ಅಂತರಂಗ
ನಮ್ಮ ಕಣ್ಣೋಟವೇ ತಪ್ಪು ಇನ್ನು ಮುನ್ನೋಟ ಹೇಗೆ–ಕೊರೋನಾ ಪ್ರಶ್ನೆ..?
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/01/coronavirus-in-india-suddidina-32.jpg&description=ನಮ್ಮ ಕಣ್ಣೋಟವೇ ತಪ್ಪು ಇನ್ನು ಮುನ್ನೋಟ ಹೇಗೆ–ಕೊರೋನಾ ಪ್ರಶ್ನೆ..?', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/01/coronavirus-in-india-suddidina-32.jpg&description=ನಮ್ಮ ಕಣ್ಣೋಟವೇ ತಪ್ಪು ಇನ್ನು ಮುನ್ನೋಟ ಹೇಗೆ–ಕೊರೋನಾ ಪ್ರಶ್ನೆ..?', 'pinterestShare', 'width=750,height=350'); return false;" title="Pin This Post">
- ನಾ ದಿವಾಕರ
ಭಾರತದ ಆಳುವ ವರ್ಗಗಳ ಮುಂದೆ ಕೊರೋನ ಬಹುಆಯಾಮದ ಸಮಸ್ಯೆಗಳನ್ನು ತಂದು ನಿಲ್ಲಿಸಿದೆ. ಬಹುಶಃ 70 ವರ್ಷಗಳ ಸ್ವತಂತ್ರ ಆಳ್ವಿಕೆಯಲ್ಲಿ ಸಮಾಜದ ಎಲ್ಲ ಮಜಲುಗಳನ್ನೂ ಎಳೆಎಳೆಯಾಗಿ ಹೊರಗೆಳೆದು ನಡುರಸ್ತೆಯಲಿ ಬೆತ್ತಲೆ ನಿಲ್ಲಿಸುವಂತಹ ಪ್ರಸಂಗ ಎದುರಾಗಿರಲಿಲ್ಲ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಆರೋಗ್ಯ ಮತ್ತು ರಾಜಕೀಯ ನೆಲೆಗಳಲ್ಲಿ ಸಮಸ್ಯೆಗಳು ಎದುರಾಗುತ್ತಿವೆ. ನಮ್ಮದೇ ವ್ಯವಸ್ಥೆ ಪೋಷಿಸಿರುವ ವಿಕೃತಿಗಳ ಪರಿಣಾಮ ಕೊರೋನಾ ಸಾಂಸ್ಕೃತಿಕ ಸಮಸ್ಯೆಗಳನ್ನೂ ಸೃಷ್ಟಿಸಿದೆ.
ಸರ್ಕಾರದ ಅಥವಾ ವ್ಯವಸ್ಥೆಯ ವೈಫಲ್ಯವನ್ನು ಕುರಿತು ಸೊಲ್ಲೆತ್ತಿದ ಕೂಡಲೇ ನಮ್ಮಲ್ಲಿ ರಾಜಕೀಯ ಪರ ವಿರೋಧದ ನೆಲೆಗಳು ಧುತ್ತೆಂದು ಎದುರಾಗಿಬಿಡುತ್ತವೆ. ಇದು ಅನಿವಾರ್ಯವಲ್ಲ. ಏಕೆಂದರೆ ನಾವು ಎದುರಿಸುತ್ತಿರುವ ಸಮಸ್ಯೆಗಳ ಮೂಲ ವ್ಯವಸ್ಥೆಯ ಬೇರುಗಳಲ್ಲಿದೆ. ಪ್ರಭುತ್ವ ಈ ದೋಷಪೂರಿತ ಬೇರುಗಳನ್ನು ಪೋಷಿಸುತ್ತಾ ಮತ್ತಷ್ಟು ಹದಗೆಡಿಸುತ್ತಿದೆ. ಸರ್ಕಾರಗಳು ಇತ್ತ ಬದಲಾವಣೆಯೂ ಸಾಧ್ಯವಾಗದೆ, ನಿರ್ವಹಣೆಯೂ ಸಾಧ್ಯವಾಗದೆ, ಪ್ರಭುತ್ವದ ನೀತಿಗಳನ್ನು ಪ್ರಶ್ನಾತೀತವಾಗಿಸಿ ಆಡಳಿತ ನಡೆಸುತ್ತಿವೆ. ಈ ವ್ಯತ್ಯಾಸವನ್ನು ಗ್ರಹಿಸದೆ ಹೋದರೆ ನಾವು ಪಕ್ಷ ರಾಜಕಾರಣದ ಬಂದಿಗಳಾಗಿಬಿಡುತ್ತೇವೆ.
50 ದಿನಗಳ ಲಾಕ್ ಡೌನ್ ಭಾರತದಲ್ಲಿ ಕೊರೋನಾ ಹರಡುವಿಕೆಯನ್ನು ಕಡಿಮೆ ಮಾಡಿದೆ. ಇದು ವಾಸ್ತವ. ಈ ಲಾಕ್ ಡೌನ್ ಮಾಡದೆ ಹೋಗಿದ್ದಲ್ಲಿ ಈ ಹೊತ್ತಿಗೆ ಲಕ್ಷಾಂತರ ಸಂಖ್ಯೆಯ ಜನ ಕೊರೋನಾ ಪೀಡಿತರಾಗುತ್ತಿದ್ದರು ಎಂದು ವೈದ್ಯಕೀಯ ವಲಯದಲ್ಲೂ ಹೇಳಲಾಗುತ್ತಿದೆ. ಆದರೆ ಲಾಕ್ ಡೌನ್ ಹೊರತಾಗಿಯೂ ಕೊರೋನಾ ಹರಡುವಿಕೆಯನ್ನು ತಡೆಗಟ್ಟುವುದರಲ್ಲಿ ಸಂಪೂರ್ಣ ಯಶಸ್ಸು ಕಾಣಲಾಗಿಲ್ಲ.
ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅಂಕಿಅಂಶಗಳನ್ನು ಕೆಲಹೊತ್ತು ಬದಿಗಿಡೋಣ. ಇತ್ತೀಚೆಗೆ ಇದು ಹವಾಮಾನ ವರದಿಯಂತೆ ಕಾಣುತ್ತಿದೆ. ಇಂದು ನಮ್ಮ ಮುಂದಿರುವ ಬೃಹತ್ ಸಮಸ್ಯೆ ಲಾಕ್ ಡೌನ್ ನಡುವೆಯೂ ದೇಶದ ಅರ್ಥವ್ಯವಸ್ಥೆಯನ್ನು ಹದಗೆಡದಂತೆ ನೋಡಿಕೊಳ್ಳುವುದು ಮತ್ತು ಈ ಅರ್ಥವ್ಯವಸ್ಥೆಯನ್ನು ಸಂರಕ್ಷಿಸುವ ದುಡಿಮೆಯ ಕೈಗಳನ್ನು ಸಂರಕ್ಷಿಸುವುದು. ಮೊದಲನೆಯ ಆದ್ಯತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಶ್ರಮ ವಹಿಸುತ್ತಿವೆ. ಎರಡನೆಯದು ಕೇವಲ ಆಯ್ಕೆಯಾಗಿದೆಯೇ ಹೊರತು, ಆದ್ಯತೆಯಾಗಿಲ್ಲ.
ಈ ಎರಡನೆ ಆದ್ಯತೆಯ ಫಲಾನುಭವಿಗಳು ಈ ದೇಶದ ಕಾರ್ಮಿಕರು ಮತ್ತು ವಿಶೇಷವಾಗಿ ಅಸಂಘಟಿತ ವಲಸೆ ಕಾರ್ಮಿಕರು. ಮಹಾರಾಷ್ಟ್ರದ ಔರಂಗಾಬಾದ್ ಬಲಿ 16 ವಲಸೆ ಕಾರ್ಮಿಕರು ಚಲಿಸುವ ರೈಲಿಗೆ ಬಲಿಯಾಗಿದ್ದರೆ, ಹೈದರಾಬಾದ್ ನಿಂದ ಉತ್ತರಭಾರತಕ್ಕೆ ಮಾವಿನ ಹಣ್ಣಿನ ಲಾರಿಯೊಂದರಲ್ಲಿ ಹೊರಟಿದ್ದ ಐವರು ಕಾರ್ಮಿಕರು ಇಂದು ಸಾವನ್ನಪ್ಪಿದ್ದಾರೆ. ಇವರ ಸಾವಿಗೆ ವ್ಯವಸ್ಥೆ ಕಾರಣವೇ ? ಈ ಪ್ರಶ್ನೆಯೇ ನಮ್ಮನ್ನು ವಿಚಲಿತಗೊಳಿಸಬೇಕು.
ಯಾವ ವ್ಯವಸ್ಥೆಯನ್ನು ದೂಷಿಸಬೇಕು. ಆಡಳಿತ ವ್ಯವಸ್ಥೆಯೋ ಅಥವಾ ನಮ್ಮ ಸಾಮಾಜಿಕ ವ್ಯವಸ್ಥೆಯೋ ? ವ್ಯವಸ್ಥೆಯನ್ನೇ ದೂಷಿಸುತ್ತಾ ಕುಳಿತರೆ ಜನಸಾಮಾನ್ಯರಲ್ಲಿ ಅರಿವು ಮೂಡುವುದು ಯಾವಾಗ ? ಈ ಪ್ರಶ್ನೆಗಳು ಒಂದೆಡೆಯಾದರೆ ಮತ್ತೊಂದೆಡೆ ಸರ್ಕಾರ ಇವರಿಗೆ ಎಲ್ಲ ಸವಲತ್ತುಗಳನ್ನೂ ನೀಡುತ್ತಿಲ್ಲವೇ ? ವಿಮೆ, ಭವಿಷ್ಯ ನಿಧಿ, ಕನಿಷ್ಟ ಕೂಲಿ, ಉಚಿತ ಪಡಿತರ ಎಲ್ಲವನ್ನೂ ನೀಡುತ್ತಿಲ್ಲವೇ ? ಈ ಪ್ರಶ್ನೆಗಳೂ ಕೇಳಿಬರುತ್ತವೆ.
ನಿಜ ಸರ್ಕಾರ ಎಲ್ಲ ಸವಲತ್ತುಗಳನ್ನೂ ನೀಡುತ್ತಿದೆ. ಹಾಗಾಗಿಯೇ ವಲಸೆ ಕಾರ್ಮಿಕರು ತಾವು ದುಡಿದ ಅಲ್ಪ ಆದಾಯದಲ್ಲೇ ಜೀವನ ಸವೆಸುತ್ತಾ ತಮ್ಮ ಸುತ್ತಲಿನ ಸಮಾಜಕ್ಕೆ ಹಿತವಲಯಗಳನ್ನು ಸೃಷ್ಟಿಮಾಡುತಿದ್ದರು. ತಮ್ಮ ಆದಾಯದ ಇತಿಮಿತಿಯಲ್ಲೇ ಸಾವಿರಾರು ಮೈಲು ದೂರದಲ್ಲಿರುವ ಕುಟುಂಬವನ್ನೂ ಸಲಹಿ ತಮ್ಮನ್ನೂ ಪೋಷಿಸಿಕೊಳ್ಳುತ್ತಿದ್ದ ಈ ಕಾರ್ಮಿಕರು ಎಂದಾದರೂ ದೇಹಿ ಎಂದಿದ್ದಾರೆಯೇ ? ಇಲ್ಲವಲ್ಲಾ .
ಈಗ ಇವರೇಕೆ ನಮಗೆ ಸಮಸ್ಯೆಯಾಗಿ ಕಾಣುತ್ತಿದ್ದಾರೆ ? ಏಕೆಂದರೆ ಅವರ ಆದಾಯ ಸ್ಥಗಿತಗೊಂಡಿದೆ. ಅವರ ನಾಳಿನ ಕೂಳು ಇಲ್ಲವಾಗಿದೆ. ಇವರನ್ನೇ ನಂಬಿ ಬದುಕುತ್ತಿರುವ ಕುಟುಂಬಗಳು ಬೀದಿಪಾಲಾಗುತ್ತಿವೆ. ಇಂತಹ ಸಂದರ್ಭಗಳಲ್ಲಿ ವಲಸೆ ಕಾರ್ಮಿಕರಲ್ಲಿ ಕಾಣುತ್ತಿರುವ ಸ್ವಗ್ರಾಮದ ಸೆಳೆತ ನಮ್ಮ ದೃಷ್ಟಿಯಲ್ಲಿ ಅಕ್ಷಮ್ಯ ಎನಿಸಿದರೆ ನಾವು ನಾಗರಿಕರೇ ಅಲ್ಲ ಎನ್ನಬೇಕಾಗುತ್ತದೆ.
“ ವಲಸೆ ” ಎನ್ನುವ ಪದಬಳಕೆಯೇ ನಮ್ಮ ಮತ್ತು ಅವರ ನಡುವೆ ಒಂದು ಗೋಡೆ ನಿರ್ಮಿಸಿಬಿಡುತ್ತದೆ. ಹಾಗೆ ಕೂಡಿ ಬಾಳಿದವರಿಗೇ ಗೋಡೆಯಿಂದಾಚೆ ಇರಲು ಹೇಳುವ ಒಂದು ಸಮಾಜ ವಲಸಿಗರಿಗೆ ಇನ್ನೇನು ಹೇಳಲು ಸಾಧ್ಯ ? ವಲಸೆ ಕಾರ್ಮಿಕರು ಎಂದಾಕ್ಷಣ ನಮ್ಮ ಮನಸಿನಲ್ಲಿ ಅಸ್ಮಿತೆಗಳ ತಾಕಲಾಟ ಶುರುವಾಗುತ್ತದೆ. ಎಲ್ಲಿಂದ ಬಂದವರು, ಯಾವ ಭಾಷಿಕರು, ಅಸ್ಪೃಶ್ಯರೋ ಸ್ಪೃಶ್ಯರೋ, ಉತ್ತರದವರೋ ಈಶಾನ್ಯದವರೋ, ಬಿಹಾರಿಯೋ ಬಂಗಾಲಿಯೋ ಹೀಗೆ.
ಈ ಅಸ್ಮಿತೆಗಳ ಗೋಡೆಗಳನ್ನು ಕಟ್ಟಿಕೊಳ್ಳುತ್ತಲೇ ನಾವು ಅವರನ್ನು ಆಶ್ರಯಿಸುತ್ತೇವೆ. ಅವರು ನಮ್ಮನ್ನು ಆಶ್ರಯಿಸುವುದಿಲ್ಲ, ಅವರ ದುಡಿಮೆಯನ್ನು ಆಶ್ರಯಿಸುತ್ತಾರೆ. ಕೊನೆಗೆ ನಮಗೆ ಸೂರು ಕಲ್ಪಿಸಲು ವರ್ಷಗಟ್ಟಲೆ ದುಡಿಯುವ ನೂರಾರು ಕೈಗಳಿಗೆ ನಾವು ನೀಡುವುದು ಅಳಿದುಳಿದ ಅನ್ನವನ್ನೇ ಹೊರತು ಭೂರಿ ಭೋಜನವೇನಲ್ಲ.
ಇವರಲ್ಲಿ ನಾವು ನಾಗರಿಕ ಪ್ರಜ್ಞೆ ಅಪೇಕ್ಷಿಸುತ್ತೇವೆ, ಸಾಮಾನ್ಯ ಜ್ಞಾನ ಅಪೇಕ್ಷಿಸುತ್ತೇವೆ, ಸಂಯಮ, ತಾಳ್ಮೆ, ಸಹನೆ ಎಲ್ಲವನ್ನೂ ಅಪೇಕ್ಷಿಸುತ್ತೇವೆ. ಸರ್ಕಾರ ಲಾಕ್ ಡೌನ್ ಅವಧಿಯಲ್ಲಿ ಉಚಿತ ಅಕ್ಕಿ ನೀಡಿರಲಿಲ್ಲವೇ ಎನ್ನುವ ಪ್ರಶ್ನೆ ಸಹಜ. ಆದರೆ ಜೀವನ ಎಂದರೆ ಅನ್ನ ಮಾತ್ರವೇ ? ಅಷ್ಟೇ ಆಗಿದ್ದರೆ ದುಡಿಮೆಯೂ ಬೇಕಿಲ್ಲ ಅಲ್ಲವೇ ? ನಾವು ಸುಂದರ ಬದುಕಿನ ಕೋಟೆ ಕಟ್ಟಿಕೊಳ್ಳಲು ಕನಸು ಕಾಣುತ್ತೇವೆ, ಅವರು ತಮ್ಮ ಜೀವನ ಸವೆಸಲು ಅಪೇಕ್ಷಿಸಿದರೆ ನಮ್ಮ ಮನಸಿಗೆ ಹುಳಿ ಹಿಂಡಿದಂತಾಗುತ್ತದೆ.
ಏಕೆ ಹೀಗೆ ? ನಮ್ಮ ಕನಸಿನ ಬದುಕನ್ನು ತಕ್ಕಡಿಯ ಒಂದು ತಟ್ಟೆಯಲ್ಲಿಟ್ಟು ಅವರ ಕನಸುಗಳನ್ನೂ ಇಟ್ಟು ನೋಡೋಣವೇ ? ನಮ್ಮ ತಟ್ಟೆಯಲ್ಲಿ ಕುಟುಂಬ, ಮನೆ, ವಾಹನ, ಶಿಕ್ಷಣ, ಉದ್ಯೋಗ, ಮನರಂಜನೆ, ವಿಹಾರ, ಪ್ರಯಾಣ ಇವೆಲ್ಲವೂ ತೂಗುತ್ತವೆ. ಅವರ ತಟ್ಟೆಯಲ್ಲಿ ಆಹಾರ, ಕುಟುಂಬ, ತಂಗಲು ಒಂದು ಚಾವಡಿ ಇಷ್ಟಲ್ಲದೆ ಇನ್ನೇನು ತೂಗುತ್ತದೆ. ಆದರೂ ನಾವು ತುಲಾಭಾರ ಮಾಡಲು ಸದಾ ಸಜ್ಜಾಗಿರುತ್ತೇವೆ.
ಮುಂಬಯಿಯ ಧಾರವಿಯತ್ತ ಒಮ್ಮೆ ಕಣ್ಣು ಹಾಯಿಸಿದರೆ ಈ ವಾಸ್ತವ ಮುಖಕ್ಕೆ ರಾಚುತ್ತದೆ. ಹತ್ತು ಅಡಿ ವಿಸ್ತೀರ್ಣದ ಗೂಡಿನಲ್ಲಿ ಹತ್ತು ಜನ ಇರುತ್ತಾರೆ ಎಂದರೆ ನಮಗೆ ಊಹಿಸಲು ಸಾಧ್ಯವೇ ? ಇದನ್ನು ಕಾಣಲು ಅಲ್ಲಿಗೇ ಹೋಗಬೇಕಿಲ್ಲ, ನಾವು ಖರೀದಿಸುವ ಫ್ಲಾಟ್ ಸುತ್ತಲೂ ಅದೇ ವಸತಿಸಮುಚ್ಚಯದ ನಿರ್ಮಾಣದಲ್ಲಿ ತೊಡಗಿರುವ ವಲಸಿಗರ ಗೂಡುಗಳತ್ತ ಒಮ್ಮೆ ಕಣ್ಣು ಹಾಯಿಸಿದರೂ ಸಾಕು, ಧಾರವಿ ಪರಿಚಯವಾಗುತ್ತದೆ. ನಾವು ಅತ್ತ ನೋಡುವುದಿಲ್ಲವಷ್ಟೆ.
ಅವರ ಬಳಿ ಚರವಾಣಿ ಇರುವುದಲ್ಲವೇ ಎಂದು ಹುಬ್ಬೇರಿಸುತ್ತೇವೆ ? ಹೊಟ್ಟೆಗೆ ಹಿಟ್ಟಿಲ್ಲದೆ ಗಾದೆಯೂ ನಮಗೆ ನೆನಪಾಗಿಬಿಡುತ್ತದೆ. ಆದರೆ ಈ ವಲಸಿಗರನ್ನು ಸಾವಿರಾರು ಕಿಲೋಮೀಟರ್ ದೂರಕ್ಕೆ ಕರೆದೊಯ್ದಿರುವ ಒಂದು ಅರ್ಥವ್ಯವಸ್ಥೆಯೇ ಅವರಿಗೆ ಚರವಾಣಿಯನ್ನೂ ಒದಗಿಸುತ್ತದೆ, ತರಂಗಾಂತರವನ್ನೂ ಒದಗಿಸುತ್ತದೆ. ಇಲ್ಲಿ ಬಂಡವಾಳದ ಸ್ವಾರ್ಥವೂ ಇರುವುದುನ್ನು ಗಮನಿಸಬೇಕಷ್ಟೆ.
ಉತ್ತರ ಭಾರತದಲ್ಲಿ ವಲಸೆ ಕಾರ್ಮಿಕರಿಗೆಂದೇ ಶ್ರಮಿಕ ರೈಲುಗಳು ಸಜ್ಜಾಗಿದ್ದರೂ ಸಾವಿರಾರು ಕಾರ್ಮಿಕರು ಕಾಲ್ನಡಿಗೆಯಲ್ಲೇ ಹೊರಟಿದ್ದಾರೆ. ಏಕೆಂದರೆ ಅವರಿಗೆ ಆನ್ಲೈನ್ ಅರ್ಜಿ ಮತ್ತು ತಮ್ಮ ಕ್ರಮಸಂಖ್ಯೆಗಾಗಿ ಕಾಯುವಷ್ಟು ವ್ಯವಧಾನ ಇರುವುದಿಲ್ಲ.
ಅದಕ್ಕೇ ಮಹಾರಾಷ್ಟ್ರದಲ್ಲಿ ರೈಲಿಗೆ ಸಿಲುಕಿ ಸತ್ತಿದ್ದು, ಸ್ವಲ್ಪ ದಿನ ತಡೆದಿದ್ದರೆ ಏನಾಗುತ್ತಿತ್ತು ? ಮತ್ತೊಂದು ಪ್ರಶ್ನೆ ನಮ್ಮ ನಡುವೆ ಉದ್ಭವಿಸುತ್ತದೆ. ನಿಜ, ತಡೆದಿದ್ದರೆ ಅವರು ಬದುಕಬಹುದಿತ್ತು. ಆದರೆ ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ತಮ್ಮ ಕುಟುಂಬಗಳೊಡನೆ ಸಂಪರ್ಕವನ್ನೇ ಕಡಿದುಕೊಂಡ ಸಾವಿರಾರು ಕಾರ್ಮಿಕರಲ್ಲಿ ನಾವು ವ್ಯವಧಾನವನ್ನು ಅಪೇಕ್ಷಿಸುವುದಾದರೂ ಹೇಗೆ ? ಸರ್ಕಾರ ಅವರಿಗೆ ಉಚಿತ ಅಕ್ಕಿ ನೀಡಿದೆ, ಮೊಬೈಲ್ ರೀಚಾರ್ಜ್ ಮಾಡಿಸಲು 10 ರೂ ಕೊಡುವವರಿಲ್ಲ. ತಮ್ಮ ಹೆಂಡತಿ ಮಕ್ಕಳೊಡನೆ ಮಾತನಾಡುವ ತವಕ ಅವರಿಗೆ ಇರುವುದಿಲ್ಲವೇ ? ಇದು ನಮಗೆ ಗೋಚರಿಸುವುದೇ ಇಲ್ಲ. ಏಕೆಂದರೆ ನಮ್ಮ ಮತ್ತು ಅವರ ನಡುವೆ ಒಂದು ಗೋಡೆ ಇದೆ. ಅದು ಅನೇಕ ಸಂಗತಿಗಳನ್ನು ನುಂಗಿಹಾಕಿಬಿಡುತ್ತದೆ.
ಈ ಕಾರ್ಮಿಕರಿಗಾಗಿಯೇ ಸರ್ಕಾರಗಳು ಸಾಕಷ್ಟು ಕಾನೂನುಗಳನ್ನು ಜಾರಿ ಮಾಡಿವೆ. ಕಟ್ಟುನಿಟ್ಟಾದ ಕಾಯ್ದೆಗಳಿವೆ. ಆದರೆ ಇವರನ್ನು ನಿರ್ವಹಿಸುವ ಗುತ್ತಿಗೆದಾರರನ್ನು ನಿಯಂತ್ರಿಸಲು ಯಾವ ಕಾಯ್ದೆ ಕಾನೂನು ಇದೆ ಎಂದು ನೋಡಿದಾಗ ಮೂಕವಿಸ್ಮಿತರಾಗುತ್ತೇವೆ. ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ, ರಸ್ತೆ ಮತ್ತು ರೈಲು ನಿರ್ಮಾಣ ಕಾಮಗಾರಿಯಲ್ಲಿ, ಸಾರ್ವಜನಿಕ ಸೌಕರ್ಯಗಳ ನಿರ್ಮಾಣ ಕಾಮಗಾರಿಗಳಲ್ಲಿ ಬಂಡವಾಳಿಗರ ಮಾಫಿಯಾ ಎಷ್ಟು ಬಲಿಷ್ಠವಾಗಿದೆಯೋ ಅಷ್ಟೇ ಬಲಿಷ್ಠವಾಗಿರುವುದು ಗುತ್ತಿಗೆದಾರರ ಮಾಫಿಯಾ.
ಇದು ನಮ್ಮನ್ನಾಳುವ ಜನಪ್ರತಿನಿಧಿಗಳಿಗೆ, ಆಡಳಿತ ನಿರ್ವಹಿಸುವ ಅಧಿಕಾರಶಾಹಿಗೆ ತಿಳಿಯದ ವಿಷಯವೇನಲ್ಲ. ಆದರೂ ಒಂದು ವ್ಯವಸ್ಥೆ ಎಲ್ಲರನ್ನೂ ತೆಪ್ಪಗಾಗಿಸುತ್ತದೆ. ಈ ವ್ಯವಸ್ಥೆಯ ಅಂಗಳದಲ್ಲಿ ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ವಲಯಗಳ ದುಷ್ಟ ಕೂಟಗಳು ತಮ್ಮದೇ ಆದ ಸುಭದ್ರ ನೆಲೆಗಳನ್ನು ಸೃಷ್ಟಿಸಿಕೊಂಡಿರುತ್ತವೆ. ಸರ್ಕಾರಕ್ಕೆ, ಪ್ರಭುತ್ವಕ್ಕೆ ಇದರ ಸ್ಪಷ್ಟ ಅರಿವು ಇರುತ್ತದೆ. ಆ ವ್ಯವಸ್ಥೆಯನ್ನು ದೂಷಿಸಿದರೆ ತಪ್ಪೇನಿದೆ ?
ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲೆಂದೇ ಜಾಗತಿಕ ಹಣಕಾಸು ಬಂಡವಾಳ ಪ್ರತಿಯೊಂದು ದೇಶದಲ್ಲೂ ತನ್ನದೇ ಹಿತವಲಯದ ಆಡಳಿತ ವ್ಯವಸ್ಥೆಯನ್ನು ರೂಪಿಸುತ್ತದೆ. ನಾವು ಚುನಾಯಿಸುವ ಸರ್ಕಾರಗಳು ಮತ್ತು ನಮ್ಮ ಚಟುವಟಿಕೆಗಳನ್ನು ನಿಯಂತ್ರಿಸುವ ಪ್ರಭುತ್ವ ಈ ವ್ಯವಸ್ಥೆಯ ಚೌಕಟ್ಟಿನಿಂದ ಹೊರಬರುವ ವ್ಯವಧಾನವೂ ಇಲ್ಲದೆ, ಸಂಯಮವೂ ಇಲ್ಲದೆ, ಸಂವೇದನೆಯೂ ಇಲ್ಲದೆ ಬಂಡವಾಳದ ಜೀತದಾಳುಗಳಂತೆ ಕಾರ್ಯನಿರ್ವಹಿಸುತ್ತದೆ.
ವಲಸೆ ಕಾರ್ಮಿಕರಲ್ಲಿ ವ್ಯವಧಾನ ಅಪೇಕ್ಷಿಸುವ ನಾಗರಿಕ ಸಮಾಜ, ಅಂದರೆ ನಾವು, ಈ ವ್ಯವಸ್ಥೆಯ ನಿರ್ವಾಹಕರಲ್ಲಿ ಅದನ್ನು ಬಯಸುವುದಿಲ್ಲ. ಏಕೆಂದರೆ ಗೊತ್ತಿದ್ದೋ ಗೊತ್ತಿಲ್ಲದೆಯೋ ನಾವು ವ್ಯವಸ್ಥೆಯ ಒಂದು ಭಾಗವಾಗಿರುತ್ತೇವೆ. ಈ ವ್ಯವಸ್ಥೆಯನ್ನು ಸುವ್ಯವಸ್ಥಿತವಾಗಿ ಸಂರಕ್ಷಿಸುವ ಪ್ರಭುತ್ವ ನಮ್ಮ ಪಾಲಿಗೆ ಅಪ್ಯಾಯಮಾನವಾಗುತ್ತದೆ.
ಕಾರಣ, ಯೋಚಿಸುವ ಮನಸುಗಳನ್ನು ವ್ಯವಸ್ಥೆಯೇ ಖರೀದಿಸುತ್ತದೆ. ಶಿಕ್ಷಣದ ಮೂಲಕ, ಮಾಧ್ಯಮಗಳ ಮೂಲಕ, ಅಂತರ್ಜಾಲದ ಮೂಲಕ, ಸಾಮಾಜಿಕ ಮಾಧ್ಯಮಗಳ ಮೂಲಕ ಮತ್ತು ಸಾಂಸ್ಥಿಕ ನೆಲೆಗಳ ಮೂಲಕ. ಈ ವಶೀಕರಣ ಪ್ರಕ್ರಿಯೆಗೆ ನಾವು, ಅಂದರೆ ಆಲೋಚಿಸುವ ಶಕ್ತಿಯುಳ್ಳ ಮನಸುಗಳು, ಸುಲಭ ತುತ್ತಾಗುತ್ತೇವೆ. ನಮ್ಮ ಆಯ್ಕೆಗಳು ಪ್ರಭುತ್ವದ ಆದ್ಯತೆಯಾಗಿಬಿಡುತ್ತವೆ, ನಮ್ಮ ಆದ್ಯತೆಗಳು ವ್ಯವಸ್ಥೆಯ ಆಯ್ಕೆಯಾಗಿಬಿಡುತ್ತದೆ.
ಇದಕ್ಕೆ ಗುರುದಕ್ಷಿಣೆಯಂತೆ ನಾವು ಐದು ವರ್ಷಕ್ಕೊಮ್ಮೆಯೋ, ನಡುನಡುವೆಯೋ ಮತಗಟ್ಟೆಗೆ ಹೋಗಿ ಗುರುವಲ್ಲದ ಗುರುವಿಗೆ ನಮ್ಮ ಹೆಬ್ಬೆರಳುಗಳನ್ನು ಅರ್ಪಿಸುತ್ತಲೇ ಬಂದಿದ್ದೇವೆ. ನಮ್ಮ ಹಿತವಲಯ ಸುರಕ್ಷಿತವಾಗಿಬಿಡುತ್ತದೆ. ನಮ್ಮ ಬೇಕು ಬೇಡಗಳ ಚೆಂಡಾಟಕ್ಕೆ ಮೈದಾನ ಹಿಗ್ಗುತ್ತಲೇ ಹೋಗುತ್ತದೆ. ಹೀಗಿರುವಾಗ ನಮಗೆ ನಾವೇ ಕಟ್ಟಿದ ಗೋಡೆಯ ಆಚೆಗಿನ ಪ್ರಪಂಚ ಕಾಣುವುದಾದರೂ ಹೇಗೆ ?
ಹಾಗಾಗಿಯೇ ನಮಗೆ ಒಂದು ಸೈಕಲ್ ಮೇಲೆ ಸಾವಿರ ಕಿಲೋಮೀಟರ್ ಹೋಗುವವನು, ಬಿರುಬಿಸಿಲಲ್ಲಿ ಮಗುವನ್ನು ತಲೆಯಮೇಲೆ ಹೊತ್ತು ಹೋಗುವವನು, ಕೊಂಕುಳಲ್ಲಿ ಹಸಿವಿನಿಂದ ಅಳುತ್ತಿರುವ ಕಂದಮ್ಮನನ್ನು ಹೊತ್ತು ಹೋಗುವವಳು ವಿಚಿತ್ರವಾಗಿ ಕಾಣುತ್ತಾರೆ. ನಮ್ಮ ಮತ್ತು ಅವರ ನಡುವೆ “ ವಲಸೆ ” ಎನ್ನುವ ಅಕ್ಷರದ ಗೋಡೆಯೊಂದು ನಿಂತಿರುತ್ತದೆ. ಇವರು ಇಲ್ಲೇ ಇದ್ದರೆ ಏನು ಗಂಟು ಹೋಗುತ್ತೆ ಎನ್ನುವ ಪ್ರಶ್ನೆಯೂ ಸಹಜ.
ಆದರೆ ಈ ಪ್ರಶ್ನೆಯ ಹಿಂದೆ ನಮ್ಮ ಸ್ವಾರ್ಥವೂ ಇದೆ ಅಲ್ಲವೇ ? ನಾಳೆಯಿಂದ ಶ್ರಮದ ಬೆಲೆ ಹೆಚ್ಚಾಗುತ್ತದೆ ಎನ್ನುವ ಆತಂಕ. ಗುತ್ತಿಗೆದಾರನಿಗೆ ಹೆಚ್ಚಿನ ಕೂಲಿ ನೀಡಬೇಕಾದ ಆತಂಕ. ಈ ಆತಂಕಗಳಿಗೆ ವಲಸಿಗರ ತಕ್ಕಡಿಯ ತಟ್ಟೆಯಲ್ಲಿ ಜಾಗವೇ ಇರುವುದಿಲ್ಲ. ನಮಗೆ ಜೀವನ ಮತ್ತು ಜೀವನೋಪಾಯ ಒಂದೇ ಸೂರಿನಡಿ ಇರುತ್ತದೆ. ಅವರಿಗೆ ಎರಡರ ನಡುವೆ ನೂರಾರು ಮೈಲು ಅಂತರ ಇರುತ್ತದೆ.
ಈ ಕಟುವಾಸ್ತವವನ್ನು ಅರಿಯಲು ಬೇಕಾದ ಮುನ್ನೋಟ ನಮ್ಮ ಸಮಾಜದ ಹಲವು ವರ್ಗಗಳಲ್ಲಿ ಇಲ್ಲ ಎನ್ನುವುದನ್ನು ಕೊರೋನಾ ನಿರೂಪಿಸಿದೆ. ಸರ್ಕಾರದಿಂದ ಇದನ್ನು ಅಪೇಕ್ಷಿಸಲಾಗುವುದಿಲ್ಲ. ಪ್ರಭುತ್ವದಿಂದ ನಿರೀಕ್ಷಿಸಲಾಗುವುದಿಲ್ಲ. ಏಕೆಂದರೆ ಅವೆರಡೂ ವ್ಯವಸ್ಥೆಯ ಸಂರಕ್ಷಣೆಗಾಗಿಯೇ ಇರುವ ಸಾಂಸ್ಥಿಕ ಸ್ಥಾವರಗಳು.
ಆದರೆ ನಾಗರಿಕ ಸಮಾಜ ಸ್ಥಾವರವಾಗಬಾರದು ಅಲ್ಲವೇ ? ಸದೃಢ ದೇಶ ನಿರ್ಮಾಣಕ್ಕಾಗಿ ಬೆವರು ಸುರಿಸಿ ದುಡಿವ ಶ್ರಮಿಕರ ಮಡುಗಟ್ಟಿದ ಭಾವನೆಗಳು ಜಡಗಟ್ಟಿದ ವ್ಯವಸ್ಥೆಗೆ ಅರ್ಥವಾಗುವುದಿಲ್ಲ. ಒಂದು ಜಂಗಮ ಸ್ವರೂಪಿ ಸಮಾಜಕ್ಕೆ ಮಾತ್ರ ಅರ್ಥವಾಗುತ್ತದೆ. ಅಂತಹ ಒಂದು ಸಮಾಜವನ್ನು ಇನ್ನಾದರು ನಾವು ಕಟ್ಟಬೇಕಿದೆ ಎನಿಸುವುದಿಲ್ಲವೇ ? ಇನ್ನೂ ಹಾಗೆನಿಸಿದದಿದ್ದರೆ, ಕೊರೋನಾ ನಮ್ಮ ನಡುವೆ ಇನ್ನೂ ಇರುತ್ತದೆ. ನಮಗೆ ಈ ಪಾಠವನ್ನು ಕಲಿಸಿಯೇ ತೀರುತ್ತದೆ. ಲಾಕ್ ಡೌನ್ ಇರಲಿ, ಇಲ್ಲದಿರಲಿ, ನಮ್ಮ ಮನಸಿನ ಬಾಗಿಲುಗಳನ್ನು ಸೀಲ್ ಡೌನ್ ಮಾಡುವುದು ಬೇಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.




