ರಾಜಕೀಯ
ಸಂವಿಧಾನ ಮತ್ತು ಧರ್ಮ : ಸದ್ಯದ ಅಪವ್ಯಾಖ್ಯಾನ
ಸಮಸ್ಯೆಯೊಂದನ್ನು ನಿರ್ಲಕ್ಷಿಸಿದಾಗ ಅದು ತನ್ನ ಪ್ರಾಬಲ್ಯ ಹಿಗ್ಗಿಸಿಕೊಳ್ಳಲಾರಂಭಿಸುತ್ತದೆ. ಸಕಾಲಿಕ ಪರಿಹಾರೋಪಾಯ ಶೋಧಿಸಿಕೊಂಡು ಎದುರುಗೊಳ್ಳದಿದ್ದರೆ ಅದು ಬೃಹದಾಕಾರ ಪಡೆದುಕೊಳ್ಳುತ್ತದೆ. ಬಿಡಿಸಲಾಗದ ಬಿಕ್ಕಟ್ಟಾಗಿ ಮಾರ್ಪಾಡಾಗಿ ನಾನಾ ಸಂಕಟಗಳನ್ನು ನೆಲೆಗೊಳಿಸಿಬಿಡುತ್ತದೆ. ಪರಿಹಾರದ ಮಾರ್ಗ ಯಾವುದು ಎಂಬುದು ಗೊತ್ತಿದ್ದರೂ ಅದನ್ನು ಅನುಸರಿಸುವುದಕ್ಕೆ ಕಷ್ಟಸಾಧ್ಯ ಎಂಬ ಭಾವವನ್ನು ಸಾರ್ವತ್ರಿಕಗೊಳಿಸುವಷ್ಟರ ಮಟ್ಟಿಗೆ ಆ ಸಂಕಟಗಳು ತೀವ್ರವಾಗಿ ಬಾಧಿಸುತ್ತವೆ. ಹೀಗೆ ಸಂಕಟಗೊಳಪಟ್ಟ ವ್ಯಕ್ತಿಗತ ಸಂಕೀರ್ಣತೆ ಸಾಮೂಹಿಕ ಸ್ವರೂಪ ಆವಾಹಿಸಿಕೊಂಡು ಜನಸಮುದಾಯಗಳನ್ನು ದಿಗ್ಮೂಢರನ್ನಾಗಿಸುತ್ತದೆ. ಆಂತರ್ಯದೊಳಗೆ ಮೂಡುವ ಅಸಮಾಧಾನ ಸಹನೆಯನ್ನು ಕಳೆದಿಡುತ್ತದೆ. ಆ ಸಂದರ್ಭದ ಅಸಹನೆಯು ಹಿಂಸೆಯೊಂದಿಗಿನ ದೃಷ್ಟಿಕೋನಗಳನ್ನು ಚಿಗುರಿಸಿಕೊಳ್ಳಲು ನೆರವಾಗುತ್ತದೆ. ಈ ಹಂತದಲ್ಲಿಯೇ ದ್ವಂದ್ವ, ಅಸ್ಪಷ್ಟತೆ, ಅವಿವೇಕತನ, ಅಸಂಬದ್ಧತೆ ಮತ್ತು ಕ್ರೌರ್ಯದ ನಡವಳಿಕೆಗಳು ದೇಶದ ಸಾಮಾಜಿಕ ಅಸ್ಮಿತೆಯನ್ನೇ ಧ್ವಂಸಗೊಳಿಸುತ್ತವೆ. ಭಾರತ ಅಂಥದ್ದೊಂದು ಅಪಾಯಕಾರಿ ಪ್ರವೃತ್ತಿಯ ಮಿತಿಯೊಂದಿಗೆ ಹೆಜ್ಜೆಯಿರಿಸುತ್ತಿದೆ. ಇದನ್ನು ತಿಳಿದುಕೊಂಡು ಸರಿಹಾದಿ ತೋರುವ ದಾರ್ಶನಿಕತೆಯನ್ನು ನಿರೂಪಿಸಬೇಕಾದ ನಾಯಕರಲ್ಲದ ನಾಯಕರೆನ್ನಿಸಿಕೊಂಡವರು ಸಮಸ್ಯಾತ್ಮಕತೆಯನ್ನು ಸ್ಥಾಯಿಯಾಗಿಸಿ ತಮ್ಮ ಅಸ್ತಿತ್ವವನ್ನು ಶಾಶ್ವತಗೊಳಿಸಿಕೊಳ್ಳುವ ಹಂಬಲಗೊಳೊಂದಿಗೇ ಗುರುತಿಸಿಕೊಂಡಿದ್ದಾರೆ.
ಈ ದೇಶವನ್ನು ಕಾಡುತ್ತಿರುವ ಸಮಸ್ಯೆಗಳು ಯಾವುವು ಎಂಬುದು ಅವುಗಳ ವ್ಯತಿರಿಕ್ತ ಪರಿಣಾಮಗಳಿಗೆ ಈಡಾದವರೂ ಸೇರಿದಂತೆ ಹಲವರಿಗೆ ಗೊತ್ತಿದೆ. ಈ ಸಮಸ್ಯೆಗಳ ಮೂಲ ಎಲ್ಲಿಯದು ಎಂಬುದರ ಅರಿವೂ ಇದೆ. ಇಡೀ ದೇಶದಲ್ಲಿ ಸಮಸ್ಯೆಗಳೇ ಇಲ್ಲ ಎಂಬಂಥ ಪರಮೋಚ್ಛ ಭ್ರಮೆಯ ವರ್ತುಲಕ್ಕೆ ಸಿಲುಕೊಳ್ಳಬಾರದು ಎಂಬ ಪ್ರಜ್ಞೆಯನ್ನು ಕಟ್ಟಿಕೊಳ್ಳುವುದಕ್ಕೆ ಅನುಕೂಲ ಒದಗಿಸಿಕೊಡುವ ನಕಾರಾತ್ಮಕತೆಯ ಅನುಭವವು ಪ್ರತಿಯೊಬ್ಬರಿಗೂ ಆಗುತ್ತಲೇ ಇರುತ್ತದೆ. ಆದರೆ, ಅದನ್ನು ಹಲವರು ಅಭಿವ್ಯಕ್ತಿಸುವುದಿಲ್ಲ. ಬದಲಾವಣೆ ಬಯಸುವ ಚಿಂತಕರು ಮತ್ತು ಜನಸಾಮಾನ್ಯ ವಲಯ ಆ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸುತ್ತಾರೆ. ಹಾಗೆ ಅವರು ಮುಕ್ತ ಆಲೋಚನೆಯನ್ನು ಹರಿಬಿಟ್ಟಾಗ ಅದು ಅಪಾಯಕಾರಿ ಎಂದು ತಪ್ಪಾಗಿ ಅರ್ಥೈಸುವ ಜಾಯಮಾನದ ನಡೆಯನ್ನು ರಾಜಕೀಯ ವಲಯ ಈಗೀಗ ನೆಚ್ಚಿಕೊಳ್ಳುತ್ತಿದೆ. ಇಂಥ ನಡೆಯ ಕಾರಣಕ್ಕಾಗಿಯೇ ಸಂವಿಧಾನ ಮತ್ತು ಧರ್ಮ ಪರಸ್ಪರ ಸಂಘರ್ಷಿಸುವ ನೆಲೆಗಳಾಗಿ ಚರ್ಚಿಸಲ್ಪಡುತ್ತಿವೆ. ಇವೆರಡರ ಉದಾತ್ತ ಅರ್ಥವನ್ನು ಒಡೆದು ಸಂಕುಚಿತಗೊಳಿಸಿದ ಅಪವ್ಯಾಖ್ಯಾನವನ್ನೇ ಜನಸಮುದಾಯ ನೆಚ್ಚಿಕೊಳ್ಳುವಂತೆ ಒತ್ತಡ ಹಾಕುತ್ತಿವೆ. ಇದೇ ಬಗೆಯ ಅನುಕೂಲಕರ ಸಮಯಾವಕಾಶವನ್ನು ಕಾಯ್ದುಕುಳಿತಂತೆ ರಾಜಕೀಯ ವಲಯ ತನ್ನ ದಾಳಗಳನ್ನು ಪ್ರಯೋಗಿಸುತ್ತಿದೆ.
ಸದ್ಯದ ವ್ಯತಿರಿಕ್ತ ಸ್ಥಿತಿಗತಿಗಳು ಅತ್ಯಂತ ನಿಖರವಾಗಿ ಬಿಟ್ಟುಕೊಡುತ್ತಿರುವ ಸುಳಿವುಗಳು ಹಲವಿವೆ. ಅವುಗಳಲ್ಲಿ ಧರ್ಮ ಮತ್ತು ದೇವರಿಗೆ ಸಂಬಂಧಿಸಿದಂತೆ ಇರುವ ವ್ಯಕ್ತಿಗತ ಸಂಕುಚಿತತೆಯನ್ನು ಸಾಂಸ್ಥಿಕಗೊಳಿಸಿ ಪ್ರಭಾವವನ್ನು ವ್ಯಾಪಕಗೊಳಿಸುವ ಪ್ರಯತ್ನವೂ ಒಂದು. ಧರ್ಮವನ್ನು ಮತ್ತೊಂದು ಧರ್ಮದ ವಿರುದ್ಧ ಎತ್ತಿಕಟ್ಟುವುದು, ಆಯಾ ಧರ್ಮಗಳವರ ನಂಬಿಕೆಯ ಆವರಣದಲ್ಲಿ ಆದ್ಯತೆ ಪಡೆದಿರುವ ದೇವರುಗಳ ಆರಾಧನೆಯ ಅವಕಾಶಗಳನ್ನು ಸ್ವಾರ್ಥಕ್ಕೆ ತಿರುಗಿಸಿಕೊಳ್ಳುವುದು ಈಗೀಗ ಸಾರ್ವತ್ರಿಕವಾಗಿದೆ. ಸಮಸ್ಯೆಯೊಂದು ವ್ಯಕ್ತಿಯನ್ನು ಭಾಧಿಸುತ್ತಿರುತ್ತದೆ. ವ್ಯಕ್ತಿಗತ, ಕೌಟುಂಬಿಕ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯಾತ್ಮಕ ಸಂಕೀರ್ಣತೆಗಳೊಂದಿಗಿನ ವಾಸ್ತವಿಕತೆಯೇ ಆ ಸಮಸ್ಯೆಗೆ ಕಾರಣವಾಗಿರುತ್ತದೆ. ಆದರೆ, ಧರ್ಮ ಮತ್ತು ದೇವರನ್ನು ಅಪವ್ಯಾಖ್ಯಾನಕ್ಕೊಳಪಡಿಸಿ ಆ ಬಗ್ಗೆ ಸಂಕುಚಿತವಾಗಿ ಅರ್ಥೈಸಿ ಭಯಹುಟ್ಟಿಸಲಾಗುತ್ತದೆ. ಹೀಗೆ ಭಯವನ್ನು ಹುಟ್ಟಿಸಿ ಸ್ವಾರ್ಥ ಸಾಧಿಸಿಕೊಳ್ಳುವ ಹಿತಾಸಕ್ತಿಗಳ ಅಸ್ತಿತ್ವದಲ್ಲಿಯೇ ಮಹತ್ವದ ಸುಳಿವನ್ನು ಗೊತ್ತುಮಾಡಿಕೊಳ್ಳಬಹುದು. ಈ ಹಿತಾಸಕ್ತಿಗಳು ಸಮಸ್ಯೆಗಳನ್ನು ಉದ್ದೇಶಪೂರ್ವಕವಾಗಿ ಸ್ಥಾಯಿಯಾಗಿಸಿ ಜನರೊಳಗಿನ ಆಲೋಚಿಸುವ ಶಕ್ತಿಯನ್ನೇ ತಡೆದು ನಿಲ್ಲಿಸುತ್ತವೆ. ಆವರ ಆಲೋಚನೆಯ ಸಾಧ್ಯತೆಗಳನ್ನು ಮೊಟಕುಗೊಳಿಸಿ ಧರ್ಮವಲ್ಲದ ಸಂಗತಿಗಳ ಕಡೆಗೆ ತಿರುಗಿಸುತ್ತವೆ. ಅವರ ಮನಸ್ಸಿನಲ್ಲಿ ದೇವರುಗಳ ಬಗ್ಗೆ ಭಯದ ಭಾವ ಮೂಡಿಸುತ್ತವೆ. ಆರಾಧಿಸದಿದ್ದರೆ ಶಿಕ್ಷೆ ಗ್ಯಾರಂಟಿ, ದೇವರೇ ಮುನಿಸಿಕೊಂಡರೆ ಮುಂದಿದೆ ವ್ಯತಿರಿಕ್ತ ಪರಿಣಾಮ ಎಂಬ ಅತಾರ್ಕಿಕತೆಯನ್ನೇ ಮಂಡಿಸಿ ದಾರಿ ತಪ್ಪಿಸುತ್ತವೆ.
ಮೊದಲೇ ಸಮಸ್ಯೆಗಳ ಮಧ್ಯೆ ನರಳುತ್ತಿರುವವರ ಮುಂದೆ ಧರ್ಮದಲ್ಲಿಲ್ಲದ ಸಂಗತಿಗಳನ್ನು ವೈಭವೀಕರಿಸಿ ಹೇಳಿದರೆ ಸ್ವಾರ್ಥದ ಉದ್ದೇಶಗಳನ್ನು ಈಡೇರಿಸಿಕೊಳ್ಳಬಹುದು ಎಂಬ ಕಾರ್ಯಸೂಚಿ ಅತ್ಯಂತ ಎಚ್ಚರದಲ್ಲಿ ಯಶಸ್ವಿಯಾಗಿ ನಿರ್ವಹಿಸಲ್ಪಡುತ್ತದೆ. ಹೀಗಾದರೆ ಹೀಗಾಗುತ್ತದೆ ಎಂದು ತಾರ್ಕಿಕವಾಗಿ ಮಾತನಾಡುವವರಂತೆ ನಟಿಸುವವರೇ ರಂಜನಾಮಾಧ್ಯಮೋದ್ಯಮದ ಮೂಲಗಳಾಗುತ್ತಾರೆ. ಸಮಾಜದ ವಿವಿಧ ಜನವರ್ಗಗಳು ಇಂಥವರನ್ನು ಆರಾಧಿಸಿಕೊಂಡೇ ಇದ್ದರೆ ತಮ್ಮ ಬೇಳೆ ಬೇಯಿಸಿಕೊಳ್ಳಬಹುದು ಎಂಬ ರಾಜಕೀಯ ವಲಯದ ನಿರೀಕ್ಷೆಗಳು ಈ ಹಂತದಲ್ಲಿಯೇ ಈಡೇರಿಬಿಡುತ್ತವೆ. ಸಮಸ್ಯೆಯನ್ನು ಶಾಶ್ವತವಾಗಿ ಉಳಿಯುವಂತೆ ನೋಡಿಕೊಂಡು ಅದು ಬಿಕಟ್ಟಿನ ಸ್ವರೂಪ ಪಡೆದುಕೊಂಡಾಗಲೂ ಪರಿಹಾರದ ನಾಟಕವಾಡಿ ಧರ್ಮ, ದೇವರ ಕುರಿತಾಗಿ ಭಯಭೀತಿ ಸೃಷ್ಟಿಸಿ ಸಾಮಾಜಿಕ ಚಲನೆಯನ್ನು ನಿಲ್ಲಿಸಿಬಿಡುವ ರಾಜಕೀಯ ಉದ್ದೇಶಗಳು ಯಶಸ್ಸು ಪಡೆದುಬಿಡುತ್ತವೆ. ಇದೇ ರಾಜಕೀಯ ಪ್ರವೃತ್ತಿ ಇಂದು ಸಂವಿಧಾನಕ್ಕೆ ಸವಾಲೆಸೆಯುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ.
ಇದು ಎಲ್ಲ ಕಾಲದ ಸಮಸ್ಯೆಯೂ ಹೌದು. ಬಹುಷಃ ಈ ಕಾರಣಕ್ಕಾಗಿಯೇ ಇರಬಹುದು; ಈಗಾಗಲೇ ಆಗಿಹೋದ ದಾರ್ಶನಿಕರು ದೇವರು ಮತ್ತು ಧರ್ಮದ ಕುರಿತ ನಂಬಿಕೆಯ ಜಗತ್ತನ್ನು ಆಧರಿಸಿಯೇ ತಾತ್ವಿಕತೆಯನ್ನು ಪ್ರತಿಪಾದಿಸಿದರು. ಭೌತಿಕ ಜಗತ್ತಿನ ಒಳಗೇ ಮನುಷ್ಯಸಹಜ ದೌರ್ಬಲ್ಯಗಳೊಂದಿಗಿನ ಊನಗಳನ್ನು ತಮ್ಮೊಳಗಿನ ದಾರ್ಶನಿಕತೆಯೊಂದಿಗೆ ಎದುರುಗೊಂಡರು. ನಿಜವಾದ ಧರ್ಮ ಏನು ಎಂಬುದನ್ನು ಅರ್ಥೈಸಿದರು. ದೇವರ ಅಸ್ತಿತ್ವವು ಒಳಿತಿನೊಂದಿಗೇ ಇದೆ ಎಂಬ ವಿವೇಕವನ್ನು ಕಟ್ಟಿಕೊಡಲು ಪ್ರಯತ್ನಿಸಿದರು. ನಿಸರ್ಗದ ಅನೇಕ ಕೌತುಕಮಯ ಸಂಗತಿಗಳನ್ನು ಕಾಡಿಸಿಕೊಂಡು ಅವುಗಳನ್ನು ಜೀವಪರ ಅಂತಃಕರಣದೊಂದಿಗೆ ಮನುಷ್ಯ ಬದುಕಿನ ಉದ್ಧಾರಕ್ಕೆ ಬಳಸಿಕೊಳ್ಳಬಹುದಾದ ಒಳನೋಟಗಳ ಮೇಲೆ ಬೆಳಕು ಚೆಲ್ಲಿದರು. ಧರ್ಮ-ದೇವರ ಬಗೆಗಿನ ನಂಬಿಕೆಯ ಜಗತ್ತನ್ನು ಅಲುಗಾಡಿಸದೇ ಅಂತಸ್ಥಗೊಂಡಿರುವ ಮೂಢನಂಬಿಕೆಯ ಬೇರುಗಳನ್ನು ಕಿತ್ತೆಸೆಯಲು ತಾತ್ವಿಕ ಮಾರ್ಗವನ್ನು ಕಂಡುಕೊಂಡರು. ಆ ಮೂಲಕ ಧರ್ಮ ಮತ್ತು ದೇವರನ್ನು ಉದಾತ್ತತೆಯೊಂದಿಗೆ ತಾದಾತ್ಮ್ಯಗೊಳಿಸುವ ಚಲನಾತ್ಮಕ ಆಕೃತಿಗಳನ್ನು ಕೊಡುಗೆಗಳನ್ನಾಗಿ ನೀಡಿದರು. ಈಗ ಈ ಸಾಧ್ಯತೆಯ ತದ್ವಿರುದ್ಧದ ದಿಕ್ಕುಗಳೇ ಪರಮಮಾರ್ಗಗಳಾಗಿ ಪರಿಗಣಿತವಾಗುತ್ತಿವೆ. ಅವೇ ಪರಮೋಚ್ಛ ಎಂಬ ಬಿಂಬಗಳನ್ನು ಅತ್ಯಂತ ಚಾಣಾಕ್ಷಯುತವಾಗಿ ಕಟ್ಟಿಕೊಡಲಾಗುತ್ತಿದೆ. ಅಂಥ ಎಲ್ಲ ಸಂಕುಚಿತತೆಯನ್ನು ರಾಜಕೀಯ ಪೋಷಿಸುತ್ತಿದೆ. ಧರ್ಮ-ದೇವರನ್ನು ನೆಚ್ಚಿಕೊಂಡ ಜನರ ನಂಬಿಕೆಯ ಜಗತ್ತನ್ನು ಮೌಢ್ಯಕ್ಕೆ ತಿರುಗಿಸಿ ಅಪನಂಬಿಕೆಗಳನ್ನು ಮುನ್ನೆಲೆಗೆ ತಂದು ತನ್ನನ್ನು ವಿಜೃಂಭಿಸಿಕೊಳ್ಳುತ್ತಿದೆ.
ಧರ್ಮ ಮತ್ತು ದೇವರು – ಇವೆರಡೂ ಭಾವನಾತ್ಮಕ ಸಾಂಸ್ಥಿಕತೆಯನ್ನು ಅಳವಡಿಸಿಕೊಂಡು ನಿರಂತರವಾಗಿ ಜನರನ್ನು ಶೋಷಿಸಲು ಬಳಕೆಯಾದ ಇತಿಹಾಸವಿದೆ. ಅದನ್ನು ಮರೆಗೆ ಸರಿಸಿ ಅಧಿಕಾರ, ಹಣ ಮತ್ತು ಪ್ರತಿಷ್ಠೆಗಳನ್ನು ಸ್ಥಾಯಿಯಾಗಿಸಿಕೊಳ್ಳಲು ರಾಜಕೀಯ ಕೇಂದ್ರಗಳು ಪ್ರಯತ್ನಿಸಿ ಯಶಸ್ವಿಯಾಗುತ್ತಲೇ ಇವೆ. ಅವುಗಳಿಗೆ ಅನುಗುಣವಾಗಿಯೇ ತಮ್ಮನ್ನು ಪ್ರತಿಷ್ಠಾಪಿಸಿಕೊಂಡ ವಿವಿಧ ಜಾತಿಗಳ ಜನಸಮೂಹ ಅವು ನಿರೀಕ್ಷಿಸುವ ಸಂಕುಚಿತತೆಯ ಮನೋಧರ್ಮಕ್ಕೆ ಪಕ್ಕಾಗುತ್ತಲೇ ಇದೆ. ಬದಲಾವಣೆಯ ಪ್ರಬಲ ಅಸ್ತ್ರ ಎಂದು ಪರಿಗಣಿಸಲ್ಪಟ್ಟ ಶಿಕ್ಷಣ ಮತ್ತು ಅದರ ಮೂಲಕ ವ್ಯಾಪಕಗೊಳ್ಳುತ್ತದೆ ಎಂದುಕೊಂಡಿದ್ದ ಮೌಲ್ಯಾತ್ಮಕ ಪ್ರಭೆಯನ್ನು ಮತ್ತೆ ಮತ್ತೆ ಸೋಲಿಸುತ್ತಿರುವುದು ಇದೇ ಸಂಕುಚಿತತೆಯೇ. ಇದನ್ನೇ ಅಧಿಕಾರ ಕೇಂದ್ರಗಳ ಕಡೆಗೆ ನೋಟ ನೆಟ್ಟ ರಾಜಕೀಯ ವಲಯದ ಪ್ರತಿನಿಧಿಗಳು ತಮ್ಮ ಬಂಡವಾಳವಾಗಿಸಿಕೊಳ್ಳುತ್ತಿದ್ದಾರೆ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಧರ್ಮದಲ್ಲಿ ಇಲ್ಲದೇ ಇರುವ ಜೀವವಿರೋಧಿ ಅಮಾನವೀಯ ಸಾಂಪ್ರದಾಯಿಕತೆಯನ್ನು ಸಂವಿಧಾನಕ್ಕಿಂತಲೂ ಮಿಗಿಲು ಎಂದು ಪ್ರತಿಪಾದಿಸುತ್ತಿದ್ದಾರೆ. ಆ ಪ್ರತಿಪಾದನೆಯನ್ನು ಸಮಾಜದ ವಿವಿಧ ಜನವರ್ಗಗಳು ಒಪ್ಪಿಕೊಳ್ಳಲೇಬೇಕು ಎಂಬ ವಿತಂಡವಾದವನ್ನು ಮುಂದಿಡುತ್ತಿದ್ದಾರೆ.
ಈ ನಕಾರಾತ್ಮಕ ಹೆಜ್ಜೆಗಳಿಗೆ ಪರ್ಯಾಯವಾಗಿ ವಿಶ್ವಾಸಾರ್ಹವಾದ ಸಂವಿಧಾನಬದ್ಧ ರಾಜಕೀಯ ಸಂಸ್ಕøತಿ ರೂಪುಗೊಳ್ಳಬೇಕಾದ ಅನಿವಾರ್ಯತೆ ಇದೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಧರ್ಮವಲ್ಲದ ಸಂಗತಿಗಳನ್ನು ವೈಭವೀಕರಿಸಿ ಮುನ್ನೆಲೆಗೆ ತಂದ ವಲಯದವರೂ ತಾವು ಬದಲಾಗಬೇಕಾದ ಆಲೋಚನೆಗಳನ್ನು ಹರಿಬಿಡುತ್ತಿದ್ದಾರೆ ಎಂಬುದೇನೋ ಸಮಾಧಾನ ತರುವ ಸಂಗತಿ. ಈ ದೇಶದ ಸಾಂಸ್ಕøತಿಕ ವೈವಿಧ್ಯತೆಯ ಮಹತ್ವವನ್ನು ತಡವಾಗಿಯಾದರೂ ಹೇಳುತ್ತಿದ್ದಾರೆ ಎಂದುಕೊಳ್ಳಬಹುದು. ಎಲ್ಲ ಧರ್ಮಗಳವರನ್ನು ಗೌರವಿಸಬೇಕು ಎನ್ನುವ ಭಾವವನ್ನು ಸಂವಹಿಸುತ್ತಿದ್ದಾರೆ ಎಂದು ಖುಷಿಪಡಬಹುದು. ಅಂಥ ಆಶಾದಾಯಕ ನುಡಿಗಳು ನಡೆಯಲ್ಲೂ ಮೇಳೈಸಿಕೊಳ್ಳಬೇಕು.
ಹಾಗಾಗುವುದಕ್ಕೆ ಭಾರತದ ರಾಜಕಾರಣ ಅಷ್ಟು ಸುಲಭವಾಗಿ ಬಿಡುವುದಿಲ್ಲ. ಇಲ್ಲಿಯ ರಾಜಕಾರಣಕ್ಕೆ ಬದಲಾವಣೆಗಿಂತ ಸ್ಥಗಿತತೆಯೇ ಹೆಚ್ಚು ಅಚ್ಚುಮೆಚ್ಚು. ಧರ್ಮ-ದೇವರು ಕೇಂದ್ರಿತ ಸಾಂಪ್ರದಾಯಿಕತೆಯೊಂದಿಗೆ ತಳುಕು ಹಾಕಿಕೊಂಡಿರುವ ಸಮಸ್ಯೆಗಳು ಜಟಿಲವಾದಷ್ಟೂ ಅದಕ್ಕೆ ಎಲ್ಲಿಲ್ಲದ ಖುಷಿ. ಜನರು ಈ ಸಾಂಪ್ರದಾಯಿಕತೆಯ ತೊಳಲಾಟಗಳಲ್ಲೇ ಕಾಲ ಕಳೆದರೆ ನಿಜವಾದ ಬೆಳವಣಿಗೆಗೆ ಸಂಬಂಧಿಸಿದ ಚಿಂತನೆಯೇ ಹುಟ್ಟುವುದಿಲ್ಲ. ಆಗ ಜನರು ಎಚ್ಚೆತ್ತುಕೊಳ್ಳುವ ಪ್ರಮೇಯವೇ ಎದುರಾಗುವುದಿಲ್ಲ. ಇದು ದೇವರು-ಧರ್ಮಗಳ ರಕ್ಷಾಕವಚಗಳನ್ನು ಹಾಕಿಕೊಂಡು ಜನರ ಭಯವಿಹ್ವಲತೆಯನ್ನು ಬೇರೂರಿಸಿ ಮತ್ತಷ್ಟು ಗಟ್ಟಿಯಾಗಿಸಿ ಉಸಿರುಗಟ್ಟಿಸುವ ಆಟ. ತಮ್ಮನ್ನು ಸೋಲಿಸುವ ವೈಚಾರಿಕತೆ ಸನಿಹದಲ್ಲಿಯೇ ಇದೆ ಎನ್ನುವ ಸುಳಿವು ಸಿಕ್ಕ ತಕ್ಷಣವೇ ಧರ್ಮರಕ್ಷಣೆ ಮತ್ತು ದೇವರನ್ನು ಕೃತಾರ್ಥರನ್ನಾಗಿಸುವ ಕೈಂಕರ್ಯಗಳ ನೆಪದಲ್ಲಿ ಭಯವನ್ನು ಸೃಷ್ಟಿಸಿ ವಂಚಿಸುವ ಆಟ. ಇಂಥ ಆಟವನ್ನು ನಿಲ್ಲಿಸಬೇಕಾದರೆ ಪ್ರತಿಕಾಲಘಟ್ಟದಲ್ಲೂ ಸೋಲುತ್ತಲೇ ಇರುವ ಬಹುಸಂಖ್ಯಾತ ಶೋಷಿತ ಸಮುದಾಯದ ಜನರು ಸಂವಿಧಾನದ ಆವರಣಕ್ಕೆ ಮರಳಬೇಕು. ತಮ್ಮ ಸಮಸ್ಯೆಗಳಿಗೆ ಪರಿಹಾರ ತೋರುವ ಪರಿವರ್ತನಾಶೀಲ ಚಿಂತನಶೀಲ ಸದಾಶಯಗಳೊಂದಿಗೆ ಮುಖಾಮುಖಿಯಾಗಬೇಕು. ಧ್ಯಾನಸ್ಥ ಸ್ಥಿತಿಯಲ್ಲಿ ಸಂವಿಧಾನವನ್ನು ಅಂತರ್ಗತಗೊಳಿಸಿಕೊಳ್ಳಬೇಕು.
ಪರ್ಯಾಯ ರಾಜಕಾರಣದ ಸಾಧ್ಯತೆಗಳನ್ನು ಇಷ್ಟೊತ್ತಿಗಾಗಲೇ ಅತ್ಯಂತ ಚಾಣಾಕ್ಷಯುತವಾಗಿ ಪರೀಕ್ಷೆಗೊಡ್ಡಿ ತನ್ನ ಸಂವಿಧಾನಬದ್ಧ ಶಕ್ತಿಯನ್ನು ವಿಸ್ತರಿಸಿಕೊಳ್ಳಬಹುದಾಗಿದ್ದ ರಾಜಕೀಯ ಪಕ್ಷಗಳು ಮತ್ತೆ ಅಧಾರ್ಮಿಕ ಸಂಕುಚಿತತೆಯೊಂದಿಗಿನ ಶ್ರೇಷ್ಠತೆಯ ವ್ಯಸನದಿಂದ ಬಳಲುತ್ತಿರುವ ಸಾಂಪ್ರದಾಯಿಕ ಶಕ್ತಿಗಳ ಜೊತೆಗೇ ಕೈಜೋಡಿಸಿ ತಮ್ಮ ಅಧಿಕಾರ ಪಡೆಯುವ ಹಂಬಲಗಳನ್ನು ಜೀವಂತಗೊಳಿಸಿಕೊಳ್ಳುತ್ತಿವೆ. ಮತ್ತವೇ ಜಾತಿ ವೈರುಧ್ಯಗಳು. ಮತ್ತದೇ ಅಧಾರ್ಮಿಕ ಸಂಘರ್ಷ. ಮೇಲು-ಕೀಳುಗಳ ಅಂತರ್ಯುದ್ಧದ ಕಪಟಕಿರುಕುಳ ಯಾನ. ಸಂವಿಧಾನವನ್ನು ಗೆಲ್ಲಿಸುವ ಇಚ್ಛಾಶಕ್ತಿಯ ಕೊರತೆ. ಅಲ್ಲಲ್ಲಿ ಕಂಡುಬರುವ ಮಾನವೀಯತೆಯ ಒರತೆಗಳನ್ನು ಉದ್ದೇಶಪೂರ್ವಕವಾಗಿ ಇಲ್ಲವಾಗಿಸಿಬಿಡುವ ಹುನ್ನಾರಗಳ ತಕಧಿಮಿಗುಟ್ಟುವ ಕ್ರೂರನರ್ತನ. ಉದಾತ್ತ ತಾತ್ವಿಕತೆಯ ಪರಿಭಾಷೆಗಳನ್ನು ಅಪವ್ಯಾಖ್ಯಾನಗೊಳಿಸುವ ಸಾಂಪ್ರದಾಯಿಕತೆ ಅಸ್ತಿತ್ವ ಇನ್ನೆಷ್ಟು ದಿನ? ಕಾಲವೇ ಉತ್ತರಿಸಬೇಕು ಎಂದು ಸುಮ್ಮನೆ ಕುಳಿತುಕೊಳ್ಳಬೇಕೇ? ಯೋಚಿಸಲಾರಂಭಿಸಬೇಕೇ……?
(-ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ,ಇ-ಮೇಲ್ ವಿಳಾಸ: nkpadmanabh@gmail.com
ಮೊಬೈಲ್: 9972998300)

ದಿನದ ಸುದ್ದಿ
ಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ
ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.
ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ
ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.
ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ
ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.
ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ
ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.
ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ
ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.
ಭವಿಷ್ಯದ ಆಶಯ
ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ಅಂಕಣ4 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ4 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ1 day agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ5 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ


