ದಿನದ ಸುದ್ದಿ
ಅರ್ಥವ್ಯವಸ್ಥೆಯ ದುರಸ್ತಿಯೂ ಭವಿಷ್ಯದ ದುರವಸ್ಥೆಯೂ–ಕೊರೋನಾ ಸಂಕಟ
- ನಾ ದಿವಾಕರ
“ಕೊನೆಗೂ ಭಾರತದ ಪ್ರಜೆಗಳು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ ”. ಹೀಗೇನಾದರೂ ಭಾವಿಸಿದರೆ ನಾವು ಯಾವುದೋ ಲೋಕದಲ್ಲಿದ್ದೇವೆ ಎಂದೇ ಅರ್ಥ. ಅಥವಾ ನಮ್ಮ ಸುದ್ದಿಮನೆಗಳಲ್ಲಿ ಕುಳಿತಿರುವ ಅನರ್ಥಶಾಸ್ತ್ರಜ್ಞರ ಮೋಡಿ(ದಿ)ಗೆ ಬಲಿಯಾಗಿದ್ದೇವೆ ಎಂದರ್ಥ. ಯಾವುದೇ ಸರ್ಕಾರ ವಿಪತ್ತಿನ ಸಂದರ್ಭದಲ್ಲಿ ಘೋಷಿಸುವ ಆರ್ಥಿಕ ಪ್ಯಾಕೇಜಿಗೆ ವಿಭಿನ್ನ ಮಜಲುಗಳು, ಆಯಾಮಗಳು, ಮಾರ್ಗಗಳು ಇರುತ್ತವೆ.
ಕಬ್ಬಿಣದ ತಿಜೋರಿಯಲ್ಲಿದ್ದ ಹಣವನ್ನೆತ್ತಿ ಎಲ್ಲರಿಗೂ ಹಂಚುವ ವಿಧಾನ ಇದಲ್ಲ. 20 ಲಕ್ಷ ಕೋಟಿಯನ್ನು 130ರಿಂದ ಭಾಗಿಸಿ ತಲಾ 15 ಸಾವಿರ ರೂ ಸಿಗುತ್ತದೆ ಎಂದು ಮೆರೆಯುವ ಸುದ್ದಿಮನೆಗಳು, ರೋಚಕತೆಗಾಗಿಯೇ ಹೀಗೆ ಮಾಡಿದ್ದರೂ ಇದು ಮುಠ್ಠಾಳ ಕೆಲಸ ಎನ್ನಲು ಅಡ್ಡಿಯಿಲ್ಲ.ಜನಪ್ರತಿನಿಧಿಗಳಲ್ಲೇ ಅರ್ಥಶಾಸ್ತ್ರದ ಅರಿವಿನ ಕೊರತೆ ಇರುವ ದೇಶದಲ್ಲಿ ಇದೇನೂ ಅಚ್ಚರಿ ಮೂಡಿಸುವ ವಿಚಾರವಲ್ಲ
ಕೊರೋನಾ ಪೂರ್ವದಲ್ಲಿದ್ದ ಭಾರತಕ್ಕೂ , ವರ್ತಮಾನದ ಸಂದರ್ಭಕ್ಕೂ ಹೆಚ್ಚಿನ ವ್ಯತ್ಯಾಸವೇನೂ ಇಲ್ಲ. ಸಮಸ್ಯೆ ಉಲ್ಬಣಿಸಿದೆ ಅಷ್ಟೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ದೇಶದ ಉತ್ಪಾದನೆ ಕುಸಿದಿದೆ, ಜನಸಾಮಾನ್ಯರ ಖರೀದಿ ಸಾಮರ್ಥ್ಯ ಕ್ಷೀಣಿಸಿದೆ, ಮಾರುಕಟ್ಟೆಯಲ್ಲಿ ನಗದು ಚಲಾವಣೆ ಕಡಿಮೆಯಾಗುತ್ತಿದೆ, ಕೃಷಿ ಕ್ಷೇತ್ರ ಮಾರುಕಟ್ಟೆಯ ನೆರವು ಇಲ್ಲದೆ ಬರಡಾಗುತ್ತಿದೆ, ಗ್ರಾಮೀಣ ಆರ್ಥಿಕತೆ ಹಳ್ಳ ಹಿಡಿದಿದೆ, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕೆಳ ಮಧ್ಯಮವರ್ಗಗಳು ಮತ್ತು ಸಣ್ಣ-ಸೂಕ್ಷ್ಮ ವ್ಯಾಪಾರಿ ವರ್ಗ ಅಸ್ಥಿರತೆಯನ್ನು ಎದುರಿಸುತ್ತಿದೆ ಮತ್ತು ಎಲ್ಲಕ್ಕಿಂತಲೂ ಮಿಗಿಲಾಗಿ ಈ ಎಲ್ಲ ಪ್ರಕ್ರಿಯೆಗಳಲ್ಲಿ ಪ್ರಧಾನ ಪಾತ್ರವಹಿಸುವ ದೇಶದ ದುಡಿಯುವ ವರ್ಗಗಳ ಜೇಬುಗಳು ಖಾಲಿಯಾಗಿವೆ.
ದುಡಿಮೆಯೂ ಇಲ್ಲದೆ, ಕೂಲಿಯೂ ಇಲ್ಲದೆ ತಮ್ಮ ತವರಿನ ಸೂರು ಅರಸಿ “ ಸತ್ತರೆ ನಮ್ಮ ತಾಯ್ನಾಡಿನಲ್ಲೇ ಸಾಯೋಣ ” ಎನ್ನುವ ಧೋರಣೆಯೊಂದಿಗೆ ಗುಳೆ ಹೊರಟಿರುವ ಕೋಟ್ಯಂತರ ಕಾರ್ಮಿಕರ “ ನಾಳೆಗಳು ” ಅನಿಶ್ಚಿತವಾಗಿವೆ.
ಅರ್ಥವ್ಯವಸ್ಥೆಗೂ ಈ ಸಮಸ್ಯೆಗಳಿಗೂ ಸಂಬಂಧ ಇರುವುದನ್ನು ಗುರುತಿಸದೆ ಹೋದರೆ, ನಮ್ಮ ಅನರ್ಥಶಾಸ್ತ್ರ ತರಕಾರಿ ಹರಾಜು ಮಾರುಕಟ್ಟೆಯಂತಾಗಿಬಿಡುತ್ತದೆ. 20 ಲಕ್ಷ ಕೋಟಿ ಎಂದ ಕೂಡಲೇ ನಮ್ಮ ಅಂಗಳದಲ್ಲಿ ಹಣದ ಮಳೆ ಸುರಿದಿದೆ ಎಂದು ಪಿಳಿಪಿಳಿ ನೋಡುವ ಅವಶ್ಯಕತೆ ಇಲ್ಲ. ಈ ಮೊತ್ತ ಎಲ್ಲಿಗೆ ತಲುಪುತ್ತದೆ, ಯಾವ ಮಾರ್ಗಗಳಲ್ಲಿ ಸಂಚರಿಸುತ್ತದೆ, ಯಾರನ್ನು ಮೇಲಕ್ಕೆತ್ತುತ್ತದೆ, ಯಾರನ್ನು ತುಳಿಯುತ್ತದೆ, ಸಂಚರಿಸುವ ಮಾರ್ಗಗಳಲ್ಲಿ ಎತ್ತೆತ್ತ ಉಪನಾಲೆಗಳನ್ನು ನಿರ್ಮಿಸಲಾಗುತ್ತದೆ ಈ ಎಲ್ಲ ಅಂಶಗಳನ್ನೂ ಪರಾಮರ್ಶೆ ಮಾಡಬೇಕು.
ಇನ್ನೂ ಮುಖ್ಯ ಸಂಗತಿ ಎಂದರೆ ಇದು ಎಲ್ಲಿಂದ ಸಂಗ್ರಹವಾಗುತ್ತದೆ ಎನ್ನುವ ಪ್ರಶ್ನೆ. ಏಕೆಂದರೆ ಇದನ್ನು ಸರಿದೂಗಿಸುವ ಹೊಣೆಯೂ ಈ ದೇಶದ ಜನಸಾಮಾನ್ಯರ ಮೇಲೆಯೇ ಇರುತ್ತದೆ. ಅರ್ಥಶಾಸ್ತ್ರದ ವಿದ್ವತ್ ಕೋಣೆಗಳಿಂದ ಹೊರನಿಂತು ನೋಡಿದರೂ ಈ ವಾಸ್ತವಗಳಿಗೆ ನಾವು ಉತ್ತರ ಹುಡುಕಬೇಕಾಗುತ್ತದೆ.
ಕೊರೋನಾ ಸಂದರ್ಭದಲ್ಲಿ ಭಾರತದ ಅರ್ಥವ್ಯವಸ್ಥೆಯನ್ನು ಕಾಡಿದ ಹಲವು ಸಮಸ್ಯೆಗಳಿಗೆ ವೈರಾಣು ಕಾರಣವಲ್ಲ. ಉತ್ಪಾದನಾ ವಲಯ, ಕೃಷಿ ಉತ್ಪಾದನೆ ಮತ್ತು ಎಂಎಸ್ಎಂಇ ಉದ್ಯಮಗಳು ಬಂಡವಾಳದ ಕೊರತೆ ಮತ್ತು ಮೂಲ ಸೌಕರ್ಯಗಳ ಕೊರತೆಯಿಂದ ಮಾರುಕಟ್ಟೆಯಲ್ಲಿ ಸ್ಪರ್ಧಿಸಲಾಗದೆ ಬಸವಳಿದಿದ್ದನ್ನು ಆರು ತಿಂಗಳ ಹಿಂದೆಯೇ ಅನೇಕ ಅರ್ಥಶಾಸ್ತ್ರಜ್ಞರು ಉಲ್ಲೇಖಿಸಿದ್ದಾರೆ.
ಮೇಕ್ ಇನ್ ಇಂಡಿಯ ಎನ್ನುವ ಮಹತ್ವಾಕಾಂಕ್ಷಿ ಯೋಜನೆ ತಳಮಟ್ಟದ ಉತ್ಪಾದನಾ ವಲಯಗಳಿಗೆ ಯಾವುದೇ ಉತ್ತೇಜನ ನೀಡದಿದ್ದುದನ್ನೂ ಕಳೆದ ಆರು ವರ್ಷಗಳಲ್ಲಿ ಗಮನಿಸಿದ್ದೇವೆ. ಇದು ಅಂತಾರಾಷ್ಟ್ರೀಯ ಹಣಕಾಸು ಬಂಡವಾಳ ಸೃಷ್ಟಿಸಿರುವ ಸನ್ನಿವೇಶ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ 2020-21ರ ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಜಾರಿಯಾಗುವ ಮುನ್ನವೇ ಕೊರೋನಾ ಅಪ್ಪಳಿಸಿದ್ದು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿದೆಯಷ್ಟೆ.
ಈಗ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂಗಳ ಬೃಹತ್ ಪ್ಯಾಕೇಜ್ ನೀಡಿದೆ. ಇದನ್ನು ಅನ್ಯ ದೇಶಗಳಿಗೆ ಹೋಲಿಸಿ ನೋಡುವ ಅನಗತ್ಯ ಪೈಪೋಟಿಯನ್ನು ಸುದ್ದಿಮನೆಗಳಲ್ಲೇ ಬಿಟ್ಟು ಈ ಪ್ಯಾಕೇಜಿನ ಮೂಲ ಉದ್ದೇಶಗಳೇನು ಎನ್ನುವುದನ್ನು ಯೋಚಿಸಬೇಕಿದೆ. 3 ಲಕ್ಷ ಕೋಟಿ ರೂಗಳನ್ನು ಎಂಎಸ್ಎಂಇ ವಲಯದ ಪುನಶ್ಚೇತನಕ್ಕಾಗಿ ನೀಡಲಾಗಿದ್ದು ಬ್ಯಾಂಕುಗಳು ಖಾತರಿರಹಿತ ಸಾಲ ಒದಗಿಸುವಂತೆ ಆದೇಶಿಸಲಾಗಿದೆ.
ಸರ್ಕಾರವೇ ಖಾತರಿ ನೀಡುವುದರ ಮೂಲಕ ಸಣ್ಣ ಉದ್ದಿಮೆಗಳಿಗೆ ನೆರವಾಗುತ್ತದೆ. ಇದರ ಯಶಸ್ಸು ಬ್ಯಾಂಕುಗಳನ್ನು ಅವಲಂಬಿಸಿರುತ್ತದೆ. ಹಿಂದಿನ ಅನುಭವಗಳನ್ನು ನೋಡಿದರೆ ಆಶಾದಾಯಕವಾಗಿ ಕಾಣುವುದಿಲ್ಲ. ಆದರೂ ಭರವಸೆಯೊಂದಿಗೆ ಮುನ್ನಡೆಯಬಹುದು. ಸಾಲ ನೀಡುವ ಮೂಲಕ ಒಂದು ಉತ್ಪಾದನಾ ವಲಯದ ಆದಾಯ ಹೆಚ್ಚಿಸುವ ನೀತಿಯನ್ನು ಈ ಶತಮಾನದ ಆರಂಭದಲ್ಲೂ ಅನುಸರಿಸಲಾಗಿತ್ತು. ಇದು ಬ್ಯಾಂಕಿಂಗ್ ವ್ಯವಸ್ಥೆಯ ದುರವಸ್ಥೆಗೆ ಕಾರಣವಾಗಿದ್ದು ಹೌದು.
ಕೇಂದ್ರ ಸರ್ಕಾರದ ಮುಖ್ಯ ಗುರಿ ತಳಮಟ್ಟದ ಆರ್ಥಿಕತೆಯನ್ನು ಸದೃಢಗೊಳಿಸುವುದು ಆಗಬೇಕಿತ್ತು. ಸರಬರಾಜು ಸರಪಳಿಯನ್ನು ಬಲಪಡಿಸುವುದು ಸರ್ಕಾರದ ಮತ್ತು ಮಾರುಕಟ್ಟೆ ಶಕ್ತಿಗಳ ಉದ್ದೇಶವೇ ಆದರೂ, ದುಡಿಯುವ ವರ್ಗಗಳ ಖರೀದಿ ಸಾಮರ್ಥ್ಯ ಕುಸಿದಿರುವುದನ್ನೂ ಗಮನಿಸಬೇಕಲ್ಲವೇ ? ಇದನ್ನು ಹೆಚ್ಚಿಸಬೇಕೆಂದರೆ ದುಡಿಮೆಯ ಆದಾಯ ಹೆಚ್ಚಾಗಬೇಕು. ಆಗಲೇ ಸರಬರಾಜು ಸರಪಣಿಗೆ ಪೂರಕವಾಗಿ ನಗದು ಹರಿದಾಡುತ್ತದೆ. ಮಾರುಕಟ್ಟೆ ಚೇತರಿಸಿಕೊಳ್ಳುತ್ತದೆ. ಖರೀದಿ ಸಾಮರ್ಥ್ಯ ಹೆಚ್ಚಿಸಲು ತಾತ್ಕಾಲಿಕ ಶಮನದ ಕ್ರಮಗಳು ನೆರವಾಗುವುದಿಲ್ಲ.
ಕಾರ್ಮಿಕರ ವೇತನದಲ್ಲಿ ಏರಿಕೆಯಾಗಬೇಕು. ದುರಂತ ಎಂದರೆ ಕಾರ್ಮಿಕರ ದುಡಿಮೆಯ ಅವಧಿ ಹೆಚ್ಚಾಗುತ್ತಿದೆ, ಆದಾಯ ಕುಸಿಯುತ್ತಿದೆ. ಹೆಚ್ಚಿನ ಕೂಲಿ/ವೇತನ ನೀಡಲು ಎಂದೂ ಮುಂದಾಗದ ಎಂಎಸ್ಎಂಇ ಉದ್ಯಮಿಗಳು ಇನ್ನೆಷ್ಟೇ ಬಂಡವಾಳ ವೃದ್ಧಿಯನ್ನು ಕಂಡರೂ ವೇತನ ಹೆಚ್ಚಿಸುವುದಿಲ್ಲ. ಏಕೆಂದರೆ ಅವರ ಲಾಭಗಳಿಕೆಯೇ ಪ್ರಧಾನವಾಗಿರುತ್ತದೆ. ಮಾರುಕಟ್ಟೆ ವ್ಯವಸ್ಥೆ ಇದಕ್ಕೆ ಅವಕಾಶವನ್ನೇ ನೀಡುವುದಿಲ್ಲ.
ಕಾರ್ಪೋರೇಟ್ ಕೇಂದ್ರಿತ ಎಂಎಸ್ಎಂಇ ಉದ್ಯಮಿಗಳಿಗೆ ಇಲ್ಲಿ ನೆರವಾಗುತ್ತಿರುವುದು ಇದೇ ಸರ್ಕಾರಗಳೇ ಅಲ್ಲವೇ ? ಈಗಾಗಲೇ ಬಿಜೆಪಿ ಆಡಳಿತದ ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರಪ್ರದೇಶ ಸರ್ಕಾರಗಳು ಮೂರು ತಿಂಗಳ ಅವಧಿಗೆ ಎಲ್ಲ ಕಾರ್ಮಿಕ ಕಾನೂನುಗಳನ್ನೂ ರದ್ದುಪಡಿಸಿದ್ದು, ದುಡಿಮೆಗಾರರ ಹಕ್ಕುಗಳ ತಾತ್ಕಾಲಿಕ ಸಮಾಧಿ ನಿರ್ಮಿಸಿಬಿಟ್ಟಿವೆ. ಕರ್ನಾಟಕ ಸರ್ಕಾರ ಇದೇ ಹಾದಿಯಲ್ಲಿ ನಡೆದಿದೆ. ತಮ್ಮ ಹಕ್ಕುಗಳನ್ನು ಕಳೆದುಕೊಂಡೇ ಕಾರ್ಮಿಕರು ದಿನಕ್ಕೆ ನಾಲ್ಕು ಗಂಟೆ ಹೆಚ್ಚು ದುಡಿಯುವ ಅನಿವಾರ್ಯತೆ ಎದುರಾಗಿದೆ.
ಈಗಾಗಲೇ ತಮ್ಮ ಸ್ವಗ್ರಾಮಗಳಿಗೆ ತೆರಳಿರುವ ವಲಸೆ ಕಾರ್ಮಿಕರು ಮರಳಿ ಬಾರದೆ ಹೋದರೆ ನಗರಗಳಲ್ಲಿನ ಎಂಎಸ್ಎಂಇ ಉದ್ದಿಮೆಗಳಲ್ಲಿ ನೌಕರರ ಕೊರತೆ ಉಂಟಾಗುತ್ತದೆ. ಅಥವಾ ಸ್ಥಳೀಯರಿಗೆ ಉದ್ಯೋಗ ದೊರೆತರೂ ಅವರ ಬದುಕು ಸುಂದರವಾಗೇನೂ ಇರುವುದಿಲ್ಲ. ಕಡಿಮೆ ಕೂಲಿಯಲ್ಲಿ ಹೆಚ್ಚಿನ ದುಡಿಮೆಗೆ ಶರಣಾಗಬೇಕಾಗುತ್ತದೆ. ಬಂಡವಾಳ ವ್ಯವಸ್ಥೆಯ ಈ ಕ್ರೌರ್ಯವನ್ನು “ ಪುನಶ್ಚೇತನ ” ಎಂದು ಬಣ್ಣಿಸುವುದು ಎಷ್ಟುಸರಿ ? ಇಲ್ಲಿ ನಮಗೆ ಜೀತ ಪದ್ಧತಿಯ ಪುನರ್ಜನ್ಮ ಕಾಣದೆ ಹೋದರೆ ಹೇಗೆ ? ವಿವೇಚನೆಗೆ ಬಿಟ್ಟ ವಿಚಾರ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಸ್ಥ ಉದ್ದಿಮೆಗಳ ವ್ಯಾಖ್ಯಾನವನ್ನು ಬದಲಿಸಲಾಗಿದ್ದು ಹೆಚ್ಚಿನ ಬಂಡವಾಳ ಹೂಡಿರುವ ಉದ್ದಿಮೆಗಳು, ಕೈಗಾರಿಕೆಗಳು ಈಗ ಎಂಎಸ್ಎಂಇ ಕ್ಷೇತ್ರಕ್ಕೆ ಒಳಪಡುತ್ತವೆ. ಕೊರೋನಾ ಸಂದರ್ಭದಲ್ಲಿ ಮತ್ತು ಇದಕ್ಕೂ ಮುಂಚಿನಿಂದಲೇ ತೀವ್ರ ಆರ್ಥಿಕ ಮುಗ್ಗಟ್ಟು, ಬಂಡವಾಳದ ಕೊರತೆ, ಕಚ್ಚಾವಸ್ತುಗಳ ಪೂರೈಕೆಯ ಕೊರತೆ, ಬೇಡಿಕೆ ಮತ್ತು ಸರಬರಾಜಿನಲ್ಲಿನ ವ್ಯತ್ಯಯ ಇವೆಲ್ಲ ಸಮಸ್ಯೆಗಳನ್ನು ಹೊತ್ತುಕೊಂಡು ಕುಂಟುತ್ತಿದ್ದ ಈ ಉದ್ದಿಮೆಗಳಲ್ಲಿ ಈಗ ಕಾರ್ಮಿಕ ರಕ್ಷಣಾ ಕಾನೂನುಗಳನ್ನು ರದ್ದುಪಡಿಸುವ ಮೂಲಕ, ಆಡಳಿತ ನಿರ್ವಹಣೆಗೆ ಸುಗಮ ಮಾರ್ಗವನ್ನು ಸೃಷ್ಟಿಸಲಾಗುತ್ತದೆ.
ಈ ವಲಯದ ಉದ್ದಿಮೆಗಳು ತೀವ್ರ ಸಂಕಷ್ಟದಲ್ಲಿರುವುದರಿಂದ, ಕಾರ್ಮಿಕರು ಕೆಲ ಕಾಲ ತ್ಯಾಗ ಮಾಡಿದರೆ ತಪ್ಪೇನಿಲ್ಲ ಎನ್ನುವ ಸಾರ್ವಜನಿಕ ಅಭಿಪ್ರಾಯವನ್ನು ತಯಾರಿಸಲು ಸುದ್ದಿಮನೆಗಳು ಈಗಾಗಲೇ ತಯಾರಾಗಿವೆ. ಬಡ್ಡಿ ರಹಿತ ಅಥವಾ ಕಡಿಮೆ ಬಡ್ಡಿಯ ಸಾಲ ಪಡೆದರೂ ಉದ್ದಿಮೆಗಳು ಆ ಸಾಲದ ಹೊರೆಯನ್ನು ಕಾರ್ಮಿಕರ ದುಡಿಮೆಯಿಂದಲೇ ವಸೂಲಿ ಮಾಡುತ್ತವೆ ಎನ್ನುವುದನ್ನು ಅರ್ಥಶಾಸ್ತ್ರ ಬಲ್ಲವರಿಗೆ ಹೇಳಬೇಕಿಲ್ಲ.
ಕೊರೋನಾ ಸಂಕಟದ ಕಾಲದಲ್ಲಿ ಪುನಶ್ಚೇತನ ಬೇಕಿರುವುದು ಈ ದುಡಿಮೆಯ ಕೈಗಳಿಗೆ. ಈ ಕೈಗಳನ್ನು ನಂಬಿ ಬದುಕುವ ಕುಟುಂಬಗಳಿಗೆ. ತಮ್ಮ ಸ್ವಂತ ಸೂರು ತೊರೆದು ಮತ್ತೊಂದು ಊರು ಕಟ್ಟಲು ಹೋಗುವ ಶ್ರಮಜೀವಿಗಳಿಗೆ. ಇನ್ನೆರಡು ತಿಂಗಳಿಗೆ ಇವರ ಬದುಕು ನಡೆಯುವಷ್ಟು ದವಸ ಧಾನ್ಯ ನೀಡಿ ಕೈಗಿಷ್ಟು ಹಣ ನೀಡುವುದು ಸ್ವಾಗತಾರ್ಹವೇ. ಆದರೆ ಇವರ ಭವಿಷ್ಯದ ಬದುಕು ಸುಭದ್ರವಾಗಿರುವಂತಹ ಬುನಾದಿ ಹಾಕುವುದೂ ಅಷ್ಟೇ ಅವಶ್ಯಕ ಅಲ್ಲವೇ ? ಹಠಾತ್ತನೆ ಸ್ವದೇಶಿ ಮಂತ್ರ ಬಳಸುವ ಮುನ್ನ ಭಾರತದ ಪ್ರಭುತ್ವ ಯೋಚಿಸಬೇಕಾದ್ದು, ಇನ್ನು ಮುಂದಿನ ದಿನಗಳಲ್ಲಿ ಭಾರತದ ದುಡಿಮೆಯ ಕೈಗಳು ಯಾರಬಳಿ ಜೀತಕ್ಕಿರುತ್ತವೆ ಎನ್ನುವುದನ್ನು.
ಭಾರತದಲ್ಲೇ ತಯಾರಿಸಿ ಎನ್ನುವುದಕ್ಕೂ , ಭಾರತದವರಿಂದಲೇ ತಯಾರಿಸಿ ಎನ್ನುವುದಕ್ಕೂ ವ್ಯತ್ಯಾಸ ಇದೆಯಲ್ಲವೇ ? ಹೊರದೇಶಗಳಿಂದ ತಮ್ಮ ಅನುಕೂಲಕ್ಕೆ ತಕ್ಕಂತೆ ಒಡಂಬಡಿಕೆಗಳಿಗೆ ಸಹಿ ಮಾಡಿ, ವಿದೇಶಿ ಕಂಪನಿಗಳು ನಮ್ಮ ನೆಲದಲ್ಲಿ ಉತ್ಪಾದಿಸುವ ಸರಕುಗಳನ್ನು ಸ್ವದೇಶಿ ಎಂದು ಚಪ್ಪರಿಸುವುದಾದರೆ ಅಡ್ಡಿಯಿಲ್ಲ.
ಈ ಔದ್ಯಮಿಕ ಲೋಕದ ಲಾಭ ಎತ್ತ ಹರಿಯುತ್ತದೆ, ಯಾರ ಭಂಡಾರವನ್ನು ತುಂಬಿಸುತ್ತದೆ ಎಂದು ಯೋಚಿಸದೆ ಹೋದರೆ ನಾವು ಹಣಕಾಸು ಬಂಡವಾಳ ವ್ಯವಸ್ಥೆಯ ಕ್ರೌರ್ಯವನ್ನು ಸ್ವದೇಶಿ ಚೌಕಟ್ಟಿನಲ್ಲೇ ಆಸ್ವಾದಿಸುವುದನ್ನು ಕಲಿತುಬಿಡುತ್ತೇವೆ. ಕೊರೋನಾ ಹೊರಗಿಟ್ಟು ನೋಡಿದರೂ ಭಾರತಕ್ಕೆ ಇಂದು ಅತ್ಯವಶ್ಯವಾಗಿ ಬೇಕಿರುವುದು ಸಾರ್ವಜನಿಕ ಬಂಡವಾಳ ಹೂಡಿಕೆ, ಕೃಷಿ ಬಂಡವಾಳ ಹೂಡಿಕೆ ಮತ್ತು ಸ್ಥಳೀಯ ಬಂಡವಾಳ ವೃದ್ಧಿಗೆ ಅಗತ್ಯವಾದ ಮೂಲ ಸೌಕರ್ಯಗಳು. ಈ ವಲಯಗಳಿಗೆ ಎಂದೋ ತರ್ಪಣ ಬಿಟ್ಟಿರುವ ನವ ಉದಾರವಾದದ ಪ್ರವರ್ತಕರು ಸರಬರಾಜು ಕೇಂದ್ರಿತ ಆರ್ಥಿಕತೆಯನ್ನೇ ಪೋಷಿಸುತ್ತಿದ್ದಾರೆ.
ಇತ್ತ ಬೇಡಿಕೆಯನ್ನು ಹೆಚ್ಚಿಸಲು ಬೇಕಾದ ಕ್ರಮಗಳ ಬಗ್ಗೆ ಚಿಂತಿಸುತ್ತಲೂ ಇಲ್ಲ. ಕೊರೋನಾ ಸಂದರ್ಭದಲ್ಲೂ, 20 ಲಕ್ಷ ಕೋಟಿ ಪ್ಯಾಕೇಜಿನಲ್ಲೂ ಇದನ್ನೇ ಕಾಣುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕಾರ್ಮಿಕರು ತಮ್ಮ ಹಕ್ಕುಗಳನ್ನು ಮಾತ್ರ ಕಳೆದುಕೊಳ್ಳುತ್ತಿಲ್ಲ, ತುಟ್ಟಿಭತ್ಯೆಯನ್ನೂ ಕಳೆದುಕೊಳ್ಳಲಿದ್ದಾರೆ. ವೇತನ ಪರಿಷ್ಕರಣೆ ಬಹುಶಃ ಇನ್ನು ಕನಸಿನ ಮಾತಾಗುತ್ತದೆ. ವೇತನ ಪಡೆಯುವ ನೌಕರರ ಪಾಡು ಇದಾದರೆ ಕೂಲಿ ಮಾಡಿ ಬದುಕುವವರು ಹೇಗೆ ಮಾರುಕಟ್ಟೆಯಲ್ಲಿ ಬೇಡಿಕೆ ಸೃಷ್ಟಿಸಲು ಸಾಧ್ಯ ?
ಅಂದರೆ ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ಪ್ಯಾಕೇಜ್ ಔದ್ಯಮಿಕ ವಲಯದ ಚೇತರಿಕೆಗೆ ಇಂಧನ ಒದಗಿಸುತ್ತದೆ. ಆದರೆ ಜನಸಾಮಾನ್ಯರ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸುವುದಿಲ್ಲ. ಉತ್ಪಾದನೆಗೆ ಹೆಚ್ಚಿನ ಬಂಡವಾಳ ಹರಿದುಬರುತ್ತದೆ. ದುಡಿಮೆ ಅಗ್ಗವಾಗುತ್ತಾ ಹೋಗುತ್ತದೆ. ಅಗ್ಗದ ಕೂಲಿಯಲ್ಲೇ ಜೀವನ ಸವೆಸಬೇಕಾದ ಕೋಟ್ಯಂತರ ಕಾರ್ಮಿಕರು ಕ್ರಮೇಣ ಬಂಡವಾಳದ ದಾಸ್ಯದ ಸಂಕೋಲೆಗಳಲ್ಲಿ ಬಂದಿಗಳಾಗುತ್ತಾರೆ.
ಮತ್ತೊಂದೆಡೆ ಸಣ್ಣ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು ಸರ್ಕಾರ ತನ್ನ ಪ್ಯಾಕೇಜ್ ಮೂಲಕ ನೀಡುತ್ತಿರುವ ಸಾಲದ ಹೊರೆಯಲ್ಲೇ ಬದುಕು ಸವೆಸಬೇಕಾಗುತ್ತದೆ. ನೆರವಿಗೆ ಧಾವಿಸಿ ಸಾಲ ನೀಡುವುದು ಊಳಿಗಮಾನ್ಯ ಹಣಕಾಸು ವ್ಯವಸ್ಥೆಯ ಲಕ್ಷಣವಲ್ಲವೇ? ಬಂಡವಾಳ ವ್ಯವಸ್ಥೆಯೂ ಭಿನ್ನವಾಗಿರುವುದಿಲ್ಲ ಎಂದು ಮೋದಿ ಸರ್ಕಾರ ನಿರೂಪಿಸಿದೆ.
ಕಳೆದ ಆರು ವರ್ಷಗಳಿಂದಲೂ ಸರಬರಾಜು ಕೇಂದ್ರಿತ ಆರ್ಥಿಕ ನೀತಿಗಳನ್ನೇ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಕೊರೋನಾ ಸೃಷ್ಟಿಸಿರುವ ಸಂಕಷ್ಟದ ಸಮಯದಲ್ಲಿ ಬೇಡಿಕೆಯನ್ನು ಹೆಚ್ಚಿಸಲು ಯೋಚಿಸಬೇಕಿತ್ತಲ್ಲವೇ ? ಔದ್ಯಮಿಕ ವಲಯದ ಸರಕು ಮತ್ತು ಸೇವೆಯ ಉತ್ಪಾದನೆಯನ್ನು ಮತ್ತು ಸರಬರಾಜು ಸರಪಣಿಯನ್ನು ನಿರ್ಧರಿಸುವ ಮಾರುಕಟ್ಟೆ ಶಕ್ತಿಗಳೇ ಬೇಡಿಕೆಯನ್ನೂ ನಿಯಂತ್ರಿಸುತ್ತಿರುವುದನ್ನು ಕಾಣುತ್ತಿದ್ದೇವೆ.
ಇಲ್ಲಿ ಗ್ರಾಹಕರ ಬೇಡಿಕೆಗಳು ಮತ್ತು ಆಯ್ಕೆಗಳನ್ನೂ ಸಹ ಮಾರುಕಟ್ಟೆಯೇ ನಿರ್ಧರಿಸುತ್ತದೆ. ಇದರ ಒಂದು ಪ್ರಾತ್ಯಕ್ಷಿಕೆಯನ್ನು ಸೂಪರ್ ಮಾರುಕಟ್ಟೆಗಳಲ್ಲಿ, ಮಾಲ್ಗಳಲ್ಲಿ ಕಾಣಬಹುದು. ಅಲ್ಲಿ ನಾವು ಖರೀದಿಸುವುದು ನಮ್ಮ ಆಯ್ಕೆಯ ವಸ್ತುಗಳನ್ನಲ್ಲ, ಅವರು ಒಂದಕ್ಕೊಂದು ಉಚಿತ ನೀಡುವ ಉತ್ಪನ್ನಗಳನ್ನು. ಪದಾರ್ಥಗಳ ಅವಶ್ಯಕತೆ ಮತ್ತು ಗುಣಮಟ್ಟ ಮೌನವಾಗಿ ನೇಪಥ್ಯಕ್ಕೆ ಸರಿಯುತ್ತದೆ. ನಾವು ಹಣ ಕಳೆದುಕೊಂಡು ಬಂದರೂ ಲಾಭ ಗಳಿಸಿದ ಹಿರಿಮೆಯಲ್ಲಿ ಹೊರಬರುತ್ತೇವೆ.
ಕಳೆದ ಐದಾರು ವರ್ಷಗಳಿಂದಲೇ ಸಾರ್ವಜನಿಕ ಬಂಡವಾಳ ಹೂಡಿಕೆ ಇಲ್ಲದೆ ಸೊರಗಿಹೋಗಿರುವ ಭಾರತದ ಕೃಷಿ ಕ್ಷೇತ್ರ ಕೊರೋನಾ ಸಂದರ್ಭದಲ್ಲಿ ಮತ್ತಷ್ಟು ಬಿಕ್ಕಟ್ಟಿಗೆ ಸಿಲುಕಿದೆ. ಕೃಷಿ ಕ್ಷೇತ್ರದ ಪುನಶ್ಚೇತನ ಸರ್ಕಾರದ ಆದ್ಯತೆಯಾಗಲಾರದು. ಏಕೆಂದರೆ ನವ ಉದಾರವಾದದ ಅರ್ಥವ್ಯವಸ್ಥೆಯಲ್ಲಿ ಕೃಷಿ ಪ್ರಧಾನವಾಗಿ ಕಾಣುವುದಿಲ್ಲ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟೀಕರಣಗೊಳಿಸುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿರುವುದು ಕಳೆದ ಬಜೆಟ್ ಸಂದರ್ಭದಲ್ಲೇ ಸ್ಪಷ್ಟವಾಗಿದೆ. ಈ ಎರಡು ತಿಂಗಳ ಲಾಕ್ ಡೌನ್ ಅವಧಿಯಲ್ಲಿ ಮತ್ತು ಇನ್ನು ಮುಂದಿನ ಕೊರೋನಾ ದಿನಗಳಲ್ಲಿ ಕೃಷಿಕರ ಬದುಕಿಗೆ ಯಾವ ರೀತಿ ಸಾಂತ್ವನ ನಿರೀಕ್ಷಿಸಲು ಸಾಧ್ಯ. ಇದನ್ನು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುತ್ತಿರುವ ಕರ್ನಾಟಕ ಸರ್ಕಾರದ ಕ್ರಮದಲ್ಲಿ ಕಾಣಬಹುದು.
ಈಗಿರುವ 1966ರ ಎಪಿಎಂಸಿ ಕಾಯ್ದೆಯನ್ನು 1986ರಲ್ಲಿ ಮತ್ತಷ್ಟು ಬಲಪಡಿಸಿ, ಕೃಷಿ ಉತ್ಪನ್ನಗಳ ಖರೀದಿದಾರರು, ರೈತರು ಎಪಿಎಂಸಿಗೆ ಸಲ್ಲಿಸುವ ಉತ್ಪನ್ಮಗಳನ್ನು ನೋಂದಣಿ ಮಾಡಿಸಿದ ನಂತರವೇ ಖರೀದಿಸುವ ನಿಯಮ ಜಾರಿಯಲ್ಲಿತ್ತು. ಈ ಕಾಯ್ದೆಯಡಿ ಕಾರ್ಪೋರೇಟ್ ಉದ್ದಿಮೆಗಳು ರೈತರಿಂದ ನೇರವಾಗಿ ಖರೀದಿಸಲು ಸಾಧ್ಯವಿರಲಿಲ್ಲ. ತಮ್ಮದೇ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಹೊಂದಿರುವ ಕಾರ್ಪೋರೇಟ್ ಉದ್ದಿಮೆಗಳೂ ಎಪಿಎಂಸಿಯೊಡನೆ ಒಡಂಬಡಿಕೆ ಮಾಡಿಕೊಳ್ಳುವುದು ಕಡ್ಡಾಯವಾಗಿತ್ತು.
ಈ ಕಾಯ್ದೆಯನ್ನು ತಿದ್ದುಪಡಿ ಮಾಡಿರುವ ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ಮುಂದಾಗಿದೆ. ಈ ತಿದ್ದುಪಡಿ ಜಾರಿಯಾದರೆ ಎಪಿಎಂಸಿ ಆವರಣದಲ್ಲೇ ರೈತರಿಂದ ನೇರವಾಗಿ ಖರೀದಿಸಲು ಬೃಹತ್ ಕಾರ್ಪೋರೇಟ್ ಉದ್ದಿಮೆಗಳಿಗೆ ಅವಕಾಶ ದೊರೆಯುತ್ತದೆ. ಇದು ರೈತರನ್ನು ಕಾರ್ಪೋರೇಟ್ ಗುಲಾಮಗಿರಿಗೆ ಒಳಪಡಿಸುವ ಮಾರುಕಟ್ಟೆ ತಂತ್ರ ಎನ್ನುವುದು ಸ್ಪಷ್ಟ. ಈಗಾಗಲೇ ಆರ್ಥಿಕ ಮುಗ್ಗಟ್ಟು, ಕುಸಿದ ಉತ್ಪನ್ನ, ಹೆಚ್ಚಿರುವ ಗೊಬ್ಬರ ಮತ್ತು ಬೀಜದ ಬೆಲೆ, ಅಗ್ಗದ ಬೆಂಬಲ ಬೆಲೆ ಇಂತಹ ಹತ್ತು ಹಲವು ಸಮಸ್ಯೆಗಳಿಂದ ಬಸವಳಿದಿರುವ ರೈತ ಸಮುದಾಯ ಬೀದಿಪಾಲಾಗಲು ಸಜ್ಜಾಗಬೇಕಿದೆ.
ತಮ್ಮ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳಿದ ಒಂದು ಅಂಶವನ್ನು ಗಮನಿಸಬೇಕು. ಈ ಪ್ಯಾಕೇಜ್ ಮೂಲತಃ ದುಸ್ಥಿತಿಯಲ್ಲಿರುವ ಆರ್ಥಿಕತೆಯ ಪುನಶ್ಚೇತನಕ್ಕೆ ಭೂಮಿ, ಶ್ರಮ ಮತ್ತು ಹಣಕಾಸು ದ್ರವೀಕರಣ(ಲಿಕ್ವಿಡಿಟಿ) ಒದಗಿಸುವ ಉದ್ದೇಶ ಹೊಂದಿದೆ ಎಂದು ಪ್ರಧಾನಿ ಹೇಳಿದ್ದಾರೆ. ಇಡೀ ಪ್ಯಾಕೇಜಿನ ಅಂತರಾತ್ಮ ಈ ಮೂರು ಸ್ತಂಭಗಳಲ್ಲಿ ಅಡಗಿದೆ.
ಹೊರದೇಶಗಳಿಂದ ಮೇಕ್ ಇನ್ ಇಂಡಿಯ ಯೋಜನೆಯಡಿ ಔದ್ಯಮಿಕ ಸಾಮ್ರಾಜ್ಯ ಸ್ಥಾಪಿಸಲು ಬರುವ ಕಾರ್ಪೋರೇಟ್ ಉದ್ಯಮಿಗಳಿಗೆ ಭೂ ಸ್ವಾಧೀನ ಪ್ರಕ್ರಿಯೆ ಸುಲಭವಾಗುವಂತೆ ಶಾಸನ ಜಾರಿಮಾಡಲಾಗುತ್ತದೆ. ಅಗ್ಗದ ಶ್ರಮ ಲಭ್ಯವಾಗುವಂತೆ ಶ್ರಮಿಕರನ್ನು ಕಟ್ಟಿಹಾಕಲು ಈಗಾಗಲೇ ಕಾರ್ಮಿಕ ಕಾನೂನುಗಳನ್ನು ನೆಲಸಮ ಮಾಡಲಾಗುತ್ತಿದೆ. ಇನ್ನು ಸರಬರಾಜು ಕೇಂದ್ರಿತ ಆರ್ಥಿಕತೆಗೆ ಪುಷ್ಟಿ ನೀಡುವ ನಿಟ್ಟಿನಲ್ಲಿ ದ್ರವೀಕರಣ ಸಹಜವಾಗಿಯೇ ನಡೆಯುತ್ತದೆ. ಸಾರ್ವಜನಿಕ ಹಣಕಾಸು ವಲಯದ ಸಾಂಸ್ಥಿಕ ನೆಲೆಗಳನ್ನು ಇಲ್ಲಿ ಬಳಸಿಕೊಳ್ಳಲಾಗುತ್ತದೆ.
ಬಂಡವಾಳ ವ್ಯವಸ್ಥೆ ಮತ್ತು ಹಣಕಾಸು ಬಂಡವಾಳದ ನವ ಉದಾರವಾದಿ ಮಾರುಕಟ್ಟೆಯ ಕ್ರೌರ್ಯದ ನಡುವೆಯೇ ಭಾರತದ ಶ್ರಮಿಕ ವರ್ಗ, ಕೃಷಿಕ ವರ್ಗ, ವಲಸೆ ಕಾರ್ಮಿಕರ ವರ್ಗ ಮತ್ತು ಕೆಳ ಮಧ್ಯಮ ವರ್ಗಗಳು ಕೊರೋನಾ ವಿರುದ್ಧ ಸೆಣಸಾಡಬೇಕಾಗುತ್ತದೆ. ದುರಂತ ಎಂದರೆ ದೇಶಾದ್ಯಂತ ಸಾವಿರಾರು ಜನರನ್ನು ಒಂದು ವೈರಾಣು ಸಾವು ಬದುಕಿನ ಸಂಘರ್ಷದಲ್ಲಿ ತೊಡಗಿಸಿರುವಾಗ ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಶ್ರಮಿಕ ವರ್ಗಗಳ, ಉತ್ಪಾದಕೀಯ ಶಕ್ತಿಗಳ ಕತ್ತು ಹಿಸುಕುವ ಪ್ರಯತ್ನಗಳು ನಡೆಯುತ್ತಿದೆ.
ಅಭಿವೃದ್ಧಿಯ ಪರಿಭಾಷೆ ಮತ್ತು ಪ್ರಗತಿಯ ಪರಿಕಲ್ಪನೆ ಎರಡನ್ನೂ ನಿಷ್ಕರ್ಷೆಗೊಳಪಡಿಸಿ ಹೊಸ ಜಗತ್ತನ್ನು ನಿರ್ಮಿಸುವ ಹೊಣೆ ಬಹುಶಃ ದುಡಿಯುವ ವರ್ಗಗಳ ಮೇಲೆಯೇ ಇದೆ. ವರ್ಗ ಸಂಘರ್ಷ ಇದರ ಒಂದು ಮಾರ್ಗ. ಇದು ಸಾಕಾರಗೊಳ್ಳುವುದೋ ಇಲ್ಲವೋ, ಸಾರ್ಥಕ ಮಾರ್ಗವೋ ಅಲ್ಲವೋ ಎನ್ನುವುದಕ್ಕಿಂತಲೂ ಇದು ಅನಿವಾರ್ಯವೋ ಅಲ್ಲವೋ ಎಂದು ಯೋಚಿಸುವುದು ಇಂದಿನ ತುರ್ತು.
ಕೊರೋನಾ ಶ್ರಮಜೀವಿಗಳ ಪಾಲಿಗೆ ಒಂದು ರೀತಿಯಲ್ಲಿ ಮಾರಣಾಂತಿಕವಾಗಿದ್ದರೂ ಮತ್ತೊಂದು ರೀತಿಯಲ್ಲಿ ಪ್ರಭುತ್ವದ ನೈಜ ಮುಖವನ್ನು ಅರ್ಥಮಾಡಿಕೊಳ್ಳಲು ಅವಕಾಶವನ್ನೂ ನೀಡಿದೆ. ಈ ಅವಕಾಶವನ್ನು ಬಳಸಿಕೊಂಡು ಹೊಸ ಬದುಕು ಮತ್ತು ಹೊಸ ನಾಡು ಕಟ್ಟುವುದು ನಮ್ಮ ಹೊಣೆ. ಕೊರೋನಾ ನಂತರ ಈ ಹೊಣೆ ಇನ್ನೂ ಹೆಚ್ಚಾಗುತ್ತದೆ. ಈ ಸಂಘರ್ಷದ ನಿರೀಕ್ಷೆಯೊಂದಿಗೇ ಮುನ್ನಡೆಯೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮತದಾರ ದೇವರು’ ಎಂದ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇರು ನಟ ಡಾ.ರಾಜ್ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ಎಂದರು.
ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.
ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.
ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.
ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.
ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.
ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.
ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ
ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.
ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.
ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.
ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.
ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.
ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.
ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.
ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.
ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.
ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.
ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.
ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.
ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.. ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗ್ರಾಮ ಆಡಳಿತಾಧಿಕಾರಿ ಕೋಸಗಿ ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹುಲಿಕಟ್ಟೆ ಸರ್ಕಲ್ ವ್ಯಾಪ್ತಿಯ ಹಾರಕನಾಳು, ಹುಲಿಕಟ್ಟೆ, ಚನ್ನಳ್ಳಿ ತಾಂಡ, ಈಶಾಪುರ, ಹಾರಕನಾಳು ಸಣ್ಣತಾಂಡ, ಹಾರಕನಾಳು ದೊಡ್ಡತಾಂಡ, ಕನ್ನಾಯಕನಹಳ್ಳಿ ಸೇರಿ ಒಟ್ಟು 07 ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೋಸಗಿ ಸುರೇಶ ಎಂಬುವವರು ರೈತರೊಂದಿಗೆ ಒಪ್ಪಂದ ಮಾಡಿಕೊಂಡು, ಪ್ರತಿ ವರ್ಷ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಬೆಳೆಗಳಿಗೆ ತಾವೇ ಎಲ್ಲಾ ರೈತರ ಜಮೀನಿಗೆ ಬೆಳೆ ವಿಮೆ ಹಣ ಪಾವತಿಸುವ ಮೂಲಕ ನಿರಂತರವಾಗಿ 3 ವರ್ಷಗಳಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತ ಬಂದಿರುವ ಮಾಹಿತಿಯು ಸಾಕಷ್ಟು ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ಈ ಬಗ್ಗೆ ರೈತರು ಸಾಕಷ್ಟು ಪ್ರತಿಭಟನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೂ ದೂರು ನೀಡಿರುತ್ತಾರೆ.
ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯಲ್ಲಿನ ಭ್ರಷ್ಟಚಾರದ ಪ್ರಮುಖ ರೂವಾರಿಯಾದ ಕೋಸಗಿ ಸುರೇಶ ಎಂಬುವವರು ತಾವು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಗುಂಡಗತ್ತಿ ಸರ್ಕಲ್ ವ್ಯಾಪ್ತಿಯ ಬಹು ಗ್ರಾಮಗಳಲ್ಲಿಯೂ ಫಸಲ್ ಭೀಮಾ ಯೋಜನೆಯಲ್ಲಿ (ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ) ಸಾಕಷ್ಟು ಅವ್ಯವಹಾರ ನಡೆಸುತ್ತ ಬಂದಿರುತ್ತಾರೆ ಎಂಬ ಅಧಿಕೃತ ಮಾಹಿತಿ ಇರುತ್ತದೆ. ಇವರು ತಾವು ಕೆಲಸ ಮಾಡಿದ ಎಲ್ಲಾ ಸ್ಥಳಗಳಲ್ಲಿಯೂ ಸಾಕಷ್ಟು ಅವ್ಯವಹಾರದಲ್ಲಿ ಭಾಗಿಯಾಗಿದ್ದು, ಸಾಕಷ್ಟು ರೈತರಿಗೆ ಸರ್ಕಾರಿ ಯೋಜನೆಗಳನ್ನು ಮಾಡಿಸಿಕೊಡುವುದಾಗಿ ಕೋಟ್ಯಾಂತರ ರೂಪಾಯಿ ಲಂಚ ಪಡೆದಿರುತ್ತಾರೆ. ಹಾಗೆಯೇ ಬಡವರು, ಅಸಹಾಯಕರ ಜಮೀನುಗಳನ್ನು ಪ್ರಬಲರ ಹೆಸರಿಗೆ ವರ್ಗಾಹಿಸುವ ನೀಚ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ.
ಬಡವರ ಜಮೀನುಗಳನ್ನು ಪ್ರಬಲರ ಹೆಸರಿಗೆ ಮಾಡಿದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದು ನಂತರ ಮೂಲ ಖಾತೆದಾರರಿಗೆ ವರ್ಗಾವಣೆಯಾಗಿರುವ ಸಾಕಷ್ಟು ನಿದರ್ಶನಗಳಿಗೆ. ಆದರೆ ಯಾವುದೇ ಒಂದು ಪ್ರಕರಣದಲ್ಲಿಯೂ ಈ ಅಧಿಕಾರಿಗೆ ಶಿಕ್ಷೆಯಾಗದಂತೆ ಹಿರಿಯ ಅಧಿಕಾರಿಗಳರಿವರನ್ನು ಕಾಪಾಡಿಕೊಂಡು ಬಂದಿರುತ್ತಾರೆ. ಈ ಕಾರಣಕ್ಕಾಗಿಯೇ ಫಸಲ್ ಭೀಮಾ ಯೋಜನೆಯಂತಹ ದೊಡ್ಡ ಮಟ್ಟದ ಹಗರಣಕ್ಕೂ ಮುಂದಾಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಫಸಲ್ ಭೀಮಾ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿರುವ ಹಾರಕನಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಎಂ.ಶಿವಣ್ಣ, ಕಂದಾಯ ನಿರೀಕ್ಷಕ ಶ್ರೀ ರಾಘವೇಂದ್ರ, ಹರಪನಹಳ್ಳಿ ತಾಲ್ಲೂಕು ಉಪ ತಹಶೀಲ್ದಾರರಾದ ಶ್ರೀಮತಿ ಕವಿತಾ, ತಹಶೀಲ್ದಾರರಾದ ಶ್ರೀ ಬಿ.ವಿ. ಗಿರೀಶ್ಬಾಬು, ಉಪವಿಭಾಗಾಧಿಕಾರಿಯಾದ ಶ್ರೀ ಸುರೇಶ್ಕುಮಾರ್ ಟಿ, ಹರಪನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ವೈ.ಹೆಚ್. ಚಂದ್ರಶೇಖರ್, ವಿಜಯನಗರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕವಿತಾ ಮನ್ನಿಕೇರಿ ಇವರುಗಳ ವಿರುದ್ಧ ದೂರು ದಾಖಲಿಸಿ, ಈ ಎಲ್ಲಾ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ ಎಂಬುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು ಮೇ 29 ಮತ್ತು 30 ರಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಂಗಸಂಸ್ಥೆಯಾಗಿರುವ ಈ ಕಾಲೇಜಿನ ಉದ್ಘಾಟನಾ ಸಮಾರಂಭವು ಮೇ 29 ರ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದ್ದು, ದೇಶ ಹಾಗೂ ರಾಜ್ಯದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿ.ಟಿ.ಯು. ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ , ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಮಂಡಳಿ (FTE&M) ಅಧ್ಯಕ್ಷರಾದ ಪ್ರೊ. ಟಿ. ಜಿ. ಸಿತಾರಾಮ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ವಿ.ಟಿ.ಯು ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ರಿಜಿಸ್ಟ್ರಾರ್ ಡಾ. ಪ್ರಸಾದ್ ಬಿ ರಾಂಪುರೆ , ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಉಜ್ವಲ್ ಯು.ಜೆ , ಹಣಕಾಸು ಅಧಿಕಾರಿ ಡಾ. ಪ್ರಶಾಂತ್ ನಾಯಕ್ , ಯು.ಬಿ.ಡಿ.ಟಿ.ಇ ಪ್ರಾಂಶುಪಾಲರಾದ ಡಾ. ಡಿ. ಪಿ. ನಾಗರಾಜಪ್ಪ ಮತ್ತು ವಿವಿ ಪದಾಧಿಕಾರಿಗಳು ಕಾರ್ಯಕ್ರಮದ ಆತಿಥ್ಯ ವಹಿಸಲಿದ್ದಾರೆ.
ವಿಶೇಷ ಅತಿಥಿಗಳಾಗಿ ಶಾಸಕರುಗಳಾದ ಶಾಂತನಗೌಡ ಡಿ.ಜಿ., ಬಿ. ದೇವೇಂದ್ರಪ್ಪ, ಬಿ. ಪಿ. ಹರೀಶ್, ಶ್ರೀ ಬಸವರಾಜು ವಿ. ಶಿವಗಂಗಾ, ಕೆ. ಎಸ್. ಬಸವಂತಪ್ಪ, ಸಮರ್ಥ್ ಶಾಮನೂರು, ವಿಧಾನಪರಿಷತ್ ಸದಸ್ಯರುಗಳಾದ ಎಸ್.ಎಲ್. ಭೋಜೆಗೌಡ, ಡಿ.ಎಸ್.ಅರುಣ್, ಡಾ. ಧನಂಜಯ್ ಸರ್ಜಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಲೇಜಿನ ಹಳೆಯ ವಿದ್ಯಾರ್ಥಿ ಟಿ. ರಘುಮೂರ್ತಿ , ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಕಾಲೇಜಿನ ಹಳೆಯ ವಿದ್ಯಾರ್ಥಿ ಜನಾರ್ಧನ ಸ್ವಾ̧ಮಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
-
ದಿನದ ಸುದ್ದಿ6 days agoದಾವಣಗೆರೆ | ಇಂದು ಕರೆಂಟ್ ಇರಲ್ಲ
-
ದಿನದ ಸುದ್ದಿ2 days ago‘ಮತದಾರ ದೇವರು’ ಎಂದ ಸಿದ್ದರಾಮಯ್ಯ


