Connect with us

ದಿನದ ಸುದ್ದಿ

ಇಂಡಿಯಾ ಲಾಕ್ ಡೌನ್ : ಇದರ ಸೈಡ್ ಎಫೆಕ್ಟ್ ನಿಯಂತ್ರಣ ಹೇಗೆ..?

Published

on

  • ವಿವೇಕಾನಂದ. ಹೆಚ್.ಕೆ.

ವಿಶ್ವದಲ್ಲಿ ನಾಗರಿಕತೆಯ ಉಗಮ ದಾಖಲಾಗಿರುವ ದಿನದಿಂದ ಇಂದಿನವರೆಗೂ ಆಗಾಗ ಅನೇಕ ಆಘಾತಗಳನ್ನು ಅನುಭವಿಸುತ್ತಾ ಬಂದಿದೆ.

ಕಾಡಿನ ಕ್ರೂರ ಮೃಗಗಳಿಂದ, ಪ್ರಾಕೃತಿಕ ಅವಘಡಗಳಿಂದ, ರಾಜರುಗಳು ಆಕ್ರಮಣಗಳಿಂದ, ಭಯಂಕರ ಯುದ್ದಗಳಿಂದ, ಹುಚ್ಚು ಸರ್ವಾಧಿಕಾರಿಗಳಿಂದ ಬರಗಾಲದಿಂದ, ಅನೇಕ ರೋಗ ರುಜಿನಗಳಿಂದ ಎಲ್ಲಾ ಶತಮಾನಗಳಲ್ಲೂ ಆತಂಕ ಎದುರಿಸಿದೆ.

ಇದೀಗ ಕೊರೋನಾ ವೈರಸ್ ಆ ರೀತಿಯ ಒಂದು ಆತಂಕವಷ್ಟೆ. ಆಯಾ ಕಾಲಕ್ಕೆ ಅದೇ ಭಯಾನಕ. ಯಾವುದೂ ಹೆಚ್ಚು ಅಲ್ಲ ಕಡಿಮೆಯೂ ಅಲ್ಲ. ಕೆಲವು ಇಂಗ್ಲೀಷ್ ಸಿನಿಮಾಗಳಲ್ಲಿ ಬೇರೆ ಲೋಕದಿಂದ ದಾಳಿ ಇಡುವ ಏಲಿಯನ್ ಗಳ ವಿರುದ್ಧ ಹೋರಾಡುವ ದೃಶ್ಯಗಳನ್ನು ನೋಡಿರಬಹುದು. ಅವು ಮಾಡುವ ಅನಾಹುತಗಳು ಮತ್ತು ಕೊನೆಗೆ ಅವುಗಳ ವಿರುದ್ಧ ಜಯ. ಇದೂ ಸಹ ಅದೇ ರೀತಿ. ಆದರೆ ಅದು ಸಿನಿಮಾ ಇದು ವಾಸ್ತವ.

ಡಾರ್ವಿನ್‌ನ ಸಾರ್ವಕಾಲಿಕ ಸಿದ್ದಾಂತದಂತೆ ಬಲಿಷ್ಠವಾದದ್ದು ಮಾತ್ರ ಉಳಿಯುತ್ತದೆ. ಕೊರೋನಾ ವೈರಸ್ ಎಂಬ ಜೀವಾಣು ಮನುಷ್ಯನ ಮೇಲೆ ಯುದ್ಧ ಸಾರಿದೆ. ಸದ್ಯಕ್ಕೆ ಅದು ವಿಜಯದ ರಣಕೇಕೆ ಹಾಕುತ್ತಿದೆ. ಅದರ ವಿರುದ್ಧ ಮನುಷ್ಯ ಉಳಿವಿಗಾಗಿ ಹೋರಾಡುತ್ತಿದ್ದಾನೆ.

ಇದೀಗ ಅದರ ಹೋರಾಟದ ಭಾಗವಾಗಿ ಇಡೀ ಭಾರತವನ್ನು ಬಹುತೇಕ ಬಂದ್ ಮಾಡಲಾಗಿದೆ. ಆಧುನಿಕ ಕಾಲದ ಸುಮಾರು 50 ವಯಸ್ಸು ಆಸುಪಾಸಿನ ಜನರಿಗೆ ಇದರ ನೇರ ಅನುಭವ ಇರಲೇ ಇಲ್ಲ. ಅವರಿಗೆ ಇದೊಂದು ಅನಿರೀಕ್ಷಿತ ಆಘಾತ.

ಇರಲಿ ಈಗ ಮನೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಸಮಯ ಕಳೆಯುವ ಅನಿವಾರ್ಯತೆಗೆ ಸಿಲುಕಿದ್ದೇವೆ. ಈ ಸಮಯದಲ್ಲಿ ನಿಜವಾಗಲೂ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಬಹಳಷ್ಟು ಅಗ್ನಿ ಪರೀಕ್ಷೆಗೆ ಒಳಪಡುತ್ತದೆ. ಇಂದು ನಾಳೆ ನಾಡಿದ್ದು ಹಬ್ಬ, ಅದರ ಆಚರಣೆ,
ಸಾವಿನ ಭಯ ಆತಂಕ ಹೊಸ ಜೀವನ ಶೈಲಿಯ ಒತ್ತಡದಲ್ಲಿ ಅಷ್ಟಾಗಿ ಗೊತ್ತಾಗುವುದಿಲ್ಲ. ಆದರೆ ‌ನಂತರ ದಿನಗಳು ಕಷ್ಟವಾಗುತ್ತದೆ. ಮಾನಸಿಕ ಕಿರಿಕಿರಿ ಉಂಟುಮಾಡುತ್ತದೆ. ಅದಕ್ಕಾಗಿ ಸ್ವಲ್ಪ ಅನುಕೂಲಕರ ಪರಿಸ್ಥಿತಿಯ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರು ಈ ಕೆಲವು ವಿಧಾನಗಳನ್ನು ಅನುಸರಿಸಬಹುದು.

ಯೋಗ ಪ್ರಾಣಾಯಾಮ ಧ್ಯಾನ ವ್ಯಾಯಾಮ ನೃತ್ಯಗಳ ಮೊರೆ ಹೋಗಬಹುದು. ದೈಹಿಕವಾಗಿ ದುರ್ಬಲರಾದವರು ಧ್ಯಾನ ಮತ್ತು ಪ್ರಾಣಾಯಾಮದಿಂದ ಸಾಕಷ್ಟು ಮಾನಸಿಕ ಲಾಭ ಪಡೆಯಬಹುದು.

ಇಲ್ಲಿಯವರೆಗೂ ಓದಲು ಸಾಧ್ಯವಾಗದ ಯಾವುದಾದರೂ ಆಸಕ್ತಿಯ ಪುಸ್ತಕಗಳನ್ನು ಓದಲು ಪ್ರಾರಂಭಿಸಬೇಕು. ಖಂಡಿತ ಓದು ನಿಮ್ಮನ್ನು ಮಾನಸಿಕ ಖಿನ್ನತೆಯಿಂದ ಪಾರು ಮಾಡುತ್ತದೆ.

ನಿಮ್ಮ ಆಸಕ್ತಿಯ ಏನನ್ನಾದರೂ ಬರೆಯಲು ಪ್ರಾರಂಭಿಸಿ. ಕನಿಷ್ಠ ದಿನಚರಿ ಅಥವಾ ಬದುಕಿನ ನೆನಪ ಪುಟಗಳಾದರೂ ದಾಖಲಿಸಿರಿ. ಇದು ಓದಿಗಿಂತ ಹೆಚ್ಚು ಸಮಾಧಾನಕರ ಪರಿಣಾಮ ನಿಮ್ಮ ಮನಸ್ಸಿನ ಮೇಲೆ ಬೀರುತ್ತದೆ.

ಹಳೆಯ ಗೆಳೆಯರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ತೃಪ್ತಿಯಾಗುವಷ್ಟು ಮಾತನಾಡಿ. ಅದನ್ನು ಈ ವಿರಾಮದ ಎಲ್ಲಾ ದಿನಗಳಲ್ಲಿಯೂ ಮುಂದುವರಿಸಿ. ಅಕ್ಷರದ ಚಾಟ್ ಗಳಿಗಿಂತ ನೇರ ಮಾತುಗಳು ನಿಮ್ಮನ್ನು ‌ಉಲ್ಲಸಿತರಾಗಿಡುತ್ತದೆ.

ಮಕ್ಕಳು ಮನೆಯವರೊಂದಿಗೆ ಚೆಸ್ ಕೇರಂ ಹಾವು ಏಣಿಯಾಟ ಚೌಕಾಬಾರ ಮುಂತಾದ ಆಟಗಳನ್ನು ಹಾಡಬಹುದು. ಇದು ನಿಮ್ಮ ಬಹುತೇಕ ಸಮಯ ಆಕ್ರಮಿಸುತ್ತದೆ. ಸಮಯ ಕಳೆಯುವುದೇ ತಿಳಿಯುವುದಿಲ್ಲ.

ಕುಟುಂಬ ಸ್ವಲ್ಪ ದೊಡ್ಡದಿದ್ದರೆ ಚೀಟಿ ಬರೆದು ಕಳ್ಳ ಪೋಲೀಸ್ ಆಟ, ಅಂತ್ಯಾಕ್ಷರಿ, ಖಾಲಿ ಹಾಳೆಯ ಮೇಲೆ ಚುಕ್ಕಿಯಿಟ್ಟು ಜೋಡಿಸುವುದು, ಕಣ್ಣಾ ಮುಚ್ಚಾಲೆ, ಯಾವುದಾದರೂ ವಸ್ತುಗಳನ್ನು ಮನೆಯಲ್ಲಿ ಮುಚ್ಚಿಟ್ಟು ಹುಡುಕುವುದು ಮುಂತಾದ ಆಟಗಳನ್ನು ಆಡಬಹುದು. ಇದು ಸ್ವಲ್ಪ ಖುಷಿ ಕೊಡುತ್ತದೆ.

ಸರಳ ರೀತಿಯ ಅಡುಗೆಗಳ ಪ್ರಯೋಗ ಮಾಡಬಹುದು. ಇಲ್ಲಿಯವರೆಗೂ ಮನೆಯಲ್ಲಿ ಯಾರು ಅಡುಗೆ ಮಾಡುತ್ತಿದ್ದರೋ ಅದನ್ನು ಬದಲಾಯಿಸಿ ಮತ್ತೊಬ್ಬರು ಒಂದಷ್ಟು ಪ್ರಯತ್ನಿಸಬಹುದು. ಆದರೆ ಮಿತ ಆಹಾರ ಒಳ್ಳೆಯದು.

ಆರೋಗ್ಯದ ಕಾರಣಕ್ಕಾಗಿ ಉಪವಾಸ ವೃತಗಳನ್ನು ಸಹ ಮಾಡಬಹುದು. ಹೌದು ಏಕತಾನತೆ ಮುರಿಯಲು ವೈದ್ಯರ ಸಲಹೆ ಮೇರೆಗೆ ಉಪವಾಸ ದೇಹ ಮತ್ತು ಮನಸ್ಸಿನ ನಿಯಂತ್ರಣಕ್ಕೆ ಒಳ್ಳೆಯ ಮದ್ದು.
ಅದು ಅವರವರ ಆರೋಗ್ಯ ಸ್ಥಿತಿ ಅವಲಂಬಿಸಿರುತ್ತದೆ.

ಅನುಕೂಲ ಇದ್ದರೆ ಅತ್ಯುತ್ತಮ ಸಿನಿಮಾ ನೋಡಬಹುದು ಮತ್ತು ಸಂಗೀತ ಆಲಿಸಬಹುದು. ಇವು ಖಂಡಿತವಾಗಿ ನಿಮ್ಮನ್ನು ಮತ್ತೊಂದು ಲೋಕಕ್ಕೆ ಕೊಂಡೊಯ್ಯುತ್ತದೆ. ಕೆಲವೊಮ್ಮೆ ಆಳವಾಗಿ ಯೋಚಿಸುವಂತೆ ಪ್ರೇರೇಪಿಸುತ್ತದೆ.

ಮೊಬೈಲ್ ನಲ್ಲಿರುವ ಅನೇಕ ಹೊಸ ಹೊಸ ತಾಂತ್ರಿಕ ಸಾಧ್ಯತೆಗಳನ್ನು ಕಲಿಯಲು ಪ್ರಯತ್ನಿಸಬಹುದು. ಸದಾ ವೇಗದ ಜೀವನದಲ್ಲಿ ನಾವು ಕನಿಷ್ಠ ಉಪಯೋಗ ಮಾತ್ರ ತಿಳಿದಿರುತ್ತೇವೆ. ಆದರೆ ಇಂದಿನ ಸ್ಮಾರ್ಟ್ ಫೋನ್ ಗಳಲ್ಲಿ ವಿಶ್ವ ರೂಪ ದರ್ಶನ ಪಡೆಯಬಹುದು.

ಮಾತಿನ ಸಂತೆಯಲ್ಲಿ ಮರೆಯಾಗಿದ್ದ ಮೌನದ ದಿವ್ಯತೆಯನ್ನು ಹಿಡಿದಿಡಲು ಪ್ರಯತ್ನಿಸಬಹುದು. ಮೌನ ತುಂಬಾ ಕಠಿಣ. ಆದರೆ ‌ ಅದು ಒಮ್ಮೆ ಅನುಭವಕ್ಕೆ ಸಿಕ್ಕರೆ ತುಂಬಾ ಪರಿಣಾಮಕಾರಿ. ಅದೊಂದು ಅನುಭಾವ. ಸಾಧ್ಯವಾದರೆ ಪ್ರಯತ್ನಿಸಿ.

ಇದು ನನಗೆ ಹೊಳೆದ ಕೆಲವು ವಿಷಯಗಳು ಮಾತ್ರ. ಇದರ ಜೊತೆಗೆ ನಿಮಗೂ ಹಲವಾರು ವಿಧಾನಗಳು ತಿಳಿದಿರುತ್ತದೆ. ನಾನು ಈ ಮೂಲಕ ಮತ್ತೊಮ್ಮೆ ನೆನಪಿಸುತ್ತಿದ್ದೇನೆ ಅಷ್ಟೆ.

ಇದರ ಜೊತೆ ಖಂಡಿತವಾಗಿಯೂ ಬಡಜನರನ್ನು ಜ್ಞಾಪಿಸಿಕೊಳ್ಳಲೇ ಬೇಕು. ಕರೋನ ವಿರುದ್ಧ ಈ ಕರ್ಪ್ಯೂ ಹೋರಾಟದ ಬಹುದೊಡ್ಡ ಸೈಡ್ ಎಪೆಕ್ಟ್ ಎಂದರೆ ಬೀದಿ ಬದಿಯ ಮನೆ ಇಲ್ಲದ ಸುಮಾರು 10 ಕೋಟಿ ಕಡುಬಡವರ ಬಹುತೇಕ ಸರ್ವನಾಶ.

ಸರ್ಕಾರಗಳು ಏನೇ ಹೇಳಿದರು ಈ‌ ಸಂದರ್ಭದಲ್ಲಿ ಆಡಳಿತ ಯಂತ್ರ ಅವರನ್ನು ಮುಟ್ಟುವುದು ತುಂಬಾ ಕಷ್ಟವಿದೆ. ಅವರು ಯಾವುದೇ ದಾಖಲೆ ಹೊಂದಿರದೆ ಲೆಕ್ಕಕ್ಕೇ ಸಿಗುವುದಿಲ್ಲ. ಉಳ್ಳವರು ಮತ್ತು ದಾನ ಮಾಡುವ ಮನಸ್ಸಿರುವವರು ಕೂಡ ಅವರಿಗೆ ಕೈಲಾದ ಸಹಾಯ ಮಾಡಲಾಗದ ಅಸಹಾಯಕ ಸ್ಥಿತಿ ಏರ್ಪಟ್ಟಿದೆ. ಹೊರಗೆ ಹೋಗುವಂತಿಲ್ಲ.

ಮುಖ್ಯವಾಗಿ ರಾಜ್ಯ ರಾಜಧಾನಿಗಳ, ದೊಡ್ಡ ನಗರಗಳ ಬಸ್ ನಿಲ್ದಾಣ, ರೈಲು ನಿಲ್ದಾಣ, ಫ್ಲೈ ಓವರ್ ಗಳ ಬಳಿ ಮಲಗುವವರ ಸ್ಥಿತಿ ನಾಯಿಗಿಂತ ಕಡೆಯಾಗಿರುತ್ತದೆ. ಇಲ್ಲ ಬೀದಿ ನಾಯಿಗಳು ಇನ್ನೂ ದುಸ್ಥಿತಿಗೆ ಹೋಗಿ ಜೀವ ಕಳೆದುಕೊಳ್ಳುತ್ತವೆ.

ನಾವು ಎಷ್ಟು ಸಾಧ್ಯವೋ ಎಲ್ಲಿ ಸಾಧ್ಯವೋ ಎಷ್ಟು ಅನುಕೂಲವೋ ಅದನ್ನು ಬಳಸಿಕೊಂಡು ಇಂತಹವರಿಗೆ ಸಹಾಯ ಮಾಡಲು ಪ್ರಯತ್ನಿಸೋಣ. ಅದು ಉಪಕಾರವಲ್ಲ ಕರ್ತವ್ಯ ಎಂದು ಭಾವಿಸೋಣ. ದಿನಗೂಲಿ ನೌಕರರು ಸಹ ಇದೇ ವ್ಯಾಪ್ತಿಯಲ್ಲಿ ಬರುತ್ತಾರೆ.

ಇಷ್ಟೆಲ್ಲದರ ನಡುವೆಯೂ ಈ ಸಿನೆಮಾ ಹಾಡು ಗುನುಗುನಿಸುತ್ತಿರಿ…ನಗುನಗುತಾ ನಲಿ ನಲಿ,
ಏನೇ ಆಗಲಿ..

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending