ದಿನದ ಸುದ್ದಿ
ನೆರೆಯ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ : ಕಳೆದ 15 ದಿನದಲ್ಲಿ ಮಹಾರಾಷ್ಟ್ರ ಮತ್ತು ಕೇರಳದಿಂದ ಮರಳಿದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ
ಸುದ್ದಿದಿನ,ಕಲಬುರಗಿ :ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳಿಂದ ಕಳೆದ 15 ದಿನದಲ್ಲಿ ಕಲಬುರಗಿ ಜಿಲ್ಲೆಗೆ ಮರಳಿದವರು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಶೇಖರ ಮಾಲಿ ಅವರು ಮನವಿ ಮಾಡಿದ್ದಾರೆ.
ಇನ್ನು ಜಿಲ್ಲೆಯಿಂದ ಇತರೆ ರಾಜ್ಯ ಮತ್ತು ದೇವಸ್ಥಾನಗಳಿಗೆ ಪ್ರಯಾಣ ಬೆಳೆಸುವರು ಸಹ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಪ್ರಯಾಣಿಸುವುದು ಒಳ್ಳೆಯದು ಎಂದಿದ್ದಾರೆ.
ಕೋವಿಡ್-19 ಸೋಂಕಿನ ಲಕ್ಷಣಗಳಾದ ನೆಗಡಿ, ಕೆಮ್ಮು, ಜ್ವರ, ತಲೆನೋವು, ಗಂಟಲು ಬೇನೆ, ಉಸಿರಾಟದ ಸಮಸ್ಯೆ, ತೀವ್ರ ಮೈಕೈನೋವು ಕಂಡು ಬಂದರೆ ಕೂಡಲೆ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-19 ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಡಾ. ರಾಜಶೇಖರ್ ಮಾಲಿ ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.
ಕೋವಿಡ್-19 ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳಾದ 2 ಮೀಟರ್ ಶಾರೀರಿಕ ಅಂತರ, ಮುಖಕ್ಕೆ ಮಾಸ್ಕ್ ಧರಿಸುವುದು, ಆಗಾಗ ಕೈಗಳನ್ನು ತೊಳೆದುಕೊಳ್ಳುವುದು ಅಥವಾ ಆಲ್ಕೊಹಾಲ್ ಆಧಾರಿತ ಹ್ಯಾಂಡ್ ಸಾನಿಟೈಜರ್ನಿಂದ ಕೈಗಳನ್ನು ಸ್ವಚ್ಚಗೊಳಿಸಬೇಕು.
ಕೆಮ್ಮುವಾಗ, ಸೀನುವಾಗ ಮೂಗು ಮತ್ತು ಬಾಯಿಯನ್ನು ಕರವಸ್ತ್ರಗಳಿಂದ ಮುಚ್ಚಿಕೊಳ್ಳುವುದು. ತರಕಾರಿ, ಹಣ್ಣುಗಳನ್ನು ಮುಂಚಿತವಾಗಿ ತೊಳೆದು ಸೇವಿಸಬೇಕು ಎಂದ ಅವರು ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಂತೆ ಎಚ್ಚರ ವಹಿಸಬೇಕೆಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243