ದಿನದ ಸುದ್ದಿ
ಕೊರೋನಾ – ಕೈಚೆಲ್ಲಿ ಕೂರುವುದು ಹೊಣೆಗೇಡಿತನವಾದೀತು
- ನಾ ದಿವಾಕರ
ಕರ್ನಾಟಕದಲ್ಲಿ ಮತ್ತು ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ಮೇ 1 ರಂದು ಎರಡನೆ ಹಂತದ ಲಾಕ್ ಡೌನ್ ಅಂತ್ಯವಾದಾಗ ವಿಶ್ವದಲ್ಲಿ ಎರಡನೆ ಸ್ಥಾನದಲ್ಲಿದ್ದ ಭಾರತ ಈಗ ಅಮೆರಿಕ ನಂತರ ಎರಡನೆ ಸ್ಥಾನದಲ್ಲಿದೆ. ಕರ್ನಾಟಕದಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ನಾಲ್ಕು ಲಕ್ಷ ದಾಟಿದ್ದು ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಅಂಕಿಅಂಶಗಳನ್ನು ನೀಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಏನೇ ಕಸರತ್ತು ಮಾಡಿದರೂ ರಾಜ್ಯದಲ್ಲಿ ಕೊರೋನಾ ವ್ಯಾಪಿಸುತ್ತಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ, ಸಾವಿನ ಪ್ರಮಾಣ ಶೇಕಡಾವಾರು ಕಡಿಮೆ ಇದೆ ಎಂದ ಮಾತ್ರಕ್ಕೆ ಹೆಚ್ಚುತ್ತಿರುವ ಸೋಂಕು ನಗಣ್ಯ ಎಂದು ಭಾವಿಸಲಾಗುವುದಿಲ್ಲ. ಸೋಂಕನ್ನು ತಡೆಗಟ್ಟುವುದು ಹೇಗೆ ಎಂದು ಯೋಚಿಸುವುದಲ್ಲದೆ, ರಾಜ್ಯದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಯ ಪರಿಸ್ಥಿತಿ ಹೇಗಿದೆ ಎಂದು ಅವಲೋಕನ ಮಾಡುವುದು ಇಂದಿನ ತುರ್ತು.
ಕೇಂದ್ರ ನೀತಿ ಆಯೋಗ ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿಯೊಂದರಲ್ಲಿ ಇದೇ ಎಚ್ಚರಿಕೆಯನ್ನು ನೀಡಿದೆ. ಕೊರೋನಾ ವೈರಾಣು ದೊಡ್ಡ ನಗರಗಳಿಗಿಂತಲೂ ಸಣ್ಣ ಪುಟ್ಟ ನಗರಗಳು, ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶೀಘ್ರವಾಗಿ ಹರಡುತ್ತಿದೆ, ದೇಶದ ಹೆಚ್ಚಿನ ಭಾಗ ಸೋಂಕಿಗೆ ಒಳಗಾಗುವ ಸಾಧ್ಯತೆಗಳಿವೆ ಎಂದು ನೀತಿ ಆಯೋಗದ ಆರೋಗ್ಯ ವಿಭಾಗ ಅಧಿಕಾರಿ ವಿ ಕೆ ಪಾಲ್ ಎಚ್ಚರಿಸಿದ್ದಾರೆ. ಕೊರೋನಾ ಸೋಂಕಿನ ಪರೀಕ್ಷೆಗಳ ಪ್ರಮಾಣ ಹೆಚ್ಚಿಸಬೇಕು ಎಂದು ನೀತಿ ಆಯೋಗವೂ ಸಲಹೆ ನೀಡಿದೆ.
ಶೇಕಡಾವಾರು ಸಾವಿನ ಪ್ರಮಾಣ ಕಡಿಮೆ ಇದೆ ಎಂದ ಮಾತ್ರಕ್ಕೆ ಸಾವಿನ ಸಂಖ್ಯೆಯನ್ನು ಕಡೆಗಣಿಸಲಾಗುವುದಿಲ್ಲ. ವೆಂಟಿಲೇಟರ್ ಇಲ್ಲದೆ, ಆಸ್ಪತ್ರೆಯಲ್ಲಿ ಸ್ಥಳಾವಕಾಶವಿಲ್ಲದೆ, ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೆ ಸೋಂಕಿತರು ಮೃತಪಟ್ಟರೆ ಅದು ಪ್ರಭುತ್ವ ಮಾಡುವ ಕೊಲೆ ಎಂದೇ ಭಾವಿಸಬೇಕಾಗುತ್ತದೆ. ಏಕೆಂದರೆ ಪ್ರತಿಯೊಂದು ಜೀವವೂ ಅಮೂಲ್ಯ. ಮತ್ತೊಂದೆಡೆ ದಾಖಲೆಗಳ ಸಂಗ್ರಹದಲ್ಲಿರುವ ವ್ಯತ್ಯಯಗಳ ಪರಿಣಾಮ ಈ ಅಂಕಿ ಅಂಶಗಳೂ ಸಹ ಪರಿಪೂರ್ಣವಲ್ಲ ಎನ್ನುವುದು ಸಾರ್ವತ್ರಿಕ ಸತ್ಯ.
ಈ ಸಂದರ್ಭದಲ್ಲೇ ಕರ್ನಾಟಕದಲ್ಲಿ ಕೋವಿದ್ 19 ನಿಂದ ಸತ್ತವರ ಸಂಖ್ಯೆ 6937. ಒಟ್ಟು ಸೋಂಕಿತರ ಸಂಖ್ಯೆ 4.30 ಲಕ್ಷ. ಸೆಪ್ಟಂಬರ್ ತಿಂಗಳ 10 ದಿನಗಳಲ್ಲಿ 1235 ಮಂದಿ ಮೃತಪಟ್ಟಿದ್ದಾರೆ ಅಂದರೆ ಪ್ರತಿದಿನ ಕನಿಷ್ಟ ಸರಾಸರಿ 123 ಹೆಚ್ಚು ಮಂದಿ ಸಾಯುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಕೋವಿದ್ ಪರೀಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಲಾಗಿದ್ದು ಸೋಂಕಿತರ ಸಂಖ್ಯೆಯೂ ಕಡಿಮೆ ಎನಿಸುತ್ತಿದೆ. ಆರು ತಿಂಗಳ ಅವಧಿಯಲ್ಲಿ ಕರ್ನಾಟಕದಲ್ಲಿ 34.61 ಲಕ್ಷ ಜನರು ಪರೀಕ್ಷೆಗೊಳಪಟ್ಟಿದ್ದಾರೆ.
ರಾಜ್ಯದ ಜನಸಂಖ್ಯೆಗೆ ಹೋಲಿಸಿದರೆ ಇದು ನಗಣ್ಯ ಎನ್ನಬಹುದು. 3.22 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಚೇತರಿಕೆಯ ಪ್ರಮಾಣ ಹೆಚ್ಚಾಗಿದೆ ಎಂದರೆ ಕೊರೋನಾ ನಿಯಂತ್ರಣದಲ್ಲಿದೆ ಎಂದರ್ಥವಲ್ಲ. ಸೋಂಕಿತರ ಪ್ರಮಾಣ ಏರುತ್ತಿರುವುದು ಸರ್ಕಾರವನ್ನು ಎಚ್ಚರಿಸಬೇಕಿದೆ. ಈ ಮುನ್ನ ಸೋಂಕಿತ ವ್ಯಕ್ತಿಗಳ ಮನೆಗಳನ್ನು, ಅಥವಾ ಮನೆ ಇರುವ ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗುತ್ತಿತ್ತು. ಇದರ ಪೂರ್ಣ ವಿವರಗಳನ್ನು ಮಾಧ್ಯಮಗಳಿಗೆ ನೀಡಲಾಗುತ್ತಿತ್ತು.
ಈಗ ಸೋಂಕಿತ ವ್ಯಕ್ತಿಯ ಮನೆಗಳನ್ನು ಮಾತ್ರವೇ ಸೀಲ್ ಡೌನ್ ಮಾಡಲಾಗುತ್ತಿದೆ. ಒಂದು ಊರಿನ ಯಾವ ರಸ್ತೆ ಅಥವಾ ಯಾವ ಬಡಾವಣೆಯಲ್ಲಿ ಸೋಂಕಿತರಿದ್ದಾರೆ ಎನ್ನುವ ಮಾಹಿತಿಯನ್ನು ಎಲ್ಲಿಯೂ ನೀಡಲಾಗುತ್ತಿಲ್ಲ. ಹಾಗಾಗಿ ಸೋಂಕಿತರು ಇರುವ ರಸ್ತೆಗಳಲ್ಲಿ, ಸೋಂಕಿನ ಅರಿವು ಇಲ್ಲದೆ ಓಡಾಡುವವರೂ ಸಹ ಯಾವುದೋ ಒಂದು ರೀತಿಯಲ್ಲಿ ಸೋಂಕಿಗೆ ಒಳಗಾಗುವ ಸಾಧ್ಯತೆಗಳಿರುತ್ತವೆ ಅಲ್ಲವೇ ? ಈಗ ಸರ್ಕಾರದ ಗಮನ ಮಾರುಕಟ್ಟೆ ಮತ್ತು ಆರ್ಥಿಕತೆಯತ್ತ ಹೊರಳಿದೆ. ಚಿತ್ರಮಂದಿರಗಳು ಮತ್ತು ಶಾಲೆಗಳನ್ನು ತೆರೆದುಬಿಟ್ಟರೆ ಸಂಪೂರ್ಣ ಸಹಜ ಸ್ಥಿತಿಗೆ ಬಂದಂತಾಗುತ್ತದೆ. ಆರ್ಥಿಕ ಬೆಳವಣಿಗೆ ಮತ್ತು ಸುಸ್ಥಿರತೆಯ ದೃಷ್ಟಿಯಿಂದ ಇದು ಅನಿವಾರ್ಯ ಇರಬಹುದು. ಆದರೆ ಇದರೊಟ್ಟಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದೂ ಮುಖ್ಯ ಅಲ್ಲವೇ ?
ಕೊರೋನಾ ಸದ್ದೇ ಮಾಡದಿದ್ದ ಸಂದರ್ಭದಲ್ಲಿ ಸೂರ ಕುಸಿಯುವಂತೆ ಅರಚಾಡುತ್ತಿದ್ದ ಸುದ್ದಿಮನೆಯ ಕೂಗುಮಾರಿಗಳಿಗೆ ಈಗ, ಕೊರೋನಾ ಮನೆಮನೆಗೂ ಹಬ್ಬುತ್ತಿರುವಾಗ ಕಂಗನಾ, ರಿಯಾ, ಕವಿತಾ, ಸಂಜನಾ, ಸುಶಾಂತ್ ಟಿ ಆರ್ ಪಿ ಸಾಧನಗಳಾಗಿಬಿಟ್ಟಿದ್ದಾರೆ. ಸುದ್ದಿಮನೆಗಳು ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗಿ ಹಾಳಾಗಿ ಹೋಗಿವೆ. ಸುದ್ದಿಮನೆಯ ಕೂಗುಮಾರಿಗಳಿಗೆ ತಬ್ಲೀಗಿಗಳು ಒಂದು ಘಟ್ಟದಲ್ಲಿ ಲಾಭದಾಯಕವಾಗಿ ಕಾಣುತ್ತಿದ್ದರು.
ಕೊರೋನಾ ರಣಕೇಕೆ ಹಾಕುತ್ತಾ ಹಣ ತರುತ್ತಿತ್ತು. ಈಗ ಡ್ರಗ್ಗಿಣಿ, ಢಾಕಿಣಿ ಬಲೆಗೆ ಸಿಲುಕಿದ್ದಾರೆ. ಅಂದೂ ಸುದ್ದಿ ನೀಡಿರಲಿಲ್ಲ ಇಂದೂ ನೀಡುತ್ತಿಲ್ಲ. ಈಗ ಡ್ರಗ್ ಪೀಡಿತರಾಗಿರುವುದರಿಂದ ಹೆಚ್ಚಿನದೇನೂ ನಿರೀಕ್ಷಿಸಲೂ ಆಗುವುದಿಲ್ಲ. ಮುದ್ರಣ ಮಾಧ್ಯಮಗಳಲ್ಲಿ ಕೊರೋನಾ ಈಗ ಚಿನ್ನ-ಬೆಳ್ಳಿ, ಈರುಳ್ಳಿ-ಬೆಳ್ಳುಳ್ಳಿ, ಮಾಂಸ-ಮೊಟ್ಟೆಯ ಹಾಗೆ ಪೇಟೆ ಧಾರಣೆಯ ಅಂಕಿಅಂಶಗಳಾಗಿ ಕಾಣುತ್ತಿದ್ದು ಎಲ್ಲೋ ಮೂಲೆಯಲ್ಲಿ ಜಾಗ ಪಡೆಯುತ್ತಿವೆ.
ಕೊರೋನಾದೊಂದಿಗೆ ಬದುಕುವುದನ್ನು ಜನರು ಕಲಿತಿದ್ದಾರೆ. ಸತ್ತವರಿಗೆ ಏನು ಹೇಳುವುದು ? ಆರ್ಥಿಕವಾಗಿ ಜರ್ಝರಿತವಾಗಿರುವ ಅನೇಕ ಕುಟುಂಬಗಳು ತಮ್ಮ ಆಧಾರ ಕಳೆದುಕೊಳ್ಳುತ್ತಿವೆ. ಒಂದು ಲಕ್ಷಕ್ಕೂ ಹೆಚ್ಚು ಅಂಗಡಿ ಮುಗ್ಗಟ್ಟುಗಳು ಮುಚ್ಚಲ್ಪಟ್ಟಿವೆ. ಹಲವಾರು ಸ್ಟೇಷನರಿ ಅಂಗಡಿಗಳು ಮುಚ್ಚಲ್ಪಟ್ಟಿವೆ, ದಿನಸಿ ಅಂಗಡಿಗಳು ಮುಚ್ಚಲ್ಪಟ್ಟಿವೆ. ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡು ನಾಳಿನ ಚಿಂತೆಯಲ್ಲಿದ್ದಾರೆ.
ಈ ನಡುವೆಯೇ ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳನ್ನೂ ಅನ್ ಲಾಕ್ ಮಾಡುವ ಮೂಲಕ ಆರ್ಥಿಕ ಚಟುವಟಿಕೆಗೆ ಅವಕಾಶ ನೀಡಿದೆ. ಸೆಪ್ಟಂಬರ್ 21 ರಿಂದ ಸಭೆ ಸಮಾರಂಭಗಳಲ್ಲಿ 100 ಜನರಿಗೆ ಅವಕಾಶ ನೀಡಲಾಗುತ್ತಿದೆ. 9 ರಿಂದ 12ನೆಯ ತರಗತಿಯವರೆಗೆ ಶಾಲೆಗಳನ್ನು ತೆರೆಯಲಾಗುತ್ತಿದೆ. ಬಾರ್ ರೆಸ್ಟೋರೆಂಟ್ ಪಬ್ ಈಗಾಗಲೇ ತೆರೆದಿವೆ. ಅಕ್ಟೋಬರ್ 1ರಿಂದ ಚಿತ್ರಮಂದಿರಗಳನ್ನೂ ತೆರೆಯಲಾಗುತ್ತದೆ. ಇದು ಅನಿವಾರ್ಯ ಎಂದಾದರೆ ಇರಲಿ, ಕೊರೋನಾ ಸೋಂಕಿತರ ಸೌಖ್ಯವೂ ಅನಿವಾರ್ಯವೇ ಅಲ್ಲವೇ ?
ನೀತಿ ಆಯೋಗದ ಒಂದು ಎಚ್ಚರಿಕೆಯ ಮಾತನ್ನು ಜನರೂ ಅರ್ಥಮಾಡಿಕೊಳ್ಳಬೇಕು, ಸರ್ಕಾರವೂ ಯೋಚಿಸಬೇಕು. ಜನರ ನಿರ್ಲಕ್ಷ್ಯವೇ ಸೋಂಕು ಹೆಚ್ಚುವುದಕ್ಕೆ ಕಾರಣ ಎಂದು ನೀತಿ ಆಯೋಗ ಹೇಳಿರುವುದು ವಾಸ್ತವ ಸಂಗತಿ. ಯಾವುದೇ ಸಭೆ ಸಮಾರಂಭಗಳಲ್ಲೂ ಸರ್ಕಾರ ರೂಪಿಸಿರುವ ನಿರ್ದಿಷ್ಟ ಮಾನದಂಡಗಳನ್ನು ಪಾಲಿಸಲಾಗುತ್ತಿಲ್ಲ.
ಸಚಿವರು, ಸರ್ಕಾರಿ ಅಧಿಕಾರಿಗಳೇ ಈ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಬಿಟ್ಟರೆ ಮತ್ತಾವ ನಿಯಮಗಳೂ ಪಾಲನೆಯಾಗುತ್ತಿಲ್ಲ. ಆರು ಅಡಿ ದೈಹಿಕ ಅಂತರ ಕಾಪಾಡಿಕೊಳ್ಳುವ ನಿಯಮ ಶತಮಾನದ ಜೋಕ್ ಆಗಿ ಕಾಣುತ್ತಿದೆ. ಜನಸಾಮಾನ್ಯರ ನಿತ್ಯ ಜೀವನದಲ್ಲಿ, ಜನನಿಬಿಡ ಮಾರುಕಟ್ಟೆಗಳಲ್ಲಿ ಇದನ್ನು ಅನುಸರಿಸುವುದೂ ಕಷ್ಟ ಎನ್ನುವುದು ವಾಸ್ತವ.
ಆದರೆ ಸರ್ಕಾರದ ವತಿಯಿಂದ ಯಾವ ರೀತಿಯ ಮೇಲ್ವಿಚಾರಣೆ ನಡೆಸಲಾಗುತ್ತಿದೆ ? ಎಷ್ಟು ಸಭೆ ಸಮಾರಂಭಗಳಲ್ಲಿ, ಮದುವೆ ಮುಂತಾದ ಸಮಾರಂಭಗಳಲ್ಲಿ ನಿಯಮ ಪಾಲನೆಯ ಬಗ್ಗೆ ಪರಿವೀಕ್ಷಣೆ ಮಾಡಲಾಗುತ್ತಿದೆ ? ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದೂ ಸಹ ವಿರಳ ಎನಿಸುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿ ಹೇಗಿದೆ, ಆರೋಗ್ಯ ಸೌಲಭ್ಯಗಳು ಹೇಗಿವೆ, ಶುಚಿತ್ವ ಕಾಪಾಡಲಾಗಿದೆಯೇ, ಆಸ್ಪತ್ರೆಗಳಲ್ಲಿ ಎಲ್ಲವೂ ಸುಸೂತ್ರವಾಗಿ ಇದೆಯೇ ಇವೇ ಮುಂತಾದ ವಿಚಾರಗಳ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸಬೇಕಿದೆ. ಇಂತಹ ವಿಷಮ ಸನ್ನಿವೇಶದಲ್ಲಿ ಸೂಕ್ಷ್ಮ ಸಂವೇದನೆ ಇರುವವರು ಆರೋಗ್ಯ ಇಲಾಖೆಯ ಉಸ್ತುವಾರಿ ವಹಿಸಿದ್ದರೆ ಬಹುಶಃ ಪರಿಸ್ಥಿತಿ ಭಿನ್ನವಾಗಿರುತ್ತಿತ್ತು ಎನಿಸುತ್ತದೆ.
ಸರ್ಕಾರ ಮತ್ತು ಆಡಳಿತ ವ್ಯವಸ್ಥೆ ಅಕ್ಷರಶಃ ಹರಾಜು ಮಾರುಕಟ್ಟೆಯಾಗಿ ಪರಿವರ್ತನೆಯಾಗಿದೆ. ವಿಮಾನದಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಎಲ್ಲವನ್ನೂ ಹರಾಜು ಮಾಡಲು ಮಾರುಕಟ್ಟೆ ಕೂಗುಮಾರಿಗಳು ಸಜ್ಜಾಗುತ್ತಿದ್ದಾರೆ. ಇವರನ್ನು ನಾವೇ ಆಯ್ಕೆ ಮಾಡಿರುವುದು ನಮ್ಮ ದುರದೃಷ್ಟ. ಕೊರೋನಾ ಇರಲಿ ಇಲ್ಲದಿರಲಿ ಜನಸಾಮಾನ್ಯರು ಹೇಗೋ ಒಂದು ಬದುಕುತ್ತಾರೆ ಆದರೆ ತಮಗೆ ಅರಿವಿಲ್ಲದೆಯೇ ಸಾಯುವುದೂ ಸತ್ಯ.
ಬದುಕು ಮತ್ತು ಸಾವು ಜನರ ಕೈಯ್ಯಲ್ಲೇ ಇದೆ ಆದರೆ ಬದುಕುವ ಪರಿಸರ ನಿರ್ಮಿಸಿ ಸಾಯುವುದನ್ನು ತಡೆಗಟ್ಟುವ ಹೊಣೆ ಚುನಾಯಿತ ಸರ್ಕಾರದ ಮೇಲಿರುತ್ತದೆ ಅಲ್ಲವೇ ? ಕೊರೋನಾ ಈ ಪರಿಸರವನ್ನು ಅಪಾಯಕ್ಕೆ ಸಿಲುಕಿಸುತ್ತಿದೆ. ವೈರಾಣು ನಿಯಂತ್ರಣಕ್ಕೆ ಬರುವುದಿಲ್ಲ, ಲಾಕ್ ಡೌನ್ ಉಪಯುಕ್ತವಲ್ಲ, ಗಂಟೆ, ಜಾಗಟೆ, ಶಂಖನಾದ, ಚಪ್ಪಾಳೆ, ಗೋ ಕೊರೋನಾ ಇವೆಲ್ಲವೂ ತಮಾಷೆಯ ಸರಕುಗಳಾಗಿವೆ.
ಹಾಗಾದರೆ ಏನು ಮಾಡಬೇಕು ? ಆರೋಗ್ಯ ಸೇವೆಯನ್ನು ವಿಸ್ತರಿಸಬೇಕು, ಎಲ್ಲರಿಗೂ ಸಮನಾಗಿ ದೊರೆಯುವಂತೆ ಮಾಡಬೇಕು, ಚಿಕಿತ್ಸೆ ಗಗನಕುಸುಮವಾದರೆ ಸೋಂಕಿತರು ಸಾಯುವ ಸಿದ್ಧತೆಯೊಂದಿಗೇ ಆಸ್ಪತ್ರೆಗೆ ಬರಬೇಕಾಗುತ್ತದೆ. ಎಷ್ಟು ಕುಟುಂಬಗಳು ಈ ಸಂದರ್ಭದಲ್ಲಿ ಅನಾಥವಾಗಿವೆ ಎಂದು ಸರ್ಕಾರ ಯೋಚಿಸಬೇಕು. ವೈದ್ಯರ ಕೊರತೆ ಇದೆ ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಖಾಸಗಿ ವೈದ್ಯರನ್ನು, ಆಸ್ಪತ್ರೆಗಳನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಪುನಃ ಮಾರುಕಟ್ಟೆ ಲೆಕ್ಕಾಚಾರ ಅಡ್ಡಿಯಾಗುತ್ತದೆ. ಸುದ್ದಿಮನೆಯ ಕೂಗುಮಾರಿ ನಿರೂಪಕರಿಗೆ ಟಿ ಆರ್ ಪಿ ಚಿಂತೆಯಾದರೆ, ಚುನಾಯಿತ ಮಾರುಕಟ್ಟೆ ಕೂಗುಮಾರಿಗಳಿಗೆ ಮುಂದಿನ ಚುನಾವಣೆ ಮತ್ತು ನಿಧಿಯ ಚಿಂತೆ. ಇಷ್ಟರ ನಡುವೆ ಬಡಪಾಯಿ ಪ್ರಜೆ ಬದುಕಲು ಕಲಿಯುತ್ತಿದ್ದಾನೆ, ಸಾಯುತ್ತಿರುವವರನ್ನು ನೋಡುತ್ತಲೇ ತನ್ನ ಚಿತೆಯ ಚಿಂತೆಯಲ್ಲೇ ಕಾಲ ಕಳೆಯುತ್ತಿರುತ್ತಾನೆ. ಇಷ್ಟನ್ನು ಅರ್ಥಮಾಡಿಕೊಳ್ಳುವ ಸಂವೇದನೆ, ಪರಿಜ್ಞಾನ ಸರ್ಕಾರಕ್ಕೆ ಇರಬೇಕು. “ಹಣೆಬರಹವಿದ್ದಂತೆ ಆಗುತ್ತದೆ ” ಎನ್ನುವ ಪ್ರಾಚೀನ ಬೌದ್ಧಿಕ ದಾರಿದ್ರ್ಯವನ್ನೇ ಪ್ರದರ್ಶಿಸುತ್ತಾ ಕೈಚೆಲ್ಲಿ ಕುಳಿತುಕೊಳ್ಳುವುದು ಹೊಣೆಗೇಡಿತನವಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು