Connect with us

ದಿನದ ಸುದ್ದಿ

ಕೊರೋನಾ ತಂದಿದೆ ಆಪತ್ತು; ತಲ್ಲಣಗೊಂಡಿದೆ ಮಕ್ಕಳ ಜಗತ್ತು..!

Published

on

ಹೋಯ್ತಾ ಕೊರೋನಾ..? ಶಾಲೆಗೆ ಹೊರಡೋಣ..?

  • ವಿ.ಕೆ.ಕುಮಾರಸ್ವಾಮಿ, ಶಿಕ್ಷಕರು, ರಾಮನಗರ

ಮ್ಮಾ ನನ್ ಲಂಚ್ ಬಾಕ್ಸ್ ಎಲ್ಲಿ? ನನ್ ಡ್ರಾಯಿಂಗ್ ಬುಕ್ ಎಲ್ಲೋಯ್ತು? ಅಯ್ಯೋ ಲೇಟ್ ಆಯ್ತು, ವ್ಯಾನ್ ಬಂದೇಬಿಡ್ತು ಅಮ್ಮಾ, ಲೇ ಪುಟ್ಟಾ ನೆನ್ನೆ ಮಿಸ್ಸು ಕನ್ನಡ ಹೋಮ್‍ವರ್ಕ್ ಕೊಟ್ಟಿದ್ರಲ್ಲಾ ಅದನ್ನ ಕಂಪ್ಲೀಟ್ ಮಾಡಿದ್ಯೇನೋ? ಲೋ ಸಾಗರ್ ಬಿಡೋ ಇವತ್ತು ಫಸ್ಟ್ ಪೀರಿಯಡ್ ಪಿ.ಟಿ ಇದೆ, ಚೆನ್ನಾಗಿ ಆಟ ಆಡೋಣ ಆಮೇಲೆ ಮಿಕ್ಕಿದ್ದು ನೋಡ್ಕಳಣ! ಅಬ್ಬಾ! ಮಕ್ಕಳ ಲೋಕ ಅದೆಷ್ಟು ಚೆಂದ ಅಲ್ವಾ. ಹೀಗಿದ್ದ ಮಕ್ಕಳ ಆಟ ಪಾಠಗಳ ತುಂಟಾಟಕ್ಕೆ ಇಂದು ಕೊರೋನಾ ಹೆಮ್ಮಾರಿ ಬ್ರೇಕ್ ಹಾಕಿರುವುದು ವಿಷಾದನೀಯ.

ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧವಾಗಿದ್ದು, ಮಕ್ಕಳ ಮನದ ತುಂಬಾ ಮೋಡ ಕವಿದ ವಾತಾವರಣ ಆವರಿಸಿದ್ದು ಖಿನ್ನತೆ, ಮಾನಸಿಕ ಅಸಮತೋಲನ, ವರ್ತನೆಯಲ್ಲಿ ಬದಲಾವಣೆ, ಮೊಬೈಲ್ ಗೀಳು ಹೆಚ್ಚಾಗಿ ಅವರ ಬದುಕು ಬಿರುಗಾಳಿಗೆ ಸಿಕ್ಕ ನಾವೆಯಂತೆ ಉಯಿಲಾಡುತ್ತಿದೆ. ಈ ಬಗ್ಗೆ ಇಲ್ಲೊಂದು ಅವಲೋಕನ..

ಹಿರಿದಾಗುತ್ತಿದೆ ಶೈಕ್ಷಣಿಕ ಅಂತರ

ಪ್ರಸ್ತುತ ಸಂದರ್ಭದಲ್ಲಿ ಇಡೀ ಶೈಕ್ಷಣಿಕ ಚಟುವಟಿಕೆಗಳು ನಿಂತುಹೋಗಿದ್ದು, ಕಳೆದ ಮೂರು ತಿಂಗಳಿಂದ ಮಕ್ಕಳ ಕಲಿಕೆಯ ಅಂತರ ಹಿರಿದಾಗುತ್ತಿದೆ. ಈಗಾಗಲೇ ಕೊರೋನಾ ಎಂಬ ವಿಷ ಕ್ರಿಮಿ ತನ್ನ ಬಾಹುಗಳನ್ನು ವಿಸ್ತಾರವಾಗಿ ಚಾಚುತ್ತಿರುವುದರಿಂದ, ಮಕ್ಕಳ ಸುರಕ್ಷತೆಯೊಂದಿಗೆ ಶಾಲೆಗಳ ಆರಂಭ ಅಷ್ಟು ಸುಲಭದ ಮಾತಲ್ಲ. ಈ ಸಂಬಂಧ ಸರ್ಕಾರ ಅಥವಾ ಪೋಷಕರು ಮಕ್ಕಳ ಶ್ರೇಯೋಭಿವೃದ್ಧಿಗೆ ವಿವಿಧ ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಅದು ಮಕ್ಕಳ ಮೇಲೆ ನೇರ ಶಿಕ್ಷಣ ಪದ್ಧತಿಯಷ್ಟು ತೀವ್ರ ಪರಿಣಾಮ ಬೀರದಿರುವುದು ಆತಂಕದ ಸಂಗತಿಯಾಗಿದೆ.

ಬಹುತೇಕ ಇಂದಿನ ಮಕ್ಕಳಲ್ಲಿ ಕಾಡುತ್ತಿರುವ ತಾತ್ಕಾಲಿಕ ನೆನಪಿನ ಶಕ್ತಿಯ ಪರಿಣಾಮವಾಗಿ, ಮಕ್ಕಳನ್ನು ಈ ಮೊದಲಿನ ಸಹಜ ಸ್ಥಿತಿಗೆ ತರುವುದು ತೀರಾ ಪ್ರಾಯಾಸದ ಕೆಲಸವಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ದುಸ್ತರವಾಗುತ್ತಿದ್ದು, ಇದು ಶೈಕ್ಷಣಿಕ ಅಸಮತೋಲನಕ್ಕೆ ಕಾರಣವಾಗುತ್ತಿದೆ. ಕೊರೋನಾ ಹೋಯ್ತಾ? ಶಾಲೆಗೆ ಆರಂಭವಾಯ್ತಾ? ಎಂಬುದು ಇಂದು ಏನೂ ಅರಿಯದ ಮುಗ್ಧ ಮಕ್ಕಳನ್ನು ಕಾಡುತ್ತಿರುವ ಬಹುದೊಡ್ಡ ಪ್ರಶ್ನೆಯಾಗಿದೆ. ಹೀಗೆ ಕೊರೋನಾ ಮಧ್ಯದಲ್ಲಿ ಅಡಕತ್ತರಿಗೆ ಸಿಕ್ಕಂತಾಗಿರುವ ಮಕ್ಕಳ ಬದುಕು ನಿಜಕ್ಕೂ ತಲ್ಲಣಗೊಂಡಿದೆ.

ಸಾಮಾಜೀಕರಣಕ್ಕೆ ಬ್ರೇಕ್

ಮಕ್ಕಳನ್ನು ಸಾಮಾಜೀಕರಣಗೊಳಿಸುವ ಪ್ರಕ್ರಿಯೆಯಲ್ಲಿ ಕುಟುಂಬದಷ್ಟೇ, ಶಾಲೆ, ನೆರೆಹೊರೆ ಹಾಗೂ ಸಮಕಾಲೀನ ವಯೋಮಾನದವರ ಪಾತ್ರವೂ ಸಹ ಹಿರಿದಾಗಿದೆ. ಆದರೆ ಕೊರೋನಾ ವಿಷ ಪೀಡೆ ಮಕ್ಕಳನ್ನೇ ಹೆಚ್ಚು ಟಾರ್ಗೆಟ್ ಮಾಡುತ್ತಿರುವುದರಿಂದ, ಅವರು ಮನೆಯಿಂದ ಹೊರಗೆ ಬಾರದಂತಾಗಿ ಖಿನ್ನತೆ ಹೆಚ್ಚಾಗುತ್ತಿದೆ.

ಇದರಿಂದ ಅವರಲ್ಲಿ ವಯೋ ಸಹಜ ಮಾನಸಿಕ ಬೆಳವಣಿಗೆ ಕ್ಷೀಣಿಸುತ್ತಿದ್ದು, ವರ್ತನೆಯಲ್ಲಿ ವಿಭಿನ್ನ ಬದಲಾವಣೆಗಳು ಕಂಡು ಬರುತ್ತಿದೆ. ನಿತ್ಯವೂ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದ ಮಕ್ಕಳ ಲೋಕ ಇಂದು ಮಂಕಾಗುತ್ತಿದೆ. ಹೀಗಾಗಿ ಸಾಮಾಜೀಕರಣ ಪ್ರಕ್ರಿಯೆ ತಡವಾಗುವುದರ ಜೊತೆಗೆ, ಅವರ ಭವಿಷ್ಯವೂ ಸಹ ಡೋಲಾಯಮಾನವಾಗುತ್ತಿದೆ.

ಮೊಬೈಲ್ ಬಳಕೆಯಿಂದ ಆಪತ್ತು

ಮನೆಯಲ್ಲೇ ಉಳಿದುಕೊಂಡಿರುವ ಕೋಟ್ಯಂತರ ಮಕ್ಕಳು ಇಂದು ಕಾಲ ಕಳೆಯಲೆಂದೋ ಅಥವಾ ಆನ್‍ಲೈನ್ ತರಗತಿಗಳಿಗೆಂದೋ ಮೊಬೈಲ್ ಮೊರೆ ಹೋಗಿದ್ದಾರೆ. ಆದರೆ ಭಾರತದಲ್ಲಿನ ಬಹುಪಾಲು ಪೋಷಕರ ಅನಕ್ಷರತೆ ಸಮಸ್ಯೆಯಿಂದಾಗಿ ತಮ್ಮ ಮಕ್ಕಳು ಮೊಬೈಲ್‍ನ್ನು ಸರಿಯಾದ ಉದ್ದೇಶಕ್ಕೆ ಬಳಸುತ್ತಿದ್ದಾರೆಯೇ ಎಂಬುದನ್ನು ತಿಳಿಯುವುದರಲ್ಲಿ ವಿಫಲತೆ ಎದುರಾಗಿದೆ.

ಇದರಿಂದ ಮಕ್ಕಳ ಮೇಲಿನ ಹಿಡಿತ ತಪ್ಪಿ, ಅವರ ಮನಸ್ಸು ವ್ಯಗ್ರವಾಗಿ ವಿವಿಧ ಸೈಬರ್ ಕ್ರೈಮ್‍ಗಳತ್ತ ಮುಖ ಮಾಡುತ್ತಿದ್ದಾರೆ. ಅಲ್ಲದೇ ಪ್ರತಿದಿನ ಗೇಮ್ ಆಡಲು, ಚಾಟ್ ಮಾಡಲು ಇನ್ನಿತರ ಉದ್ದೇಶಗಳಿಗಾಗಿ ದೀರ್ಘಾವಧಿಯವರೆಗೆ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ಇದು ತೊಡಕಾಗುತ್ತಿದೆ. ಸಣ್ಣ ವಯಸ್ಸಿನಲ್ಲೇ ಮಕ್ಕಳ ಮೇಲೆ ಆಘಾತಕಾರಿ ಪರಿಣಾಮಗಳು ಸೃಷ್ಟಿಯಾಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಹೆಚ್ಚಿದೆ.

ಮೌಲ್ಯಗಳ ಕುಸಿತ

ಹಿತ್ತಲ ಗಿಡ ಮದ್ದಲ್ಲ ಎಂಬಂತೆ ಬಹುತೇಕ ಇಂದಿನ ಡಿಜಿಟಲ್ ಯುಗದ ಮಕ್ಕಳು ಪೋಷಕರ ಮಾತಿಗೆ ಮನ್ನಣೆ ನೀಡುವುದು ಕಡಿಮೆಯೇ. ಮನೆಯಲ್ಲೇ ಉಳಿದ ಮಕ್ಕಳ ಮನಸ್ಸು ದಿಕ್ಕು ತಪ್ಪಿದಂತಾಗಿ, ಅವರಲ್ಲಿ ತೀವ್ರತರ ಮಾನಸಿಕ ಅಸಮತೋಲನ ಉಂಟಾಗುತ್ತಿದೆ. ಇದರಿಂದ ಪೋಷಕರು ಮಕ್ಕಳಿಗೆ ಏನು ಹೇಳಿದರೂ ಅದು ತಪ್ಪೇ ಎಂಬಂತಾಗುತ್ತಿದೆ.

ಸುಮಾರು ಮಕ್ಕಳು ತಮ್ಮ ಪೋಷಕರ ವಿರುದ್ಧ ವಾಗ್ವಾದಕ್ಕೆ ಇಳಿಯುತ್ತಿರುವುದು, ಆತ್ಮಹತ್ಯೆ ಬೆದರಿಕೆಗಳನ್ನು ಒಡ್ಡುತ್ತಿರುವುದು, ತಮ್ಮ ವಯೋಮನಕ್ಕೆ ಮೀರಿದ ಭಾಷೆಯ ಬಳಕೆ, ಮಾನಸಿಕ ಸಂಘರ್ಷಗಳು, ಮಾನಸಿಕ ಕ್ಷೋಭೆ, ಇವುಗಳಿಂದಾಗಿ ಮಕ್ಕಳಲ್ಲಿರಬೇಕಾದ ನಿರೀಕ್ಷಿತ ಮೌಲ್ಯಗಳು ಕ್ಷೀಣಿಸುತ್ತಿವೆ. ಅತಿಯಾದ ಟಿ.ವಿ ಹಾಗೂ ಮೊಬೈಲ್ ಬಳಕೆಯಿಂದ ಮಕ್ಕಳ ಮಾನಸಿಕ ಸ್ವಾಸ್ಥ್ಯ ಹಾಳಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವುದು ಅತ್ಯಂತ ಕ್ಷಿಷ್ಟಕರವಾಗುತ್ತಿದೆ. ಇವಿಷ್ಟೇ ಅಲ್ಲದೆ ಪೌಷ್ಟಿಕಾಂಶಗಳ ಕೊರತೆ, ಕೌಟುಂಬಿಕ ದೌರ್ಜನ್ಯಗಳು, ಬಲವಂತದ ದುಡಿಮೆ, ಮುಂತಾದ ಸಮಸ್ಯೆಗಳು ಮಕ್ಕಳಲ್ಲಿ ತಲೆದೋರುತ್ತಿದೆ.

-ವಿ.ಕೆ.ಕುಮಾರಸ್ವಾಮಿ,
ಬರಹಗಾರ, ಶಿಕ್ಷಕರು,
ವಿರುಪಾಪುರ, ಸುಗ್ಗನಹಳ್ಳಿ ಅಂಚೆ,
ತಿಪ್ಪಸಂದ್ರ ಹೋಬಳಿ, ಮಾಗಡಿ ತಾಲ್ಲೂಕು,
ರಾಮನಗರ ಜಿಲ್ಲೆ – 561101
ಮೊ: 9113906120, 9740840678 (ವಾಟ್ಸಪ್)
ಇ ಮೇಲ್ : kumarvirupapura@gmail.com

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending