ದಿನದ ಸುದ್ದಿ
ರಾಜ್ಯದಲ್ಲಿ ಮುಂದುವರಿದ ಮಳೆ : ಅಪಾರ ನಷ್ಟ
ಸುದ್ದಿದಿನ ಡೆಸ್ಕ್ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದೂ ಸಹ ಮಳೆ ಅಬ್ಬರ ಮುಂದುವರಿದಿದ್ದು, ಜನಜೀವನ ತತ್ತರಗೊಂಡಿದೆ. ಸಾವಿರಾರು ಎಕರೆ ಪ್ರದೇಶದಲ್ಲಿನ ವಿವಿಧ ಬೆಳೆಗಳಿಗೆ ಹಾನಿಯಾಗಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ಮಳೆಯಿಂದ ಆದ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಂದೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ 2 ಸಾವಿರಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಯಾಗಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯಲ್ಲಿ ಇದೇ 17ರಿಂದ 19 ರವರೆಗೆ ಹೆಚ್ಚಿನ ಮಳೆಯಾಗಿದ್ದು, ಜಿಲ್ಲೆಯಲ್ಲಿ 114 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಬೂಬಾಲನ್ ತಿಳಿಸಿದ್ದಾರೆ.
ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಳೆಯಿಂದ ವ್ಯಾಪಕ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ವ್ಯಾಪಕ ಹಾನಿಯಾಗಿದೆ.
354 ವಿದ್ಯುತ್ ಕಂಬಗಳು,45ಟ್ರಾನ್ಸ್ ಫಾರ್ಮರ್ಗಳಿಗೆ ಹಾನಿಯಾಗಿದೆ. ಮುಂಡಗೋಡ, ಕುಮಟ, ಯಲ್ಲಾಪುರದಲ್ಲಿ ಹಲವಾರು ಮನೆಗಳು ಜಝಂಗೊಂಡಿವೆ. ಸಿಡಿಲಿನಿಂದ 6ಜಾನುವಾರುಗಳು ಮೃತಪಟ್ಟಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243