Connect with us

ರಾಜಕೀಯ

ಬದುಕಲು ಕಲಿಯುವುದೆಂದರೆ ಸಾವಿಗೆ ವಿಮುಖರಾಗುವುದೇ- ಕೊರೋನಾ ಕೇಳುತ್ತಿದೆ

Published

on

  • ನಾ ದಿವಾಕರ

ಕೊರೋನಾದೊಂದಿಗೆ ಬದುಕುವುದನ್ನು ಕಲಿಯಿರಿ ”. ಇದು ಭಾರತದ ಆಡಳಿತ ವ್ಯವಸ್ಥೆಯ ಆತ್ಮನಿರ್ಭರ ಮಂತ್ರವಾಗಿ ಪರಿಣಮಿಸಿದೆ. ಬಹುಶಃ ಇನ್ನು ಒಂದು ವರ್ಷದ ನಂತರ ಭಾರತದ ಜನಸಾಮಾನ್ಯರು ಏನೇ ಸಮಸ್ಯೆ ಎದುರಿಸಿದರೂ ಆತ್ಮನಿರ್ಭರತೆ ಎನ್ನುವ ಉತ್ತೇಜಕ ಪದ ಹಾಗೂ ಬದುಕಲು ಕಲಿಯಿರಿ ಎನ್ನುವ ಉಪನ್ಯಾಸ ಆಳುವ ವರ್ಗಗಳ ವೇದಮಂತ್ರದಂತಾಗಿಬಿಡುತ್ತದೆ.

ಇಂದು ಕರ್ನಾಟಕದ ಸಚಿವ ಎಸ್ ಟಿ ಸೋಮಶೇಖರ್ ಸಹ, ಕೊರೋನಾದೊಂದಿಗೆ ಬದುಕಲು ಕಲಿಯಿರಿ ಎಂದು ಹೇಳಿದ್ದಾರೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಕೊರೋನಾಗೆ ಹೆದರಿ ಯಾರೋಬ್ಬರೂ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದರೆ ಏನರ್ಥ. ನಾವು, ಭಾರತೀಯರು, ಕೊರೋನಾದೊಂದಿಗೆ ಬದುಕಲು ಕಲಿತಿದ್ದೇವೆ ಎಂದೇ ಅಲ್ಲವೇ ?

ನಾವು ಕಲಿಯಬೇಕಿರುವುದು ಸಾವಿನೊಂದಿಗೆ ಬದುಕುವುದನ್ನು. ಇದನ್ನು ಆಡಳಿತ ವ್ಯವಸ್ಥೆ ಹೇಳುವುದಿಲ್ಲ. ಏಕೆಂದರೆ ಸಾವಿನೊಂದಿಗೆ ಬದುಕುವುದೂ ನಮಗೆ ಹೊಸತೇನಲ್ಲ. ಕೊರೋನಾ ನಡುವೆಯೂ ಮಳವಳ್ಳಿ ತಾಲ್ಲೂಕಿನ ಬನ್ನೂರಿನಲ್ಲಿ ಒಬ್ಬ ಪೌರಕಾರ್ಮಿಕ ಮಲಗುಂಡಿಯಲ್ಲಿ ಸಿಲುಕಿ ಸತ್ತಿದ್ದಾನೆ. ಹೇಗೆ ಸತ್ತರು, ಏಕೆ ಸತ್ತರು ಎಂದೂ ಲೆಕ್ಕಿಸದೆ, ಸಾವಿರಾರು ಸಾವುಗಳ ನಡುವೆ ಬದುಕಿ ಮುನ್ನಡೆದಿರುವ ಸಮಾಜದಲ್ಲಿ ನಾವಿದ್ದೇವೆ.

ಅಪೌಷ್ಟಿಕತೆ, ಸಾಂಕ್ರಾಮಿಕ ಪಿಡುಗು, ಜಾತಿ ಸೋಂಕು, ಜಾತಿ ವೈಷಮ್ಯದ ವೈರಾಣು, ಮತಾಂಧತೆಯ ಕ್ರಿಮಿ, ದಾರಿದ್ರ್ಯ, ಬಡತನ, ನಿರುದ್ಯೋಗ ಹೀಗೆ ಸಾವಿನ ಮನೆಗಳನ್ನು ನಿರ್ಮಿಸುತ್ತಲೇ ಇರುವ ಈ ಎಲ್ಲ ವಿದ್ಯಮಾನಗಳೊಡನೆ ನಾವು ಬದುಕಲು ಕಲಿತಿದ್ದೇವೆ. ಏಕೆಂದರೆ ನಾವು ಸಾವನ್ನು ಲೆಕ್ಕಿಸುವುದಿಲ್ಲ.

ಟಿ ವಿ ಸಂದರ್ಶನವೊಂದರಲ್ಲಿ ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ ಟಿ ರವಿ “ಕೊರೋನಾದಿಂದ ಜನಗಳಿಗಿಂತಲೂ ಹೆಚ್ಚು ತೊಂದರೆಗೊಳಗಾಗಿರುವುದು ಆರ್ಥಿಕತೆ ” ಎಂದು ಹೇಳುತ್ತಾರೆ. ಮೇಲ್ನೋಟಕ್ಕೆ ಇದು ಹೌದು ಎನಿಸಬಹುದು. ಆದರೆ ಮನುಷ್ಯರನ್ನು ಒಳಗೊಳ್ಳದ ಆರ್ಥಿಕತೆ ಇದೆಯೇ ? ಈ ಪ್ರಶ್ನೆ ಕೇಳಲು ಬಿ ಟಿವಿ ಸಂದರ್ಶಕರಿಗೆ ಹೊಳೆಯುವುದಿಲ್ಲ.

ಕೋವಿದ್19 ನಿಂದ ಸತ್ತಿರುವವರ ಸಂಖ್ಯೆ ಬಹಳ ಕಡಿಮೆ, ಮಲೇರಿಯಾ, ಕಾಲರಾ ರೋಗಗಳಿಂದ, ಅಪಘಾತಗಳಿಂದ ಇನ್ನೂ ಹೆಚ್ಚಿನ ಸಂಖ್ಯೆಯ ಜನ ಸತ್ತಿದ್ದಾರೆ ” ಎಂದು ಹೇಳುವ ಮೂಲಕ ಕೊರೋನಾ ಗಂಭೀರ ಸಮಸ್ಯೆಯೇನಲ್ಲ ಎನ್ನುವಂತೆ ಮಾತನಾಡುತ್ತಾರೆ. ನಿಜ, ಅಂಕಿಅಂಶಗಳೇ ನಮ್ಮ ಸಾಮಾಜಿಕ-ಸಾರ್ವಜನಿಕ ಸಂಕಥನಗಳಿಗೆ ಆಧಾರವಾದರೆ ಇದನ್ನು ನಿರಾಕರಿಸಲಾಗುವುದಿಲ್ಲ. ಆದರೆ ಒಂದು ಆಡಳಿತ ವ್ಯವಸ್ಥೆಯ ವಕ್ತಾರರು ಈ ರೀತಿ ಹೇಳುವಾಗ, ಜನಸಾಮಾನ್ಯರ ಸಾವು ಎಷ್ಟು ನಿರ್ಲಕ್ಷಿತ ಎನ್ನುವುದು ತಿಳಿಯುತ್ತದೆ.

ಮನುಷ್ಯರಿಗಿಂತಲೂ ಆರ್ಥಿಕತೆಗೆ ಹೆಚ್ಚು ಪೆಟ್ಟುಬಿದ್ದಿದೆ ಎನ್ನುವ ಹೇಳಿಕೆಯಲ್ಲಿ ನಾವು ನಮ್ಮ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಆಳುತ್ತಿರುವ ಬಂಡವಾಳಶಾಹಿಯ ಅಂತರಾತ್ಮವನ್ನು ಅರ್ಥಮಾಡಿಕೊಳ್ಳಬಹುದು. ಶ್ರಮಿಕರಿಲ್ಲದ ಔದ್ಯಮಿಕ ಪ್ರಗತಿ, ಶ್ರಮವಿಲ್ಲದ ಡಿಜಿಟಲೀಕರಣ ಇದನ್ನೇ ಸೂಚಿಸುತ್ತದೆ.

ಸರಕು ಮತ್ತು ಪದಾರ್ಥಗಳ ಉತ್ಪಾದನೆ, ಸಂಸ್ಕರಣ, ಸರಕು ಮಾರಾಟ ಮತ್ತು ವಿನಿಮಯ, ಸರಕು ವಿತರಣೆ ಮತ್ತು ಶೇಖರಣೆ, ಇದಕ್ಕೆ ಪೂರಕವಾದ ಸೇವಾ ವಲಯ, ಬಂಡವಾಳದ ಕ್ರೋಢೀಕರಣ ಮತ್ತು ಪ್ರಸರಣ ಹಾಗೂ ಮಾರುಕಟ್ಟೆಯ ಲಾಭ ನಷ್ಟ ಈ ಸರಪಳಿಯಲ್ಲಿ ಮನುಷ್ಯ ನಗಣ್ಯನಾಗುವುದು ಅಚ್ಚರಿಯೇನಲ್ಲ. ಇದು ಬಂಡವಾಳ ವ್ಯವಸ್ಥೆಯ ಮೂಲಮಂತ್ರವೂ ಹೌದು. ಹಾಗಾಗಿಯೇ ಕೋಟ್ಯಂತರ ವಲಸೆ ಕಾರ್ಮಿಕರು ಗಣನೆಗೆ ಬಾರದೆ ಹೋಗುತ್ತಾರೆ. ಆರ್ಥಿಕತೆಯ ವ್ಯಾಖ್ಯಾನದಲ್ಲಿ ಜನತೆ ನಗಣ್ಯವಾಗುತ್ತಾರೆ.

ಕೋವಿದ್19 ನಿಂದ ಉಂಟಾಗಿರುವ ಸಾವು ಭಾರತದ ಜನಸಂಖ್ಯೆಗೆ ಹೋಲಿಸಿದರೆ ಅತಿ ಕಡಿಮೆ ಎನ್ನುವ ವಾದವೂ ಕೇಳಿಬರುತ್ತಿದೆ. ಭಾರತದಲ್ಲಿ 7200 ಸಾವುಗಳು ಸಂಭವಿಸಿವೆ. ಕರ್ನಾಟಕದಲ್ಲಿ 70 ಸಾವು ಸಂಭವಿಸಿವೆ. ನಿಜ, ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸಾವಿನ ಪ್ರಮಾಣವೂ ಕಡಿಮೆ. ಹೆಚ್ಚು ಜನರು ಗುಣಮುಖರಾಗುತ್ತಿದ್ದಾರೆ.

ಆದರೆ ಸೋಂಕು ಉಲ್ಬಣಿಸುತ್ತಿರುವ ಪ್ರಮಾಣ ದಿನೇದಿನೇ ಹೆಚ್ಚಾಗುತ್ತಿದೆ. ಮೇ 17ರ ನಾಲ್ಕನೆಯ ಲಾಕ್ ಡೌನ್ ನಂತರದಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ ಒಂದು ಲಕ್ಷ ಅರವತ್ತು ಸಾವಿರ ಏರಿಕೆಯಾಗಿದೆ. ಈಗ ಲಾಕ್ ಡೌನ್ ಸಡಿಲಿಕೆಯ ಸಂದರ್ಭದಲ್ಲಿದ್ದೇವೆ. ಜೂನ್ ತಿಂಗಳಲ್ಲಿ ಲಾಕ್ ಡೌನ್ ಸಡಿಲಿಕೆಯ ನಂತರದಲ್ಲಿ 70 ಸಾವಿರಕ್ಕೂ ಹೆಚ್ಚು ಸೋಂಕಿತರು ಕಂಡುಬಂದಿದ್ದಾರೆ.

ಈ ಸೋಂಕಿತರ ನಡುವೆ ನಾವು ಬದುಕುವುದನ್ನು ಕಲಿಯಬೇಕೆಂದು ಆಡಳಿತ ವ್ಯವಸ್ಥೆ ನಿರೀಕ್ಷಿಸುತ್ತದೆ. ಇದು ವಾಸ್ತವವೂ ಹೌದು. ಏಕೆಂದರೆ ಇಡೀ ಸಮಾಜ ಸಹಜ ಸ್ಥಿತಿಗೆ ಬಂದಿದೆ. ಎಲ್ಲವೂ ಎಲ್ಲೆಡೆಯೂ ಮೊದಲಿನಂತೆಯೇ ದೊರೆಯುತ್ತದೆ. ದೇವ ದೇವತೆಗಳೂ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದು ದರ್ಶನಕ್ಕೆ ಸಿದ್ಧತೆ ನಡೆದಿದೆ. ಸಿನೆಮಾ ಮತ್ತು ಶಾಲೆ ಹೊರತುಪಡಿಸಿ ಉಳಿದೆಲ್ಲವೂ ಮುಕ್ತವಾಗಿದೆ. ಮಾರುಕಟ್ಟೆ ಚುರುಕಾಗುತ್ತಿದೆ.

ಈ ನಡುವೆ ವಲಸೆ ಕಾರ್ಮಿಕರ ಮೂಲಭೂತ ಸಮಸ್ಯೆಗಳು ಮೂಲೆಗೆ ಸರಿದು ಕೊರೋನಾ ಇಡೀ ವಲಸೆ ಕಾರ್ಮಿಕ ಸಮುದಾಯವನ್ನೇ ಆವರಿಸಿಬಿಟ್ಟಿದೆ. ವಲಸೆ ಕಾರ್ಮಿಕರಲ್ಲಿ ಶ್ರಮಿಕರನ್ನು ಎಂದೂ ಕಾಣದವರು “ ನಮ್ಮವರ ಅಸ್ಮಿತೆ ”ಯನ್ನಾದರೂ ಕಾಣುತ್ತಿದ್ದರು. ಈಗ ಧರ್ಮಸ್ಥಳದ ಹೆಗಡೆ ಸಹ ಅವರಿಗೆ ನಿಷೇಧ ಹೇರುತ್ತಿದ್ದಾರೆ. ಏಕೆಂದರೆ ವಲಸೆ ಕಾರ್ಮಿಕರೇ ಸಮಸ್ಯೆಯಾಗಿ ಕಾಣುತ್ತಿದ್ದಾರೆ.

ಏಳುಜನ್ಮಗಳ ಕಾಯಿಲೆ-ಕಸಾಲೆ ಇದ್ದರೂ ಒಮ್ಮೆ ದರ್ಶನ ಭಾಗ್ಯ ಪಡೆದರೆ ಸಕಲ ರೋಗಗಳೂ ಪರಿಹಾರವಾಗುತ್ತವೆ ಎಂದು ಜಗಜ್ಜಾಹೀರು ಮಾಡುತ್ತಿದ್ದ ದೈವೀಕ ಕ್ಷೇತ್ರಗಳು, ಕೇವಲ ಒಂದು ವೈರಾಣು ಸೋಂಕಿಗೆ ಒಳಗಾದವರನ್ನು ನಮ್ಮಲ್ಲಿಗೆ ಬರಬೇಡಿ ಎನ್ನುವಂತಾಗಿದೆ. ಇದು ದೈವತ್ವದ ಅವಸಾನವೋ ಅಥವಾ ದೈವತ್ವದ ಗುತ್ತಿಗೆ ಪಡೆದ ಉದ್ಯಮಿಗಳ ನೈತಿಕ ಅಧಃಪತನವೋ ಊಹೆಗೆ ಬಿಟ್ಟ ವಿಚಾರ.

ಈಗ ದೇವಾಲಯದ ತೀರ್ಥ ವ್ಯರ್ಜ್ಯ ಎನಿಸುತ್ತದೆ. ಆಲ್ಕೋಹಾಲ್ ಇರುವ ಸ್ಯಾನಿಟೈಜರ್ ಅತ್ಯಗತ್ಯ ಎನಿಸುತ್ತದೆ. ಇಷ್ಟಾದರೂ ಕೊರೋನಾ ಪೀಡಿತರಿಗೆ, ಕೊರೋನಾದಿಂದ ಬಾಧಿತರಾಗಿರುವ ಅಸಂಖ್ಯಾತ ವಲಸೆ ಕಾರ್ಮಿಕರಿಗೆ ಧರ್ಮ ಕೇಂದ್ರಗಳು, ಅಧ್ಯಾತ್ಮ ಕೇಂದ್ರಗಳು, ಮಠೋದ್ಯಮಿಗಳು ತಮ್ಮ ಬಾಹುಗಳನ್ನು ತೆರೆದಿಲ್ಲ ಎಂದರೆ, ಬಂಡವಾಳ ವ್ಯವಸ್ಥೆ ಹೇಗೆ ಮಾನವ ಸಮಾಜದ ಅತಿ ಸೂಕ್ಷ್ಮ ವಲಯಗಳನ್ನೂ ಆಕ್ರಮಿಸಿದೆ ಎನ್ನುವುದು ಅರ್ಥವಾಗುತ್ತದೆ. ಪರಿಹಾರ ನಿಧಿಗೆ ದೇಣಿಗೆ ನೀಡುವುದಕ್ಕೂ ನೊಂದ ಜೀವಗಳಿಗೆ ನೆಲೆ ನೀಡುವುದಕ್ಕೂ ವ್ಯತ್ಯಾಸ ಇರುವುದನ್ನು ಇಲ್ಲಿ ಗಮನಿಸಬೇಕು.

ಕೊರೋನಾ ಭಾರತಕ್ಕೆ ಕಾಲಿಟ್ಟ ಜನವರಿ 30 ರಿಂದ ಎರಡನೆ ಲಾಕ್ ಡೌನ್ ಮುಗಿದ ಮೇ 3ರ ಅವಧಿಯಲ್ಲಿ ಭಾರತದಲ್ಲಿ ಮಲೇರಿಯಾದಿಂದ 45 ಸಾವಿರ, ಕ್ಷಯರೋಗದಿಂದ 93 ಸಾವಿರ, ಅತಿಸಾರದಿಂದ 1 ಲಕ್ಷ 28 ಸಾವಿರ, ಕ್ಯಾನ್ಸರ್ ನಿಂದ 1 ಲಕ್ಷ 37 ಸಾವಿರ, ಒಂದು ಲಕ್ಷ ಮಕ್ಕಳು ಹುಟ್ಟಿದ ಒಂದು ತಿಂಗಳ ಒಳಗೆ, ಆರು ಸಾವಿರ ಗರ್ಭಿಣಿಯರು ಸಾವನ್ನಪ್ಪಿದ್ದಾರೆ.

ಇಷ್ಟೆಲ್ಲಾ ಸಾವುಗಳ ನಡುವೆ ಕೊರೋನಾದಿಂದ ಸಾಯುತ್ತಿರುವವರ ಸಂಖ್ಯೆ ಗೌಣ ಎಂದು ಭಾವಿಸುವುದು ಸಹಜ. ಕೊರೋನಾಗೆ ಭಯಪಡಬೇಕಿಲ್ಲ ಎಂದು ಭರವಸೆ ನೀಡಲು ಈ ಅಂಕಿಅಂಶಗಳು ನೆರವಾಗಬಹುದು. ಅದರೆ ಒಂದು ಆಡಳಿತ ವ್ಯವಸ್ಥೆ ಈ ಅಂಕಿಅಂಶಗಳನ್ನು ಮುಂದಿಟ್ಟು, ಕೊರೋನಾ ಬಗ್ಗೆ ಚಿಂತಿಸಬೇಕಿಲ್ಲ ಎಂದು ಹೇಳುವುದು ಹೊಣೆಗೇಡಿತನದ ಪರಮಾವಧಿ ಎನಿಸುತ್ತದೆ.

ಕೊರೋನಾ ಇತ್ತೀಚಿನ ವಿದ್ಯಮಾನ. ಭಾರತದಲ್ಲಿ ಮೇಲೆ ಉಲ್ಲೇಖಿಸಿದ ಆರೋಗ್ಯ ಸಮಸ್ಯೆಗಳಿಂದ ಮತ್ತು ಹಸಿವು ಬಡತನದಿಂದ ಲಕ್ಷಾಂತರ ಮಕ್ಕಳು ಸಾಯುತ್ತಲೇ ಇದ್ದಾರೆ. “ ಅಷ್ಟೊಂದು ಸಾವುಗಳು ಸಂಭವಿಸುತ್ತಿವೆ ಕೊರೋನಾ ಸಾವಿಗೆ ಏಕೆ ಅಷ್ಟೊಂದು ಆತಂಕ ” ಎನ್ನುವ ಧೋರಣೆಯೇ ಆಡಳಿತ ವ್ಯವಸ್ಥೆಯ ಅಮಾನುಷ ದೃಷ್ಟಿಕೋನವನ್ನು ಸೂಚಿಸುತ್ತದೆ.

ಅಸಹಜ ಸಾವು ಎಷ್ಟು ಸಂಭವಿಸುತ್ತಿದೆ ಎನ್ನುವುದಕ್ಕಿಂತಲೂ ಏಕೆ ಸಂಭವಿಸುತ್ತಿದೆ ಎಂದು ಯೋಚಿಸುವುದು ಸಂವೇದನಾಶೀಲ ಧೋರಣೆಯಾಗುತ್ತದೆ. ಕೊರೋನಾ ಸಂದರ್ಭದಲ್ಲೂ ಇದೇ ಧೋರಣೆ ನಮ್ಮಲ್ಲಿ, ಆಡಳಿತ ವ್ಯವಸ್ಥೆಯಲ್ಲಿ ಇರಬೇಕಿತ್ತು. ಆದರೆ ನಾವು ಕೊರೋನಾ ಎಲ್ಲಿಂದ ಹರಡುತ್ತಿದೆ ಎಂದಷ್ಟೇ ಯೋಚಿಸುತ್ತಿರುವುದರಿಂದ ಸೋಂಕಿತರ ಬಗ್ಗೆ ಕಾಳಜಿ ಕ್ಷೀಣಿಸುತ್ತಿದೆ.

ಈ ನಡುವೆ ನಾವು ಬದುಕಲು ಕಲಿಯಬೇಕೆಂದರೆ ಈ ಸಾವುಗಳ ನಡುವೆಯೋ ಅಥವಾ ಉಲ್ಬಣಿಸುತ್ತಿರುವ ರೋಗಗಳ ನಡುವೆಯೋ ? ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುವವರಿಗೆ ಈ ಕನಿಷ್ಠ ಪ್ರಜ್ಞೆ ಇರಬೇಕಲ್ಲವೇ ? ಇಷ್ಟೊಂದು ಅಸಹಜ ಎನಿಸಬಹುದಾದ ಸಾವುಗಳು ಏಕೆ ಸಂಭವಿಸುತ್ತಿವೆ ? ನಮ್ಮಲ್ಲಿ ಇಂದಿಗೂ ಸಾರ್ವತ್ರಿಕ ಆರೋಗ್ಯ ಮತ್ತು ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಸುಸ್ಥಿತಿಯಲ್ಲಿಲ್ಲ ಅಲ್ಲವೇ ? ಕ್ವಾರಂಟೈನ್ ಕೇಂದ್ರಗಳಲ್ಲಿ ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಶೀಲಿಸುವ ವ್ಯವಧಾನವನ್ನೂ ಕಳೆದುಕೊಂಡಿರುವ ಆಡಳಿತ ವ್ಯವಸ್ಥೆ ಕೊರೋನಾ ವೈರಾಣುವಿನ ಸಮುದಾಯ ಪ್ರಸರಣ ಹೆಚ್ಚಾಗುತ್ತಿದ್ದರೂ ಲೆಕ್ಕಿಸದೆ ಇರುವುದು ದುರಂತ.

ಈ ಕುರಿತು ಎಚ್ಚರಿಸುವ, ಕೊರೋನಾ ನಿಯಂತ್ರಣದಲ್ಲಿನ ವೈಫಲ್ಯವನ್ನು ಎತ್ತಿತೋರುವ ವೈದ್ಯರನ್ನು, ತಜ್ಞರನ್ನು ನಿರ್ಲಕ್ಷಿಸುತ್ತಿರುವುದು ಒಂದೆಡೆಯಾದರೆ ಮತ್ತೊಂದೆಡೆ ಕ್ವಾರಂಟೈನ್ ಕೇಂದ್ರಗಳಲ್ಲಿನ ಅವ್ಯವಸ್ಥೆಯ ಬಗ್ಗೆ ಸೊಲ್ಲೆತ್ತುವವರನ್ನು ದೇಶದ್ರೋಹಿಗಳಂತೆ ಕಾಣಲಾಗುತ್ತಿದೆ. ತಮ್ಮ ಅಮೂಲ್ಯ ಸಲಹೆಗಳನ್ನು ಸರ್ಕಾರ ಗಮನಿಸುತ್ತಿಲ್ಲ ಎಂದು ವೈದ್ಯಲೋಕ ಕೂಗಿಕೂಗಿ ಹೇಳುತ್ತಲೇ ಇದೆ.

ಮಾರುಕಟ್ಟೆ ಶಕ್ತಿಗಳ ಕೂಗಿಗೆ ಕ್ಷಣ ಮಾತ್ರದಲ್ಲಿ ಸ್ಪಂದಿಸುವ ಅಧಿಕಾರಸ್ಥರು ವೈದ್ಯಲೋಕದ ಕೂಗನ್ನು ಏಕೆ ನಿರ್ಲಕ್ಷಿಸುತ್ತದೆ ? ಸಚಿವ ಸಿ ಟಿ ರವಿ ಇದಕ್ಕೆ ಸ್ಪಷ್ಟ ಉತ್ತರ ನೀಡುತ್ತಾರೆ “ ಜನಗಳಿಗಿಂತಲೂ ಹೆಚ್ಚು ಬಾಧಿತವಾಗಿರುವುದು ಆರ್ಥಿಕತೆ ”. ಮಾರುಕಟ್ಟೆ ಆರ್ಥಿಕ ವ್ಯವಸ್ಥೆಯಲ್ಲಿ ಜೀವಬೆಲೆ ಇರುವುದಿಲ್ಲ. ಏಕೆಂದರೆ ಜೀವ ಬಿಕರಿಯಾಗುವುದಿಲ್ಲ.

ಸ್ವಾತಂತ್ರ್ಯಾನಂತರದ ಮೊದಲ ನಾಲ್ಕು ದಶಕಗಳಲ್ಲಿ ರೂಪಿಸಲಾದ ಸ್ವಾವಲಂಬಿ ಭಾರತವನ್ನು ನಂತರದ ಮೂರು ದಶಕಗಳಲ್ಲಿ ವ್ಯವಸ್ಥಿತವಾಗಿ ಶಿಥಿಲಗೊಳಿಸಿದ ಆಡಳಿತ ವ್ಯವಸ್ಥೆಯೇ ಇಂದು ಆತ್ಮನಿರ್ಭರತೆಗಾಗಿ ಹಾತೊರೆಯುತ್ತಿದೆ. ಈ ಮೂರು ದಶಕಗಳ ಅವಧಿಯಲ್ಲಿ ತನ್ನ ನೆಲೆಯನ್ನೇ ಕಳೆದುಕೊಂಡಿರುವ ದೇಶದ ಸಾರ್ವತ್ರಿಕ-ಪ್ರಾಥಮಿಕ ಆರೋಗ್ಯ ವ್ಯವಸ್ಥೆಗೆ ಕಾಯಕಲ್ಪ ನೀಡಲು ಇಂದಿಗೂ ನಾವು ತಯಾರಾಗದಿದ್ದರೆ ಬಹುಶಃ ನಮ್ಮ ದೇಶಕ್ಕೆ ಕೊರೋನಾ ಅವಶ್ಯಕತೆಯೇ ಕಾಣುವುದಿಲ್ಲ.

ಖಾಸಗಿ ವೈದ್ಯಕೀಯ ಉದ್ಯಮ ಲೋಕ ಸಾವಿನ ಅಂಚಿನಲ್ಲಿರುವವರಿಗೆ ಮರುಜೀವ ನೀಡಲು ಹರಾಜುಕಟ್ಟೆಗಳನ್ನು ನಿರ್ಮಿಸುತ್ತಿದೆ. ಸತ್ತವರನ್ನೂ ಬದುಕಿಸುವ ಆಶ್ವಾಸನೆಯೊಂದಿಗೆ ತಮ್ಮ ಐಷಾರಾಮಿ ಚಿಕಿತ್ಸಾ ನೆಲೆಗಳನ್ನು ಸಿದ್ಧಪಡಿಸಿರುವ ಈ ಗಂಧರ್ವ ಲೋಕದ ಪ್ರಜೆಗಳಿಗೆ ಕೊರೋನಾ ಸೋಂಕಿತರು ಮನುಷ್ಯರಾಗಿ ಕಾಣಲೇ ಇಲ್ಲ ಎನ್ನುವುದು ದುರಂತ ಅಲ್ಲವೇ ? ಈ ಅಸಹಾಯಕ ಪ್ರಜೆಗಳತ್ತ ಒಮ್ಮೆ ತಿರುಗಿ ನೋಡ್ರಪ್ಪಾ ಎಂದು ಹೇಳುವ ಆತ್ಮಸ್ಥೈರ್ಯವೂ ಆತ್ಮನಿರ್ಭರತೆಯ ಪ್ರತಿಪಾದಕರಿಗೆ ಇಲ್ಲ. ಕಾರಣ ಇದು ಮಾರುಕಟ್ಟೆ. ಜನಸಾಮಾನ್ಯರಿಗೆ ಮಾನ್ಯತೆ ಇಲ್ಲದ ಆರ್ಥಿಕತೆಯ ಒಂದು ಲಾಭದಾಯಕ ವೇದಿಕೆ.

ಈ ವೇದಿಕೆಯ, ಈ ವ್ಯವಸ್ಥೆಯ ಪುನಶ್ಚೇತನಕ್ಕೆ ಪಣತೊಟ್ಟು ಯುದ್ಧೋನ್ಮಾದದಲ್ಲಿ ಮುನ್ನಡೆದಿರುವ ಸರ್ಕಾರಗಳಿಗೆ ಕೊರೋನಾ ವೈರಾಣು ಸಹ ಮಾರುಕಟ್ಟೆಯ ತ್ಯಾಜ್ಯದಂತೆ ಕಾಣುತ್ತಿರಬಹುದು. ಆದರೆ ಮಾರುಕಟ್ಟೆ ಆವರಣದಲ್ಲಿ ತಂತಾನೇ ಕೊಳೆತುಹೋಗುವ ತ್ಯಾಜ್ಯದಂತೆ ಕೊರೋನಾ ಕೊಳೆಯುವುದಿಲ್ಲ. ಅದು ಜನಸಮುದಾಯಗಳ ನಡುವೆ ಹರಡುತ್ತದೆ.

ಈ ಹರಡುವಿಕೆಯ ನಡುವೆ ಜನಸಾಮಾನ್ಯರು ಬದುಕು ಕಲಿಯುವುದೆಂದರೆ ಅರ್ಥವೇನು ? ಅನ್ಯರ ಸಾವನ್ನು ಲೆಕ್ಕಿಸದೆ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ ಎಂದೇ ? ಪಕ್ಕದ ಮನೆಯಲ್ಲಿ ಹೆಣ ಎತ್ತಿದರೆ ಸಾಕು ನಾವು ಸ್ನಾನ ಮಾಡಿ ಊಟ ಮಾಡಬಹುದು ಎನ್ನುವ ಸೂತಕ ಮನೋಭಾವ ಇರುವ ಸಮಾಜ ನಮ್ಮದು. ಈ ಸಮಾಜದಲ್ಲಿ ಅನ್ಯರ ಸಾವು ನಮ್ಮನ್ನು ವಿಚಲಿತಗೊಳಿಸಲು ಸಾಧ್ಯವೇ ?

ಆದರೆ ಸರ್ಕಾರ ವಿಚಲಿತವಾಗಲೇಬೇಕಲ್ಲವೇ ? “ ಲಕ್ಷಾಂತರ ಸಾವಿನ ನಡುವೆಯೇ ಬದುಕುತ್ತಿದ್ದೇವೆ ಸಾವಿರಗಳಿಗೇಕೆ ಚಿಂತೆ ” ಎನ್ನುವ ಧೋರಣೆ ಮಾನವೀಯ ಮೌಲ್ಯಗಳಿಗೆ ನಿಲುಕುವಂತಹುದಲ್ಲ. ಇದು ಸಾರ್ವತ್ರಿಕ ಆರೋಗ್ಯದ ಪ್ರಶ್ನೆ. ಕೊರೋನಾ ನಮ್ಮ ನಡುವೆಯೇ ಇರುತ್ತದೆ ನಿಜ, ಆದರೆ ಸಾವು ಬದುಕಿನ ಸಂಘರ್ಷದಲ್ಲಿ ಕೊರೋನಾ ಮಾನದಂಡವಾಗಕೂಡದು ಅಲ್ಲವೇ ?

ಸಮಾಜದಲ್ಲಿ ಸಂಭವಿಸುವ ಪ್ರತಿಯೊಂದು ಅಸಹಜ ಸಾವಿಗೂ ನೈತಿಕ ಹೊಣೆ ಹೊರುವ ಮಾನವೀಯ ಆಡಳಿತ ವ್ಯವಸ್ಥೆ ನಮಗೆ ಬೇಕಿದೆ. ಇಂತಹ ವ್ಯವಸ್ಥೆಯನ್ನು ನಾವು ರೂಪಿಸಿದ್ದಿದ್ದರೆ ಸೂಕ್ತ ಚಿಕಿತ್ಸೆ ದೊರೆಯಲಾರದೆ ಜನರು ಸಾಯುತ್ತಿರಲಿಲ್ಲ. ಆಕರ್ಷಕ ಪದಪುಂಜಗಳು, ಘೋಷಣೆಗಳು ತಾತ್ಕಾಲಿಕ ಶಮನ ನೀಡುತ್ತವೆ. ಶಾಶ್ವತ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ.

ಭಾರತದ ಜನಸಮುದಾಯಗಳಿಗೆ ಬದುಕುವುದನ್ನು ಕಲಿಸಬೇಕಿಲ್ಲ. ನೋವು, ಅಪಮಾನ, ಹಿಂಸೆ, ಚಿತ್ರಹಿಂಸೆ, ಸಂಕಷ್ಟ ಮತ್ತು ರೋಗ ರುಜಿನಗಳ ನಡುವೆ ಬದುಕಿರುವುದನ್ನು ನೋಡಿದ್ದೇವೆ. ತಮ್ಮ ಅಸ್ಮಿತೆಯೇ ಸಾವಿಗೆ ಆಹ್ವಾನ ನೀಡುವ ಪರಿಸ್ಥಿತಿಯನ್ನೂ ದಿಟ್ಟತನದಿಂದ ಎದುರಿಸಿ ಬದುಕಿರುವುದನ್ನು ನೋಡಿದ್ದೇವೆ. ಕೊರೋನಾ ಅಸ್ಮಿತೆಯನ್ನು ಪ್ರಶ್ನಿಸುವುದಿಲ್ಲ.

ಆದರೆ ಕೊರೋನಾ ನಿಯಂತ್ರಿಸಬೇಕಾದ ಆಡಳಿತ ವ್ಯವಸ್ಥೆಗೆ ಅಸ್ಮಿತೆ ಮುಖ್ಯವಾಗುತ್ತದೆ. ಮಾರುಕಟ್ಟೆ ಮತ್ತು ಪ್ರಜೆ ಎರಡರ ನಡುವೆ ಒಂದನ್ನು ಆಯ್ಕೆ ಮಾಡುವ ನೆಲೆಯಲ್ಲಿ ಮಾರುಕಟ್ಟೆಯ ಅಸ್ಮಿತೆ ಮೇಲುಗೈ ಸಾಧಿಸುತ್ತದೆ. ಹಾಗಾಗಿಯೇ ಎಲ್ಲವೂ ಮುಕ್ತ – ಬದುಕುವುದು ನಿಮ್ಮಿಷ್ಟ ಎನ್ನುವ ಧೋರಣೆಯನ್ನು ಅನುಸರಿಸಲಾಗುತ್ತಿದೆ.

ಈ ದೇಶದ ಸಾರ್ವಭೌಮ ಪ್ರಜೆಗಳು ಆಡಳಿತ ವ್ಯವಸ್ಥೆಗೆ ಮಾಡಬಹುದಾದ ವಿನಂತಿ ಎಂದರೆ “ ಸ್ವಾಮಿ, ನಾವು ಬದುಕಲು ಕಲಿಯಬೇಕಿಲ್ಲ, ಸಾವಿನೊಂದಿಗೂ ಬದುಕಿ ನಿರೂಪಿಸಿದ್ದೇವೆ. ಆದರೆ ನೀವು ಸಾವುಗಳತ್ತ ಗಮನ ಹರಿಸಿ. ಮಾರುಕಟ್ಟೆ ವ್ಯವಸ್ಥೆ ಆರೋಗ್ಯವಂತರನ್ನೂ ಕೊಲ್ಲುತ್ತದೆ. ಈ ದೇಶದ ವಲಸೆ ಕಾರ್ಮಿಕರೇ ಇದಕ್ಕೆ ಸಾಕ್ಷಿ. ಮಾರುಕಟ್ಟೆ ಪುನಶ್ಚೇತನಗೊಂಡರೂ ಈ ಸಾವುಗಳು ನಿಲ್ಲುವುದಿಲ್ಲ. ಕನಿಷ್ಠ ಪಕ್ಷ ಕೊರೋನಾದಿಂದಾದರೂ ಜನರನ್ನು ರಕ್ಷಿಸಿ. ನಮಗೆ ಮಾತನಾಡಲು ಅವಕಾಶ ಕೊಡಿ ”. ಕೊರೋನಾಗೆ ಕಣ್ಣು ಕಿವಿ ಇಲ್ಲ, ಸರ್ಕಾರಕ್ಕೆ ಇರಲೇಬೇಕಲ್ಲವೇ..?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

Published

on

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.

ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.

ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.

ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending