ದಿನದ ಸುದ್ದಿ
ಕೋವಿಡ್ ಜಿಲ್ಲಾ ತಜ್ಞ ವೈದ್ಯರ ಸಲಹಾ ಸಮಿತಿ ಸಭೆ ಶೀಘ್ರ ರೋಗ ಪತ್ತೆಯಿಂದ ಮರಣ ಸಂಭವ ಕಡಿಮೆ ; ಹೆಚ್ಚುವರಿ ಆಂಬುಲೆನ್ಸ್ ಖರೀದಿಗೆ ಆದೇಶ
ಸುದ್ದಿದಿನ,ದಾವಣಗೆರೆ : ಕೋವಿಡ್ ರೋಗವನ್ನು ಬೇಗ ಪತ್ತೆ ಹಚ್ಚಿದಲ್ಲಿ, ರೋಗಿಯ ಮರಣ ಸಾಧ್ಯತೆಯನ್ನು ಕಡಿಮೆಗೊಳಿಸಬಹುದು. ತಡವಾಗಿ ಆಸ್ಪತ್ರೆಗೆ ದಾಖಲಾಗುವವರಲ್ಲಿಯೇ ಹೆಚ್ಚಿನ ಮರಣ ಪ್ರಕರಣಗಳು ವರದಿಯಾಗಿದ್ದು, ಹೀಗಾಗಿ ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ತಜ್ಞ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದು ಬಹುತೇಕ ತಜ್ಞ ವೈದ್ಯರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಣಗಳದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಕೋವಿಡ್ ಜಿಲ್ಲಾ ತಜ್ಞ ವೈದ್ಯರ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ತಜ್ಞ ವೈದ್ಯರು, ಜಿಲ್ಲೆಯಲ್ಲಿ ಕೋವಿಡ್ನಿಂದ ಸಂಭವಿಸುವ ಮರಣ ಪ್ರಕರಣಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಬರುವ 15 ದಿನಗಳಲ್ಲಿ ಕೋವಿಡ್ ಪ್ರಕರಣಗಳು ಎಷ್ಟಾಗಬಹುದು. ಇದಕ್ಕಾಗಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ತಜ್ಞ ವೈದ್ಯರ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕೋವಿಡ್ 2ನೇ ಅಲೆಯಲ್ಲಿ ರೋಗಲಕ್ಷಣಗಳೂ ಕೂಡ ಕೆಲವು ರೋಗಿಗಳನ್ನು ಭಿನ್ನವಾಗಿ ಕಂಡುಬಂದಿವೆ. ಸಾಮಾನ್ಯವಾಗಿ ಜ್ವರ, ನೆಗಡಿ, ಕೆಮ್ಮು ಮುಂತಾದ ರೋಗಲಕ್ಷಣಗಳು ಕೋವಿಡ್ನ ಆರಂಭಿಕ ಹಂತದಲ್ಲಿ ಕಂಡುಬಂದಿತ್ತು.
ಇದನ್ನೂ ಓದಿ | ಮಂಗಳವಾರದಿಂದ ಲಾಕ್ ಡೌನ್ : ಏನಿರತ್ತೆ..? ಏನಿರಲ್ಲ..?
ಆದರೆ ಇತ್ತೀಚಿನ ಪ್ರಕರಣಗಳನ್ನು ಗಮನಿಸಿದಾಗ, ಜ್ವರ ಇಲ್ಲದಂತಹ ಪ್ರಕರಣಗಳು, ವಾಂತಿಬೇಧಿ, ಕಣ್ಣು ಕೆಂಪಾಗುವುದು, ತಲೆನೋವು, ಮೈಕೈನೋವು ರೋಗ ಲಕ್ಷಣಗಳು ಇರುವುದು ಕಂಡುಬಂದಿದೆ. ಸಾರ್ವಜನಿಕರು ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೆ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು, ಸೋಂಕು ದೃಢಪಟ್ಟಲ್ಲಿ ಆತಂಕಕ್ಕೆ ಒಳಗಾಗದೆ ತಜ್ಞ ವೈದ್ಯರ ಶಿಫಾರಸ್ಸಿನಂತೆ ಚಿಕಿತ್ಸೆ ಪಡೆದುಕೊಳ್ಳಬೇಕು.
ಬೇಗ ರೋಗ ಪತ್ತೆಯಾದಲ್ಲಿ, ಚಿಕಿತ್ಸೆ ಪಡೆದು ಬೇಗ ಗುಣಮುಖರಾಗಬಹುದು. ಆದರೆ ರೋಗ ಪತ್ತೆ ಮಾಡಿಸಿಕೊಳ್ಳದೆ, ಸೋಂಕು ಉಲ್ಬಣಗೊಂಡು, ಶ್ವಾಸಕೋಶದಲ್ಲಿ ಸೋಂಕು ತೀವ್ರಗೊಂಡು, ತಡವಾಗಿ ಆಸ್ಪತ್ರೆಗೆ ಬರುವುದು ರೋಗಿಗಳ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಸಾಮಾನ್ಯವಾಗಿ ಕೋವಿಡ್ನಿಂದ ಮರಣ ಪ್ರಕರಣಗಳನ್ನು ವಿಶ್ಲೇಷಿಸಿದಾಗ, ತಡವಾಗಿ ಆಸ್ಪತ್ರೆಗೆ ಬಂದವರಲ್ಲೇ ಹೆಚ್ಚಿನ ಮರಣ ಸಂಭವಿಸಿದೆ ಎಂದು ತಜ್ಞ ವೈದ್ಯರು ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರತಿಕ್ರಿಯಿಸಿ, ಸಾರ್ವಜನಿಕರು ತಪ್ಪದೆ ಮಾಸ್ಕ್ ಧರಿಸಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡುವುದನ್ನು ಬಿಡಬೇಕು. ರೋಗ ಲಕ್ಷಣಗಳು ಕಂಡುಬಂದಲ್ಲಿ, ಸ್ವಯಂ ಚಿಕಿತ್ಸೆ ಪಡೆಯದೆ, ಸಿಕ್ಕ ಸಿಕ್ಕ ಗುಳಿಗೆಗಳನ್ನು ನುಂಗದೆ, ಓಣಿಗಳಲ್ಲಿನ ಸಣ್ಣಪುಟ್ಟ ವೈದ್ಯರಲ್ಲಿ ಸಾಮಾನ್ಯ ಚಿಕಿತ್ಸೆಗೆ ಒಳಗಾಗುವ ದುಸ್ಸಾಹಸಕ್ಕೆ ಕೈಹಾಕದೆ, ಕೂಡಲೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು.
ಇತ್ತೀಚೆಗೆ ಆರ್ಟಿಪಿಸಿಆರ್ ಟೆಸ್ಟ್ ನೆಗೆಟೀವ್ ಇದ್ದರೂ ಕೂಡ, ಶ್ವಾಸಕೋಶದಲ್ಲಿ ಸೋಂಕು ಇರುವ ಸಾಧ್ಯತೆಗಳಿರುತ್ತದೆ. ಸಾಮಾನ್ಯ ಕಫ ಎಂದು ಯಾರೂ ನಿರ್ಲಕ್ಷ್ಯ ಮಾಡಬಾರದು ಎಂದು ಮನವಿ ಮಾಡಿಕೊಂಡರು.
ವಿದೇಶಿ ಪ್ರಯಾಣಿಕರಿಗೆ ಖಾಸಗಿಯಲ್ಲಿ ಟೆಸ್ಟ್
ವಿದೇಶಕ್ಕೆ ತೆರಳಬಯಸುವವರು ಅಥವಾ ಬೇರೆ ಬೇರೆ ರಾಜ್ಯಗಳಿಗೆ ಪ್ರಯಾಣ ಬೆಳೆಸುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಬಯಸಿದಲ್ಲಿ, ಅಂತಹವರಿಗೆ ಸರ್ಕಾರಿ ಆಸ್ಪತ್ರೆ, ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು. ಅಂತಹವರು ಅಗತ್ಯವೆನಿಸಿದಲ್ಲಿ ನಿಗದಿತ ಖಾಸಗಿ ಆಸ್ಪತ್ರೆ, ಪ್ರಯೋಗಾಲಯಗಳಲ್ಲಿ ಟೆಸ್ಟ್ ಮಾಡಿಸಿಕೊಳ್ಳಲಿ.
ಕೋವಿಡ್ ಟೆಸ್ಟ್ ಅನ್ನು ಅನಗತ್ಯವಾಗಿ ಎಲ್ಲರಿಗೂ ಮಾಡಬಾರದು. ರೋಗ ಲಕ್ಷಣಗಳು ಕಂಡುಬಂದವರಿಗೆ, ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಹಾಗೂ ತಜ್ಞ ವೈದ್ಯರು ಶಿಫಾರಸು ಮಾಡುವವರಿಗೆ ಮಾತ್ರ ಕೋವಿಡ್ ಟೆಸ್ಟ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಚ್ಚುವರಿ ಆಂಬುಲೆನ್ಸ್ ಖರೀದಿಗೆ ಆದೇಶ
ಜಿಲ್ಲೆಯಲ್ಲಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಆಂಬುಲೆನ್ಸ್ಗಳನ್ನು ಬೇಕಾಬಿಟ್ಟಿಯಾಗಿ ಬಳಸಬಾರದು. ತಜ್ಞ ವೈದ್ಯರ ಸಲಹಾ ಸಮಿತಿಯ ಶಿಫಾರಸಿನಂತೆ, ಮುಂಬರುವ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಮರ್ಪಕ ನಿರ್ವಹಣೆಗಾಗಿ ಜಿಲ್ಲೆಗೆ 01 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ ಕೇರ್ ಸಿಸ್ಟಂ ಹೊಂದಿರುವ ಆಂಬುಲೆನ್ಸ್, 02- ಬೇಸಿಕ್ ಲೈಫ್ ಸಪೋರ್ಟ್ ಸಿಸ್ಟಂ ಇರುವ ಆಂಬುಲೆನ್ಸ್ ಹಾಗೂ ಪ್ರತಿ ತಾಲ್ಲೂಕಿಗೆ ಒಂದು ಲೈಫ್ ಸಪೋರ್ಟ್ ಸಿಸ್ಟಂ ಆಂಬುಲೆನ್ಸ್ ಖರೀದಿಸಲು ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ರೆಮ್ಡೆಸಿವರ್ ಔಷಧ ದುರ್ಬಳಕೆಗೆ ಕಡಿವಾಣ
ಜಿಲ್ಲೆಯಲ್ಲಿ ರೆಮ್ಡೆಸಿವರ್ ಚುಚ್ಚುಮದ್ದು ಅಕ್ರಮ ಬಳಕೆಗೆ ಕಡಿವಾಣ ಹಾಕಲಾಗುತ್ತಿದ್ದು, ಈಗಾಗಲೆ ಅಕ್ರಮ ಎಸಗಿದ 02 ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ರೆಮ್ಡೆಸಿವರ್ ಸೇರಿದಂತೆ ತುರ್ತು ಸಂದರ್ಭಕ್ಕೆ ಬಳಸುವ ಔಷಧಿಯನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ದಾಸ್ತಾನಿಗೆ ಆಗಮಿಸಿದ ವಿವರ, ನೀಡಲಾದ ರೋಗಿ ಹಾಗೂ ಔಷಧದ ಎಸ್ಎಫ್ಆರ್-ಐಡಿಯನ್ನು ನಮೂದಿಸಬೇಕು.
ಈ ಐಡಿ ಇಲ್ಲದೆ ಯಾರಿಗೂ ಔಷಧಿಯನ್ನು ಕೊಡುವಂತಿಲ್ಲ.
ಜಿಲ್ಲೆಯಲ್ಲಿ ಇದಕ್ಕಾಗಿ ಫ್ಲೈಯಿಂಗ್ ಸ್ಕ್ವಾಡ್ ತಂಡವನ್ನು ರಚಿಸಲಾಗಿದ್ದು, ಈ ಅಧಿಕಾರಿಗಳು, ವಿವಿಧೆಡೆ ಪರಿಶೀಲಿಸಿ ವರದಿ ಸಲ್ಲಿಸಬೇಕು. ರೆಮ್ಡೆಸಿವರ್ ಚುಚ್ಚುಮದ್ದನ್ನು ಕೋವಿಡ್ ನಿಗದಿತ ಆಸ್ಪತ್ರೆಯಲ್ಲಿ, ಅಗತ್ಯವಿರುವ ರೋಗಿಗೆ ಮಾತ್ರ ನೀಡಬೇಕು.
ಕೋವಿಡ್ ಸೋಂಕಿತ ಎಲ್ಲ ರೋಗಿಗಳಿಗೂ ನೀಡಬಾರದು. ರೆಮ್ಡೆಸಿವರ್ ಔಷಧಿಯನ್ನು ಬೇಕಾಬಿಟ್ಟಿಯಾಗಿ ಶಿಫಾರಸು ಮಾಡುವವರ ವಿರುದ್ಧ ಕೆಪಿಎಂಇ ಕಾಯ್ದೆ ಅನ್ವಯ ವೈದ್ಯಕೀಯ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಏ. 27 ರಿಂದ ಮೋತಿವೀರಪ್ಪ ಕಾಲೇಜಿನಲ್ಲಿ ಲಸಿಕೆ
ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಇದುವರೆಗೂ ಕೋವಿಡ್ ನಿರೋಧಕ ಲಸಿಕೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜನಸಂದಣಿ ತಡೆಯುವ ಉದ್ದೇಶ ಹಾಗೂ ಸ್ಥಳ ಅಭಾವದ ಕಾರಣದಿಂದ ಕೋವಿಡ್ ಸೇರಿದಂತೆ ಎಲ್ಲ ಬಗೆಯ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆಯ ಬದಲಿಗೆ ಬೇರೆಡೆ ಲಸಿಕೆಯನ್ನು ನೀಡುವಂತೆ ತಜ್ಞ ವೈದ್ಯರ ಸಲಹಾ ಸಮಿತಿ ನೀಡಿದ ಶಿಫಾರಸಿನಂತೆ, ಏ. 27 ರಿಂದ ಜಿಲ್ಲಾ ಆಸ್ಪತ್ರೆ ಸಮೀಪದ ಮೋತಿ ವೀರಪ್ಪ ಕಾಲೇಜಿನಲ್ಲಿ ಕೋವಿಡ್ ಸೇರಿದಂತೆ ಎಲ್ಲ ಬಗೆಯ ಲಸಿಕೆಯನ್ನು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹೊರ ಜಿಲ್ಲೆಯ ರೋಗಿಗಳ ಬಗ್ಗೆ ನಿಗಾ ವಹಿಸಿ
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆಡ್ ದೊರೆಯದ ಕಾರಣದಿಂದ ದಾವಣಗೆರೆ ಜಿಲ್ಲೆಯ ಸರ್ಕಾರಿ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಬೇರೆ ಬೇರೆ ಜಿಲ್ಲೆಯವರು ಬಂದು, ನಮ್ಮ ಜಿಲ್ಲೆಯವರಿಗೆ ತೊಂದರೆಯಾಗಬಾರದು.
ನಮ್ಮವರಿಗೆ ಸಮರ್ಪಕ ವೈದ್ಯಕೀಯ ನೆರವು ದೊರೆಯಬೇಕು ಎನ್ನುವುದು ನಮ್ಮ ಆಶಯವಾಗಿದ್ದು, ಬರುವ ದಿನಗಳಲ್ಲಿ ಉದ್ಭವವಾಗುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಡಿಹೆಚ್ಒ ಹಾಗೂ ಜಿಲ್ಲಾ ಸರ್ಜನ್ ಅವರು ಸಮರ್ಪಕವಾಗಿ ಪರಿಶೀಲಿಸಿ, ನಮ್ಮ ಜಿಲ್ಲೆಯವರಿಗೆ ತೊಂದರೆ ಆಗದ ರೀತಿ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಶೇ. 75 ಹಾಸಿಗೆಗಳು ಕೋವಿಡ್ಗೆ ಮೀಸಲು
ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ರ್ಯದಲ್ಲಿ ಶೇ. 75 ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುವ ಡಿಹೆಚ್ಒ ಅವರು, ಎಲ್ಲ ಆಸ್ಪತ್ರೆಗಳು ಸರ್ಕಾರದ ಸೂಚನೆ ಹಾಗೂ ಕೋವಿಡ್ನ ಎಲ್ಲ ಪ್ರೋಟೊಕಾಲ್ಅನ್ನು ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಡಿಸಿ ಸೂಚನೆ ನೀಡಿದರು.
ಆಕ್ಸಿಜನ್ ಬಳಕೆ ಸಮರ್ಪಕವಾಗಿರಲಿ
ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಬಳಕೆ ಮಾಡಲಾಗುವ ಆಕ್ಸಿಜನ್ ಅನ್ನು ನ್ಯಾಯಯುತವಾಗಿ ಬಳಕೆ ಮಾಡಬೇಕು. ಅವಶ್ಯಕತೆ ಇಲ್ಲದವರಿಗೆಲ್ಲಾ ಆಕ್ಸಿಜನ್ ನೀಡಬಾರದು. ಆಕ್ಸಿಜನ್ ಪಡೆದು ಚೇತರಿಕೆ ಕಂಡುಬರುವ ರೋಗಿಗಳನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಿ, ಅಗತ್ಯತೆ ಇರುವ ರೋಗಿಗಳಿಗೆ ಆಕ್ಸಿಜನ್ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಸ್ಪತ್ರೆ ಸರ್ಜನ್ ಡಾ. ಜಯಪ್ರಕಾಶ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಡಿಹೆಚ್ಒ ಡಾ. ನಾಗರಾಜ್, ತಜ್ಞ ವೈದ್ಯರ ಸಮಿತಿ ಸದಸ್ಯರುಗಳಾದ ಡಾ. ರವಿ, ಡಾ. ಬಿ.ಎಸ್. ಪ್ರಸಾದ್, ಡಾ. ಶಿವಕುಮಾರ್, ಡಾ. ಅರುಣ್ಕುಮಾರ್ ಸೇರಿದಂತೆ ವಿವಿಧ ತಜ್ಞ ವೈದ್ಯರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ನಿಂದ ವಿದ್ಯಾರ್ಥಿ ವೇತನ ವಿತರಣೆ
ಸುದ್ದಿದಿನ,ದಾವಣಗೆರೆ:ಗುರಿ ಸಾಧಿಸಲು ಕಾರಣಗಳು ನೆಪವಾಗಬಾರದು. ಗುರಿಯನ್ನು ಬೆನ್ನು ಹತ್ತಿ ಗುರಿಮುಟ್ಟುವ ಕಡೆ ಗಮನ ಹರಿಸಿದರೆ ಯಶಸ್ಸು ತಾನಾಗಿ ದೊರೆಯುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಯುವಜನತೆ ಮೊಬೈಲ್ ಬಳಸುವುದರಿಂದ ಆಗುವ ಅನಾನುಕೂಲಗಳು ಮತ್ತು ಹಿಂದಿನ ಯುವಜನತೆ ಅದನ್ನು ಒಳ್ಳೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಬೇಕೆಂದು ಕರೆ ನೀಡಿದರು.
ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದರ ಮುಖಾಂತರ ತಮ್ಮ ಗುರಿಗಳನ್ನು ಸಾಧಿಸಲು ಸಾಧ್ಯವಿದೆ. ಪೋಷಕರು ಮಕ್ಕಳ ನಡವಳಿಕೆ ಮೇಲೆ ನಿಗಾ ವಹಿಸುವ ಅವಶ್ಯಕತೆ ಇದೆ ಎಂದ ಅವರು, ಇತ್ತೀಚಿಗೆ ನಡೆಯುತ್ತಿರುವ ಸೈಬರ್ ಕ್ರೈಂಗಳ ಬಗ್ಗೆ ಯುವಜನತೆಗೆ ಸಭೆಯಲ್ಲಿ ಮನವರಿಕೆ ಮಾಡಿದರು.
ಈ ಕಾರ್ಯಕ್ರಮದ ಮತ್ತೊಬ್ಬ ಅತಿಥಿಗಳಾದ ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ಸಿಓಓ ಎಸ್. ಪಂಚಾಕ್ಷರಿ ಮಾತನಾಡಿ, ಬಿ.ಎಸ್.ಎಸ್ ಸಂಸ್ಥೆಯು ತನ್ನ ಸಿಎಸ್ಆರ್ ಇಂಟಿಗ್ರೇಟಡ್ ಅಡಿಯಲ್ಲಿ ಆರೋಗ್ಯ, ಶಿಕ್ಷಣ, ಹೈನುಗಾರಿಕೆಗಳಲ್ಲಿ ಸಮಾಜಸೇವಾ ಕಾರ್ಯ ಮಾಡುತ್ತಿದ್ದು, ಅಗತ್ಯ ಪೂರಕ ವಸ್ತುಗಳ ವಿತರಣೆ ಮತ್ತು ಸಹಾಯ ಹಸ್ತದ ನೆರವು ನೀಡಲಾಗುತ್ತಿದೆ. ಸಮಜಾಮುಖಿ ಕೆಲಸಗಳಲ್ಲಿ ಒಂದಾದ ವಿದ್ಯಾರ್ಥಿ ವೇತನ ವಿತರಣೆ ಮುಖೇನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವು ನೀಡಲಾಗುತ್ತಿದೆ ಎಂದರು.
ಮಹಿಳೆಯರು ಅವಶ್ಯಕತೆಗೆ ತಕ್ಕಷ್ಟು ಸಾಲವನ್ನು ಪಡೆದು ಮರುಪಾವತಿ ಶಿಸ್ತನ್ನು ಕಾಪಾಡಿಕೊಳ್ಳಬೇಕು ಮತ್ತು ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಕೇವಲ ಸಾಲ ಸೌಲಭ್ಯವನ್ನು ಮಾತ್ರವಲ್ಲದೆ ಸಂಸ್ಥೆಯು ಎಲ್ಲಾ ಕಡೆಗೂ ಸಮಾಜಮುಖಿ ಕಾರ್ಯಗಳಾದ ಶಾಲಾ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರವಾಹ ಪರಿಸ್ಥಿತಿಗಳು, ಬರಗಾಲ ಪರಿಸ್ಥಿತಿಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ವ್ಯವಸ್ಥೆ, ಪೀಟೋಪಕರಣಗಳ ವ್ಯವಸ್ಥೆ, ಆಧುನಿಕ ಶಿಕ್ಷಣ ನೀಡಲು ಕಂಪ್ಯೂಟರ್ ಒದಗಿಸುವುದು ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಬಿಎಸ್ಎಸ್ ಸಂಸ್ಥೆಯ ಸಿಇಓ ಕುಮಾರ್, ಸಿಫ್ ಓ ಸುರತ್ ಬಚ್ಚು, ರಘು ಎನ್.ಸಿ., ಕೆ. ಸಿದ್ದು, ತಿಮ್ಮಾರಾಯಸ್ವಾಮಿ, ಎಸ್. ಗಿರೀಶ್, ಪಂಡಿತ್, ದೇವರಾಜ್ ಎಸ್., ಸತೀಶ ಡಿ.ಎಸ್., ಕಿರಣ್, ಪ್ರಶಾಂತ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಅಂತರಂಗ
ದಾವಣಗೆರೆ| ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ : ಜಾನಪದರನ್ನು ಅನಕ್ಷರಸ್ಥರೆನ್ನುವುದು ತಪ್ಪು : ಸಾಹಿತಿ ಕೃಷ್ಣಮೂರ್ತಿ ಹನೂರು
ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ ಬಾರದವರು ಅನಕ್ಷಸ್ಥರು ಎಂಬುದಾಗಿ ಹೇಳುವುದು ತಪ್ಪು ಎಂದು ಹಿರಿಯ ವಿದ್ವಾಂಸರಾದ ಕೃಷ್ಣಮೂರ್ತಿ ಹನೂರು ವಿಷಾದವ್ಯಕ್ತಪಡಿಸಿದರು.
ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿರಿಯಜ್ಜಿ ಪ್ರತಿಷ್ಠಾನ, ಮಾನವ ಬಂಧುತ್ವ ವೇದಿಕೆ ಹಾಗೂ ಅಮಿತ ಪ್ರಕಾಶನದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಾಂಶುಪಾಲ ಎಂ.ಮಂಜಣ್ಣ ಅವರ ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ ಮಾಡಿ ಅವರು ಮಾತನಾಡಿದರು.
ಸಿರಿಯಜ್ಜಿ ಭೇಟಿ ಮಾಡಿ ಸುಮಾರು 50ವರ್ಷ ಆಯಿತು.ಬೆಳೆಗೆರೆ ಕೃಷ್ಣಶಾಸ್ತ್ರಿಗಳ ಜೊತೆಗೆ ಮೊದಲ ಬಾರಿಗೆ ಗುಡಿಸಲಿನ ಭೇಟಿ ಮಾಡಿದ್ದೆ. ಆಡಿನ ಹಾಲು ಕರೆದು ಜತೆಗೆ ಮುದ್ದೆ ಕೊಡುತ್ತಿದ್ದರು. ಅದು 76ರ ಈ ಇಳಿವಯಸ್ಸಿನಲ್ಲೂ ನನಗೆ ಶಕ್ತಿ ಕೊಟ್ಟಿದೆ. ಪಾಶ್ಚಾತ್ಯ ವಿದ್ವಾಂಸರು 1800 ಸಂದರ್ಭದಲ್ಲಿ ದೇಶದಲ್ಲಿ ಹುಡುಕಿ ಹೊತ್ತೊಯ್ಯುವ ಕೆಲಸ ಮಾಡಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ಅವರಿಗೆ ಅಭಿಮಾನ ಇತ್ತು. ಬುಡಕಟ್ಟು ಹಟ್ಟಿಯ ಸಿರಿಯಜ್ಜಿ ದೊಡ್ಡ ವಿದ್ವಾಂಸರು. ಅರೆ ಬರ ಕನ್ನಡ ಓದಿ ಎಲ್ಲವೂ ಗೊತ್ತದೆ ಎನ್ನುತ್ತೇವೆ. ಆದರೆ, ಸಿರಿಯಜ್ಜಿ ತನ್ನ ಬೌದ್ಧಿಕ ಶಕ್ತಿಯನ್ನು ಏನೂ ಅಲ್ಲ ಎಂದು ಹೇಳುತ್ತಿದ್ದರು. ‘ಹತ್ತ ಮಕ್ಕಳ ಹೆತ್ತು ಕತ್ತಿಗೆ ಬಲಿಕೊಟ್ಟೆ’ ಎಂಬ ಮಾತು ದೊಡ್ಡದು. ಇದರಲ್ಲಿ ದೊಡ್ಡ ಸಂದೇಶ ಇತ್ತು ಎಂದು ಸ್ಮರಿಸಿದರು.
ಅವಳ ಹಾಡುಗಾರಿಕೆಯ ಕ್ರಮ ವಿಸ್ಮಯ ಮೂಡಿಸುತ್ತಿತ್ತು. ನೋವಿನ ವಾಕ್ಯದಲ್ಲಿ ಇರುವ ಅರ್ಥ ಬಹಳ ದೊಡ್ಡದು. ಚರಿತ್ರೆಯನ್ನು ನಾಲ್ಕು ಪದಗಳಲ್ಲಿ ವಿಶ್ಲೇಷಣೆ ಮಾಡಿದಳು. . 100ಕ್ಕೂ ಹೆಚ್ಚು ತ್ರಿಪದಿಯಲ್ಲಿ ಸಿರಿಯಜ್ಜಿ ಹಾಡಿದ್ದಾಳೆ. ಸಮಾಜಿಕ, ಐತಿಹಾಸಿಕ, ಸಂತೋಷದ ಸಂಗತಿ, ಮಳೆರಾಯನ ಕುರಿತು ಹಾಡು ಹೇಳಿದ್ದಾಳೆ. ಮದುವೆ ಸಂಭ್ರದ ಸಾವಿರಾರು ತ್ರಿಪದಿ ಅವಳಲ್ಲಿದ್ದವು.ಶಿಷ್ಟ ಮತ್ತು ಜಾನಪದ ಸಾಹಿತ್ಯ ಈ ಎರಡರಲ್ಲೂ ಕೆಟ್ಟದ್ದು ಒಳ್ಳೆಯದು ಇದೆ. ಇದರ ಬಗೆಗೆ ಇನ್ನೂಹೆಚ್ಚಿನ ಅಧ್ಯಯನ ನಡೆಸಿ ಪ್ರಾಧ್ಯಾಪಕರು ಚರ್ಚಿಸಬೇಕಿದೆ. ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು.
ಅನಕ್ಷರಸ್ಥರಲ್ಲಿ ಕೂಡ ವಿದ್ವಾಂಸರು ಇದ್ದಾರೆ. ಸಿರಿಯಜ್ಜಿ ರೀತಿಯವರು ಅಸಂಖ್ಯಾತರಷ್ಟು ಇದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿ ಮಾನವನನ್ನೇ ನಾಶ ಮಾಡುತ್ತಿದೆ. ಜನಪದರ, ಗ್ರಾಮೀಣ ಪ್ರದೇಶದ ಒಳಿತನ್ನು ಸ್ವೀಕರಿಸುವ ಮನೋಭಾವ ಉಳಿಸಿಕೊಳ್ಳೋಣ’.ಎ.ಕೆ.ರಾಮಾನುಜನ್, ಎಸ್.ಎಲ್.ಭೈರಪ್ಪ, ಗುಂಡೂರಾವ್, ಎಚ್.ಕೆ.ರಂಗನಾಥ್ ಸೇರಿ ಅನೇಕರು ಸಿರಿಯಜ್ಜಿ ಹುಡುಕಿಕೊಂಡು ಬಂದಿದ್ದರು. ಪ್ರಾಧ್ಯಾಪಕರು ಇದನ್ನು ಗುರುತಿಸಿ ಹೇಳಬೇಕು. ಮಕ್ಕಳಿಗೆ ಪಾಠ ಮಾಡಿದರೆ ಪ್ರಾಧ್ಯಾಪಕರ ಕಾರ್ಯ ಮುಗಿಯುದಿಲ್ಲ ಎಂದು ಕಿವಿಮಾತು ಹೇಳಿದರು.
ಅನಕ್ಷರಸ್ಥರು ಎಂದು ಹೇಳುವುದು ನಮ್ಮ ಅಜ್ಞಾನ ತೋರಿಸುತ್ತದೆ. ವಿಶ್ವವಿದ್ಯಾಲಯದ್ದು ಸೀಮಿತ ಪಠ್ಯ, ಜಾನಪದದ್ದು ಅಲಿಖಿತ ಸಂವಿಧಾನ, ಅಪರಿಮಿತ ಪಠ್ಯ ಇದು ಕೂಡ ಮುಖ್ಯ.‘ಸಾವಿರದ ಸಿರಿ ಬೆಳಕು’ ಹಂಪಿ ವಿಶ್ವವಿದ್ಯಾಲಯ ಹೊರತಂದಿದೆ. ಅಪ್ರಕಟಿತ ಗೀತೆಗಳು ಇನ್ನೂ ಇವೆ. ಅಕ್ಷರಕ್ಕೆ ಅಳಿವಿಲ್ಲ. ದೇಶದ ಉತ್ತಮ ಸಂಗತಿ, ಪಳಯುಳಿಕೆ ಅಮೆರಿಕಾ, ಇಂಗ್ಲೆಂಡ್ ನಲ್ಲಿವೆ.ಎಚ್ಚರಿಕೆ, ಗಮನ ಹರಿಸಬೇಕು ಪ್ರಾಧ್ಯಾಪಕರು. ಮಕ್ಕಳ ಆಸ್ತಿ ಯಾವುದು ಎಂಬುದನ್ನು ನಾವು ಮನವರಿಕೆ ಮಾಡಿಕೊಡಬೇಕಿದೆ ಎಂದು ಹಂಪಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಎಸ್.ಎಂ.ಮುತ್ತಯ್ಯ ಅಭಿಪ್ರಾಯಪಟ್ಟರು.
ಮನುಷ್ಯರೆಂಬಂತೆ ಸಮಾಜ ಕಾಣದ ಸಮುದಾಯದ ಮಹಿಳೆ ಬಗ್ಗೆ ನಡೆಸಿದ ಅಧ್ಯಯನಕ್ಕೆ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಚಿಕ್ಕ ಸಂಗತಿಗೂ ನಿರ್ಬಂಧ ಹೇರುವ ಸಮುದಾಯದಲ್ಲಿ ದೊಡ್ಡ ಕಲಾವಿದೆಯೊಬ್ಬರೂ ಹೊರಹೊಮ್ಮಿದ ರೀತಿ ವಿಸ್ಮಯ ಮೂಡಿಸುತ್ತದೆ.ಸಿರಿಯಜ್ಜಿ ಸೃಷ್ಟಿಸಿದ್ದು ಸಾಹಿತ್ಯ ಅಲ್ಲ. ಇದು ಸಮುದಾಯಕ್ಕೆ ಪರಂಪರಾಗತವಾಗಿ ಬಂದದ್ದು. ಇದು ಕಾಡುಗೊಲ್ಲ ಮಾತ್ರವಲ್ಲ ಪಶುಪಾಲನಾ ಸಮುದಾಯದ ಅಸ್ಮಿತೆ ಕೂಡ ಹೌದು. ಕಾಡಲ್ಲಿ ಕುರಿ, ಜಾನುವಾರು ಕಾಯುತ್ತ ಬದುಕುತ್ತಿದ್ದ ಸಮುದಾಯದ ಕಲೆಗಳಿಗೆ ಮಾನ್ಯತೆ ಸಿಕ್ಕಿರಲಿಲ್ಲ. ಸಾಹಿತ್ಯ ಪರಂಪರೆಯಲ್ಲಿ ಜಾನಪದಕ್ಕೆ ಮಾನ್ಯತೆ ಸಿಕ್ಕಿದ್ದು ಜಿ.ಶಂ.ಪರಮಶಿವಯ್ಯ ಹಾಗೂ ಹಾ.ಮಾ.ನಾಯಕ ಸಾಕಷ್ಟು ಕಷ್ಟಪಟ್ಟಿದ್ದಾರೆ. ಜಾನಪದ ಸಾಹಿತ್ಯ ಕೂಡ ಸಂಶೋಧನೆಗೆ ಯೋಗ್ಯ ಕ್ಷೇತ್ರ ಮತ್ತು ವಸ್ತು ಎಂಬುದನ್ನು ಒಪ್ಪಿಸಲು ಸಾಕಷ್ಟು ಶ್ರಮಿಸಬೇಕಾಯಿತು ಎಂದು ಮೆಲುಕುಹಾಕಿದರು.
ಜಾನಪದ ಅಧ್ಯಯನ ವಿಸ್ತರಣೆ ಕಂಡ, ಮುಖ್ಯ ವಾಹಿನಿಯಲ್ಲಿ ಸ್ಥಾನ ಪಡೆದುಕೊಂಡ ಮೂರನೇ ಘಟ್ಟವಾಗಿ ಈ ಕೃತಿ ನೋಡಬೇಕು. ಶೈಕ್ಷಣಿಕ ಅಧ್ಯಯನದ ವಸ್ತವಾಗಿ ಸಿರಿಯಜ್ಜಿ ಪರಿಣಿಸಿ ಸಂಶೋಧನೆಗೆ ಒಳಪಡಿಸಿದ್ದಕ್ಕೆ ಹೆಮ್ಮೆ ಪಡಬೇಕು. ಜಾನಪದ ಅಧ್ಯಯನದ ಇತಿಹಾಸದಲ್ಲಿ ಹೊಸದೊಂದು ಪರ್ವ ಶುರು ಆಗಿದೆ.ಕಾಡು ಗೊಲ್ಲರಂತಹ ನಿರ್ಬಂಧಿತ ಸಮುದಾಯದ ಮಹಿಳೆಯೊಬ್ಬರು ಇಷ್ಟು ಎತ್ತರಕ್ಕೆ ಬೆಳೆಯುವ ಅವಕಾಶ ಸಿಕ್ಕಿದ್ದು ವಿಸ್ಮಯ. ಅವರ ಒಳಗಿನ ಆಸಕ್ತಿ, ಪ್ರಯತ್ನ ಹಾಗೂ ಕುಟುಂಬದ ಬೆಂಬಲದ ಕಾರಣಕ್ಕೆ ಅವಳಿಗೆ ಇದು ಸಾಧ್ಯ ಆಯಿತು. ಕಾಡಗೊಲ್ಲರ, ಸಾಂಸ್ಕೃತಿಕ ವೀರರ ಆರಾಧ್ಯ ದೈವ, ಬೇರೆ ಸಮುದಾಯದ ದೈವಗಳ ಬಗ್ಗೆ ಸಿರಿಯಜ್ಜಿ ಹಾಡಿದ್ದಾರೆ. ಹಾಡುವ ಸಾಹಿತ್ಯದಲ್ಲಿ ಭೇದ ಮಾಡಿಲ್ಲ. ಸಾಹಿತ್ಯದ ಪದ-ಪದದ ವಿವರಗಳನ್ನು ಅವಳು ನೀಡುತ್ತಿದ್ದಳು. ಕಾವ್ಯ ಅವಳ ಬದುಕಿನ ಭಾಗ ಆಗಿತ್ತು. ಹೀಗಾಗಿ ಅವಳು ನಿರರ್ಗಳವಾಗಿ ಹಾಡುತ್ತದ್ದಳು. ಆದರೆ, ಒಬ್ಬ ವ್ಯಕ್ತಿ ಇಷ್ಟು ಪದಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೇ ಎಂಬ ಪ್ರಶ್ನೆ ಮೂಡುತ್ತದೆ ಎಂದರು.
ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಎ.ಬಿ.ರಾಮಚಂದ್ರಪ್ಪ, ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ್ ಕಲಮರಹಳ್ಳಿ, ಸಿರಿಯಜ್ಜಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ, ಕಲಾವಿದೆ ಸಿರಿಯಮ್ಮ, ಜಿ.ಕೆ.ಪ್ರೇಮಾ, ಅಮಿತ ಪ್ರಕಾಶನದ ಶಾರದಮ್ಮ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ
ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗದು ರಹಿತ ಚಿಕಿತ್ಸೆ ಯೋಜನೆಯ ತ್ವರಿತ ಜಾರಿಗೆ ಒತ್ತಾಯಿಸುವುದು, 2026ಕ್ಕೆ ಕೇಂದ್ರ ಸರ್ಕಾರದ ಮಾದರಿ ವೇತನಕ್ಕಾಗಿ ಹೋರಾಟ ರೂಪಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಿ ಆಂಡ್ ಆರ್ ನಿಯಮಕ್ಕೆ ತಿದ್ದುಪಡಿ ತರುವಂತೆ ಆಗ್ರಹಿಸಿ, ನಡೆಸಲಾಗುವ ಹೋರಾಟವನ್ನು ಬೆಂಬಲಿಸುವುದು, ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್ಗಳಿಗೆ ಶೀಘ್ರವೇ ಹಣ ಬಿಡುಗಡೆ ಮಾಡಿಸುವ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಿ.ಎಸ್.ಷಡಕ್ಷರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243