ದಿನದ ಸುದ್ದಿ
ದುಡಿಯುವ ಮಹಿಳೆಯರ ಹೋರಾಟಕ್ಕೆ ಶಕ್ತಿ ತುಂಬಿದ್ದ ಕಾಂII ಹೆಚ್ಕೆಆರ್
- ಕೆ.ರಾಘವೇಂದ್ರ ನಾಯರಿ,ಕಾರ್ಮಿಕ ಮುಖಂಡ,& ಪ್ರದಾನ ಕಾರ್ಯದರ್ಶಿ,ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘ,ದಾವಣಗೆರೆ
ಈ ನಾಡು ಕಂಡ ಅದ್ಭುತ ಕಾರ್ಮಿಕ ನಾಯಕ ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪ ಅವರು ದಿನಾಂಕ 08-05-2021 ರಂದು ನಿಧನರಾಗಿದ್ದಾರೆ. ಕಳೆದ 17 ವರ್ಷಗಳಿಂದ ಅವರ ಆಪ್ತ ಒಡನಾಡಿಯಾಗಿದ್ದ ಕೆನರಾ ಬ್ಯಾಂಕ್ ಉದ್ಯೋಗಿ ಕಾಂII ಕೆ.ರಾಘವೇಂದ್ರ ನಾಯರಿ ಅವರು ಕಾಂIIಹೆಚ್ಕೆಆರ್ ಕುರಿತಾಗಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
- ದುಡಿಯುವ ವರ್ಗದ ಧೀಮಂತ ನಾಯಕ ಕಾಂII ಹೆಚ್ಕೆಆರ್ – ಅಸ್ತಂಗತ
- ಹೋರಾಟವನ್ನೇ ಉಸಿರಾಗಿಸಿಕೊಂಡಿದ್ದ ಕ್ರಾಂತಿಕಾರಿ ನಾಯಕ – ಕಾಂII ಹೆಚ್ಕೆಆರ್
- ಆರು ದಶಕಗಳ ದಣಿವರಿಯದ ಜೀವ ಚಿರ ವಿಶ್ರಾಂತಿಗೆ
ದಾವಣಗೆರೆ ಎಂದರೆ ಕಾರ್ಮಿಕರ ಹೋರಾಟಕ್ಕೆ ಹೆಸರುವಾಸಿಯಾದ ನೆಲ. ಈ ಮಣ್ಣಿನ ಗುಣವೇ ಸಂಘಟನೆ, ಹೋರಾಟ, ಚಳುವಳಿಗಳಿಗೆ ಪ್ರೇರಣೆ ನೀಡುತ್ತದೆ ಅಂತನಿಸುತ್ತದೆ. ಏಕೆಂದರೆ ಕರ್ನಾಟಕದಲ್ಲಿ ಕಾರ್ಮಿಕರ ಹೋರಾಟ ಎಂದೊಡನೆ ತಟ್ಟಂತೆ ನೆನಪಾಗುವುದೇ ದಾವಣಗೆರೆ. ಕಾರ್ಮಿಕ ಸಂಘಟನೆ ಮಾತ್ರವಲ್ಲದೇ ಭಾರತೀಯ ಕಮ್ಯುನಿಸ್ಟ್ ಪಕ್ಷವನ್ನು ಉಚ್ಛ್ರಾಯ ಸ್ಥಿತಿಗೆ ತಂದಂತಹ ಊರು ಕೂಡಾ ದಾವಣಗೆರೆ.
ಇಂತಹ ಕ್ರಾಂತಿಕಾರಿ ಗುಣಗಳನ್ನು ಹೊಂದಿದ್ದಂತಹ ದಾವಣಗೆರೆಯಲ್ಲಿ ದಿವಂಗತ ಕಾಮ್ರೇಡ್ ಪಂಪಾಪತಿಯವರ ಗರಡಿಯಲ್ಲಿ ಬೆಳೆದು ದುಡಿಯುವ ವರ್ಗದ ಧೀಮಂತ ನಾಯಕನಾಗಿ ಬೆಳೆದು ಕಾರ್ಮಿಕರ ಕಷ್ಟ ಸುಖಗಳನ್ನೇ ತನ್ನ ಉಸಿರಾಗಿಸಿಕೊಂಡು ಬೆಳೆದ ಕಾರ್ಮಿಕ ನಾಯಕನೇ ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪ.
ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕನಾಗಿ, ಅಸಂಘಟಿತ ವರ್ಗದ ದುಡಿಯುವ ಜನರ ಹೋರಾಟಗಳಿಗೆ ದೊಡ್ಡ ಶಕ್ತಿಯಾಗಿ ಹಾಗೂ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಮಾರ್ಗದರ್ಶಕರಾಗಿದ್ದ ಕಾಂII ಹೆಚ್.ಕೆ.ರಾಮಚಂದ್ರಪ್ಪ ಅವರು 08-05-2021 ರಂದು ನಿಧನರಾದರು.
ಅವರ ನಿಧನ ಕಾರ್ಮಿಕ ವಲಯಕ್ಕೆ ಅದರಲ್ಲೂ ಬಹುಮುಖ್ಯವಾಗಿ ಅಸಂಘಟಿತ ಕಾರ್ಮಿಕ ವಲಯಕ್ಕೆ ಬಹುದೊಡ್ಡ ಆಘಾತವನ್ನು ತಂದೊಡ್ಡಿದೆ. ಹೆಚ್.ಕೆ.ರಾಮಚಂದ್ರಪ್ಪ ಅವರು ವಿಶೇಷವಾಗಿ ಅಂಗನವಾಡಿ ನೌಕರರು, ಬಿಸಿಯೂಟ ನೌಕರರು, ಆಶಾ ಕಾರ್ಯಕರ್ತರ ಸಂಘಟನೆ ಹಾಗೂ ಇನ್ನೂ ಹಲವಾರು ಕಾರ್ಮಿಕ ಸಂಘಟನೆಗಳಿಗೆ ಧ್ವನಿಯಾಗಿ ತಮ್ಮ ಜೀವನವನ್ನೇ ಕಾರ್ಮಿಕರ ಪರವಾದ ಹೋರಾಟಗಳಿಗೆ ಸಮರ್ಪಿಸಿಕೊಂಡಿದ್ದರು.
ತಮ್ಮ ಮುಂದಿನ ಹೋರಾಟಗಳಿಗೆ ಮುಂದೆ ನಾಯಕ ಯಾರು ಎನ್ನುವ ಪ್ರಶ್ನೆ ದುಡಿಯುವ ವರ್ಗದ ಮುಂದಿದೆ ಎಂದರೂ ತಪ್ಪಾಗಲಾರದು. ಬಹುಷಃ ಅವರ ಆರು ದಶಕಗಳ ದಣಿವರಿಯದ ಹೋರಾಟದ ಜೀವನದಲ್ಲಿ ಸದಾ ಕಾಲ ಒಡನಾಡಿಯಾಗಿದ್ದ ಕಾಂII ಆನಂದ್ ರಾಜ್ ಅವರ ಮಾರ್ಗದರ್ಶನದಲ್ಲಿ ಕಾಂII ಅವರಗೆರೆ ಉಮೇಶ್ ಹೆಚ್.ಜಿ. ಹಾಗೂ ಕಾಂII ಅವರಗೆರೆ ಚಂದ್ರು ಹಾಗೂ ಮತ್ತಿತರರು ಹೆಚ್ಕೆಆರ್ ಅವರು ನಡೆಸಿಕೊಂಡು ಬಂದ ಹೋರಾಟದ ಕ್ರಾಂತಿಕಾರಿ ರಥವನ್ನು ಮುಂದಕ್ಕೆ ಕೊಂಡೊಯ್ಯುವ ಕೆಲಸವನ್ನು ಮಾಡುವ ಮೂಲಕ ಕಾರ್ಮಿಕ ವರ್ಗಕ್ಕೆ ನ್ಯಾಯ ಒದಗಿಸಬೇಕಾಗಿದೆ.
ಸೈದ್ಧಾಂತಿಕವಾಗಿ ಅತ್ಯಂತ ಪ್ರಭಾವಶಾಲಿಯಾಗಿದ್ದ ಹೆಚ್ಕೆಆರ್ ಅವರು ವಿಶಾಲ ದೃಷ್ಟಿ ಕೋನವನ್ನು ಹೊಂದಿದ್ದ ನಾಯಕರಾಗಿದ್ದರು. ದುಡಿಯುವ ವರ್ಗದ ಅದರಲ್ಲೂ ಪ್ರಮುಖವಾಗಿ ಅಂಗನವಾಡಿ, ಬಿಸಿಯೂಟ, ಆಶಾ, ಕಟ್ಟಡ ಕಾರ್ಮಿಕರು, ಕೈಗಾರಿಕಾ ವಲಯದ ಕಾರ್ಮಿಕರು, ಆಟೋ ಚಾಲಕರು, ಸಾ ಮಿಲ್ ಕಾರ್ಮಿಕರು, ಪುಟ್ಪಾತ್ ವ್ಯಾಪಾರಸ್ಥರು, ಹೋಟೆಲ್ ಕಾರ್ಮಿಕರು, ಮನೆಗೆಲಸದವರು ಹೀಗೆ ಹತ್ತು ಹಲವು ಕಾರ್ಮಿಕ ಸಂಘಟನೆಗಳಿಗೆ ಇವರೇ ಉಸಿರಾಗಿದ್ದರು, ಶಕ್ತಿಯಾಗಿದ್ದರು.
ಸಂಘಟಿತ ವಲಯದ ಬ್ಯಾಂಕ್ ನೌಕರರು, ವಿಮಾ ನೌಕರರು, ರೈಲ್ವೇ ನೌಕರರು, ದೂರಸಂಪರ್ಕ ನಿಗಮದ ನೌಕರರು, ಅಂಚೆ ನೌಕರರು ಮುಂತಾದವರ ಸಂಘಟನೆಗಳಿಗೆ ಮಾರ್ಗದರ್ಶಕರಾಗಿದ್ದರು ಮತ್ತು ಅವರ ಯಾವತ್ತೂ ಹೋರಾಟಗಳಿಗೆ ಸದಾ ಪ್ರೋತ್ಸಾಹ ನೀಡಿ ನೆರವಾಗುತ್ತಿದ್ದರು. ಅಲ್ಲಿನ ಯುವ ನಾಯಕರುಗಳನ್ನು ಸೈದ್ಧಾಂತಿಕವಾಗಿ ಬೆಳೆಸಲು ಮತ್ತು ಎಡಪಂಥೀಯ ವಿಚಾರಧಾರೆಯನ್ನು ಮೈಗೂಡಿಸಿಕೊಂಡು ಪ್ರಬಲ ಹೋರಾಟಗಾರರನ್ನಾಗಿ ರೂಪಿಸಲು ವಿಶೇಷ ಮುತುವರ್ಜಿವಹಿಸುತ್ತಿದ್ದರು.
1943 ರ ಪೆಬ್ರವರಿ 2 ರಂದು ಹರಪನಹಳ್ಳಿ ತಾಲೂಕಿನ ಉಚ್ಛಂಗಿದುರ್ಗದಲ್ಲಿ ಕೆಂಪಣ್ಣ ಮತ್ತು ಕೆಂಪಮ್ಮ ದಂಪತಿಗಳ ಮಗನಾಗಿ ಜನಿಸಿದ ಹೆಚ್ಕೆಆರ್ ಅವರು ವಿದ್ಯಾರ್ಥಿದೆಸೆಯಲ್ಲಿಯೇ ಉತ್ತಮ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡಿದ್ದರು. 1960 ರಲ್ಲಿ ದಾವಣಗೆರೆಯ ಚಂದ್ರೋದಯ ಮಿಲ್ನಲ್ಲಿ ಕೆಲಸಕ್ಕೆ ಸೇರಿದರು.
ಆ ಸಂದರ್ಭದಲ್ಲಿ ಅಲ್ಲಿ ಕಾರ್ಮಿಕರ ಮೇಲೆ ನಡೆಯುತ್ತಿದ್ದ ಶೋಷಣೆ, ದಬ್ಬಾಳಿಕೆ, ದೌರ್ಜನ್ಯವನ್ನು ಪ್ರತಿಭಟಿಸಿದರು. ಇವರ ಹೋರಾಟದ ಮನೋಭಾವನೆಯನ್ನು ಸೂಕ್ಷ್ಮವಾಗಿ ಗಮನಿಸಿದ ಕಾಂII ಪಂಪಾಪತಿ, ಕಾಂII ಸುರೇಶ್, ಕಾಂIIಶೇಖರಪ್ಪ ಇವರನ್ನು ಕಮ್ಯುನಿಸ್ಟ್ ತೆಕ್ಕೆಗೆ ಸೇರಿಸಿಕೊಂಡರು. ಅಲ್ಲಿಂದ ಅವರ ಹೋರಾಟದ ಜೀವನ ಆರಂಭವಾಯಿತು.
ಎಲ್ಲಿ ಕಾರ್ಮಿಕರ ಮೇಲೆ ದಬ್ಬಾಳಿಕೆ ನಡೆಯುತ್ತಿತ್ತೋ ಅಲ್ಲಿ ಹೆಚ್ಕೆಆರ್ ಹಾಜರಿರುತ್ತಿದ್ದರು. ವೈಯಕ್ತಿಕ ಬದುಕಿನ ಹಿತಾಸಕ್ತಿಗಳನ್ನು ಕಡೆಗಣಿಸಿ ಕಾರ್ಮಿಕರ ಹಕ್ಕುಗಳಿಗಾಗಿ, ಕಾರ್ಮಿಕರ ನ್ಯಾಯಬದ್ಧವಾದ ಬೇಡಿಕೆಗಳ ಈಡೇರಿಕೆಗಾಗಿ ಕಟಿಬದ್ಧರಾಗಿ ನಿಂತರು. ಚಳುವಳಿ, ಹೋರಾಟ ಇವರ ಜೀವನದ ಅವಿಭಾಜ್ಯ ಅಂಗವಾಯಿತು. ಎ.ಐ.ಟಿ.ಯು.ಸಿ. ಸಂಘಟನೆಯ ಕೆಂಪು ಬಾವುಟದ ಆಶ್ರಯದಲ್ಲಿ ಅಸಂಘಟಿತ ಕಾರ್ಮಿಕರ, ದುಡಿಯುವ ಮಹಿಳೆಯರ, ರೈತ ಕಾರ್ಮಿಕರ, ವಿದ್ಯಾರ್ಥಿಗಳ, ದುರ್ಬಲವರ್ಗದವರ, ಕೊಳಚೆ ಪ್ರದೇಶಗಳ ನಿವಾಸಿಗಳ ಪರವಾದ ಹೋರಾಟಕ್ಕೆ ಧುಮುಕಿದರು.
ಕಾರ್ಲ್ ಮಾರ್ಕ್ಸ್, ಲೆನಿನ್ ಅವರುಗಳ ತತ್ವ ಸಿದ್ಧಾಂತ ಮೂಲಕ ತಮ್ಮ ಮನಸ್ಸನ್ನು ಹದಗೊಳಿಸಿಕೊಂಡರು. ಶೋಷಣೆರಹಿತ ಸಮ ಸಮಾಜದ ನಿರ್ಮಾಣದ ಕನಸು ಕಂಡರು. ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಅಸಂಘಟಿತ ಕಾರ್ಮಿಕರನ್ನು ಸಂಘಟಿಸಿದರು. ಈ ಹೋರಾಟದ ಹಾದಿಯಲ್ಲಿ ಅನೇಕ ನೋವು, ಸಂಕಷ್ಟ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಬಂಡವಾಳಷಾಹಿ ವ್ಯವಸ್ಥೆಯ ಕೆಂಗಣ್ಣಿಗೆ ಗುರಿಯಾಗಿ ಜೈಲುವಾಸವನ್ನೂ ಅನುಭವಿಸಬೇಕಾಯಿತು. ಅವರ ಕುಟುಂಬವರ್ಗ ಇನ್ನಿಲ್ಲದ ಕಷ್ಟಕ್ಕೆ ತುತ್ತಾಗಬೇಕಾಯಿತು.
ಆದರೂ ಅವರು ಎದೆಗುಂದದೇ ಹೋರಾಟದ ಹಾದಿಯಲ್ಲಿ ಮುಂದುವರೆದರು. ಪಂಪಾಪತಿಯವರು 1978, 1983, 1985 ರಲ್ಲಿ ದಾವಣಗೆರೆ ಶಾಸಕರಾಗಿ ಆಯ್ಕೆಯಾಗುವಲ್ಲಿ ಹೆಚ್ಕೆಆರ್ ಶ್ರಮ ಬಹಳಷ್ಟಿತ್ತು. ಪಂಪಾಪತಿಯವರ ಜೊತೆ ಜೊತೆಗೆ ರಾಜಕೀಯವಾಗಿ ಇವರೂ ಬೆಳೆದರು. 1974 ರಿಂದ ಸತತವಾಗಿ 21 ವರ್ಷಗಳ ಕಾಲ ದಾವಣಗೆರೆ ನಗರಸಭಾ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಅನೇಕ ಜನಪರವಾದ ಆಡಳಿತವನ್ನು ನೀಡಿದರು.
ಕಮ್ಯುನಿಸ್ಟ್ ಆಡಳಿತದ ವೈಭವವನ್ನು ದಾವಣಗೆರೆಯ ಹಳೆತಲೆಮಾರಿನ ಜನರು ಈಗಲೂ ಹೆಮ್ಮೆಯಿಂದ ನೆನೆಯುತ್ತಾರೆ. ಮೇ 1 ವಿಶ್ವ ಕಾರ್ಮಿಕ ದಿನಾಚರಣೆ ಬಂತೆಂದರೆ ದಾವಣಗೆರೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗುತ್ತಿತ್ತು. ಹತ್ತಾರು ಸಾವಿರ ಕಾರ್ಮಿಕರ ಮೆರವಣಿಗೆ, ಮುಗಿಲು ಮುಟ್ಟುವಂತಹ ಕಾರ್ಮಿಕರ ಘೋಷಣೆಗಳು ಕಾರ್ಮಿಕರ ದಿನಾಚರಣೆಗೆ ಕೆಳೆಕಟ್ಟುವಂತಿತ್ತು.
ಅದೇ ಮೇ ತಿಂಗಳಿನಲ್ಲಿಯೇ ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪ ಅವರು ಅಸ್ತಂಗತರಾಗಿದ್ದು ಕಾಕತಾಳೀಯವೇ ಸರಿ. ಕಮ್ಯುನಿಸ್ಟ್ ಸಿದ್ಧಾಂತ ಮತ್ತು ಕಾರ್ಮಿಕರ ಪರವಾದ ಹೋರಾಟದ ಮನೋಭಾವವನ್ನು ಅವರು ತಮ್ಮ ಉಸಿರಿರುವವರೆಗೂ ಬಿಡಲಿಲ್ಲ. ಇವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಅನೇಕ ರಾಜಕೀಯ ಪಕ್ಷಗಳು ಇವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸಿದ್ದರು. ಇವರ ಕಣ್ಣೆದುರೇ ಅನೇಕ ಕಮ್ಯುನಿಸ್ಟ್ ನಾಯಕರುಗಳು ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಬೇರೆ ಬೇರೆ ರಾಜಕೀಯ ಪಕ್ಷಗಳಿಗೆ ಸೇರಿದರು.
ಒಂದು ವೇಳೆ ಇವರು ಕೂಡಾ ಬೇರೆ ಯಾವುದಾದರೂ ಪ್ರಬಲ ರಾಜಕೀಯ ಪಕ್ಷಕ್ಕೆ ಸೇರಿದ್ದೇ ಹೌದಾಗಿದ್ದರೆ ಖಂಡಿತವಾಗಿಯೂ ಸಂಸದರಾಗಿಯೋ ಶಾಸಕರಾಗಿಯೋ ಆಯ್ಕೆಗೊಳ್ಳುವುದು ಶತಸಿದ್ಧವಾಗಿತ್ತು ಎಂದು ಅವರ ಸಮಕಾಲೀನ ಮಿತ್ರರೇ ಹೇಳುತ್ತಾರೆ. ಆದರೆ ಹೆಚ್ಕೆಆರ್ ಅವರು ಕಲ್ಲುಬಂಡೆಯಂತೆ ಕಮ್ಯುನಿಸ್ಟ್ ಪಕ್ಷದ ಜೊತೆ ನಿಂತರು. ತತ್ವ, ಸಿದ್ಧಾಂತಗಳಿಗೆ ಕಟಿಬದ್ಧರಾಗಿದ್ದ ಹೆಚ್ಕೆಆರ್ ಅವರು ತಮ್ಮ ಕಮ್ಯುನಿಸ್ಟ್ ನಿಲುವನ್ನು ಯಾವುದೇ ಕಾರಣಕ್ಕೂ ಬದಲಾಯಿಸಲಿಲ್ಲ ಎನ್ನುವುದು ಸೂರ್ಯನಷ್ಟೇ ಸತ್ಯ.
ಇವರ ಹೋರಾಟದ ಜೀವನವನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಇವರನ್ನು ಗೌರವಿಸಿ, ಅಭಿನಂದಿಸಿ, ಸನ್ಮಾನಿಸಿ ಪ್ರಶಸ್ತಿಗಳನ್ನು ನೀಡಿವೆ. ಅದರಲ್ಲಿ ಮುಖ್ಯವಾಗಿ ಚಿತ್ರದುರ್ಗದ ಶ್ರೀ ಮುರುಘಾ ಮಠವು ಪ್ರತೀ ವರ್ಷ ಕೊಡಮಾಡುವ ಪ್ರತಿಷ್ಠಿತ “ಶೂನ್ಯ ಪೀಠ ಚನ್ನಬಸವ ಪ್ರಶಸ್ತಿಯನ್ನು 2015 ರಲ್ಲಿ ಕೊಡಲಾಗಿತ್ತು.
ಪ್ರಶಸ್ತಿಯು ರೂ.25000/- ನಗದು ಹಣವನ್ನೂ ಹೊಂದಿತ್ತು. ಹೆಚ್ಕೆಆರ್ ಅವರು ಆ ಪ್ರಶಸ್ತಿಯ ನಗದು ಹಣವನ್ನು ಪ್ರಶಸ್ತಿ ಪ್ರದಾನ ವೇದಿಕೆಯಲ್ಲಿಯೇ ಶ್ರೀ ಮಠದ ಸಮಾಜಮುಖಿ ಕಾರ್ಯಗಳಿಗೆ ದೇಣಿಗೆಯಾಗಿ ನೀಡಿದ್ದು ಅವರ ಔದಾರ್ಯತೆಯನ್ನು ತೋರಿಸುತ್ತದೆ ಮತ್ತು ಸೇರಿದ್ದ ಸಾವಿರಾರು ಜನರ ಮೆಚ್ಚುಗೆಗೆ ಪಾತ್ರವಾಗಿತ್ತು.
ಇನ್ನು ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪನವರನ್ನು ರಾಜ್ಯಾದ್ಯಂತ ಎಲ್ಲರೂ ಪಕ್ಷಾತೀತವಾಗಿ ಗೌರವಿಸುತ್ತಿದ್ದರು. ಯಾವುದೇ ಸರಕಾರಿ ಕಛೇರಿಗಳಿಗೆ ಇವರು ಭೇಟಿ ನೀಡಿದಾಗ ಅಧಿಕಾರಿಗಳು ಎದ್ದು ನಿಂತು ಇವರಿಗೆ ಗೌರವ ಕೊಡುತ್ತಿದ್ದರು. 2015ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ದಾವಣಗೆರೆಗೆ ಬರುವ ಕಾರ್ಯಕ್ರಮವಿತ್ತು. ಐಟಿಐ ಕಾಲೇಜಿನಲ್ಲಿ ಹೆಲಿಕಾಪ್ಟರ್ ಬಂದಿಳಿಯಿತು.
ಸಹಜವಾಗಿಯೇ ಸಾವಿರಾರು ಅಭಿಮಾನಿಗಳು, ರಾಜಕೀಯ ಧುರೀಣರು ನೆರೆದಿದ್ದರು. ಹೆಚ್ಕೆಆರ್ ನೇತೃತ್ವದಲ್ಲಿ ಒಂದಿಷ್ಟು ಕಾರ್ಮಿಕರು ಕೂಡಾ ತಮ್ಮ ಮನವಿಯನ್ನು ಸಲ್ಲಿಸಲು ಕಾಯುತ್ತಿದ್ದರು. ಸಿದ್ದರಾಮಯ್ಯನವರು ಹೆಲಿಕಾಪ್ಟರ್ ಇಳಿದು ಎಲ್ಲರ ಕಡೆಗೆ ಒಮ್ಮೆ ದೃಷ್ಟಿಹಾಯಿಸಿದರು. ಸೀದಾ ಅವರು ಬಂದಿದ್ದು ಹೆಚ್ಕೆಆರ್ ಬಳಿಗೆ. ಎನ್ರೀ ರಾಮಚಂದ್ರಪ್ಪ ಅವರೇ ಚೆನ್ನಾಗಿದ್ದೀರಾ ಎಂದು ಹೆಗಲ ಮೇಲೆ ಕೈ ಹಾಕಿ ಆತ್ಮೀಯವಾಗಿ ಮಾತನಾಡಿಸಿ ಮನವಿಪತ್ರವನ್ನು ತೆಗೆದುಕೊಂಡರು.
ಹೆಚ್ಕೆಆರ್ ಅವರು ಅಂಗನವಾಡಿ ಕಾರ್ಯಕರ್ತದ ಗೌರವಧನವನ್ನು ಹೆಚ್ಚಿಸುವಂತೆ ಮನವಿ ಮಾಡಿದರು. ಅದರಂತೆಯೇ ಸಿದ್ದರಾಮಯ್ಯನವರು ಮುಂದಿನ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತರ ಗೌರವಧನವನ್ನು ಹೆಚ್ಚಿಸಿದ್ದರು. ಹೀಗೆ ಅಜಾತಶತ್ರುವಿನಂತೆ ಎಲ್ಲರ ಗೌರವಕ್ಕೆ ಪಾತ್ರರಾದ ಧೀಮಂತ ವ್ಯಕ್ತಿತ್ವ ಅವರದಾಗಿತ್ತು.
ಅವರು ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನ ಪಡೆಯಲು ಅವರ ಬಂಧು ಬಾಂಧವರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕ ಬಂಧುಗಳು ಕೊರೋನಾ ಭಯವನ್ನು ಲೆಕ್ಕಿಸದೇ ಧಾವಿಸಿದ್ದು ಅವರ ಜನಪ್ರಿಯತೆಯನ್ನು ಸಾರಿ ಸಾರಿ ಹೇಳುತಿತ್ತು. ಅಂಗನವಾಡಿ ಹಾಗೂ ಬಿಸಿಯೂಟ ಸಂಘಟನೆಗಳ ಮಹಿಳಾ ಕಾರ್ಮಿಕರಂತೂ ತಮ್ಮ ಸ್ವಂತ ಸಹೋದರನನ್ನೋ ತಂದೆಯನ್ನೋ ಕಳೆದುಕೊಂಡಂತೆ ಬಿಕ್ಕಿ ಬಿಕ್ಕಿ ಅಳುತಿದ್ದುದು ಮನಕಲುಕುವಂತಿತ್ತು.
ಹೆಚ್ಕೆಆರ್ ಅವರ ಉಸಿರು ನಿಂತಿರಬಹುದು. ಆದರೆ ಅವರ ಹೆಸರು ಲಕ್ಷಾಂತರ ಕಾರ್ಮಿಕರ ಮನದಲ್ಲಿ ಹಚ್ಚಹಸಿರಾಗಿ ಮುಂದಿನ ಹೋರಾಟಗಳಿಗೆ ಸ್ಪೂರ್ತಿಯಾಗಿರುವುದರಲ್ಲಿ ಯಾವುದೇ ಸಂದೇಹವಿಲ್ಲ.
ಕಾಂII ಹೆಚ್ಕೆಆರ್ ಚಿರಾಯುವಾಗಲಿ...
ಕಾಂII ಹೆಚ್ಕೆಆರ್ ಅಮರ ರಹೇ…
(ಲೇಖಕರು:ಕೆ.ರಾಘವೇಂದ್ರ ನಾಯರಿ,
ಕಾರ್ಮಿಕ ಮುಖಂಡ,
& ಪ್ರದಾನ ಕಾರ್ಯದರ್ಶಿ,
ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘ,
ದಾವಣಗೆರೆ
ಮೊ: 9844314543
mail id : krnairycbeu@gmail.com)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ ಕೇಶವಮೂರ್ತಿ ಬಡಾವಣೆ ಹಾಗೂ ನಾಗನೂರು ಗ್ರಾಮಗಳ ಕೂಡು ರಸ್ತೆಗಳ ಅಂದಾಜು 500 ಲಕ್ಷ ಮೊತ್ತದ ಕಳಪೆ ಕಾಮಗಾರಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ಕರ್ತವ್ಯ ಲೋಪ ಎಸಗಿದ ಶ್ರೀ ಶಿವಮೂರ್ತಿ, ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ದಾವಣಗೆರೆ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ ಕೇಶವಮೂರ್ತಿ ಬಡಾವಣೆ ಹಾಗೂ ನಾಗನೂರು ಗ್ರಾಮಗಳ ಕೂಡು ರಸ್ತೆಗಳ ಕಾಮಗಾರಿಯನ್ನು ಅಂದಾಜು 500 ಲಕ್ಷ ಮೊತ್ತದಲ್ಲಿ ಕೈಗೊಳ್ಳಲಾಗಿದ್ದು, ಸದರಿ ಕಾಮಗಾರಿ ನಡೆದು ಒಂದು ವರ್ಷದ ಒಳಗಾಗಿ ರಸ್ತೆಯು ಹಾಳಾಗಿರುತ್ತದೆ. ಹೀಗಾಗಿ ಸದರಿ ಕಾಮಗಾರಿಗೆ ಸಂಬAಧಿಸಿದ ದಾಖಲೆಗಳನ್ನು ಮಾಹಿತಿಹಕ್ಕು ಅಡಿಯಲ್ಲಿ ಪಡೆದು ಪರಿಶೀಲನೆ ಮಾಡಿದಾಗ, ಅಂತಿಮ ಬಿಲ್ಲನ್ನು ಮಂಜೂರು ಮಾಡುವ ಪೂರ್ವದಲ್ಲಿಯೇ ಸದರಿ ಕಾಮಗಾರಿಯು ಹದಗೆಟ್ಟಿರುವ ಮಾಹಿತಿ ಪಡೆದು, ಮಾಹಿತಿಹಕ್ಕು ಅಡಿಯಲ್ಲಿ ಸಂಬಂಧಿಸಿದ ಕಡತಗಳನ್ನು ಪಡೆದು ಪರಿಶೀಲನೆ ಮಾಡಿದಾಗ ಕಳಪೆ ಕಾಮಗಾರಿ ನಡೆದಿರುವುದು ಕಂಡು ಬಂದ ಕಾರಣ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ದಾವಣಗೆರೆ ಇವರು ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ದಾವಣಗೆರೆ ಇವರಿಗೆ ನಮ್ಮ ದೂರು ಅರ್ಜಿಯನ್ನು ವರ್ಗಾಹಿಸಿ, ‘ಸದರಿ ವಿಷಯದ ಕುರಿತು ಸ್ಥಳ ಪರಿಶೀಲನೆ ನಡೆಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಮನವಿದಾರರಿಗೆ ಹಿಂಬರಹ ನೀಡುವಂತೆ’ ತಿಳಿಸಿರುತ್ತಾರೆ. ಆದರೆ 3 ತಿಂಗಳು ಕಳೆದರೂ ಕಾರ್ಯಪಾಲಕ ಅಭಿಯಂತರರಾದ ಶ್ರೀ ಶಿವಮೂರ್ತಿ ಇವರು ಯಾವುದೇ ತನಿಖೆ ನಡೆಸದೆ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿದ್ದು ನಿಗಧಿತ ಅವಧಿಯಲ್ಲಿ ಹಕ್ಕು, ಆಕ್ಷೇಣೆಗಳಿದ್ದಲ್ಲಿ ಸಲ್ಲಿಸಲು ರ್ಕಾರದ ಕರ್ಯರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಡಾ; ಶಮ್ಲಾ ಇಕ್ಬಾಲ್ ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು. ಜನವರಿ 3 ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ, ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಆಕ್ಷೇಪಣೆ ಮತ್ತು ಹಕ್ಕುಗಳನ್ನು ಸಲ್ಲಿಸಲು ಜನವರಿ 24 ರವರೆಗೆ ಅವಕಾಶವಿದೆ. ಜನವರಿ 11 ರಂದು ನಡೆದ ವಿಶೇಷ ಅಭಿಯಾನದಲ್ಲಿ 85 ರ್ಜಿಗಳು ಸ್ವೀಕೃತವಾಗಿದ್ದು, ಮುಂದಿನ ಅಭಿಯಾನವು ಜನವರಿ 18 ರಂದು ನಡೆಯಲಿದೆ. ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.
ಮತಗಟ್ಟೆಗಳ ಪುನರ್ ವಿಂಗಡಣೆ
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಹಿಂದೆ 217 ಮತಗಟ್ಟೆಗಳಿದ್ದವು. ನಿಯಮದಂತೆ 1200 ಕ್ಕಿಂತ ಹೆಚ್ಚು ಮತದಾರರಿರುವ ಕಡೆ ಹೊಸ ಮತಗಟ್ಟೆಗಳನ್ನು ಸೃಜಿಸಿ, ಪ್ರಸ್ತುತ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 24 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗಿದ್ದು, ಮೂಲಭೂತ ಸೌರ್ಯಗಳಾದ ರ್ಯಾಂಪ್ ಮುಂತಾದವುಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.
ರಾಜಕೀಯ ಪಕ್ಷಗಳಿಗೆ ಎರಡು ಪ್ರಮುಖ ಮನವಿಗಳನ್ನು ಮಾಡಿ ಬಿಎಲ್ಎ ಪ್ರತಿಯೊಂದು ಮತಗಟ್ಟೆ ಮಟ್ಟದಲ್ಲಿ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿ ಪಟ್ಟಿಯನ್ನು ನೀಡಬೇಕು. ಇದರಿಂದ ಮೃತ ಮತದಾರರ ಹೆಸರು ಕೈಬಿಡುವುದು ಮತ್ತು ವಿಳಾಸ ಬದಲಾವಣೆ ಕರ್ಯ ಸುಲಭವಾಗುತ್ತದೆ. ಹೆಸರು ಸರ್ಪಡೆಗೆ ಯುವ ಮತದಾರರು ಹಾಗೂ ಕೈಬಿಟ್ಟು ಹೋದ ರ್ಹ ಮತದಾರರ ಹೆಸರನ್ನು ಸೇರಿಸಲು ಸಹಕರಿಸಬೇಕು ಎಂದರು.
ಕ್ಷೇತ್ರದ ಮತದಾರರ ವಿವರ
ಕರಡು ಪಟ್ಟಿಯಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2,31,158 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 1,13,555 ಹಾಗೂ ಮಹಿಳಾ ಮತದಾರರು 1,17,603 ಇದ್ದು, ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಲಿಂಗ ಅನುಪಾತ
ಕ್ಷೇತ್ರದ ಮತದಾರರ ಪಟ್ಟಿಯಲ್ಲಿನ ಲಿಂಗ ಅನುಪಾತವು 1036 ಆಗಿದ್ದು, ಇದು ಜಿಲ್ಲೆಯ ಜನಗಣತಿ ಅನುಪಾತಕ್ಕಿಂತ 972 ಮತ್ತು ರಾಜ್ಯದ ಸರಾಸರಿಗಿಂತಲೂ ಹೆಚ್ಚಿದೆ. ಮತದಾರರ ಜನಸಂಖ್ಯೆ ಅನುಪಾತ ಶೇ. 83.62 ರಷ್ಟಿದೆ. ಯುವ ಮತದಾರರಾದ 18-19 ವಯೋಮಾನದವರು ಕ್ಷೇತ್ರದಲ್ಲಿ ಒಟ್ಟು 1,692 ಮತದಾರರಿದ್ದು ಇದರಲ್ಲಿ 905 ಪುರುಷ, 787 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ವಿಕಲಚೇತನ ಮತದಾರರು ಒಟ್ಟು 2,544 ಮತದಾರರಿದ್ದು, ಇದರಲ್ಲಿ 1,397 ಪುರುಷರು ಮತ್ತು 1,147 ಮಹಿಳೆಯರಿದ್ದಾರೆ.
ವಿವಿಧ ವಯೋಮಾನದ ಮತದಾರರ ಅಂಕಿ-ಅಂಶಗಳು
ಯುವ ಮತದಾರರು, 18-19 ರ್ಷ ವಯೋಮಾನದ ಒಟ್ಟು 1,692 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 905 ಪುರುಷರು ಮತ್ತು 787 ಮಹಿಳಾ ಮತದಾರರಿದ್ದಾರೆ.
20-29 ರ್ಷ: ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರಿರುವ ವಿಭಾಗಗಳಲ್ಲಿ ಇದೂ ಒಂದು. ಒಟ್ಟು 43,616 ಮತದಾರರಿದ್ದು, ಇದರಲ್ಲಿ 21,601 ಪುರುಷರು, 22,002 ಮಹಿಳೆಯರು ಮತ್ತು 13 ತೃತೀಯ ಲಿಂಗಿ ಮತದಾರರಿದ್ದಾರೆ.
30-39 ರ್ಷ: ಈ ವಯೋಮಾನದಲ್ಲಿ ಒಟ್ಟು 55,814 ಮತದಾರರಿದ್ದಾರೆ. ಇದರಲ್ಲಿ 26,450 ಪುರುಷರು, 29,349 ಮಹಿಳೆಯರು ಮತ್ತು 15 ತೃತೀಯ ಲಿಂಗಿ ಮತದಾರರಿದ್ದಾರೆ.
ಮಧ್ಯವಯಸ್ಕರು: 40-49 ರ್ಷ: ಒಟ್ಟು 55,400 ಮತದಾರರಿದ್ದು, ಇದರಲ್ಲಿ 27,507 ಪುರುಷರು, 27,885 ಮಹಿಳೆಯರು ಮತ್ತು 8 ತೃತೀಯ ಲಿಂಗಿಗಳು ಸೇರಿದ್ದಾರೆ.
50-59 ರ್ಷ: ಈ ವಿಭಾಗದಲ್ಲಿ ಒಟ್ಟು 37,167 ಮತದಾರರಿದ್ದಾರೆ 18,917 ಪುರುಷರು, 18,245 ಮಹಿಳೆಯರು ಮತ್ತು 5 ತೃತೀಯ ಲಿಂಗಿಗಳು.
ಹಿರಿಯ ನಾಗರಿಕರು
60-69 ರ್ಷ: ಒಟ್ಟು 21,314 ಮತದಾರರಿದ್ದಾರೆ 10,484 ಪುರುಷರು, 10,826 ಮಹಿಳೆಯರು ಮತ್ತು 4 ತೃತೀಯ ಲಿಂಗಿಗಳು. 70-79 ರ್ಷ: ಈ ವಯೋಮಾನದ ಒಟ್ಟು 10,870 ಮತದಾರರಿದ್ದಾರೆ. ಇದರಲ್ಲಿ 5,310 ಪುರುಷರು ಮತ್ತು 5,560 ಮಹಿಳಾ ಮತದಾರರಿದ್ದಾರೆ.
80 ರ್ಷ ಮೇಲ್ಪಟ್ಟವರು
ಕ್ಷೇತ್ರದಲ್ಲಿ ಒಟ್ಟು 4,734 ಹಿರಿಯ ಮತದಾರರಿದ್ದಾರೆ 2,149 ಪುರುಷರು ಮತ್ತು 2,585 ಮಹಿಳೆಯರು ಇದ್ದಾರೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕರ್ಯನರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


