ದಿನದ ಸುದ್ದಿ
ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ : ನ್ಯಾಯಾಧೀಶೆ ವೇಲಾ ಡಿ.ಕೆ
ಸುದ್ದಿದಿನ,ದಾವಣಗೆರೆ:ಜಾಗತಿಕವಾಗಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದಾಗಿದ್ದು ಯುವ ಸಂಪತ್ತನ್ನು ಕಾಪಾಡಿಕೊಳ್ಳಲು ಮಾದಕ ವಸ್ತುಗಳಿಂದ ದೂರವಿರಲು ಇದರ ಸಾಗಾಟ ಮತ್ತು ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ರೈಲ್ವೆ ನಿಲ್ದಾಣ ಮತ್ತು ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ಮಾದಕ ವಸ್ತುಗಳ ಪತ್ತೆಗೆ ಸ್ಕ್ಯಾನರ್ ಅಳವಡಿಕೆ ಪರಿಹಾರವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೇಲಾ ಡಿ.ಕೆ.ಅಭಿಪ್ರಾಯಪಟ್ಟರು.
ಅವರು ಬುಧವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೈಮಾಸಿಕ ಸಭೆ, ಮಾದಕ ವಸ್ತುಗಳ ತಡೆ, ಪೋಕ್ಸೊ ತಡೆ, ಭಿಕ್ಷಾಟನೆ ತಡೆ ಸೇರಿದಂತೆ ಬಾಲನ್ಯಾಯ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಮಾದಕ ವಸ್ತುಗಳನ್ನು ರೈಲ್ವೆ ಮತ್ತು ಬಸ್ಗಳ ಮೂಲಕ ಸಾಗಣೆ ಮಾಡುತ್ತಿದ್ದು ಇದನ್ನು ಪತ್ತೆಹಚ್ಚಲು ಸ್ಕ್ಯಾನರ್ ಅಳವಡಿಕೆ ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರೊಂದಿಗೆ ಚರ್ಚೆ ಮಾಡಿದರು.
ಇದಕ್ಕೆ ಈ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಅನುದಾನವನ್ನು ನೀಡುವ ಮೂಲಕ ಸಾಧನ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜುಲೈ 12 ಕ್ಕೆ ಲೋಕ ಅದಾಲತ್
ಬರುವ ಜುಲೈ 12 ಕ್ಕೆ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ನಡೆಯಲಿದ್ದು ರಾಜಿಯಾಗಬಲ್ಲ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಆಯಾ ಇಲಾಖೆಯವರು ಇದಕ್ಕೆ ಸಂಪೂರ್ಣ ಸಹಕಾರ ನೀಡುವ ಮೂಲಕ ಹೆಚ್ಚು ಪ್ರಕರಣಗಳನ್ನು ಇತ್ಯರ್ಥ ಮಾಡಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿ ಕಕ್ಷಿದಾರರೂ ಸಹ ಇದರ ಉಪಯೋಗ ಪಡೆದುಕೊಳ್ಳುವ ಮೂಲಕ ಶೀಘ್ರ ನ್ಯಾಯದಾನ ಪಡೆಯಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಬಾಲ್ಯ ವಿವಾಹ, ಪೋಕ್ಸೋ ತಡೆಗೆ ಒತ್ತು ನೀಡಿ
ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ, 2025 ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ದಾವಣಗೆರೆ 9, ಹರಿಹರ 1, ಹೊನ್ನಾಳಿ 2, ಚನ್ನಗಿರಿ 6 ಪ್ರಕರಣಗಳು ಸೇರಿ ಒಟ್ಟು 18 ಪ್ರಕರಣಗಳು ದಾಖಲಾಗಿವೆ. ಬಾಲ್ಯ ವಿವಾಹ ಮತ್ತು ಪೋಕ್ಸೋ ತಡೆಗಟ್ಟಲು ಮಕ್ಕಳಿಗೆ ಶಾಲೆಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಮಾಡಬೇಕಾಗಿದ್ದು ಡಿಡಿಪಿಐ ಕ್ರಮ ಕೈಗೊಳ್ಳಲು ತಿಳಿಸಿದರು.
ಹಾಸ್ಟೆಲ್ ವಿದ್ಯಾರ್ಥಿಗಳ ವಿವರ
ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಂದುವರೆಸಿರುವ ಕುರಿತು ವರದಿಯನ್ನು ಸಿದ್ದಪಡಿಸಿ ನೀಡಬೇಕು. ವಿದ್ಯಾರ್ಥಿನಿಯರು ವ್ಯಾಸಂಗ ಮುಂದುವರೆಸಿರುವ ಬಗ್ಗೆ ಮತ್ತು ಕೈಗೊಂಡಿರುವ ಉದ್ಯೋಗದ ಬಗ್ಗೆಯು ಮಾಹಿತಿ ಸಂಗ್ರಹಿಸಿ ವರದಿ ನೀಡಲು ತಿಳಿಸಿದರು.
ಬಾಲ ಭವನ ಮತ್ತು ಸಂಘರ್ಷಕ್ಕೆ ಒಳಗಾಗಿರುವ ಮಕ್ಕಳ ಪಾಲನೆ ಪೋಷಣೆ ಕುರಿತಂತೆ ಅವರ ಪೋಷಣೆಗಾಗಿ ಕೈಗೊಂಡಿರುವ ಕ್ರಮಗಳು, ನಿರಾಶ್ರಿತ ಪರಿಹಾರ ಕೇಂದ್ರದಲ್ಲಿನ ನಿವಾಸಿಗಳ ಕುಟುಂಬಸ್ಥರನ್ನು ಪತ್ತೆಹಚ್ಚಿ ಅವರ ಕುಟುಂಬದವರ ಬಳಿ ಕಳುಹಿಸುವ ವ್ಯವಸ್ಥೆ ಜೊತೆಗೆ ಯಾರು ಪೋಷಕರನ್ನು ನೋಡಿಕೊಳ್ಳುವುದಿಲ್ಲ ಅದನ್ನು ಹಿರಿಯ ನಾಗರಿಕರ ಕಾಯ್ದೆಯಡಿ ಪರಿಶೀಲನೆ ನಡೆಸಲು ಸೂಚನೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಮಾತನಾಡಿ ಇತ್ತೀಚೆಗೆ ನಗರದ ಶ್ರೀರಾಮನಗರದಲ್ಲಿನ ಮೆಟ್ರಿಕ್ ನಂತರದ ಬಿಸಿಎಂ ಹಾಸ್ಟೆಲ್ಗೆ ರಾತ್ರಿ 10 ರ ಸಮಯದಲ್ಲಿ ಅನಿರೀಕ್ಷಿತ ಭೇಟಿ ನೀಡಲಾಗಿತ್ತು. ಈ ವೇಳೆ ಹಾಸ್ಟೆಲ್ ವಾರ್ಡನ್ ಇರಲಿಲ್ಲ, ಈ ಬಗ್ಗೆ ವಿದ್ಯಾರ್ಥಿಗಳನ್ನು ಕೇಳಿದಾಗ ಬಂದು ಹೋಗುತ್ತಾರೆ ಎಂದು ಮಾಹಿತಿ ನೀಡಿದರು. ವಾರ್ಡನ್ ಹಾಸ್ಟೆಲ್ನಲ್ಲಿ ಇದ್ದು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಕುರಿತು ಗಮನಿಸಬೇಕು. ಆದರೆ ಇವರು ತಮ್ಮ ಕರ್ತವ್ಯಲೋಪವೆಸಗುತ್ತಿದ್ದಾರೆ. ನಿಯಂತ್ರಿಸುವ ವಾರ್ಡನ್ ಇಲ್ಲದಿದ್ದಲ್ಲಿ ವಿದ್ಯಾರ್ಥಿಗಳ ನಿಗಾತಪ್ಪಲಿದೆ. ಇದರಿಂದ ಅನೇಕ ದೂರುಗಳಿಗೆ ಆಸ್ಪದವಾಗಲಿದ್ದು ಈ ರೀತಿ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ರಕ್ಷಣಾಧಿಕಾರಿ ಮಂಜುನಾಥ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ಕುಮಾರ್, ಜಿಲ್ಲಾ ಸರ್ಕಾರಿ ವಕೀಲರಾದ ಶಾಮನೂರು ಪ್ರಕಾಶ್, ವಕೀಲರ ಸಂಘದ ಕಾರ್ಯದರ್ಶಿ ಬಸವರಾಜ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ5 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ5 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ5 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ5 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ5 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ5 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ5 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



