ದಿನದ ಸುದ್ದಿ

ಕೋವಿಡ್ ಸೋಂಕಿತ ಪೇದೆ ಆತ್ಮಹತ್ಯೆ: ಯಡಿಯೂರಪ್ಪ ಸಂತಾಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪಡೆಯ ಬೆಂಗಳೂರು ನಗರದ 4ನೇ ಬೆಟಾಲಿಯನ್‌ನಲ್ಲಿ ಸಶಸ್ತ್ರ ಪೇದೆಯಾಗಿದ್ದ ಮಂಜೇಶ್ ಅವರು, ಕೋವಿಡ್ ಸೋಂಕು ದೃಢಪಟ್ಟ ಕಾರಣ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಭಗವಂತ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದಿರುವ ಮುಖ್ಯಮಂತ್ರಿಗಳು, ಮೃತರ ಕುಟುಂಬಕ್ಕೆ ಸರ್ಕಾರದಿಂದ ದೊರಕಬಹುದಾದ ಎಲ್ಲ ಪರಿಹಾರ ಮತ್ತು ಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿಗಳು ಕೋವಿಡ್ ಸಂಬಂಧಿತ ಕೆಲಸಗಳಲ್ಲಿ ಮುಂಚೂಣಿಯಲ್ಲಿ ವಾರಿಯರ್ ಗಳಾಗಿ ಜೀವವನ್ನೇ ಪಣಕ್ಕಿಟ್ಟು ಶ್ಲಾಘನೀಯ ಕೆಲಸ ಮಾಡುತ್ತಿದ್ದು, ಅವರಿಗಾಗಿಯೇ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟಾರೆ, ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ ಇತರ ಪ್ರಮುಖ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಯಾವುದೇ ಸೋಂಕಿತ ನಾಗರಿಕರು ಹಾಗೂ ಸರ್ಕಾರಿ ಸಿಬ್ಬಂದಿ ಯಾವುದೇ ಕಾರಣಕ್ಕೂ ದೃತಿಗೆಡುವ ಅಗತ್ಯವಿಲ್ಲ. ಸರ್ಕಾರ ಸದಾ ನಿಮ್ಮೆಲ್ಲರ ಜೊತೆಗಿರಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version