ದಿನದ ಸುದ್ದಿ
ದಾವಣಗೆರೆ : ಶಿಷ್ಟಾಚಾರದಂತೆ ಅಂತ್ಯಕ್ರಿಯೆ ನಡೆಸದೇ ಇರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್
ಸುದ್ದಿದಿನ,ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಕೋವಿಡ್ ರೋಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೂ.17 ರಂದು ಮೃತಪಟ್ಟಿದ್ದು ರೋಗಿಯ ಅಂತ್ಯಕ್ರಿಯೆಯನ್ನು ವೈದ್ಯಕೀಯ ಶಿಷ್ಟಾಚಾರದಂತೆ ನಿರ್ವಹಿಸದೇ ಇರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದಕ್ಕೆ ಸಂಬಂಧಿಸಿದ ವೈದ್ಯರು/ಅಧಿಕಾರಿಗಳಿಗೆ ಇಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.
ಕೋವಿಡ್ 19 ಸಾಂಕ್ರಾಮಿಕ ರೋಗದ ನಿಯಂತ್ರಣ ಹಿನ್ನೆಲೆ ಅಧಿಕಾರಿ/ನೌಕರರಿಗೆ ನಿರ್ದೇಶನ ನೀಡಲಾಗಿರುತ್ತದೆ ಹಾಗೂ ಜಿಲ್ಲಾಡಳಿತದಿಂದಲೂ ಸಹ ಸಾಕಷ್ಟು ಮಾರ್ಗದರ್ಶನ ನೀಡಲಾಗಿರುತ್ತದೆ. ಕೊರೊನಾ ರೋಗಾಣುವಿನಿಂದ ವ್ಯಕ್ತಿ ಮೃತಪಟ್ಟ ಪ್ರಕರಣದಲ್ಲಿ ಅವರ ಅಂತ್ಯಕ್ರಿಯೆಯನ್ನು ಹೇಗೆ ನಡೆಸಬೇಕೆಂಬ ಕುರಿತು ಸರ್ಕಾರ ಎಸ್ಓಪಿಯನ್ನು ಹೊರಡಿಸಿದ್ದು ಅದರಂತೆ ಕ್ರಮ ಕೈಗೊಳ್ಳಬೇಕಾಗಿರುತ್ತದೆ. ಆದರೆ ಜೂ.17 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟ ಚನ್ನಗಿರಿ ತಾಲ್ಲೂಕಿನ ಕೋವಿಡ್ ರೋಗಿಯಾದ ವೃದ್ದೆಯ ಮೃತದೇಹವನ್ನು ವೈದ್ಯಕೀಯ ಶಿಷ್ಟಾಚಾರದಂತೆ ನಿರ್ವಹಿಸಿರುವುದಿಲ್ಲವೆಂದು ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ.
ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ 56 ವರ್ಷದ ವೃದ್ದೆಯ ಮೃತದೇಹವನ್ನು ಚನ್ನಗಿರಿಯ ಹೆದ್ದಾರಿ ಬಳಿ ಇರುವ ವೀರಶೈವ ರುದ್ರಭೂಮಿಯಲ್ಲಿ ಜೆಸಿಬಿಯಲ್ಲಿ ತೆಗೆದುಕೊಂಡು ಹೋಗಿ ಕಸ ಬಿಸಾಡುವಂತೆ ಬಿಸಾಡಿ ಶವಸಂಸ್ಕಾರ ಮಾಡಿದ ತಾಲ್ಲೂಕು ಆಡಳಿತ ಎಂದು ವರದಿಯಾಗಿದೆ.
ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ಒಂದು ವೇಳೆ ನಿಜವಾಗಿದ್ದಲ್ಲಿ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿರುವ ಪ್ರಯುಕ್ತ ಜಿಲ್ಲಾಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಭು, ತಾಲ್ಲೂಕು ವೈದ್ಯಾಧಿಕಾರಿ ಡಾ.ಗಿರಿ, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್, ತಹಶೀಲ್ದಾರ್ ಪುಟ್ಟರಾಜುಗೌಡ, ಕೋವಿಡ್ ನೋಡಲ್ ಅಧಿಕಾರಿ ಡಾ.ಮುರಳಿ ಇವರಿಗೆ ಕಾರಣ ಕೇಳಿ ನೋಟಿಸ್ ನೀಡಿ, ಜು.3 ರೊಳಗೆ ಲಿಖಿತ ವಿವರಣೆಯನ್ನು ಖುದ್ದು ಹಾಜರಾಗಿ ನೀಡುವಂತೆ ಸೂಚಿಸಿದ್ದಾರೆ. ವಿವರಣೆ ನೀಡುವುದು ತಪ್ಪಿದಲ್ಲಿ ವಿವರಣೆ ಏನೂ ಇಲ್ಲವೆಂದು ತಿಳಿದು ನಿಯಮಾನುಸಾರ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243