ದಿನದ ಸುದ್ದಿ
ಕೋವಿಡ್ ಜಿಲ್ಲಾ ತಜ್ಞ ವೈದ್ಯರ ಸಲಹಾ ಸಮಿತಿ ಸಭೆ ಶೀಘ್ರ ರೋಗ ಪತ್ತೆಯಿಂದ ಮರಣ ಸಂಭವ ಕಡಿಮೆ ; ಹೆಚ್ಚುವರಿ ಆಂಬುಲೆನ್ಸ್ ಖರೀದಿಗೆ ಆದೇಶ
ಸುದ್ದಿದಿನ,ದಾವಣಗೆರೆ : ಕೋವಿಡ್ ರೋಗವನ್ನು ಬೇಗ ಪತ್ತೆ ಹಚ್ಚಿದಲ್ಲಿ, ರೋಗಿಯ ಮರಣ ಸಾಧ್ಯತೆಯನ್ನು ಕಡಿಮೆಗೊಳಿಸಬಹುದು. ತಡವಾಗಿ ಆಸ್ಪತ್ರೆಗೆ ದಾಖಲಾಗುವವರಲ್ಲಿಯೇ ಹೆಚ್ಚಿನ ಮರಣ ಪ್ರಕರಣಗಳು ವರದಿಯಾಗಿದ್ದು, ಹೀಗಾಗಿ ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ತಜ್ಞ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದು ಬಹುತೇಕ ತಜ್ಞ ವೈದ್ಯರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಣಗಳದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಕೋವಿಡ್ ಜಿಲ್ಲಾ ತಜ್ಞ ವೈದ್ಯರ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ತಜ್ಞ ವೈದ್ಯರು, ಜಿಲ್ಲೆಯಲ್ಲಿ ಕೋವಿಡ್ನಿಂದ ಸಂಭವಿಸುವ ಮರಣ ಪ್ರಕರಣಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಬರುವ 15 ದಿನಗಳಲ್ಲಿ ಕೋವಿಡ್ ಪ್ರಕರಣಗಳು ಎಷ್ಟಾಗಬಹುದು. ಇದಕ್ಕಾಗಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ತಜ್ಞ ವೈದ್ಯರ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕೋವಿಡ್ 2ನೇ ಅಲೆಯಲ್ಲಿ ರೋಗಲಕ್ಷಣಗಳೂ ಕೂಡ ಕೆಲವು ರೋಗಿಗಳನ್ನು ಭಿನ್ನವಾಗಿ ಕಂಡುಬಂದಿವೆ. ಸಾಮಾನ್ಯವಾಗಿ ಜ್ವರ, ನೆಗಡಿ, ಕೆಮ್ಮು ಮುಂತಾದ ರೋಗಲಕ್ಷಣಗಳು ಕೋವಿಡ್ನ ಆರಂಭಿಕ ಹಂತದಲ್ಲಿ ಕಂಡುಬಂದಿತ್ತು.
ಇದನ್ನೂ ಓದಿ | ಮಂಗಳವಾರದಿಂದ ಲಾಕ್ ಡೌನ್ : ಏನಿರತ್ತೆ..? ಏನಿರಲ್ಲ..?
ಆದರೆ ಇತ್ತೀಚಿನ ಪ್ರಕರಣಗಳನ್ನು ಗಮನಿಸಿದಾಗ, ಜ್ವರ ಇಲ್ಲದಂತಹ ಪ್ರಕರಣಗಳು, ವಾಂತಿಬೇಧಿ, ಕಣ್ಣು ಕೆಂಪಾಗುವುದು, ತಲೆನೋವು, ಮೈಕೈನೋವು ರೋಗ ಲಕ್ಷಣಗಳು ಇರುವುದು ಕಂಡುಬಂದಿದೆ. ಸಾರ್ವಜನಿಕರು ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೆ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು, ಸೋಂಕು ದೃಢಪಟ್ಟಲ್ಲಿ ಆತಂಕಕ್ಕೆ ಒಳಗಾಗದೆ ತಜ್ಞ ವೈದ್ಯರ ಶಿಫಾರಸ್ಸಿನಂತೆ ಚಿಕಿತ್ಸೆ ಪಡೆದುಕೊಳ್ಳಬೇಕು.
ಬೇಗ ರೋಗ ಪತ್ತೆಯಾದಲ್ಲಿ, ಚಿಕಿತ್ಸೆ ಪಡೆದು ಬೇಗ ಗುಣಮುಖರಾಗಬಹುದು. ಆದರೆ ರೋಗ ಪತ್ತೆ ಮಾಡಿಸಿಕೊಳ್ಳದೆ, ಸೋಂಕು ಉಲ್ಬಣಗೊಂಡು, ಶ್ವಾಸಕೋಶದಲ್ಲಿ ಸೋಂಕು ತೀವ್ರಗೊಂಡು, ತಡವಾಗಿ ಆಸ್ಪತ್ರೆಗೆ ಬರುವುದು ರೋಗಿಗಳ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಸಾಮಾನ್ಯವಾಗಿ ಕೋವಿಡ್ನಿಂದ ಮರಣ ಪ್ರಕರಣಗಳನ್ನು ವಿಶ್ಲೇಷಿಸಿದಾಗ, ತಡವಾಗಿ ಆಸ್ಪತ್ರೆಗೆ ಬಂದವರಲ್ಲೇ ಹೆಚ್ಚಿನ ಮರಣ ಸಂಭವಿಸಿದೆ ಎಂದು ತಜ್ಞ ವೈದ್ಯರು ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರತಿಕ್ರಿಯಿಸಿ, ಸಾರ್ವಜನಿಕರು ತಪ್ಪದೆ ಮಾಸ್ಕ್ ಧರಿಸಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡುವುದನ್ನು ಬಿಡಬೇಕು. ರೋಗ ಲಕ್ಷಣಗಳು ಕಂಡುಬಂದಲ್ಲಿ, ಸ್ವಯಂ ಚಿಕಿತ್ಸೆ ಪಡೆಯದೆ, ಸಿಕ್ಕ ಸಿಕ್ಕ ಗುಳಿಗೆಗಳನ್ನು ನುಂಗದೆ, ಓಣಿಗಳಲ್ಲಿನ ಸಣ್ಣಪುಟ್ಟ ವೈದ್ಯರಲ್ಲಿ ಸಾಮಾನ್ಯ ಚಿಕಿತ್ಸೆಗೆ ಒಳಗಾಗುವ ದುಸ್ಸಾಹಸಕ್ಕೆ ಕೈಹಾಕದೆ, ಕೂಡಲೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು.
ಇತ್ತೀಚೆಗೆ ಆರ್ಟಿಪಿಸಿಆರ್ ಟೆಸ್ಟ್ ನೆಗೆಟೀವ್ ಇದ್ದರೂ ಕೂಡ, ಶ್ವಾಸಕೋಶದಲ್ಲಿ ಸೋಂಕು ಇರುವ ಸಾಧ್ಯತೆಗಳಿರುತ್ತದೆ. ಸಾಮಾನ್ಯ ಕಫ ಎಂದು ಯಾರೂ ನಿರ್ಲಕ್ಷ್ಯ ಮಾಡಬಾರದು ಎಂದು ಮನವಿ ಮಾಡಿಕೊಂಡರು.
ವಿದೇಶಿ ಪ್ರಯಾಣಿಕರಿಗೆ ಖಾಸಗಿಯಲ್ಲಿ ಟೆಸ್ಟ್
ವಿದೇಶಕ್ಕೆ ತೆರಳಬಯಸುವವರು ಅಥವಾ ಬೇರೆ ಬೇರೆ ರಾಜ್ಯಗಳಿಗೆ ಪ್ರಯಾಣ ಬೆಳೆಸುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಬಯಸಿದಲ್ಲಿ, ಅಂತಹವರಿಗೆ ಸರ್ಕಾರಿ ಆಸ್ಪತ್ರೆ, ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು. ಅಂತಹವರು ಅಗತ್ಯವೆನಿಸಿದಲ್ಲಿ ನಿಗದಿತ ಖಾಸಗಿ ಆಸ್ಪತ್ರೆ, ಪ್ರಯೋಗಾಲಯಗಳಲ್ಲಿ ಟೆಸ್ಟ್ ಮಾಡಿಸಿಕೊಳ್ಳಲಿ.
ಕೋವಿಡ್ ಟೆಸ್ಟ್ ಅನ್ನು ಅನಗತ್ಯವಾಗಿ ಎಲ್ಲರಿಗೂ ಮಾಡಬಾರದು. ರೋಗ ಲಕ್ಷಣಗಳು ಕಂಡುಬಂದವರಿಗೆ, ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಹಾಗೂ ತಜ್ಞ ವೈದ್ಯರು ಶಿಫಾರಸು ಮಾಡುವವರಿಗೆ ಮಾತ್ರ ಕೋವಿಡ್ ಟೆಸ್ಟ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಚ್ಚುವರಿ ಆಂಬುಲೆನ್ಸ್ ಖರೀದಿಗೆ ಆದೇಶ
ಜಿಲ್ಲೆಯಲ್ಲಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಆಂಬುಲೆನ್ಸ್ಗಳನ್ನು ಬೇಕಾಬಿಟ್ಟಿಯಾಗಿ ಬಳಸಬಾರದು. ತಜ್ಞ ವೈದ್ಯರ ಸಲಹಾ ಸಮಿತಿಯ ಶಿಫಾರಸಿನಂತೆ, ಮುಂಬರುವ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಮರ್ಪಕ ನಿರ್ವಹಣೆಗಾಗಿ ಜಿಲ್ಲೆಗೆ 01 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ ಕೇರ್ ಸಿಸ್ಟಂ ಹೊಂದಿರುವ ಆಂಬುಲೆನ್ಸ್, 02- ಬೇಸಿಕ್ ಲೈಫ್ ಸಪೋರ್ಟ್ ಸಿಸ್ಟಂ ಇರುವ ಆಂಬುಲೆನ್ಸ್ ಹಾಗೂ ಪ್ರತಿ ತಾಲ್ಲೂಕಿಗೆ ಒಂದು ಲೈಫ್ ಸಪೋರ್ಟ್ ಸಿಸ್ಟಂ ಆಂಬುಲೆನ್ಸ್ ಖರೀದಿಸಲು ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ರೆಮ್ಡೆಸಿವರ್ ಔಷಧ ದುರ್ಬಳಕೆಗೆ ಕಡಿವಾಣ
ಜಿಲ್ಲೆಯಲ್ಲಿ ರೆಮ್ಡೆಸಿವರ್ ಚುಚ್ಚುಮದ್ದು ಅಕ್ರಮ ಬಳಕೆಗೆ ಕಡಿವಾಣ ಹಾಕಲಾಗುತ್ತಿದ್ದು, ಈಗಾಗಲೆ ಅಕ್ರಮ ಎಸಗಿದ 02 ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ರೆಮ್ಡೆಸಿವರ್ ಸೇರಿದಂತೆ ತುರ್ತು ಸಂದರ್ಭಕ್ಕೆ ಬಳಸುವ ಔಷಧಿಯನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ದಾಸ್ತಾನಿಗೆ ಆಗಮಿಸಿದ ವಿವರ, ನೀಡಲಾದ ರೋಗಿ ಹಾಗೂ ಔಷಧದ ಎಸ್ಎಫ್ಆರ್-ಐಡಿಯನ್ನು ನಮೂದಿಸಬೇಕು.
ಈ ಐಡಿ ಇಲ್ಲದೆ ಯಾರಿಗೂ ಔಷಧಿಯನ್ನು ಕೊಡುವಂತಿಲ್ಲ.
ಜಿಲ್ಲೆಯಲ್ಲಿ ಇದಕ್ಕಾಗಿ ಫ್ಲೈಯಿಂಗ್ ಸ್ಕ್ವಾಡ್ ತಂಡವನ್ನು ರಚಿಸಲಾಗಿದ್ದು, ಈ ಅಧಿಕಾರಿಗಳು, ವಿವಿಧೆಡೆ ಪರಿಶೀಲಿಸಿ ವರದಿ ಸಲ್ಲಿಸಬೇಕು. ರೆಮ್ಡೆಸಿವರ್ ಚುಚ್ಚುಮದ್ದನ್ನು ಕೋವಿಡ್ ನಿಗದಿತ ಆಸ್ಪತ್ರೆಯಲ್ಲಿ, ಅಗತ್ಯವಿರುವ ರೋಗಿಗೆ ಮಾತ್ರ ನೀಡಬೇಕು.
ಕೋವಿಡ್ ಸೋಂಕಿತ ಎಲ್ಲ ರೋಗಿಗಳಿಗೂ ನೀಡಬಾರದು. ರೆಮ್ಡೆಸಿವರ್ ಔಷಧಿಯನ್ನು ಬೇಕಾಬಿಟ್ಟಿಯಾಗಿ ಶಿಫಾರಸು ಮಾಡುವವರ ವಿರುದ್ಧ ಕೆಪಿಎಂಇ ಕಾಯ್ದೆ ಅನ್ವಯ ವೈದ್ಯಕೀಯ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಏ. 27 ರಿಂದ ಮೋತಿವೀರಪ್ಪ ಕಾಲೇಜಿನಲ್ಲಿ ಲಸಿಕೆ
ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಇದುವರೆಗೂ ಕೋವಿಡ್ ನಿರೋಧಕ ಲಸಿಕೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜನಸಂದಣಿ ತಡೆಯುವ ಉದ್ದೇಶ ಹಾಗೂ ಸ್ಥಳ ಅಭಾವದ ಕಾರಣದಿಂದ ಕೋವಿಡ್ ಸೇರಿದಂತೆ ಎಲ್ಲ ಬಗೆಯ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆಯ ಬದಲಿಗೆ ಬೇರೆಡೆ ಲಸಿಕೆಯನ್ನು ನೀಡುವಂತೆ ತಜ್ಞ ವೈದ್ಯರ ಸಲಹಾ ಸಮಿತಿ ನೀಡಿದ ಶಿಫಾರಸಿನಂತೆ, ಏ. 27 ರಿಂದ ಜಿಲ್ಲಾ ಆಸ್ಪತ್ರೆ ಸಮೀಪದ ಮೋತಿ ವೀರಪ್ಪ ಕಾಲೇಜಿನಲ್ಲಿ ಕೋವಿಡ್ ಸೇರಿದಂತೆ ಎಲ್ಲ ಬಗೆಯ ಲಸಿಕೆಯನ್ನು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹೊರ ಜಿಲ್ಲೆಯ ರೋಗಿಗಳ ಬಗ್ಗೆ ನಿಗಾ ವಹಿಸಿ
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆಡ್ ದೊರೆಯದ ಕಾರಣದಿಂದ ದಾವಣಗೆರೆ ಜಿಲ್ಲೆಯ ಸರ್ಕಾರಿ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಬೇರೆ ಬೇರೆ ಜಿಲ್ಲೆಯವರು ಬಂದು, ನಮ್ಮ ಜಿಲ್ಲೆಯವರಿಗೆ ತೊಂದರೆಯಾಗಬಾರದು.
ನಮ್ಮವರಿಗೆ ಸಮರ್ಪಕ ವೈದ್ಯಕೀಯ ನೆರವು ದೊರೆಯಬೇಕು ಎನ್ನುವುದು ನಮ್ಮ ಆಶಯವಾಗಿದ್ದು, ಬರುವ ದಿನಗಳಲ್ಲಿ ಉದ್ಭವವಾಗುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಡಿಹೆಚ್ಒ ಹಾಗೂ ಜಿಲ್ಲಾ ಸರ್ಜನ್ ಅವರು ಸಮರ್ಪಕವಾಗಿ ಪರಿಶೀಲಿಸಿ, ನಮ್ಮ ಜಿಲ್ಲೆಯವರಿಗೆ ತೊಂದರೆ ಆಗದ ರೀತಿ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಶೇ. 75 ಹಾಸಿಗೆಗಳು ಕೋವಿಡ್ಗೆ ಮೀಸಲು
ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ರ್ಯದಲ್ಲಿ ಶೇ. 75 ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುವ ಡಿಹೆಚ್ಒ ಅವರು, ಎಲ್ಲ ಆಸ್ಪತ್ರೆಗಳು ಸರ್ಕಾರದ ಸೂಚನೆ ಹಾಗೂ ಕೋವಿಡ್ನ ಎಲ್ಲ ಪ್ರೋಟೊಕಾಲ್ಅನ್ನು ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಡಿಸಿ ಸೂಚನೆ ನೀಡಿದರು.
ಆಕ್ಸಿಜನ್ ಬಳಕೆ ಸಮರ್ಪಕವಾಗಿರಲಿ
ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಬಳಕೆ ಮಾಡಲಾಗುವ ಆಕ್ಸಿಜನ್ ಅನ್ನು ನ್ಯಾಯಯುತವಾಗಿ ಬಳಕೆ ಮಾಡಬೇಕು. ಅವಶ್ಯಕತೆ ಇಲ್ಲದವರಿಗೆಲ್ಲಾ ಆಕ್ಸಿಜನ್ ನೀಡಬಾರದು. ಆಕ್ಸಿಜನ್ ಪಡೆದು ಚೇತರಿಕೆ ಕಂಡುಬರುವ ರೋಗಿಗಳನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಿ, ಅಗತ್ಯತೆ ಇರುವ ರೋಗಿಗಳಿಗೆ ಆಕ್ಸಿಜನ್ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಸ್ಪತ್ರೆ ಸರ್ಜನ್ ಡಾ. ಜಯಪ್ರಕಾಶ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಡಿಹೆಚ್ಒ ಡಾ. ನಾಗರಾಜ್, ತಜ್ಞ ವೈದ್ಯರ ಸಮಿತಿ ಸದಸ್ಯರುಗಳಾದ ಡಾ. ರವಿ, ಡಾ. ಬಿ.ಎಸ್. ಪ್ರಸಾದ್, ಡಾ. ಶಿವಕುಮಾರ್, ಡಾ. ಅರುಣ್ಕುಮಾರ್ ಸೇರಿದಂತೆ ವಿವಿಧ ತಜ್ಞ ವೈದ್ಯರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.
ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.
ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

