ದಿನದ ಸುದ್ದಿ
ರಾಜ್ಯಾದ್ಯಂತ ಮುಂದುವರಿದ ಮಳೆ ಅಬ್ಬರ; ಅನೇಕ ಕಡೆ ಶಾಲೆಗಳಿಗೆ ರಜೆ
ಸುದ್ದಿದಿನ ಡೆಸ್ಕ್ : ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇದರ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೈಸೂರು, ಶಿವಮೊಗ್ಗ, ದಕ್ಷಿಣ ಕನ್ನಡ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಳೆಯಿಂದ ರಸೆ, ಸೇತುವೆ ಮತ್ತು ಹಾಗೂ ಸಾವಿರಾರು ಎಕರೆ ಪ್ರದೇಶದಲ್ಲಿನ ಭತ್ತ, ಮೆಕ್ಕೆಜೋಳ, ಬಾಳೆ, ತರಕಾರಿ ಇನ್ನಿತರೆ ಬೆಳೆ ಹಾನಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಕೊಟ್ಟಾರ, ಪಂಪ್ವೆಲ್, ಜಪ್ಪಿನಮೊಗರು ಮುಂತಾದ ತಗ್ಗು ಪ್ರದೇಶಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಸುಳ್ಯದ ಕಲ್ಲಮುಟ್ಲುವಿನ ನಗರ ಪಂಚಾಯತ್ನ ನೀರು ಸರಬರಾಜು ಪಂಪ್ ಬಳಿ ಭೂಕುಸಿತ ಉಂಟಾಗಿದೆ. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಮತ್ತು ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ದ್ರಾಕ್ಷಿ, ಮಾವು ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮಳೆಯಿಂದ ಮಂಡ್ಯದ ಬೀಡಿ ಕಾಲೋನಿಯ ಅನೇಕ ಮನೆಗಳಿಗೆ ನೀರು ನುಗ್ಗಿದೆ.
ಇಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಬೀಡಿ ಕಾಲೋನಿಗೆ ಭೇಟಿ ನೀಡಿ, ಪರಿಶೀಲಿಸಿ ಸದ್ಯಕ್ಕೆ ಕಾಲೋನಿಯ ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243