Connect with us

ದಿನದ ಸುದ್ದಿ

ಬಾಣಲೆಯಿಂದ ಬೆಂಕಿಗೆ : ಕೊರೊನಾ ರಣವೈದ್ಯ ಬೆಳಕಿಗೆ

Published

on

ಚಿತ್ರ: ಛತ್ತೀಸಗಢದ ಅರಣ್ಯದ ಮಧ್ಯೆ ಅದಾನಿ ಕಂಪನಿಯ ಕಲ್ಲಿದ್ದಲ ಗಣಿಗಾರಿಕೆಯ ದೃಶ್ಯ | ಕೃಪೆ :qz.com
  • ನಾಗೇಶ್ ಹೆಗಡೆ

ಕೊರೊನಾಮಾರಿ ಬರುವ ಮೊದಲು ಭಾರತದ ನದಿಗಳೆಲ್ಲ ಕೊಳಕು ಕೂಪಗಳಾಗಿದ್ದವು. ವಾಯುಮಾಲಿನ್ಯ ದಟ್ಟವಾಗಿತ್ತು. ಟ್ರಾಫಿಕ್ ಗದ್ದಲ ಅತಿಯಾಗಿತ್ತು. ಕಾರ್ಖಾನೆಗಳು, ಗಣಿಗಳು ಲಂಗುಲಗಾಮಿಲ್ಲದೇ ನಿಸರ್ಗ ಸಂಪತ್ತನ್ನು, ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದವು. ಕೊರೊನಾ ಬಂದಮೇಲೆ ಎಲ್ಲಕಡೆ ಶಾಂತಿ ನೆಲೆಸಿತ್ತು. ಲಾಕ್ಡೌನ್ ಎಂಬ ಹಠಾತ್ ಎಡವಟ್ಟಿನಿಂದಾಗಿ ಅದೆಷ್ಟೊ ಲಕ್ಷ ಕಾರ್ಮಿಕರು ನೆಲೆತಪ್ಪಿ ಗುಳೆ ಹೊರಟು, ಘನಘೋರ ಸಂಕಷ್ಟಗಳಿಗೆ ತುತ್ತಾಗಿದ್ದನ್ನು ಬಿಟ್ಟರೆ , ಅಭಿವೃದ್ಧಿಯ ಭರಾಟೆಯಿಂದ ನಲುಗಿದ್ದ ನೆಲ-ನೀರು-ಗಾಳಿ-ವನ್ಯಜೀವ ಎಲ್ಲವೂ ತುಸು ಉಸಿರಾಡತೊಡಗಿದವು.

ಕೊರೊನಾ ನಂತರ ಹೊಸ ಭಾರತ ಉದಯಿಸಲಿದೆ ಎಂದು ನಮ್ಮಲ್ಲಿ ಅನೇಕರು ಸಣ್ಣ ಆಸೆಯನ್ನಿಟ್ಟುಕೊಂಡಿದ್ದರು. ಆದರೆ ಈಗಿನ ಸರಕಾರ ರಣವೈದ್ಯದ ವೈಖರಿ ನೋಡಿದರೆ, ಕಾಯಿಲೆಯ ನೆಪದಲ್ಲಿ ದುರ್ಬಲರನ್ನು (ಅಂದರೆ ಉದ್ಯೋಗ ಕಳಕೊಂಡವರನ್ನು, ನಡೆನಡೆದು ಸುಸ್ತಾದವರನ್ನು, ಹಸಿದವರನ್ನು) ಕಂದಕಕ್ಕೆ ದೂಡಿ ಮಣ್ಣು ಮುಚ್ಚಲು ಹೊರಟಂತೆ ಕಾಣುತ್ತದೆ. ನಮ್ಮಲ್ಲಿ ಹಕ್ಕಿಜ್ವರ ಬಂತೆಂದು ಹ್ಯಾಚರಿಯ ಸಾವಿರಾರು ಕೋಳಿಗಳನ್ನು ಕಂದಕಕ್ಕೆ ಹಾಕಿ ಮಣ್ಣು ಮುಚ್ಚಿದ ಹಾಗೆ.

(ಇಲ್ಲೊಂದು ಕ್ರೂರ ವ್ಯಂಗವಿದೆ: ಪ್ರಧಾನಿ ಮೋದಿಯವರು ಘೋಷಿಸಿದ 20 ಲಕ್ಷ ಕೋಟಿಯಲ್ಲಿ ಯಾವಯಾವ ಬಾಬ್ತಿಗೆ ಎಷ್ಟೆಷ್ಟು ಎಂಬುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಲ್ಕು ಟ್ರಾಂಚ್‌ (tranche)ಗಳಲ್ಲಿ ಹಂಚಿದ್ದಾರೆ. ನಾಲ್ಕನೆಯ ಕಂತಿನಲ್ಲಂತೂ ಗಣಿಗಾರಿಕೆ ವಿಸ್ತರಣೆಗೆ, ರಕ್ಷಣಾ ಉತ್ಪಾದನೆ, ವಿಮಾನಯಾನ, ಬಾಹ್ಯಾಕಾಶ ಸಾಹಸಕ್ಕೆ ಇತ್ಯಾದಿಯಂತೆ.

ಟ್ರಾಂಚ್ ಎಂದರೆ ಹೋಳು ಅಥವಾ ಭಾಗ. ಆದರೆ ನೀವು ಗೂಗಲ್ ಕನ್ನಡ ನಿಘಂಟಿನಲ್ಲಿ ಅದರ ಅರ್ಥವನ್ನು ಹುಡುಕಿದರೆ ಟ್ರಾಂಚ್ ಎಂದರೆ ‘ಕಂದಕ’ trench ಎಂಬ ತಪ್ಪು ಅರ್ಥವಿದೆ, ಬೇಕಿದ್ದರೆ ನೋಡಿ. ನಿಜಕ್ಕೂ 40 ಕೋಟಿ ಜನರನ್ನು ಕಂದಕಕ್ಕೆ ಬೀಳಿಸಿ ತಪ್ಪನ್ನೇ ಸರಿಯೆಂದು, trancheನ್ನೇ trench ಎಂದು ತೋರಿಸುವ ಹುನ್ನಾರವೆ?.)

ಹಳ್ಳಿಯ ಜನರು ಹಳ್ಳಿಗೇ ಮರಳಿ ವಲಸೆ ಬಂದಾಗ ಎಷ್ಟೊಂದು ವಿಧಗಳಲ್ಲಿ ಅವರಿಗೆ ನೆರವಾಗಲು ಸಾಧ್ಯವಿತ್ತು. ಅದರ ಕೆಲವು ಯಶಸ್ವೀ ಉದಾಹರಣೆಗಳು ನಮ್ಮಲ್ಲಿವೆ: ಮಹಾರಾಷ್ಟ್ರದಲ್ಲಿ ಹೀವ್ಡೆ ಬಝಾರ್ ಎಂಬ ಗ್ರಾಮವಿದೆ. ನಮ್ಮ ಕೋಲಾರದ ಯಾವುದೇ ಊರಿನ ಹಾಗೆ ಬರೀ 430 ಮಿ.ಮೀ. ಮಳೆ ಬೀಳುವ ಹಳ್ಳಿ.

1980ರ ದಶಕದಲ್ಲಿ ಬಹಳಷ್ಟು ಜನ ದಿಕ್ಕೆಟ್ಟು ಉದ್ಯೋಗ ಹುಡುಕಿ ಮುಂಬೈಗೋ ಪುಣೆಗೋ ಹೋದರು. ಆ ಊರಿನ ಪುಣ್ಯಾತ್ಮನೊಬ್ಬ ಸರಪಂಚನೆಂದು ಆಯ್ಕೆಯಾದ. ಮಳೆಕೊಯ್ಲು ಮಾಡಿಸಿದ. ಗಿಡಮರ ನೆಡಿಸಿದ. ಅಂತರ್ಜಲ ಹೆಚ್ಚಿತು. ಊರು ನಳನಳಿಸಿತು. ಕೃಷಿ, ಕುರಿಸಾಕಣೆ, ಡೇರಿ ಎಲ್ಲಕ್ಕೂ ಚೈತನ್ಯ ಬಂತು.

ಗುಳೆ ಹೋದವರು ಮರಳಿ ಬಂದರು. ಇಂದು ಆ ಊರಲ್ಲಿ (ನಂಬಿ ಇದನ್ನು) ಬಡತನದ ರೇಖೆಗಿಂತ ಕೆಳಗಿದ್ದ 135 ಕುಟುಂಬಗಳು ಮೇಲೆದ್ದು ಬಂದಿವೆ, 60 ಜನರು ದಶಲಕ್ಷಾಧೀಶರಾಗಿದ್ದಾರೆ. ಸರಕಾರಿ ಇಲಾಖೆಗಳ ಅಧಿಕಾರಿಗಳಿಗೆ ಈ ಊರೇ ಈಗ ಪ್ರವಾಸೀ ತಾಣವಾಗಿದೆ. ಬೇಕಿದ್ದರೆ Hewre Bazar ಎಂದು ಅಂತರಜಾಲದಲ್ಲಿ ಹುಡುಕಿ ನೋಡಿ.
ನಗರಮುಖೀ ವಲಸೆಯನ್ನು ಹೀಗೆ ಹಿಮ್ಮೊಗ ತಿರುಗಿಸಲು ಸಾಧ್ಯವೆಂದು ಮೊದಲು ತೋರಿಸಿದವರು ಅಣ್ಣಾ ಹಜಾರೆ ಮತ್ತು ರಾಜೇಂದ್ರ ಸಿಂಗ್.

ತಮ್ಮ ಊರಿನ ನೀರು, ನೆಲ, ಗಾಳಿ, ಬೆಳಕನ್ನೇ ಸಂಪತ್ತನ್ನಾಗಿ ಬಳಸಿಕೊಂಡು ಗ್ರಾಮದ ಸಮೃದ್ಧಿಗೆ ಕಾರಣರಾದ ಬೇರೆ ನೂರಾರು ಜನರ ಉದಾಹರಣೆಗಳು ನಮ್ಮಲ್ಲಿವೆ. ಕೊಯಮತ್ತೂರಿನ ಸಮೀಪದ ಒಡಂತ್ತುರೈ ಗ್ರಾಮ ತನ್ನ ಬಿಸಿಲಿನಿಂದ ಬರುವ ವಿದ್ಯುತ್ತನ್ನೇ ಮಾರಾಟ ಮಾಡುತ್ತ ಗ್ರಾಮಪಂಚಾಯತನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದೆ.

ಕಳೆದ ನಾಲ್ಕು ವರ್ಷಗಳಿಂದ ಆಮಿರ್ ಖಾನ್ ಆರಂಭಿಸಿದ ವಾಟರ್ ಕಪ್ ಮಳೆಕೊಯ್ಲಿನ ಸ್ಪರ್ಧೆಯಿಂದಾಗಿ ಮಹಾರಾಷ್ಟ್ರದಲ್ಲಿ ಅನೇಕ ಹಳ್ಳಿಗಳಲ್ಲಿ ಜಲ ಸಂವರ್ಧನೆ ಆಗಿದ್ದು, ಊರು ಬಿಟ್ಟು ಹೋದವರು ಮರಳಿ ಬರುತ್ತಿದ್ದಾರೆ. ಟ್ಯಾಂಕರ್ ನೀರನ್ನೇ ಆಧರಿಸಿದ್ದ ಬರಪೀಡಿತ ಹಳ್ಳಿಗಳು ಈಗ ತಮ್ಮ ಬಳಿಯ ಹೆಚ್ಚುವರಿ ನೀರನ್ನು ನಗರಕ್ಕೂ ಪೂರೈಸಲು ಮುಂದಾಗಿವೆ. ಇಂಧನ ವನಗಳನ್ನು ಸೃಷ್ಟಿಸಿ ನಗರಗಳಿಗೆ ಬಯೊಡೀಸೆಲ್ಲನ್ನೂ ಒದಗಿಸುವ ಕನಸು ಕಾಣುತ್ತಿದ್ದಾರೆ.

ಇಂಥ ಸ್ವಾವಲಂಬಿ ಗ್ರಾಮಗಳ ಒಂದು ಉದಾಹರಣೆಯೂ ಸರಕಾರದ ಗಮನಕ್ಕೆ ಬರಲೇ ಇಲ್ಲವೆ? ಗ್ರಾಮೀಣ ಜಲಸಂಪತ್ತನ್ನು ಹೆಚ್ಚಿಸುವ ಸರಳ ವಿಧಾನ ಅದಕ್ಕೆ ಗೊತ್ತೇ ಇಲ್ಲವೆ?
ಸರಕಾರ ಮನಸ್ಸು ಮಾಡಿದರೆ, ತಾಲ್ಲೂಕು ಮಟ್ಟದಲ್ಲೇ ಉತ್ತಮ ಗುಣಮಟ್ಟದ ಸಾಬೂನು, ಟೂಥ್ಪೇಸ್ಟ್, ಸೊಳ್ಳೆಪರದೆ, ಸೊಳ್ಳೆಬತ್ತಿ, ಶಾಂಪೂ, ಸುಗಂಧ ತೈಲ, ಪೇಯ, ಪ್ಯಾರಾಸಿಟೆಮಾಲ್, ಆಯುರ್ವೇದ ಔಷಧಗಳು, ಅಷ್ಟೇಕೆ ಗ್ರಾಮಗಳಿಗೆ ಬೇಕಾದ ಪ್ಲಾಸ್ಟಿಕ್ ಚಪ್ಪಲಿಗಳಿಂದ ಹಿಡಿದು ಕೃಷಿ ಸಲಕರಣೆ, ರಸಗೊಬ್ಬರಗಳ ಉತ್ಪಾದನೆಗೆ ಪ್ರೋತ್ಸಾಹ ನೀಡಬಹುದಿತ್ತು.

ಇವನ್ನೆಲ್ಲ ಬೃಹತ್, ನಗರಕೇಂದ್ರಿತ ಉದ್ಯಮಗಳ ಮುಷ್ಟಿಯಿಂದ ತಪ್ಪಿಸಿ ತಾಲ್ಲೂಕು ಮಟ್ಟಕ್ಕೆ ತಂದು ಸ್ಥಳೀಯರಿಗೆ ಉದ್ಯೋಗ ಸಿಗುವಂತೆ ಮಾಡಿ, ವಾಣಿಜ್ಯ ರಂಗದ ಅಸಲೀ ಸ್ವಾವಲಂಬನೆ ಸಾಧಿಸಬಹುದಿತ್ತು. ಅದರ ಬದಲಿಗೆ ಖನಿಜ ಮತ್ತು ಕಲ್ಲಿದ್ದಲ ಗಣಿಗಾರಿಕೆಗೆ ಹೆಬ್ಬಾಗಿಲು ತೆರೆಯಲಿದೆ.

ಕಲ್ಲಿದ್ದಲು ಎಂಬುದೇ ಮಹಾ ವಿಷವೃತ್ತ. ನಮ್ಮ ಎಲ್ಲ ಕಲ್ಲಿದ್ದಲ ನಿಕ್ಷೇಪಗಳೂ ಛತ್ತೀಸಗಢ, ಝಾರ್ಖಂಡ್, ಬಿಹಾರ್‌ನ ದಟ್ಟ ಅರಣ್ಯಗಳಲ್ಲಿವೆ. ಅಲ್ಲಿ ಆದಿವಾಸಿಗಳೂ ಮೂಲನಿವಾಸಿಗಳೂ ಇದ್ದಾರೆ. ಅವರನ್ನೆಲ್ಲ ಗುಡಿಸಿ ಒತ್ತಿ, ಜೀವಲೋಕವನ್ನು ಧ್ವಂಸ ಮಾಡಿ, ತೆರೆದ ಗಣಿಗಳ ಮೂಲಕ ಕಲ್ಲಿದ್ದಲನ್ನು ಸ್ಫೋಟಿಸಿ, (ಚಿತ್ರವನ್ನು ಗಮನಿಸಿ) ನೂರಾರು ಉಷ್ಣವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೆ ಹೊಮ್ಮುವ ಕಾರ್ಬನ್ ಡೈಆಕ್ಸೈಡ್‌ ಇಡೀ ಜಗತ್ತಿಗೇ ಮಾರಕ.

ಹಾರುಬೂದಿ, ಸೆಕೆ ಹೆಚ್ಚಳ, ಜಲಮಾಲಿನ್ಯ ಒಂದಲ್ಲ, ಎರಡಲ್ಲ. ಅಲ್ಲಿಂದ ಪಡೆದ ವಿದ್ಯುತ್ತು ನಗರಗಳ ಮಾಲ್‌ಗಳಿಗೆ.ಮತ್ತು ತರಾವರಿ ಯಂತ್ರಗಳಿಗೆ, ಕೊಳ್ಳುಬಾಕ ಶೋಕಿ ವಸ್ತುಗಳ ಉತ್ಪಾದನೆಗೆ ಹೋಗುತ್ತದೆ. ಅದರ ಲಾಭವೆಲ್ಲ ತಿರ್ಗಾ ಕೋಟ್ಯಧೀಶ ಉದ್ಯಮಿಗಳಿಗೆ.

ನಿಸರ್ಗ ಸಂಪತ್ತನ್ನು ಹೀಗೆ ಲೂಟಿ ಮಾಡಲು ದೊಡ್ಡ ಕಂಪನಿಗಳಿಗೆ ಅನುವು ಮಾಡಿಕೊಡಲೆಂದೇ ತೆರಿಗೆದಾರರ 50 ಸಾವಿರ ಕೋಟಿ ಮೀಸಲಿಡುವುದಾಗಿ ಸರಕಾರ ಘೋಷಿಸಿದೆ. ಅದಕ್ಕೆಂದು ಪರಿಸರ ಸಂರಕ್ಷಣೆಯ ಬಿಗಿ ಕಾನೂನುಗಳನ್ನು ಸಡಿಲ ಮಾಡುವ ಸಿದ್ಧತೆ ಆಗಲೇ ನಡೆದಿದೆ.

ನಿಸರ್ಗದ ದುರಂತ ಕತೆ ಹೀಗೆ. ಹಾಗಿದ್ದರೆ ಮನುಷ್ಯರ ಕತೆ? ಈ ರಣವೈದ್ಯ ಮಾಡಿದರೆ 40 ಕೋಟಿ ಬಡ, ಕಡುಬಡವರ ಹಾಗು ಆದಿವಾಸಿಗಳ ಸ್ಥಿತಿಗತಿ ಉತ್ತಮಗೊಂಡೀತೆ? ಅದೂ ಇಲ್ಲ.
ಮೂಲ ನಿವಾಸಿಗಳಿಗೆ ಅರಣ್ಯಾಧಾರಿತ ಉದ್ಯೋಗ ಕೊಡಲೆಂದು 6000 ಕೋಟಿ ಮೀಸಲಿದೆಯಂತೆ. ಅದರ ಕತೆ ಕೇಳಿ. ಅದು ಖಾಸಗಿಯ ಕಂಪನಿಗಳ ಜಂಟಿ ಯೋಜನೆಯಂತೆ. ಅಂದರೆ ಅರಣ್ಯಗಳಿಗೂ ಕೋಟ್ಯಧೀಶರು ಲಗ್ಗೆ ಇಡಲಿದ್ದಾರೆ. ಮೂಲನಿವಾಸಿಗಳ ಜಮೀನನ್ನು ಮುಗಿಸಿದ ನಂತರ ಮುಂದೇನು ಆದೀತೆಂದು ನಾವು ಊಹಿಸಬಹುದು.

ಆದಿವಾಸಿಗಳ ಕಲ್ಯಾಣವೇ ಮುಖ್ಯ ಗುರಿಯಾಗಿದ್ದಿದ್ದರೆ ಈಗಿರುವ ನರೇಗಾ ಸ್ಕೀಮನ್ನೇ ಸುಧಾರಿಸಿ ಅವರಿಗೂ ವಿಸ್ತರಿಸಬಹುದಿತ್ತು. ಗಿಡ ನೆಡುವ, ಬೇಲಿ ಕಂದಕಗಳಂಥ ಭದ್ರತಾ ಕೆಲಸವನ್ನು ಅವರೇ ಮಾಡಬಹುದಿತ್ತು. ಹಳ್ಳಿಗಳಲ್ಲೂ ನರೇಗಾ ದುಡಿಮೆಯ ಅವಧಿಯನ್ನು ಈಗಿನ 100 ದಿನಗಳ ಬದಲು 200-300 ಅಥವಾ ಅಗತ್ಯವಿದ್ದಷ್ಟು ದಿನಗಳಿಗೆ ವಿಸ್ತರಿಬಹುದಿತ್ತು. ಅದರತ್ತ ಆದ್ಯತೆಯೇ ಇಲ್ಲ.

ಅಷ್ಟೊಂದು ಜನರು ಹಳ್ಳಿಗಳಿಗೆ ಹಿಂದಿರುಗಿದ್ದಾರೆ. ಅವರಿಂದ ಎಷ್ಟೊಂದು ಗ್ರಾಮೀಣ ಅಭಿವೃದ್ಧಿಯ ಕೆಲಸ ಮಾಡಿಸಬಹುದಿತ್ತು. ಹಳ್ಳಿಗಳಿಗೆ ಹಿಂದಿರುಗಿದ ಆ ನತದೃಷ್ಟರಿಗೆ ಯಾವ ನೆರವೂ ಇಲ್ಲ. ನಗರ ನಿರ್ಮಾಣದಲ್ಲಿ ತೊಡಗಿದ್ದ ಅವರಲ್ಲಿ ಅನೇಕರು ಹಿಂದೆಲ್ಲ ಚುನಾವಣೆ ಬಂದಾಗ ತಮ್ಮದೇ ಖರ್ಚಿನಲ್ಲಿ ಊರಿಗೆ ಹೋಗಿ ಮತ ಹಾಕಿ ಈ ಸರಕಾರವನ್ನು ನಿಲ್ಲಿಸಿದವರು. ಪ್ರಧಾನಿಯವರ ಒಂದು ಅವಸರದ ಲಾಕ್‌ಡೌನ್‌ ಘೋಷಣೆಯಿಂದಾಗಿ ಇಡೀ ಜಗತ್ತೇ ಕಂಬನಿ ಮಿಡಿಯುವಂಥ ದುರ್ದೆಸೆಗೆ ಈಡಾದವರು. ಅವರ ಕೈ ಹಿಡಿಯುವ ಬದಲು ಬಹುಕೋಟ್ಯಧೀಶರ ಕೈ ಹಿಡಿಯಲು ಸರಕಾರ ಹೊರಟಿದೆ.

ದೇಶದ 20 ಕೋಟಿ ಮಹಿಳೆಯರ ಜನ್‌ಧನ್ ಖಾತೆಗೆ ತಿಂಗಳಿಗೆ 500 ರೂ. ಜೊತೆಗೆ 80 ಕೋಟಿ ಜನರಿಗೆ 6 ಕಿಲೊ ಧಾನ್ಯವನ್ನು ಮೂರು ತಿಂಗಳ ಅವಧಿಗೆ ಕೊಡುವುದಾಗಿ ಸರಕಾರ ಮಾರ್ಚ್‌ನಲ್ಲಿ ಹೇಳಿತ್ತು. ಅದನ್ನು ಇನ್ನೂ ಮೂರು ತಿಂಗಳಿಗೆ ವಿಸ್ತರಿಸಬಹುದಿತ್ತು. ಈ ತೀರಾ ಜುಜುಬಿ ಸಹಾಯದ ಮೊತ್ತವನ್ನು ಹೆಚ್ಚಿಸಬಹುದಿತ್ತು. ಹೆಚ್ಚಿಸುವುದು ಹಾಗಿರಲಿ, ಸರಕಾರದ್ದೇ ದಾಖಲೆಗಳ ಪ್ರಕಾರ ಈ ನೆರವೂ ಶೇ. 25ರಷ್ಟು ಜನರಿಗೆ ಮಾತ್ರ ತಲುಪಿದೆ. ಕೇವಲ 110 ಲಕ್ಷ ಟನ್ ಧಾನ್ಯ ಮಾತ್ರ ವಿತರಣೆಯಾಗಿದೆ.

ಹಾಗೆಂದು ನಮ್ಮ ದೇಶ ಅಷ್ಟೊಂದು ದರಿದ್ರ ಸ್ಥಿತಿಯಲ್ಲೇನೂ ಇಲ್ಲ. ತಜ್ಞರ ಲೆಕ್ಕಾಚಾರದ ಪ್ರಕಾರ ಕೆಲಸ ಕಳೆದುಕೊಂಡವರಿಗೆ ತಿಂಗಳಿಗೆ 7 ಸಾವಿರ ನಗದು ಮತ್ತು ದೇಶದ ಶೇ. 80ರಷ್ಟು ಜನಕ್ಕೆ ತಿಂಗಳಿಗೆ ಹತ್ತು ಕಿಲೊ ಧಾನ್ಯದಂತೆ ಆರು ತಿಂಗಳವರೆಗೆ ಉಚಿತವಾಗಿ ಕೊಟ್ಟಿದ್ದರೂ ನಮ್ಮ ಜಿಡಿಪಿಯ ಕೇವಲ 3%ರಷ್ಟು ವೆಚ್ಚವಾಗುತ್ತಿತ್ತು. ಅದನ್ನಂತೂ ಮಾಡಲಿಲ್ಲ. ತನ್ನ ಬಹುತೇಕ ವೈಫಲ್ಯಗಳಿಗೆ ರಾಜ್ಯಗಳನ್ನು ದೂರುವುದನ್ನು ಬಿಟ್ಟು ಸರಕಾರ ಏನನ್ನೂ ಮಾಡಲಿಲ್ಲ. ರಾಜ್ಯಗಳಿಗೂ ಸಿಗಬೇಕಾದ ಧನಸಹಾಯವನ್ನು ಪೂರ್ತಿ ನೀಡಲಿಲ್ಲ.

ಈಗ ಟ್ರಾಂಚ್ 3ರ ಕತೆ ಕೇಳಿ.
ಸಣ್ಣ ಮತ್ತು ಮಧ್ಯಮ ಉದ್ಯಮ(MSME)ಗಳು ಚೇತರಿಸಿಕೊಳ್ಳಲೆಂದು 3.7 ಲಕ್ಷ ಕೋಟಿ ಸಾಲ ಕೊಡುವುದಾಗಿ ಸರಕಾರ ಹೇಳಿದೆ. ಅದು ಆಮೇಲಾಗಲಿ, ಈವರೆಗೆ ಸಂದಾಯವಾಗಬೇಕಿದ್ದ 5 ಲಕ್ಷ ಕೋಟಿ ಬಾಕಿ ಹಣವನ್ನು ಮೊದಲು ಕೊಡ್ರಪ್ಪಾ ಎಂದು MSME ಗಳು ಕೇಳುತ್ತಿವೆ. ಅದಂತೂ ಬಾಕಿ ಇದೆ. ಈ ಹೊಸ ಸಾಲವನ್ನು ಪಡೆದು ಉತ್ಪಾದನೆ ಆರಂಭಿಸೋಣವೆಂದರೆ ಕಾರ್ಮಿಕರು ಎಲ್ಲಿದ್ದಾರೆ? ಅಂದಾಜು 12 ಕೋಟಿ ಕಾರ್ಮಿಕರು ಕೆಲಸ ಕಳೆದುಕೊಂಡು ತಂತಮ್ಮ ಹಳ್ಳಿಗಳಿಗೆ ಹೋಗಿದ್ದಾರೆ.

ಅವರು ಮರಳಿ ಬಾರದಂತೆ ಮಾಡಲು ಹೊಸ ಕಾರ್ಮಿಕ ನೀತಿಗಳನ್ನು ಜಾರಿಗೆ ತರಲು ಸರಕಾರ ಹೊರಟಿದೆ. ಕೆಲಸಗಾರರ ಹಕ್ಕುಗಳನ್ನೇ ಮೊಟಕುಗೊಳಿಸಿ ಅವರ ದುಡಿಮೆಯ ಅವಧಿಯನ್ನು 50% ಜಾಸ್ತಿ ಮಾಡುತ್ತಾರಂತೆ. ಸರಿ, ಕಾರ್ಮಿಕರು ಹೇಗೋ ಬಂದು ಉತ್ಪಾದನೆ ಆರಂಭಿಸಿದರೂ ಫ್ಯಾಕ್ಟರಿಯ ಉತ್ಪನ್ನಗಳನ್ನು ಖರೀದಿಸಲು ಜನರ ಬಳಿ ಹಣ ಎಲ್ಲಿದೆ? ಅದಕ್ಕೆ ಈಗ ಟ್ರಾಂಚ್‌ 4ನ್ನು ಹಣಕಾಸು ಸಚಿವೆ ಘೋಷಣೆ ಮಾಡಿದೆ.

ಹಣದ ಚಲಾವಣೆ ಹೆಚ್ಚಿಸಲೆಂದೇ ಎಗ್ಗಿಲ್ಲದ ಗಣಿಗಾರಿಕೆ, ಹೊಸ ವಿಮಾನ ನಿಲ್ದಾಣ ನಿರ್ಮಾಣ, ರಕ್ಷಣಾ ಸಾಮಗ್ರಿ ಉತ್ಪಾದನೆ, ಬಾಹ್ಯಾಕಾಶ ಎಲ್ಲವನ್ನೂ ಖಾಸಗಿ ಕಂಪನಿಗಳಿಗೆ ವಹಿಸುತ್ತಾರಂತೆ. ಲಾಕ್‌ಡೌನ್‌ ಸಡಿಲವಾಗುವ ಮೊದಲೇ ದೇಶದ ಹಿತಾಸಕ್ತಿಯನ್ನು ಕಾಯಬೇಕಿದ್ದ ನಿಯಮಗಳನ್ನೇ ಸಡಿಲ ಮಾಡಲಾಗುತ್ತಿದೆ.

ಅದಕ್ಕೇ, ‘ವಲಸಿಗರಿಗೆ ಮನೆ ತಲುಪಲು ಸಾಧ್ಯವಾಗುತ್ತಿಲ್ಲ; ಬಾಹ್ಯಾಕಾಶಕ್ಕೆ ಹೋಗಲು ಧನಿಕರಿಗೆ ಅನುಕೂಲ ಮಾಡುತ್ತಾರಂತೆ’ ಎಂದು ಜೈರಾಮ್ ರಮೇಶ್ ಕುಟುಕಿದ್ದಾರೆ. ಯಾರೆಷ್ಟೇ ಕುಟಕಿದರೂ ಪ್ರಭುತ್ವಕ್ಕೆ ವಂದಿಮಾಗಧರ ಮತ್ತು ಬಹುಕೋಟ್ಯಧೀಶರ ಭೋಪರಾಕ್ ಮಾತ್ರ ಕೇಳಿಸುತ್ತದೆ. ಕಂದಕಕ್ಕೆ ಕುಸಿದವರ ಆಕ್ರಂದನ ಮಾತ್ರ ಕೇಳಿಸುತ್ತಿಲ್ಲ.

ಅರಣ್ಯವಾಸಿಗಳನ್ನು ಹೊರಗಟ್ಟುವ ಗಣಿಗುತ್ತಿಗೆದಾರರ ಷಡ್ಯಂತ್ರದ ವಿರುದ್ಧ ಆದಿವಾಸಿಗಳ ಒಂದು ಸೊಗಸಾದ ಪ್ರತಿಭಟನಾ ಲಾವಣಿಯನ್ನು ಈ ಕೊಂಡಿಯಲ್ಲಿದೆ: ಕ್ಲಿಕ್ ಮಾಡಿ ನೋನೋಡಿ

https://www.youtube.com/watch?v=sFmsl7KrZn8

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.

ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.

‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.

ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.

ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

Published

on

ಗಿರೀಶ್ ಬಳ್ಳಾರಿ

ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.

ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.

ಸಾಧಿಕ್ ಪೊಲೀಸರಿಗೆ ಸಾಥ್

ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.

“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

Published

on

~ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ ಕಲಿಕೆ ಎನ್ನುವುದು ಶಿಕ್ಷಣ ಕ್ಷೇತ್ರದಲ್ಲಿ ಬಳಸಲಾಗುವ ಒಂದು ವ್ಯವಸ್ಥಿತ ಮತ್ತು ಪ್ರಭಾವಶಾಲಿ ಬೋಧನಾ ವಿಧಾನವಾಗಿದ್ದು, ವಿಶೇಷವಾಗಿ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – NEP ಯಲ್ಲೂ ಇದರ ಪ್ರಸ್ತಾಪವಿದೆ ಎನ್ನಲಾಗಿದೆ.

ಪಂಚಪಾಡಿ ಎಂದರೇನು?

ಪಂಚಪಾಡಿ ಎಂದರೆ ಮಗುವಿನ ಸಮಗ್ರ ವಿಕಾಸಕ್ಕಾಗಿ ಐದು ಹಂತಗಳ ಕಲಿಕಾ ಪ್ರಕ್ರಿಯೆಯನ್ನು ಬಳಸಲಾಗುತ್ತದೆ.
​ಅಂದರೆ ಜ್ಞಾನರ್ಜನೆಗೆ ಐದು ಹೆಜ್ಜೆಗಳು ಅಥವಾ ಐದು ಹಂತಗಳು ಎಂದರ್ಥ.

ಜ್ಞಾನವನ್ನು ಕೇವಲ ನೆನಪಿನಲ್ಲಿಟ್ಟುಕೊಳ್ಳುವುದರ ಬದಲಾಗಿ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಈ ವಿಧಾನ ಸಹಾಯ ಮಾಡುತ್ತದೆ.

ಪಂಚಪಾಡಿ ಕಲಿಕೆಯ 5 ಹಂತಗಳು

ಅದಿತಿ ( ಪರಿಚಯ / ಗ್ರಹಿಕೆ): ​ಈ ಪದ್ಧತಿಯ ಮೊದಲ ಹಂತವೇ ಅದಿತಿ. ಇಲ್ಲಿ ವಿದ್ಯಾರ್ಥಿಗೆ ಹೊಸ ವಿಷಯವನ್ನು ಪರಿಚಯಿಸಲಾಗುತ್ತದೆ. ಶಿಕ್ಷಕರು ಕಥೆ,ಚಿತ್ರ ಉದಾಹರಣೆ ಅಥವಾ ಚಟುವಟಿಕೆಗಳ ಮೂಲಕ ಹೊಸ ವಿಷಯವನ್ನು ಮಗುವಿನ ಮುಂದೆ ಪ್ರಸ್ತುತಪಡಿಸುತ್ತಾರೆ. ಮಗು ವಿಷಯವನ್ನು ಕೇಳಿ, ನೋಡಿ ಗ್ರಹಿಸಲು ಆರಂಭಿಸುತ್ತದೆ.

ಬೋಧ : (ತಿಳುವಳಿಕೆ / ಅರ್ಥೈಸಿಕೊಳ್ಳುವಿಕೆ): ಪರಿಚಯಿಸಿಕೊಂಡ ವಿಷಯವನ್ನು ಆಳವಾಗಿ ಅರ್ಥಮಾಡಿಕೊಳ್ಳುವ ಹಂತವಿದು. ಮಗು ವಿಷಯದ ಹಿಂದಿರುವ ಪರಿಕಲ್ಪನೆ ಮತ್ತು ಕಾರಣಗಳನ್ನು ಅರ್ಥಮಾಡಿಕೊಳ್ಳುತ್ತದೆ. ಪ್ರಶ್ನೆಗಳನ್ನು ಕೇಳುವ ಮೂಲಕ ಮತ್ತು ಚರ್ಚೆಗಳಲ್ಲಿ ಭಾಗವಹಿಸುವ ಮೂಲಕ ತನ್ನ ಗೊಂದಲಗಳನ್ನು ನಿವಾರಿಸಿಕೊಳ್ಳುತ್ತದೆ.

ಅಭ್ಯಾಸ : (ರೂಢಿಸಿಕೊಳ್ಳುವುದು / ತರಬೇತಿ): ಕಲಿತ ವಿಷಯ ಮನಸ್ಸಿನಲ್ಲಿ ಗಟ್ಟಿಯಾಗಲು ನಿರಂತರ ಸ್ಮರಣೆ ಅಥವಾ ಅಭ್ಯಾಸದ ಅಗತ್ಯವಿದೆ. ಮಕ್ಕಳು ಕಲಿತ ವಿಷಯವನ್ನು ಬರವಣಿಗೆ, ಗಣಿತದ ಲೆಕ್ಕಗಳು, ಪ್ರಯೋಗಗಳು ಅಥವಾ ಪುನರಾವರ್ತನೆ (Revision) ಮೂಲಕ ಅಭ್ಯಾಸ ಮಾಡುತ್ತಾರೆ. ಇದು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಕೇವಲ ಪುಸ್ತಕದಲ್ಲಿ ಕಲಿತದ್ದನ್ನು ನಿಜ ಜೀವನದಲ್ಲಿ ಅಥವಾ ಹೊಸ ಸಂದರ್ಭಗಳಲ್ಲಿ ಬಳಸಿ ನೋಡುವುದೇ ಪ್ರಯೋಗ.

​ಉದಾಹರಣೆಗೆ, ಗಣಿತದಲ್ಲಿ ‘ಲಾಭ-ನಷ್ಟ’ ಕಲಿತ ನಂತರ ಮಗು ಮಾರುಕಟ್ಟೆಗೆ ಹೋಗಿ ವ್ಯವಹಾರ ಮಾಡುವುದು, ಅಥವಾ ವಿಜ್ಞಾನದ ತತ್ವವನ್ನು ಪ್ರಾಜೆಕ್ಟ್ ಮೂಲಕ ಮಾಡಿ ನೋಡುವುದು.

ಪ್ರಸಾರ : (ಹಂಚಿಕೊಳ್ಳುವುದು) ​ಕಲಿಕೆಯ ಅತ್ಯುನ್ನತ ಹಂತವೆಂದರೆ ತಾನು ಕಲಿತ ಜ್ಞಾನವನ್ನು ಇತರರಿಗೆ ಮನವರಿಕೆ ಮಾಡಿಕೊಡುವುದು. ​ವಿದ್ಯಾರ್ಥಿ ತನಗೆ ತಿಳಿದ ವಿಷಯವನ್ನು ತನ್ನ ಸಹಪಾಠಿಗಳಿಗೆ ವಿವರಿಸುವುದು, ಭಾಷಣ ಮಾಡುವುದು ಅಥವಾ ಗುಂಪು ಚರ್ಚೆಯಲ್ಲಿ ಹಂಚಿಕೊಳ್ಳುವುದು. “ಕಲಿಸುವುದರಿಂದ ಕಲಿಕೆ ಪೂರ್ಣವಾಗುತ್ತದೆ” ಎಂಬ ತತ್ವ ಇದರ ಹಿಂದಿದೆ.

ಪಂಚಪಾಡಿ ಕಲಿಕೆಯ ಮಹತ್ವ

​”ಶುಷ್ಕ ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನವೇ ಮೇಲು.”
​ಇದು ಮಕ್ಕಳಲ್ಲಿ ಸ್ವಯಂ ಕಲಿಕೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ.

​ಕಂಠಪಾಠ ಮಾಡುವ ಪದ್ಧತಿಯನ್ನು ತಪ್ಪಿಸಿ, ವಿಷಯದ ಆಳವಾದ ತಿಳುವಳಿಕೆಗೆ ನೆರವಾಗುತ್ತದೆ.
​ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸುತ್ತದೆ.

ಶಾಲೆಯ ವೈಶಿಷ್ಟ

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.

ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.

ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.

ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..

ಜೂನ್ 2ಕ್ಕೆ ಶಾಲಾ ಪ್ರವೇಶಕ್ಕೆ ಕೊನೆದಿನ

2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ.

ಶಾಲೆಯ ವೈಶಿಷ್ಟ

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.

ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.

ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.

ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..

2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ. ಕೇವಲ ಪುಸ್ತಕ ಆಧಾರಿತ ಆಧುನಿಕ ಪದ್ಧತಿಯ ಕಲಿಕೆ ಮಾತ್ರವಲ್ಲದೆ ಹಿಂದಿನ ಗುರುಕುಲ ಮತ್ತು ಪ್ರಾಯೋಗಿಕ ಕಲಿಕೆಗೆ ಮಹತ್ವ ನೀಡಿ ಮಕ್ಕಳಿಗೆ ಉತ್ತಮ ರೀತಿಯ ವಿದ್ಯಾಭ್ಯಾಸ ನೀಡುವ ಮಹಾದಾಸೆ ಇದೆ.”

|  ವೀಣಾ ಮಂಜುನಾಥ್ ಮುಖ್ಯಸ್ಥರು

ಪ್ರವೇಶ ಪ್ರಾರಂಭ : ಸದರಿ ಶಾಲೆಯಲ್ಲಿ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಮೇ 17ರಿಂದ ಆರಂಭವಾದ ಪ್ರವೇಶ ಪ್ರಕ್ರಿಯೆ ಜೂನ್ 2ಕ್ಕೆ ಕೊನೆಗೂಳ್ಳುತ್ತದೆ. ಸಂಪರ್ಕಿಸಿ : Mandara School Tyavanige 919148141665

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending