Connect with us

ದಿನದ ಸುದ್ದಿ

ಕೊರೋನ ಕಾಲದಲ್ಲಿ ಹೃದಯವನ್ನು ಕಾಪಾಡಿ..!

Published

on

  • ಶ್ರೀನಿವಾಸ ಕಕ್ಕಿಲಾಯ

ಕೊರೋನ ಸೋಂಕಿನ ನೆಪದಲ್ಲಿ ಆಗಿರುವ ಸಮಸ್ಯೆಗಳಿಗೆ ಲೆಕ್ಕವಿಲ್ಲ. ಕೊರೋನ ಸೋಂಕಿಗೆ ಹೊರತಾದ ಇತರ ಸಮಸ್ಯೆಗಳನ್ನು ಹೊಂದಿರುವವರಿಗೆ, ಅದರಲ್ಲೂ, ಹೃದ್ರೋಗ, ಪಾರ್ಶ್ವವಾಯು, ಕ್ಯಾನ್ಸರ್ ಆದವರಿಗೆ, ತುರ್ತು ಸಮಸ್ಯೆಗಳಾದವರಿಗೆ ಹಾಗೂ ಗರ್ಭಿಣಿಯರಿಗೆ, ಕ್ಲಪ್ತ ಸಮಯದಲ್ಲಿ ಸೂಕ್ತ ಆರೋಗ್ಯ ಸೇವೆಗಳನ್ನು ಪಡೆಯುವುದಕ್ಕೆ ಬಹಳಷ್ಟು ಕಷ್ಟಗಳಾಗಿವೆ.

ಕೊರೋನ ಸೋಂಕನ್ನು ನಿಯಂತ್ರಿಸುವ ಹೆಸರಲ್ಲಿ ಅತಿ ಕಠಿಣ ದಿಗ್ಬಂಧನ ವಿಧಿಸಿದ್ದರಿಂದ ಜನರು ಆಸ್ಪತ್ರೆಗೆ ಹೋಗುವುದಕ್ಕೆ ಅಡ್ಡಿಗಳಾದವು. ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನ ಪೀಡಿತರಿಗೆ ಹೊರರೋಗಿ, ಒಳರೋಗಿ ಚಿಕಿತ್ಸೆ ನೀಡುವಂತೆ ಕಡ್ಡಾಯ ನಿಯಮಗಳನ್ನು ಮಾಡಿದ್ದರಿಂದ, ಅನ್ಯ ರೋಗಿಗಳ ಚಿಕಿತ್ಸೆಗೆ ಸಮಸ್ಯೆಗಳಾದವು.

ಕೊರೋನ ಬಗ್ಗೆ ವಿಪರೀತವಾದ ಭೀತಿಯನ್ನು ಹುಟ್ಟಿಸಿದ್ದರಿಂದ ಅನ್ಯ ಸಮಸ್ಯೆಗಳುಳ್ಳವರು ವೈದ್ಯರ ಬಳಿಗೆ, ಆಸ್ಪತ್ರೆಗಳಿಗೆ ಹೋಗುವುದಕ್ಕೆ ಅಂಜುವಂತೆ ಆಯಿತು. ಅನ್ಯ ರೋಗಗಳಿಗಾಗಿ ಆಸ್ಪತ್ರೆಗಳಿಗೆ ಬಂದವರೆಲ್ಲರಿಗೆ, ಹೆರಿಗೆಗಾಗಿ ಬಂದ ಎಲ್ಲಾ ಗರ್ಭಿಣಿಯರಿಗೆ ಕೊರೋನ ಲಕ್ಷಣಗಳಿಲ್ಲದಿದ್ದರೂ ಕಡ್ಡಾಯವಾಗಿ ಕೊರೋನ ಪರೀಕ್ಷೆ ಮಾಡಿ, ಆ ಬಳಿಕವೇ ಚಿಕಿತ್ಸೆ ನೀಡುವುದೆಂಬ ವ್ಯವಸ್ಥೆ ಮಾಡಿದ್ದು ಇನ್ನಷ್ಟು ಆತಂಕ, ಹೆದರಿಕೆ, ಗೊಂದಲಗಳಿಗೆ ಕಾರಣವಾಯಿತು.

ಕೊರೋನ ಒಂದೇ ಮಹಾವ್ಯಾಧಿ ಎಂಬಂತೆ ಎಲ್ಲವನ್ನೂ ಮುಚ್ಚಿ ಹಾಕಿದ ನಂತರದ ಈ ಆರು ತಿಂಗಳಲ್ಲಿ ಅನೇಕರು ತಮ್ಮ ಬಂಧುಮಿತ್ರರನ್ನು ಹೃದಯಾಘಾತದ ಕಾರಣಕ್ಕೆ ಕಳೆದುಕೊಂಡಿದ್ದಾರೆ. ಈ ಕೊರೋನ ಕಾಲದಲ್ಲಿ ಹೃದ್ರೋಗದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ 35% ಇಳಿಕೆಯಾಗಿದೆ.

ಆದರೆ ಹೃದ್ರೋಗಗಳಿಂದ ಸಾವುಂಟಾಗುವ ಪ್ರಮಾಣದಲ್ಲಿ 4% ಏರಿಕೆಯಾಗಿದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕರೂ, ಹಿರಿಯ ಹೃದ್ರೋಗ ತಜ್ಞರೂ ಆಗಿರುವ ಡಾ|| ಸಿ.ಎನ್. ಮಂಜುನಾಥ್ ಹೇಳಿರುವುದು, ಇನ್ನೊಂದೆಡೆ, ಹಲವರು ತಮ್ಮ ಮನೆಗಳಲ್ಲೇ ಹೃದಯಾಘಾತದಿಂದ ಮೃತರಾದರು ಎಂಬ ವರದಿಗಳಾಗುತ್ತಿರುವುದು, ಹೃದ್ರೋಗದ ಲಕ್ಷಣಗಳಿರುವವರು ಆಸ್ಪತ್ರೆಗೆ ಹೋಗಲು ಹಿಂಜರಿಯುತ್ತಿದ್ದಾರೆ, ಅಥವಾ ಹೋಗಲು ಸಾಧ್ಯವಾಗುತ್ತಿಲ್ಲ, ಅಥವಾ ತೀರಾ ತಡವಾಗಿ ಹೋಗುತ್ತಿದ್ದಾರೆ ಎನ್ನುವುದನ್ನು ಸೂಚಿಸುತ್ತವೆ.

ಇದಲ್ಲದೆ, ಕೊರೋನ ಸೋಂಕು ಕೂಡ ದೇಹದಲ್ಲಿ ಉರಿಯೂತವನ್ನು ಹೆಚ್ಚಿಸುತ್ತದೆ, ರಕ್ತವು ಹೆಪ್ಪುಗಟ್ಟುವುದನ್ನು ಪ್ರಚೋದಿಸುತ್ತದೆ. ಆದ್ದರಿಂದ ಅದಾಗಲೇ ರಕ್ತನಾಳಗಳಲ್ಲಿ ಸಮಸ್ಯೆಯಿದ್ದವರಿಗೆ ಕೊರೋನ ಸೋಂಕು ತಗಲಿದರೆ ಹೃದಯಾಘಾತವಾಗುವುದಕ್ಕೆ, ಹೃದಯದ ಸ್ನಾಯುಗಳಿಗೆ ಸಮಸ್ಯೆಯಾಗುವುದಕ್ಕೆ ಕಾರಣವಾಗಬಹುದು.

ಒಟ್ಟಿನಲ್ಲಿ, ಹೃದಯದ ರಕ್ತನಾಳಗಳಲ್ಲಿ ಸಮಸ್ಯೆಗಳಿರುವವರಿಗೆ ಈ ಕೊರೋನ ಸೋಂಕು ಕಷ್ಟಕರವಾಗಿ ಪರಿಣಮಿಸಿದೆ. ಆದ್ದರಿಂದ ಅವರೆಲ್ಲರೂ ವಿಶೇಷ ಎಚ್ಚರಿಕೆಗಳನ್ನು ವಹಿಸಬೇಕು, ರಕ್ತನಾಳಗಳ ಸಮಸ್ಯೆಯಿಂದ ಹೃದಯದ ಸ್ನಾಯುಗಳಿಗೆ ರಕ್ತ ಪೂರೈಕೆಯಲ್ಲಿ ಕೊರತೆಯಾಗುತ್ತಿರುವ ಯಾವುದೇ ಲಕ್ಷಣಗಳು ಗೋಚರಿಸಿದರೆ ತಕ್ಷಣವೇ ಅದಕ್ಕೆ ತಕ್ಕ ಪರೀಕ್ಷೆಗಳನ್ನು ಮತ್ತು ಚಿಕಿತ್ಸೆಯನ್ನು ಪಡೆಯಬೇಕು.

ವ್ಯಕ್ತಿಯು ಯಾವುದೇ ಕೆಲಸವನ್ನು ಮಾಡುವಾಗ ಹೃದಯದ ಸ್ನಾಯುಗಳಿಗೆ ಇನ್ನಷ್ಟು ರಕ್ತವು ಹರಿಯಬೇಕಾಗುತ್ತದೆ. ಹೃದಯದ ರಕ್ತನಾಳಗಳಲ್ಲಿ ಸಮಸ್ಯೆಯಾಗಿ, ಅವುಗಳಲ್ಲಿ ರಕ್ತಸಂಚಾರಕ್ಕೆ ಅಡ್ಡಿಯಾಗುತ್ತಿದ್ದರೆ ಹೆಚ್ಚುವರಿಯಾಗಿ ರಕ್ತವನ್ನು ಹರಿಯುವುದಕ್ಕೆ ಸಾಧ್ಯವಾಗುವುದಿಲ್ಲ.

ಆದ್ದರಿಂದ, ಹೃದಯದ ರಕ್ತನಾಳಗಳಲ್ಲಿ ಸಮಸ್ಯೆಯಿದ್ದವರು ಯಾವುದೇ ಕೆಲಸವನ್ನು ಹೆಚ್ಚು ಮಾಡತೊಡಗಿದಾಗ ಕಷ್ಟವೆನಿಸತೊಡಗುತ್ತದೆ. ಈ ಕಷ್ಟವು ಹಲವು ಬಗೆಯಲ್ಲಿ ವ್ಯಕ್ತವಾಗಬಹುದು. ಹೃದಯದ ಸಮಸ್ಯೆಯುಳ್ಳವರಿಗೆ ಎದೆ ನೋವುಂಟಾಗುತ್ತದೆ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆಯಾದರೂ ಅದು ಸಂಪೂರ್ಣ ಸತ್ಯವಲ್ಲ; ಹೃದ್ರೋಗವುಳ್ಳವರಿಗೆ ಎದೆ ನೋವು ಇಲ್ಲದಿರಬಹುದು, ಅದರ ಬದಲಿಗೆ ಇತರ ಲಕ್ಷಣಗಳಿರಬಹುದು, ಎದೆ ನೋವು ಹೃದ್ರೋಗವಲ್ಲದೆ ಇತರ ಹಲವು ಕಾರಣಗಳಿಂದಲೂ ಉಂಟಾಗಬಹುದು. ಹಾಗಾಗಿ, ಹೃದ್ರೋಗವು ಹೆಚ್ಚು ಸಾಮಾನ್ಯವಾಗುತ್ತಿರುವಾಗ, ಯುವಜನರಲ್ಲೂ ಕಾಣಿಸಿಕೊಳ್ಳುತ್ತಿರುವಾಗ, ಹೃದ್ರೋಗದ ಲಕ್ಷಣಗಳ ಬಗ್ಗೆ ಎಲ್ಲರಲ್ಲೂ ಸ್ಪಷ್ಟವಾದ ಅರಿವಿರುವುದು ಒಳ್ಳೆಯದು.

ಹೃದಯದ ರಕ್ತನಾಳಗಳ ಕಾಯಿಲೆಯಿದ್ದರೆ, ಹೃದ್ರೋಗದ ಸಮಸ್ಯೆಯಿದ್ದರೆ, ವ್ಯಕ್ತಿಯು ಶ್ರಮ ವಿನಿಯೋಗಿಸಿದಾಗ ಹೃದಯಕ್ಕೆ ಅದನ್ನು ನಿಭಾಯಿಸುವುದಕ್ಕೆ ಕಷ್ಟವಾಗುತ್ತದೆ, ಅದು ಬೇರೆ ಬೇರೆ ರೀತಿಗಳಲ್ಲಿ ಪ್ರಕಟಗೊಳ್ಳಬಹುದು. ವ್ಯಕ್ತಿಯು ನಿತ್ಯದಂತೆ ನಡೆದಾಡುವಾಗ, ಮೆಟ್ಟಲುಗಳನ್ನೇರುವಾಗ, ಕೆಲಸಗಳನ್ನು ಮಾಡುವಾಗ ಅಥವಾ ತುಂಬು ಊಟವನ್ನು ಮಾಡಿದಾಗ ದೇಹದ ಆಯಾ ಭಾಗಗಳಿಗೆ ಹೆಚ್ಚಿನ ರಕ್ತ ಪೂರೈಕೆಯ ಅಗತ್ಯವುಂಟಾಗುವುದರಿಂದ ಇಂಥ ಸಂದರ್ಭಗಳಲ್ಲಿ ಹೃದ್ರೋಗವನ್ನು ಸೂಚಿಸುವ ಲಕ್ಷಣಗಳು ಅನುಭವಕ್ಕೆ ಬರುತ್ತವೆ.

ಹೃದಯದ ಸ್ನಾಯುಗಳಲ್ಲಿ ನೋವನ್ನು ಗ್ರಹಿಸುವ ನರಗಳಿಲ್ಲದಿರುವುದರಿಂದ ನಮ್ಮ ಕೈಕಾಲುಗಳಿಗೆ ಗಾಯವಾದಾಗ ಉಂಟಾಗುವಂಥ ನೋವು ಹೃದಯದ ಸಮಸ್ಯೆಗಳಲ್ಲಿ ಉಂಟಾಗುವುದಿಲ್ಲ. ಬದಲಿಗೆ ಹೃದಯದ ಸುತ್ತುಮುತ್ತಲಿನ ಅಂಗಗಳಲ್ಲಿ ಬಗೆಬಗೆಯ ವೇದನೆಗಳು, ಅಥವಾ ‘ಕಷ್ಟಗಳು’, ಕಂಡುಬರಬಹುದು.

ನಡೆದಾಡುವಾಗ ಅಥವಾ ದುಡಿಯುವಾಗ ಅಥವಾ ತುಂಬು ಊಟ ಮಾಡಿದಾಗ ಕುತ್ತಿಗೆ ಅಥವಾ ಗಂಟಲು ಅಥವಾ ಎದೆ ಬಿಗಿದಂತಾಗುವುದು ಅಥವಾ ಭಾರವೆನಿಸುವುದು, ಎದೆ ಅಥವಾ ಗಂಟಲು ಅಥವಾ ಹೊಟ್ಟೆಯ ಮೇಲ್ಭಾಗದಲ್ಲಿ ಉಬ್ಬಿ ಬಂದಂತಾಗುವುದು (‘ಗ್ಯಾಸ್’ ತುಂಬಿದಂತಾಗುವುದು), ಎದೆ ಹಿಂಡಿದಂತಾಗುವುದು ಅಥವಾ ನೋವಾಗುವುದು (ಎದೆಯ ಎಡ, ಬಲ, ಮಧ್ಯ, ಎಲ್ಲೇ ಆಗಿರಬಹುದು), ಭುಜ, ತೋಳು, ದವಡೆ, ಕತ್ತಿನ ಬದಿಗಳು, ಬೆನ್ನಿನ ಮೇಲ್ಭಾಗಗಳಲ್ಲಿ ಸೆಳೆದಂತಾಗುವುದು ಅಥವಾ ನೋಯುವುದು, ಆಯಾಸವಾಗುವುದು, ಉಸಿರಾಡಲು ಕಷ್ಟವೆನಿಸುವುದು, ಎದೆ ಬಡಿತ ಹೆಚ್ಚುವುದು, ತಲೆ ಸುತ್ತುವುದು, ಇತ್ಯಾದಿಗಳೆಲ್ಲವೂ ಹೃದ್ರೋಗದ ಲಕ್ಷಣಗಳಾಗಿರಬಹುದು.

ಆದ್ದರಿಂದ ಯಾರಲ್ಲೇ ಆಗಲಿ, ಯಾವುದೇ ಶ್ರಮವುಳ್ಳ ಕೆಲಸಗಳಲ್ಲಿ ತೊಡಗಿದಾಗ ಹೊಕ್ಕಳಿಂದ ಮೇಲಕ್ಕೆ ಯಾವುದೇ ಅನುಭವಗಳಾದರೆ, ಮತ್ತು ಪ್ರತೀ ಬಾರಿ ಅದೇ ಕೆಲಸವನ್ನು ಮಾಡುವಾಗ ಆ ತೊಂದರೆಯು ಮರುಕಳಿಸುತ್ತಿದ್ದರೆ, ಅದನ್ನು ಹೃದ್ರೋಗದ ಸೂಚನೆಯೆಂದು ಪರಿಗಣಿಸುವುದೇ ಒಳ್ಳೆಯದು.

ಯಾವುದೇ ಶ್ರಮದ ಕೆಲಸವನ್ನು ಮಾಡುವಾಗ ಇಂತಹ ಲಕ್ಷಣಗಳುಳ್ಳವರು ಕೂಡಲೇ ತಜ್ಞ ವೈದ್ಯರನ್ನು ಕಾಣಲೇ ಬೇಕು ಮತ್ತು ಹೃದ್ರೋಗಕ್ಕೆ ಪರೀಕ್ಷೆಗಳನ್ನು ನಡೆಸುವಂತೆ ಒತ್ತಾಯಿಸಬೇಕು. ಕೆಲವೊಮ್ಮೆ ವೈದ್ಯರು ಕೂಡ ಈ ಲಕ್ಷಣಗಳನ್ನು ಲಘುವಾಗಿ ಪರಿಗಣಿಸಿ, ‘ಗ್ಯಾಸಿಗೋ’, ನೋವಿಗೋ ಮಾತ್ರೆಗಳನ್ನು ಕೊಟ್ಟು ಕಳುಹಿಸಬಹುದು, ಅದರಿಂದ ಹೃದ್ರೋಗದ ಪರೀಕ್ಷೆಗಳು ನಡೆಯದೆ ಸಮಸ್ಯೆಗಳಾಗಬಹುದು.

ಇಂಥ ಲಕ್ಷಣಗಳಿದ್ದವರು ಈ ಕೊರೋನ ಕಾಲದಲ್ಲಿ ಪರೀಕ್ಷೆಗೆ ಹೋಗಲು ಹಿಂಜರಿದಿರುವುದು, ವೈದ್ಯರು ಲಭ್ಯವಾಗದಿರುವುದು, ಹಾಗೊಮ್ಮೆ ದೊರೆತರೂ ಕೊರೋನ ಕಳೆಯಲಿ ಎಂದು ಮುಂದಕ್ಕೆ ಹಾಕಿರುವುದು, ಹೃದಯದ ಪರೀಕ್ಷೆಗೆ ಮುನ್ನ ಕೊರೋನ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದಾಗ ಒಪ್ಪದೆ ವಿಮುಖರಾಗಿರುವುದು ಎಲ್ಲವೂ ಘಟಿಸಿವೆ, ಅದರಿಂದ ಕೆಲವರಿಗೆ ಅಪಾಯಗಳಾಗಿರುವ ಸಾಧ್ಯತೆಗಳು ಇದ್ದೇ ಇವೆ.

ಆದ್ದರಿಂದ ಯಾರಿಗೇ ಆಗಲಿ, ಮೇಲೆ ಹೇಳಿದ ಲಕ್ಷಣಗಳಿದ್ದರೆ ಕೂಡಲೇ ಇಸಿಜಿ, ಅಥವಾ ಇನ್ನೂ ಒಳ್ಳೆಯದಾಗಿ, ಹೃದಯತಜ್ಞರನ್ನು ಕಂಡು ಟ್ರೆಡ್ ಮಿಲ್ ಪರೀಕ್ಷೆ ಇತ್ಯಾದಿ ಮಾಡಿಸಿಕೊಳ್ಳಬೇಕು, ಅದರಲ್ಲೇನಾದರೂ ಹೃದ್ರೋಗದ ಸೂಚನೆಗಳು ಕಂಡುಬಂದು ಇನ್ನಷ್ಟು ಉನ್ನತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕೆಂದು ವೈದ್ಯರು ಹೇಳಿದರೆ ಹಿಂಜರಿಯದೆ ಮಾಡಿಸಿಕೊಳ್ಳಬೇಕು.

ಹೃದಯದ ರಕ್ತನಾಳಗಳ ಕಾಯಿಲೆಗೆ ನಮ್ಮ ಆಧುನಿಕ ಆಹಾರವೇ ಅತಿ ಮುಖ್ಯ ಕಾರಣವಾಗಿದೆ. ಅದರ ಜೊತೆಗೆ, ವ್ಯಾಯಾಮವಿಲ್ಲದ ಜೀವನ, ಧೂಮಪಾನ, ಮದ್ಯಪಾನಗಳು ಕೂಡ ಕಾರಣಗಳಾಗಿವೆ. ಸಕ್ಕರೆ, ಎಲ್ಲಾ ಸಿಹಿ ತಿನಿಸುಗಳು, ಹಣ್ಣು ಮತ್ತು ಹಣ್ಣಿನ ರಸಗಳು (ಹಣ್ಣು – ತರಕಾರಿ ಸೇವಿಸಿದರೆ ಒಳ್ಳೆಯದು ಎಂದೇ ಹೆಚ್ಚಿನ ವೈದ್ಯರು ಹೇಳುತ್ತಿರುತ್ತಾರೆ, ಆದರೆ ಹಣ್ಣು ಮತ್ತು ತರಕಾರಿ ಒಂದೇ ಅಲ್ಲ, ಬೇರೆ ಬೇರೆಯೇ ಆಗಿವೆ ಎಂಬುದನ್ನು ಗಮನಿಸಿ, ಹಣ್ಣು ಅಂದರೆ ಸಕ್ಕರೆ, ಅಷ್ಟೇ), ಸಂಸ್ಕರಿತ ತಿನಿಸುಗಳು (ಮೈದಾ, ಬ್ರೆಡ್ಡು, ಬಿಸ್ಕತ್ತು ಇತ್ಯಾದಿ), ರಿಫೈನ್ಡ್ ಎಣ್ಣೆ, ಕರಿದ ತಿನಿಸುಗಳು ಮತ್ತು ವಿಪರೀತ ಪ್ರಮಾಣದಲ್ಲಿ ಧಾನ್ಯಗಳ ಸೇವನೆ ಹೃದ್ರೋಗವೂ ಸೇರಿದಂತೆ ಎಲ್ಲಾ ಆಧುನಿಕ ರೋಗಗಳಿಗೆ ಮುಖ್ಯ ಕಾರಣಗಳಾಗಿವೆ. ಇವೆಲ್ಲವನ್ನು ತ್ಯಜಿಸಿ, ನಿಯತವಾಗಿ ವ್ಯಾಯಾಮ ಮಾಡಿದರೆ ಈ ರೋಗಗಳನ್ನು ದೂರವಿಡಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ದಿನದ ಸುದ್ದಿ

ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ

Published

on

ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಗಂಭೀರ ಆರೋಪ ಮಾಡಿದೆ.

ಕೇವಲ 20 ವಿದ್ಯಾರ್ಥಿಗಳಿಂದ ಆರಂಭವಾದ ಈ ಸಂಸ್ಥೆಯು ಇಂದು ವಿವಿಐಎಸ್ ಶಾಲೆ, ಕೆಬಿಸಿ ಪಿಯು ಕಾಲೇಜು ಮತ್ತು ವಿವಿ ಪದವಿ ಕಾಲೇಜುಗಳನ್ನು ಹೊಂದಿದೆ. ಬಡ ಕೂಲಿ ಕಾರ್ಮಿಕರು ಮತ್ತು ವಲಸೆ ಕುಟುಂಬಗಳ 600ಕ್ಕೂ ಹೆಚ್ಚು ಮಕ್ಕಳು ಇಲ್ಲಿ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪದವಿ ಕಾಲೇಜು ಆರಂಭಿಸಲು ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದ ಖಾಲಿ ಕಟ್ಟಡವನ್ನು 5 ವರ್ಷಗಳ ಅವಧಿಗೆ ಬಾಡಿಗೆಗೆ ಪಡೆಯಲಾಗಿತ್ತು. ವಿಠಲಗಿರಿಧಾಮದ ಮಠಾಧೀಶರಾದ ಶ್ರೀ ನಿರ್ಮಲಾನಂದ ಪುರಿ ಅವರು ಪ್ರತಿ ವರ್ಷ 5% ಬಾಡಿಗೆ ಹೆಚ್ಚಳದ ಷರತ್ತಿನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.

ಸಂಸ್ಥೆಯ ಅಧ್ಯಕ್ಷರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ಖಾಲಿ ಇದ್ದ ದೊಡ್ಡ ಕೊಠಡಿಗಳಿಗೆ ವಿಭಜನೆ, ಬಾಗಿಲುಗಳನ್ನು ಅಳವಡಿಸಿ, ಫರ್ನಿಚರ್ ತುಂಬಿ ತರಗತಿಗಳನ್ನು ಆರಂಭಿಸಿದರು. ಕಳೆದ 7 ವರ್ಷಗಳಿಂದ ಈ ಕಟ್ಟಡದಲ್ಲಿಯೇ ತರಗತಿಗಳು ನಡೆಯುತ್ತಿದ್ದು, ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅದೇ ಮಠದ ಮತ್ತೊಂದು ಭಾಗವನ್ನು “ಟಾಮ್ ಅಂಡ್ ಜೆರ್ರಿ” ವಿಶೇಷ ಮಕ್ಕಳ ಶಾಲೆಗೆ ಬಾಡಿಗೆಗೆ ನೀಡಲಾಗಿದೆ.

ಆದರೆ ಕಳೆದ 3 ವರ್ಷಗಳಿಂದ ಶ್ರೀ ನಿರ್ಮಲಾನಂದ ಪುರಿ ಮತ್ತು ಅವರ ಹಿಂಬಾಲಕರು ಶೈಕ್ಷಣಿಕ ವಾತಾವರಣಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕಾಲೇಜಿನ ಸಿಬ್ಬಂದಿಯ ಮೇಲೆ ಅವಾಚ್ಯ ಶಬ್ದಗಳ ಪ್ರಯೋಗ, ಪರೀಕ್ಷಾ ಸಮಯದಲ್ಲಿ ಸ್ವಾಮೀಜಿಯ ಹಿಂಬಾಲಕರು ಕಾಲೇಜಿನ ಒಳಗೆ ನುಗ್ಗಿ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ಹರಡುವ ಮೂಲಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆಡಳಿತ ಮಂಡಳಿ ದೂರಿದೆ.

ಇದರ ಜೊತೆಗೆ ಇನ್ನೊಂದು ಗಂಭೀರ ಆರೋಪ ಕೇಳಿಬಂದಿದೆ. ವಿಠಲ ರುಕ್ಮಿಣಿ ಮಠದ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನನ್ನು *”ಗೋಶಾಲೆ ಮತ್ತು ವೃದ್ಧಾಶ್ರಮ”*ಕ್ಕಾಗಿ ಮಂಜೂರು ಮಾಡಲಾಗಿದೆ. ಆದರೆ ಮಂಜೂರಾದ ಉದ್ದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಜಮೀನನ್ನು ವಾಣಿಜ್ಯ ಉದ್ದೇಶಕ್ಕಾಗಿ ಹಂತಹಂತವಾಗಿ ಬಾಡಿಗೆಗೆ ನೀಡಲಾಗುತ್ತಿದೆ.

ಸಭಾಂಗಣದಲ್ಲಿದ್ದ ದೇವರ ಮೂರ್ತಿಯನ್ನು ಸಹ ಹಣಕ್ಕಾಗಿ ಬೇರೆ ಕಡೆಗೆ ವರ್ಗಾಯಿಸಿ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗಿದೆ. ಸರ್ಕಾರವು ಈ ಜಾಗವನ್ನು ಗೋಶಾಲೆ ಮತ್ತು ವೃದ್ಧಾಶ್ರಮ ನಡೆಸುವುದಕ್ಕೆ ಮಂಜೂರು ಮಾಡಿದ್ದರೂ, ಇಲ್ಲಿ ಯಾವುದೇ ಗೋಶಾಲೆ ಅಥವಾ ವೃದ್ಧಾಶ್ರಮ ನಡೆಯುತ್ತಿಲ್ಲ. ಮಠದ ಆಸ್ತಿಯನ್ನು ಸ್ವಾಮೀಜಿ ಮತ್ತು ಅವರ ಹಿಂಬಾಲಕರು ಕಮರ್ಷಿಯಲ್ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಆಡಳಿತ ಮಂಡಳಿಯ ಆರೋಪ.

ಈ ಬೆಳವಣಿಗೆಯಿಂದಾಗಿ ಕಾಲೇಜಿನಲ್ಲಿ ಓದುತ್ತಿರುವ ನೂರಾರು ಬಡ ವಿದ್ಯಾರ್ಥಿಗಳ ಭವಿಷ್ಯ ಪ್ರಶ್ನಾರ್ಥಕವಾಗಿದೆ. ಕಂದಾಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ತನಿಖೆ ನಡೆಸಿ ಮಠದ ಸ್ವಾಮೀಜಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಆಡಳಿತ ಮಂಡಳಿ ಮತ್ತಷ್ಟು ಆರೋಪಿಸಿರುವ ಪ್ರಕಾರ, ಮಠದ ಸ್ವಾಮೀಜಿ ಸಾರ್ವಜನಿಕವಾಗಿ “ಮಠದ ಆಸ್ತಿಯನ್ನು ಸರ್ಕಾರದಿಂದ 54 ಲಕ್ಷ ರೂ.ಗೆ ಖರೀದಿ ಮಾಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ. ಅವರ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಒಬ್ಬ ವೃದ್ಧ ಮಹಿಳೆಯನ್ನು ಮೋಸ ಮಾಡಿ ಸೈಟ್ ಕಬಳಿಕೆ ಮಾಡಿ ಬೇರೊಬ್ಬರಿಗೆ ಮಾರಾಟ ಮಾಡಲಾಗಿದೆ. ಅಲ್ಲದೆ ಒಬ್ಬ ವೈದ್ಯರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡುವುದಾಗಿ ಹೇಳಿ 10 ಲಕ್ಷ ರೂ. ಟೋಕನ್ ಹಣ ಪಡೆದು, ಹಣ ಹಿಂತಿರುಗಿಸದೆ ಸಮಸ್ಯೆ ಮಾಡಿದ ಪ್ರಕರಣವೂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. “ಹಣಕ್ಕಾಗಿ ಕಾವಿ ಧರಿಸಿ ಸಮಾಜಕ್ಕೆ ನಾಚಿಕೆ ತರುವ ಕೆಲಸ ಮಾಡುತ್ತಿದ್ದಾರೆ” ಎಂದು ಆಡಳಿತ ಮಂಡಳಿ ಆರೋಪಿಸಿದೆ.

~ವರದಿ: ಪವನ್ ಕಲ್ಯಾಣ್ ಡಿ.ಜಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

Published

on

ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ, ವೈದ್ಯರು ಟ್ಯೂಮರ್ (ಗಡ್ಡೆ) ಯನ್ನುಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ಲಿವರ್ನ ಆರೋಗ್ಯಕರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿತ್ರದುರ್ಗ ಮೂಲದ ಈ ಮಹಿಳೆ, ಬೊಜ್ಜಿನ ಸಮಸ್ಯೆಯ ಜೊತೆಗೆ ಟೈಪ್-2 ಮಧುಮೇಹ ಮತ್ತು ಹೈಪೋಥೈರಾಯ್ಡಿಸಮ್ (ಥೈರಾಯ್ಡ್ ಸಮಸ್ಯೆ) ದಂತಹ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ನಿರಂತರ ಹೊಟ್ಟೆನೋವು ಹಾಗೂ ಹಸಿವಾಗದಿರುವ ಸಮಸ್ಯೆಯಿಂದ ಅವರು ಒದ್ದಾಡುತ್ತಿದ್ದರು. ಇದಕ್ಕಾಗಿ ಸ್ಥಳೀಯ ಕ್ಲಿನಿಕ್ಗಳು ಮತ್ತು ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿನ ತಪಾಸಣೆಯಲ್ಲಿ ಅವರಿಗೆ ಲಿವರ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು.

ಸರಿಯಾದ ಚಿಕಿತ್ಸೆ ಸಿಗದೆ ಕಾಯಿಲೆ ಉಲ್ಬಣಗೊಂಡಿದ್ದಾಗ, ಅವರ ಪರಿಚಿತರೊಬ್ಬರು ದಾವಣಗೆರೆಯ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ಗೆ ಭೇಟಿ ನೀಡಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಆರ್.ಕೆ. ಹನುಮಂತ ನಾಯ್ಕ್ ಅವರನ್ನು ಸಂಪರ್ಕಿಸಲು ಸಲಹೆ ನೀಡಿದರು. ಮೊದಲ ತಪಾಸಣೆಯ ನಂತರ, ಮಹಿಳೆಯನ್ನು ಸ್ಕ್ಯಾನಿಂಗ್ ಮತ್ತು ಇತರ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಈ ವೇಳೆ ಅವರ ಲಿವರ್ನ ಎಡಭಾಗದ (ಲೆಫ್ಟ್ ಲೋಬ್) ಆಳದಲ್ಲಿ ಗಡ್ಡೆಯೊಂದು ಬೆಳೆದಿರುವುದು ಕಂಡುಬಂತು. ಹೆಚ್ಚಿನ ಪರೀಕ್ಷೆಗಳ ನಂತರ ಇದು ‘ಇಂಟ್ರಾಹೆಪಾಟಿಕ್ ಚೋಲಾಂಜಿಯೋಕಾರ್ಸಿನೋಮ’ (intrahepatic cholangiocarcinoma) ಎಂಬ ಕಾಯಿಲೆ ಎಂದು ದೃಢಪಟ್ಟಿತು. ಈ ಹಿಂದೆಯೇ ಅವರಿಗೆ ಈ ಕಾಯಿಲೆ ಇರುವುದು ಪತ್ತೆಯಾಗಿದ್ದರೂ, ಶಸ್ತ್ರಚಿಕಿತ್ಸೆಯಲ್ಲಿನ ಸಂಕೀರ್ಣತೆಯ ಕಾರಣದಿಂದಾಗಿ ಹಿಂದಿನ ವೈದ್ಯರು ಅದನ್ನು ತೆಗೆದುಹಾಕಲು ಹಿಂದೇಟು ಹಾಕಿದ್ದರು.

ಸುಮಾರು 95 ಕೆ.ಜಿ ತೂಕವಿದ್ದ ಆ ಮಹಿಳೆ ಬೊಜ್ಜು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರಿಂದ, ಇಂತಹ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಅತ್ಯಂತ ಅಪಾಯಕಾರಿಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಈ ರೋಗಿಯು ಶಸ್ತ್ರಚಿಕಿತ್ಸೆಯನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯರು ಹೃದಯ ಮತ್ತು ಶ್ವಾಸಕೋಶದ ವಿವರವಾದ ಪರೀಕ್ಷೆಗಳನ್ನು ನಡೆಸಿದರು.

ಈ ಸವಾಲಿನ ಪ್ರಕರಣವನ್ನು ಕೈಗೆತ್ತಿಕೊಂಡ ಡಾ. ಹನುಮಂತ ನಾಯ್ಕ್ ಮತ್ತು ಅವರ ತಂಡ, ಕ್ಯಾನ್ಸರ್ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದುಹಾಕಲು ಸುಮಾರು ಆರು ಗಂಟೆಗಳ ಕಾಲ ಶ್ರಮಿಸಿತು. ಇದರ ಜೊತೆಗೆ ಸಾಕಷ್ಟು ಆರೋಗ್ಯಕರ ಲಿವರ್ ಸರಿಯಾಗಿ ಕಾರ್ಯನಿರ್ವಹಿಸುವಂತೆಯೂ ನೋಡಿಕೊಂಡಿತು. ಈ ಶಸ್ತ್ರಚಿಕಿತ್ಸೆಯು ಪಿತ್ತಕೋಶದ (ಗಾಲ್ ಬ್ಲಾಡರ್) ಜೊತೆಗೆ ಲಿವರ್ನ II, III, IVa ಮತ್ತು IVb ಭಾಗಗಳನ್ನು ತೆಗೆದುಹಾಕುವ ದೊಡ್ಡ ಶಸ್ತ್ರಚಿಕಿತ್ಸೆಯನ್ನು (ಮೇಜರ್ ಲೆಫ್ಟ್ ಹೆಪಟೆಕ್ಟಮಿ) ಒಳಗೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಮಧ್ಯದ ಹೆಪಾಟಿಕ್ ರಕ್ತನಾಳವನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಿಸಲಾಯಿತು.

ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಅತ್ಯಂತ ತ್ವರಿತವಾಗಿ ಚೇತರಿಸಿಕೊಂಡರು. ಶಸ್ತ್ರಚಿಕಿತ್ಸೆ ಮುಗಿದ ಆರು ಗಂಟೆಗಳಲ್ಲೇ ದ್ರವಾಹಾರ ಸೇವಿಸಲು ಆರಂಭಿಸಿದ ಅವರು, ಕ್ರಮೇಣ ಮೃದುವಾದ ಆಹಾರವನ್ನು ಸೇವಿಸುವ ಹಂತಕ್ಕೆ ತಲುಪಿದರು. ಅವರ ಆರೋಗ್ಯ ಸ್ಥಿರವಾಗಿದ್ದರಿಂದ ಕೇವಲ ಐದು ದಿನಗಳಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.

ಶಸ್ತ್ರಚಿಕಿತ್ಸೆ ಬಗ್ಗೆ ಮಾತನಾಡಿದ ಡಾ. ಆರ್. ಕೆ. ಹನುಮಂತ ನಾಯ್ಕ್, “ಟ್ಯೂಮರ್ನ ಗಾತ್ರ ಮತ್ತು ಅದು ಇದ್ದ ಜಾಗ, ಅದರ ಜೊತೆಗೆ ರೋಗಿಯ ಬೊಜ್ಜು ಮತ್ತು ಇತರ ವೈದ್ಯಕೀಯ ಸಮಸ್ಯೆಗಳಿಂದಾಗಿ ಇದು ತಾಂತ್ರಿಕವಾಗಿ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯಾಗಿತ್ತು. ಆರೋಗ್ಯಕರ ಲಿವರ್ ಅನ್ನು ಉಳಿಸಿಕೊಂಡು ಕ್ಯಾನ್ಸರ್ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ ಎಚ್ಚರಿಕೆಯ ಮೌಲ್ಯಮಾಪನ, ಶಸ್ತ್ರಚಿಕಿತ್ಸೆಯ ನಿಖರವಾದ ಯೋಜನೆ ಮತ್ತು ಶಸ್ತ್ರಚಿಕಿತ್ಸೆಯ ನಂತರದ ವ್ಯವಸ್ಥಿತ ಆರೈಕೆಯು ಈ ಯಶಸ್ಸಿಗೆ ಕಾರಣವಾಯಿತು” ಎಂದು ತಿಳಿಸಿದರು.

ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಕೇಂದ್ರದ ಫೆಸಿಲಿಟಿ ಡೈರೆಕ್ಟರ್ ಶ್ರೀ ಸುನಿಲ್ ಭಂಡಾರಿಗಲ್ ಮಾತನಾಡಿ, “ಹೆಚ್ಚಿನ ಅಪಾಯದಲ್ಲಿದ್ದ ರೋಗಿಗೆ ಇಂತಹ ಸಂಕೀರ್ಣವಾದ ಲಿವರ್ ಟ್ಯೂಮರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು ನಮ್ಮ ಶಸ್ತ್ರಚಿಕಿತ್ಸಾ ತಂಡದ ಪರಿಣತಿ ಮತ್ತು ವಿವಿಧ ವಿಭಾಗಗಳ ವೈದ್ಯರ ಸಂಯೊಜನೆ ಆರೈಕೆಯ (multidisciplinary care) ಮಹತ್ವವನ್ನು ತೋರಿಸುತ್ತದೆ. ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಸುಧಾರಿತ, ಸಕಾಲಿಕ ಮತ್ತು ರೋಗಿ-ಕೇಂದ್ರಿತ ಚಿಕಿತ್ಸೆಯನ್ನು ಒದಗಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ” ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending