Connect with us

ದಿನದ ಸುದ್ದಿ

ಕೋವಿದ್ 19 | ಆಶಯ ಮತ್ತು ಪ್ರಾರ್ಥನೆಗಳ ನಡುವೆ

Published

on

  • ಮೂಲ : ಅನುರಾಧ ರಮಣ್, ಅನುವಾದ : ನಾ ದಿವಾಕರ

ಆಶಾ ಕಾರ್ಯಕರ್ತೆ ‘ಅನಿತಾ ಶರ್ಮ’ ತಮ್ಮ ಟ್ವಿಟರ್ ಖಾತೆಯನ್ನು ಹೊಂದಿದ್ದರು. ಆಕೆ ಮನಸ್ಸು ಮಾಡಿದ್ದಲ್ಲಿ ತಮ್ಮ ಟ್ವಿಟರ್ ಖಾತೆಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಟ್ಯಾಗ್ ಮಾಡಿ ತಮ್ಮನ್ನು ಹೀಗೆ ಪರಿಚಯಿಸಿಕೊಳ್ಳಬಹುದಿತ್ತು : “ನನ್ನ ಹೆಸರು ಅನಿತಾ, ಕೊರೋನಾ ವೈರಾಣು ವ್ಯಾಪಿಸಿದ ದಿನದಿಂದ ನನ್ನ ನೌಕರಿಯ ಚಿತ್ರಣವೇ ಬದಲಾಗಿಹೋಗಿದೆ. ಇತ್ತೀಚೆಗೆ ನಾನು ದಿನಕ್ಕೆ 12 ಗಂಟೆಗಳ ಕಾಲ ದುಡಿಯುತ್ತೇನೆ. ನನ್ನ ಅಲ್ಪ ವೇತನ ಮಾಸಿಕ 2000 ರೂಗಳು ಮಾತ್ರ. ಕಳೆದ ವರ್ಷ ಇದನ್ನು 4000 ರೂಗಳಿಗೆ ಹೆಚ್ಚಿಸಲಾದರೂ ಇದುವರೆಗೂ ಹೆಚ್ಚುವರಿ ವೇತನ ನೀಡಿಲ್ಲ. ನಿಜ ಹೇಳಬೇಕೆಂದರೆ ಈ ವರ್ಷದ ಫೆಬ್ರವರಿಯಿಂದ ನನಗೆ ವೇತನವನ್ನೇ ನೀಡಲಾಗಿಲ್ಲ .”

ಈ ಟ್ವಿಟರ್ ಸಂದೇಶವೇನಾದರೂ ಕಂಡಿದ್ದಲ್ಲಿ ಸಾಮಾಜಿಕ ಮಾಧ್ಯಮಗಳು ಆಕೆಯ ದನಿಗೆ ಮತ್ತಷ್ಟು ದನಿ ಸೇರಿಸಿ ಆಡಳಿತ ವ್ಯವಸ್ಥೆಯ ಗಮನ ಸೆಳೆಯುತ್ತಿದ್ದವು. ಹಾಗಾಗಿದ್ದಲ್ಲಿ ಕೂಡಲೇ ಅನುಕಂಪ, ಕರುಣೆ, ಮರುಕದ ಸಂದೇಶಗಳ ಮಹಾಪೂರವೇ ಹರಿದುಬರುತ್ತಿತ್ತು. ಈ ಸಂದೇಶದಿಂದ ನಾಗರಿಕ ಸಮಾಜದಲ್ಲಿ ಸೃಷ್ಟಿಯಾಗುತ್ತಿದ್ದ ಆಕ್ರೋಶ ಮತ್ತು ಸಿಗುತ್ತಿದ್ದ ಪ್ರಚಾರದಿಂದ ಆಕೆಯ ವೇತನ ಬಾಕಿಯನ್ನು ಒಂದೇ ಕಂತಿನಲ್ಲಿ ಪಾವತಿ ಮಾಡುವ ಪ್ರಕ್ರಿಯೆಯನ್ನೂ ನಿರೀಕ್ಷಿಸಬಹುದಿತ್ತು.

ಆದರೆ ಹಾಗಾಗಲಿಲ್ಲ. ಅನಿತಾ ಈಗಲೂ ತಲೆ ತಗ್ಗಿಸಿ ಕೆಲಸ ಮಾಡುತ್ತಲೇ ಇದ್ದಾರೆ. ತಮ್ಮದೇ ಹಳೆಯ ಬಟ್ಟೆಯಿಂದ ಹೊಲಿದ ಮುಖಗವುಸನ್ನು ಧರಿಸಿ ದುಡಿಯುತ್ತಿದ್ದಾರೆ. ಸಾಧ್ಯವಾದಷ್ಟು ಬಾರಿ ತಮ್ಮ ಕೈ ತೊಳೆಯುತ್ತಲೇ ಇರುತ್ತಾರೆ. (ಆಕೆಗೆ ಸರ್ಕಾರ ನೀಡಿರುವ 500 ಮಿಲಿ ಲೀಟರಿನ ಸ್ಯಾನಿಟೈಸರ್ ಖಾಲಿಯಾಗದಂತೆ ಎಚ್ಚರ ವಹಿಸುತ್ತಾರೆ). ಹೀಗೆಯೇ ಹರಿಯಾಣದಲ್ಲಿ ತಮ್ಮ ನಿತ್ಯ ಕಾಯಕದಲ್ಲಿ ತೊಡಗುತ್ತಾರೆ. ಸದಾ ಪ್ರಾರ್ಥನೆ ಮಾಡುತ್ತಲೇ ದುಡಿಮೆಯಲ್ಲಿ ನಿರತರಾಗುತ್ತಾರೆ. “ ನಾವು ಎಲ್ಲ ರೀತಿಯ ಕೆಲಸಗಳನ್ನೂ ನಿರ್ವಹಿಸಬೇಕು ಎಂದು ಅವರು ಅಪೇಕ್ಷಿಸುತ್ತಾರೆ ಆದರೆ ಆದರೆ ನಮಗೆ ಕನಿಷ್ಟ ರಕ್ಷಣೆಯನ್ನೂ ನೀಡುವುದಿಲ್ಲ ” ಎಂದು ಬೇಸರದಿಂದ ಹೇಳುತ್ತಲೇ ತಮ್ಮ ಕೆಲಸದಲ್ಲಿ ನಿರತರಾಗುತ್ತಾರೆ.

ಅನಿತ ಪ್ರತಿನಿತ್ಯ ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಹೊರಡುತ್ತಾರೆ. ಪ್ರತಿನಿತ್ಯ ಮಕ್ಕಳು, ವೃದ್ಧರು, ಮಹಿಳೆಯರು, ವಿಶೇಷವಾಗಿ ಗರ್ಭಿಣಿಯರನ್ನು ತಪಾಸಣೆಗೊಳಪಡಿಸುವುದು ಅವರ ಕಾಯಕ. ಪ್ರತಿನಿತ್ಯ ಸರಾಸರಿ 25 ಮನೆಗಳಿಗೆ ಭೇಟಿ ನೀಡುವ ಅನಿತ ಪ್ರತಿನಿತ್ಯ ಭೇಟಿ ಮಾಡುವವರ ಪಟ್ಟಿಯನ್ನು ಸಿದ್ಧಪಡಿಸಿ ಕಚೇರಿಗೆ ಸಲ್ಲಿಸುತ್ತಾರೆ. ಅನೇಕರಿಗೆ ಸಾವು ಬದುಕಿನ ನಡುವಿನ ವ್ಯತ್ಯಾಸವನ್ನು ಅರ್ಥಮಾಡಿಸುವಲ್ಲಿ ಅನಿತ ಯಶಸ್ವಿಯಾಗುತ್ತಾರೆ.

ತಳಮಟ್ಟದ ಕಾಯಕ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರೂಪಿಸುವ ಪ್ರತಿಯೊಂದು ಆರೋಗ್ಯ ಯೋಜನೆಯ ಯಶಸ್ಸಿನ ಹಿಂದೆ ಅನಿತ ಅವರಂತಹ ತಳಮಟ್ಟದ ಕಾರ್ಯಕರ್ತೆಯರ ಪರಿಶ್ರಮ ಮತ್ತು ದುಡಿಮೆ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಿಗೆ ಕಬ್ಬಿಣಾಂಶ ಇರುವ ಮಾತ್ರೆ ಕೊಡುವುದರಿಂದ, ಎಳೆ ಮಕ್ಕಳಿಗೆ ಲಸಿಕೆ ಹಾಕುವ ವೇಳಾಪಟ್ಟಿಯನ್ನು ಗಮನಿಸುವುದು, ಗರ್ಭಿಣಿಯರಿಗೆ ಲಸಿಕೆ ನೀಡುವುದು, ಕ್ಷಯರೋಗಿಗಳಿಗೆ ತಪಾಸಣೆ ನಡೆಸುವುದು ಈ ಕೆಲಸಗಳ ಜೊತೆಗೇ ಈಗ ಅನಿತ ಕೋವಿದ್ 19 ಸೋಂಕಿನ ಲಕ್ಷಣಗಳನ್ನು ಗುರುತಿಸಿ ಜನರಿಗೆ ಸಲಹೆ ನೀಡುವ ಕೆಲಸವನ್ನೂ ನಿರ್ವಹಿಸಬೇಕಿದೆ.

ತಮ್ಮ ಬದುಕಿನ ನೆಲೆಯನ್ನೇ ಕಳೆದುಕೊಂಡು ಸ್ವಗ್ರಾಮಗಳಿಗೆ ಹಿಂದಿರುಗಿರುವ ವಲಸೆ ಕಾರ್ಮಿಕರ ಬಗ್ಗೆಯೂ ಅನಿತ ಕಾಳಜಿ ವಹಿಸಬೇಕಾಗುತ್ತದೆ. ಈ ವಲಸೆ ಕಾರ್ಮಿಕರು ತಮಗೆ ನಿಗದಿಪಡಿಸಲಾದ ಕೇಂದ್ರಗಳಲ್ಲಿ ಕ್ವಾರಂಟೈನ್ ಅವಧಿಯನ್ನು ಸರಿಯಾಗಿ ಪೂರೈಸುವರೋ ಇಲ್ಲವೋ ಎನ್ನುವುದನ್ನೂ ಗಮನಿಸಬೇಕಾಗುತ್ತದೆ. ಇವೆಲ್ಲ ಕೆಲಸಗಳೊಟ್ಟಿಗೆ ಅನಿತ ತಮ್ಮ ಕುಟುಂಬ ಮತ್ತು ನೆರೆಹೊರೆಯವರಿಗೆ ಕೊರೋನಾ ಸೋಂಕಿನ ಕುರಿತು ಮಾಹಿತಿಯನ್ನು ನೀಡುತ್ತಿರಬೇಕು.

ಕೊರೋನಾ ನಂತರದಲ್ಲಿ ಹೆಚ್ಚಿನ ಒತ್ತಡ ಮತ್ತು ಜವಾಬ್ದಾರಿಯನ್ನು ಎದುರಿಸುತ್ತಿರುವ ಭಾರತದ ಆರೋಗ್ಯ ಸೇವೆಯ ಕ್ಷೇತ್ರದ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ಸಂಖ್ಯೆ 9 ಲಕ್ಷದಷ್ಟಿದೆ. ಅನಿತಾ ಅವರಂತಹ ಸೇನಾನಿಗಳು, ಯಾವುದೇ ರಕ್ಷಣಾ ಕವಚ ಇಲ್ಲದೆ, ಸಮರ್ಪಕ ವೇತನ ಇಲ್ಲದೆ, ಯಾವುದೇ ಸಂರಕ್ಷಕ ಅಸ್ತ್ರಗಳಿಲ್ಲದೆ, ಸೂಕ್ತ ಮಾನ್ಯತೆಯೂ ಇಲ್ಲದೆ ದುಡಿಯುತ್ತಿದ್ದಾರೆ.

ಅನೇಕ ಆಶಾ ಕಾರ್ಯಕರ್ತೆಯರು ಜನರ ಆಕ್ರೋಶವನ್ನೂ ಎದುರಿಸಬೇಕಾಗಿದೆ. “ಕಲ್ಲಿಕೋಟೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ರಸ್ತೆಯಲ್ಲಿ ನೆರೆದಿದ್ದ ಜನರ ಗುಂಪನ್ನು ಚದುರಿಸಲು ಮುಂದಾದಾಗ ಓರ್ವ ಕಾರ್ಯಕರ್ತೆಯ ದ್ವಿಚಕ್ರ ವಾಹನವನ್ನು ಜಖಂಗೊಳಿಸಲಾಗಿದೆ. ಕೆಲವರು, ನಾವೇಕೆ ಒಬ್ಬ ಮಹಿಳೆ ಹೇಳಿದಂತೆ ಕೇಳಬೇಕು ಎನ್ನುತ್ತಾರೆ ” ಎಂದು ವಿಷಾದದಿಂದ ಹೇಳುತ್ತಾರೆ ಕೇರಳದ ಆಶಾ ಕಾರ್ಯಕರ್ತೆ ಪಿ ಪಿ ಪ್ರೇಮ.

ಇನ್ನೂ ಅಘಾತಕಾರಿ ವಿಚಾರ ಎಂದರೆ ಈವರೆಗೂ ದೇಶಾದ್ಯಂತ 20ಕ್ಕೂ ಹೆಚ್ಚು ಆಶಾಕಾರ್ಯಕರ್ತೆಯರು ಕೊರೋನಾಗೆ ಬಲಿಯಾಗಿದ್ದಾರೆ. ಮೇ 13ರಂದು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಬದನಕಟ್ಟೆ ಗ್ರಾಮದಲ್ಲಿ 51 ವರ್ಷದ ಆಶಾ ಕಾರ್ಯಕರ್ತೆ ಭೀಮಕ್ಕ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಮೃತಪಟ್ಟಿದ್ದರು. ಇಡೀ ದಿನ ಆಕೆಯ ಶವವನ್ನು , ಅವರ ಸಂಬಂಧಿಕರು ಆಸ್ಪತ್ರೆಯಲ್ಲೇ ಇಟ್ಟಿದ್ದರು. ಈ ಕೊರೋನಾ ಸೇನಾನಿಗೆ ವಿಮೆ ಸೌಲಭ್ಯ ಒದಗಿಸಬೇಕು ಎನ್ನುವುದು ಅವರ ಆಗ್ರಹವಾಗಿತ್ತು.

ಆದರೆ ವೈದ್ಯರು, ಆಕೆಗೆ ಕೊರೋನಾ ನೆಗಟೀವ್ ಎಂದು ಗುರುತಿಸಲಾಗಿದ್ದು, ಹೃದಯಾಘಾತದಿಂದ ಸತ್ತಿರುವುದರಿಂದ ವಿಮೆ ನೀಡಲಾಗುವುದಿಲ್ಲ ಎಂದು ವಾದಿಸಿದ್ದರು. ಸ್ಥಳೀಯ ಶಾಸಕರು ಮತ್ತು ಇತರ ನಾಯಕರು ಆಕೆಯ ವಿಚಾರವನ್ನು ಮುಖ್ಯಮಂತ್ರಿಯೊಡನೆ ಚರ್ಚಿಸಿ ನ್ಯಾಯ ಒದಗಿಸುವುದಾಗಿ ಆಶ್ವಾಸನೆ ನೀಡಿದ್ದರೂ, ಈವರೆಗೂ ಈಡೇರಿಸಿಲ್ಲ. ಈ ಲೇಖನ ಬರೆಯುವ ವೇಳೆಗೆ ಇಬ್ಬರು ಆಶಾ ಕಾರ್ಯಕರ್ತೆಯರು, ಓರ್ವ ಅಂಗನವಾಡಿ ಕಾರ್ಯಕರ್ತೆ, ಓರ್ವ ಆರೋಗ್ಯ ಸಹಾಯಕಿ ಕೊರೋನಾ ಸೋಂಕಿತರಾಗಿ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯ ನಂತರ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ.

ಕರ್ನಾಟಕದ ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ ಅಂಗನವಾಡಿ ಕಾರ್ಯಕರ್ತೆ ರೇಣುಕಾ ರೇಣುಕೇಗೌಡರ್ ಇತ್ತೀಚೆಗೆ ತಾನೇ ಕೋವಿದ್ 19 ನಿಂದ ಚೇತರಿಸಿಕೊಂಡಿದ್ದಾರೆ. ಕಂಟೈನ್‍ಮೆಂಟ್ ವಲಯಗಳಲ್ಲಿ ಸಂಬಂಧಪಟ್ಟ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯೂ ಸಹ ಪ್ರತಿನಿತ್ಯ ಸೋಂಕಿತರ ಮತ್ತಿತರರ ಮನೆಗಳಿಗೆ ಭೇಟಿ ನೀಡಬೇಕು ಎಂಬ ನಿಯಮ ಇದ್ದರೂ ಸಹ ಯಾರೊಬ್ಬರೂ ತಿರುಗಿ ನೋಡುವುದಿಲ್ಲ.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮಾತ್ರ ಪ್ರತಿನಿತ್ಯ ಮನೆ ಮನೆ ಸಮೀಕ್ಷೆ ನಡೆಸುವುದು, ಪಾಸಿಟಿವ್ ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವುದು, ಪ್ರಾಥಮಿಕ ಮತ್ತು ತರುವಾಯದ ಸೋಂಕು ತಗುಲಿದವರನ್ನು ಪತ್ತೆ ಹಚ್ಚುವುದು, ಕಂಟೈನ್‍ಮೆಂಟ್ ವಲಯಗಳಲ್ಲಿ ಗಸ್ತು ತಿರುಗುವುದು, ಆಹಾರ ಮತ್ತು ಔಷಧ ಪದಾರ್ಥಗಳನ್ನು ವಿತರಿಸುವುದು ಈ ಎಲ್ಲ ಕೆಲಸಗಳನ್ನೂ ನಿರ್ವಹಿಸಬೇಕಾಗುತ್ತದೆ. ಕೆಲವು ಗ್ರಾಮಗಳಲ್ಲಿ ನೆರೆಹೊರೆಯವರು, ಗುಣಮುಖರಾದ ಕೊರೋನಾ ಸೋಂಕಿತರಿಗೆ ಹಾಲು ಮತ್ತಿತರ ಪದಾರ್ಥಗಳನ್ನು ಒದಗಿಸಲು ನಿರಾಕರಿಸಿದಾಗ ಪಕ್ಕದ ಹಳ್ಳಿಯಿಂದ ತಂದು ನೀಡಬೇಕಾಗುತ್ತದೆ ” ಎನ್ನುತ್ತಾರೆ ರೇಣುಕಾ ರೇಣುಕೇಗೌಡರ್.

ಬಹಿಷ್ಕೃತರಾದಾಗ

ರೇಣುಕಾ ಅವರಿಗೆ ಕೊರೋನಾ ಸೋಂಕು ತಗುಲಿದ ಸಂದರ್ಭದಲ್ಲಿ ಆಕೆ 20 ಪಾಸಿಟೀವ್ ಪ್ರಕರಣಗಳಿದ್ದ, ಹೆಚ್ಚಿನ ಅಪಾಯ ಇದ್ದ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಗುಣಮುಖರಾದ ನಂತರ ಮನೆಗೆ ಹಿಂದಿರುಗಿದಾಗ ಗ್ರಾಮಸ್ಥರು ಆಕೆಯನ್ನು ಬಹಿಷ್ಕರಿಸಿದ್ದರು. “ ನನ್ನ ನೆರೆಹೊರೆಯವರು ನನ್ನಿಂದ ಮತ್ತು ನನ್ನ ಮಗಳಿಂದ ದೂರ ಉಳಿದರು, ನಾನು ಕೆಲಸ ಮಾಡುವಲ್ಲಿಯೂ ಸಹ ಕಳಂಕ ಹೊತ್ತುಕೊಂಡೇ ಇರಬೇಕಾಯಿತು, ಈ ರೋಗದ ಬಗ್ಗೆ ಬಹಳಷ್ಟು ಜನರಿಗೆ ಅನಗತ್ಯವಾದ ಭೀತಿ ಆವರಿಸಿದೆ ಹಾಗಾಗಿ ನೀವು ಗುಣಮುಖರಾಗಿದ್ದರೂ ಬಹಳಷ್ಟು ಜನರು ನಿಮ್ಮಿಂದ ದೂರವೇ ಇರುತ್ತಾರೆ ” ಎಂದು ವಿಷಾದದಿಂದ ಹೇಳುತ್ತಾರೆ ರೇಣುಕ.

ರೇಣುಕಾ ಅಂಗನವಾಡಿ ಕಾರ್ಯಕರ್ತೆಯಾಗಿ 19 ವರ್ಷ ಸೇವೆ ಸಲ್ಲಿಸಿದ್ದಾರೆ. ತಿಂಗಳಿಗೆ 500 ರೂ ಸಂಬಳದಿಂದ ಆರಂಭವಾದ ಅವರ ನೌಕರಿಯಲ್ಲಿ ಈಗ ತಿಂಗಳಿಗೆ 10 ಸಾವಿರ ರೂ ವೇತನ ಪಡೆಯುತ್ತಿದ್ದಾರೆ. ಮುಂಚೂಣಿಯಲ್ಲಿ ನಿಂತು ಆರೋಗ್ಯ ಸೇವೆ ಸಲ್ಲಿಸುವ ಸೇನಾನಿಗಳನ್ನು ರಾಜ್ಯ ಸರ್ಕಾರ ಸಂವೇದನೆಯೇ ಇಲ್ಲದೆ ನಿರ್ವಹಿಸುತ್ತಿರುವ ರೀತಿಗೆ ರಾಜ್ಯದ ಕಾರ್ಮಿಕ ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸಿವೆ.

ಈ ಕುರಿತು ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ಹೀಗೆ ಹೇಳುತ್ತಾರೆ ; “ ಭೀಮಕ್ಕ ತಮ್ಮ ಕರ್ತವ್ಯ ನಿರ್ವಹಿಸುವ ವೇಳೆಯಲ್ಲಿ ಸಾಯಲಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತದೆ. ಆದರೆ ಆಕೆ ಕುಸಿದು ಬಿದ್ದ ಸಂದರ್ಭದಲ್ಲಿ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದರು. ಇದನ್ನು ಕರ್ತವ್ಯದ ವೇಳೆಯ ಸಾವು ಅಲ್ಲ ಎಂದು ಹೇಗೆ ನಿರ್ಧರಿಸಲು ಸಾಧ್ಯ ? ಎಲ್ಲ ಆಶಾ ಕಾರ್ಯಕರ್ತೆಯರನ್ನು, ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಆರೋಗ್ಯ ಸಹಾಯಕರನ್ನು ಕೂಡಲೇ ಖಾಯಂ ನೌಕರರು ಎಂದು ಘೋಷಿಸಿ ಇತರ ಸರ್ಕಾರಿ ನೌಕರರಿಗೆ ಒದಗಿಸುವ ವೇತನ ಮತ್ತು ವಿಮೆ ಮುಂತಾದ ಸೌಲಭ್ಯಗಳನ್ನು ಒದಗಿಸಲು ನಾವು ಆಗ್ರಹಿಸುತ್ತೇವೆ. ”

ಆಶಾ ಕಾರ್ಯಕರ್ತೆಯರನ್ನು ಪ್ರತಿನಿಧಿಸುವ ಪ್ರಬಲ ಕಾರ್ಮಿಕ ಸಂಘಟನೆಗಳು ಇರುವೆಡೆಯೆಲ್ಲಾ ಅವರ ಆಗ್ರಹಗಳಿಗೆ ಕಿವಿಗೊಡಲಾಗುತ್ತದೆ. ಮಹಾರಾಷ್ಟ್ರದಲ್ಲಿ ಕಳೆದ ಸೆಪ್ಟಂಬರ್ ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ವೇತನ ಪಾವತಿ ಮಾಡಿರಲಿಲ್ಲ. ಆಶಾ ಕಾರ್ಯಕರ್ತೆಯರ ಸಂಘಟನೆ ಮುಷ್ಕರಕ್ಕೆ ಕರೆ ನೀಡಿತ್ತು. ಕೂಡಲೇ ಸ್ಪಂದಿಸಿದ ಸರ್ಕಾರ ವೇತನ ಪಾವತಿಸಲು ಒಪ್ಪಿಕೊಂಡಿತ್ತು. ಆದರೆ ತೆಲಂಗಾಣ ಮತ್ತು ಕೇರಳ ಸರ್ಕಾರದಂತೆ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡುವುದು ಇನ್ನೂ ಸ್ಪಷ್ಟವಾಗಿಲ್ಲ.

ಕೊರೋನಾ ವ್ಯಾಪಿಸುತ್ತಿರುವುದರಿಂದ ಕಾರ್ಯಕರ್ತೆಯರ ಮೇಲೆ ಕೆಲಸದ ಒತ್ತಡ ಹೆಚ್ಚಾಗಿರುವುದನ್ನು ಕಂಡು ಕೇರಳ ಮತ್ತು ತೆಲಂಗಾಣ ಸರ್ಕಾರಗಳು ಆಶಾ ಕಾರ್ಯಕರ್ತೆಯರ ಮಾಸಿಕ ವೇತನವನ್ನು 7000 ರೂಗಳಿಗೆ ಹೆಚ್ಚಿಸಿವೆ. ಕರ್ನಾಟಕದಲ್ಲಿ 10 ಸಾವಿರ ವೇತನ ನೀಡಲಾಗುತ್ತಿದೆ. ಉತ್ತರ ಪ್ರದೇಶ, ಹರಿಯಾಣ ಮತ್ತು ಪಶ್ಚಿಮ ಬಂಗಾಲ ರಾಜ್ಯಗಳಲ್ಲೂ ವೇತನ ಪಾವತಿಯಲ್ಲಿ ವಿಳಂಬ ಮಾಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ 2000 ರೂ ಮತ್ತು ರಾಜ್ಯ ಸರ್ಕಾರಗಳು 2000 ರೂ ವೇತನ ನಿಗದಿಪಡಿಸಿವೆ.

ಘನತೆಯ ಹಕ್ಕು

ಅಮ್ನೆಸ್ಟಿ ಇಂಟರ್‍ನ್ಯಾಷನಲ್ ಸಂಸ್ಥೆಯ ವರದಿಯೊಂದರ ಪ್ರಕಾರ ಏಪ್ರಿಲ್ 28ರ ವೇಳೆಗೇ ವಿಶ್ವ ಆರೋಗ್ಯ ಸಂಸ್ಥೆಯು ಎಲ್ಲ ದೇಶಗಳಿಗೂ ಸಂದೇಶವನ್ನು ರವಾನಿಸಿದ್ದು, ಎಲ್ಲ ಸರ್ಕಾರಗಳು, ಉದ್ಯೋಗದಾತರು, ಕಾರ್ಮಿಕ ಸಂಘಟನೆಗಳು ಮತ್ತು ಜಾಗತಿಕ ಸಮುದಾಯದ ಸಂಘ ಸಂಸ್ಥೆಗಳು, ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರ ವೃತ್ತಿಪರ ಆರೋಗ್ಯ ರಕ್ಷಣೆ ಮತ್ತು ಸುಭದ್ರತೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆಯೂ, ಅವರಿಗೆ ಗೌರವಯುತವಾದ ಕಾರ್ಯಕ್ಷೇತ್ರದ ಪರಿಸರವನ್ನು ಒದಗಿಸುವಂತೆಯೂ, ಅವರ ರಕ್ಷಣೆಗಾಗಿ ರಾಷ್ಟ್ರೀಯ ಯೋಜನೆಗಳನ್ನು ರೂಪಿಸುವಂತೆಯೂ ಆಗ್ರಹಿಸಿತ್ತು.

ಈಗ ಕೋವಿದ್ 19 ನಿಯಂತ್ರಣ ತಪ್ಪಿ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ನಿರೀಕ್ಷೆಯನ್ನೂ ಮೀರಿ ಹೆಚ್ಚಾಗಿದೆ. ಕೋವಿದ್ 19 ಸ್ಥಳೀಯ ಮಟ್ಟದಲ್ಲಿ ಪ್ರಸರಣವಾಗದಂತೆ ತಡೆಗಟ್ಟಲು ರೂಪಿಸಲಾದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾದರಿ ಯೋಜನೆಯ ಅನುಸಾರ, ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡುವುದೇ ಅಲ್ಲದೆ ದಿನನಿತ್ಯ ಸೊಂಕು ಲಕ್ಷಣಗಳಿರುವ ಮತ್ತು ಲಕ್ಷಣಗಳಿಲ್ಲದಿರುವವರ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಬೇಕಾಗುತ್ತದೆ.

ಜನವರಿಯಲ್ಲಿ ದೇಶದ ಪ್ರಪ್ರಥಮ ಕೋವಿದ್ ಪ್ರಕರಣ ದಾಖಲಾದ ಕೇರಳದ ತ್ರಿಸೂರ್ ಜಿಲ್ಲೆಯಲ್ಲಿ ಫೆಬ್ರವರಿಯಿಂದಲೇ ಹೊರ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಬರುವ ಪ್ರಯಾಣಿಕರ ಆರೋಗ್ಯದ ಮೇಲೆ ನಿಗಾ ವಹಿಸುವಂತೆ ಎಚ್ಚರವಹಿಸಲು ಅಜಿತಾ ರಾಜನ್ ಅವರಂತಹ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿತ್ತು.

ಕಲ್ಲಿಕೋಟೆಯಲ್ಲಿ ಸಿಐಟಿಯು ಸಂಯೋಜಿತ ಆಶಾ ಕಾರ್ಯಕರ್ತೆಯರ ಸಂಘದ ಕೇರಳ ರಾಜ್ಯಾಧ್ಯಕ್ಷೆಯಾದ ಪ್ರೇಮ “ ನಾವು ದಿನವಿಡೀ ಕೆಲಸ ಹೊಂದಿರುತ್ತೇವೆ, ಹೊರ ರಾಜ್ಯಗಳಿಂದ ಬರುವವರು ಮಧ್ಯರಾತ್ರಿ ಬಂದರೂ,, ನೆರೆಹೊರೆಯವರು ನಮಗೆ ದೂರವಾಣಿ ಮೂಲಕ ರಾತ್ರಿ ವೇಳೆಯೇ ಮಾಹಿತಿ ನೀಡುತ್ತಾರೆ, ಇದರೊಂದಿಗೆ ಕ್ವಾರಂಟೈನ್‍ನಲ್ಲಿರುವವರಿಗೆ ನಾವು ಸಾಂತ್ವನ ನೀಡುವುದೂ ಅಷ್ಟೇ ಮುಖ್ಯವಾಗಿರುತ್ತದೆ ” ಎಂದು ಹೇಳುತ್ತಾರೆ.

ಕೊಚಿ ನಗರದಲ್ಲಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆ ಲತಾ ರಾಜು ಮನೆಯಲ್ಲೇ ಕ್ವಾರಂಟೈನ್ ಆಗಿರುವ ಸೋಂಕಿತರ ಎಲ್ಲ ವಿವರಗಳನ್ನೂ ನೋಟ್ ಪುಸ್ತಕಗಳಲ್ಲಿ ದಾಖಲಿಸಿದ್ದಾರೆ. ಇವರು ಎಲ್ಲಿ ನೆಲೆಸಿದ್ದಾರೆ, ಎಲ್ಲಿಗೆ ಅಥವಾ ಎಲ್ಲಿಂದ ಪ್ರಯಾಣ ಮಾಡಿದ್ದಾರೆ, ಅವರ ಸಂಪರ್ಕ ಸಂಖ್ಯೆ ಹೀಗೆ ಎಲ್ಲವನ್ನೂ ದಾಖಲಿಸಿ ಹಲವು ಪುಸ್ತಕಗಳನ್ನು ತುಂಬಿಸಿದ್ದಾರೆ.

ಇದರೊಟ್ಟಿಗೆ ಒಂಟಿಯಾಗಿ ಜೀವನ ನಡೆಸುತ್ತಿರುವ ವೃದ್ಧರು, ಈಗಾಗಲೇ ಇತರ ಅನಾರೋಗ್ಯ ಸಮಸ್ಯೆ ಹೊಂದಿರುವವರು, ಗರ್ಭಿಣಿ ಮಹಿಳೆಯರು ಎಲ್ಲರ ಮಾಹಿತಿಯನ್ನು ಸಂಗ್ರಹಿಸಿ ದಾಖಲಿಸಿದ್ದಾರೆ. ಸಂಜೆ ವೇಳೆ ಈ ಅಂಕಿಅಂಶಗಳನ್ನು ಸಾರ್ವಜನಿಕ ಆರೋಗ್ಯ ಶುಶ್ರೂಷಕಿಯರಿಗೆ ಮತ್ತು ಆರೋಗ್ಯ ಪರೀಕ್ಷಕರಿಗೆ ಕಳುಹಿಸುವ ಮೂಲಕ ರಾಜ್ಯ ಮಟ್ಟದ ಮಾಹಿತಿ ಕೋಶಕ್ಕೆ ಲತಾರಾಜು ತಮ್ಮ ಕೊಡುಗೆ ಸಲ್ಲಿಸುತ್ತಾರೆ.

ಕೇರಳದ ಆಶಾ ಕಾರ್ಯಕರ್ತೆಯರು ಅನೇಕರ ಮನೆಗಳಿಗೆ ಆಹಾರ ಪದಾರ್ಥಗಳು, ದವಸ ಧಾನ್ಯಗಳು, ಔಷಧಿಗಳನ್ನು ಮತ್ತು ಸಮುದಾಯ ಅಡುಗೆ ಮನೆಯಿಂದ ಊಟ ತಿಂಡಿಯನ್ನೂ ತಲುಪಿಸುತ್ತಿದ್ದಾರೆ. ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳಿಗೆ , ಮನೆಗಳಿಗೆ ಹಿಂದಿರುಗಲು ಆರಂಭಿಸಿದಾಗ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚಾಗಿತ್ತು. ಮನೆಯಲ್ಲೇ ಕ್ವಾರಂಟೈನ್ ಆಗಿದ್ದವರ ಬಗ್ಗೆ ನಿಗಾವಹಿಸಲು ರೂಪಿಸಲಾಗಿದ್ದ ವಾರ್ಡ್‍ಮಟ್ಟದ ಸಮಿತಿಗಳಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿತ್ತು.

ಸಮಿತಿಯ ಸದಸ್ಯರೊಡನೆ ಕ್ವಾರಂಟೈನ್‍ಗೆ ಒಳಗಾದವರನ್ನು ಭೇಟಿಯಾಗುವುದೇ ಅಲ್ಲದೆ ಅಲ್ಲಿ ಕ್ವಾರಂಟೈನ್ ಮಾಡಲು ಅನುಕೂಲಕರ ಪರಿಸ್ಥಿತಿ ಇದೆಯೇ, ಮನೆಯೊಳಗೆ ಬಚ್ಚಲು ಮತ್ತು ಶೌಚಾಲಯ ಇದೆಯೇ ಎನ್ನುವುದನ್ನು ಖಚಿತಪಡಿಸಿಕೊಂಡು ವರದಿ ಮಾಡುವುದು ಇವರ ಜವಾಬ್ದಾರಿಯಾಗಿತ್ತು. ನಂತರ ಕುಟುಂಬದ ಇತರ ಸದಸ್ಯರಿಗೆ ಸುರಕ್ಷತಾ ವಿಧಾನಗಳ ಬಗ್ಗೆ ತಿಳುವಳಿಕೆ ನೀಡುವುದೂ ಇವರ ಹೊಣೆಯಾಗಿತ್ತು.

ದುರದೃಷ್ಟಕರ ಸಂಗತಿ ಎಂದರೆ ಅನೇಕ ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಖಾಸಗಿ ಸುರಕ್ಷತಾ ಉಪಕರಣಗಳಾದ ಮಾಸ್ಕ್, ಕೈಗವುಸು ಮತ್ತು ಮುಖ ರಕ್ಷಕಗಳನ್ನು ಒದಗಿಸಿಲ್ಲ. ಅನೇಕರು ಮನೆಯಲ್ಲಿ ತಾವೇ ಹೊಲಿದ ಬಟ್ಟೆಯ ಮಾಸ್ಕ್ ಗಳನ್ನು ಧರಿಸುತ್ತಿದ್ದು, ಕೆಲವರು ತಮ್ಮ ದುಪ್ಪಟ್ಟ ಬಳಸುತ್ತಿದ್ದಾರೆ. ಕೇರಳದ ತಿರುವನಂತಪುರಂ, ಪಥನಮತಿಟ್ಟ, ಮಾಲಪ್ಪುರಂ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರೇ ಸೋಂಕಿಗೆ ಒಳಗಾದಾಗ ಇವರಲ್ಲೂ ಆತಂಕ ಹೆಚ್ಚಾಗಿದೆ.

ನಮ್ಮಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿ ಪಾಸಿಟೀವ್ ಕಂಡುಬಂದರೆ ನಮ್ಮ ಸಂಪರ್ಕದಲ್ಲಿರುವವರನ್ನು ಗುರುತಿಸುವ ಪ್ರಕ್ರಿಯೆ ಭೀಕರವಾಗಿರುತ್ತದೆ ” ಎನ್ನುತ್ತಾರೆ ಲತಾ ರಾಜು. ಆಶಾ ಕಾರ್ಯಕರ್ತೆಯರ ಕಾರ್ಯಕ್ಷಮತೆ ಮತ್ತು ಅವರ ವರದಿಗಾರಿಕೆಯೇ ದೇಶದ ಕೋವಿದ್ 19 ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಹಿನ್ನೆಲೆಯಲ್ಲಿ ನೋಡಿದಾಗ, ಈ ಕಾರ್ಯಕರ್ತೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ಆಡಳಿತ ವ್ಯವಸ್ಥೆ ಅಸಡ್ಡೆ ತೋರುತ್ತಿರುವುದು ನಿಜಕ್ಕೂ ದುರದೃಷ್ಟಕರ.

ಇತ್ತೀಚಿನ ತಮ್ಮ ಲೇಖನವೊಂದರಲ್ಲಿ ಡಾ ಎಮ್ ಎಸ್ ಶೇಷಾದ್ರಿ ಮತ್ತು ಟಿ ಜಾಕಬ್ ಹೇಳುವಂತೆ “ಮುಂಬರುವ ದಿನಗಳಲ್ಲಿ ಆಡಳಿತ ವ್ಯವಸ್ಥೆ ಕೈಗೊಳ್ಳಬೇಕಾದ ಅತ್ಯಂತ ಮುಖ್ಯ ಕ್ರಮ ಎಂದರೆ ನಮ್ಮ ಬಳಿ ಇರುವ ಎಲ್ಲ ಸಾಧನಗಳನ್ನೂ ಬಳಸಿ ಗ್ರಾಮೀಣ ಜನತೆಯಲ್ಲಿ ಜಾಗೃತಿ , ತಿಳುವಳಿಕೆ ಮೂಡಿಸುವುದು. ನಾವು ಅವರಿಗೆ ಸೂಕ್ತವಾದ ಮಾಹಿತಿಯನ್ನು ಒದಗಿಸಬೇಕು ”(ದ ಹಿಂದೂ ಪತ್ರಿಕೆ). ಈ ಮಹತ್ಕಾರ್ಯವನ್ನು ನಿರ್ವಹಿಸಲು ಬಹುಶಃ ದೇಶದ ಯಾವುದೇ ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರನ್ನು ಹೊರತುಪಡಿಸಿ ಮತ್ತಾರೂ ನೆನಪಾಗುವುದಿಲ್ಲ.

ಏತನ್ಮಧ್ಯೆ ಕೊರೋನಾ ಸೋಂಕು ಪ್ರಕರಣಗಳು ನಿಯಂತ್ರಣವಿಲ್ಲದೆ ಹೆಚ್ಚಾಗುತ್ತಲೇ ಹೋಗುತ್ತಿರುವುದರಿಂದ ಅತಿಯಾದ ಎಚ್ಚರಿಕೆ ವಹಿಸಬೇಕಾದ ಸಂದರ್ಭವನ್ನೂ ಈ ಸೇನಾನಿಗಳು ಎದುರಿಸುತ್ತಿದ್ದಾರೆ. ಆದರೆ ಆಶಾ ಕಾರ್ಯಕರ್ತೆ ಪ್ರೇಮಾ ಹೇಳುವಂತೆ “ ಒಂದು ಸಣ್ಣ ಪ್ರಮಾದ ತಿಂಗಳಗಟ್ಟಳೆ ಮಾಡಿದ ಉತ್ತಮ ಕೆಲಸವನ್ನು ಮಣ್ಣುಪಾಲು ಮಾಡಿಬಿಡುತ್ತದೆ ”. ಹೀಗೆಯೇ ಈ ಸೇನಾನಿ ಪಡೆಗಳು ಶ್ರಮವಹಿಸುತ್ತಲೇ ಇರುತ್ತವೆ.

( ಕೆಲವು ಹೆಸರುಗಳನ್ನು ಗೋಪ್ಯತೆಯ ದೃಷ್ಟಿಯಿಂದ ಬದಲಿಸಲಾಗಿದೆ. ರಿಷಿಕೇಷ್ ಬಹದ್ದೂರ್ ದೇಸಾಯಿ ಮತ್ತು ಅಭಿನಯ ಹರಿಗೋವಿಂದ್ ಅವರಿಂದ ಮಾಹಿತಿ ಸಂಗ್ರಹಿಸಲಾಗಿದೆ)

ಕೃಪೆ: ಜುಲೈ 7 ತಾರೀಖು ‘ದಿ ಹಿಂದೂ’ ಇಂಗ್ಲಿಷ್ ದೈನಿಕ ದಲ್ಲಿ ಪ್ರಖಟವಾದ ಲೇಖನದ ಕನ್ನಡ ಅನುವಾದ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending