ದಿನದ ಸುದ್ದಿ
ಕೋವಿದ್ 19 | ಆಶಯ ಮತ್ತು ಪ್ರಾರ್ಥನೆಗಳ ನಡುವೆ
- ಮೂಲ : ಅನುರಾಧ ರಮಣ್, ಅನುವಾದ : ನಾ ದಿವಾಕರ
ಆಶಾ ಕಾರ್ಯಕರ್ತೆ ‘ಅನಿತಾ ಶರ್ಮ’ ತಮ್ಮ ಟ್ವಿಟರ್ ಖಾತೆಯನ್ನು ಹೊಂದಿದ್ದರು. ಆಕೆ ಮನಸ್ಸು ಮಾಡಿದ್ದಲ್ಲಿ ತಮ್ಮ ಟ್ವಿಟರ್ ಖಾತೆಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಟ್ಯಾಗ್ ಮಾಡಿ ತಮ್ಮನ್ನು ಹೀಗೆ ಪರಿಚಯಿಸಿಕೊಳ್ಳಬಹುದಿತ್ತು : “ನನ್ನ ಹೆಸರು ಅನಿತಾ, ಕೊರೋನಾ ವೈರಾಣು ವ್ಯಾಪಿಸಿದ ದಿನದಿಂದ ನನ್ನ ನೌಕರಿಯ ಚಿತ್ರಣವೇ ಬದಲಾಗಿಹೋಗಿದೆ. ಇತ್ತೀಚೆಗೆ ನಾನು ದಿನಕ್ಕೆ 12 ಗಂಟೆಗಳ ಕಾಲ ದುಡಿಯುತ್ತೇನೆ. ನನ್ನ ಅಲ್ಪ ವೇತನ ಮಾಸಿಕ 2000 ರೂಗಳು ಮಾತ್ರ. ಕಳೆದ ವರ್ಷ ಇದನ್ನು 4000 ರೂಗಳಿಗೆ ಹೆಚ್ಚಿಸಲಾದರೂ ಇದುವರೆಗೂ ಹೆಚ್ಚುವರಿ ವೇತನ ನೀಡಿಲ್ಲ. ನಿಜ ಹೇಳಬೇಕೆಂದರೆ ಈ ವರ್ಷದ ಫೆಬ್ರವರಿಯಿಂದ ನನಗೆ ವೇತನವನ್ನೇ ನೀಡಲಾಗಿಲ್ಲ .”
ಈ ಟ್ವಿಟರ್ ಸಂದೇಶವೇನಾದರೂ ಕಂಡಿದ್ದಲ್ಲಿ ಸಾಮಾಜಿಕ ಮಾಧ್ಯಮಗಳು ಆಕೆಯ ದನಿಗೆ ಮತ್ತಷ್ಟು ದನಿ ಸೇರಿಸಿ ಆಡಳಿತ ವ್ಯವಸ್ಥೆಯ ಗಮನ ಸೆಳೆಯುತ್ತಿದ್ದವು. ಹಾಗಾಗಿದ್ದಲ್ಲಿ ಕೂಡಲೇ ಅನುಕಂಪ, ಕರುಣೆ, ಮರುಕದ ಸಂದೇಶಗಳ ಮಹಾಪೂರವೇ ಹರಿದುಬರುತ್ತಿತ್ತು. ಈ ಸಂದೇಶದಿಂದ ನಾಗರಿಕ ಸಮಾಜದಲ್ಲಿ ಸೃಷ್ಟಿಯಾಗುತ್ತಿದ್ದ ಆಕ್ರೋಶ ಮತ್ತು ಸಿಗುತ್ತಿದ್ದ ಪ್ರಚಾರದಿಂದ ಆಕೆಯ ವೇತನ ಬಾಕಿಯನ್ನು ಒಂದೇ ಕಂತಿನಲ್ಲಿ ಪಾವತಿ ಮಾಡುವ ಪ್ರಕ್ರಿಯೆಯನ್ನೂ ನಿರೀಕ್ಷಿಸಬಹುದಿತ್ತು.
ಆದರೆ ಹಾಗಾಗಲಿಲ್ಲ. ಅನಿತಾ ಈಗಲೂ ತಲೆ ತಗ್ಗಿಸಿ ಕೆಲಸ ಮಾಡುತ್ತಲೇ ಇದ್ದಾರೆ. ತಮ್ಮದೇ ಹಳೆಯ ಬಟ್ಟೆಯಿಂದ ಹೊಲಿದ ಮುಖಗವುಸನ್ನು ಧರಿಸಿ ದುಡಿಯುತ್ತಿದ್ದಾರೆ. ಸಾಧ್ಯವಾದಷ್ಟು ಬಾರಿ ತಮ್ಮ ಕೈ ತೊಳೆಯುತ್ತಲೇ ಇರುತ್ತಾರೆ. (ಆಕೆಗೆ ಸರ್ಕಾರ ನೀಡಿರುವ 500 ಮಿಲಿ ಲೀಟರಿನ ಸ್ಯಾನಿಟೈಸರ್ ಖಾಲಿಯಾಗದಂತೆ ಎಚ್ಚರ ವಹಿಸುತ್ತಾರೆ). ಹೀಗೆಯೇ ಹರಿಯಾಣದಲ್ಲಿ ತಮ್ಮ ನಿತ್ಯ ಕಾಯಕದಲ್ಲಿ ತೊಡಗುತ್ತಾರೆ. ಸದಾ ಪ್ರಾರ್ಥನೆ ಮಾಡುತ್ತಲೇ ದುಡಿಮೆಯಲ್ಲಿ ನಿರತರಾಗುತ್ತಾರೆ. “ ನಾವು ಎಲ್ಲ ರೀತಿಯ ಕೆಲಸಗಳನ್ನೂ ನಿರ್ವಹಿಸಬೇಕು ಎಂದು ಅವರು ಅಪೇಕ್ಷಿಸುತ್ತಾರೆ ಆದರೆ ಆದರೆ ನಮಗೆ ಕನಿಷ್ಟ ರಕ್ಷಣೆಯನ್ನೂ ನೀಡುವುದಿಲ್ಲ ” ಎಂದು ಬೇಸರದಿಂದ ಹೇಳುತ್ತಲೇ ತಮ್ಮ ಕೆಲಸದಲ್ಲಿ ನಿರತರಾಗುತ್ತಾರೆ.
ಅನಿತ ಪ್ರತಿನಿತ್ಯ ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಹೊರಡುತ್ತಾರೆ. ಪ್ರತಿನಿತ್ಯ ಮಕ್ಕಳು, ವೃದ್ಧರು, ಮಹಿಳೆಯರು, ವಿಶೇಷವಾಗಿ ಗರ್ಭಿಣಿಯರನ್ನು ತಪಾಸಣೆಗೊಳಪಡಿಸುವುದು ಅವರ ಕಾಯಕ. ಪ್ರತಿನಿತ್ಯ ಸರಾಸರಿ 25 ಮನೆಗಳಿಗೆ ಭೇಟಿ ನೀಡುವ ಅನಿತ ಪ್ರತಿನಿತ್ಯ ಭೇಟಿ ಮಾಡುವವರ ಪಟ್ಟಿಯನ್ನು ಸಿದ್ಧಪಡಿಸಿ ಕಚೇರಿಗೆ ಸಲ್ಲಿಸುತ್ತಾರೆ. ಅನೇಕರಿಗೆ ಸಾವು ಬದುಕಿನ ನಡುವಿನ ವ್ಯತ್ಯಾಸವನ್ನು ಅರ್ಥಮಾಡಿಸುವಲ್ಲಿ ಅನಿತ ಯಶಸ್ವಿಯಾಗುತ್ತಾರೆ.
ತಳಮಟ್ಟದ ಕಾಯಕ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರೂಪಿಸುವ ಪ್ರತಿಯೊಂದು ಆರೋಗ್ಯ ಯೋಜನೆಯ ಯಶಸ್ಸಿನ ಹಿಂದೆ ಅನಿತ ಅವರಂತಹ ತಳಮಟ್ಟದ ಕಾರ್ಯಕರ್ತೆಯರ ಪರಿಶ್ರಮ ಮತ್ತು ದುಡಿಮೆ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಿಗೆ ಕಬ್ಬಿಣಾಂಶ ಇರುವ ಮಾತ್ರೆ ಕೊಡುವುದರಿಂದ, ಎಳೆ ಮಕ್ಕಳಿಗೆ ಲಸಿಕೆ ಹಾಕುವ ವೇಳಾಪಟ್ಟಿಯನ್ನು ಗಮನಿಸುವುದು, ಗರ್ಭಿಣಿಯರಿಗೆ ಲಸಿಕೆ ನೀಡುವುದು, ಕ್ಷಯರೋಗಿಗಳಿಗೆ ತಪಾಸಣೆ ನಡೆಸುವುದು ಈ ಕೆಲಸಗಳ ಜೊತೆಗೇ ಈಗ ಅನಿತ ಕೋವಿದ್ 19 ಸೋಂಕಿನ ಲಕ್ಷಣಗಳನ್ನು ಗುರುತಿಸಿ ಜನರಿಗೆ ಸಲಹೆ ನೀಡುವ ಕೆಲಸವನ್ನೂ ನಿರ್ವಹಿಸಬೇಕಿದೆ.
ತಮ್ಮ ಬದುಕಿನ ನೆಲೆಯನ್ನೇ ಕಳೆದುಕೊಂಡು ಸ್ವಗ್ರಾಮಗಳಿಗೆ ಹಿಂದಿರುಗಿರುವ ವಲಸೆ ಕಾರ್ಮಿಕರ ಬಗ್ಗೆಯೂ ಅನಿತ ಕಾಳಜಿ ವಹಿಸಬೇಕಾಗುತ್ತದೆ. ಈ ವಲಸೆ ಕಾರ್ಮಿಕರು ತಮಗೆ ನಿಗದಿಪಡಿಸಲಾದ ಕೇಂದ್ರಗಳಲ್ಲಿ ಕ್ವಾರಂಟೈನ್ ಅವಧಿಯನ್ನು ಸರಿಯಾಗಿ ಪೂರೈಸುವರೋ ಇಲ್ಲವೋ ಎನ್ನುವುದನ್ನೂ ಗಮನಿಸಬೇಕಾಗುತ್ತದೆ. ಇವೆಲ್ಲ ಕೆಲಸಗಳೊಟ್ಟಿಗೆ ಅನಿತ ತಮ್ಮ ಕುಟುಂಬ ಮತ್ತು ನೆರೆಹೊರೆಯವರಿಗೆ ಕೊರೋನಾ ಸೋಂಕಿನ ಕುರಿತು ಮಾಹಿತಿಯನ್ನು ನೀಡುತ್ತಿರಬೇಕು.
ಕೊರೋನಾ ನಂತರದಲ್ಲಿ ಹೆಚ್ಚಿನ ಒತ್ತಡ ಮತ್ತು ಜವಾಬ್ದಾರಿಯನ್ನು ಎದುರಿಸುತ್ತಿರುವ ಭಾರತದ ಆರೋಗ್ಯ ಸೇವೆಯ ಕ್ಷೇತ್ರದ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ಸಂಖ್ಯೆ 9 ಲಕ್ಷದಷ್ಟಿದೆ. ಅನಿತಾ ಅವರಂತಹ ಸೇನಾನಿಗಳು, ಯಾವುದೇ ರಕ್ಷಣಾ ಕವಚ ಇಲ್ಲದೆ, ಸಮರ್ಪಕ ವೇತನ ಇಲ್ಲದೆ, ಯಾವುದೇ ಸಂರಕ್ಷಕ ಅಸ್ತ್ರಗಳಿಲ್ಲದೆ, ಸೂಕ್ತ ಮಾನ್ಯತೆಯೂ ಇಲ್ಲದೆ ದುಡಿಯುತ್ತಿದ್ದಾರೆ.
ಅನೇಕ ಆಶಾ ಕಾರ್ಯಕರ್ತೆಯರು ಜನರ ಆಕ್ರೋಶವನ್ನೂ ಎದುರಿಸಬೇಕಾಗಿದೆ. “ಕಲ್ಲಿಕೋಟೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ರಸ್ತೆಯಲ್ಲಿ ನೆರೆದಿದ್ದ ಜನರ ಗುಂಪನ್ನು ಚದುರಿಸಲು ಮುಂದಾದಾಗ ಓರ್ವ ಕಾರ್ಯಕರ್ತೆಯ ದ್ವಿಚಕ್ರ ವಾಹನವನ್ನು ಜಖಂಗೊಳಿಸಲಾಗಿದೆ. ಕೆಲವರು, ನಾವೇಕೆ ಒಬ್ಬ ಮಹಿಳೆ ಹೇಳಿದಂತೆ ಕೇಳಬೇಕು ಎನ್ನುತ್ತಾರೆ ” ಎಂದು ವಿಷಾದದಿಂದ ಹೇಳುತ್ತಾರೆ ಕೇರಳದ ಆಶಾ ಕಾರ್ಯಕರ್ತೆ ಪಿ ಪಿ ಪ್ರೇಮ.
ಇನ್ನೂ ಅಘಾತಕಾರಿ ವಿಚಾರ ಎಂದರೆ ಈವರೆಗೂ ದೇಶಾದ್ಯಂತ 20ಕ್ಕೂ ಹೆಚ್ಚು ಆಶಾಕಾರ್ಯಕರ್ತೆಯರು ಕೊರೋನಾಗೆ ಬಲಿಯಾಗಿದ್ದಾರೆ. ಮೇ 13ರಂದು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಬದನಕಟ್ಟೆ ಗ್ರಾಮದಲ್ಲಿ 51 ವರ್ಷದ ಆಶಾ ಕಾರ್ಯಕರ್ತೆ ಭೀಮಕ್ಕ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಮೃತಪಟ್ಟಿದ್ದರು. ಇಡೀ ದಿನ ಆಕೆಯ ಶವವನ್ನು , ಅವರ ಸಂಬಂಧಿಕರು ಆಸ್ಪತ್ರೆಯಲ್ಲೇ ಇಟ್ಟಿದ್ದರು. ಈ ಕೊರೋನಾ ಸೇನಾನಿಗೆ ವಿಮೆ ಸೌಲಭ್ಯ ಒದಗಿಸಬೇಕು ಎನ್ನುವುದು ಅವರ ಆಗ್ರಹವಾಗಿತ್ತು.
ಆದರೆ ವೈದ್ಯರು, ಆಕೆಗೆ ಕೊರೋನಾ ನೆಗಟೀವ್ ಎಂದು ಗುರುತಿಸಲಾಗಿದ್ದು, ಹೃದಯಾಘಾತದಿಂದ ಸತ್ತಿರುವುದರಿಂದ ವಿಮೆ ನೀಡಲಾಗುವುದಿಲ್ಲ ಎಂದು ವಾದಿಸಿದ್ದರು. ಸ್ಥಳೀಯ ಶಾಸಕರು ಮತ್ತು ಇತರ ನಾಯಕರು ಆಕೆಯ ವಿಚಾರವನ್ನು ಮುಖ್ಯಮಂತ್ರಿಯೊಡನೆ ಚರ್ಚಿಸಿ ನ್ಯಾಯ ಒದಗಿಸುವುದಾಗಿ ಆಶ್ವಾಸನೆ ನೀಡಿದ್ದರೂ, ಈವರೆಗೂ ಈಡೇರಿಸಿಲ್ಲ. ಈ ಲೇಖನ ಬರೆಯುವ ವೇಳೆಗೆ ಇಬ್ಬರು ಆಶಾ ಕಾರ್ಯಕರ್ತೆಯರು, ಓರ್ವ ಅಂಗನವಾಡಿ ಕಾರ್ಯಕರ್ತೆ, ಓರ್ವ ಆರೋಗ್ಯ ಸಹಾಯಕಿ ಕೊರೋನಾ ಸೋಂಕಿತರಾಗಿ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯ ನಂತರ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ.
ಕರ್ನಾಟಕದ ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ ಅಂಗನವಾಡಿ ಕಾರ್ಯಕರ್ತೆ ರೇಣುಕಾ ರೇಣುಕೇಗೌಡರ್ ಇತ್ತೀಚೆಗೆ ತಾನೇ ಕೋವಿದ್ 19 ನಿಂದ ಚೇತರಿಸಿಕೊಂಡಿದ್ದಾರೆ. ಕಂಟೈನ್ಮೆಂಟ್ ವಲಯಗಳಲ್ಲಿ ಸಂಬಂಧಪಟ್ಟ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯೂ ಸಹ ಪ್ರತಿನಿತ್ಯ ಸೋಂಕಿತರ ಮತ್ತಿತರರ ಮನೆಗಳಿಗೆ ಭೇಟಿ ನೀಡಬೇಕು ಎಂಬ ನಿಯಮ ಇದ್ದರೂ ಸಹ ಯಾರೊಬ್ಬರೂ ತಿರುಗಿ ನೋಡುವುದಿಲ್ಲ.
“ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮಾತ್ರ ಪ್ರತಿನಿತ್ಯ ಮನೆ ಮನೆ ಸಮೀಕ್ಷೆ ನಡೆಸುವುದು, ಪಾಸಿಟಿವ್ ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವುದು, ಪ್ರಾಥಮಿಕ ಮತ್ತು ತರುವಾಯದ ಸೋಂಕು ತಗುಲಿದವರನ್ನು ಪತ್ತೆ ಹಚ್ಚುವುದು, ಕಂಟೈನ್ಮೆಂಟ್ ವಲಯಗಳಲ್ಲಿ ಗಸ್ತು ತಿರುಗುವುದು, ಆಹಾರ ಮತ್ತು ಔಷಧ ಪದಾರ್ಥಗಳನ್ನು ವಿತರಿಸುವುದು ಈ ಎಲ್ಲ ಕೆಲಸಗಳನ್ನೂ ನಿರ್ವಹಿಸಬೇಕಾಗುತ್ತದೆ. ಕೆಲವು ಗ್ರಾಮಗಳಲ್ಲಿ ನೆರೆಹೊರೆಯವರು, ಗುಣಮುಖರಾದ ಕೊರೋನಾ ಸೋಂಕಿತರಿಗೆ ಹಾಲು ಮತ್ತಿತರ ಪದಾರ್ಥಗಳನ್ನು ಒದಗಿಸಲು ನಿರಾಕರಿಸಿದಾಗ ಪಕ್ಕದ ಹಳ್ಳಿಯಿಂದ ತಂದು ನೀಡಬೇಕಾಗುತ್ತದೆ ” ಎನ್ನುತ್ತಾರೆ ರೇಣುಕಾ ರೇಣುಕೇಗೌಡರ್.
ಬಹಿಷ್ಕೃತರಾದಾಗ
ರೇಣುಕಾ ಅವರಿಗೆ ಕೊರೋನಾ ಸೋಂಕು ತಗುಲಿದ ಸಂದರ್ಭದಲ್ಲಿ ಆಕೆ 20 ಪಾಸಿಟೀವ್ ಪ್ರಕರಣಗಳಿದ್ದ, ಹೆಚ್ಚಿನ ಅಪಾಯ ಇದ್ದ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಗುಣಮುಖರಾದ ನಂತರ ಮನೆಗೆ ಹಿಂದಿರುಗಿದಾಗ ಗ್ರಾಮಸ್ಥರು ಆಕೆಯನ್ನು ಬಹಿಷ್ಕರಿಸಿದ್ದರು. “ ನನ್ನ ನೆರೆಹೊರೆಯವರು ನನ್ನಿಂದ ಮತ್ತು ನನ್ನ ಮಗಳಿಂದ ದೂರ ಉಳಿದರು, ನಾನು ಕೆಲಸ ಮಾಡುವಲ್ಲಿಯೂ ಸಹ ಕಳಂಕ ಹೊತ್ತುಕೊಂಡೇ ಇರಬೇಕಾಯಿತು, ಈ ರೋಗದ ಬಗ್ಗೆ ಬಹಳಷ್ಟು ಜನರಿಗೆ ಅನಗತ್ಯವಾದ ಭೀತಿ ಆವರಿಸಿದೆ ಹಾಗಾಗಿ ನೀವು ಗುಣಮುಖರಾಗಿದ್ದರೂ ಬಹಳಷ್ಟು ಜನರು ನಿಮ್ಮಿಂದ ದೂರವೇ ಇರುತ್ತಾರೆ ” ಎಂದು ವಿಷಾದದಿಂದ ಹೇಳುತ್ತಾರೆ ರೇಣುಕ.
ರೇಣುಕಾ ಅಂಗನವಾಡಿ ಕಾರ್ಯಕರ್ತೆಯಾಗಿ 19 ವರ್ಷ ಸೇವೆ ಸಲ್ಲಿಸಿದ್ದಾರೆ. ತಿಂಗಳಿಗೆ 500 ರೂ ಸಂಬಳದಿಂದ ಆರಂಭವಾದ ಅವರ ನೌಕರಿಯಲ್ಲಿ ಈಗ ತಿಂಗಳಿಗೆ 10 ಸಾವಿರ ರೂ ವೇತನ ಪಡೆಯುತ್ತಿದ್ದಾರೆ. ಮುಂಚೂಣಿಯಲ್ಲಿ ನಿಂತು ಆರೋಗ್ಯ ಸೇವೆ ಸಲ್ಲಿಸುವ ಸೇನಾನಿಗಳನ್ನು ರಾಜ್ಯ ಸರ್ಕಾರ ಸಂವೇದನೆಯೇ ಇಲ್ಲದೆ ನಿರ್ವಹಿಸುತ್ತಿರುವ ರೀತಿಗೆ ರಾಜ್ಯದ ಕಾರ್ಮಿಕ ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸಿವೆ.
ಈ ಕುರಿತು ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ಹೀಗೆ ಹೇಳುತ್ತಾರೆ ; “ ಭೀಮಕ್ಕ ತಮ್ಮ ಕರ್ತವ್ಯ ನಿರ್ವಹಿಸುವ ವೇಳೆಯಲ್ಲಿ ಸಾಯಲಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತದೆ. ಆದರೆ ಆಕೆ ಕುಸಿದು ಬಿದ್ದ ಸಂದರ್ಭದಲ್ಲಿ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದರು. ಇದನ್ನು ಕರ್ತವ್ಯದ ವೇಳೆಯ ಸಾವು ಅಲ್ಲ ಎಂದು ಹೇಗೆ ನಿರ್ಧರಿಸಲು ಸಾಧ್ಯ ? ಎಲ್ಲ ಆಶಾ ಕಾರ್ಯಕರ್ತೆಯರನ್ನು, ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಆರೋಗ್ಯ ಸಹಾಯಕರನ್ನು ಕೂಡಲೇ ಖಾಯಂ ನೌಕರರು ಎಂದು ಘೋಷಿಸಿ ಇತರ ಸರ್ಕಾರಿ ನೌಕರರಿಗೆ ಒದಗಿಸುವ ವೇತನ ಮತ್ತು ವಿಮೆ ಮುಂತಾದ ಸೌಲಭ್ಯಗಳನ್ನು ಒದಗಿಸಲು ನಾವು ಆಗ್ರಹಿಸುತ್ತೇವೆ. ”
ಆಶಾ ಕಾರ್ಯಕರ್ತೆಯರನ್ನು ಪ್ರತಿನಿಧಿಸುವ ಪ್ರಬಲ ಕಾರ್ಮಿಕ ಸಂಘಟನೆಗಳು ಇರುವೆಡೆಯೆಲ್ಲಾ ಅವರ ಆಗ್ರಹಗಳಿಗೆ ಕಿವಿಗೊಡಲಾಗುತ್ತದೆ. ಮಹಾರಾಷ್ಟ್ರದಲ್ಲಿ ಕಳೆದ ಸೆಪ್ಟಂಬರ್ ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ವೇತನ ಪಾವತಿ ಮಾಡಿರಲಿಲ್ಲ. ಆಶಾ ಕಾರ್ಯಕರ್ತೆಯರ ಸಂಘಟನೆ ಮುಷ್ಕರಕ್ಕೆ ಕರೆ ನೀಡಿತ್ತು. ಕೂಡಲೇ ಸ್ಪಂದಿಸಿದ ಸರ್ಕಾರ ವೇತನ ಪಾವತಿಸಲು ಒಪ್ಪಿಕೊಂಡಿತ್ತು. ಆದರೆ ತೆಲಂಗಾಣ ಮತ್ತು ಕೇರಳ ಸರ್ಕಾರದಂತೆ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡುವುದು ಇನ್ನೂ ಸ್ಪಷ್ಟವಾಗಿಲ್ಲ.
ಕೊರೋನಾ ವ್ಯಾಪಿಸುತ್ತಿರುವುದರಿಂದ ಕಾರ್ಯಕರ್ತೆಯರ ಮೇಲೆ ಕೆಲಸದ ಒತ್ತಡ ಹೆಚ್ಚಾಗಿರುವುದನ್ನು ಕಂಡು ಕೇರಳ ಮತ್ತು ತೆಲಂಗಾಣ ಸರ್ಕಾರಗಳು ಆಶಾ ಕಾರ್ಯಕರ್ತೆಯರ ಮಾಸಿಕ ವೇತನವನ್ನು 7000 ರೂಗಳಿಗೆ ಹೆಚ್ಚಿಸಿವೆ. ಕರ್ನಾಟಕದಲ್ಲಿ 10 ಸಾವಿರ ವೇತನ ನೀಡಲಾಗುತ್ತಿದೆ. ಉತ್ತರ ಪ್ರದೇಶ, ಹರಿಯಾಣ ಮತ್ತು ಪಶ್ಚಿಮ ಬಂಗಾಲ ರಾಜ್ಯಗಳಲ್ಲೂ ವೇತನ ಪಾವತಿಯಲ್ಲಿ ವಿಳಂಬ ಮಾಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ 2000 ರೂ ಮತ್ತು ರಾಜ್ಯ ಸರ್ಕಾರಗಳು 2000 ರೂ ವೇತನ ನಿಗದಿಪಡಿಸಿವೆ.
ಘನತೆಯ ಹಕ್ಕು
ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯ ವರದಿಯೊಂದರ ಪ್ರಕಾರ ಏಪ್ರಿಲ್ 28ರ ವೇಳೆಗೇ ವಿಶ್ವ ಆರೋಗ್ಯ ಸಂಸ್ಥೆಯು ಎಲ್ಲ ದೇಶಗಳಿಗೂ ಸಂದೇಶವನ್ನು ರವಾನಿಸಿದ್ದು, ಎಲ್ಲ ಸರ್ಕಾರಗಳು, ಉದ್ಯೋಗದಾತರು, ಕಾರ್ಮಿಕ ಸಂಘಟನೆಗಳು ಮತ್ತು ಜಾಗತಿಕ ಸಮುದಾಯದ ಸಂಘ ಸಂಸ್ಥೆಗಳು, ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರ ವೃತ್ತಿಪರ ಆರೋಗ್ಯ ರಕ್ಷಣೆ ಮತ್ತು ಸುಭದ್ರತೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆಯೂ, ಅವರಿಗೆ ಗೌರವಯುತವಾದ ಕಾರ್ಯಕ್ಷೇತ್ರದ ಪರಿಸರವನ್ನು ಒದಗಿಸುವಂತೆಯೂ, ಅವರ ರಕ್ಷಣೆಗಾಗಿ ರಾಷ್ಟ್ರೀಯ ಯೋಜನೆಗಳನ್ನು ರೂಪಿಸುವಂತೆಯೂ ಆಗ್ರಹಿಸಿತ್ತು.
ಈಗ ಕೋವಿದ್ 19 ನಿಯಂತ್ರಣ ತಪ್ಪಿ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ನಿರೀಕ್ಷೆಯನ್ನೂ ಮೀರಿ ಹೆಚ್ಚಾಗಿದೆ. ಕೋವಿದ್ 19 ಸ್ಥಳೀಯ ಮಟ್ಟದಲ್ಲಿ ಪ್ರಸರಣವಾಗದಂತೆ ತಡೆಗಟ್ಟಲು ರೂಪಿಸಲಾದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾದರಿ ಯೋಜನೆಯ ಅನುಸಾರ, ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡುವುದೇ ಅಲ್ಲದೆ ದಿನನಿತ್ಯ ಸೊಂಕು ಲಕ್ಷಣಗಳಿರುವ ಮತ್ತು ಲಕ್ಷಣಗಳಿಲ್ಲದಿರುವವರ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಬೇಕಾಗುತ್ತದೆ.
ಜನವರಿಯಲ್ಲಿ ದೇಶದ ಪ್ರಪ್ರಥಮ ಕೋವಿದ್ ಪ್ರಕರಣ ದಾಖಲಾದ ಕೇರಳದ ತ್ರಿಸೂರ್ ಜಿಲ್ಲೆಯಲ್ಲಿ ಫೆಬ್ರವರಿಯಿಂದಲೇ ಹೊರ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಬರುವ ಪ್ರಯಾಣಿಕರ ಆರೋಗ್ಯದ ಮೇಲೆ ನಿಗಾ ವಹಿಸುವಂತೆ ಎಚ್ಚರವಹಿಸಲು ಅಜಿತಾ ರಾಜನ್ ಅವರಂತಹ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿತ್ತು.
ಕಲ್ಲಿಕೋಟೆಯಲ್ಲಿ ಸಿಐಟಿಯು ಸಂಯೋಜಿತ ಆಶಾ ಕಾರ್ಯಕರ್ತೆಯರ ಸಂಘದ ಕೇರಳ ರಾಜ್ಯಾಧ್ಯಕ್ಷೆಯಾದ ಪ್ರೇಮ “ ನಾವು ದಿನವಿಡೀ ಕೆಲಸ ಹೊಂದಿರುತ್ತೇವೆ, ಹೊರ ರಾಜ್ಯಗಳಿಂದ ಬರುವವರು ಮಧ್ಯರಾತ್ರಿ ಬಂದರೂ,, ನೆರೆಹೊರೆಯವರು ನಮಗೆ ದೂರವಾಣಿ ಮೂಲಕ ರಾತ್ರಿ ವೇಳೆಯೇ ಮಾಹಿತಿ ನೀಡುತ್ತಾರೆ, ಇದರೊಂದಿಗೆ ಕ್ವಾರಂಟೈನ್ನಲ್ಲಿರುವವರಿಗೆ ನಾವು ಸಾಂತ್ವನ ನೀಡುವುದೂ ಅಷ್ಟೇ ಮುಖ್ಯವಾಗಿರುತ್ತದೆ ” ಎಂದು ಹೇಳುತ್ತಾರೆ.
ಕೊಚಿ ನಗರದಲ್ಲಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆ ಲತಾ ರಾಜು ಮನೆಯಲ್ಲೇ ಕ್ವಾರಂಟೈನ್ ಆಗಿರುವ ಸೋಂಕಿತರ ಎಲ್ಲ ವಿವರಗಳನ್ನೂ ನೋಟ್ ಪುಸ್ತಕಗಳಲ್ಲಿ ದಾಖಲಿಸಿದ್ದಾರೆ. ಇವರು ಎಲ್ಲಿ ನೆಲೆಸಿದ್ದಾರೆ, ಎಲ್ಲಿಗೆ ಅಥವಾ ಎಲ್ಲಿಂದ ಪ್ರಯಾಣ ಮಾಡಿದ್ದಾರೆ, ಅವರ ಸಂಪರ್ಕ ಸಂಖ್ಯೆ ಹೀಗೆ ಎಲ್ಲವನ್ನೂ ದಾಖಲಿಸಿ ಹಲವು ಪುಸ್ತಕಗಳನ್ನು ತುಂಬಿಸಿದ್ದಾರೆ.
ಇದರೊಟ್ಟಿಗೆ ಒಂಟಿಯಾಗಿ ಜೀವನ ನಡೆಸುತ್ತಿರುವ ವೃದ್ಧರು, ಈಗಾಗಲೇ ಇತರ ಅನಾರೋಗ್ಯ ಸಮಸ್ಯೆ ಹೊಂದಿರುವವರು, ಗರ್ಭಿಣಿ ಮಹಿಳೆಯರು ಎಲ್ಲರ ಮಾಹಿತಿಯನ್ನು ಸಂಗ್ರಹಿಸಿ ದಾಖಲಿಸಿದ್ದಾರೆ. ಸಂಜೆ ವೇಳೆ ಈ ಅಂಕಿಅಂಶಗಳನ್ನು ಸಾರ್ವಜನಿಕ ಆರೋಗ್ಯ ಶುಶ್ರೂಷಕಿಯರಿಗೆ ಮತ್ತು ಆರೋಗ್ಯ ಪರೀಕ್ಷಕರಿಗೆ ಕಳುಹಿಸುವ ಮೂಲಕ ರಾಜ್ಯ ಮಟ್ಟದ ಮಾಹಿತಿ ಕೋಶಕ್ಕೆ ಲತಾರಾಜು ತಮ್ಮ ಕೊಡುಗೆ ಸಲ್ಲಿಸುತ್ತಾರೆ.
ಕೇರಳದ ಆಶಾ ಕಾರ್ಯಕರ್ತೆಯರು ಅನೇಕರ ಮನೆಗಳಿಗೆ ಆಹಾರ ಪದಾರ್ಥಗಳು, ದವಸ ಧಾನ್ಯಗಳು, ಔಷಧಿಗಳನ್ನು ಮತ್ತು ಸಮುದಾಯ ಅಡುಗೆ ಮನೆಯಿಂದ ಊಟ ತಿಂಡಿಯನ್ನೂ ತಲುಪಿಸುತ್ತಿದ್ದಾರೆ. ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳಿಗೆ , ಮನೆಗಳಿಗೆ ಹಿಂದಿರುಗಲು ಆರಂಭಿಸಿದಾಗ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚಾಗಿತ್ತು. ಮನೆಯಲ್ಲೇ ಕ್ವಾರಂಟೈನ್ ಆಗಿದ್ದವರ ಬಗ್ಗೆ ನಿಗಾವಹಿಸಲು ರೂಪಿಸಲಾಗಿದ್ದ ವಾರ್ಡ್ಮಟ್ಟದ ಸಮಿತಿಗಳಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿತ್ತು.
ಸಮಿತಿಯ ಸದಸ್ಯರೊಡನೆ ಕ್ವಾರಂಟೈನ್ಗೆ ಒಳಗಾದವರನ್ನು ಭೇಟಿಯಾಗುವುದೇ ಅಲ್ಲದೆ ಅಲ್ಲಿ ಕ್ವಾರಂಟೈನ್ ಮಾಡಲು ಅನುಕೂಲಕರ ಪರಿಸ್ಥಿತಿ ಇದೆಯೇ, ಮನೆಯೊಳಗೆ ಬಚ್ಚಲು ಮತ್ತು ಶೌಚಾಲಯ ಇದೆಯೇ ಎನ್ನುವುದನ್ನು ಖಚಿತಪಡಿಸಿಕೊಂಡು ವರದಿ ಮಾಡುವುದು ಇವರ ಜವಾಬ್ದಾರಿಯಾಗಿತ್ತು. ನಂತರ ಕುಟುಂಬದ ಇತರ ಸದಸ್ಯರಿಗೆ ಸುರಕ್ಷತಾ ವಿಧಾನಗಳ ಬಗ್ಗೆ ತಿಳುವಳಿಕೆ ನೀಡುವುದೂ ಇವರ ಹೊಣೆಯಾಗಿತ್ತು.
ದುರದೃಷ್ಟಕರ ಸಂಗತಿ ಎಂದರೆ ಅನೇಕ ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಖಾಸಗಿ ಸುರಕ್ಷತಾ ಉಪಕರಣಗಳಾದ ಮಾಸ್ಕ್, ಕೈಗವುಸು ಮತ್ತು ಮುಖ ರಕ್ಷಕಗಳನ್ನು ಒದಗಿಸಿಲ್ಲ. ಅನೇಕರು ಮನೆಯಲ್ಲಿ ತಾವೇ ಹೊಲಿದ ಬಟ್ಟೆಯ ಮಾಸ್ಕ್ ಗಳನ್ನು ಧರಿಸುತ್ತಿದ್ದು, ಕೆಲವರು ತಮ್ಮ ದುಪ್ಪಟ್ಟ ಬಳಸುತ್ತಿದ್ದಾರೆ. ಕೇರಳದ ತಿರುವನಂತಪುರಂ, ಪಥನಮತಿಟ್ಟ, ಮಾಲಪ್ಪುರಂ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರೇ ಸೋಂಕಿಗೆ ಒಳಗಾದಾಗ ಇವರಲ್ಲೂ ಆತಂಕ ಹೆಚ್ಚಾಗಿದೆ.
“ನಮ್ಮಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿ ಪಾಸಿಟೀವ್ ಕಂಡುಬಂದರೆ ನಮ್ಮ ಸಂಪರ್ಕದಲ್ಲಿರುವವರನ್ನು ಗುರುತಿಸುವ ಪ್ರಕ್ರಿಯೆ ಭೀಕರವಾಗಿರುತ್ತದೆ ” ಎನ್ನುತ್ತಾರೆ ಲತಾ ರಾಜು. ಆಶಾ ಕಾರ್ಯಕರ್ತೆಯರ ಕಾರ್ಯಕ್ಷಮತೆ ಮತ್ತು ಅವರ ವರದಿಗಾರಿಕೆಯೇ ದೇಶದ ಕೋವಿದ್ 19 ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಹಿನ್ನೆಲೆಯಲ್ಲಿ ನೋಡಿದಾಗ, ಈ ಕಾರ್ಯಕರ್ತೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ಆಡಳಿತ ವ್ಯವಸ್ಥೆ ಅಸಡ್ಡೆ ತೋರುತ್ತಿರುವುದು ನಿಜಕ್ಕೂ ದುರದೃಷ್ಟಕರ.
ಇತ್ತೀಚಿನ ತಮ್ಮ ಲೇಖನವೊಂದರಲ್ಲಿ ಡಾ ಎಮ್ ಎಸ್ ಶೇಷಾದ್ರಿ ಮತ್ತು ಟಿ ಜಾಕಬ್ ಹೇಳುವಂತೆ “ಮುಂಬರುವ ದಿನಗಳಲ್ಲಿ ಆಡಳಿತ ವ್ಯವಸ್ಥೆ ಕೈಗೊಳ್ಳಬೇಕಾದ ಅತ್ಯಂತ ಮುಖ್ಯ ಕ್ರಮ ಎಂದರೆ ನಮ್ಮ ಬಳಿ ಇರುವ ಎಲ್ಲ ಸಾಧನಗಳನ್ನೂ ಬಳಸಿ ಗ್ರಾಮೀಣ ಜನತೆಯಲ್ಲಿ ಜಾಗೃತಿ , ತಿಳುವಳಿಕೆ ಮೂಡಿಸುವುದು. ನಾವು ಅವರಿಗೆ ಸೂಕ್ತವಾದ ಮಾಹಿತಿಯನ್ನು ಒದಗಿಸಬೇಕು ”(ದ ಹಿಂದೂ ಪತ್ರಿಕೆ). ಈ ಮಹತ್ಕಾರ್ಯವನ್ನು ನಿರ್ವಹಿಸಲು ಬಹುಶಃ ದೇಶದ ಯಾವುದೇ ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರನ್ನು ಹೊರತುಪಡಿಸಿ ಮತ್ತಾರೂ ನೆನಪಾಗುವುದಿಲ್ಲ.
ಏತನ್ಮಧ್ಯೆ ಕೊರೋನಾ ಸೋಂಕು ಪ್ರಕರಣಗಳು ನಿಯಂತ್ರಣವಿಲ್ಲದೆ ಹೆಚ್ಚಾಗುತ್ತಲೇ ಹೋಗುತ್ತಿರುವುದರಿಂದ ಅತಿಯಾದ ಎಚ್ಚರಿಕೆ ವಹಿಸಬೇಕಾದ ಸಂದರ್ಭವನ್ನೂ ಈ ಸೇನಾನಿಗಳು ಎದುರಿಸುತ್ತಿದ್ದಾರೆ. ಆದರೆ ಆಶಾ ಕಾರ್ಯಕರ್ತೆ ಪ್ರೇಮಾ ಹೇಳುವಂತೆ “ ಒಂದು ಸಣ್ಣ ಪ್ರಮಾದ ತಿಂಗಳಗಟ್ಟಳೆ ಮಾಡಿದ ಉತ್ತಮ ಕೆಲಸವನ್ನು ಮಣ್ಣುಪಾಲು ಮಾಡಿಬಿಡುತ್ತದೆ ”. ಹೀಗೆಯೇ ಈ ಸೇನಾನಿ ಪಡೆಗಳು ಶ್ರಮವಹಿಸುತ್ತಲೇ ಇರುತ್ತವೆ.
( ಕೆಲವು ಹೆಸರುಗಳನ್ನು ಗೋಪ್ಯತೆಯ ದೃಷ್ಟಿಯಿಂದ ಬದಲಿಸಲಾಗಿದೆ. ರಿಷಿಕೇಷ್ ಬಹದ್ದೂರ್ ದೇಸಾಯಿ ಮತ್ತು ಅಭಿನಯ ಹರಿಗೋವಿಂದ್ ಅವರಿಂದ ಮಾಹಿತಿ ಸಂಗ್ರಹಿಸಲಾಗಿದೆ)
ಕೃಪೆ: ಜುಲೈ 7 ತಾರೀಖು ‘ದಿ ಹಿಂದೂ’ ಇಂಗ್ಲಿಷ್ ದೈನಿಕ ದಲ್ಲಿ ಪ್ರಖಟವಾದ ಲೇಖನದ ಕನ್ನಡ ಅನುವಾದ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

