Connect with us

ರಾಜಕೀಯ

ಬದುಕಲು ಕಲಿಯುವುದೆಂದರೆ ಸಾವಿಗೆ ವಿಮುಖರಾಗುವುದೇ- ಕೊರೋನಾ ಕೇಳುತ್ತಿದೆ

Published

on

  • ನಾ ದಿವಾಕರ

ಕೊರೋನಾದೊಂದಿಗೆ ಬದುಕುವುದನ್ನು ಕಲಿಯಿರಿ ”. ಇದು ಭಾರತದ ಆಡಳಿತ ವ್ಯವಸ್ಥೆಯ ಆತ್ಮನಿರ್ಭರ ಮಂತ್ರವಾಗಿ ಪರಿಣಮಿಸಿದೆ. ಬಹುಶಃ ಇನ್ನು ಒಂದು ವರ್ಷದ ನಂತರ ಭಾರತದ ಜನಸಾಮಾನ್ಯರು ಏನೇ ಸಮಸ್ಯೆ ಎದುರಿಸಿದರೂ ಆತ್ಮನಿರ್ಭರತೆ ಎನ್ನುವ ಉತ್ತೇಜಕ ಪದ ಹಾಗೂ ಬದುಕಲು ಕಲಿಯಿರಿ ಎನ್ನುವ ಉಪನ್ಯಾಸ ಆಳುವ ವರ್ಗಗಳ ವೇದಮಂತ್ರದಂತಾಗಿಬಿಡುತ್ತದೆ.

ಇಂದು ಕರ್ನಾಟಕದ ಸಚಿವ ಎಸ್ ಟಿ ಸೋಮಶೇಖರ್ ಸಹ, ಕೊರೋನಾದೊಂದಿಗೆ ಬದುಕಲು ಕಲಿಯಿರಿ ಎಂದು ಹೇಳಿದ್ದಾರೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಕೊರೋನಾಗೆ ಹೆದರಿ ಯಾರೋಬ್ಬರೂ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದರೆ ಏನರ್ಥ. ನಾವು, ಭಾರತೀಯರು, ಕೊರೋನಾದೊಂದಿಗೆ ಬದುಕಲು ಕಲಿತಿದ್ದೇವೆ ಎಂದೇ ಅಲ್ಲವೇ ?

ನಾವು ಕಲಿಯಬೇಕಿರುವುದು ಸಾವಿನೊಂದಿಗೆ ಬದುಕುವುದನ್ನು. ಇದನ್ನು ಆಡಳಿತ ವ್ಯವಸ್ಥೆ ಹೇಳುವುದಿಲ್ಲ. ಏಕೆಂದರೆ ಸಾವಿನೊಂದಿಗೆ ಬದುಕುವುದೂ ನಮಗೆ ಹೊಸತೇನಲ್ಲ. ಕೊರೋನಾ ನಡುವೆಯೂ ಮಳವಳ್ಳಿ ತಾಲ್ಲೂಕಿನ ಬನ್ನೂರಿನಲ್ಲಿ ಒಬ್ಬ ಪೌರಕಾರ್ಮಿಕ ಮಲಗುಂಡಿಯಲ್ಲಿ ಸಿಲುಕಿ ಸತ್ತಿದ್ದಾನೆ. ಹೇಗೆ ಸತ್ತರು, ಏಕೆ ಸತ್ತರು ಎಂದೂ ಲೆಕ್ಕಿಸದೆ, ಸಾವಿರಾರು ಸಾವುಗಳ ನಡುವೆ ಬದುಕಿ ಮುನ್ನಡೆದಿರುವ ಸಮಾಜದಲ್ಲಿ ನಾವಿದ್ದೇವೆ.

ಅಪೌಷ್ಟಿಕತೆ, ಸಾಂಕ್ರಾಮಿಕ ಪಿಡುಗು, ಜಾತಿ ಸೋಂಕು, ಜಾತಿ ವೈಷಮ್ಯದ ವೈರಾಣು, ಮತಾಂಧತೆಯ ಕ್ರಿಮಿ, ದಾರಿದ್ರ್ಯ, ಬಡತನ, ನಿರುದ್ಯೋಗ ಹೀಗೆ ಸಾವಿನ ಮನೆಗಳನ್ನು ನಿರ್ಮಿಸುತ್ತಲೇ ಇರುವ ಈ ಎಲ್ಲ ವಿದ್ಯಮಾನಗಳೊಡನೆ ನಾವು ಬದುಕಲು ಕಲಿತಿದ್ದೇವೆ. ಏಕೆಂದರೆ ನಾವು ಸಾವನ್ನು ಲೆಕ್ಕಿಸುವುದಿಲ್ಲ.

ಟಿ ವಿ ಸಂದರ್ಶನವೊಂದರಲ್ಲಿ ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ ಟಿ ರವಿ “ಕೊರೋನಾದಿಂದ ಜನಗಳಿಗಿಂತಲೂ ಹೆಚ್ಚು ತೊಂದರೆಗೊಳಗಾಗಿರುವುದು ಆರ್ಥಿಕತೆ ” ಎಂದು ಹೇಳುತ್ತಾರೆ. ಮೇಲ್ನೋಟಕ್ಕೆ ಇದು ಹೌದು ಎನಿಸಬಹುದು. ಆದರೆ ಮನುಷ್ಯರನ್ನು ಒಳಗೊಳ್ಳದ ಆರ್ಥಿಕತೆ ಇದೆಯೇ ? ಈ ಪ್ರಶ್ನೆ ಕೇಳಲು ಬಿ ಟಿವಿ ಸಂದರ್ಶಕರಿಗೆ ಹೊಳೆಯುವುದಿಲ್ಲ.

ಕೋವಿದ್19 ನಿಂದ ಸತ್ತಿರುವವರ ಸಂಖ್ಯೆ ಬಹಳ ಕಡಿಮೆ, ಮಲೇರಿಯಾ, ಕಾಲರಾ ರೋಗಗಳಿಂದ, ಅಪಘಾತಗಳಿಂದ ಇನ್ನೂ ಹೆಚ್ಚಿನ ಸಂಖ್ಯೆಯ ಜನ ಸತ್ತಿದ್ದಾರೆ ” ಎಂದು ಹೇಳುವ ಮೂಲಕ ಕೊರೋನಾ ಗಂಭೀರ ಸಮಸ್ಯೆಯೇನಲ್ಲ ಎನ್ನುವಂತೆ ಮಾತನಾಡುತ್ತಾರೆ. ನಿಜ, ಅಂಕಿಅಂಶಗಳೇ ನಮ್ಮ ಸಾಮಾಜಿಕ-ಸಾರ್ವಜನಿಕ ಸಂಕಥನಗಳಿಗೆ ಆಧಾರವಾದರೆ ಇದನ್ನು ನಿರಾಕರಿಸಲಾಗುವುದಿಲ್ಲ. ಆದರೆ ಒಂದು ಆಡಳಿತ ವ್ಯವಸ್ಥೆಯ ವಕ್ತಾರರು ಈ ರೀತಿ ಹೇಳುವಾಗ, ಜನಸಾಮಾನ್ಯರ ಸಾವು ಎಷ್ಟು ನಿರ್ಲಕ್ಷಿತ ಎನ್ನುವುದು ತಿಳಿಯುತ್ತದೆ.

ಮನುಷ್ಯರಿಗಿಂತಲೂ ಆರ್ಥಿಕತೆಗೆ ಹೆಚ್ಚು ಪೆಟ್ಟುಬಿದ್ದಿದೆ ಎನ್ನುವ ಹೇಳಿಕೆಯಲ್ಲಿ ನಾವು ನಮ್ಮ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಆಳುತ್ತಿರುವ ಬಂಡವಾಳಶಾಹಿಯ ಅಂತರಾತ್ಮವನ್ನು ಅರ್ಥಮಾಡಿಕೊಳ್ಳಬಹುದು. ಶ್ರಮಿಕರಿಲ್ಲದ ಔದ್ಯಮಿಕ ಪ್ರಗತಿ, ಶ್ರಮವಿಲ್ಲದ ಡಿಜಿಟಲೀಕರಣ ಇದನ್ನೇ ಸೂಚಿಸುತ್ತದೆ.

ಸರಕು ಮತ್ತು ಪದಾರ್ಥಗಳ ಉತ್ಪಾದನೆ, ಸಂಸ್ಕರಣ, ಸರಕು ಮಾರಾಟ ಮತ್ತು ವಿನಿಮಯ, ಸರಕು ವಿತರಣೆ ಮತ್ತು ಶೇಖರಣೆ, ಇದಕ್ಕೆ ಪೂರಕವಾದ ಸೇವಾ ವಲಯ, ಬಂಡವಾಳದ ಕ್ರೋಢೀಕರಣ ಮತ್ತು ಪ್ರಸರಣ ಹಾಗೂ ಮಾರುಕಟ್ಟೆಯ ಲಾಭ ನಷ್ಟ ಈ ಸರಪಳಿಯಲ್ಲಿ ಮನುಷ್ಯ ನಗಣ್ಯನಾಗುವುದು ಅಚ್ಚರಿಯೇನಲ್ಲ. ಇದು ಬಂಡವಾಳ ವ್ಯವಸ್ಥೆಯ ಮೂಲಮಂತ್ರವೂ ಹೌದು. ಹಾಗಾಗಿಯೇ ಕೋಟ್ಯಂತರ ವಲಸೆ ಕಾರ್ಮಿಕರು ಗಣನೆಗೆ ಬಾರದೆ ಹೋಗುತ್ತಾರೆ. ಆರ್ಥಿಕತೆಯ ವ್ಯಾಖ್ಯಾನದಲ್ಲಿ ಜನತೆ ನಗಣ್ಯವಾಗುತ್ತಾರೆ.

ಕೋವಿದ್19 ನಿಂದ ಉಂಟಾಗಿರುವ ಸಾವು ಭಾರತದ ಜನಸಂಖ್ಯೆಗೆ ಹೋಲಿಸಿದರೆ ಅತಿ ಕಡಿಮೆ ಎನ್ನುವ ವಾದವೂ ಕೇಳಿಬರುತ್ತಿದೆ. ಭಾರತದಲ್ಲಿ 7200 ಸಾವುಗಳು ಸಂಭವಿಸಿವೆ. ಕರ್ನಾಟಕದಲ್ಲಿ 70 ಸಾವು ಸಂಭವಿಸಿವೆ. ನಿಜ, ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸಾವಿನ ಪ್ರಮಾಣವೂ ಕಡಿಮೆ. ಹೆಚ್ಚು ಜನರು ಗುಣಮುಖರಾಗುತ್ತಿದ್ದಾರೆ.

ಆದರೆ ಸೋಂಕು ಉಲ್ಬಣಿಸುತ್ತಿರುವ ಪ್ರಮಾಣ ದಿನೇದಿನೇ ಹೆಚ್ಚಾಗುತ್ತಿದೆ. ಮೇ 17ರ ನಾಲ್ಕನೆಯ ಲಾಕ್ ಡೌನ್ ನಂತರದಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ ಒಂದು ಲಕ್ಷ ಅರವತ್ತು ಸಾವಿರ ಏರಿಕೆಯಾಗಿದೆ. ಈಗ ಲಾಕ್ ಡೌನ್ ಸಡಿಲಿಕೆಯ ಸಂದರ್ಭದಲ್ಲಿದ್ದೇವೆ. ಜೂನ್ ತಿಂಗಳಲ್ಲಿ ಲಾಕ್ ಡೌನ್ ಸಡಿಲಿಕೆಯ ನಂತರದಲ್ಲಿ 70 ಸಾವಿರಕ್ಕೂ ಹೆಚ್ಚು ಸೋಂಕಿತರು ಕಂಡುಬಂದಿದ್ದಾರೆ.

ಈ ಸೋಂಕಿತರ ನಡುವೆ ನಾವು ಬದುಕುವುದನ್ನು ಕಲಿಯಬೇಕೆಂದು ಆಡಳಿತ ವ್ಯವಸ್ಥೆ ನಿರೀಕ್ಷಿಸುತ್ತದೆ. ಇದು ವಾಸ್ತವವೂ ಹೌದು. ಏಕೆಂದರೆ ಇಡೀ ಸಮಾಜ ಸಹಜ ಸ್ಥಿತಿಗೆ ಬಂದಿದೆ. ಎಲ್ಲವೂ ಎಲ್ಲೆಡೆಯೂ ಮೊದಲಿನಂತೆಯೇ ದೊರೆಯುತ್ತದೆ. ದೇವ ದೇವತೆಗಳೂ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದು ದರ್ಶನಕ್ಕೆ ಸಿದ್ಧತೆ ನಡೆದಿದೆ. ಸಿನೆಮಾ ಮತ್ತು ಶಾಲೆ ಹೊರತುಪಡಿಸಿ ಉಳಿದೆಲ್ಲವೂ ಮುಕ್ತವಾಗಿದೆ. ಮಾರುಕಟ್ಟೆ ಚುರುಕಾಗುತ್ತಿದೆ.

ಈ ನಡುವೆ ವಲಸೆ ಕಾರ್ಮಿಕರ ಮೂಲಭೂತ ಸಮಸ್ಯೆಗಳು ಮೂಲೆಗೆ ಸರಿದು ಕೊರೋನಾ ಇಡೀ ವಲಸೆ ಕಾರ್ಮಿಕ ಸಮುದಾಯವನ್ನೇ ಆವರಿಸಿಬಿಟ್ಟಿದೆ. ವಲಸೆ ಕಾರ್ಮಿಕರಲ್ಲಿ ಶ್ರಮಿಕರನ್ನು ಎಂದೂ ಕಾಣದವರು “ ನಮ್ಮವರ ಅಸ್ಮಿತೆ ”ಯನ್ನಾದರೂ ಕಾಣುತ್ತಿದ್ದರು. ಈಗ ಧರ್ಮಸ್ಥಳದ ಹೆಗಡೆ ಸಹ ಅವರಿಗೆ ನಿಷೇಧ ಹೇರುತ್ತಿದ್ದಾರೆ. ಏಕೆಂದರೆ ವಲಸೆ ಕಾರ್ಮಿಕರೇ ಸಮಸ್ಯೆಯಾಗಿ ಕಾಣುತ್ತಿದ್ದಾರೆ.

ಏಳುಜನ್ಮಗಳ ಕಾಯಿಲೆ-ಕಸಾಲೆ ಇದ್ದರೂ ಒಮ್ಮೆ ದರ್ಶನ ಭಾಗ್ಯ ಪಡೆದರೆ ಸಕಲ ರೋಗಗಳೂ ಪರಿಹಾರವಾಗುತ್ತವೆ ಎಂದು ಜಗಜ್ಜಾಹೀರು ಮಾಡುತ್ತಿದ್ದ ದೈವೀಕ ಕ್ಷೇತ್ರಗಳು, ಕೇವಲ ಒಂದು ವೈರಾಣು ಸೋಂಕಿಗೆ ಒಳಗಾದವರನ್ನು ನಮ್ಮಲ್ಲಿಗೆ ಬರಬೇಡಿ ಎನ್ನುವಂತಾಗಿದೆ. ಇದು ದೈವತ್ವದ ಅವಸಾನವೋ ಅಥವಾ ದೈವತ್ವದ ಗುತ್ತಿಗೆ ಪಡೆದ ಉದ್ಯಮಿಗಳ ನೈತಿಕ ಅಧಃಪತನವೋ ಊಹೆಗೆ ಬಿಟ್ಟ ವಿಚಾರ.

ಈಗ ದೇವಾಲಯದ ತೀರ್ಥ ವ್ಯರ್ಜ್ಯ ಎನಿಸುತ್ತದೆ. ಆಲ್ಕೋಹಾಲ್ ಇರುವ ಸ್ಯಾನಿಟೈಜರ್ ಅತ್ಯಗತ್ಯ ಎನಿಸುತ್ತದೆ. ಇಷ್ಟಾದರೂ ಕೊರೋನಾ ಪೀಡಿತರಿಗೆ, ಕೊರೋನಾದಿಂದ ಬಾಧಿತರಾಗಿರುವ ಅಸಂಖ್ಯಾತ ವಲಸೆ ಕಾರ್ಮಿಕರಿಗೆ ಧರ್ಮ ಕೇಂದ್ರಗಳು, ಅಧ್ಯಾತ್ಮ ಕೇಂದ್ರಗಳು, ಮಠೋದ್ಯಮಿಗಳು ತಮ್ಮ ಬಾಹುಗಳನ್ನು ತೆರೆದಿಲ್ಲ ಎಂದರೆ, ಬಂಡವಾಳ ವ್ಯವಸ್ಥೆ ಹೇಗೆ ಮಾನವ ಸಮಾಜದ ಅತಿ ಸೂಕ್ಷ್ಮ ವಲಯಗಳನ್ನೂ ಆಕ್ರಮಿಸಿದೆ ಎನ್ನುವುದು ಅರ್ಥವಾಗುತ್ತದೆ. ಪರಿಹಾರ ನಿಧಿಗೆ ದೇಣಿಗೆ ನೀಡುವುದಕ್ಕೂ ನೊಂದ ಜೀವಗಳಿಗೆ ನೆಲೆ ನೀಡುವುದಕ್ಕೂ ವ್ಯತ್ಯಾಸ ಇರುವುದನ್ನು ಇಲ್ಲಿ ಗಮನಿಸಬೇಕು.

ಕೊರೋನಾ ಭಾರತಕ್ಕೆ ಕಾಲಿಟ್ಟ ಜನವರಿ 30 ರಿಂದ ಎರಡನೆ ಲಾಕ್ ಡೌನ್ ಮುಗಿದ ಮೇ 3ರ ಅವಧಿಯಲ್ಲಿ ಭಾರತದಲ್ಲಿ ಮಲೇರಿಯಾದಿಂದ 45 ಸಾವಿರ, ಕ್ಷಯರೋಗದಿಂದ 93 ಸಾವಿರ, ಅತಿಸಾರದಿಂದ 1 ಲಕ್ಷ 28 ಸಾವಿರ, ಕ್ಯಾನ್ಸರ್ ನಿಂದ 1 ಲಕ್ಷ 37 ಸಾವಿರ, ಒಂದು ಲಕ್ಷ ಮಕ್ಕಳು ಹುಟ್ಟಿದ ಒಂದು ತಿಂಗಳ ಒಳಗೆ, ಆರು ಸಾವಿರ ಗರ್ಭಿಣಿಯರು ಸಾವನ್ನಪ್ಪಿದ್ದಾರೆ.

ಇಷ್ಟೆಲ್ಲಾ ಸಾವುಗಳ ನಡುವೆ ಕೊರೋನಾದಿಂದ ಸಾಯುತ್ತಿರುವವರ ಸಂಖ್ಯೆ ಗೌಣ ಎಂದು ಭಾವಿಸುವುದು ಸಹಜ. ಕೊರೋನಾಗೆ ಭಯಪಡಬೇಕಿಲ್ಲ ಎಂದು ಭರವಸೆ ನೀಡಲು ಈ ಅಂಕಿಅಂಶಗಳು ನೆರವಾಗಬಹುದು. ಅದರೆ ಒಂದು ಆಡಳಿತ ವ್ಯವಸ್ಥೆ ಈ ಅಂಕಿಅಂಶಗಳನ್ನು ಮುಂದಿಟ್ಟು, ಕೊರೋನಾ ಬಗ್ಗೆ ಚಿಂತಿಸಬೇಕಿಲ್ಲ ಎಂದು ಹೇಳುವುದು ಹೊಣೆಗೇಡಿತನದ ಪರಮಾವಧಿ ಎನಿಸುತ್ತದೆ.

ಕೊರೋನಾ ಇತ್ತೀಚಿನ ವಿದ್ಯಮಾನ. ಭಾರತದಲ್ಲಿ ಮೇಲೆ ಉಲ್ಲೇಖಿಸಿದ ಆರೋಗ್ಯ ಸಮಸ್ಯೆಗಳಿಂದ ಮತ್ತು ಹಸಿವು ಬಡತನದಿಂದ ಲಕ್ಷಾಂತರ ಮಕ್ಕಳು ಸಾಯುತ್ತಲೇ ಇದ್ದಾರೆ. “ ಅಷ್ಟೊಂದು ಸಾವುಗಳು ಸಂಭವಿಸುತ್ತಿವೆ ಕೊರೋನಾ ಸಾವಿಗೆ ಏಕೆ ಅಷ್ಟೊಂದು ಆತಂಕ ” ಎನ್ನುವ ಧೋರಣೆಯೇ ಆಡಳಿತ ವ್ಯವಸ್ಥೆಯ ಅಮಾನುಷ ದೃಷ್ಟಿಕೋನವನ್ನು ಸೂಚಿಸುತ್ತದೆ.

ಅಸಹಜ ಸಾವು ಎಷ್ಟು ಸಂಭವಿಸುತ್ತಿದೆ ಎನ್ನುವುದಕ್ಕಿಂತಲೂ ಏಕೆ ಸಂಭವಿಸುತ್ತಿದೆ ಎಂದು ಯೋಚಿಸುವುದು ಸಂವೇದನಾಶೀಲ ಧೋರಣೆಯಾಗುತ್ತದೆ. ಕೊರೋನಾ ಸಂದರ್ಭದಲ್ಲೂ ಇದೇ ಧೋರಣೆ ನಮ್ಮಲ್ಲಿ, ಆಡಳಿತ ವ್ಯವಸ್ಥೆಯಲ್ಲಿ ಇರಬೇಕಿತ್ತು. ಆದರೆ ನಾವು ಕೊರೋನಾ ಎಲ್ಲಿಂದ ಹರಡುತ್ತಿದೆ ಎಂದಷ್ಟೇ ಯೋಚಿಸುತ್ತಿರುವುದರಿಂದ ಸೋಂಕಿತರ ಬಗ್ಗೆ ಕಾಳಜಿ ಕ್ಷೀಣಿಸುತ್ತಿದೆ.

ಈ ನಡುವೆ ನಾವು ಬದುಕಲು ಕಲಿಯಬೇಕೆಂದರೆ ಈ ಸಾವುಗಳ ನಡುವೆಯೋ ಅಥವಾ ಉಲ್ಬಣಿಸುತ್ತಿರುವ ರೋಗಗಳ ನಡುವೆಯೋ ? ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುವವರಿಗೆ ಈ ಕನಿಷ್ಠ ಪ್ರಜ್ಞೆ ಇರಬೇಕಲ್ಲವೇ ? ಇಷ್ಟೊಂದು ಅಸಹಜ ಎನಿಸಬಹುದಾದ ಸಾವುಗಳು ಏಕೆ ಸಂಭವಿಸುತ್ತಿವೆ ? ನಮ್ಮಲ್ಲಿ ಇಂದಿಗೂ ಸಾರ್ವತ್ರಿಕ ಆರೋಗ್ಯ ಮತ್ತು ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಸುಸ್ಥಿತಿಯಲ್ಲಿಲ್ಲ ಅಲ್ಲವೇ ? ಕ್ವಾರಂಟೈನ್ ಕೇಂದ್ರಗಳಲ್ಲಿ ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಶೀಲಿಸುವ ವ್ಯವಧಾನವನ್ನೂ ಕಳೆದುಕೊಂಡಿರುವ ಆಡಳಿತ ವ್ಯವಸ್ಥೆ ಕೊರೋನಾ ವೈರಾಣುವಿನ ಸಮುದಾಯ ಪ್ರಸರಣ ಹೆಚ್ಚಾಗುತ್ತಿದ್ದರೂ ಲೆಕ್ಕಿಸದೆ ಇರುವುದು ದುರಂತ.

ಈ ಕುರಿತು ಎಚ್ಚರಿಸುವ, ಕೊರೋನಾ ನಿಯಂತ್ರಣದಲ್ಲಿನ ವೈಫಲ್ಯವನ್ನು ಎತ್ತಿತೋರುವ ವೈದ್ಯರನ್ನು, ತಜ್ಞರನ್ನು ನಿರ್ಲಕ್ಷಿಸುತ್ತಿರುವುದು ಒಂದೆಡೆಯಾದರೆ ಮತ್ತೊಂದೆಡೆ ಕ್ವಾರಂಟೈನ್ ಕೇಂದ್ರಗಳಲ್ಲಿನ ಅವ್ಯವಸ್ಥೆಯ ಬಗ್ಗೆ ಸೊಲ್ಲೆತ್ತುವವರನ್ನು ದೇಶದ್ರೋಹಿಗಳಂತೆ ಕಾಣಲಾಗುತ್ತಿದೆ. ತಮ್ಮ ಅಮೂಲ್ಯ ಸಲಹೆಗಳನ್ನು ಸರ್ಕಾರ ಗಮನಿಸುತ್ತಿಲ್ಲ ಎಂದು ವೈದ್ಯಲೋಕ ಕೂಗಿಕೂಗಿ ಹೇಳುತ್ತಲೇ ಇದೆ.

ಮಾರುಕಟ್ಟೆ ಶಕ್ತಿಗಳ ಕೂಗಿಗೆ ಕ್ಷಣ ಮಾತ್ರದಲ್ಲಿ ಸ್ಪಂದಿಸುವ ಅಧಿಕಾರಸ್ಥರು ವೈದ್ಯಲೋಕದ ಕೂಗನ್ನು ಏಕೆ ನಿರ್ಲಕ್ಷಿಸುತ್ತದೆ ? ಸಚಿವ ಸಿ ಟಿ ರವಿ ಇದಕ್ಕೆ ಸ್ಪಷ್ಟ ಉತ್ತರ ನೀಡುತ್ತಾರೆ “ ಜನಗಳಿಗಿಂತಲೂ ಹೆಚ್ಚು ಬಾಧಿತವಾಗಿರುವುದು ಆರ್ಥಿಕತೆ ”. ಮಾರುಕಟ್ಟೆ ಆರ್ಥಿಕ ವ್ಯವಸ್ಥೆಯಲ್ಲಿ ಜೀವಬೆಲೆ ಇರುವುದಿಲ್ಲ. ಏಕೆಂದರೆ ಜೀವ ಬಿಕರಿಯಾಗುವುದಿಲ್ಲ.

ಸ್ವಾತಂತ್ರ್ಯಾನಂತರದ ಮೊದಲ ನಾಲ್ಕು ದಶಕಗಳಲ್ಲಿ ರೂಪಿಸಲಾದ ಸ್ವಾವಲಂಬಿ ಭಾರತವನ್ನು ನಂತರದ ಮೂರು ದಶಕಗಳಲ್ಲಿ ವ್ಯವಸ್ಥಿತವಾಗಿ ಶಿಥಿಲಗೊಳಿಸಿದ ಆಡಳಿತ ವ್ಯವಸ್ಥೆಯೇ ಇಂದು ಆತ್ಮನಿರ್ಭರತೆಗಾಗಿ ಹಾತೊರೆಯುತ್ತಿದೆ. ಈ ಮೂರು ದಶಕಗಳ ಅವಧಿಯಲ್ಲಿ ತನ್ನ ನೆಲೆಯನ್ನೇ ಕಳೆದುಕೊಂಡಿರುವ ದೇಶದ ಸಾರ್ವತ್ರಿಕ-ಪ್ರಾಥಮಿಕ ಆರೋಗ್ಯ ವ್ಯವಸ್ಥೆಗೆ ಕಾಯಕಲ್ಪ ನೀಡಲು ಇಂದಿಗೂ ನಾವು ತಯಾರಾಗದಿದ್ದರೆ ಬಹುಶಃ ನಮ್ಮ ದೇಶಕ್ಕೆ ಕೊರೋನಾ ಅವಶ್ಯಕತೆಯೇ ಕಾಣುವುದಿಲ್ಲ.

ಖಾಸಗಿ ವೈದ್ಯಕೀಯ ಉದ್ಯಮ ಲೋಕ ಸಾವಿನ ಅಂಚಿನಲ್ಲಿರುವವರಿಗೆ ಮರುಜೀವ ನೀಡಲು ಹರಾಜುಕಟ್ಟೆಗಳನ್ನು ನಿರ್ಮಿಸುತ್ತಿದೆ. ಸತ್ತವರನ್ನೂ ಬದುಕಿಸುವ ಆಶ್ವಾಸನೆಯೊಂದಿಗೆ ತಮ್ಮ ಐಷಾರಾಮಿ ಚಿಕಿತ್ಸಾ ನೆಲೆಗಳನ್ನು ಸಿದ್ಧಪಡಿಸಿರುವ ಈ ಗಂಧರ್ವ ಲೋಕದ ಪ್ರಜೆಗಳಿಗೆ ಕೊರೋನಾ ಸೋಂಕಿತರು ಮನುಷ್ಯರಾಗಿ ಕಾಣಲೇ ಇಲ್ಲ ಎನ್ನುವುದು ದುರಂತ ಅಲ್ಲವೇ ? ಈ ಅಸಹಾಯಕ ಪ್ರಜೆಗಳತ್ತ ಒಮ್ಮೆ ತಿರುಗಿ ನೋಡ್ರಪ್ಪಾ ಎಂದು ಹೇಳುವ ಆತ್ಮಸ್ಥೈರ್ಯವೂ ಆತ್ಮನಿರ್ಭರತೆಯ ಪ್ರತಿಪಾದಕರಿಗೆ ಇಲ್ಲ. ಕಾರಣ ಇದು ಮಾರುಕಟ್ಟೆ. ಜನಸಾಮಾನ್ಯರಿಗೆ ಮಾನ್ಯತೆ ಇಲ್ಲದ ಆರ್ಥಿಕತೆಯ ಒಂದು ಲಾಭದಾಯಕ ವೇದಿಕೆ.

ಈ ವೇದಿಕೆಯ, ಈ ವ್ಯವಸ್ಥೆಯ ಪುನಶ್ಚೇತನಕ್ಕೆ ಪಣತೊಟ್ಟು ಯುದ್ಧೋನ್ಮಾದದಲ್ಲಿ ಮುನ್ನಡೆದಿರುವ ಸರ್ಕಾರಗಳಿಗೆ ಕೊರೋನಾ ವೈರಾಣು ಸಹ ಮಾರುಕಟ್ಟೆಯ ತ್ಯಾಜ್ಯದಂತೆ ಕಾಣುತ್ತಿರಬಹುದು. ಆದರೆ ಮಾರುಕಟ್ಟೆ ಆವರಣದಲ್ಲಿ ತಂತಾನೇ ಕೊಳೆತುಹೋಗುವ ತ್ಯಾಜ್ಯದಂತೆ ಕೊರೋನಾ ಕೊಳೆಯುವುದಿಲ್ಲ. ಅದು ಜನಸಮುದಾಯಗಳ ನಡುವೆ ಹರಡುತ್ತದೆ.

ಈ ಹರಡುವಿಕೆಯ ನಡುವೆ ಜನಸಾಮಾನ್ಯರು ಬದುಕು ಕಲಿಯುವುದೆಂದರೆ ಅರ್ಥವೇನು ? ಅನ್ಯರ ಸಾವನ್ನು ಲೆಕ್ಕಿಸದೆ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ ಎಂದೇ ? ಪಕ್ಕದ ಮನೆಯಲ್ಲಿ ಹೆಣ ಎತ್ತಿದರೆ ಸಾಕು ನಾವು ಸ್ನಾನ ಮಾಡಿ ಊಟ ಮಾಡಬಹುದು ಎನ್ನುವ ಸೂತಕ ಮನೋಭಾವ ಇರುವ ಸಮಾಜ ನಮ್ಮದು. ಈ ಸಮಾಜದಲ್ಲಿ ಅನ್ಯರ ಸಾವು ನಮ್ಮನ್ನು ವಿಚಲಿತಗೊಳಿಸಲು ಸಾಧ್ಯವೇ ?

ಆದರೆ ಸರ್ಕಾರ ವಿಚಲಿತವಾಗಲೇಬೇಕಲ್ಲವೇ ? “ ಲಕ್ಷಾಂತರ ಸಾವಿನ ನಡುವೆಯೇ ಬದುಕುತ್ತಿದ್ದೇವೆ ಸಾವಿರಗಳಿಗೇಕೆ ಚಿಂತೆ ” ಎನ್ನುವ ಧೋರಣೆ ಮಾನವೀಯ ಮೌಲ್ಯಗಳಿಗೆ ನಿಲುಕುವಂತಹುದಲ್ಲ. ಇದು ಸಾರ್ವತ್ರಿಕ ಆರೋಗ್ಯದ ಪ್ರಶ್ನೆ. ಕೊರೋನಾ ನಮ್ಮ ನಡುವೆಯೇ ಇರುತ್ತದೆ ನಿಜ, ಆದರೆ ಸಾವು ಬದುಕಿನ ಸಂಘರ್ಷದಲ್ಲಿ ಕೊರೋನಾ ಮಾನದಂಡವಾಗಕೂಡದು ಅಲ್ಲವೇ ?

ಸಮಾಜದಲ್ಲಿ ಸಂಭವಿಸುವ ಪ್ರತಿಯೊಂದು ಅಸಹಜ ಸಾವಿಗೂ ನೈತಿಕ ಹೊಣೆ ಹೊರುವ ಮಾನವೀಯ ಆಡಳಿತ ವ್ಯವಸ್ಥೆ ನಮಗೆ ಬೇಕಿದೆ. ಇಂತಹ ವ್ಯವಸ್ಥೆಯನ್ನು ನಾವು ರೂಪಿಸಿದ್ದಿದ್ದರೆ ಸೂಕ್ತ ಚಿಕಿತ್ಸೆ ದೊರೆಯಲಾರದೆ ಜನರು ಸಾಯುತ್ತಿರಲಿಲ್ಲ. ಆಕರ್ಷಕ ಪದಪುಂಜಗಳು, ಘೋಷಣೆಗಳು ತಾತ್ಕಾಲಿಕ ಶಮನ ನೀಡುತ್ತವೆ. ಶಾಶ್ವತ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ.

ಭಾರತದ ಜನಸಮುದಾಯಗಳಿಗೆ ಬದುಕುವುದನ್ನು ಕಲಿಸಬೇಕಿಲ್ಲ. ನೋವು, ಅಪಮಾನ, ಹಿಂಸೆ, ಚಿತ್ರಹಿಂಸೆ, ಸಂಕಷ್ಟ ಮತ್ತು ರೋಗ ರುಜಿನಗಳ ನಡುವೆ ಬದುಕಿರುವುದನ್ನು ನೋಡಿದ್ದೇವೆ. ತಮ್ಮ ಅಸ್ಮಿತೆಯೇ ಸಾವಿಗೆ ಆಹ್ವಾನ ನೀಡುವ ಪರಿಸ್ಥಿತಿಯನ್ನೂ ದಿಟ್ಟತನದಿಂದ ಎದುರಿಸಿ ಬದುಕಿರುವುದನ್ನು ನೋಡಿದ್ದೇವೆ. ಕೊರೋನಾ ಅಸ್ಮಿತೆಯನ್ನು ಪ್ರಶ್ನಿಸುವುದಿಲ್ಲ.

ಆದರೆ ಕೊರೋನಾ ನಿಯಂತ್ರಿಸಬೇಕಾದ ಆಡಳಿತ ವ್ಯವಸ್ಥೆಗೆ ಅಸ್ಮಿತೆ ಮುಖ್ಯವಾಗುತ್ತದೆ. ಮಾರುಕಟ್ಟೆ ಮತ್ತು ಪ್ರಜೆ ಎರಡರ ನಡುವೆ ಒಂದನ್ನು ಆಯ್ಕೆ ಮಾಡುವ ನೆಲೆಯಲ್ಲಿ ಮಾರುಕಟ್ಟೆಯ ಅಸ್ಮಿತೆ ಮೇಲುಗೈ ಸಾಧಿಸುತ್ತದೆ. ಹಾಗಾಗಿಯೇ ಎಲ್ಲವೂ ಮುಕ್ತ – ಬದುಕುವುದು ನಿಮ್ಮಿಷ್ಟ ಎನ್ನುವ ಧೋರಣೆಯನ್ನು ಅನುಸರಿಸಲಾಗುತ್ತಿದೆ.

ಈ ದೇಶದ ಸಾರ್ವಭೌಮ ಪ್ರಜೆಗಳು ಆಡಳಿತ ವ್ಯವಸ್ಥೆಗೆ ಮಾಡಬಹುದಾದ ವಿನಂತಿ ಎಂದರೆ “ ಸ್ವಾಮಿ, ನಾವು ಬದುಕಲು ಕಲಿಯಬೇಕಿಲ್ಲ, ಸಾವಿನೊಂದಿಗೂ ಬದುಕಿ ನಿರೂಪಿಸಿದ್ದೇವೆ. ಆದರೆ ನೀವು ಸಾವುಗಳತ್ತ ಗಮನ ಹರಿಸಿ. ಮಾರುಕಟ್ಟೆ ವ್ಯವಸ್ಥೆ ಆರೋಗ್ಯವಂತರನ್ನೂ ಕೊಲ್ಲುತ್ತದೆ. ಈ ದೇಶದ ವಲಸೆ ಕಾರ್ಮಿಕರೇ ಇದಕ್ಕೆ ಸಾಕ್ಷಿ. ಮಾರುಕಟ್ಟೆ ಪುನಶ್ಚೇತನಗೊಂಡರೂ ಈ ಸಾವುಗಳು ನಿಲ್ಲುವುದಿಲ್ಲ. ಕನಿಷ್ಠ ಪಕ್ಷ ಕೊರೋನಾದಿಂದಾದರೂ ಜನರನ್ನು ರಕ್ಷಿಸಿ. ನಮಗೆ ಮಾತನಾಡಲು ಅವಕಾಶ ಕೊಡಿ ”. ಕೊರೋನಾಗೆ ಕಣ್ಣು ಕಿವಿ ಇಲ್ಲ, ಸರ್ಕಾರಕ್ಕೆ ಇರಲೇಬೇಕಲ್ಲವೇ..?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Published

on

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending