ದಿನದ ಸುದ್ದಿ
ಕೊರೋನಾ – ಕೈಚೆಲ್ಲಿ ಕೂರುವುದು ಹೊಣೆಗೇಡಿತನವಾದೀತು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/04/corona_virus_suddidina-432.jpg&description=ಕೊರೋನಾ – ಕೈಚೆಲ್ಲಿ ಕೂರುವುದು ಹೊಣೆಗೇಡಿತನವಾದೀತು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/04/corona_virus_suddidina-432.jpg&description=ಕೊರೋನಾ – ಕೈಚೆಲ್ಲಿ ಕೂರುವುದು ಹೊಣೆಗೇಡಿತನವಾದೀತು', 'pinterestShare', 'width=750,height=350'); return false;" title="Pin This Post">
- ನಾ ದಿವಾಕರ
ಕರ್ನಾಟಕದಲ್ಲಿ ಮತ್ತು ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ಮೇ 1 ರಂದು ಎರಡನೆ ಹಂತದ ಲಾಕ್ ಡೌನ್ ಅಂತ್ಯವಾದಾಗ ವಿಶ್ವದಲ್ಲಿ ಎರಡನೆ ಸ್ಥಾನದಲ್ಲಿದ್ದ ಭಾರತ ಈಗ ಅಮೆರಿಕ ನಂತರ ಎರಡನೆ ಸ್ಥಾನದಲ್ಲಿದೆ. ಕರ್ನಾಟಕದಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ನಾಲ್ಕು ಲಕ್ಷ ದಾಟಿದ್ದು ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಅಂಕಿಅಂಶಗಳನ್ನು ನೀಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಏನೇ ಕಸರತ್ತು ಮಾಡಿದರೂ ರಾಜ್ಯದಲ್ಲಿ ಕೊರೋನಾ ವ್ಯಾಪಿಸುತ್ತಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ, ಸಾವಿನ ಪ್ರಮಾಣ ಶೇಕಡಾವಾರು ಕಡಿಮೆ ಇದೆ ಎಂದ ಮಾತ್ರಕ್ಕೆ ಹೆಚ್ಚುತ್ತಿರುವ ಸೋಂಕು ನಗಣ್ಯ ಎಂದು ಭಾವಿಸಲಾಗುವುದಿಲ್ಲ. ಸೋಂಕನ್ನು ತಡೆಗಟ್ಟುವುದು ಹೇಗೆ ಎಂದು ಯೋಚಿಸುವುದಲ್ಲದೆ, ರಾಜ್ಯದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಯ ಪರಿಸ್ಥಿತಿ ಹೇಗಿದೆ ಎಂದು ಅವಲೋಕನ ಮಾಡುವುದು ಇಂದಿನ ತುರ್ತು.
ಕೇಂದ್ರ ನೀತಿ ಆಯೋಗ ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿಯೊಂದರಲ್ಲಿ ಇದೇ ಎಚ್ಚರಿಕೆಯನ್ನು ನೀಡಿದೆ. ಕೊರೋನಾ ವೈರಾಣು ದೊಡ್ಡ ನಗರಗಳಿಗಿಂತಲೂ ಸಣ್ಣ ಪುಟ್ಟ ನಗರಗಳು, ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶೀಘ್ರವಾಗಿ ಹರಡುತ್ತಿದೆ, ದೇಶದ ಹೆಚ್ಚಿನ ಭಾಗ ಸೋಂಕಿಗೆ ಒಳಗಾಗುವ ಸಾಧ್ಯತೆಗಳಿವೆ ಎಂದು ನೀತಿ ಆಯೋಗದ ಆರೋಗ್ಯ ವಿಭಾಗ ಅಧಿಕಾರಿ ವಿ ಕೆ ಪಾಲ್ ಎಚ್ಚರಿಸಿದ್ದಾರೆ. ಕೊರೋನಾ ಸೋಂಕಿನ ಪರೀಕ್ಷೆಗಳ ಪ್ರಮಾಣ ಹೆಚ್ಚಿಸಬೇಕು ಎಂದು ನೀತಿ ಆಯೋಗವೂ ಸಲಹೆ ನೀಡಿದೆ.
ಶೇಕಡಾವಾರು ಸಾವಿನ ಪ್ರಮಾಣ ಕಡಿಮೆ ಇದೆ ಎಂದ ಮಾತ್ರಕ್ಕೆ ಸಾವಿನ ಸಂಖ್ಯೆಯನ್ನು ಕಡೆಗಣಿಸಲಾಗುವುದಿಲ್ಲ. ವೆಂಟಿಲೇಟರ್ ಇಲ್ಲದೆ, ಆಸ್ಪತ್ರೆಯಲ್ಲಿ ಸ್ಥಳಾವಕಾಶವಿಲ್ಲದೆ, ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೆ ಸೋಂಕಿತರು ಮೃತಪಟ್ಟರೆ ಅದು ಪ್ರಭುತ್ವ ಮಾಡುವ ಕೊಲೆ ಎಂದೇ ಭಾವಿಸಬೇಕಾಗುತ್ತದೆ. ಏಕೆಂದರೆ ಪ್ರತಿಯೊಂದು ಜೀವವೂ ಅಮೂಲ್ಯ. ಮತ್ತೊಂದೆಡೆ ದಾಖಲೆಗಳ ಸಂಗ್ರಹದಲ್ಲಿರುವ ವ್ಯತ್ಯಯಗಳ ಪರಿಣಾಮ ಈ ಅಂಕಿ ಅಂಶಗಳೂ ಸಹ ಪರಿಪೂರ್ಣವಲ್ಲ ಎನ್ನುವುದು ಸಾರ್ವತ್ರಿಕ ಸತ್ಯ.
ಈ ಸಂದರ್ಭದಲ್ಲೇ ಕರ್ನಾಟಕದಲ್ಲಿ ಕೋವಿದ್ 19 ನಿಂದ ಸತ್ತವರ ಸಂಖ್ಯೆ 6937. ಒಟ್ಟು ಸೋಂಕಿತರ ಸಂಖ್ಯೆ 4.30 ಲಕ್ಷ. ಸೆಪ್ಟಂಬರ್ ತಿಂಗಳ 10 ದಿನಗಳಲ್ಲಿ 1235 ಮಂದಿ ಮೃತಪಟ್ಟಿದ್ದಾರೆ ಅಂದರೆ ಪ್ರತಿದಿನ ಕನಿಷ್ಟ ಸರಾಸರಿ 123 ಹೆಚ್ಚು ಮಂದಿ ಸಾಯುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಕೋವಿದ್ ಪರೀಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಲಾಗಿದ್ದು ಸೋಂಕಿತರ ಸಂಖ್ಯೆಯೂ ಕಡಿಮೆ ಎನಿಸುತ್ತಿದೆ. ಆರು ತಿಂಗಳ ಅವಧಿಯಲ್ಲಿ ಕರ್ನಾಟಕದಲ್ಲಿ 34.61 ಲಕ್ಷ ಜನರು ಪರೀಕ್ಷೆಗೊಳಪಟ್ಟಿದ್ದಾರೆ.
ರಾಜ್ಯದ ಜನಸಂಖ್ಯೆಗೆ ಹೋಲಿಸಿದರೆ ಇದು ನಗಣ್ಯ ಎನ್ನಬಹುದು. 3.22 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಚೇತರಿಕೆಯ ಪ್ರಮಾಣ ಹೆಚ್ಚಾಗಿದೆ ಎಂದರೆ ಕೊರೋನಾ ನಿಯಂತ್ರಣದಲ್ಲಿದೆ ಎಂದರ್ಥವಲ್ಲ. ಸೋಂಕಿತರ ಪ್ರಮಾಣ ಏರುತ್ತಿರುವುದು ಸರ್ಕಾರವನ್ನು ಎಚ್ಚರಿಸಬೇಕಿದೆ. ಈ ಮುನ್ನ ಸೋಂಕಿತ ವ್ಯಕ್ತಿಗಳ ಮನೆಗಳನ್ನು, ಅಥವಾ ಮನೆ ಇರುವ ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗುತ್ತಿತ್ತು. ಇದರ ಪೂರ್ಣ ವಿವರಗಳನ್ನು ಮಾಧ್ಯಮಗಳಿಗೆ ನೀಡಲಾಗುತ್ತಿತ್ತು.
ಈಗ ಸೋಂಕಿತ ವ್ಯಕ್ತಿಯ ಮನೆಗಳನ್ನು ಮಾತ್ರವೇ ಸೀಲ್ ಡೌನ್ ಮಾಡಲಾಗುತ್ತಿದೆ. ಒಂದು ಊರಿನ ಯಾವ ರಸ್ತೆ ಅಥವಾ ಯಾವ ಬಡಾವಣೆಯಲ್ಲಿ ಸೋಂಕಿತರಿದ್ದಾರೆ ಎನ್ನುವ ಮಾಹಿತಿಯನ್ನು ಎಲ್ಲಿಯೂ ನೀಡಲಾಗುತ್ತಿಲ್ಲ. ಹಾಗಾಗಿ ಸೋಂಕಿತರು ಇರುವ ರಸ್ತೆಗಳಲ್ಲಿ, ಸೋಂಕಿನ ಅರಿವು ಇಲ್ಲದೆ ಓಡಾಡುವವರೂ ಸಹ ಯಾವುದೋ ಒಂದು ರೀತಿಯಲ್ಲಿ ಸೋಂಕಿಗೆ ಒಳಗಾಗುವ ಸಾಧ್ಯತೆಗಳಿರುತ್ತವೆ ಅಲ್ಲವೇ ? ಈಗ ಸರ್ಕಾರದ ಗಮನ ಮಾರುಕಟ್ಟೆ ಮತ್ತು ಆರ್ಥಿಕತೆಯತ್ತ ಹೊರಳಿದೆ. ಚಿತ್ರಮಂದಿರಗಳು ಮತ್ತು ಶಾಲೆಗಳನ್ನು ತೆರೆದುಬಿಟ್ಟರೆ ಸಂಪೂರ್ಣ ಸಹಜ ಸ್ಥಿತಿಗೆ ಬಂದಂತಾಗುತ್ತದೆ. ಆರ್ಥಿಕ ಬೆಳವಣಿಗೆ ಮತ್ತು ಸುಸ್ಥಿರತೆಯ ದೃಷ್ಟಿಯಿಂದ ಇದು ಅನಿವಾರ್ಯ ಇರಬಹುದು. ಆದರೆ ಇದರೊಟ್ಟಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದೂ ಮುಖ್ಯ ಅಲ್ಲವೇ ?
ಕೊರೋನಾ ಸದ್ದೇ ಮಾಡದಿದ್ದ ಸಂದರ್ಭದಲ್ಲಿ ಸೂರ ಕುಸಿಯುವಂತೆ ಅರಚಾಡುತ್ತಿದ್ದ ಸುದ್ದಿಮನೆಯ ಕೂಗುಮಾರಿಗಳಿಗೆ ಈಗ, ಕೊರೋನಾ ಮನೆಮನೆಗೂ ಹಬ್ಬುತ್ತಿರುವಾಗ ಕಂಗನಾ, ರಿಯಾ, ಕವಿತಾ, ಸಂಜನಾ, ಸುಶಾಂತ್ ಟಿ ಆರ್ ಪಿ ಸಾಧನಗಳಾಗಿಬಿಟ್ಟಿದ್ದಾರೆ. ಸುದ್ದಿಮನೆಗಳು ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗಿ ಹಾಳಾಗಿ ಹೋಗಿವೆ. ಸುದ್ದಿಮನೆಯ ಕೂಗುಮಾರಿಗಳಿಗೆ ತಬ್ಲೀಗಿಗಳು ಒಂದು ಘಟ್ಟದಲ್ಲಿ ಲಾಭದಾಯಕವಾಗಿ ಕಾಣುತ್ತಿದ್ದರು.
ಕೊರೋನಾ ರಣಕೇಕೆ ಹಾಕುತ್ತಾ ಹಣ ತರುತ್ತಿತ್ತು. ಈಗ ಡ್ರಗ್ಗಿಣಿ, ಢಾಕಿಣಿ ಬಲೆಗೆ ಸಿಲುಕಿದ್ದಾರೆ. ಅಂದೂ ಸುದ್ದಿ ನೀಡಿರಲಿಲ್ಲ ಇಂದೂ ನೀಡುತ್ತಿಲ್ಲ. ಈಗ ಡ್ರಗ್ ಪೀಡಿತರಾಗಿರುವುದರಿಂದ ಹೆಚ್ಚಿನದೇನೂ ನಿರೀಕ್ಷಿಸಲೂ ಆಗುವುದಿಲ್ಲ. ಮುದ್ರಣ ಮಾಧ್ಯಮಗಳಲ್ಲಿ ಕೊರೋನಾ ಈಗ ಚಿನ್ನ-ಬೆಳ್ಳಿ, ಈರುಳ್ಳಿ-ಬೆಳ್ಳುಳ್ಳಿ, ಮಾಂಸ-ಮೊಟ್ಟೆಯ ಹಾಗೆ ಪೇಟೆ ಧಾರಣೆಯ ಅಂಕಿಅಂಶಗಳಾಗಿ ಕಾಣುತ್ತಿದ್ದು ಎಲ್ಲೋ ಮೂಲೆಯಲ್ಲಿ ಜಾಗ ಪಡೆಯುತ್ತಿವೆ.
ಕೊರೋನಾದೊಂದಿಗೆ ಬದುಕುವುದನ್ನು ಜನರು ಕಲಿತಿದ್ದಾರೆ. ಸತ್ತವರಿಗೆ ಏನು ಹೇಳುವುದು ? ಆರ್ಥಿಕವಾಗಿ ಜರ್ಝರಿತವಾಗಿರುವ ಅನೇಕ ಕುಟುಂಬಗಳು ತಮ್ಮ ಆಧಾರ ಕಳೆದುಕೊಳ್ಳುತ್ತಿವೆ. ಒಂದು ಲಕ್ಷಕ್ಕೂ ಹೆಚ್ಚು ಅಂಗಡಿ ಮುಗ್ಗಟ್ಟುಗಳು ಮುಚ್ಚಲ್ಪಟ್ಟಿವೆ. ಹಲವಾರು ಸ್ಟೇಷನರಿ ಅಂಗಡಿಗಳು ಮುಚ್ಚಲ್ಪಟ್ಟಿವೆ, ದಿನಸಿ ಅಂಗಡಿಗಳು ಮುಚ್ಚಲ್ಪಟ್ಟಿವೆ. ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡು ನಾಳಿನ ಚಿಂತೆಯಲ್ಲಿದ್ದಾರೆ.
ಈ ನಡುವೆಯೇ ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳನ್ನೂ ಅನ್ ಲಾಕ್ ಮಾಡುವ ಮೂಲಕ ಆರ್ಥಿಕ ಚಟುವಟಿಕೆಗೆ ಅವಕಾಶ ನೀಡಿದೆ. ಸೆಪ್ಟಂಬರ್ 21 ರಿಂದ ಸಭೆ ಸಮಾರಂಭಗಳಲ್ಲಿ 100 ಜನರಿಗೆ ಅವಕಾಶ ನೀಡಲಾಗುತ್ತಿದೆ. 9 ರಿಂದ 12ನೆಯ ತರಗತಿಯವರೆಗೆ ಶಾಲೆಗಳನ್ನು ತೆರೆಯಲಾಗುತ್ತಿದೆ. ಬಾರ್ ರೆಸ್ಟೋರೆಂಟ್ ಪಬ್ ಈಗಾಗಲೇ ತೆರೆದಿವೆ. ಅಕ್ಟೋಬರ್ 1ರಿಂದ ಚಿತ್ರಮಂದಿರಗಳನ್ನೂ ತೆರೆಯಲಾಗುತ್ತದೆ. ಇದು ಅನಿವಾರ್ಯ ಎಂದಾದರೆ ಇರಲಿ, ಕೊರೋನಾ ಸೋಂಕಿತರ ಸೌಖ್ಯವೂ ಅನಿವಾರ್ಯವೇ ಅಲ್ಲವೇ ?
ನೀತಿ ಆಯೋಗದ ಒಂದು ಎಚ್ಚರಿಕೆಯ ಮಾತನ್ನು ಜನರೂ ಅರ್ಥಮಾಡಿಕೊಳ್ಳಬೇಕು, ಸರ್ಕಾರವೂ ಯೋಚಿಸಬೇಕು. ಜನರ ನಿರ್ಲಕ್ಷ್ಯವೇ ಸೋಂಕು ಹೆಚ್ಚುವುದಕ್ಕೆ ಕಾರಣ ಎಂದು ನೀತಿ ಆಯೋಗ ಹೇಳಿರುವುದು ವಾಸ್ತವ ಸಂಗತಿ. ಯಾವುದೇ ಸಭೆ ಸಮಾರಂಭಗಳಲ್ಲೂ ಸರ್ಕಾರ ರೂಪಿಸಿರುವ ನಿರ್ದಿಷ್ಟ ಮಾನದಂಡಗಳನ್ನು ಪಾಲಿಸಲಾಗುತ್ತಿಲ್ಲ.
ಸಚಿವರು, ಸರ್ಕಾರಿ ಅಧಿಕಾರಿಗಳೇ ಈ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಬಿಟ್ಟರೆ ಮತ್ತಾವ ನಿಯಮಗಳೂ ಪಾಲನೆಯಾಗುತ್ತಿಲ್ಲ. ಆರು ಅಡಿ ದೈಹಿಕ ಅಂತರ ಕಾಪಾಡಿಕೊಳ್ಳುವ ನಿಯಮ ಶತಮಾನದ ಜೋಕ್ ಆಗಿ ಕಾಣುತ್ತಿದೆ. ಜನಸಾಮಾನ್ಯರ ನಿತ್ಯ ಜೀವನದಲ್ಲಿ, ಜನನಿಬಿಡ ಮಾರುಕಟ್ಟೆಗಳಲ್ಲಿ ಇದನ್ನು ಅನುಸರಿಸುವುದೂ ಕಷ್ಟ ಎನ್ನುವುದು ವಾಸ್ತವ.
ಆದರೆ ಸರ್ಕಾರದ ವತಿಯಿಂದ ಯಾವ ರೀತಿಯ ಮೇಲ್ವಿಚಾರಣೆ ನಡೆಸಲಾಗುತ್ತಿದೆ ? ಎಷ್ಟು ಸಭೆ ಸಮಾರಂಭಗಳಲ್ಲಿ, ಮದುವೆ ಮುಂತಾದ ಸಮಾರಂಭಗಳಲ್ಲಿ ನಿಯಮ ಪಾಲನೆಯ ಬಗ್ಗೆ ಪರಿವೀಕ್ಷಣೆ ಮಾಡಲಾಗುತ್ತಿದೆ ? ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದೂ ಸಹ ವಿರಳ ಎನಿಸುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿ ಹೇಗಿದೆ, ಆರೋಗ್ಯ ಸೌಲಭ್ಯಗಳು ಹೇಗಿವೆ, ಶುಚಿತ್ವ ಕಾಪಾಡಲಾಗಿದೆಯೇ, ಆಸ್ಪತ್ರೆಗಳಲ್ಲಿ ಎಲ್ಲವೂ ಸುಸೂತ್ರವಾಗಿ ಇದೆಯೇ ಇವೇ ಮುಂತಾದ ವಿಚಾರಗಳ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸಬೇಕಿದೆ. ಇಂತಹ ವಿಷಮ ಸನ್ನಿವೇಶದಲ್ಲಿ ಸೂಕ್ಷ್ಮ ಸಂವೇದನೆ ಇರುವವರು ಆರೋಗ್ಯ ಇಲಾಖೆಯ ಉಸ್ತುವಾರಿ ವಹಿಸಿದ್ದರೆ ಬಹುಶಃ ಪರಿಸ್ಥಿತಿ ಭಿನ್ನವಾಗಿರುತ್ತಿತ್ತು ಎನಿಸುತ್ತದೆ.
ಸರ್ಕಾರ ಮತ್ತು ಆಡಳಿತ ವ್ಯವಸ್ಥೆ ಅಕ್ಷರಶಃ ಹರಾಜು ಮಾರುಕಟ್ಟೆಯಾಗಿ ಪರಿವರ್ತನೆಯಾಗಿದೆ. ವಿಮಾನದಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಎಲ್ಲವನ್ನೂ ಹರಾಜು ಮಾಡಲು ಮಾರುಕಟ್ಟೆ ಕೂಗುಮಾರಿಗಳು ಸಜ್ಜಾಗುತ್ತಿದ್ದಾರೆ. ಇವರನ್ನು ನಾವೇ ಆಯ್ಕೆ ಮಾಡಿರುವುದು ನಮ್ಮ ದುರದೃಷ್ಟ. ಕೊರೋನಾ ಇರಲಿ ಇಲ್ಲದಿರಲಿ ಜನಸಾಮಾನ್ಯರು ಹೇಗೋ ಒಂದು ಬದುಕುತ್ತಾರೆ ಆದರೆ ತಮಗೆ ಅರಿವಿಲ್ಲದೆಯೇ ಸಾಯುವುದೂ ಸತ್ಯ.
ಬದುಕು ಮತ್ತು ಸಾವು ಜನರ ಕೈಯ್ಯಲ್ಲೇ ಇದೆ ಆದರೆ ಬದುಕುವ ಪರಿಸರ ನಿರ್ಮಿಸಿ ಸಾಯುವುದನ್ನು ತಡೆಗಟ್ಟುವ ಹೊಣೆ ಚುನಾಯಿತ ಸರ್ಕಾರದ ಮೇಲಿರುತ್ತದೆ ಅಲ್ಲವೇ ? ಕೊರೋನಾ ಈ ಪರಿಸರವನ್ನು ಅಪಾಯಕ್ಕೆ ಸಿಲುಕಿಸುತ್ತಿದೆ. ವೈರಾಣು ನಿಯಂತ್ರಣಕ್ಕೆ ಬರುವುದಿಲ್ಲ, ಲಾಕ್ ಡೌನ್ ಉಪಯುಕ್ತವಲ್ಲ, ಗಂಟೆ, ಜಾಗಟೆ, ಶಂಖನಾದ, ಚಪ್ಪಾಳೆ, ಗೋ ಕೊರೋನಾ ಇವೆಲ್ಲವೂ ತಮಾಷೆಯ ಸರಕುಗಳಾಗಿವೆ.
ಹಾಗಾದರೆ ಏನು ಮಾಡಬೇಕು ? ಆರೋಗ್ಯ ಸೇವೆಯನ್ನು ವಿಸ್ತರಿಸಬೇಕು, ಎಲ್ಲರಿಗೂ ಸಮನಾಗಿ ದೊರೆಯುವಂತೆ ಮಾಡಬೇಕು, ಚಿಕಿತ್ಸೆ ಗಗನಕುಸುಮವಾದರೆ ಸೋಂಕಿತರು ಸಾಯುವ ಸಿದ್ಧತೆಯೊಂದಿಗೇ ಆಸ್ಪತ್ರೆಗೆ ಬರಬೇಕಾಗುತ್ತದೆ. ಎಷ್ಟು ಕುಟುಂಬಗಳು ಈ ಸಂದರ್ಭದಲ್ಲಿ ಅನಾಥವಾಗಿವೆ ಎಂದು ಸರ್ಕಾರ ಯೋಚಿಸಬೇಕು. ವೈದ್ಯರ ಕೊರತೆ ಇದೆ ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಖಾಸಗಿ ವೈದ್ಯರನ್ನು, ಆಸ್ಪತ್ರೆಗಳನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಪುನಃ ಮಾರುಕಟ್ಟೆ ಲೆಕ್ಕಾಚಾರ ಅಡ್ಡಿಯಾಗುತ್ತದೆ. ಸುದ್ದಿಮನೆಯ ಕೂಗುಮಾರಿ ನಿರೂಪಕರಿಗೆ ಟಿ ಆರ್ ಪಿ ಚಿಂತೆಯಾದರೆ, ಚುನಾಯಿತ ಮಾರುಕಟ್ಟೆ ಕೂಗುಮಾರಿಗಳಿಗೆ ಮುಂದಿನ ಚುನಾವಣೆ ಮತ್ತು ನಿಧಿಯ ಚಿಂತೆ. ಇಷ್ಟರ ನಡುವೆ ಬಡಪಾಯಿ ಪ್ರಜೆ ಬದುಕಲು ಕಲಿಯುತ್ತಿದ್ದಾನೆ, ಸಾಯುತ್ತಿರುವವರನ್ನು ನೋಡುತ್ತಲೇ ತನ್ನ ಚಿತೆಯ ಚಿಂತೆಯಲ್ಲೇ ಕಾಲ ಕಳೆಯುತ್ತಿರುತ್ತಾನೆ. ಇಷ್ಟನ್ನು ಅರ್ಥಮಾಡಿಕೊಳ್ಳುವ ಸಂವೇದನೆ, ಪರಿಜ್ಞಾನ ಸರ್ಕಾರಕ್ಕೆ ಇರಬೇಕು. “ಹಣೆಬರಹವಿದ್ದಂತೆ ಆಗುತ್ತದೆ ” ಎನ್ನುವ ಪ್ರಾಚೀನ ಬೌದ್ಧಿಕ ದಾರಿದ್ರ್ಯವನ್ನೇ ಪ್ರದರ್ಶಿಸುತ್ತಾ ಕೈಚೆಲ್ಲಿ ಕುಳಿತುಕೊಳ್ಳುವುದು ಹೊಣೆಗೇಡಿತನವಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.
ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.
ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.
ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.
ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.
ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ…
ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.
ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?
ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.
ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.
ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ನಿಮ್ಮದು ದರೋಡೆಕೋರ ಸರಕಾರವಲ್ಲವೇ?
ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..
ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ5 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ಅಂಕಣ3 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ5 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ4 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ5 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

