Connect with us

ಅಂತರಂಗ

ಧರ್ಮ ಮರ್ಮ-03 : ದೈವಿಕತೆ ಮತ್ತು ಧಾರ್ಮಿಕತೆ

Published

on

  • ಯೋಗೇಶ್ ಮಾಸ್ಟರ್

ದೇವರ ಪರಿಕಲ್ಪನೆ ವಿಶ್ವದ ಬಹುತೇಕ ಸಂಸ್ಕೃತಿಗಳಲ್ಲಿ ಭಯದ ಮೂಲವೇ ಆಗಿದ್ದು, ನಂತರ ಅದನ್ನು ಸುಧಾರಿಸಿದಂತಹ ಉದಾಹರಣೆಗಳು ಧಾರಾಳವಾಗಿ ಕಾಣುತ್ತದೆ. ಇಂದಿನ ಭಾಷೆಯಲ್ಲಿ ಭಾರತೀಯರು ಎನ್ನುವುದಾದರೂ ಸ್ಪಷ್ಟ ಸೀಮೆ, ಸಂಸ್ಕೃತಿ, ಭಾಷೆ, ಜನಾಂಗವೇನೂ ಇಲ್ಲದ ಈ ನೆಲದ ವಿವಿಧ ನೆಲೆಗಳಲ್ಲೇ ದೇವರ ಕಲ್ಪನೆಗಳು ಅನೇಕ ರೀತಿಗಳಲ್ಲಿ ಉಂಟಾದವು.

ಆದರೆ, ನಂತರ ರಾಜಕೀಯವಾಗಿ ಮತ್ತು ಭೌಗೋಳಿಕವಾಗಿ, ಮಾತಾಡುವ ಭಾಷೆಯೂ ಸೇರಿದಂತೆ ಜನಗಣಗಳನ್ನು ಒಂದು ಮಾಡಿರುವ ಕಾರಣಕ್ಕಾಗಿ, ರಾಷ್ಟ್ರೀಯತೆಯ ಹೆಸರಿನಲ್ಲಿ, ಅದಕ್ಕೂ ಮೀರಿ ಜಗತ್ಕುಟುಂಬದ ಪರಿಕಲ್ಪನೆಯಲ್ಲಿ ಈ ವಿವಿಧತೆಗಳಲ್ಲಿ ಏಕತೆಯನ್ನು ಕಾಣುವ ಪ್ರಯತ್ನವನ್ನು ಹಲವಾರು ದಿಕ್ಕುಗಳಿಂದ ಮಾಡುತ್ತಿದ್ದರೂ ಸಾಧ್ಯವಾಗಿಲ್ಲ. ಬಹುಶಃ ಸಾಧ್ಯವಾಗುವುದೂ ಇಲ್ಲ.

ನಿರ್ಧಮೀಯವಾಗಿ, ಸಂಪ್ರದಾಯರಹಿತವಾಗಿ ಏಕತೆಯನ್ನು ಸಾಧಿಸಲು ಸಾಧ್ಯವಾಗುವುದು ಜೀವಸೂಕ್ಷ್ಮವಾದ ಮಾನವೀಯ ನೆಲೆಗಟ್ಟಿನಿಂದ ಯೋಚಿಸಲು ಸಮರ್ಥವಾದಾಗ ಮಾತ್ರ. ಏಕತೆಯೆಂದರೆ ಆಲೋಚನೆಯಷ್ಟೇ. ಆ ಆಲೋಚನೆಯನ್ನು ಖಾಸಗಿಯಾಗಿ ತಮ್ಮದೆಂದು ಭಾವಿಸುವುದು. ಧರ್ಮವೂ ಕೂಡಾ ಒಂದು ಆಲೋಚನೆಯೇ ಆಗಿದೆ. ವಾಸ್ತವವಾಗಿ ಮನುಷ್ಯನೆಂದು ನಾವು ಯಾವ ಜೀವವರ್ಗಕ್ಕೆ ಕರೆಯುತ್ತೇವೆಯೋ ಆ ತಳಿಯು ಮೂಲದಲ್ಲಿ ಪ್ರಾಣಿಯೇ ಆಗಿದ್ದು ಒಂದು ವಿಶಿಷ್ಟ ಗುಣ ಲಕ್ಷಣವೆಂದರೆ ಮನಸ್ಸು.

ಈ ಮನಸ್ಸಿನ ಕಾರಣದಿಂದಲೇ ಅವನಿಗೆ ಆಲೋಚಿಸಲು ಸಾಧ್ಯವಾಗಿರುವುದು. ಪ್ರಾಣಿಗಳಿಗಿರುವಂತೆ ಪ್ರವೃತ್ತಿಯೂ ಕೂಡಾ ಸಹಜವಾಗಿ ಇದೆ ಮತ್ತು ಆ ಪ್ರವೃತ್ತಿಯನ್ನು ಕ್ರಮಬದ್ಧಗೊಳಿಸಿಕೊಂಡು ತನ್ನ ಜೀವನವನ್ನು ಮುಂಗಾಣುವಂತಹ ಆಲೋಚನಾ ಶಕ್ತಿಯೂ ಇದೆ. ಈ ಆಲೋಚನೆಯಿಂದಾಗಿ ತರ್ಕವೂ ಸಾಧ್ಯವಾಗುತ್ತದೆ.

ಈ ಮನಸ್ಸಿಗೆ ಇರುವ ಆಲೋಚನಾ ಶಕ್ತಿಯ ಪರಿಣಾಮವಾಗಿ ತನ್ನ ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಭಾವನಾತ್ಮಕ ಚಟುವಟಿಕೆಗಳನ್ನು ತಾನೇ ನೋಡಿಕೊಳ್ಳಬಲ್ಲ. ಹಾಗೆಯೇ ಇತರರದನ್ನು ಗಮನಿಸಬಲ್ಲ. ತನ್ನ ಹಿಂದಿನದನ್ನು ಸ್ಮರಣೆಗೆ ತಂದುಕೊಂಡು ಅದನ್ನು ದಾಖಲು ಮಾಡಲು ಸಾಧ್ಯವಾಗುತ್ತದೆ. ಮುಂದಿನದನ್ನು ದೂರದೃಷ್ಟಿಯಿಂದ ಗ್ರಹಿಸಿ ಅದಕ್ಕೆ ಯೋಜನೆಗಳನ್ನು ರೂಪಿಸಿಕೊಳ್ಳಲೂ ಸಾಧ್ಯವಾಗುತ್ತದೆ.

ಒಂದು ಸ್ಪಷ್ಟವಾಗಿ ತಿಳಿದುಕೊಳ್ಳೋಣ. ಪ್ರಾಣಿಗಳ ಪ್ರವೃತ್ತಿಯೂ ಮತ್ತು ಮನುಷ್ಯನ ವೈಚಾರಿಕ ಮನಸ್ಸೂ ಏಕಕಾಲದಲ್ಲಿ ನಮ್ಮಲ್ಲಿ ಅಸ್ತಿತ್ವದಲ್ಲಿರುವುದರಿಂದಲೇ ಮನುಕುಲ ವಿಕಾಸದ ಚರಿತ್ರೆಯಲ್ಲಿ ಸಂಘರ್ಷಗಳನ್ನು, ದಾಳಿಗಳನ್ನು, ಯುದ್ಧಗಳನ್ನು ಸತತವಾಗಿ ಕಾಣುತ್ತಿದ್ದೇವೆ. ಅಹಂಕಾರ ಎನ್ನುವುದು ವ್ಯಕ್ತಿಗತವಾಗಿರುವ ಒಂದು ಸ್ವಕೇಂದ್ರಿತ ಭಾವ. ಈ ಭಾವವು ವರವೂ ಹೌದು, ಶಾಪವೂ ಹೌದು. ಈ ಅಹಂಕಾರದ ಭಾವವನ್ನು ಮನುಷ್ಯ ತನ್ನಲ್ಲಿ ಮತ್ತು ತನ್ನಂತೆಯೇ ಇರುವ ಇತರರಲ್ಲಿ ಸ್ಪಷ್ಟವಾಗಿ ಗುರುತಿಸಿದ.

ಹಾಗೂ ಅದರಿಂದಾಗುವ ಒಳಿತು ಮತ್ತು ಕೆಡಕುಗಳನ್ನೂ ಕೂಡಾ ಕಂಡುಕೊಂಡ. ಆದರೆ ಕೆಡುಕು ಎನ್ನುವುದು ಸಹಜವಾಗಿ ಆಗ್ರಹ ಮತ್ತು ಆಕ್ರೋಶಭರಿತವಾಗಿದ್ದು ರಭಸವನ್ನು ಹೊಂದಿರುತ್ತದೆ. ಒಳಿತು ಎನ್ನುವುದು ರಭಸ ರಹಿತವಾಗಿ ಸಾತ್ವಿಕವಾಗಿರುವುದರಿಂದ, ಅಗ್ರಗಾಮಿಯಾಗಿಲ್ಲದಿರುವುದರಿಂದ ಅದು ಕೆಡುಕಿನ ರಭಸವನ್ನು ತಡೆಯಲಾರದ ಕಾರಣದಿಂದ ಒಂದು ಕ್ರಮಕ್ಕೆ ಮನುಷ್ಯನ ಮನವನ್ನು ಒಳಪಡಿಸಲೇ ಬೇಕಾಗಿರುವಂತಹ ಅನಿವಾರ್ಯವಿತ್ತು.

ಆದಿಮ ಕಾಲದಲ್ಲಿ ಮನುಷ್ಯರು ಮನುಷ್ಯರಿಂದಲೇ ಎರಡು ಬಹುದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದರು. ಒಂದು ಬಲಶಾಲಿ ಮನುಷ್ಯರು ನಿರ್ಬಲರನ್ನು ನಿಗ್ರಹಿಸುತ್ತಿದ್ದರು. ಈ ನಿರ್ಬಲರು ದಾರ್ಷ್ಟ್ಯದ ಮತ್ತು ಆಕ್ರಮಣಕಾರಿಯಾದ ಬಲಶಾಲಿಗಳನ್ನು ಎದುರಿಸಲು ಸಂಘಟಿತರಾಗಬೇಕಿತ್ತು. ಅವರೂ ಶಕ್ತಿಶಾಲಿಗಳಾಗಬೇಕಿದೆ ಎಂಬುದನ್ನು ಕೆಲವರು ಮನಗಂಡರು.

ಆದರೆ ಇವರೂ ಬರಿದೇ ಶಕ್ತಿಶಾಲಿಗಳಾಗಿಬಿಟ್ಟಿದ್ದರೆ ಈ ಮೊದಲ ಕೇಡಿನ ವರ್ತನೆಗಳ ಶಕ್ತಿಶಾಲಿಗಳಂತೆಯೇ ವರ್ತಿಸುವ ಸಾಧ್ಯತೆಯೂ ಇರುವುದರಿಂದ ಒಂದು ಕ್ರಮದೊಳಗೆ ಅವರನ್ನು ಅಡಕ ಮಾಡಿಸುವ ಒಂದು ಅನಿವಾರ್ಯತೆ ಇತ್ತು. ಆ ಅನಿವಾರ್ಯತೆಯ ಫಲವೇ ಧರ್ಮ. ನಿರ್ಬಲರ ಮೇಲಿನ ಅನುಕಂಪವೇ ಧರ್ಮಗಳ ಉಗಮಕ್ಕೆ ಕಾರಣವಾಯಿತು.

ಪಶುತನದ ಕೆಂಡ

ಮನುಷ್ಯನ ಆಲೋಚನೆಗಳನ್ನು ಒಂದು ನಿರ್ಧಿಷ್ಟ ಕ್ರಮಕ್ಕೆ ಒಳಪಡಿಸಿದರೆ ಅಷ್ಟಕ್ಕೆ ಸುಮ್ಮನಾಗುವ ವರ್ಗವಲ್ಲ ಈ ಮಾನವ. ಅವನಲ್ಲಿ ಸ್ವಾಭಾವಿಕವಾದಂತಹ ಪಶುಪ್ರವೃತ್ತಿ ಸದಾ ಬೂಧಿ ಮುಚ್ಚಿದ ಕೆಂಡದಂತೆ ಇದ್ದೇ ಇರುತ್ತದೆ. ಅದಕ್ಕಾಗಿ ಆದಿಮ ಕಾಲದ ಪ್ರಕೃತಿಯ ವಿದ್ಯಮಾನಗಳಿಗೆ ಪಟ್ಟ ಭಯದ ಪ್ರತಿಫಲವಾಗಿ ಹುಟ್ಟಿದ ದೇವರ ಪರಿಕಲ್ಪನೆಯನ್ನು ಜಾಣ ನಾಯಕ ತೆಗೆದುಕೊಂಡ.

ತನ್ನನ್ನು ಪ್ರವಾದಿಯೆಂದು ಕರೆಯಿಸಿಕೊಂಡ ಆ ಜಾಣ ಮತ್ತು ಕರುಣಾಮಯಿ ಮನುಷ್ಯ ತನ್ನ ಸೂಕ್ಷ್ಮಗ್ರಹಿಕೆಗಳನ್ನು, ಕ್ರಮಕ್ಕೊಳಪಡಿಸುವ ರೀತಿಗಳನ್ನು ಮತ್ತು ದೂರಾಲೋಚನೆಗಳನ್ನು ತನ್ನೊಡನೆ ಇರುವವರಿಗೆ ದಾಟಿಸಲು ದೇವರನ್ನು ಮಾಧ್ಯಮವನ್ನಾಗಿಸಿಕೊಂಡ. ಇಲ್ಲವಾದರೆ ಇವನೂ ನಮ್ಮಂತೆಯೇ ಇರುವವನಾದರೆ ನಾವೇಕೆ ಇವನ ಮಾತನ್ನು ಕೇಳಬೇಕು? ಇದು ಮನುಷ್ಯನ ಸಾಧಾರಣ ಅಹಂಕಾರದ ಧೋರಣೆ.

ಅವನು ತಮ್ಮ ಜೀವನದ ಕ್ರಮವನ್ನೇ ನಿರ್ದೇಶಿಸಲು ಹೊರಟಿದ್ದಾನೆಂದರೆ ಒಂದೋ ಅವನು ಅತಿಮಾನುಷನಾಗಿರಬೇಕು, ಅಥವಾ ಮಾನವನಲ್ಲದೇ ಸರ್ವಶಕ್ತಿ ಇರುವಂತಹ ದೇವರು ತಾನು ಆಯ್ದ ಅವನ ಮೂಲಕ ತನ್ನ ಮಾತುಗಳನ್ನು ಹೇಳಬೇಕು. ಬೈಬಲ್ಲಂತೂ ಈ ವೈಚಾರಿಕತೆಯನ್ನು ತನ್ನ ಆದಿಕಾಂಡದಲ್ಲಿ ಬಹಳ ಸುಂದರವಾದ ಕಥನದ ರೂಪಕದಲ್ಲಿ ಕಟ್ಟಿಕೊಡುತ್ತದೆ.

ತನ್ನ ಶಕ್ತಿಯ ಬಗ್ಗೆ ಅಭಿಮಾನವಿದ್ದು ಅಹಂಕಾರದಿಂದ ತನ್ನ ದಾರ್ಷ್ಟ್ಯವನ್ನು ಪ್ರದರ್ಶಿಸುವ ಮನುಷ್ಯನ ಶಕ್ತಿಗೆ ಎಟುಕಲಾರದ ಶಕ್ತಿಯಾದ ದೇವರ ಪರಿಕಲ್ಪನೆ ಅವನನ್ನು ಭಯದಲ್ಲಿ ಹಿಡಿದಿಡಲೇ ನಂತರ ಬಳಕೆಯಾದದ್ದು. ಹಾಗೆಯೇ ಧರ್ಮವು ಈ ದಾರ್ಷ್ಟ್ಯದ ಮಾನವರನ್ನು ಕ್ರಮಗೊಳಿಸಿ ನಿರ್ಬಲರನ್ನು ರಕ್ಷಿಸಲೆಂದೇ ಜಾಣನೂ, ಅನುಭಾವಿಯೂ, ಅನುಕಂಪಪೂರಿತನೂ ಆದ ಮನುಷ್ಯನ ದಯೆಯಿಂದ ರೂಪುಗೊಂಡಿದ್ದು.
ಒಟ್ಟಿನಲ್ಲಿ ಇಷ್ಟು ತಿಳಿದುಕೊಳ್ಳೋಣ. ಭಯವೇ ದೇವರ ಮೂಲ. ದಯವೇ ಧರ್ಮದ ಮೂಲ.

ಇನ್ನು ಹಲವಾರು ಆಯಾಮಗಳಿಂದ ಧರ್ಮವನ್ನು ವಿವಿಧ ದೇಶಗಳಲ್ಲಿ, ವಿವಿಧ ಕಾಲಗಳಲ್ಲಿ ವಿವರಿಸಲು ಯತ್ನಿಸಿದ್ದಾರೆ. ಆ ವಿವರಣೆಗಳಿಗೂ ಆಯಾ ಪ್ರದೇಶಗಳ ಸಾಮಾಜಿಕ ವಿದ್ಯಮಾನಗಳು ಕಾರಣವಾಗಿರುತ್ತವೆ. ಅವುಗಳನ್ನು ಮುಂದೆ ಸಂದರ್ಭಾನುಸಾರ ನೋಡೋಣ.

ಒಟ್ಟಾರೆ ಧರ್ಮ, ಸಂಪ್ರದಾಯ, ನಂಬಿಕೆ ಇತ್ಯಾದಿಗಳ ಸಂಕೋಲೆಯಲ್ಲಿ ದೇವರನ್ನು ಬಂಧಿಸಿ, ತಾವು ಸೃಷ್ಟಿಸಿದ ದೇವರನ್ನು ತಮ್ಮ ಸೃಷ್ಟಿಕರ್ತನನ್ನಾಗಿ ಮಾಡಿಕೊಂಡು, ತನ್ನ ಪ್ರತಿರೂಪದಂತೆ ದೇವರು ತಮ್ಮನ್ನು ಸೃಷ್ಟಿಸಿದ ಎಂದು ತಮ್ಮ ಪ್ರತಿರೂಪವನ್ನು ಅವನಿಗೆ ಆರೋಪಿಸಿದ ಹೆಗ್ಗಳಿಗೆ ನಮ್ಮ ಮಾನವ ಜನಾಂಗಕ್ಕಿದೆ.

ಮಾನವನ ಶಕ್ತಿಯ ವಿಕಾಸ, ವಿಸ್ತರಣೆಯ ಮತ್ತು ಸಾಮರ್ಥ್ಯದ ಭೀಕರತೆಗಳನ್ನು ಮಾನವನೇ ಅರಿಯುತ್ತಿದ್ದಂತೆ, ಮಾನವನೇ ಇದನ್ನು ಒಂದು ತಹಂಬದಿಗೆ ತರಲು ಮತ್ತೊಂದು ಪರಿಕಲ್ಪನೆಯನ್ನು ಸೃಷ್ಟಿಸಿದ ಅಥವಾ ಸೃಷ್ಟಿಯಾಗಿದ್ದ ದೇವರ ಪರಿಕಲ್ಪನೆಯನ್ನು ಗಟ್ಟಿಗೊಳಿಸಿದ. ಈ ದೇವರ ಪರಿಕಲ್ಪನೆಯು ನಿರ್ಬಲರಿಗೆ ಭರವಸೆಯಾದರೆ, ಮತ್ತೂ ಕೆಲವರಿಗೆ ಶೋಷಣೆಯ ಅಸ್ತ್ರವಾಗಿದ್ದು ಮಾತ್ರ ವಿಪರ್ಯಾಸ.

ವಿಕಾಸವಾದ ಮಾನವನ ಬುದ್ಧಿಮತ್ತೆ

ಭೌತಿಕವಾಗಿ ಮಾನವನ ಶಕ್ತಿಯ ವಿಕಾಸವಾದದ್ದೇನೂ ನಮಗೆ ಕಾಣುವುದಿಲ್ಲ. ಸಹಸ್ರಾರು ವರ್ಷಗಳ ಹಿಂದೆ ಇದ್ದಂತಹ ಮನುಷ್ಯನ ದೈಹಿಕ ಸಾಮರ್ಥ್ಯವನ್ನು ಅಥವಾ ಅದೇ ಶಾರೀರಿಕ ಬಲದ ಉದಾಹರಣೆಗಳನ್ನು ಈಗಲೂ ಕಾಣಬಹುದು. ಆದರೆ ಜೀವನ ಪದ್ಧತಿ, ಆಹಾರ ಮತ್ತು ಉಡುಗೆ ತೊಡುಗೆಗಳ ಪದ್ಧತಿಗಳು, ತಂತ್ರಜ್ಞಾನದ ಬಳಕೆಗಳು ಒಂದೇ ಬಗೆಯಾಗಿ ಕಾಣುವುದಿಲ್ಲ.

ಅದೇ ಹಳೆಯ ಬಗೆಯ ಶರೀರಗಳು, ಅವೇ ಕಣ್ಣುಗಳು, ಅವೇ ಕೈಗಳು, ಅವೇ ಕರಳುಗಳು, ಯಕೃತ್ತು ಇತ್ಯಾದಿ, ಆದರೆ ಅವುಗಳು ಬಳಸುತ್ತಿರುವ ವಸ್ತುಗಳು, ಸೇವನೆಗಳು ಮತ್ತು ಪಡೆಯುತ್ತಿರುವ ಪೋಷಣೆಗಳಲ್ಲಿ ಧ್ರುವಾಂತರ ಮತ್ತು ಯುಗಾಂತರಗಳ ವ್ಯತ್ಯಾಸಗಳನ್ನು ಕಾಣಬಹುದು. ಆಗಿಲ್ಲದ ತಂತ್ರಜ್ಞಾನ ಈಗಿದೆ. ಆಗಿಲ್ಲದ ಜೀವನಪದ್ಧತಿ ಈಗ ಬಳಕೆಯಲ್ಲಿದೆ.

ಈಗ ನಾವು ಉಪಯೋಗಿಸುತ್ತಿರುವ, ಉಪಭೋಗಿಸುತ್ತಿರುವ ಆವಿಷ್ಕಾರದ ಫಲಗಳು ದೀರ್ಘಕಾಲದ, ಹಲವು ಜನಗಳ ಪ್ರಯತ್ನಗಳ, ತಪ್ಪು ಮತ್ತು ಪ್ರಯತ್ನಗಳಿಂದ ರೂಪುಗೊಂಡಿರುವವೇ. ಹಾಗೆಯೇ ನಮ್ಮ ಮುಂದಿನ ಪೀಳಿಗೆಗಳ ಬಳಕೆ ಮತ್ತು ಜೀವನ ಪದ್ಧತಿಯಲ್ಲಿ ಇನ್ನೂ ಮುಂದುವರಿದ ಅಥವಾ ವಿಕಸಿತ ಬದಲಾವಣೆಗಳನ್ನು ಕಾಣುವುದರಲ್ಲಿ ಯಾವ ಆಶ್ಚರ್ಯವೂ ಇಲ್ಲ.

ಆ ರೀತಿಯ ಬದಲಾವಣೆಗೆ ತಮ್ಮ ಬುದ್ಧಿ ಅಥವಾ ಮಿದುಳಿನ ಸಾಮರ್ಥ್ಯದ ಬಳಕೆಯೇ ಮತ್ತು ಅದರ ವ್ಯಾಪ್ತಿಯ ಅಪಾರ ಬಳಕೆಯೇ ಕಾರಣವಲ್ಲದೇ ಬೇರೇನೂ ಅಲ್ಲ. ಹಾಗೆಯೇ ಚಿಂತನಾ ಕ್ರಮ ಮತ್ತು ವಿಚಾರ ಧಾಟಿಯೂ ಕೂಡ ಬದಲಾಗುತ್ತಾ ಬಂದಿತು. ಆಗಿಲ್ಲದ ದೇವರು, ಧರ್ಮ, ನಂಬಿಕೆಗಳು ಈಗೆಲ್ಲಿಂದ ಬಂದವು? ಅವು ಹೇಗೆ ಬದಲಾಗದಂತಹ ಸತ್ಯವಾಯಿತು? ಯಾವ ದೇವರೂ, ಧರ್ಮವೂ ಈ ಜಗತ್ತಿನ ಸೃಷ್ಟಿಯಿಂದ ಇರಲಿ, ಮನುಷ್ಯನ ಸೃಷ್ಟಿಯಿಂದಲೇ ಇರಲಿಲ್ಲ.

ಮನುಕುಲ ವಿಕಾಸದ ಯಾವುದೋ ಒಂದು ಹಂತದಲ್ಲಿ ತನ್ನ ಆಲೋಚನೆಗಳಿಂದ ಉತ್ಪನ್ನವಾದ ವಿಚಾರಗಳಿಂದ ದೇವರು ಜಗತ್ತನ್ನು ಸೃಷ್ಟಿಸಿದನೆಂಬುದನ್ನು ಮನುಷ್ಯ ಹೇಗೆ ಗ್ರಹಿಸಿದ? ಕಾಣದ ದೇವರನ್ನು ಯಾರು, ಹೇಗೆ ಕಂಡ? ದೇವರೆಂಬುದು ಗ್ರಹಿಸಿದ, ವಿಚಾರ ಮಾಡಿದ, ಕಲ್ಪಿಸಿಕೊಂಡ, ವಿವಿಧ ಸತ್ವ, ಸಾರ, ಶಕ್ತಿಗಳಿಗೆ ಆರೋಪಿಸಿದಂತಹ ಪರಿಕಲ್ಪನೆಯೇ ಹೊರತು ಎಂದಿಗೂ ಸಾಕಾರಸ್ತಿತ್ವದಲ್ಲಿ ಕಾಣುವಂತಹ ಸತ್ಯವೇನಲ್ಲ.

ಆದರೂ ವಿಕಾಸವಾಗಿಸಲು ಒಪ್ಪದ ದೇವರ ಮತ್ತು ಧರ್ಮವನ್ನು, ಭಿನ್ನ ಬೇಧಗಳನ್ನು ಉಂಟು ಮಾಡುವ ಅವುಗಳ ಪ್ರಭಾವವು ಮನುಕುಲದ ಮೇಲೆ ಕಂಡೇ ಅದನ್ನು ಸುಧಾರಿಸಲು ಯತ್ನಿಸಿದರು. ಸಂಕೀರ್ಣವಾಗಿರುವ ಆ ನಿರಾಕಾರ ಮತ್ತು ಅಸಂಗತ ಪರಿಕಲ್ಪನೆಗಳನ್ನು ಸರಳೀಕರಣಗೊಳಿಸಿ ತಮ್ಮ ಸಹಜೀವಿಗಳನ್ನು ಒಂದು ಮಾನವೀಯ ಮತ್ತು ಉದಾರವಾದ ನೆಲೆಗಟ್ಟಿಗೆ ತರಲು ಶ್ರಮಿಸಿದರು.

ಆ ದೇವರ ಪರಿಕಲ್ಪನೆಗಳು ಜನಜೀವನದೊಳಗೆ ಅದೆಷ್ಟು ಹಾಸುಹೊಕ್ಕಾಗಿದ್ದವೆಂದರೆ, ಅವನ್ನು ನಿರಾಕರಿಸಿದರೆ, ಸುಧಾರಕರನ್ನೇ ತಿರಸ್ಕರಿಸುವ ಎಲ್ಲಾ ಸಾಧ್ಯತೆಗಳಿದ್ದವು. ಆದ್ದರಿಂದ ಆ ಪರಿಕಲ್ಪನೆಗಳನ್ನು ಸುಧಾರಿಸಲು, ತಮ್ಮ ಮುಂದುವರಿದ ಮತ್ತು ವಿಕಸಿತವಾದ ಚಿಂತನೆಗಳಿಂದ ವಿವರಿಸಲು, ಅರ್ಥ ನೀಡಲು ಪ್ರಯತ್ನಿಸಿದರು.

ಜೀವಂತವಿರುವುದರ ಲಕ್ಷಣವೇ ಬೆಳವಣಿಗೆ ಮತ್ತು ವಿಕಾಸ. ಆದರೆ, ತಮ್ಮದೇ ಆದಂತಹ ಕಾರಣಗಳಿಂದ ಈ ವಿಕಾಸವನ್ನಾಗಲಿ, ಬೆಳವಣಿಗೆಯನ್ನಾಗಲಿ ಒಪ್ಪದ ಮೂಲಭೂತವಾದಿಗಳು ಅವರನ್ನೇ ನಾಶಗೊಳಿಸಿದರು. ಅಥವಾ ಅವರ ನಂತರ ತಮ್ಮ ತೆಕ್ಕೆಗೇ ಅವರ ಚಿಂತನೆಗಳನ್ನೂ ಎಳೆದುಕೊಂಡು ಬಿಟ್ಟರು.

ದೇವರ ಸುಧಾರಕರು

ಕ್ರೈಸ್ತರ ದೇವರ ಪರಿಕಲ್ಪನೆಯ ಮೂಲ ಬ್ಯಾಬಿಲೋನಿಯನ್ನಿನ ಮಿಥಾಲಜಿಯ ಆಧಾರಿತ ವಿಚಾರಗಳಿಂದ ಮೂಡಿ, ಆದಮ, ಹವ್ವರಂತಹ ಆದಿ ಮಾನವರೂ ಮೊದಲ್ಗೊಂಡು ಯಹೂದಿಗಳ ಸಾಂಪ್ರದಾಯಿಕ ನಂಬುಗೆಗೆ ಎಡೆ ಮಾಡಿತ್ತು. ಅವುಗಳು ವಿಕಸಿತವಾದ ಹಂತಗಳು ಈಗ ನಮಗೆ ಬೇಡ. ಆದರೆ, ಯೇಸು ಎಂಬ ಸಮಾಜ ಸುಧಾರಕ ಅವರ ಪರಿಕಲ್ಪನೆಗಳನ್ನು ಸಾಮಾಜಿಕವಾಗಿ, ಆಧ್ಯಾತ್ಮಿಕವಾಗಿ, ತಾತ್ವಿಕವಾಗಿ ಸುಧಾರಿಸುವ ನಿಟ್ಟಿನಲ್ಲಿ ಮಾನವತೆಯ ಮತ್ತು ಔದಾರ್ಯದ ನೆಲೆಗಟ್ಟಿನ ಸಮಾಜದಲ್ಲಿ ಎಲ್ಲರನ್ನೂ ಒಂದುಗೂಡಿಸುವ ಪ್ರಯತ್ನ ಮಾಡಿದ.

ಈಗಲೂ ಬಹಳಷ್ಟು ಕ್ರೈಸ್ತರು ಉಪಯೋಗಿಸುವ ಶಬ್ಧ ‘ಗಾಡ್ ಫಿಯರ್’. ದೇವರು ಎಂಬುವುದಕ್ಕೆ ಇಷ್ಟವಾಗದ್ದನ್ನು ಮಾಡದೇ ಹೋದರೆ ಅದರ ಆಗ್ರಹಕ್ಕೆ ಗುರಿಯಾಗುತ್ತೇವೆಂಬ ಪರಿಕಲ್ಪನೆ ಜನರು ನೈತಿಕವಾಗಿ ಬದುಕುವುದಕ್ಕೂ, ದುರ್ಮಾಗಿಗಳಾಗದೇ ಇರುವುದಕ್ಕೂ ಸಾಧ್ಯವಾಗುವುದಕ್ಕೆ ಸಹಾಯಕವಾದದ್ದು. ಉದ್ದೇಶ ಒಳ್ಳೆಯದೇ ಆದರೂ, ನಕಾರಾತ್ಮಕವಾದ ಅನುಸಂಧಾನದ ಬದಲಾಗಿ ಭೀತಿಯನ್ನು ಪ್ರೀತಿಗೆ ಬದಲಿಸಲು ಯೇಸು ಯತ್ನಿಸಿದ.

ಭೀತಿಯನ್ನು ಪ್ರೀತಿಯನ್ನಾಗಿ ಬದಲಿಸುವುದೂ ಕೂಡ ಅತಿ ಉನ್ನತವಾದ ಕ್ರಾಂತಿಕಾರಕ ನಡೆಯೇ ಆಗಿತ್ತು. ನಿರಾಕಾರವಾಗಿರುವ ದೇವರನ್ನು ತಂದೆಯೆಂಬಂತೆ ಭಾವನಾತ್ಮಕವಾಗಿ ಸಾಕಾರಗೊಳಿಸಿ, ಪ್ರೀತಿ ಮತ್ತು ವಾತ್ಸಲ್ಯಪೂರ್ಣವಾದ ತಂದೆಯಂತೆ ಅವನನ್ನು ಬಿಂಬಿಸಿ, ಅವನ ಇಷ್ಟಕ್ಕೆ ನಡೆದುಕೊಂಡು ಪ್ರೇಮಪೂರ್ಣ ಮತ್ತು ಔದಾರ್ಯಪೂರ್ಣವಾದ ಜನರ ಸಮಾಜವನ್ನು ಉಂಟುಮಾಡಲು ಯತ್ನಿಸಿದ.

ಭೀತಿಯ ಸ್ಥಾನದಲ್ಲಿ ಪ್ರೀತಿಯು ಬಂದಿತಾದರೂ, ಧಾರ್ಮಿಕತೆಯಾಗಲಿ, ಸಾಂಪ್ರದಾಯಕ ಧೋರಣೆಗಳಾಗಲಿ ಅದನ್ನು ಒಪ್ಪಲು ತಯಾರಿರಲಿಲ್ಲ. ರಾಜಕೀಯಪ್ರೇರಿತ ಅಥವಾ ಸ್ವಸ್ಥಾನಕೇಂದ್ರಿತರಾಗಿದ್ದ ಅಂದಿನ ಪುರೋಹಿತರೇ ಯೇಸುವಿನ ವಿಚಾರಗಳನ್ನು ಅವನ ದೇಹ ಸಮೇತ ನಾಶ ಮಾಡಲು ಯತ್ನಿಸಿ ಸಫಲರೂ ಆದರು. ಆದರೆ ಕ್ರೈಸ್ತರಲ್ಲಿ ಇಂದಿಗೂ ಪಾದ್ರಿಗಳೆಂಬ ಪುರೋಹಿತರು ಇದ್ದಾರೆ ಎಂಬುದು ವಿಪರ್ಯಾಸವೋ, ಅವಶ್ಯಕವೋ, ವ್ಯಂಗ್ಯವೋ; ವಿಭಿನ್ನ ನೆಲೆಗಳ ವಿಶ್ಲೇಷಣೆಗಳಲ್ಲಿ ವಿಭಿನ್ನ ರೀತಿಗಳಲ್ಲಿ ವ್ಯಕ್ತವಾಗುತ್ತದೆ.

ಆದರೆ ಆ ಪಾದ್ರಿಗಳು ಎಂತವರೆಂಬುದು ಧರ್ಮಾಧಾರಿತವಾದುದಲ್ಲ, ವ್ಯಕ್ತಿಗತವಾದದು. ಧರ್ಮದ ಲಾಂಛನದಡಿಯಲ್ಲಿ ತಮ್ಮ ಮಾನವೀಯ ಮತ್ತು ಉದಾರವಾದ ನೆಲೆಗಟ್ಟಿನ ಆಧಾರದಲ್ಲಿ ಧಾರ್ಮಿಕತೆಯನ್ನು ವಿವರಿಸುತ್ತಾರೆ ಮತ್ತು ಆಚರಿಸುತ್ತಾರೆ.

ಇರಲಿ, ಮುಂದೆ ಕ್ರೈಸ್ತ ಧರ್ಮದ ಅವತರಣವಾದ ಮೇಲೆ ಪಿತ, ಸುತ ಮತ್ತು ಪವಿತ್ರಾತ್ಮಗಳೆಂಬ ತ್ರಿಮೂರ್ತಿಯ ಪರಿಕಲ್ಪನೆಯಿಂದ ಸೈದ್ಧಾಂತಿಕವಾಗಿ ಮತ್ತಷ್ಟು ಸಂಕೀರ್ಣಗೊಂಡಂತಹ ವಿಷಯದ ಉಗಮವಾಯ್ತು. ತಮ್ಮನ್ನು ಪಾಪಿಯೆಂದು ನಕಾರಾತ್ಮಕ ಧೋರಣೆಯನ್ನೂ ಮತ್ತು ಪ್ರೀತಿಯೆಂಬ ಸಕಾರಾತ್ಮಕ ಧೋರಣೆಯನ್ನೂ ಒಟ್ಟೊಟ್ಟಿಗೇ ಸ್ವೀಕರಿಸಿದ್ದಾರೆ.

ಒಂದು ವೇಳೆ ಯೇಸುವೆಂಬ ಸುಧಾರಕನಿಗೆ ತನ್ನ ವಿಷನ್ ಮತ್ತು ಮಿಷನ್‍ಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಿದ್ದರೆ, ಇಂದು ಕ್ರೈಸ್ತಮತವೆಂಬುದೇ ಇರುತ್ತಿರಲಿಲ್ಲವೆಂದು ನನ್ನ ಗ್ರಹಿಕೆ. ಪಿತ, ಸುತ ಮತ್ತು ಪವಿತ್ರಾತ್ಮಗಳೂ ಇರುತ್ತಿರಲಿಲ್ಲ. ಆತನ ಸಾವಿನಾಧಾರಿತವಾದ ಆರಾಧನೆಗಳಾಗಲಿ, ಸಂಪ್ರದಾಯಗಳಾಗಲಿ ಇರುತ್ತಿರಲಿಲ್ಲ. ಪೂರ್ಣವಾಗಿ ಸಂವಹಿಸದ ಯೇಸುವಿನ ವಿಚಾರಗಳ ಅಲ್ಪ ಗ್ರಹಿಕೆಗಳು ಪೀಳಿಗೆಯಿಂದ ಪೀಳಿಗೆಗೆ ಹಸ್ತಾಂತರಗಳಾಗುತ್ತಾ ವಿಷಯಾಂತರವೇ ಆಗಿರುವುದರಲ್ಲಿ ಯಾವ ಆಶ್ಚರ್ಯವೂ ಇಲ್ಲ.

ಮನುಕುಲದಲ್ಲಿ ಶೋಷಣೆಗೆ ಒಳಗಾಗುವ ನಿರ್ಬಲರನ್ನು ಮಾನಸಿಕವಾಗಿ ಮತ್ತು ಆತ್ಮಿಕವಾಗಿ ಸದೃಢಗೊಳಿಸಲು ಉದ್ದೇಶಿಸಿದ್ದ ಯೇಸುವಿನ ಬೋಧನೆಗಳು ಮತ್ತು ದೌರ್ಜನ್ಯ ಹಾಗೂ ನಿರ್ಲಜ್ಜ ಕ್ರೌರ್ಯ ಸಂಪ್ರದಾಯದ ವಿರುದ್ಧವಾದ ಸಾತ್ವಿಕವಾದ ಕ್ರಾಂತಿಯಿಂದ ಕೂಡಿದ ಆತನ ಜೀವನ ಚರಿತ್ರೆಯ ಪರಿಕ್ಷಿಪ್ತ ರೂಪ ಬೈಬಲ್.

ಬೈಬಲ್ ಕ್ರಿಸ್ತನೆಂಬ ಜಾಣ ಮತ್ತು ದಯಾಹೃದಯದ ಒಂದು ಪರಿಚಯವನ್ನಷ್ಟೇ ನೀಡುವುದು. ಆತನ ವಾಸ್ತವ ರೂಪವನ್ನಲ್ಲ. ಹಲವಾರು ಬೈಬಲ್ಲುಗಳಿವೆ ಅವುಗಳಲ್ಲಿರುವ ಹೊಟ್ಟು ಮತ್ತು ಕಾಳುಗಳನ್ನು ಬೇರ್ಪಡಿಸುವುದು ಮತ್ತು ಅದರಿಂದ ಕ್ರಿಸ್ತನೆಂಬ ಮನುಕುಲದ ಕರುಣೆಯ ಬೀಜವನ್ನು ಹೆಕ್ಕಿ ತೆಗೆಯುವುದು ಸಾಧ್ಯ. ಆದರೆ ಸಧ್ಯಕ್ಕೆ ಈ ಲೇಖನಕ್ಕೆ ಆ ಉದ್ದೇಶವಿಲ್ಲ. ಮುಂದೆ ಕ್ರೈಸ್ತಧರ್ಮದ ಚರಿತ್ರೆಯ ಸಮಯದಲ್ಲಿ ಇದನ್ನು ವಿವರವಾಗಿ ನೋಡೋಣ.

ಇದೊಂದು ಉದಾಹರಣೆಯಷ್ಟೇ! ಯಾವುದೇ ಧಾರ್ಮಿಕ, ಸಾಮಾಜಿಕ, ಆಧ್ಯಾತ್ಮಿಕ ಸುಧಾರಕನಿಗೆ ಹಲವಾರು ರಾಜಕೀಯ, ಸಾಮಾಜಿಕ ಅಡೆತಡೆಗಳಿದ್ದು ಅಷ್ಟು ಸುಲಭವಾಗಿ ಆತನ ದೃಷ್ಟಿಯಂತೆ ತನ್ನ ಮಿಷನ್‍ನನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಸುಧಾರಕರ, ಹೋರಾಟಗಾರರ ವಿಫಲ ಮಿಷನ್‍ಗಳ ಮುಂದುವರಿಕೆಗಳೇ ಧರ್ಮಗಳಾಗುವವು.

ಆದರೆ ಅವು ವಿಕಾಸಕ್ಕೆ ಮಾರ್ಗವಾಗದೇ, ಮಂಡೂಕಗಳ ಕೂಪಕ್ಕೆ ಮತ್ತೊಂದು ಕೊಡುಗೆಯಾಗುವುದು ಮನುಕುಲದ ದುರಾದೃಷ್ಟ. ಬುದ್ಧ, ಆದಿನಾಥ, ಮಹಾವೀರ, ಮಹಮದ್, ನಾನಕ್, ಬಸವ, ಬಹಾಯ್ ಯಾರೇ ಆಗಲಿ ಇದರಿಂದ ಹೊರತಲ್ಲ.

ಬೆಳವಣಿಕೆ ಮತ್ತು ವಿಕಾಸದ ಹಾದಿಯಲ್ಲಿಯೇ ಇರುವ ಜಗತ್ತಿನಲ್ಲಿ ಹೊಸ ಪ್ರವಾದಿಗಳು, ತೀರ್ಥಂಕರರು ಹುಟ್ಟಲಾರರೇಕೆ? ಹುಟ್ಟಿದರೂ, ಘೋಷಿಸಿಕೊಂಡರೂ ಕೇಳುವವರಾರು? ಒಪ್ಪುವುದಾದರೂ ಹೇಗೆ ಸಾಧ್ಯ?
ಹಾಗೊಮ್ಮೆ ಯಾರಾದರೂ ವೈಚಾರಿಕವಾಗಿ, ಸೈದ್ಧಾಂತಿಕವಾಗಿ ಮುಂದಾದರೂ ಜನ ಸಮೂಹ ಅವನ ಚಿಂತನೆಗಳ ಧಾರೆಯನ್ನು ಮೆಚ್ಚುವುದಕ್ಕೆ ಇಚ್ಛಿಸುವುದಿಲ್ಲ.

ತಮ್ಮ ಸಮಕಾಲೀನ ಯಾವುದೋ ಈ ವ್ಯಕ್ತಿಯನ್ನು ನಂಬಿಕೆಯ ಕೇಂದ್ರಕ್ಕೆ ಒಯ್ಯಲಾಗುವುದಿಲ್ಲ. ವಿಚಾರಗಳನ್ನು ಆಳಕ್ಕೆ ತೆಗೆದುಕೊಳ್ಳಲಾಗುವುದಿಲ್ಲ. ತಮ್ಮಂತೆ ಉಣ್ಣುವ, ಉಡುವಷ್ಟೇ ಮಾಡದೇ ಅತಿಮಾನುಷವಾದುದನ್ನು ಮಾಡಿದರೆ ಒಂದು ಹಂತಕ್ಕೆ ಒಪ್ಪಲು ಸಾಧ್ಯ! ಈ ಕಥೆ ಇಂದಿನದು ಮಾತ್ರವಲ್ಲ. ಅನಾದಿಕಾಲದಿಂದಲೂ ಹಾಗೆಯೇ ಇರುವುದು.

ಹಾಗಾಗಿಯೇ ಎಂದೋ, ಯಾವುದೋ ಕಾಲದಲ್ಲಿ ಏನೋ ಮಾಡಿ ಸತ್ತವರಷ್ಟೇ ದೇವರಾಗುತ್ತಾರೆ. ಈಗ ನಾನು ದೇವರೆಂದು ಘೋಷಿಸಿಕೊಂಡವರೆಲ್ಲಾ ಅಪಹಾಸ್ಯಕ್ಕೆ, ಟೀಕೆಗೆ ಅಥವಾ ವಿಮರ್ಶೆಗೆ ಗುರಿಯಾಗುತ್ತಾರೆ. ತಾನು ದೇವರೆನ್ನದೇ ಬರಿಯ ದೇವರ ಮಗನೆಂದು ಕರೆದುಕೊಂಡ ಕ್ರಿಸ್ತನಿಗೇ ಅಪಾಯ ತಪ್ಪಿರಲಿಲ್ಲ.

ಪುಟ್ಟಪರ್ತಿಯ ಸತ್ಯಸಾಯಿಬಾಬಾನ ಸಮಕಾಲೀನರಾದ ಮತ್ತು ಆತನ ವಿವಿಧ ವಿಷಯಗಳು ಸ್ಪಷ್ಟವಾಗಿ ತಿಳಿದಿರುವಂತಹ ಈ ನಮ್ಮ ಪೀಳಿಗೆಯು ಮುಗಿದಾದ ಮೇಲೆ ಮುಂಬರುವ ಪೀಳಿಗೆಯೊಂದು ಅವರ ಎಲ್ಲಾ ಪ್ಲಸ್ ಮತ್ತು ಮೈನಸ್ಸುಗಳನ್ನು ವಿವಿಧ ರೀತಿಗಳಲ್ಲಿ ಅರ್ಥೈಸುತ್ತಾ, ಈಗಿನ ಕೃಷ್ಣನ ಪರಿಕಲ್ಪನೆಯ ರೀತಿಯಲ್ಲಿ ಒಂದು ದೇವರನ್ನಾಗಿ ಸ್ಪಷ್ಟೀಕರಿಸಬಹುದು. ದೇವರೆನ್ನುವ ಅಭೂತಪೂರ್ವವಾದ, ಅತ್ಯದ್ಭುತವಾದ ಪರಿಕಲ್ಪನೆಗೆ ಸೇರಿಕೊಳ್ಳಲು ಮನುಷ್ಯನಿಗೆ ಹಲವು ದಾರಿಗಳುಂಟು.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending