ದಿನದ ಸುದ್ದಿ
ದಾವಣಗೆರೆ ಕೋವಿಡ್-19 | ಮೂವರು ಗುಣಮುಖ, ಹೂ ಮಳೆ ಸುರಿಸಿ ಬೀಳ್ಕೊಡುಗೆ : ವಿಡಿಯೋ ನೋಡಿ
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಬುಧವಾರ ಸಂತಸದ ವಾತಾವರಣ ಏರ್ಪಟ್ಟಿದ್ದು, ವೈದ್ಯರಲ್ಲಿ ಸಂಭ್ರಮ ತುಂಬಿಕೊಂಡಿತ್ತು. ಇದಕ್ಕೆ ಮುಖ್ಯ ಕಾರಣ ಕೊರೊನಾದಿಂದ ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ಕ್ಷಣವಾಗಿತ್ತು.
ಕೊರೊನಾದಿಂದ ಗುಣಮುಖರಾದ ಮೂವರನ್ನು ಬುಧವಾರ ಆಸ್ಪತ್ರೆಯಿಂದ ಸಂತಸದಿಂದ ಬೀಳ್ಕೊಡಲಾಯಿತು. ಕೊರೊನಾ ಪಾಸಿಟಿವ್ ಬಾಧಿತರಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮೂವರು ಸಂಪೂರ್ಣ ಗುಣಮುಖರಾಗಿದ್ದು, ಇವರನ್ನು ಇಂದು ಜಿಲ್ಲಾಡಳಿತ ಹಾಗೂ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ಹೂ ಮಳೆ ಸುರಿಸಿ, ಚಪ್ಪಾಳೆ ತಟ್ಟುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಇದು ಎರಡನೇ ಕಂತಿನ ಬಿಡುಗಡೆಯಾಗಿದೆ. ಈ ಮೊದಲು ಮೂವರು ಗುಣಮುಖರಾಗಿದ್ದರು. ಬಳಿಕ ಇದೀಗ ಒಟ್ಟು ಏಳು ಜನರನ್ನು ಬಿಡುಗಡೆ ಮಾಡಲು ಸರ್ಕಾರವೂ ಅನುಮತಿಸಿದ್ದು, ಬಿಡುಗಡೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಅದರಲ್ಲಿ ಇಂದು ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನುಳಿದ ನಾಲ್ವರು ಕೋವಿಡ್ ಅಲ್ಲದೆ ಹೃದಯ ಹಾಗೂ ಇನ್ನಿತರ ಬೇರೆ ಸಮಸ್ಯೆಯಿಂದ ಬಳಲುತ್ತಿರುವವರಿದ್ದಾರೆ. ಅವರನ್ನು ಬೇರೆ ಆಸ್ಪತ್ರೆಗೆ ಸೇರಿಸಲು ಸೂಚಿಸಲಾಗಿದ್ದು, ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿಎಚ್ಒ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಜಿಲ್ಲಾ ಶಸ್ತ್ರಚಿತ್ಸಕ ಸುಭಾಷಚಂದ್ರ ಇದ್ದರು.
ವಿಡಿಯೋ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243