Connect with us

ಬಹಿರಂಗ

ಸಂವಿಧಾನ ಚೌಕಟ್ಟಿನಲ್ಲೇ ಪ್ರಜಾತಂತ್ರದ ಹರಣ

Published

on

  • ನಾ ದಿವಾಕರ

ಪ್ರಜೆಗಳ ಸಾರ್ವಭೌಮತ್ವ ಮತ್ತು ಸ್ವಾವಲಂಬಿ ದೇಶದ ಕನಸುಗಳನ್ನು ಹೊತ್ತು ವಿಶ್ವದ ಶ್ರೇಷ್ಠ ಸಂವಿಧಾನವನ್ನು ಅಂಗೀಕರಿಸಿದ ಸ್ವತಂತ್ರ ಭಾರತದಲ್ಲಿ ಅಧಿಕಾರ ರಾಜಕಾರಣ ಸ್ವಾಭಿಮಾನಿ ಜನಪ್ರತಿನಿಧಿಗಳನ್ನು ಹುಟ್ಟುಹಾಕಬೇಕಿತ್ತು. ಜನಪರ ಕಾಳಜಿ, ಸಂವಿಧಾನ ಬದ್ಧತೆ, ಪ್ರಜಾತಂತ್ರದ ಬಗ್ಗೆ ಗೌರವ ಮತ್ತು ಸಾಂವಿಧಾನಿಕ ನಿಯಮ ಹಾಗೂ ಮೌಲ್ಯಗಳಲ್ಲಿ ಶ್ರದ್ಧೆ ಈ ಲಕ್ಷಣಗಳು ಮಾತ್ರ ಇಂತಹ ಸ್ವಾಭಿಮಾನಿ ಪ್ರತಿನಿಧಿಗಳನ್ನು ಸೃಷ್ಟಿಸಲು ಸಾಧ್ಯ. ದುರಂತ ಎಂದರೆ 70 ವರ್ಷಗಳ ಸ್ವತಂತ್ರ ಭಾರತ ಅಧಿಕಾರ ರಾಜಕಾರಣದ ಅಂಗಳದಲ್ಲಿ ಪರಾವಲಂಬಿ ಪ್ರತಿನಿಧಿಗಳನ್ನು ಸೃಷ್ಟಿಸಿದೆ. ಮಾರಿಕೊಂಡ ಸರಕುಗಳನ್ನು ಸೃಷ್ಟಿಸಿದೆ. ಸ್ವಾಭಿಮಾನ ಶೂನ್ಯ ಧನದಾಹಿಗಳನ್ನು ಸೃಷ್ಟಿಸಿದೆ. ಅಧಿಕಾರ ಮೋಹಿಗಳನ್ನು ಸೃಷ್ಟಿಸಿದೆ.

ಭಾರತ ತನ್ನ ಭೌಗೋಳಿಕ ಸ್ವಾತಂತ್ರ್ಯದ ರಕ್ಷಣೆಗೆ ಅಗತ್ಯವಾದ ಎಲ್ಲ ರಕ್ಷಣಾ ಪರಿಕರಗಳನ್ನೂ ಸೃಷ್ಟಿಸಿಕೊಂಡಿದೆ. ವಿಶ್ವದ ಯಾವುದೇ ಪ್ರಬಲ ರಾಷ್ಟ್ರಗಳನ್ನು ಎದುರಿಸಲು ಭಾರತದ ಸೇನೆ ಮತ್ತು ಶಸ್ತ್ರಾಸ್ತ್ರ ಸಂಗ್ರಹಾಗಾರ ಸಿದ್ಧವಾಗಿದೆ. ಬಾಹ್ಯ ಶತ್ರುಗಳು ಭಾರತದ ಮೇಲೆ ದಾಳಿ ನಡೆಸುವುದು ಸುಲಭವಲ್ಲ ಎನ್ನುವುದೂ ವಿಶ್ವ ಸಮುದಾಯಕ್ಕೆ ತಿಳಿದಿದೆ.

ಈ ಭೌಗೋಳಿಕ ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವ ಸಮಸ್ತ ಭಾರತೀಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿರಲಿಕ್ಕೂ ಸಾಕು. ಆದರೆ ದೇಶ ಎನ್ನುವ ಪರಿಕಲ್ಪನೆ ಭೂಪಟದಲ್ಲಿನ ರೇಖೆಗಳಿಗಷ್ಟೇ ಸೀಮಿತವಾಗುವುದಿಲ್ಲ. ಸುರಕ್ಷಿತ ಗಡಿ ರೇಖೆಗಳು ಭೌಗೋಳೀಕ ದೇಶವನ್ನು ರಕ್ಷಿಸುತ್ತವೆ, ಬೌದ್ಧಿಕ ದೇಶವನ್ನು ರಕ್ಷಿಸಲು ನಮ್ಮ ಅಂತಃಸತ್ವ ಮತ್ತು ಅಂತಃಶಕ್ತಿ ಸುಸ್ಥಿರವಾಗಿರುವುದು ಅವಶ್ಯ.

ಈ ಅಂತಃಶಕ್ತಿ ಅಥವಾ ಅಂತಃಸತ್ವ ಇರುವುದು ನಮ್ಮ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಬದುಕಿನಲ್ಲಿ. ಈ ಮೂರೂ ವಲಯಗಳನ್ನು ಪ್ರತಿನಿಧಿಸುವ ಪ್ರತಿನಿಧಿಗಳನ್ನು ನಮ್ಮ ನಡುವಿನಿಂದಲೇ ನಾವು ಕಾಲದಿಂದ ಕಾಲಕ್ಕೆ ಆಯ್ಕೆ ಮಾಡಿ ಶಾಸನ ಸಭೆಗಳಿಗೆ ಕಳಿಸುತ್ತಿದ್ದೇವೆ. ಈ ಪ್ರತಿನಿಧಿಗಳು ವಿಧಾನಸಭೆಗಳಲ್ಲಿ, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕುಳಿತು, ಚರ್ಚೆ ನಡೆಸಿ ಕೈಗೊಳ್ಳುವ ತೀರ್ಮಾನಗಳು ಈ ದೇಶದ ಬೌದ್ಧಿಕ ಅಂತಃಸತ್ವವನ್ನು, ಸಾಮಾಜಿಕ ಸ್ವಾಸ್ಥ್ಯವನ್ನು, ರಾಜಕೀಯ ಸುಸ್ಥಿರತೆಯನ್ನು ನಿರ್ಧರಿಸುತ್ತವೆ.

ಸ್ವಾತಂತ್ರ್ಯಾನಂತರದ ಮೊದಲ ನಾಲ್ಕು ದಶಕಗಳಲ್ಲಿ ನಿರ್ಮಿಸಲಾದ ಸ್ವಾವಲಂಬಿ ಭಾರತ ಇಂದು ಪರಾವಲಂಬನೆಯತ್ತ ವಾಲುತ್ತಿರುವುದನ್ನು ನೋಡಿದರೆ, ಈ ದೇಶದ ಪ್ರಜೆಗಳ ಆಯ್ಕೆ ತಪ್ಪಾಗಿರುವುದು ಸ್ಪಷ್ಟವಾಗುತ್ತದೆ.

2013ರಲ್ಲಿ ಚುನಾಯಿತ ಉದಾರವಾದಿ ಪ್ರಜಾತಂತ್ರ ರಾಷ್ಟ್ರವಾಗಿದ್ದ ಭಾರತ ಇಂದು ಚುನಾಯಿತ ನಿರಂಕುಶಾಧಿಪತ್ಯದ ರಾಷ್ಟ್ರವಾಗಿದೆ ಎಂದು ಜಾಗತಿಕ ಸಂಸ್ಥೆಯೊಂದು ಹೇಳಿದೆ. ಈ ಅಭಿಪ್ರಾಯ ಯಾವುದೋ ಒಂದು ಸಂಸ್ಥೆಯಿಂದ ವ್ಯಕ್ತವಾಗಿರುವುದರಿಂದ ತಳ್ಳಿಹಾಕುವುದು ಸುಲಭ. ಆದರೆ ಭಾರತದ ವಸ್ತುಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವ ಯಾವುದೇ ಪ್ರಜ್ಞಾವಂತರಿಗೆ, ದೇಶದಲ್ಲಿ ಪ್ರಜಾತಂತ್ರದ ಅವಸಾನ ಸಮೀಪಿಸುತ್ತಿರುವುದು ಸ್ಪಷ್ಟವಾಗುತ್ತದೆ.

ದಿಶಾ ರವಿ ತೀರ್ಪಿನ ನಂತರ ಭಾರತದ ನ್ಯಾಯಾಂಗ ವ್ಯವಸ್ಥೆ ಕೊಂಚ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. ಸರ್ಕಾರದ ವಿರುದ್ಧ ಅಥವಾ ಸರ್ಕಾರದ ಆಡಳಿತ ನೀತಿಗಳ ವಿರುದ್ಧ ಟೀಕೆ ಮಾಡುವುದು ದೇಶದ್ರೋಹ ಎನಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ಆದರೆ ಸರ್ಕಾರದ ಆಡಳಿತ ನೀತಿಗಳನ್ನು ಟೀಕಿಸಲು, ವಿಮರ್ಶಿಸಲು ಇರುವ ಎಲ್ಲ ವೇದಿಕೆಗಳನ್ನೂ ನಿಯಂತ್ರಿಸುವ ಕಾನೂನುಗಳನ್ನು ರೂಪಿಸಲಾಗುತ್ತಿದೆ. ಈ ಬೆಳವಣಿಗೆ ನ್ಯಾಯಾಂಗದ ಪರಾಮರ್ಶೆಗೆ ಒಳಪಟ್ಟರೆ ಮಾತ್ರ ಸಾಂವಿಧಾನಿಕ ಹಕ್ಕುಗಳ ರಕ್ಷಣೆ ಸಾಧ್ಯ. ಡಿಜಿಟಲ್ ಸುದ್ದಿ ವೇದಿಕೆಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಿಸಲಾಗುವ ಸುದ್ದಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಚಿಸಿರುವ ಆರು ಸದಸ್ಯರ ಸಚಿವರ ಕೂಟ ತನ್ನ ವರದಿಯನ್ನು ಸಲ್ಲಿಸಿದ್ದು, ಈ ವರದಿಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸುವ ಹಲವು ಸಲಹೆಗಳನ್ನು ನೀಡಲಾಗಿದೆ.

ಕೋವಿದ್ 19 ಸಂದರ್ಭದಲ್ಲೇ ಆರು ಬಾರಿ ಸಭೆ ನಡೆಸಿರುವ ಈ ಸಚಿವರ ಕೂಟದಲ್ಲಿ ವಿದೇಶಾಂಗ ಸಚಿವರು, ಕಾನೂನು ಸಚಿವರು ಪ್ರಮುಖ ಪಾತ್ರ ವಹಿಸಿದ್ದಾರೆ.
ಸರ್ಕಾರದ ಪರ ವಹಿಸದ ಪತ್ರಕರ್ತರನ್ನು, ಪತ್ರಿಕಾ ಸಮೂಹ ಮತ್ತು ಮಾಧ್ಯಮಗಳನ್ನು ಹೇಗೆ ಸೆಳೆಯಬೇಕು ಎನ್ನುವುದರ ಬಗ್ಗೆ ಕೆಲವು ಸಚಿವರು ಸಲಹೆಗಳನ್ನು ನೀಡಿದ್ದು, ಈ ನಿಟ್ಟಿನಲ್ಲಿ ಸುದ್ದಿ ಪ್ರಸರಣವನ್ನು ನಿಯಂತ್ರಿಸುವ ಬಗ್ಗೆ ಈಗಾಗಲೇ ‘ ಗೋದಿ ಮೀಡಿಯಾ ’ ಎಂದೇ ಹೆಸರಾಗಿರುವ ವಂದಿಮಾಗಧ ಮಾಧ್ಯಮಗಳಿಂದಲೇ ಸಲಹೆ ಪಡೆಯಲಾಗಿದೆ.

ಪತ್ರಕರ್ತರನ್ನು, ಸರ್ಕಾರದ ಪರ, ವಿರೋಧಿ ಮತ್ತು ತಟಸ್ಠ ಎಂದು ಮೂರು ವರ್ಗಗಳನ್ನಾಗಿ ವಿಂಗಡಿಸುವಂತೆ ಓರ್ವ ಸಚಿವರು ಸಲಹೆ ನೀಡಿದ್ದರೆ, ಮತ್ತೊಬ್ಬರು ಮಾಧ್ಯಮಗಳಲ್ಲಿ ಸರ್ಕಾರದ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಸೃಷ್ಟಿಸುವ 50 ಪತ್ರಕರ್ತರನ್ನು ಗುರುತಿಸಿ ಅವರ ಮೇಲೆ ನಿಗಾ ವಹಿಸಲು ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ವರದಿಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಲಾಗುವುದಿಲ್ಲ. ಏಕೆಂದರೆ ಕರ್ನಾಟಕವನ್ನೂ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಲ್ಲಿ ಇರಬಹುದಾದ ಕ್ರಿಯಾಶೀಲತೆ ಮತ್ತು ಸೃಜನಶೀಲತೆಯ ಕತ್ತು ಹಿಸುಕುವಂತಹ ಕಾನೂನುಗಳನ್ನು ಜಾರಿಗೊಳಿಸಿವೆ. ಕಳೆದ ವರ್ಷ ರಾಜ್ಯ ಬಿಜೆಪಿ ಸರ್ಕಾರ ಹೊರಡಿಸಿದ ಆದೇಶದ ಅನ್ವಯ ಯಾವುದೇ ಸರ್ಕಾರಿ ನೌಕರರು ಪೂರ್ವಾನುಮತಿ ಇಲ್ಲದೆ ಸಿನಿಮಾಗಳಲ್ಲಿ, ಟಿ ವಿ ಧಾರಾವಾಹಿಗಳಲ್ಲಿ ನಟಿಸುವಂತಿಲ್ಲ, ಯಾವುದೇ ರೀತಿಯ ಪುಸ್ತಕ ಪ್ರಕಟಿಸುವಂತಿಲ್ಲ, ಕೇಂದ್ರ ಮತ್ತು ಯಾವುದೇ ರಾಜ್ಯ ಸರ್ಕಾರಗಳ ಆಡಳಿತ ನೀತಿಗಳನ್ನು ಟೀಕಿಸಿ ಲೇಖನಗಳನ್ನು ಬರೆಯುವಂತಿಲ್ಲ.

ಮೊದಲಿನಿಂದಲೂ ಈ ರೀತಿಯ ಸೇವಾ ನಿಯಮ ಜಾರಿಯಲ್ಲಿತ್ತಾದರೂ ಕರ್ನಾಟಕ ನಾಗರಿಕ ಸೇವಾ ಕಾಯ್ದೆಯಲ್ಲಿ ನಿರ್ಬಂಧಗಳನ್ನು ನಮೂದಿಸಲಾಗಿರಲಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಅನೇಕ ಅಧ್ಯಾಪಕರು, ಶಿಕ್ಷಕರು, ಸರ್ಕಾರಿ ನೌಕರರು ತಮ್ಮ ಕಾವ್ಯ , ಕಾದಂಬರಿ, ಕಥೆ ಮತ್ತು ಇತರ ರೀತಿಯ ಬರಹಗಳ ಮೂಲಕ ಜನಜಾಗೃತಿ ಮೂಡಿಸುತ್ತಲೇ ಬಂದಿದ್ದಾರೆ. ಸರ್ಕಾರಗಳ ಜನವಿರೋಧಿ ಆಡಳಿತ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸುತ್ತಲೇ ಬಂದಿದ್ದಾರೆ. ಇಂದು ಸರ್ಕಾರದ ವಿರುದ್ಧ ಮಾತನಾಡುವುದೇ ದೇಶದ್ರೋಹ ಎನ್ನುವ ಆಡಳಿತ ವ್ಯವಸ್ಥೆಯ ಧೋರಣೆ ಗಟ್ಟಿಯಾಗುತ್ತಿರುವ ಸಂದರ್ಭದಲ್ಲಿ ಈ ರೀತಿಯ ನಿಯಮಗಳು ಸೃಜನಶೀಲ ಮನಸುಗಳನ್ನು ನಿಷ್ಕ್ರಿಯಗೊಳಿಸಿಬಿಡುತ್ತವೆ.

ಸರ್ಕಾರದ ಜನವಿರೋಧಿ, ಸಮಾಜವಿರೋಧಿ ನೀತಿಗಳನ್ನೂ ಟೀಕೆ ಮಾಡದಂತೆ ಸರ್ಕಾರಿ ನೌಕರರ ಮೇಲೆ ನಿರ್ಬಂಧ ಹೇರಲಾಗಿದೆ. ಈಗ ಸಾಮಾಜಿಕ ಮಾಧ್ಯಮಗಳ ಮೇಲೆ ಸರ್ಕಾರದ ಕಾಕದೃಷ್ಟಿ ಬಿದ್ದಿದೆ. ಆಡಳಿತ ವ್ಯವಸ್ಥೆಯನ್ನು ಪ್ರಶ್ನಾತೀತವನ್ನಾಗಿ ಮಾಡುವ ಇಂತಹ ನಿಯಮಗಳು ಭಾರತವನ್ನು ನಿರಂಕುಶಾಧಿಪತ್ಯದತ್ತ ಕೊಂಡೊಯ್ಯುತ್ತಿರುವುದು ಸ್ಪಷ್ಟ.

ಇತ್ತೀಚೆಗೆ ಭಾರತದ ವಿದೇಶಾಂಗ ಸಚಿವಾಲಯ ಹೊರಡಿಸಿದ ಆದೇಶವೊಂದರ ಅನುಸಾರ ಸಾರ್ವಜನಿಕ ಹಣದಿಂದ ನಿರ್ವಹಿಸಲ್ಪಡುವ ಭಾರತದ ಯಾವುದೇ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು, ಅಧ್ಯಾಪಕರು ಅಂತರ ರಾಷ್ಟ್ರೀಯ ವಿಚಾರ ಸಂಕಿರಣಗಳನ್ನು ನಡೆಸುವ ಮುನ್ನ ಸಚಿವಾಲಯದ ಅನುಮತಿ ಪಡೆಯುವುದು ಕಡ್ಡಾಯ ಮಾಡಲಾಗಿದೆ.

ಭಾರತದ ಆಂತರಿಕ ವಿಚಾರಗಳ ಬಗ್ಗೆ ವಿಚಾರಸಂಕಿರಣ ನಡೆಸುವುದಕ್ಕೆ ಬಹುತೇಕ ನಿರ್ಬಂಧ ಹೇರಲಾಗಿದ್ದು, ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು, ಭಾರತದ ಗಡಿ ರೇಖೆಗಳು ಹೀಗೆ ಹಲವು ವಿಚಾರಗಳನ್ನು ಆಂತರಿಕ ವಿಚಾರಗಳ ಪರಿಧಿಯಲ್ಲೇ ಪರಿಗಣಿಸಲಾಗುತ್ತದೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಮುಷ್ಕರವನ್ನೂ ಭಾರತ ಸರ್ಕಾರ ಆಂತರಿಕ ವಿಚಾರ ಎಂದೇ ಭಾವಿಸುತ್ತದೆ. ಸೂಕ್ಷ್ಮ ವಿಚಾರಗಳನ್ನೂ ಈ ಚೌಕಟ್ಟಿನಲ್ಲೇ ಪರಿಗಣಿಸಲಾಗುವುದರಿಂದ, ಇಂದಿನ ಆಡಳಿತ ವ್ಯವಸ್ಥೆಯನ್ನು ಗಮನಿಸಿದರೆ ಕೋಮುವಾದ, ಮತಾಂಧತೆ, ಹಿಂದುತ್ವ, ಜಾತಿ ದೌರ್ಜನ್ಯ ಇವೆಲ್ಲವೂ ವಿಚಾರ ಸಂಕಿರಣಗಳಿಂದ ಹೊರಗುಳಿಯುವ ವಿಷಯಗಳೇ ಆಗಿಬಿಡುತ್ತವೆ.

ಇದು ಬಹುಮಟ್ಟಿಗೆ ವಿಚಾರ ಮಂಥನದ ಹಕ್ಕನ್ನು ಹತ್ತಿಕ್ಕುವ ಪ್ರಯತ್ನ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಈಗಾಗಲೇ ವಿಶ್ವವಿದ್ಯಾಲಯಗಳಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ, ಸಮಾಜೋ ಸಾಂಸ್ಕೃತಿಕ ವಿಚಾರಗಳ ಬಗ್ಗೆ ವಿಚಾರ ಸಂಕಿರಣಗಳನ್ನು ನಡೆಸುವುದು ಅಸಾಧ್ಯವೇ ಆಗಿಹೋಗಿದೆ.

ಸರ್ಕಾರಿ ನೌಕರರು, ವೈದ್ಯರು, ವಿಜ್ಞಾನಿಗಳು, ಸಂಶೋಧಕರು, ಜಂಟಿ ಕಾರ್ಯದರ್ಶಿಗಿಂತಲೂ ಉನ್ನತ ಹುದ್ದೆ ಹೊಂದಿರುವವರು, ವಿಶ್ವವಿದ್ಯಾಲಯದ ಅಧ್ಯಾಪಕ ವರ್ಗ, ಬೋಧನಾ ಸಿಬ್ಬಂದಿ ಹೀಗೆ ಎಲ್ಲರೂ ಸಹ ಅಂತರ ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಭಾಗವಹಿಸುವ ಮುನ್ನ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯವಾಗಿ ಪಡೆಯಬೇಕಾಗುತ್ತದೆ. ವಿದೇಶಿ ಗಣ್ಯರ ಉಪಸ್ಥಿತಿ ಇಲ್ಲದ ವಿಚಾರ ಸಂಕಿರಣಗಳಿಗೂ ಈ ನಿಯಮ ಅನ್ವಯಿಸುತ್ತದೆ.

ಆನ್ ಲೈನ್ ಸಭೆಗಳನ್ನು ನಡೆಸುವ ಸಂದರ್ಭದಲ್ಲಿ ಬಳಸಲಾಗುವ ಆನ್ ಲೈನ್ ವೇದಿಕೆಗಳು ವಿದೇಶಿ ಕಂಪನಿಗಳ ನಿಯಂತ್ರಣದಲ್ಲಿದ್ದ ಪಕ್ಷದಲ್ಲಿ, ಉದಾಹರಣೆಗೆ ಝೂಂ, ಅದರ ಕೊಂಡಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಒದಗಿಸುವಂತೆ ಸೂಚಿಸಲಾಗಿದೆ.

ಒಂದು ಕಾರ್ಮಿಕ ಮುಷ್ಕರವನ್ನು, ರೈತ ಹೋರಾಟವನ್ನು, ವಿದ್ಯಾರ್ಥಿಗಳ ಸಂಘರ್ಷವನ್ನು ಬೆಂಬಲಿಸುವುದೇ ದೇಶದ್ರೋಹಿ ಕೃತ್ಯ ಎನ್ನುವ ವಿಕೃತ ಮನೋಭಾವ ಇಂದಿನ ಆಡಳಿತ ವ್ಯವಸ್ಥೆಯಲ್ಲಿ ಆಳವಾಗಿ ಬೇರೂರಿರುವುದು ಜೆಎನ್‍ಯು ಘಟನೆಗಳಿಂದಲೇ ಸ್ಪಷ್ಟವಾಗಿದೆ. ದೇಶದ ಬೌದ್ಧಿಕ ಸಂಪತ್ತು ಮತ್ತು ಸಂಪನ್ಮೂಲಗಳನ್ನು ಮತ್ತಷ್ಟು ವೃದ್ಧಿಗೊಳಿಸುವಲ್ಲಿ ಪ್ರಧಾನ ಪಾತ್ರ ವಹಿಸುವ ಶೈಕ್ಷಣಿಕ ವಲಯವನ್ನು, ವಿಶೇಷವಾಗಿ ವಿಶ್ವವಿದ್ಯಾಲಯಗಳನ್ನು ನಿಯಂತ್ರಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚಿಂತನ-ಮಂಥನ ಪ್ರಕ್ರಿಯೆಯನ್ನೇ ಅವಸಾನದ ಅಂಚಿಗೆ ಕೊಂಡೊಯ್ಯುತ್ತಿವೆ. ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕು ಕ್ರಮೇಣ ಮರೀಚಿಕೆಯಾಗುತ್ತಿರುವುದು ಸ್ಪಷ್ಟ.

ಈ ಬೆಳವಣಿಗೆ ಅಪೇಕ್ಷಣೀಯವಲ್ಲ ಆದರೆ ಅನಿರೀಕ್ಷಿತವೂ ಅಲ್ಲ. 1990ರ ದಶಕದ ರಾಮಮಂದಿರ ವಿವಾದ, ಧರ್ಮ ಸಂಸತ್ತು, ವಾಜಪೇಯಿ ಸರ್ಕಾರದ ಸಂದರ್ಭದಲ್ಲಿನ ಸಂವಿಧಾನ ಪರಾಮರ್ಶೆಯ ಕಸರತ್ತು ಮತ್ತು ಇತರ ರಾಜಕೀಯ ಬೆಳವಣಿಗೆಗಳು ಇವತ್ತಿನ ಪರಿಸ್ಥಿಗೆ ಪೂರಕವಾಗಿಯೇ ಇದ್ದವು. ಸ್ಪಷ್ಟ ಬಹುಮತ ಇಲ್ಲದಿದ್ದುದು ಒಂದು ಅಡ್ಡಗೋಡೆಯಾಗಿತ್ತು. 2014ರ ಚುನಾವಣೆಗಳಲ್ಲಿ ಭಾರತದ ಪ್ರಜ್ಞಾವಂತ ಮತದಾರರು, ಆಯ್ಕೆಯ ಪರ್ಯಾಯ ಇಲ್ಲದೆ ನೀಡಿದ ಸ್ಪಷ್ಟ ಬಹುಮತ ಇಂದು ನಾವೇ ಸೃಷ್ಟಿಸಿಕೊಂಡ ಪೆಡಂಭೂತದಂತೆ ನಮ್ಮೆದುರು ನಿಂತಿದೆ.

ಇಂದಿಗೂ ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂವಿಧಾನ ವಿರೋಧಿ ಕ್ರಮಗಳನ್ನು, ಕಾಯ್ದೆ ಕಾನೂನುಗಳನ್ನು ಮೌನವಾಗಿ ಸಹಿಸಿಕೊಳ್ಳುವ ನಿಷ್ಕ್ರಿಯ ಜನಸಮೂಹ ಒಂದೆಡೆ ಇದ್ದರೆ ಮತ್ತೊಂದೆಡೆ ಈ ಜನವಿರೋಧಿ ಕ್ರಮಗಳನ್ನು ಸಮರ್ಥಿಸಿಕೊಳ್ಳುವ ಬೃಹತ್ ಜನಸಮೂಹ ನಮ್ಮ ನಡುವೆ ಇದೆ.

ಸಮೂಹ ಸನ್ನಿಗೊಳಗಾಗಿರುವ ಈ ಸಮರ್ಥಕ ಪಡೆ, ಆಳುವ ವರ್ಗಗಳಿಗಿಂತಲೂ ಹೆಚ್ಚು ಅಪಾಯಕಾರಿಯಾಗಿ ಕಾಣುತ್ತಿದೆ. ಸಮಸ್ತ ಜನಕೋಟಿಯ ಜೀವನೋಪಾಯಕ್ಕೇ ಸಂಚಕಾರ ತರುವಂತಹ ತೈಲ ಬೆಲೆ ಹೆಚ್ಚಳ, ಭವಿಷ್ಯದ ಪೀಳಿಗೆಯ ಉಜ್ವಲ ಬದುಕಿಗೆ ಸಂಚಕಾರ ತರುವ ಎಗ್ಗಿಲ್ಲದ ಖಾಸಗೀಕರಣ ಮತ್ತು ದೇಶದ ಸಂಪತ್ತು-ಸಂಪನ್ಮೂಲದ ಮಾರಾಟ, ಇಂತಹ ಗಂಭೀರ ಸಮಸ್ಯೆಗಳೂ ಈ ಸನ್ನಿಗೊಳಗಾದ ಜನತೆಯನ್ನು ಜಾಗೃತಗೊಳಿಸುತ್ತಿಲ್ಲ. ವ್ಯಕ್ತಿ ಆರಾಧನೆ, ಸ್ವ ಹಿತಾಸಕ್ತಿ, ಸಂಕುಚಿತ ದೃಷ್ಟಿಕೋನ ಮತ್ತು ಸಮಷ್ಟಿ ಪ್ರಜ್ಞೆಯ ಕೊರತೆ ಒಂದು ಸಮಾಜವನ್ನು ಹೇಗೆ ನಿಷ್ಕ್ರಿಯಗೊಳಿಸುತ್ತದೆ ಎನ್ನುವುದಕ್ಕೆ 21ನೆಯ ಶತಮಾನದ ಆತ್ಮ ನಿರ್ಭರ ಭಾರತ ಅಜರಾಮರ ಸಾಕ್ಷಿಯಾಗಲಿದೆ.

ಇಂದು ಅಭಿವ್ಯಕ್ತಿಯ ಎಲ್ಲ ಮಾರ್ಗಗಳೂ ಗ್ರಾಂಥಿಕವಾಗಿ ಮುಕ್ತವಾಗಿವೆ. ಸಂವಿಧಾನ ದತ್ತ ಮೂಲಭೂತ ಹಕ್ಕುಗಳು ಯಥಾಸ್ಥಿತಿಯಲ್ಲಿ ಸಮಸ್ತ ಪ್ರಜೆಗಳಿಗೂ ಲಭ್ಯವಿದೆ. ಏಕೆಂದರೆ ಸಂವಿಧಾನದ ಯಾವ ಪರಿಚ್ಚೇದಗಳೂ ತಿದ್ದುಪಡಿಯಾಗಿಲ್ಲ. ಹಾಗಾಗಿ ನಾವು ಸಂವಿಧಾನವನ್ನು ಎದೆಗವುಚಿಕೊಂಡು ಮನೆಮನೆಗೆ ಹಂಚುತ್ತಿದ್ದೇವೆ.

ಇದು ಸ್ತುತ್ಯಾರ್ಹ ಕಾರ್ಯ. ಅತಿಹೆಚ್ಚು ಜನರು ಸಂವಿಧಾನವನ್ನು ಓದಿ, ಗ್ರಹಿಸಿ, ಮನನ ಮಾಡಿಕೊಂಡಷ್ಟೂ ಪ್ರಜಾತಂತ್ರದ ಬೇರುಗಳು ಗಟ್ಟಿಯಾಗುತ್ತವೆ. ನಮ್ಮ ಹಕ್ಕುಗಳು ಏನು ಮತ್ತು ಏಕೆ ನೀಡಲ್ಪಟ್ಟಿವೆ ಎನ್ನುವುದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಅರ್ಥಮಾಡಿಕೊಳ್ಳುವ ನಿಟ್ಟಿನಲ್ಲಿ ಇದು ಅವಶ್ಯವೂ ಹೌದು.

ಆದರೆ ಹೀಗೆ ಸಂವಿಧಾನವನ್ನು ಒಂದು ಕೈಯ್ಯಲ್ಲಿ ಎದೆಗವುಚಿಕೊಂಡೇ ತಮ್ಮ ಮತ್ತೊಂದು ಕೈಯ್ಯನ್ನು ಪ್ರಜೆಗಳ ಸಾಂವಿಧಾನಿಕ ಹಕ್ಕುಗಳನ್ನು ವಾಮಮಾರ್ಗಗಳ ಮೂಲಕ ಕಸಿದುಕೊಳ್ಳುತ್ತಿರುವ, ಪ್ರಜಾತಂತ್ರ ಮೌಲ್ಯಗಳ ಕತ್ತು ಹಿಸುಕುತ್ತಿರುವ , ಆಳುವ ವರ್ಗಗಳ ಹೆಗಲ ಮೇಲೆ ಹಾಕಿ ನಡೆಯುತ್ತಿರುವ ಜನಪ್ರತಿನಿಧಿಗಳನ್ನು ಹೇಗೆ ಬಣ್ಣಿಸುವುದು ? ಜೆಎನ್‍ಯು, ಪೌರತ್ವ ತಿದ್ದುಪಡಿ ಕಾಯ್ದೆ, ಶಹೀನ್‍ಭಾಗ್, ರೈತ ಮುಷ್ಕರ ಮತ್ತು ದಿಶಾ ರವಿ ಪ್ರಕರಣದವರೆಗೂ ಪ್ರಜಾತಂತ್ರ ಮೌಲ್ಯಗಳ ಕತ್ತುಹಿಸುಕುವ ಪ್ರಯತ್ನಗಳು ಅವ್ಯಾಹತವಾಗಿ ನಡೆಯುತ್ತಲೇ ಇವೆ. ಇದು ಮಿತಿ ಮೀರಿ ಹೋಗುತ್ತಿರುವುದರಿಂದಲೇ ಸುಪ್ರೀಂಕೋರ್ಟ್ ಸಹ “ ಸರ್ಕಾರ ಅಥವಾ ಸರ್ಕಾರದ ಆಡಳಿತ ನೀತಿಗಳನ್ನು ಟೀಕಿಸುವುದು ದೇಶದ್ರೋಹ ಎನಿಸುವುದಿಲ್ಲ ” ಎಂದು ಹೇಳಿದೆ.

ಆದಾಗ್ಯೂ ಈ ದಮನಕಾರಿ ನೀತಿಗಳು ಮುಂದುವರೆಯುತ್ತಲೇ ಇವೆ. ಸರ್ಕಾರಿ ನೌಕರರನ್ನು ಮತ್ತು ಸಾರ್ವಭೌಮ ಪ್ರಜೆಗಳನ್ನು, ಲೇಖಕರನ್ನು, ಬರಹಗಾರರನ್ನು, ಕಲಾವಿದರನ್ನು ಕಾಯ್ದೆ, ನಿಯಮ, ಕಾನೂನುಗಳ ಮೂಲಕ ಚಿಂತನಹೀನರನ್ನಾಗಿ ಮಾಡುವ, ಕ್ರಿಯಾಶೀಲತೆಯಿಂದ ವಂಚಿಸುವ, ಸೃಜನಶೀಲತೆಯಿಂದ ವಿಮುಖರಾಗುವಂತೆ ಮಾಡುವ, ಒಂದು ಆಡಳಿತ ವ್ಯವಸ್ಥೆಯಲ್ಲಿ ನಾವಿದ್ದೇವೆ.

ಈ ಆಡಳಿತ ವ್ಯವಸ್ಥೆಯನ್ನು ಒಪ್ಪಿಕೊಂಡು ತಮ್ಮ ಸ್ವಾರ್ಥ ಸಾಧನೆಗಾಗಿ, ಅಧಿಕಾರ ರಾಜಕಾರಣದ ಹಂಬಲಕ್ಕಾಗಿ, ಸ್ವ-ಕಲ್ಪಿತ ಸೈದ್ಧಾಂತಿಕ ಬದ್ಧತೆಯ ನೆರಳಲ್ಲಿ ಸಂವಿಧಾನ ವಿರೋಧಿ ಆಡಳಿತ ನೀತಿಗಳನ್ನು ಬೆಂಬಲಿಸುವ ಜನಪ್ರತಿನಿಧಿಗಳು ಪ್ರಜೆಗಳ ದೃಷ್ಟಿಯಲ್ಲಿ ದ್ರೋಹಿಗಳಾಗಿ ಕಾಣುತ್ತಿದ್ದಾರೆ.

ಗಡಿ ಸುರಕ್ಷತೆ, ರಕ್ಷಣಾ ವ್ಯವಸ್ಥೆಯ ಸಬಲೀಕರಣ ಮತ್ತು ಶತ್ರು ರಾಷ್ಟ್ರಗಳನ್ನು ಹಿಮ್ಮೆಟ್ಟಿಸುವ ಆತ್ಮಸ್ಥೈರ್ಯ ಭೌಗೋಳಿಕವಾಗಿ ದೇಶವನ್ನು ರಕ್ಷಿಸುತ್ತದೆ. ಆದರೆ ಪ್ರಜಾಸತ್ತಾತ್ಮಕ ಮೌಲ್ಯಗಳೇ ದುರ್ಬಲವಾಗುತ್ತಿರುವಾಗ ದೇಶ ಆಂತರಿಕವಾಗಿ ಶಿಥಿಲವಾಗುತ್ತಾ ಹೋಗುತ್ತದೆ. ರಾಫೇಲ್, ಕ್ಷಿಪಣಿ, ಅಣುಬಾಂಬುಗಳು ಬಡತನ, ಅಪೌಷ್ಟಿಕತೆಯನ್ನು ಹೋಗಲಾಡಿಸುವುದೂ ಇಲ್ಲ, ಸಾಮಾಜಿಕ ಸಮಾನತೆಯನ್ನು ಕಾಪಾಡುವುದೂ ಇಲ್ಲ, ಸಾಂಸ್ಕೃತಿಕ ವೈವಿಧ್ಯತೆಯನ್ನು ಸಂರಕ್ಷಿಸುವುದೂ ಇಲ್ಲ.

ಇದನ್ನು ಸಾಧಿಸಬೇಕಾದರೆ ನಮ್ಮ ಸಂವಿಧಾನದ ಅಂತಃಸತ್ವ ಉಳಿಯಬೇಕು, ತಳಮಟ್ಟದಲ್ಲಿ ಉಳಿಯಬೇಕು, ಸಾರ್ವಭೌಮ ಪ್ರಜೆಗಳ ನಡುವೆ ಉಳಿಯಬೇಕು, ಗ್ರಾಂಥಿಕವಾಗಿ ಉಳಿದರೆ ಸಾಲದು. ಜನರ ನಾಡಿಮಿಡಿತವನ್ನೇ ಗ್ರಹಿಸಲಾರದಷ್ಟು ಭ್ರಷ್ಟರಾಗಿರುವ ಜನಪ್ರತಿನಿಧಿಗಳಿಗೆ ಈ ವಾಸ್ತವದ ಅರಿವು ಮೂಡಬೇಕು. ಆಗ ಮಾತ್ರ ನಾವು ಸಂವಿಧಾನವನ್ನು ಕೈಯ್ಯಲ್ಲಿ ಹಿಡಿದು ಎದೆಗವುಚಿಕೊಂಡು ಅಂಬೇಡ್ಕರರತ್ತ ನಡೆಯುವ ಅರ್ಹತೆ ಪಡೆಯಲು ಸಾಧ್ಯ.

ಸುದ್ದಿದಿನ. ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending