Connect with us

ರಾಜಕೀಯ

ಸಂವಿಧಾನ ಮತ್ತು ಧರ್ಮ : ಸದ್ಯದ ಅಪವ್ಯಾಖ್ಯಾನ

Published

on

ಮಸ್ಯೆಯೊಂದನ್ನು ನಿರ್ಲಕ್ಷಿಸಿದಾಗ ಅದು ತನ್ನ ಪ್ರಾಬಲ್ಯ ಹಿಗ್ಗಿಸಿಕೊಳ್ಳಲಾರಂಭಿಸುತ್ತದೆ. ಸಕಾಲಿಕ ಪರಿಹಾರೋಪಾಯ ಶೋಧಿಸಿಕೊಂಡು ಎದುರುಗೊಳ್ಳದಿದ್ದರೆ ಅದು ಬೃಹದಾಕಾರ ಪಡೆದುಕೊಳ್ಳುತ್ತದೆ. ಬಿಡಿಸಲಾಗದ ಬಿಕ್ಕಟ್ಟಾಗಿ ಮಾರ್ಪಾಡಾಗಿ ನಾನಾ ಸಂಕಟಗಳನ್ನು ನೆಲೆಗೊಳಿಸಿಬಿಡುತ್ತದೆ. ಪರಿಹಾರದ ಮಾರ್ಗ ಯಾವುದು ಎಂಬುದು ಗೊತ್ತಿದ್ದರೂ ಅದನ್ನು ಅನುಸರಿಸುವುದಕ್ಕೆ ಕಷ್ಟಸಾಧ್ಯ ಎಂಬ ಭಾವವನ್ನು ಸಾರ್ವತ್ರಿಕಗೊಳಿಸುವಷ್ಟರ ಮಟ್ಟಿಗೆ ಆ ಸಂಕಟಗಳು ತೀವ್ರವಾಗಿ ಬಾಧಿಸುತ್ತವೆ. ಹೀಗೆ ಸಂಕಟಗೊಳಪಟ್ಟ ವ್ಯಕ್ತಿಗತ ಸಂಕೀರ್ಣತೆ ಸಾಮೂಹಿಕ ಸ್ವರೂಪ ಆವಾಹಿಸಿಕೊಂಡು ಜನಸಮುದಾಯಗಳನ್ನು ದಿಗ್ಮೂಢರನ್ನಾಗಿಸುತ್ತದೆ. ಆಂತರ್ಯದೊಳಗೆ ಮೂಡುವ ಅಸಮಾಧಾನ ಸಹನೆಯನ್ನು ಕಳೆದಿಡುತ್ತದೆ. ಆ ಸಂದರ್ಭದ ಅಸಹನೆಯು ಹಿಂಸೆಯೊಂದಿಗಿನ ದೃಷ್ಟಿಕೋನಗಳನ್ನು ಚಿಗುರಿಸಿಕೊಳ್ಳಲು ನೆರವಾಗುತ್ತದೆ. ಈ ಹಂತದಲ್ಲಿಯೇ ದ್ವಂದ್ವ, ಅಸ್ಪಷ್ಟತೆ, ಅವಿವೇಕತನ, ಅಸಂಬದ್ಧತೆ ಮತ್ತು ಕ್ರೌರ್ಯದ ನಡವಳಿಕೆಗಳು ದೇಶದ ಸಾಮಾಜಿಕ ಅಸ್ಮಿತೆಯನ್ನೇ ಧ್ವಂಸಗೊಳಿಸುತ್ತವೆ. ಭಾರತ ಅಂಥದ್ದೊಂದು ಅಪಾಯಕಾರಿ ಪ್ರವೃತ್ತಿಯ ಮಿತಿಯೊಂದಿಗೆ ಹೆಜ್ಜೆಯಿರಿಸುತ್ತಿದೆ. ಇದನ್ನು ತಿಳಿದುಕೊಂಡು ಸರಿಹಾದಿ ತೋರುವ ದಾರ್ಶನಿಕತೆಯನ್ನು ನಿರೂಪಿಸಬೇಕಾದ ನಾಯಕರಲ್ಲದ ನಾಯಕರೆನ್ನಿಸಿಕೊಂಡವರು ಸಮಸ್ಯಾತ್ಮಕತೆಯನ್ನು ಸ್ಥಾಯಿಯಾಗಿಸಿ ತಮ್ಮ ಅಸ್ತಿತ್ವವನ್ನು ಶಾಶ್ವತಗೊಳಿಸಿಕೊಳ್ಳುವ ಹಂಬಲಗೊಳೊಂದಿಗೇ ಗುರುತಿಸಿಕೊಂಡಿದ್ದಾರೆ.

ಈ ದೇಶವನ್ನು ಕಾಡುತ್ತಿರುವ ಸಮಸ್ಯೆಗಳು ಯಾವುವು ಎಂಬುದು ಅವುಗಳ ವ್ಯತಿರಿಕ್ತ ಪರಿಣಾಮಗಳಿಗೆ ಈಡಾದವರೂ ಸೇರಿದಂತೆ ಹಲವರಿಗೆ ಗೊತ್ತಿದೆ. ಈ ಸಮಸ್ಯೆಗಳ ಮೂಲ ಎಲ್ಲಿಯದು ಎಂಬುದರ ಅರಿವೂ ಇದೆ. ಇಡೀ ದೇಶದಲ್ಲಿ ಸಮಸ್ಯೆಗಳೇ ಇಲ್ಲ ಎಂಬಂಥ ಪರಮೋಚ್ಛ ಭ್ರಮೆಯ ವರ್ತುಲಕ್ಕೆ ಸಿಲುಕೊಳ್ಳಬಾರದು ಎಂಬ ಪ್ರಜ್ಞೆಯನ್ನು ಕಟ್ಟಿಕೊಳ್ಳುವುದಕ್ಕೆ ಅನುಕೂಲ ಒದಗಿಸಿಕೊಡುವ ನಕಾರಾತ್ಮಕತೆಯ ಅನುಭವವು ಪ್ರತಿಯೊಬ್ಬರಿಗೂ ಆಗುತ್ತಲೇ ಇರುತ್ತದೆ. ಆದರೆ, ಅದನ್ನು ಹಲವರು ಅಭಿವ್ಯಕ್ತಿಸುವುದಿಲ್ಲ. ಬದಲಾವಣೆ ಬಯಸುವ ಚಿಂತಕರು ಮತ್ತು ಜನಸಾಮಾನ್ಯ ವಲಯ ಆ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸುತ್ತಾರೆ. ಹಾಗೆ ಅವರು ಮುಕ್ತ ಆಲೋಚನೆಯನ್ನು ಹರಿಬಿಟ್ಟಾಗ ಅದು ಅಪಾಯಕಾರಿ ಎಂದು ತಪ್ಪಾಗಿ ಅರ್ಥೈಸುವ ಜಾಯಮಾನದ ನಡೆಯನ್ನು ರಾಜಕೀಯ ವಲಯ ಈಗೀಗ ನೆಚ್ಚಿಕೊಳ್ಳುತ್ತಿದೆ. ಇಂಥ ನಡೆಯ ಕಾರಣಕ್ಕಾಗಿಯೇ ಸಂವಿಧಾನ ಮತ್ತು ಧರ್ಮ ಪರಸ್ಪರ ಸಂಘರ್ಷಿಸುವ ನೆಲೆಗಳಾಗಿ ಚರ್ಚಿಸಲ್ಪಡುತ್ತಿವೆ. ಇವೆರಡರ ಉದಾತ್ತ ಅರ್ಥವನ್ನು ಒಡೆದು ಸಂಕುಚಿತಗೊಳಿಸಿದ ಅಪವ್ಯಾಖ್ಯಾನವನ್ನೇ ಜನಸಮುದಾಯ ನೆಚ್ಚಿಕೊಳ್ಳುವಂತೆ ಒತ್ತಡ ಹಾಕುತ್ತಿವೆ. ಇದೇ ಬಗೆಯ ಅನುಕೂಲಕರ ಸಮಯಾವಕಾಶವನ್ನು ಕಾಯ್ದುಕುಳಿತಂತೆ ರಾಜಕೀಯ ವಲಯ ತನ್ನ ದಾಳಗಳನ್ನು ಪ್ರಯೋಗಿಸುತ್ತಿದೆ.

ಸದ್ಯದ ವ್ಯತಿರಿಕ್ತ ಸ್ಥಿತಿಗತಿಗಳು ಅತ್ಯಂತ ನಿಖರವಾಗಿ ಬಿಟ್ಟುಕೊಡುತ್ತಿರುವ ಸುಳಿವುಗಳು ಹಲವಿವೆ. ಅವುಗಳಲ್ಲಿ ಧರ್ಮ ಮತ್ತು ದೇವರಿಗೆ ಸಂಬಂಧಿಸಿದಂತೆ ಇರುವ ವ್ಯಕ್ತಿಗತ ಸಂಕುಚಿತತೆಯನ್ನು ಸಾಂಸ್ಥಿಕಗೊಳಿಸಿ ಪ್ರಭಾವವನ್ನು ವ್ಯಾಪಕಗೊಳಿಸುವ ಪ್ರಯತ್ನವೂ ಒಂದು. ಧರ್ಮವನ್ನು ಮತ್ತೊಂದು ಧರ್ಮದ ವಿರುದ್ಧ ಎತ್ತಿಕಟ್ಟುವುದು, ಆಯಾ ಧರ್ಮಗಳವರ ನಂಬಿಕೆಯ ಆವರಣದಲ್ಲಿ ಆದ್ಯತೆ ಪಡೆದಿರುವ ದೇವರುಗಳ ಆರಾಧನೆಯ ಅವಕಾಶಗಳನ್ನು ಸ್ವಾರ್ಥಕ್ಕೆ ತಿರುಗಿಸಿಕೊಳ್ಳುವುದು ಈಗೀಗ ಸಾರ್ವತ್ರಿಕವಾಗಿದೆ. ಸಮಸ್ಯೆಯೊಂದು ವ್ಯಕ್ತಿಯನ್ನು ಭಾಧಿಸುತ್ತಿರುತ್ತದೆ. ವ್ಯಕ್ತಿಗತ, ಕೌಟುಂಬಿಕ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯಾತ್ಮಕ ಸಂಕೀರ್ಣತೆಗಳೊಂದಿಗಿನ ವಾಸ್ತವಿಕತೆಯೇ ಆ ಸಮಸ್ಯೆಗೆ ಕಾರಣವಾಗಿರುತ್ತದೆ. ಆದರೆ, ಧರ್ಮ ಮತ್ತು ದೇವರನ್ನು ಅಪವ್ಯಾಖ್ಯಾನಕ್ಕೊಳಪಡಿಸಿ ಆ ಬಗ್ಗೆ ಸಂಕುಚಿತವಾಗಿ ಅರ್ಥೈಸಿ ಭಯಹುಟ್ಟಿಸಲಾಗುತ್ತದೆ. ಹೀಗೆ ಭಯವನ್ನು ಹುಟ್ಟಿಸಿ ಸ್ವಾರ್ಥ ಸಾಧಿಸಿಕೊಳ್ಳುವ ಹಿತಾಸಕ್ತಿಗಳ ಅಸ್ತಿತ್ವದಲ್ಲಿಯೇ ಮಹತ್ವದ ಸುಳಿವನ್ನು ಗೊತ್ತುಮಾಡಿಕೊಳ್ಳಬಹುದು. ಈ ಹಿತಾಸಕ್ತಿಗಳು ಸಮಸ್ಯೆಗಳನ್ನು ಉದ್ದೇಶಪೂರ್ವಕವಾಗಿ ಸ್ಥಾಯಿಯಾಗಿಸಿ ಜನರೊಳಗಿನ ಆಲೋಚಿಸುವ ಶಕ್ತಿಯನ್ನೇ ತಡೆದು ನಿಲ್ಲಿಸುತ್ತವೆ. ಆವರ ಆಲೋಚನೆಯ ಸಾಧ್ಯತೆಗಳನ್ನು ಮೊಟಕುಗೊಳಿಸಿ ಧರ್ಮವಲ್ಲದ ಸಂಗತಿಗಳ ಕಡೆಗೆ ತಿರುಗಿಸುತ್ತವೆ. ಅವರ ಮನಸ್ಸಿನಲ್ಲಿ ದೇವರುಗಳ ಬಗ್ಗೆ ಭಯದ ಭಾವ ಮೂಡಿಸುತ್ತವೆ. ಆರಾಧಿಸದಿದ್ದರೆ ಶಿಕ್ಷೆ ಗ್ಯಾರಂಟಿ, ದೇವರೇ ಮುನಿಸಿಕೊಂಡರೆ ಮುಂದಿದೆ ವ್ಯತಿರಿಕ್ತ ಪರಿಣಾಮ ಎಂಬ ಅತಾರ್ಕಿಕತೆಯನ್ನೇ ಮಂಡಿಸಿ ದಾರಿ ತಪ್ಪಿಸುತ್ತವೆ.

ಮೊದಲೇ ಸಮಸ್ಯೆಗಳ ಮಧ್ಯೆ ನರಳುತ್ತಿರುವವರ ಮುಂದೆ ಧರ್ಮದಲ್ಲಿಲ್ಲದ ಸಂಗತಿಗಳನ್ನು ವೈಭವೀಕರಿಸಿ ಹೇಳಿದರೆ ಸ್ವಾರ್ಥದ ಉದ್ದೇಶಗಳನ್ನು ಈಡೇರಿಸಿಕೊಳ್ಳಬಹುದು ಎಂಬ ಕಾರ್ಯಸೂಚಿ ಅತ್ಯಂತ ಎಚ್ಚರದಲ್ಲಿ ಯಶಸ್ವಿಯಾಗಿ ನಿರ್ವಹಿಸಲ್ಪಡುತ್ತದೆ. ಹೀಗಾದರೆ ಹೀಗಾಗುತ್ತದೆ ಎಂದು ತಾರ್ಕಿಕವಾಗಿ ಮಾತನಾಡುವವರಂತೆ ನಟಿಸುವವರೇ ರಂಜನಾಮಾಧ್ಯಮೋದ್ಯಮದ ಮೂಲಗಳಾಗುತ್ತಾರೆ. ಸಮಾಜದ ವಿವಿಧ ಜನವರ್ಗಗಳು ಇಂಥವರನ್ನು ಆರಾಧಿಸಿಕೊಂಡೇ ಇದ್ದರೆ ತಮ್ಮ ಬೇಳೆ ಬೇಯಿಸಿಕೊಳ್ಳಬಹುದು ಎಂಬ ರಾಜಕೀಯ ವಲಯದ ನಿರೀಕ್ಷೆಗಳು ಈ ಹಂತದಲ್ಲಿಯೇ ಈಡೇರಿಬಿಡುತ್ತವೆ. ಸಮಸ್ಯೆಯನ್ನು ಶಾಶ್ವತವಾಗಿ ಉಳಿಯುವಂತೆ ನೋಡಿಕೊಂಡು ಅದು ಬಿಕಟ್ಟಿನ ಸ್ವರೂಪ ಪಡೆದುಕೊಂಡಾಗಲೂ ಪರಿಹಾರದ ನಾಟಕವಾಡಿ ಧರ್ಮ, ದೇವರ ಕುರಿತಾಗಿ ಭಯಭೀತಿ ಸೃಷ್ಟಿಸಿ ಸಾಮಾಜಿಕ ಚಲನೆಯನ್ನು ನಿಲ್ಲಿಸಿಬಿಡುವ ರಾಜಕೀಯ ಉದ್ದೇಶಗಳು ಯಶಸ್ಸು ಪಡೆದುಬಿಡುತ್ತವೆ. ಇದೇ ರಾಜಕೀಯ ಪ್ರವೃತ್ತಿ ಇಂದು ಸಂವಿಧಾನಕ್ಕೆ ಸವಾಲೆಸೆಯುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ.
ಇದು ಎಲ್ಲ ಕಾಲದ ಸಮಸ್ಯೆಯೂ ಹೌದು. ಬಹುಷಃ ಈ ಕಾರಣಕ್ಕಾಗಿಯೇ ಇರಬಹುದು; ಈಗಾಗಲೇ ಆಗಿಹೋದ ದಾರ್ಶನಿಕರು ದೇವರು ಮತ್ತು ಧರ್ಮದ ಕುರಿತ ನಂಬಿಕೆಯ ಜಗತ್ತನ್ನು ಆಧರಿಸಿಯೇ ತಾತ್ವಿಕತೆಯನ್ನು ಪ್ರತಿಪಾದಿಸಿದರು. ಭೌತಿಕ ಜಗತ್ತಿನ ಒಳಗೇ ಮನುಷ್ಯಸಹಜ ದೌರ್ಬಲ್ಯಗಳೊಂದಿಗಿನ ಊನಗಳನ್ನು ತಮ್ಮೊಳಗಿನ ದಾರ್ಶನಿಕತೆಯೊಂದಿಗೆ ಎದುರುಗೊಂಡರು. ನಿಜವಾದ ಧರ್ಮ ಏನು ಎಂಬುದನ್ನು ಅರ್ಥೈಸಿದರು. ದೇವರ ಅಸ್ತಿತ್ವವು ಒಳಿತಿನೊಂದಿಗೇ ಇದೆ ಎಂಬ ವಿವೇಕವನ್ನು ಕಟ್ಟಿಕೊಡಲು ಪ್ರಯತ್ನಿಸಿದರು. ನಿಸರ್ಗದ ಅನೇಕ ಕೌತುಕಮಯ ಸಂಗತಿಗಳನ್ನು ಕಾಡಿಸಿಕೊಂಡು ಅವುಗಳನ್ನು ಜೀವಪರ ಅಂತಃಕರಣದೊಂದಿಗೆ ಮನುಷ್ಯ ಬದುಕಿನ ಉದ್ಧಾರಕ್ಕೆ ಬಳಸಿಕೊಳ್ಳಬಹುದಾದ ಒಳನೋಟಗಳ ಮೇಲೆ ಬೆಳಕು ಚೆಲ್ಲಿದರು. ಧರ್ಮ-ದೇವರ ಬಗೆಗಿನ ನಂಬಿಕೆಯ ಜಗತ್ತನ್ನು ಅಲುಗಾಡಿಸದೇ ಅಂತಸ್ಥಗೊಂಡಿರುವ ಮೂಢನಂಬಿಕೆಯ ಬೇರುಗಳನ್ನು ಕಿತ್ತೆಸೆಯಲು ತಾತ್ವಿಕ ಮಾರ್ಗವನ್ನು ಕಂಡುಕೊಂಡರು. ಆ ಮೂಲಕ ಧರ್ಮ ಮತ್ತು ದೇವರನ್ನು ಉದಾತ್ತತೆಯೊಂದಿಗೆ ತಾದಾತ್ಮ್ಯಗೊಳಿಸುವ ಚಲನಾತ್ಮಕ ಆಕೃತಿಗಳನ್ನು ಕೊಡುಗೆಗಳನ್ನಾಗಿ ನೀಡಿದರು. ಈಗ ಈ ಸಾಧ್ಯತೆಯ ತದ್ವಿರುದ್ಧದ ದಿಕ್ಕುಗಳೇ ಪರಮಮಾರ್ಗಗಳಾಗಿ ಪರಿಗಣಿತವಾಗುತ್ತಿವೆ. ಅವೇ ಪರಮೋಚ್ಛ ಎಂಬ ಬಿಂಬಗಳನ್ನು ಅತ್ಯಂತ ಚಾಣಾಕ್ಷಯುತವಾಗಿ ಕಟ್ಟಿಕೊಡಲಾಗುತ್ತಿದೆ. ಅಂಥ ಎಲ್ಲ ಸಂಕುಚಿತತೆಯನ್ನು ರಾಜಕೀಯ ಪೋಷಿಸುತ್ತಿದೆ. ಧರ್ಮ-ದೇವರನ್ನು ನೆಚ್ಚಿಕೊಂಡ ಜನರ ನಂಬಿಕೆಯ ಜಗತ್ತನ್ನು ಮೌಢ್ಯಕ್ಕೆ ತಿರುಗಿಸಿ ಅಪನಂಬಿಕೆಗಳನ್ನು ಮುನ್ನೆಲೆಗೆ ತಂದು ತನ್ನನ್ನು ವಿಜೃಂಭಿಸಿಕೊಳ್ಳುತ್ತಿದೆ.

ಧರ್ಮ ಮತ್ತು ದೇವರು – ಇವೆರಡೂ ಭಾವನಾತ್ಮಕ ಸಾಂಸ್ಥಿಕತೆಯನ್ನು ಅಳವಡಿಸಿಕೊಂಡು ನಿರಂತರವಾಗಿ ಜನರನ್ನು ಶೋಷಿಸಲು ಬಳಕೆಯಾದ ಇತಿಹಾಸವಿದೆ. ಅದನ್ನು ಮರೆಗೆ ಸರಿಸಿ ಅಧಿಕಾರ, ಹಣ ಮತ್ತು ಪ್ರತಿಷ್ಠೆಗಳನ್ನು ಸ್ಥಾಯಿಯಾಗಿಸಿಕೊಳ್ಳಲು ರಾಜಕೀಯ ಕೇಂದ್ರಗಳು ಪ್ರಯತ್ನಿಸಿ ಯಶಸ್ವಿಯಾಗುತ್ತಲೇ ಇವೆ. ಅವುಗಳಿಗೆ ಅನುಗುಣವಾಗಿಯೇ ತಮ್ಮನ್ನು ಪ್ರತಿಷ್ಠಾಪಿಸಿಕೊಂಡ ವಿವಿಧ ಜಾತಿಗಳ ಜನಸಮೂಹ ಅವು ನಿರೀಕ್ಷಿಸುವ ಸಂಕುಚಿತತೆಯ ಮನೋಧರ್ಮಕ್ಕೆ ಪಕ್ಕಾಗುತ್ತಲೇ ಇದೆ. ಬದಲಾವಣೆಯ ಪ್ರಬಲ ಅಸ್ತ್ರ ಎಂದು ಪರಿಗಣಿಸಲ್ಪಟ್ಟ ಶಿಕ್ಷಣ ಮತ್ತು ಅದರ ಮೂಲಕ ವ್ಯಾಪಕಗೊಳ್ಳುತ್ತದೆ ಎಂದುಕೊಂಡಿದ್ದ ಮೌಲ್ಯಾತ್ಮಕ ಪ್ರಭೆಯನ್ನು ಮತ್ತೆ ಮತ್ತೆ ಸೋಲಿಸುತ್ತಿರುವುದು ಇದೇ ಸಂಕುಚಿತತೆಯೇ. ಇದನ್ನೇ ಅಧಿಕಾರ ಕೇಂದ್ರಗಳ ಕಡೆಗೆ ನೋಟ ನೆಟ್ಟ ರಾಜಕೀಯ ವಲಯದ ಪ್ರತಿನಿಧಿಗಳು ತಮ್ಮ ಬಂಡವಾಳವಾಗಿಸಿಕೊಳ್ಳುತ್ತಿದ್ದಾರೆ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಧರ್ಮದಲ್ಲಿ ಇಲ್ಲದೇ ಇರುವ ಜೀವವಿರೋಧಿ ಅಮಾನವೀಯ ಸಾಂಪ್ರದಾಯಿಕತೆಯನ್ನು ಸಂವಿಧಾನಕ್ಕಿಂತಲೂ ಮಿಗಿಲು ಎಂದು ಪ್ರತಿಪಾದಿಸುತ್ತಿದ್ದಾರೆ. ಆ ಪ್ರತಿಪಾದನೆಯನ್ನು ಸಮಾಜದ ವಿವಿಧ ಜನವರ್ಗಗಳು ಒಪ್ಪಿಕೊಳ್ಳಲೇಬೇಕು ಎಂಬ ವಿತಂಡವಾದವನ್ನು ಮುಂದಿಡುತ್ತಿದ್ದಾರೆ.
ಈ ನಕಾರಾತ್ಮಕ ಹೆಜ್ಜೆಗಳಿಗೆ ಪರ್ಯಾಯವಾಗಿ ವಿಶ್ವಾಸಾರ್ಹವಾದ ಸಂವಿಧಾನಬದ್ಧ ರಾಜಕೀಯ ಸಂಸ್ಕøತಿ ರೂಪುಗೊಳ್ಳಬೇಕಾದ ಅನಿವಾರ್ಯತೆ ಇದೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಧರ್ಮವಲ್ಲದ ಸಂಗತಿಗಳನ್ನು ವೈಭವೀಕರಿಸಿ ಮುನ್ನೆಲೆಗೆ ತಂದ ವಲಯದವರೂ ತಾವು ಬದಲಾಗಬೇಕಾದ ಆಲೋಚನೆಗಳನ್ನು ಹರಿಬಿಡುತ್ತಿದ್ದಾರೆ ಎಂಬುದೇನೋ ಸಮಾಧಾನ ತರುವ ಸಂಗತಿ. ಈ ದೇಶದ ಸಾಂಸ್ಕøತಿಕ ವೈವಿಧ್ಯತೆಯ ಮಹತ್ವವನ್ನು ತಡವಾಗಿಯಾದರೂ ಹೇಳುತ್ತಿದ್ದಾರೆ ಎಂದುಕೊಳ್ಳಬಹುದು. ಎಲ್ಲ ಧರ್ಮಗಳವರನ್ನು ಗೌರವಿಸಬೇಕು ಎನ್ನುವ ಭಾವವನ್ನು ಸಂವಹಿಸುತ್ತಿದ್ದಾರೆ ಎಂದು ಖುಷಿಪಡಬಹುದು. ಅಂಥ ಆಶಾದಾಯಕ ನುಡಿಗಳು ನಡೆಯಲ್ಲೂ ಮೇಳೈಸಿಕೊಳ್ಳಬೇಕು.
ಹಾಗಾಗುವುದಕ್ಕೆ ಭಾರತದ ರಾಜಕಾರಣ ಅಷ್ಟು ಸುಲಭವಾಗಿ ಬಿಡುವುದಿಲ್ಲ. ಇಲ್ಲಿಯ ರಾಜಕಾರಣಕ್ಕೆ ಬದಲಾವಣೆಗಿಂತ ಸ್ಥಗಿತತೆಯೇ ಹೆಚ್ಚು ಅಚ್ಚುಮೆಚ್ಚು. ಧರ್ಮ-ದೇವರು ಕೇಂದ್ರಿತ ಸಾಂಪ್ರದಾಯಿಕತೆಯೊಂದಿಗೆ ತಳುಕು ಹಾಕಿಕೊಂಡಿರುವ ಸಮಸ್ಯೆಗಳು ಜಟಿಲವಾದಷ್ಟೂ ಅದಕ್ಕೆ ಎಲ್ಲಿಲ್ಲದ ಖುಷಿ. ಜನರು ಈ ಸಾಂಪ್ರದಾಯಿಕತೆಯ ತೊಳಲಾಟಗಳಲ್ಲೇ ಕಾಲ ಕಳೆದರೆ ನಿಜವಾದ ಬೆಳವಣಿಗೆಗೆ ಸಂಬಂಧಿಸಿದ ಚಿಂತನೆಯೇ ಹುಟ್ಟುವುದಿಲ್ಲ. ಆಗ ಜನರು ಎಚ್ಚೆತ್ತುಕೊಳ್ಳುವ ಪ್ರಮೇಯವೇ ಎದುರಾಗುವುದಿಲ್ಲ. ಇದು ದೇವರು-ಧರ್ಮಗಳ ರಕ್ಷಾಕವಚಗಳನ್ನು ಹಾಕಿಕೊಂಡು ಜನರ ಭಯವಿಹ್ವಲತೆಯನ್ನು ಬೇರೂರಿಸಿ ಮತ್ತಷ್ಟು ಗಟ್ಟಿಯಾಗಿಸಿ ಉಸಿರುಗಟ್ಟಿಸುವ ಆಟ. ತಮ್ಮನ್ನು ಸೋಲಿಸುವ ವೈಚಾರಿಕತೆ ಸನಿಹದಲ್ಲಿಯೇ ಇದೆ ಎನ್ನುವ ಸುಳಿವು ಸಿಕ್ಕ ತಕ್ಷಣವೇ ಧರ್ಮರಕ್ಷಣೆ ಮತ್ತು ದೇವರನ್ನು ಕೃತಾರ್ಥರನ್ನಾಗಿಸುವ ಕೈಂಕರ್ಯಗಳ ನೆಪದಲ್ಲಿ ಭಯವನ್ನು ಸೃಷ್ಟಿಸಿ ವಂಚಿಸುವ ಆಟ. ಇಂಥ ಆಟವನ್ನು ನಿಲ್ಲಿಸಬೇಕಾದರೆ ಪ್ರತಿಕಾಲಘಟ್ಟದಲ್ಲೂ ಸೋಲುತ್ತಲೇ ಇರುವ ಬಹುಸಂಖ್ಯಾತ ಶೋಷಿತ ಸಮುದಾಯದ ಜನರು ಸಂವಿಧಾನದ ಆವರಣಕ್ಕೆ ಮರಳಬೇಕು. ತಮ್ಮ ಸಮಸ್ಯೆಗಳಿಗೆ ಪರಿಹಾರ ತೋರುವ ಪರಿವರ್ತನಾಶೀಲ ಚಿಂತನಶೀಲ ಸದಾಶಯಗಳೊಂದಿಗೆ ಮುಖಾಮುಖಿಯಾಗಬೇಕು. ಧ್ಯಾನಸ್ಥ ಸ್ಥಿತಿಯಲ್ಲಿ ಸಂವಿಧಾನವನ್ನು ಅಂತರ್ಗತಗೊಳಿಸಿಕೊಳ್ಳಬೇಕು.
ಪರ್ಯಾಯ ರಾಜಕಾರಣದ ಸಾಧ್ಯತೆಗಳನ್ನು ಇಷ್ಟೊತ್ತಿಗಾಗಲೇ ಅತ್ಯಂತ ಚಾಣಾಕ್ಷಯುತವಾಗಿ ಪರೀಕ್ಷೆಗೊಡ್ಡಿ ತನ್ನ ಸಂವಿಧಾನಬದ್ಧ ಶಕ್ತಿಯನ್ನು ವಿಸ್ತರಿಸಿಕೊಳ್ಳಬಹುದಾಗಿದ್ದ ರಾಜಕೀಯ ಪಕ್ಷಗಳು ಮತ್ತೆ ಅಧಾರ್ಮಿಕ ಸಂಕುಚಿತತೆಯೊಂದಿಗಿನ ಶ್ರೇಷ್ಠತೆಯ ವ್ಯಸನದಿಂದ ಬಳಲುತ್ತಿರುವ ಸಾಂಪ್ರದಾಯಿಕ ಶಕ್ತಿಗಳ ಜೊತೆಗೇ ಕೈಜೋಡಿಸಿ ತಮ್ಮ ಅಧಿಕಾರ ಪಡೆಯುವ ಹಂಬಲಗಳನ್ನು ಜೀವಂತಗೊಳಿಸಿಕೊಳ್ಳುತ್ತಿವೆ. ಮತ್ತವೇ ಜಾತಿ ವೈರುಧ್ಯಗಳು. ಮತ್ತದೇ ಅಧಾರ್ಮಿಕ ಸಂಘರ್ಷ. ಮೇಲು-ಕೀಳುಗಳ ಅಂತರ್ಯುದ್ಧದ ಕಪಟಕಿರುಕುಳ ಯಾನ. ಸಂವಿಧಾನವನ್ನು ಗೆಲ್ಲಿಸುವ ಇಚ್ಛಾಶಕ್ತಿಯ ಕೊರತೆ. ಅಲ್ಲಲ್ಲಿ ಕಂಡುಬರುವ ಮಾನವೀಯತೆಯ ಒರತೆಗಳನ್ನು ಉದ್ದೇಶಪೂರ್ವಕವಾಗಿ ಇಲ್ಲವಾಗಿಸಿಬಿಡುವ ಹುನ್ನಾರಗಳ ತಕಧಿಮಿಗುಟ್ಟುವ ಕ್ರೂರನರ್ತನ. ಉದಾತ್ತ ತಾತ್ವಿಕತೆಯ ಪರಿಭಾಷೆಗಳನ್ನು ಅಪವ್ಯಾಖ್ಯಾನಗೊಳಿಸುವ ಸಾಂಪ್ರದಾಯಿಕತೆ ಅಸ್ತಿತ್ವ ಇನ್ನೆಷ್ಟು ದಿನ? ಕಾಲವೇ ಉತ್ತರಿಸಬೇಕು ಎಂದು ಸುಮ್ಮನೆ ಕುಳಿತುಕೊಳ್ಳಬೇಕೇ? ಯೋಚಿಸಲಾರಂಭಿಸಬೇಕೇ……?

(-ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ,ಇ-ಮೇಲ್ ವಿಳಾಸ: nkpadmanabh@gmail.com
ಮೊಬೈಲ್: 9972998300)

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading
Advertisement

Title

ದಿನದ ಸುದ್ದಿ11 hours ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ2 days ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ1 week ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ1 week ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ1 week ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ1 week ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ1 week ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ1 week ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ1 week ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ1 week ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

Trending