್ಟ ಘಟಕಗಳು ಎಂಬ ಪ್ರಮೇಯವನ್ನೂ ಡೆಕಾರ್ಟಸ್ ಮಂಡಿಸಿದನು. ಏಕೆಂದರೆ ದೇಹ ಮನಸ್ಸಿನಂತೆ ಗ್ರಹಿಸುವ ಸಾಮರ್ಥ್ಯವನ್ನು ಹೊಂದಿರುವ ಘಟಕವಲ್ಲ. ಇಡೀ ಲೋಕವ್ಯವಹಾರವನ್ನು ಗ್ರಹಿಸುವುದು ಕೇವಲ ಮನಸ್ಸಿನಿಂದ ಮಾತ್ರ. ಮನಸ್ಸು ಇರುವುದರಿಂದಲೇ ದೇಹವನ್ನೂ ಗ್ರಹಿಸಲಾಗುತ್ತದೆ. ಇಲ್ಲಿ ದೇವರ ಅಸ್ತಿತ್ವವನ್ನು ನಿರಾಕರಿಸಿ ಮನಸ್ಸು ಮತ್ತು ಬುದ್ಧಿವ್ಯಾಪಾರಕ್ಕೆ ಮಾತ್ರ ಪ್ರಾಮುಖ್ಯತೆಯನ್ನು ನೀಡಲಾಯಿತು.
ಭಾಷೆಯಲ್ಲಿಯೂ ಬೇರೆ ಬೇರೆ ಪದಗಳನ್ನು ಸಂಯೋಜಿಸಿಕೊಂಡು ವಿಶಿಷ್ಟ ಅರ್ಥಗಳನ್ನು ರೂಪಿಸುವ ಸಾಮರ್ಥ್ಯವೂ ಇದೇ ಮನಸ್ಸಿನಲ್ಲಿ ಅಂತಸ್ಥವಾಗಿರುವ ನುಡಿ ಕಸುವಿನಿಂದ ಮಾತ್ರ. ಆದರೆ ಈ ಸಾಮರ್ಥ್ಯವನ್ನು ಸಾಂಸ್ಕೃತಿಕ ಪರಿಣತಿಯನ್ನಾಗಿ ರೂಪಿಸಿಕೊಳ್ಳುವ ಅವಶ್ಯಕತೆಯಿದೆ. ಈ ಪರಿಣತಿಯನ್ನು ಪಡೆಯದ ಮನುಷ್ಯನು ಕೂಡ ನುಡಿಯನ್ನು ಅರಿಯದ ಇಲ್ಲವೇ ನುಡಿಯದ ಮೂರ್ಖನೂ ಅಲ್ಲ ಮತ್ತು ಶತದಡ್ಡನೂ ಅಲ್ಲ. ಹಾಗಾಗಿ ನುಡಿಯ ಮೂಲಕ ಪ್ರಕಟಗೊಳ್ಳುವ ಎಲ್ಲ ವ್ಯಾಪಾರಗಳನ್ನು ಗ್ರಹಿಸುವ ಪ್ರಾಥಮಿಕ ಸಾಮರ್ಥ್ಯ ಪ್ರತೀ ಮನುಷ್ಯರಲ್ಲಿ ಅಂತಸ್ಥವಾಗಿದೆ.
ಅದರೆ ವೈಚಾರಿಕ ವಿನ್ಯಾಸಗಳನ್ನು ಗ್ರಹಿಸುವಲ್ಲಿ ತೊಡಕುಗಳು ಎದುರಾಗುತ್ತವೆ. ಏಕೆಂದರೆ ಎಲ್ಲ ಬಗೆಯ ಜ್ಞಾನ/ವಿಚಾರದ ಸಮರ್ಥನೆಗಳು ವೈಜ್ಞಾನಿಕ ಮತ್ತು ಸಾರ್ವತ್ರಿಕವಾಗಿರುವುದಿಲ್ಲ. ನುಡಿಯ ಜೊತೆಗೆ ಸಾಂಸ್ಕೃತಿಕ, ವೈಜ್ಞಾನಿಕ ಇತ್ಯಾದಿ ವಿಶೇಷ ಪರಿಣತಿಯನ್ನು ಮನುಷ್ಯರು ರೂಪಿಸಿಕೊಂಡಾಗ ಮಾತ್ರ ಗ್ರಹಿಕೆಗೆ ಯಾವುದೇ ತೊಡಕುಗಳಿರುವುದಿಲ್ಲ. ಅದರೆ ಹೇಳುವ ಇಲ್ಲವೇ ಬರೆಯುವ ಸನ್ನಿವೇಶದಲ್ಲಿ ಇಂತಹದೊಂದು ಬಿಕ್ಕಟ್ಟು ಏರ್ಪಡುವುದಿಲ್ಲ. ವ್ಯಕ್ತಿ ತಾನಾಡುವ ಮಾತುಗಳಿಗೆ ಖಚಿತ ಅರ್ಥಗಳನ್ನು ಕಲ್ಪಿಸಿಕೊಂಡು ಹೇಳುತ್ತಾನೆ/ಳೆ ಮತ್ತು ಬರೆಯುತ್ತಾಳೆ/ನೆ. ತಾನಾಡುವ ಮಾತು/ಬರಹಗಳ ಅರ್ಥ ನಿರ್ದಿಷ್ಟತೆಯನ್ನು ಗ್ರಹಿಸದೇ ಹೋದರೆ ಏನೆಲ್ಲ ಅಪಾಯಗಳು ಉಂಟಾಗಬಹುದು ಎಂಬ ನೆನಪಿನಲ್ಲಿಯೇ ಅಪಾಯಗಳಿವೆ ಅಲ್ಲವೇ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.
ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.
ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ, ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.
ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.
ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.
ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.
ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.
ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.
*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿಸಚಿವ ಎಚ್.ಆಂಜನೇಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

-
ದಿನದ ಸುದ್ದಿ7 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ5 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ6 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ3 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ2 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ15 hours agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

