Connect with us

ದಿನದ ಸುದ್ದಿ

ಕೊರೋನಾ ತಂದಿದೆ ಆಪತ್ತು; ತಲ್ಲಣಗೊಂಡಿದೆ ಮಕ್ಕಳ ಜಗತ್ತು..!

Published

on

ಹೋಯ್ತಾ ಕೊರೋನಾ..? ಶಾಲೆಗೆ ಹೊರಡೋಣ..?

  • ವಿ.ಕೆ.ಕುಮಾರಸ್ವಾಮಿ, ಶಿಕ್ಷಕರು, ರಾಮನಗರ

ಮ್ಮಾ ನನ್ ಲಂಚ್ ಬಾಕ್ಸ್ ಎಲ್ಲಿ? ನನ್ ಡ್ರಾಯಿಂಗ್ ಬುಕ್ ಎಲ್ಲೋಯ್ತು? ಅಯ್ಯೋ ಲೇಟ್ ಆಯ್ತು, ವ್ಯಾನ್ ಬಂದೇಬಿಡ್ತು ಅಮ್ಮಾ, ಲೇ ಪುಟ್ಟಾ ನೆನ್ನೆ ಮಿಸ್ಸು ಕನ್ನಡ ಹೋಮ್‍ವರ್ಕ್ ಕೊಟ್ಟಿದ್ರಲ್ಲಾ ಅದನ್ನ ಕಂಪ್ಲೀಟ್ ಮಾಡಿದ್ಯೇನೋ? ಲೋ ಸಾಗರ್ ಬಿಡೋ ಇವತ್ತು ಫಸ್ಟ್ ಪೀರಿಯಡ್ ಪಿ.ಟಿ ಇದೆ, ಚೆನ್ನಾಗಿ ಆಟ ಆಡೋಣ ಆಮೇಲೆ ಮಿಕ್ಕಿದ್ದು ನೋಡ್ಕಳಣ! ಅಬ್ಬಾ! ಮಕ್ಕಳ ಲೋಕ ಅದೆಷ್ಟು ಚೆಂದ ಅಲ್ವಾ. ಹೀಗಿದ್ದ ಮಕ್ಕಳ ಆಟ ಪಾಠಗಳ ತುಂಟಾಟಕ್ಕೆ ಇಂದು ಕೊರೋನಾ ಹೆಮ್ಮಾರಿ ಬ್ರೇಕ್ ಹಾಕಿರುವುದು ವಿಷಾದನೀಯ.

ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧವಾಗಿದ್ದು, ಮಕ್ಕಳ ಮನದ ತುಂಬಾ ಮೋಡ ಕವಿದ ವಾತಾವರಣ ಆವರಿಸಿದ್ದು ಖಿನ್ನತೆ, ಮಾನಸಿಕ ಅಸಮತೋಲನ, ವರ್ತನೆಯಲ್ಲಿ ಬದಲಾವಣೆ, ಮೊಬೈಲ್ ಗೀಳು ಹೆಚ್ಚಾಗಿ ಅವರ ಬದುಕು ಬಿರುಗಾಳಿಗೆ ಸಿಕ್ಕ ನಾವೆಯಂತೆ ಉಯಿಲಾಡುತ್ತಿದೆ. ಈ ಬಗ್ಗೆ ಇಲ್ಲೊಂದು ಅವಲೋಕನ..

ಹಿರಿದಾಗುತ್ತಿದೆ ಶೈಕ್ಷಣಿಕ ಅಂತರ

ಪ್ರಸ್ತುತ ಸಂದರ್ಭದಲ್ಲಿ ಇಡೀ ಶೈಕ್ಷಣಿಕ ಚಟುವಟಿಕೆಗಳು ನಿಂತುಹೋಗಿದ್ದು, ಕಳೆದ ಮೂರು ತಿಂಗಳಿಂದ ಮಕ್ಕಳ ಕಲಿಕೆಯ ಅಂತರ ಹಿರಿದಾಗುತ್ತಿದೆ. ಈಗಾಗಲೇ ಕೊರೋನಾ ಎಂಬ ವಿಷ ಕ್ರಿಮಿ ತನ್ನ ಬಾಹುಗಳನ್ನು ವಿಸ್ತಾರವಾಗಿ ಚಾಚುತ್ತಿರುವುದರಿಂದ, ಮಕ್ಕಳ ಸುರಕ್ಷತೆಯೊಂದಿಗೆ ಶಾಲೆಗಳ ಆರಂಭ ಅಷ್ಟು ಸುಲಭದ ಮಾತಲ್ಲ. ಈ ಸಂಬಂಧ ಸರ್ಕಾರ ಅಥವಾ ಪೋಷಕರು ಮಕ್ಕಳ ಶ್ರೇಯೋಭಿವೃದ್ಧಿಗೆ ವಿವಿಧ ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಅದು ಮಕ್ಕಳ ಮೇಲೆ ನೇರ ಶಿಕ್ಷಣ ಪದ್ಧತಿಯಷ್ಟು ತೀವ್ರ ಪರಿಣಾಮ ಬೀರದಿರುವುದು ಆತಂಕದ ಸಂಗತಿಯಾಗಿದೆ.

ಬಹುತೇಕ ಇಂದಿನ ಮಕ್ಕಳಲ್ಲಿ ಕಾಡುತ್ತಿರುವ ತಾತ್ಕಾಲಿಕ ನೆನಪಿನ ಶಕ್ತಿಯ ಪರಿಣಾಮವಾಗಿ, ಮಕ್ಕಳನ್ನು ಈ ಮೊದಲಿನ ಸಹಜ ಸ್ಥಿತಿಗೆ ತರುವುದು ತೀರಾ ಪ್ರಾಯಾಸದ ಕೆಲಸವಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ದುಸ್ತರವಾಗುತ್ತಿದ್ದು, ಇದು ಶೈಕ್ಷಣಿಕ ಅಸಮತೋಲನಕ್ಕೆ ಕಾರಣವಾಗುತ್ತಿದೆ. ಕೊರೋನಾ ಹೋಯ್ತಾ? ಶಾಲೆಗೆ ಆರಂಭವಾಯ್ತಾ? ಎಂಬುದು ಇಂದು ಏನೂ ಅರಿಯದ ಮುಗ್ಧ ಮಕ್ಕಳನ್ನು ಕಾಡುತ್ತಿರುವ ಬಹುದೊಡ್ಡ ಪ್ರಶ್ನೆಯಾಗಿದೆ. ಹೀಗೆ ಕೊರೋನಾ ಮಧ್ಯದಲ್ಲಿ ಅಡಕತ್ತರಿಗೆ ಸಿಕ್ಕಂತಾಗಿರುವ ಮಕ್ಕಳ ಬದುಕು ನಿಜಕ್ಕೂ ತಲ್ಲಣಗೊಂಡಿದೆ.

ಸಾಮಾಜೀಕರಣಕ್ಕೆ ಬ್ರೇಕ್

ಮಕ್ಕಳನ್ನು ಸಾಮಾಜೀಕರಣಗೊಳಿಸುವ ಪ್ರಕ್ರಿಯೆಯಲ್ಲಿ ಕುಟುಂಬದಷ್ಟೇ, ಶಾಲೆ, ನೆರೆಹೊರೆ ಹಾಗೂ ಸಮಕಾಲೀನ ವಯೋಮಾನದವರ ಪಾತ್ರವೂ ಸಹ ಹಿರಿದಾಗಿದೆ. ಆದರೆ ಕೊರೋನಾ ವಿಷ ಪೀಡೆ ಮಕ್ಕಳನ್ನೇ ಹೆಚ್ಚು ಟಾರ್ಗೆಟ್ ಮಾಡುತ್ತಿರುವುದರಿಂದ, ಅವರು ಮನೆಯಿಂದ ಹೊರಗೆ ಬಾರದಂತಾಗಿ ಖಿನ್ನತೆ ಹೆಚ್ಚಾಗುತ್ತಿದೆ.

ಇದರಿಂದ ಅವರಲ್ಲಿ ವಯೋ ಸಹಜ ಮಾನಸಿಕ ಬೆಳವಣಿಗೆ ಕ್ಷೀಣಿಸುತ್ತಿದ್ದು, ವರ್ತನೆಯಲ್ಲಿ ವಿಭಿನ್ನ ಬದಲಾವಣೆಗಳು ಕಂಡು ಬರುತ್ತಿದೆ. ನಿತ್ಯವೂ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದ ಮಕ್ಕಳ ಲೋಕ ಇಂದು ಮಂಕಾಗುತ್ತಿದೆ. ಹೀಗಾಗಿ ಸಾಮಾಜೀಕರಣ ಪ್ರಕ್ರಿಯೆ ತಡವಾಗುವುದರ ಜೊತೆಗೆ, ಅವರ ಭವಿಷ್ಯವೂ ಸಹ ಡೋಲಾಯಮಾನವಾಗುತ್ತಿದೆ.

ಮೊಬೈಲ್ ಬಳಕೆಯಿಂದ ಆಪತ್ತು

ಮನೆಯಲ್ಲೇ ಉಳಿದುಕೊಂಡಿರುವ ಕೋಟ್ಯಂತರ ಮಕ್ಕಳು ಇಂದು ಕಾಲ ಕಳೆಯಲೆಂದೋ ಅಥವಾ ಆನ್‍ಲೈನ್ ತರಗತಿಗಳಿಗೆಂದೋ ಮೊಬೈಲ್ ಮೊರೆ ಹೋಗಿದ್ದಾರೆ. ಆದರೆ ಭಾರತದಲ್ಲಿನ ಬಹುಪಾಲು ಪೋಷಕರ ಅನಕ್ಷರತೆ ಸಮಸ್ಯೆಯಿಂದಾಗಿ ತಮ್ಮ ಮಕ್ಕಳು ಮೊಬೈಲ್‍ನ್ನು ಸರಿಯಾದ ಉದ್ದೇಶಕ್ಕೆ ಬಳಸುತ್ತಿದ್ದಾರೆಯೇ ಎಂಬುದನ್ನು ತಿಳಿಯುವುದರಲ್ಲಿ ವಿಫಲತೆ ಎದುರಾಗಿದೆ.

ಇದರಿಂದ ಮಕ್ಕಳ ಮೇಲಿನ ಹಿಡಿತ ತಪ್ಪಿ, ಅವರ ಮನಸ್ಸು ವ್ಯಗ್ರವಾಗಿ ವಿವಿಧ ಸೈಬರ್ ಕ್ರೈಮ್‍ಗಳತ್ತ ಮುಖ ಮಾಡುತ್ತಿದ್ದಾರೆ. ಅಲ್ಲದೇ ಪ್ರತಿದಿನ ಗೇಮ್ ಆಡಲು, ಚಾಟ್ ಮಾಡಲು ಇನ್ನಿತರ ಉದ್ದೇಶಗಳಿಗಾಗಿ ದೀರ್ಘಾವಧಿಯವರೆಗೆ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ಇದು ತೊಡಕಾಗುತ್ತಿದೆ. ಸಣ್ಣ ವಯಸ್ಸಿನಲ್ಲೇ ಮಕ್ಕಳ ಮೇಲೆ ಆಘಾತಕಾರಿ ಪರಿಣಾಮಗಳು ಸೃಷ್ಟಿಯಾಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಹೆಚ್ಚಿದೆ.

ಮೌಲ್ಯಗಳ ಕುಸಿತ

ಹಿತ್ತಲ ಗಿಡ ಮದ್ದಲ್ಲ ಎಂಬಂತೆ ಬಹುತೇಕ ಇಂದಿನ ಡಿಜಿಟಲ್ ಯುಗದ ಮಕ್ಕಳು ಪೋಷಕರ ಮಾತಿಗೆ ಮನ್ನಣೆ ನೀಡುವುದು ಕಡಿಮೆಯೇ. ಮನೆಯಲ್ಲೇ ಉಳಿದ ಮಕ್ಕಳ ಮನಸ್ಸು ದಿಕ್ಕು ತಪ್ಪಿದಂತಾಗಿ, ಅವರಲ್ಲಿ ತೀವ್ರತರ ಮಾನಸಿಕ ಅಸಮತೋಲನ ಉಂಟಾಗುತ್ತಿದೆ. ಇದರಿಂದ ಪೋಷಕರು ಮಕ್ಕಳಿಗೆ ಏನು ಹೇಳಿದರೂ ಅದು ತಪ್ಪೇ ಎಂಬಂತಾಗುತ್ತಿದೆ.

ಸುಮಾರು ಮಕ್ಕಳು ತಮ್ಮ ಪೋಷಕರ ವಿರುದ್ಧ ವಾಗ್ವಾದಕ್ಕೆ ಇಳಿಯುತ್ತಿರುವುದು, ಆತ್ಮಹತ್ಯೆ ಬೆದರಿಕೆಗಳನ್ನು ಒಡ್ಡುತ್ತಿರುವುದು, ತಮ್ಮ ವಯೋಮನಕ್ಕೆ ಮೀರಿದ ಭಾಷೆಯ ಬಳಕೆ, ಮಾನಸಿಕ ಸಂಘರ್ಷಗಳು, ಮಾನಸಿಕ ಕ್ಷೋಭೆ, ಇವುಗಳಿಂದಾಗಿ ಮಕ್ಕಳಲ್ಲಿರಬೇಕಾದ ನಿರೀಕ್ಷಿತ ಮೌಲ್ಯಗಳು ಕ್ಷೀಣಿಸುತ್ತಿವೆ. ಅತಿಯಾದ ಟಿ.ವಿ ಹಾಗೂ ಮೊಬೈಲ್ ಬಳಕೆಯಿಂದ ಮಕ್ಕಳ ಮಾನಸಿಕ ಸ್ವಾಸ್ಥ್ಯ ಹಾಳಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವುದು ಅತ್ಯಂತ ಕ್ಷಿಷ್ಟಕರವಾಗುತ್ತಿದೆ. ಇವಿಷ್ಟೇ ಅಲ್ಲದೆ ಪೌಷ್ಟಿಕಾಂಶಗಳ ಕೊರತೆ, ಕೌಟುಂಬಿಕ ದೌರ್ಜನ್ಯಗಳು, ಬಲವಂತದ ದುಡಿಮೆ, ಮುಂತಾದ ಸಮಸ್ಯೆಗಳು ಮಕ್ಕಳಲ್ಲಿ ತಲೆದೋರುತ್ತಿದೆ.

-ವಿ.ಕೆ.ಕುಮಾರಸ್ವಾಮಿ,
ಬರಹಗಾರ, ಶಿಕ್ಷಕರು,
ವಿರುಪಾಪುರ, ಸುಗ್ಗನಹಳ್ಳಿ ಅಂಚೆ,
ತಿಪ್ಪಸಂದ್ರ ಹೋಬಳಿ, ಮಾಗಡಿ ತಾಲ್ಲೂಕು,
ರಾಮನಗರ ಜಿಲ್ಲೆ – 561101
ಮೊ: 9113906120, 9740840678 (ವಾಟ್ಸಪ್)
ಇ ಮೇಲ್ : kumarvirupapura@gmail.com

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ

ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್‌ ಶೇ. 97 ದ್ವಿತೀಯ ಹಾಗೂ ಸಮರ್ಥ್‌ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.

ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.

ಯಶಸ್ಸಿನ ಹಿಂದಿನ ಶಕ್ತಿ:

ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್‌, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ

Published

on

ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.

ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.

ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

Published

on

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending