ದಿನದ ಸುದ್ದಿ
ಸಂವಿಧಾನ ಪ್ರಜಾತಂತ್ರ ಮತ್ತು ಸಾರ್ವಭೌಮ ಪ್ರಜೆಗಳು
- ನಾ ದಿವಾಕರ
ಸಂವಿಧಾನ ಈ ದೇಶದ ಆತ್ಮ ಪ್ರಜಾತಂತ್ರ ನಮ್ಮ ಉಸಿರು ಎಂದು ಹೇಳುತ್ತಲೇ ಬಂದಿರುವ ನಾವು, ಅಂದರೆ ಈ ದೇಶದ ಸಾರ್ವಭೌಮ ಪ್ರಜೆಗಳು ಈಗ ಉಸಿರುಗಟ್ಟಿ ಕೊನೆಯುಸಿರೆಳೆಯುವ ಹಂತ ತಲುಪುತ್ತಿದ್ದೇವೆ. ಪರಿಶುದ್ಧ ಆತ್ಮ ಇರುವವರೆಗೂ ಜೀವ ನಶಿಸುವುದಿಲ್ಲ ದೇಹ ಕೃಶವಾಗಿ ಅಳಿದರೂ ಆತ್ಮ ಸದಾ ಜೀವಾವಸ್ಥೆಯಲ್ಲಿರುತ್ತದೆ ಎನ್ನುವ ನಂಬಿಕೆಯೂ ನಮ್ಮ ನಡುವೆ ಇದೆ. ಅದಕ್ಕೇ ನಾವು ಆತ್ಮ ಎಂದ ಕೂಡಲೇ ಆಳಕ್ಕಿಳಿದು ನೋಡುವ ಒಂದು ಸೃಷ್ಟಿಕ್ರಿಯೆ ಎಂದು ಭಾವಿಸಿಬಿಡುತ್ತೇವೆ. ವೈಚಾರಿಕ ನೆಲೆಯಲ್ಲಿ, ವೈಜ್ಞಾನಿಕ ತಳಹದಿಯ ಮೇಲೆ ನಿಂತು ನೋಡಿದಾಗ ಆತ್ಮ ಎನ್ನುವುದು ಜೈವಿಕ ಅಸ್ತಿತ್ವವಿಲ್ಲದ ಮಾನವನ ಕಲ್ಪನೆ ಎನ್ನುವುದು ಸ್ಪಷ್ಟವಾಗುತ್ತದೆ.
ಆದರೂ ಒಂದು ಭೌಗೋಳಿಕ ದೇಶವನ್ನು ಮಾನವನ ದೇಹಕ್ಕೆ ಹೋಲಿಸಿದಾಗ ಸಂವಿಧಾನ ಎನ್ನುವುದು ಈ ಕಲ್ಪಿತ ಆತ್ಮ ಎನಿಸಿಕೊಳ್ಳುತ್ತದೆ. ಪ್ರಜಾತಂತ್ರ ಉಸಿರು ಎನಿಸಿಕೊಳ್ಳುತ್ತದೆ. ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುವ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಈ ದೇಹದ ಅವಯವಗಳಂತೆ ಕಾರ್ಯ ನಿರ್ವಹಿಸುತ್ತವೆ. ಮಾಧ್ಯಮ ಎನ್ನಲಾಗುವ ಸುದ್ದಿ ಪ್ರಸರಣ ಸಂಸ್ಥೆಗಳು ಈ ದೇಹವನ್ನು ಬಾಧಿಸುವ ರೋಗ ರುಜಿನಗಳ ಮೂಲ ಲಕ್ಷಣಗಳನ್ನು ಗ್ರಹಿಸಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡುವಂತೆ ಮಾರ್ಗದರ್ಶನ ನೀಡುವ ಮತ್ತೊಂದು ಆಧಾರಸ್ತಂಭದಂತೆ ಕಾರ್ಯನಿರ್ವಹಿಸುತ್ತದೆ. ಆಂಗ್ಲಭಾಷೆಯಲ್ಲಿ ಇದನ್ನು ಫೋರ್ತ್ ಎಸ್ಟೇಟ್ ಎನ್ನಲಾಗುತ್ತದೆ.
ನಾವು ಸಂವಿಧಾನ ಎಂಬ ಆತ್ಮವನ್ನು ಪೂಜಿಸುತ್ತಾ, ಆರಾಧಿಸುತ್ತಾ, ಗೌರವಿಸುತ್ತಾ ಗ್ರಾಂಥಿಕವಾಗಿ ಕಿಂಚಿತ್ತೂ ಧಕ್ಕೆಯಾಗದಂತೆ ಕಾಪಾಡಿಕೊಂಡು ಬಂದಿದ್ದೇವೆ. ಸಂವಿಧಾನವನ್ನು ಬದಲಿಸುವ ಪ್ರಸ್ತಾಪ ಎದುರಾದ ಕೂಡಲೇ ಪ್ರತಿರೋಧದ ದನಿಗಳು ಮುಗಿಲುಮುಟ್ಟುತ್ತವೆ. ಸಂವಿಧಾನದ ಮೂಲ ಆಶಯಗಳನ್ನು ಸಂರಕ್ಷಿಸಲು ಪಣ ತೊಟ್ಟಿರುವ ಅಸಂಖ್ಯಾತ ದನಿಗಳು ನಮ್ಮ ನಡುವೆ ಇವೆ. ಸಾಮಾಜಿಕ ನ್ಯಾಯ, ರಾಜಕೀಯ ಸ್ವಾತಂತ್ರ್ಯ, ಆರ್ಥಿಕ ಪ್ರಗತಿ ಈ ಧ್ಯೇಯಗಳನ್ನು ಸಾಧಿಸಲು ಕಳೆದ 73 ವರ್ಷಗಳಲ್ಲಿ ಅನೇಕ ರೀತಿಯ ಹೋರಾಟಗಳೂ ನಡೆದಿವೆ.
ಈ ಆಶಯಗಳನ್ನು ಭಾರತೀಯ ಪ್ರಭುತ್ವ ಸಾಧಿಸಲು ಸಾಧ್ಯವಾಗಿದೆಯೇ? ಈ ಪ್ರಶ್ನೆ ಎದುರಾದ ಕೂಡಲೇ ಅಂಕಿಅಂಶಗಳು ನಮ್ಮೆದುರು ನಿಲ್ಲುತ್ತವೆ. 70 ವರ್ಷಗಳಲ್ಲಿ ಏನೂ ಸಾಧನೆಯಾಗಿಲ್ಲ ಎಂದು ಹೇಳುತ್ತಾ ಆರು ವರ್ಷಗಳ ಕನ್ನಡಿ ಹಿಡಿದರೂ , ಸಾಧನೆಯ ಹೆಜ್ಜೆಗಳು ಮತ್ತು ಮುನ್ನಡೆಯ ಕೋಷ್ಟಕಗಳು ನಮ್ಮೆದುರು ನಿಲ್ಲುತ್ತವೆ. ಈ ಸಾಧನೆಗಳೇನಾದರೂ ಸಾಧ್ಯವಾಗಿದ್ದರೆ ಅದು ಸ್ವಾತಂತ್ರ್ಯೋತ್ತರ ಭಾರತದ ಆರಂಭಿಕ ವರ್ಷಗಳಲ್ಲಿ ಕೈಗೊಂಡ ಕೆಲವು ನಿರ್ಧಾರಗಳು ಮತ್ತು ಜಾರಿಗೊಳಿಸಿದ ಯೋಜನೆಗಳ ಫಲ ಎಂದಷ್ಟೇ ಹೇಳಬಹುದು.
ಆದರೆ ಸಾಧನೆಯ ಮೆಟ್ಟಿಲುಗಳನ್ನು ಪರಿಶೀಲಿಸುತ್ತಾ ಹೋದಂತೆಲ್ಲಾ ನಮಗೆ ತಾರತಮ್ಯದ ಕಂದಕಗಳು ಕಾಣುತ್ತಲೇ ಹೋಗುತ್ತವೆ. ಸಾಮಾಜಿಕ ನೆಲೆಯಲ್ಲಾಗಲೀ, ಆರ್ಥಿಕ ನೆಲೆಯಲ್ಲಾಗಲೀ ಈ ಕಂದಕಗಳು ಹೆಜ್ಜೆ ಹೆಜ್ಜೆಗೂ ಗೋಚರಿಸುವಷ್ಟು ಮಟ್ಟಿಗೆ ಮುನ್ನಡೆಯ ಹೆಜ್ಜೆಗಳಲ್ಲಿ ಲೋಪಗಳನ್ನು ಗುರುತಿಸಬಹುದು. ನಾವು ಸಾಮಾಜಿಕ ನ್ಯಾಯ ಸಾಧಿಸುವ ಮಾರ್ಗದಲ್ಲಿ ಸಾಕಷ್ಟು ಮುನ್ನಡೆದಿದ್ದೇವೆ.
ಆದರೆ ಜಾತಿ ದೌರ್ಜನ್ಯ , ಜಾತಿ ತಾರತಮ್ಯ , ಜಾತಿ ವೈಷಮ್ಯ ಇಂದಿಗೂ ಕಾಡುತ್ತಿರುವ ಜ್ವಲಂತ ಸಮಸ್ಯೆಯಾಗಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಒದಗಿಸುವುದನ್ನೇ ಸಾಮಾಜಿಕ ನ್ಯಾಯದ ಉನ್ನತ ಹಂತ ಎಂಬ ಭಾವನೆ ಆಳುವ ವರ್ಗಗಳಲ್ಲಿದೆ. ಅಲ್ಲಿಯೂ ಸಹ ಶೋಷಿತ ಸಮುದಾಯದ ಒಂದು ವರ್ಗ ಅವಕಾಶವಂಚಿತವಾಗಿರುವುದನ್ನು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ.
ಮೀಸಲಾತಿ ಸಾಮಾಜಿಕ ನ್ಯಾಯ ಸಾಧಿಸುವ ಒಂದು ಆಯಾಮವಷ್ಟೇ. ಶೋಷಿತ ಸಮುದಾಯಗಳ ಆರ್ಥಿಕ ಸಬಲೀಕರಣ ಕೇವಲ ಮೀಸಲಾತಿಯಿಂದ ಸಾಧ್ಯವಾಗುವುದಿಲ್ಲ ಎನ್ನುವುದು ಅಂಬೇಡ್ಕರರಿಗೂ ತಿಳಿದಿತ್ತು. ಸಾರ್ವತ್ರಿಕ ಪ್ರಾಥಮಿಕ ಶಿಕ್ಷಣ, ಆರ್ಥಿಕ ಸಬಲೀಕರಣದ ನೀತಿಗಳು ಮತ್ತು ಅರ್ಥವ್ಯವಸ್ಥೆಯಲ್ಲಿ ಸಮಾನ ನೆಲೆಯ ಪ್ರಾತಿನಿಧ್ಯ ಈ ಅಂಶಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಪರಿಪೂರ್ಣ ಸಾಮಾಜಿಕ ನ್ಯಾಯ ಸಾಧಿಸುವುದು ಅಸಾಧ್ಯ ಎಂದು ಅರಿತಿದ್ದರಿಂದಲೇ ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರು, ಭೂ ರಾಷ್ಟ್ರೀಕರಣಕ್ಕಾಗಿ ಆಗ್ರಹಿಸಿದ್ದರು. ಕಾರ್ಮಿಕರ ರಕ್ಷಣೆಗಾಗಿ ಹಲವು ಸುಧಾರಣಾ ಕ್ರಮಗಳನ್ನು ಪ್ರಸ್ತಾಪಿಸಿದ್ದರು. ಇದು ತಾತ್ವಿಕವಾಗಿ ಮಾಕ್ರ್ಸ್ ವಾದಿಗಳ ಆಗ್ರಹಗಳಿಗಿಂತಲೂ ಭಿನ್ನವಾಗಿರಲಿಲ್ಲ.
ಆದರೆ ಭಾರತದ ಪ್ರಭುತ್ವ ಈ ಸಾಂವಿಧಾನಿಕ ಆಶಯಗಳನ್ನು ಒಂದು ಸೀಮಿತ ಚೌಕಟ್ಟಿನಲ್ಲಿ ಮಾತ್ರವೇ ಅನುಸರಿಸುತ್ತಿರುವುದನ್ನೂ, ಅಧಿಕಾರ ರಾಜಕಾರಣದ ಒಂದು ಅಸ್ತ್ರದಂತೆ ಬಳಸುತ್ತಿರುವುದನ್ನೂ ಗಮನಿಸುತ್ತಲೇ ಬಂದಿದ್ದೇವೆ. ಹಾಗೆಯೇ ಸಾಮಾಜಿಕ ನ್ಯಾಯ ಸಾಧಿಸುವ ಮೂಲಕ, ಸಮಾಜೋ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಸಾಧಿಸುವ ನಿಟ್ಟಿನಲ್ಲೂ ಭಾರತದ ಪ್ರಭುತ್ವ ಸೋತಿದೆ.
73 ವರ್ಷಗಳ ನಂತರ ಈ ಸಮಾನತೆಯ ಕನಸು ಕನಸಾಗಿಯೇ ಉಳಿದಿರುವುದನ್ನು ಗಮನಿಸಬಹುದು. ಸಾರ್ವಜನಿಕರ ದೃಷ್ಟಿಯಲ್ಲಿ ಇದು ಪ್ರಭುತ್ವದ ಸೋಲು ಎನಿಸಿದರೂ, ಅಧಿಕಾರ ಮತ್ತು ಅಧಿಪತ್ಯ ರಾಜಕಾರಣದ ದೃಷ್ಟಿಯಲ್ಲಿ ಇದು ಭಾರತೀಯ ಪ್ರಭುತ್ವದ ಗೆಲುವು ಎನ್ನಬಹುದು. ಏಕೆಂದರೆ ಈ ದೇಶದ ಪ್ರಭುತ್ವ ಯಾವುದೇ ಕಾಲಘಟ್ಟದಲ್ಲೂ ಶೋಷಿತರ ಪರವಾಗಿ ಇರಲಿಲ್ಲ.
ಪ್ರಭುತ್ವದ ಈ ವೈಫಲ್ಯವನ್ನು ನಾವು ಸರ್ಕಾರಗಳ ವೈಫಲ್ಯವೆಂದೋ, ರಾಜಕೀಯ ಪಕ್ಷಗಳ ವೈಫಲ್ಯವೆಂದೋ ಭಾವಿಸುತ್ತೇವೆ. ವೈಫಲ್ಯದ ಪ್ರತಿಯೊಂದು ಹೆಜ್ಜೆಯಲ್ಲೂ ಸಂವಿಧಾನದ ಉಲ್ಲಂಘನೆಯನ್ನು ಕಾಣಬಹುದಾದರೂ ನಾವು ಅದನ್ನು ಆಡಳಿತಾತ್ಮಕ ಚೌಕಟ್ಟಿನಲ್ಲಿ ವಿಶ್ಲೇಷಿಸುತ್ತಿದ್ದೇವೆಯೇ ಹೊರತು ಸಂವಿಧಾನದ ಚೌಕಟ್ಟಿನಲ್ಲಿ ವಿಶ್ಲೇಷಿಸುತ್ತಿಲ್ಲ.
ಮೂಲ ಸಾಂವಿಧಾನಿಕ ಆಶಯಗಳಾದ ಸಮ ಸಮಾಜ ಮತ್ತು ಶೋಷಣೆ ರಹಿತ ಸಮಾಜದ ನಿರ್ಮಾಣಕ್ಕಾಗಿ ಹಾತೊರೆಯುವ ಮನಸುಗಳು ಈ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಲವು ಮಾರ್ಗಗಳನ್ನು ಕಂಡುಕೊಂಡಿವೆ. ಶಾಂತಿಯುತ ಪ್ರತಿಭಟನೆ, ಹಕ್ಕೊತ್ತಾಯಗಳು, ಮುಷ್ಕರಗಳು, ಚಳುವಳಿ, ಆಂದೋಲನ, ತೀವ್ರವಾದಿ ಹೋರಾಟ, ಸಶಸ್ತ್ರ ಹೋರಾಟ ಹೀಗೆ ಹಲವು ಮಾರ್ಗಗಳಲ್ಲಿ ಶೋಷಣೆಯಿಲ್ಲದ ಸಮಾಜಕ್ಕಾಗಿ ಹೋರಾಟಗಳು ನಡೆದಿವೆ, ನಡೆಯುತ್ತಿವೆ.
ದುರಂತ ಎಂದರೆ ಈ ಹೋರಾಟಗಳನ್ನು ನಾವೇ ಹಿಂಸಾತ್ಮಕ ಮತ್ತು ಅಹಿಂಸಾತ್ಮಕ, ಸಾಂವಿಧಾನಿಕ ಮತ್ತು ಅಸಾಂವಿಧಾನಿಕ, ಕಾನೂನುಬದ್ಧ ಮತ್ತು ಕಾನೂನುಬಾಹಿರ ಎಂದು ವಿಂಗಡಿಸಿಬಿಟ್ಟಿದ್ದೇವೆ. ತನ್ನ ಅಧಿಕಾರ ಕೇಂದ್ರವನ್ನು ಅಲುಗಾಡಿಸುವ ಯಾವುದೇ ಚಳುವಳಿ ಅಥವಾ ಹೋರಾಟಗಳು ಪ್ರಭುತ್ವದ ದೃಷ್ಟಿಯಲ್ಲಿ ಸಹನೀಯ ಎನಿಸುವುದಿಲ್ಲ , ಕಾನೂನುಬಾಹಿರ ಎನಿಸಿಬಿಡುತ್ತದೆ.
ಆದರೆ ಶೋಷಿತರ ದೃಷ್ಟಿಯಲ್ಲಿ ಎಲ್ಲ ರೀತಿಯ ಹೋರಾಟಗಳಿಗೂ ಒಂದು ತಾರ್ಕಿಕ ನೆಲೆ ಇರುತ್ತದೆ. ಎಲ್ಲ ಹೋರಾಟಗಳ ಗುರಿ ಸಮಾನತೆ ಮತ್ತು ಸಾಮಾಜಿಕ ಘನತೆಯನ್ನು ಸಾಧಿಸುವುದೇ ಆಗಿರುತ್ತದೆ. ಹಾಗಾಗಿಯೇ ಪ್ರಭುತ್ವ ಸಂವಿಧಾನದ ಚೌಕಟ್ಟಿನಲ್ಲೇ ಸಂವಿಧಾನ ಬಾಹಿರ ಕಾನೂನುಗಳನ್ನು ರಚಿಸುವ ಮೂಲಕ ಈ ಪ್ರಜಾಂದೋಲನಗಳ ವಿಘಟನೆಗೆ ಮಾರ್ಗಗಳನ್ನು ಹುಡುಕುತ್ತಿರುತ್ತದೆ.
1960ರ ದಶಕದಿಂದ ಇವತ್ತಿನವರೆಗೂ ಪ್ರಭುತ್ವ ಈ ನೀತಿಯನ್ನು ಅನುಸರಿಸುತ್ತಲೇ ಬಂದಿದೆ. ಇಂದು ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ಸಿಡಿದೆದ್ದಿರುವ ನಾವು, ಕಳೆದ ನಾಲ್ಕು ದಶಕಗಳಲ್ಲಿ ಭೂ ಸುಧಾರಣೆ ಮತ್ತು ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸುವುದನ್ನೇ ಮರೆತಿದ್ದೇವೆ ಎನ್ನುವುದನ್ನೂ ಗಮನಿಸಬೇಕು.
ಭೂ ಹೋರಾಟಗಳಿಗೆ ಅಂತ್ಯ ಹಾಡಲೆಂದೇ ಪ್ರಭುತ್ವ ನಕ್ಸಲ್ ಭೂತವನ್ನೂ ಸೃಷ್ಟಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕಿದೆ. ಆದರೆ ಭೂಮಿ ಇಲ್ಲದವರಿಗೆ ಭೂಮಿ ಹಂಚುವುದು, ಭೂ ಒಡೆತನದ ಮಿತಿಯನ್ನು ಹೇರುವುದು, ಭೂಮಾಲೀಕರ ದೌರ್ಜನ್ಯ ಮತ್ತು ಅಟ್ಟಹಾಸದಿಂದ ಗ್ರಾಮೀಣ ಬಡಜನತೆಯನ್ನು, ಶೋಷಿತ ಸಮುದಾಯಗಳನ್ನು ರಕ್ಷಿಸುವುದು ಕೇವಲ ನಕ್ಸಲರ ಕಾರ್ಯಸೂಚಿಯಾಗಬೇಕಿಲ್ಲ ಅಲ್ಲವೇ ?
ಪ್ರಜಾತಂತ್ರದ ಮಾರ್ಗದಲ್ಲಿಯೇ ಈ ಹೋರಾಟಗಳನ್ನು ಮುನ್ನಡೆಸುವ ನಿಟ್ಟಿನಲ್ಲಿ ನಾವು ಯೋಚಿಸುವುದನ್ನೇ ಬಿಟ್ಟಿದ್ದೇವೆ ಅಲ್ಲವೇ ? ಭೂ ಸ್ವಾಧೀನ ಒತ್ತಟ್ಟಿಗಿರಲಿ, ಭೂ ಸುಧಾರಣೆಯ ಕ್ರಮಗಳನ್ನು ಚಾಲ್ತಿಯಲ್ಲಿರುವ ಕಾನೂನುಗಳ ಅನ್ವಯವೇ ಜಾರಿಗೊಳಿಸಲೂ ಒತ್ತಾಯಿಸಲಾಗಿಲ್ಲ. ಪರಿಣಾಮಕಾರಿಯಾಗಿ ಅನುಷ್ಟಾನವಾಗಿದ್ದ ಭೂ ಸುಧಾರಣಾ ಕ್ರಮಗಳನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲೂ ಸಹ ಯಾವುದೇ ಪರಿಣಾಮಕಾರಿ ಆಂದೋಲನಗಳು ರೂಪುಗೊಂಡಿಲ್ಲ.
ಬಹುಶಃ ಉತ್ಪಾದನಾ ಪ್ರಕ್ರಿಯೆಯಲ್ಲಿನ ಶ್ರಮ ವಿಭಜನೆಯಂತೆ ಇಲ್ಲಿಯೂ ಸಹ ವಿಭಜನೆಯ ಸೂತ್ರಗಳನ್ನು ನಾವು ಅಳವಡಿಸಿಕೊಂಡಿದ್ದೇವೆ. ಹಾಗಾಗಿಯೇ ಭೂಮಾಲೀಕರಿಂದ ಭೂಮಿಯನ್ನು ಕಸಿದುಕೊಳ್ಳುವುದು, ನಕ್ಸಲ್ ಪರಿಕಲ್ಪನೆಯಲ್ಲಿ, ಹಿಂಸಾತ್ಮಕ ಎನಿಸಿಬಿಟ್ಟಿತು. ಅಹಿಂಸಾತ್ಮಕವಾದ ಪ್ರಯತ್ನಗಳು ನಡೆಯಲೂ ಇಲ್ಲ.
ಏಕೆ ನಡೆಯಲಿಲ್ಲ ? ಕಾರಣ ಸ್ಪಷ್ಟ. ಈ ದೇಶದ ಭೂಮಾಲೀಕ ವರ್ಗಗಳು ಅಧಿಪತ್ಯ ರಾಜಕಾರಣದ ಕೇಂದ್ರ ಬಿಂದು ಆಗಿವೆ. ಔದ್ಯಮಿಕ ಬಂಡವಾಳಗಾರರಷ್ಟೇ ಪ್ರಬಲವಾಗಿ ಈ ಭೂಮಾಲೀಕ ವರ್ಗ ಈ ದೇಶದ ಅಧಿಕಾರ ರಾಜಕಾರಣವನ್ನು ಪಕ್ಷಗಳ ಹೆಸರಿನಲ್ಲಿ ನಿರ್ವಹಿಸುತ್ತಿವೆ. ಈ ವರ್ಗಗಳ ಯಥಾಸ್ಥಿತಿವಾದ ಮತ್ತು ಅಧಿಕಾರದಾಹಕ್ಕೆ ಬಲಿಯಾಗಿರುವುದು ಜನಪರ ಹೋರಾಟಗಳು ಮತ್ತು ಈ ಹೋರಾಟಗಳನ್ನು ಪ್ರತಿನಿಧಿಸುವ ಅಸಂಖ್ಯಾತ ಸಂಘಟನೆಗಳು.
ಕಾರ್ಮಿಕ ಸಂಘಟನೆಗಳ ಹೋರಾಟವನ್ನೇ ಗಮನಿಸಿದರೆ, ಮುಷ್ಕರ ಹೋರಾಟಗಳ ಮೂಲಕ ಹಕ್ಕೊತ್ತಾಯಗಳನ್ನು ಮಂಡಿಸುವುದನ್ನು “ ಕಮ್ಯುನಿಸ್ಟ್ ” ಎಂದು ಹೀಗಳೆದು, ರಾಜಿ ಸಂಧಾನಗಳ ಮಾರ್ಗವನ್ನೇ ಪ್ರಧಾನವಾಗಿ ಆಯ್ಕೆ ಮಾಡಿಕೊಂಡ ನಿದರ್ಶನಗಳು ಹೇರಳವಾಗಿವೆ. ಈಗ ಒಂದೊಂದೇ ಸಂಸ್ಥೆಗಳು ಖಾಸಗಿ ಪಾಲಾಗುತ್ತಿರುವಾಗ ರಾಜಿ ಸಂಧಾನ ಎಷ್ಟರ ಮಟ್ಟಿಗೆ ಫಲಪ್ರದವಾಗುತ್ತವೆ ? ಈ ಪ್ರಶ್ನೆ ನಮ್ಮನ್ನು ಕಾಡಲೇಬೇಕಿದೆ. ಏಕೆಂದರೆ ಹೋರಾಟದ ಮಾರ್ಗಗಳಲ್ಲಿ ನಾವೇ ತಡೆಗೋಡೆಗಳನ್ನು ನಿರ್ಮಿಸಿಬಿಟ್ಟಿದ್ದೇವೆ ಅಥವಾ ಪ್ರಭುತ್ವ ನಿರ್ಮಿಸಿರುವ ದಿಬ್ಬಗಳಿಗೆ ಆಸರೆಯಾಗಿ ನಿಂತಿದ್ದೇವೆ.
ನಾವೇ ನಿರ್ಮಿಸಿರುವ ಬೌದ್ಧಿಕ ತಡೆಗೋಡೆಗಳನ್ನು ಕಿತ್ತೊಗೆಯುವುದು ಕಷ್ಟವೇನಲ್ಲ. ಆದರೆ ನಾಲ್ಕು ದಶಕಗಳ ಅವಧಿಯಲ್ಲಿ ಈ ಪ್ರಕ್ರಿಯೆಗೆ ಪ್ರಭುತ್ವ ತನ್ನದೇ ಆದ ನೆಲೆಗಳನ್ನು ಒದಗಿಸಿದೆ. ಶೋಷಣೆಗೊಳಗಾಗಿರುವ ಕೋಟ್ಯಂತರ ಜನತೆಯನ್ನು ಅಸ್ಮಿತೆಗಳ ಚೌಕಟ್ಟಿನಲ್ಲಿ ಬಂಧಿಸಿ, ಜಾತಿ ಧರ್ಮ ಮತ್ತು ಪ್ರಾದೇಶಿಕ ನೆಲೆಗಳಲ್ಲಿ ವಿಭಜಿಸಿರುವ ಪ್ರಭುತ್ವ ಶೋಷಿತ ಸಮುದಾಯಗಳ ಐಕಮತ್ಯ ಅಸಾಧ್ಯ ಎನ್ನುವಷ್ಟು ಮಟ್ಟಿಗೆ ಅಸ್ಮಿತೆಗಳ ಗೋಡೆಗಳನ್ನು ನಿರ್ಮಿಸಿಬಿಟ್ಟಿದೆ.
ಈ ಬೆಳವಣಿಗೆಗಳು ಹಠಾತ್ತನೆ ಸಂಭವಿಸಿದ್ದಲ್ಲ ಎನ್ನುವುದನ್ನೂ ಗಮನಿಸಬೇಕಿದೆ. 1980ರ ದಶಕದ ನವ ಉದಾರವಾದ ಮತ್ತು ಜಾತಿ ರಾಜಕಾರಣ, 1990ರ ದಶಕದ ಮತೀಯವಾದ ಮತ್ತು ಸಾಂಸ್ಕøತಿಕ ರಾಷ್ಟ್ರೀಯತೆ, 2000ದ ನಂತರದ ನಾಲ್ಕನೆಯ ಔದ್ಯಮಿಕ ಕ್ರಾಂತಿ ಮತ್ತು ಡಿಜಿಟಲೀಕರಣ ಈ ಎಲ್ಲ ಪ್ರಕ್ರಿಯೆಯ ಗರ್ಭದಲ್ಲಿ ಶೋಷಿತ ಸಮುದಾಯಗಳ ವಿಘಟನೆಯ ಬೀಜಗಳು ಅಡಗಿವೆ.
ದಲಿತ ಸಮುದಾಯಗಳ ಭೂಮಿಯ ಹಕ್ಕು ಮತ್ತು ಅಲ್ಪ ಪ್ರಮಾಣದಲ್ಲಿ ಹೊಂದಿರುವ ಭೂಮಿಯ ರಕ್ಷಣೆಗಾಗಿ ಈಗ ಒಕ್ಕೊರಲಿನ ದನಿ ಕೇಳಿಬರುತ್ತಿದೆ. ಏಕೆಂದರೆ ಕೇಂದ್ರ ಸರ್ಕಾರದ ಕೃಷಿ ಮಸೂದೆ ಭೂಮಿಯ ಖಾಸಗೀಕರಣಕ್ಕೆ ಹಾದಿಯನ್ನು ಸುಗಮವಾಗಿಸಿದೆ. ಆದರೆ ನವ ಉದಾರವಾದ ಮತ್ತು ಸಾಂಸ್ಕøತಿಕ ರಾಷ್ಟ್ರೀಯತೆಯ ಜಂಟಿ ಕಾರ್ಯಾಚರಣೆಯಲ್ಲಿ ಈ ಎರಡೂ ಅಂಶಗಳನ್ನು ನಾವೇ ನೇಪಥ್ಯಕ್ಕೆ ಸರಿಸಿದ್ದೇವೆ ಎನ್ನುವುದನ್ನೂ ಗಮನಿಸಬೇಕಲ್ಲವೇ ? ಈಗ ಅಲ್ಪಸ್ವಲ್ಪ ಭೂಮಿ ಇರುವವರೂ ತಮ್ಮ ನೆಲೆ ಕಳೆದುಕೊಳ್ಳಲಿದ್ದಾರೆ, ಭೂಮಿ ನಮ್ಮ ಹಕ್ಕು ಎಂದು ಭಾವಿಸುವವರು ಅಸಹಾಯಕ ಸ್ಥಿತಿ ತಲುಪುವಂತಾಗಿದೆ. ಈ ಸಂದಿಗ್ಧತೆಯ ಮೂಲವನ್ನು ಅಯೋಧ್ಯೆಯ ಕಾಲಾಳುಗಳ ಸದ್ದಿನಲ್ಲಿ ಕೇಳಿಸಿಕೊಳ್ಳಲು ಈಗಲಾದರೂ ಸಾಧ್ಯವೇ ? ಯೋಚಿಸೋಣ.
ಬಂಡವಾಳ ವ್ಯವಸ್ಥೆ ಪ್ರಬಲವಾದಂತೆಲ್ಲಾ ಹೋರಾಟದ ನೆಲೆಗಳನ್ನು ನಾಶಪಡಿಸುತ್ತಲೇ ಮುನ್ನಡೆಯುತ್ತದೆ. ಈ ಮುನ್ನಡೆಗೆ ಬಲಪಂಥೀಯ ರಾಜಕಾರಣದ ಹೆಗಲು ದೊರೆತರೆ ಏನಾಗುತ್ತದೆ ಎನ್ನುವುದನ್ನು ಮೂರು ದಶಕಗಳ ಭಾರತದ ರಾಜಕೀಯ ಬೆಳವಣಿಗೆಗಳು ನಿರೂಪಿಸಿವೆ. ಭಾರತದಂತಹ ಜಾತಿವ್ಯವಸ್ಥೆಯಲ್ಲಿ ಈ ವಿಘಟನೆ ಎಷ್ಟು ಸುಲಭಸಾಧ್ಯ ಎನ್ನುವುದನ್ನೂ ಪ್ರಭುತ್ವ ನಿರೂಪಿಸಿದೆ. ಮಂಡಲ-ಕಮಂಡಲ ರಾಜಕಾರಣದ ಕೂಪದಲ್ಲಿ ಎಷ್ಟೋ ಹೋರಾಟಗಳು ಇಂದಿಗೂ ಅಡಗಿ ಕುಳಿತಿವೆ. ಬಂಡವಾಳ ಮತ್ತು ಶ್ರಮಜೀವಿಗಳ ನಡುವಿನ ಸಂಘರ್ಷದ ನೆಲೆಯಲ್ಲಿ ಎಷ್ಟೋ ಜೀವಗಳು ನಲುಗಿಹೋಗಿವೆ. ಈ ಬಲಿಯಾದ ಜೀವಗಳು ಆಳುವ ವರ್ಗಗಳಿಗೆ ಬಂಡವಾಳವಾಗುತ್ತಿವೆ ನಮಗೆ ಕೇವಲ ಸ್ಮಾರಕಗಳಾಗುತ್ತಿವೆ.
ಭೀಮ ಕೊರೆಗಾಂವ್ ಸಂದರ್ಭದಲ್ಲಿ ಈ ದ್ವಂದ್ವವನ್ನು ನಾವು ಸ್ಪಷ್ಟವಾಗಿ ಗಮನಿಸಬಹುದು. ಅಥವಾ ಊನ, ದಾದ್ರಿ , ಜೆ ಎನ್ ಯು ಘಟನೆಗಳ ಸಂದರ್ಭದಲ್ಲಿ ಈ ವಿರೋಧಾಭಾಸಗಳನ್ನು ಗಮನಿಸಬಹುದು. ಮಾನವ ಹಕ್ಕುಗಳಿಗಾಗಿ, ಪರಿಸರ ರಕ್ಷಣೆಗಾಗಿ, ಆದಿವಾಸಿಗಳ ಮೂಲ ಸಂಸ್ಕøತಿ ಮತ್ತು ಜೀವನೆಲೆಗಳ ರಕ್ಷಣೆಗಾಗಿ ನಡೆಯುವ ಹೋರಾಟಗಳಿಗೆ ವಿಮುಖವಾಗುವ ಮೂಲಕ ಅನೇಕಾನೇಕ ಹೋರಾಟಗಳು ಪ್ರಭುತ್ವದ ಕಬಂಧ ಬಾಹುಗಳಿಗೆ ಸಿಲುಕಿ ತಮ್ಮ ಅಸ್ತಿತ್ವವನ್ನೇ ಕಳೆದುಕೊಂಡಿವೆ. ಇನ್ನು ಕೆಲವು ತಟಸ್ಥ ನೀತಿ ಅನುಸರಿಸಿ ಯಥಾಸ್ಥಿತಿವಾದಕ್ಕೆ ಶರಣಾಗಿ ನಿಷ್ಕ್ರಿಯವಾಗಿವೆ, ನಿಸ್ತೇಜವಾಗಿವೆ.
ಈ ನಿಷ್ಕ್ರಿಯತೆಯಿಂದ ಹೊರಬರುವ ಕಾಲ ಸನ್ನಿಹಿತವಾಗುತ್ತಿದೆ. ಏಕೆಂದರೆ ಬಂಡವಾಳ ವ್ಯವಸ್ಥೆ ನವ ಉದಾರವಾದದ ಸಂಪೂರ್ಣ ಸಾರ್ಥಕತೆಯತ್ತ ದಾಪುಗಾಲು ಹಾಕುತ್ತಿದೆ. ಭಾರತದ ಪ್ರಭುತ್ವವೂ ಈ ನಿಟ್ಟಿನಲ್ಲಿ ಮುನ್ನಡೆಯುತ್ತಿದೆ. ಸಮಸಮಾಜ , ಸಮಾನತೆ, ಸೌಹಾರ್ದತೆಯನ್ನು ಸಾಧಿಸುವ ಮತ್ತು ಶೋಷಣೆ ಹಾಗೂ ದೌರ್ಜನ್ಯರಹಿತ ಸಮಾಜದ ನಿರ್ಮಾಣದ ಕನಸುಗಳು ಸಂಪೂರ್ಣವಾಗಿ ಭಗ್ನವಾಗುವ ಸಂದರ್ಭದಲ್ಲಿ ನಾವಿದ್ದೇವೆ. ಈ ಕನಸುಗಳನ್ನು ನನಸಾಗಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಹೋರಾಟವೂ ಸಂವಿಧಾನಬಾಹಿರವಾಗಲಾರದು ಎನ್ನುವ ವಾಸ್ತವವನ್ನು ನಾವು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಿದೆ.
ಏಕೆಂದರೆ ಪ್ರಭುತ್ವ ಸಂವಿಧಾನಬಾಹಿರವಾಗಿಯೇ ಪ್ರಜೆಗಳ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಕಾರ್ಮಿಕ ಕಾಯ್ದೆಗಳ ತಿದ್ದುಪಡಿ, ಕೃಷಿ ಕಾಯ್ದೆಗಳ ತಿದ್ದುಪಡಿ, ಹಣಕಾಸು ಮಸೂದೆಗಳು ಈ ದೇಶದ ಶೋಷಿತ ಸಮುದಾಯಗಳನ್ನು ಮತ್ತಷ್ಟು ಶೋಷಣೆಗೊಳಪಡಿಸುವ ನಿಟ್ಟಿನಲ್ಲಿ ಸಾಗುತ್ತಿವೆ. ಹಿತವಲಯದಲ್ಲಿರುವ ಸುಶಿಕ್ಷಿತ-ಸುರಕ್ಷಿತ ವರ್ಗಗಳಿಗೂ ಇದರ ಬಿಸಿ ತಟ್ಟಲಿದೆ. ಆದರೆ ಆ ವೇಳೆಗೆ ಅರ್ಧದೇಹ ಸುಟ್ಟುಹೋಗಿರಬಹುದು. ಏನೇ ಆದರೂ ತಾವು ನಿಂತ ನೆಲೆ ಕುಸಿಯುತ್ತಿದೆ ಎಂದಾಗ ಮನುಕುಲ ಒಮ್ಮೆಲೆ ಚಿಮ್ಮಿ ಹೊರಬರುತ್ತದೆ. ಇದು ಇತಿಹಾಸ ನಿರೂಪಿಸಿರುವ ಸತ್ಯ. ಈ ಸಂದರ್ಭದಲ್ಲೇ ಭಾರತದ ಶೋಷಿತ ಸಮುದಾಯಗಳು, ಅವಕಾಶವಂಚಿತರು, ದೌರ್ಜನ್ಯ ಮತ್ತು ತುಳಿತಕ್ಕೊಳಗಾದವರು ತಮ್ಮ ಭವಿಷ್ಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ.
ಅರಣ್ಯ , ಜಲ ಮತ್ತು ಭೂಮಿಯ ಒಡಲಲ್ಲಿರುವ ಸಮಸ್ತ ನೈಸರ್ಗಿಕ ಸಂಪತ್ತು ಕಾರ್ಪೋರೇಟ್ ಮಾರುಕಟ್ಟೆಯ ವಶಕ್ಕೊಳಪಟ್ಟಾಗ ಅಸ್ಮಿತೆಗಳ ಲೋಕವೂ ಕುಸಿಯುತ್ತದೆ. ಏಕೆಂದರೆ ಹಣಕಾಸು ಬಂಡವಾಳ ಯುಗದಲ್ಲಿ ಶೋಷಕರು ಮತ್ತು ಶೋಷಿತರು ಎನ್ನುವ ಎರಡೇ ವರ್ಗಗಳು ಉಳಿಯುತ್ತವೆ. ಇಂದು ಪ್ರತಿರೋಧದ ದನಿಗಳನ್ನು ದಮನಿಸುವ ಕ್ರೌರ್ಯವನ್ನು ಸಮರ್ಥಿಸಲು ಸಾಕಷ್ಟು ದನಿಗಳು ಕೇಳಿಬರುತ್ತಿವೆ. ಏಕೆಂದರೆ ಈ ದನಿಗಳು ಅಸಮಾನತೆಯನ್ನೇ ಪೋಷಿಸುವ ಒಂದು ಕ್ರೂರ ವ್ಯವಸ್ಥೆಯ ಫಲಾನುಭವಿಗಳಾಗಿವೆ. ಈ ಫಲಾನುಭವಿಗಳು ಇರುವ ಹಿತವಲಯಗಳು ಹಂತಹಂತವಾಗಿ ಇದೇ ಕ್ರೌರ್ಯಕ್ಕೆ ಬಲಿಯಾಗುತ್ತವೆ.
ಶೋಷಿತರಲ್ಲಿ ಅಸ್ಮಿತೆಗಳ ಚೌಕಟ್ಟುಗಳಿರುತ್ತವೆ. ಆದರೆ ಶೋಷಕರಿಗೆ ಇರುವುದಿಲ್ಲ. ಪ್ರಭುತ್ವ ಮತ್ತು ಆಡಳಿತ ವ್ಯವಸ್ಥೆ ಈ ಶೋಷಕ ವರ್ಗದೊಡನೆ ಒಂದಾದಾಗ ಶೋಷಿತರ ದನಿಗಳು ಒಂದಾಗುತ್ತವೆ. ಭೂಮಿಯ ಪ್ರಶ್ನೆ ಈ ದನಿಗಳನ್ನು ಒಂದುಗೂಡಿಸುವ ನೆಲೆಯಾಗಿರುತ್ತದೆ. ನಾವು ಸಂವಿಧಾನವನ್ನು ಗ್ರಾಂಥಿಕವಾಗಿ ಮಾತ್ರ ಸಂರಕ್ಷಿಸುತ್ತಿದ್ದೇವೆ ಎನ್ನುವ ಪ್ರಜ್ಞೆ ನಮ್ಮಲ್ಲಿದ್ದರೆ, ಸಂವಿಧಾನದ ಮೌಲ್ಯಗಳನ್ನು ಸಂರಕ್ಷಿಸಲು ಸಾಧ್ಯ . ಪ್ರತಿರೋಧದ ದನಿಗಳೇ ಸಂವಿಧಾನ ವಿರೋಧಿ ಎನ್ನುವಂತಹ ಕಾಯ್ದೆ ಕಾನೂನುಗಳನ್ನು ನಮ್ಮ ಕಣ್ಣೆದುರಿನಲ್ಲೇ ಜಾರಿಗೊಳಿಸಲಾಗುತ್ತಿದೆ. ಈ ಕಾನೂನುಗಳ ವಿರುದ್ಧ ಹೋರಾಡುವುದೇ ಸಂವಿಧಾನ ರಕ್ಷಣೆಯ ಪ್ರಥಮ ಹೆಜ್ಜೆಯಾಗಬೇಕಿದೆ.
ಇದು ಎಡ-ಬಲದ ನಡುವಿನ ಸಂಘರ್ಷ ಮಾತ್ರವಲ್ಲ. ಶೋಷಕರು ಮತ್ತು ಶೋಷಿತರು, ಬಂಡವಾಳ ಮತ್ತು ಶ್ರಮ, ಬಂಡವಾಳಿಗ ಮತ್ತು ಶ್ರಮಿಕ, ಭೂಮಾಲೀಕ ಮತ್ತು ಭೂಹೀನ, ಮೇಲ್ಜಾತಿ ಮತ್ತು ದಲಿತರು, ಪುರುಷ ಪ್ರಧಾನ ವ್ಯವಸ್ಥೆ ಮತ್ತು ಮಹಿಳೆಯರು, ಶ್ರೀಮಂತರು ಮತ್ತು ಬಡಜನತೆ ಹೀಗೆ ಹಲವು ಆಯಾಮಗಳ ಸಂಘರ್ಷ. ಈ ಸಂಘರ್ಷ ತನ್ನ ತಾರ್ಕಿಕ ಅಂತ್ಯ ತಲುಪಬೇಕಾದರೆ ನಾವು ನಮ್ಮ ಹೋರಾಟದ ನೆಲೆಗಳಲ್ಲಿ ಸ್ಪಷ್ಟತೆಯನ್ನು ಕಂಡುಕೊಳ್ಳಬೇಕು. ಜಾತಿ, ಮತ ಮತ್ತು ಸಮುದಾಯಗಳ ಅಸ್ಮಿತೆಗಳಿಂದಾಚೆಗೆ ಯೋಚಿಸಬೇಕು.
ಅಲ್ಲಿ ನಮಗೆ ಅಂಬೇಡ್ಕರ್ ಮತ್ತು ಮಾಕ್ರ್ಸ್ ಒಂದೇ ನೆಲೆಯಲ್ಲಿ ಕಾಣಲು ಸಾಧ್ಯ. ನವ ಉದಾರವಾದ ಮತ್ತು ಬಲಪಂಥೀಯ ರಾಜಕಾರಣ ನಮಗೆ ಈ ಅವಕಾಶವನ್ನು ಕಲ್ಪಿಸಿದೆ. ಎಲ್ಲವನ್ನೂ ಕಳೆದುಕೊಳ್ಳುವ ಮುನ್ನ ಜಾಗೃತರಾಗಬೇಕಿದೆ. ಭಾರತದ ಸಂವಿಧಾನವನ್ನು ಬದಲಿಸದೆಯೇ ಸಂವಿಧಾನದ ಮೂಲ ಆಶಯಗಳನ್ನು ಕೈಬಿಟ್ಟು ದೇಶದ ಸಾರ್ವಭೌಮ ಪ್ರಜೆಗಳ ಎಲ್ಲ ಹಕ್ಕುಗಳನ್ನೂ ಕಸಿದುಕೊಳ್ಳಲಾಗುತ್ತಿದೆ.
ರೈತಾಪಿಯ ಪರ ದನಿ ಎತ್ತುವ, ಕಾರ್ಮಿಕರೊಡನೆ ದನಿಗೂಡಿಸುವ, ಶೋಷಿತರ ದನಿಗಳಿಗೆ ಒತ್ತಾಸೆಯಾಗಿ ನಿಲ್ಲುವ ಪ್ರತಿರೋಧದ ದನಿಗಳೆಲ್ಲವೂ ಮುಂಬರುವ ದಿನಗಳಲ್ಲಿ ನಗರ ನಕ್ಸಲರ ಅಥವಾ ಭಯೋತ್ಪಾದಕರ ದನಿಗಳಂತೆ ಕಾಣುತ್ತವೆ. ಕೊರೋನಾ ಸೋಂಕು ನಮಗೆ ತಗಲುವುದಿಲ್ಲ ಎಂಬ ಭಂಡ ಧೈರ್ಯ ಇದ್ದವರು ನಂತರ ಸೋಂಕಿಗೆ ಒಳಗಾದಂತೆ ಇಂದಿನ ವಂದಿಮಾಗಧರು, ಭಟ್ಟಂಗಿಗಳು ನಾಳೆ ನಗರ ನಕ್ಸಲರಾಗಿಬಿಡುತ್ತಾರೆ. ಇದು ಪ್ರಭುತ್ವದ ಚಾಣಕ್ಯ ನೀತಿಯ ಫಲ.
ದೇಶಾದ್ಯಂತ ಭುಗಿಲೆದ್ದಿರುವ ಆಕ್ರೋಶದ ಜ್ವಾಲೆಗಳ ಒಂದೊಂದು ಕಿಡಿಯೂ ಈ ವಾಸ್ತವವನ್ನು ಬಿಂಬಿಸುತ್ತಿದೆ. ಈ ಕಿಡಿಗಳಲ್ಲಿರುವ ಸಂದೇಶವನ್ನು ಗ್ರಹಿಸುವುದು ನಮ್ಮ ಆದ್ಯತೆಯೂ ಹೌದು ಕರ್ತವ್ಯವೂ ಹೌದು. ಗ್ರಾಂಥಿಕವಾಗಿ ಸಂವಿಧಾನ ಸುರಕ್ಷಿತವಾಗಿದೆ. ಆದರೆ ಸ್ವತಃ ಅಂಬೇಡ್ಕರರೇ ಹೇಳಿರುವಂತೆ ಈ ಸಂವಿಧಾನದ ಮೂಲ ಆಶಯಗಳಿಗೆ ಚ್ಯುತಿ ಬರುವಂತಹ ಆಡಳಿತ ನೀತಿಗಳು ಜಾರಿಯಾಗುತ್ತಾ ಹೋದರೆ ಸಂವಿಧಾನ ತನ್ನ ಅರ್ಥವನ್ನೇ ಕಳೆದುಕೊಳ್ಳುತ್ತದೆ.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಜೆಗಳ ಸಾರ್ವಭೌಮತ್ವಕ್ಕೇ ಧಕ್ಕೆ ಉಂಟಾಗುವ ಸನ್ನಿವೇಶವನ್ನು ನಾವು ಎದುರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ನಾವು ಸಂವಿಧಾನದ ರಕ್ಷಣೆಗಾಗಿ ಗ್ರಾಂಥಿಕ ಪರಿಮಿತಿಯನ್ನು ಮೀರಿ ದೃಷ್ಟಿ ಹಾಯಿಸಬೇಕಿದೆ. ಇಲ್ಲವಾದರೆ ಇತಿಹಾಸದ ಪುಟಗಳಲ್ಲಿ ಶಾಶ್ವತ ಅಪರಾಧಿಗಳಾಗಿಯೇ ಉಳಿದುಬಿಡುತ್ತೇವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.
ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.
ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ, ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.
ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.
ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.
ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.
ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.
ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.
*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿಸಚಿವ ಎಚ್.ಆಂಜನೇಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ದಿನದ ಸುದ್ದಿ
ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
ಮುಖ್ಯಾಂಶಗಳು
ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ
ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ
ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್
ಸುದ್ದಿದಿನ,ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.
ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ತನಿಖೆ ಎದುರಿಸುತ್ತಿರುವವರು
ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.
ಕಚೇರಿಯಲ್ಲಿ ತಪಾಸಣೆ
ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.
ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ4 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ2 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ20 hours agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

