ದಿನದ ಸುದ್ದಿ
ಜಲ್ ಜೀವನ್ ಮಿಷನ್ ಯೋಜನೆ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ : ಸಚಿವ ಬೈರತಿ ಬಸವರಾಜ ಸೂಚನೆ
ಸುದ್ದಿದಿನ, ದಾವಣಗೆರೆ : ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿಯನ್ನು ಹೊಂದಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ದಾವಣಗೆರೆಯಲ್ಲಿಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಸಚಿವರು, ದಾವಣಗೆರೆ ಜಿಲ್ಲೆಯ 876 ಗ್ರಾಮಗಳಲ್ಲಿ ಮೂರು ಹಂತಗಳಲ್ಲಿ ಕೈಗೆತ್ತಿಕೊಂಡಿರುವ ಯೋಜನೆಯ ಕಾಮಗಾರಿಗಳನ್ನು ಕ್ಷಿಪ್ರವಾಗಿ ಮುಗಿಸಿ ನೀರು ಸರಬರಾಜು ಮಾಡುವಂತೆ ಆದೇಶಿಸಿದರು.
ಬೇಸಿಗೆ ದಿನಗಳಲ್ಲಿ ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಸಿದ್ದಪಡಿಸಿಕೊಂಡು ಅಗತ್ಯಬಿದ್ದರೆ ನೀರು ಪೂರೈಕೆಗೆ ಸಜ್ಜಾಗುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಚಿವರು ಸೂಚಿಸಿದರು. ಸಭೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243