Connect with us

ದಿನದ ಸುದ್ದಿ

ಬಾಣಲೆಯಿಂದ ಬೆಂಕಿಗೆ : ಕೊರೊನಾ ರಣವೈದ್ಯ ಬೆಳಕಿಗೆ

Published

on

ಚಿತ್ರ: ಛತ್ತೀಸಗಢದ ಅರಣ್ಯದ ಮಧ್ಯೆ ಅದಾನಿ ಕಂಪನಿಯ ಕಲ್ಲಿದ್ದಲ ಗಣಿಗಾರಿಕೆಯ ದೃಶ್ಯ | ಕೃಪೆ :qz.com
  • ನಾಗೇಶ್ ಹೆಗಡೆ

ಕೊರೊನಾಮಾರಿ ಬರುವ ಮೊದಲು ಭಾರತದ ನದಿಗಳೆಲ್ಲ ಕೊಳಕು ಕೂಪಗಳಾಗಿದ್ದವು. ವಾಯುಮಾಲಿನ್ಯ ದಟ್ಟವಾಗಿತ್ತು. ಟ್ರಾಫಿಕ್ ಗದ್ದಲ ಅತಿಯಾಗಿತ್ತು. ಕಾರ್ಖಾನೆಗಳು, ಗಣಿಗಳು ಲಂಗುಲಗಾಮಿಲ್ಲದೇ ನಿಸರ್ಗ ಸಂಪತ್ತನ್ನು, ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದವು. ಕೊರೊನಾ ಬಂದಮೇಲೆ ಎಲ್ಲಕಡೆ ಶಾಂತಿ ನೆಲೆಸಿತ್ತು. ಲಾಕ್ಡೌನ್ ಎಂಬ ಹಠಾತ್ ಎಡವಟ್ಟಿನಿಂದಾಗಿ ಅದೆಷ್ಟೊ ಲಕ್ಷ ಕಾರ್ಮಿಕರು ನೆಲೆತಪ್ಪಿ ಗುಳೆ ಹೊರಟು, ಘನಘೋರ ಸಂಕಷ್ಟಗಳಿಗೆ ತುತ್ತಾಗಿದ್ದನ್ನು ಬಿಟ್ಟರೆ , ಅಭಿವೃದ್ಧಿಯ ಭರಾಟೆಯಿಂದ ನಲುಗಿದ್ದ ನೆಲ-ನೀರು-ಗಾಳಿ-ವನ್ಯಜೀವ ಎಲ್ಲವೂ ತುಸು ಉಸಿರಾಡತೊಡಗಿದವು.

ಕೊರೊನಾ ನಂತರ ಹೊಸ ಭಾರತ ಉದಯಿಸಲಿದೆ ಎಂದು ನಮ್ಮಲ್ಲಿ ಅನೇಕರು ಸಣ್ಣ ಆಸೆಯನ್ನಿಟ್ಟುಕೊಂಡಿದ್ದರು. ಆದರೆ ಈಗಿನ ಸರಕಾರ ರಣವೈದ್ಯದ ವೈಖರಿ ನೋಡಿದರೆ, ಕಾಯಿಲೆಯ ನೆಪದಲ್ಲಿ ದುರ್ಬಲರನ್ನು (ಅಂದರೆ ಉದ್ಯೋಗ ಕಳಕೊಂಡವರನ್ನು, ನಡೆನಡೆದು ಸುಸ್ತಾದವರನ್ನು, ಹಸಿದವರನ್ನು) ಕಂದಕಕ್ಕೆ ದೂಡಿ ಮಣ್ಣು ಮುಚ್ಚಲು ಹೊರಟಂತೆ ಕಾಣುತ್ತದೆ. ನಮ್ಮಲ್ಲಿ ಹಕ್ಕಿಜ್ವರ ಬಂತೆಂದು ಹ್ಯಾಚರಿಯ ಸಾವಿರಾರು ಕೋಳಿಗಳನ್ನು ಕಂದಕಕ್ಕೆ ಹಾಕಿ ಮಣ್ಣು ಮುಚ್ಚಿದ ಹಾಗೆ.

(ಇಲ್ಲೊಂದು ಕ್ರೂರ ವ್ಯಂಗವಿದೆ: ಪ್ರಧಾನಿ ಮೋದಿಯವರು ಘೋಷಿಸಿದ 20 ಲಕ್ಷ ಕೋಟಿಯಲ್ಲಿ ಯಾವಯಾವ ಬಾಬ್ತಿಗೆ ಎಷ್ಟೆಷ್ಟು ಎಂಬುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಲ್ಕು ಟ್ರಾಂಚ್‌ (tranche)ಗಳಲ್ಲಿ ಹಂಚಿದ್ದಾರೆ. ನಾಲ್ಕನೆಯ ಕಂತಿನಲ್ಲಂತೂ ಗಣಿಗಾರಿಕೆ ವಿಸ್ತರಣೆಗೆ, ರಕ್ಷಣಾ ಉತ್ಪಾದನೆ, ವಿಮಾನಯಾನ, ಬಾಹ್ಯಾಕಾಶ ಸಾಹಸಕ್ಕೆ ಇತ್ಯಾದಿಯಂತೆ.

ಟ್ರಾಂಚ್ ಎಂದರೆ ಹೋಳು ಅಥವಾ ಭಾಗ. ಆದರೆ ನೀವು ಗೂಗಲ್ ಕನ್ನಡ ನಿಘಂಟಿನಲ್ಲಿ ಅದರ ಅರ್ಥವನ್ನು ಹುಡುಕಿದರೆ ಟ್ರಾಂಚ್ ಎಂದರೆ ‘ಕಂದಕ’ trench ಎಂಬ ತಪ್ಪು ಅರ್ಥವಿದೆ, ಬೇಕಿದ್ದರೆ ನೋಡಿ. ನಿಜಕ್ಕೂ 40 ಕೋಟಿ ಜನರನ್ನು ಕಂದಕಕ್ಕೆ ಬೀಳಿಸಿ ತಪ್ಪನ್ನೇ ಸರಿಯೆಂದು, trancheನ್ನೇ trench ಎಂದು ತೋರಿಸುವ ಹುನ್ನಾರವೆ?.)

ಹಳ್ಳಿಯ ಜನರು ಹಳ್ಳಿಗೇ ಮರಳಿ ವಲಸೆ ಬಂದಾಗ ಎಷ್ಟೊಂದು ವಿಧಗಳಲ್ಲಿ ಅವರಿಗೆ ನೆರವಾಗಲು ಸಾಧ್ಯವಿತ್ತು. ಅದರ ಕೆಲವು ಯಶಸ್ವೀ ಉದಾಹರಣೆಗಳು ನಮ್ಮಲ್ಲಿವೆ: ಮಹಾರಾಷ್ಟ್ರದಲ್ಲಿ ಹೀವ್ಡೆ ಬಝಾರ್ ಎಂಬ ಗ್ರಾಮವಿದೆ. ನಮ್ಮ ಕೋಲಾರದ ಯಾವುದೇ ಊರಿನ ಹಾಗೆ ಬರೀ 430 ಮಿ.ಮೀ. ಮಳೆ ಬೀಳುವ ಹಳ್ಳಿ.

1980ರ ದಶಕದಲ್ಲಿ ಬಹಳಷ್ಟು ಜನ ದಿಕ್ಕೆಟ್ಟು ಉದ್ಯೋಗ ಹುಡುಕಿ ಮುಂಬೈಗೋ ಪುಣೆಗೋ ಹೋದರು. ಆ ಊರಿನ ಪುಣ್ಯಾತ್ಮನೊಬ್ಬ ಸರಪಂಚನೆಂದು ಆಯ್ಕೆಯಾದ. ಮಳೆಕೊಯ್ಲು ಮಾಡಿಸಿದ. ಗಿಡಮರ ನೆಡಿಸಿದ. ಅಂತರ್ಜಲ ಹೆಚ್ಚಿತು. ಊರು ನಳನಳಿಸಿತು. ಕೃಷಿ, ಕುರಿಸಾಕಣೆ, ಡೇರಿ ಎಲ್ಲಕ್ಕೂ ಚೈತನ್ಯ ಬಂತು.

ಗುಳೆ ಹೋದವರು ಮರಳಿ ಬಂದರು. ಇಂದು ಆ ಊರಲ್ಲಿ (ನಂಬಿ ಇದನ್ನು) ಬಡತನದ ರೇಖೆಗಿಂತ ಕೆಳಗಿದ್ದ 135 ಕುಟುಂಬಗಳು ಮೇಲೆದ್ದು ಬಂದಿವೆ, 60 ಜನರು ದಶಲಕ್ಷಾಧೀಶರಾಗಿದ್ದಾರೆ. ಸರಕಾರಿ ಇಲಾಖೆಗಳ ಅಧಿಕಾರಿಗಳಿಗೆ ಈ ಊರೇ ಈಗ ಪ್ರವಾಸೀ ತಾಣವಾಗಿದೆ. ಬೇಕಿದ್ದರೆ Hewre Bazar ಎಂದು ಅಂತರಜಾಲದಲ್ಲಿ ಹುಡುಕಿ ನೋಡಿ.
ನಗರಮುಖೀ ವಲಸೆಯನ್ನು ಹೀಗೆ ಹಿಮ್ಮೊಗ ತಿರುಗಿಸಲು ಸಾಧ್ಯವೆಂದು ಮೊದಲು ತೋರಿಸಿದವರು ಅಣ್ಣಾ ಹಜಾರೆ ಮತ್ತು ರಾಜೇಂದ್ರ ಸಿಂಗ್.

ತಮ್ಮ ಊರಿನ ನೀರು, ನೆಲ, ಗಾಳಿ, ಬೆಳಕನ್ನೇ ಸಂಪತ್ತನ್ನಾಗಿ ಬಳಸಿಕೊಂಡು ಗ್ರಾಮದ ಸಮೃದ್ಧಿಗೆ ಕಾರಣರಾದ ಬೇರೆ ನೂರಾರು ಜನರ ಉದಾಹರಣೆಗಳು ನಮ್ಮಲ್ಲಿವೆ. ಕೊಯಮತ್ತೂರಿನ ಸಮೀಪದ ಒಡಂತ್ತುರೈ ಗ್ರಾಮ ತನ್ನ ಬಿಸಿಲಿನಿಂದ ಬರುವ ವಿದ್ಯುತ್ತನ್ನೇ ಮಾರಾಟ ಮಾಡುತ್ತ ಗ್ರಾಮಪಂಚಾಯತನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದೆ.

ಕಳೆದ ನಾಲ್ಕು ವರ್ಷಗಳಿಂದ ಆಮಿರ್ ಖಾನ್ ಆರಂಭಿಸಿದ ವಾಟರ್ ಕಪ್ ಮಳೆಕೊಯ್ಲಿನ ಸ್ಪರ್ಧೆಯಿಂದಾಗಿ ಮಹಾರಾಷ್ಟ್ರದಲ್ಲಿ ಅನೇಕ ಹಳ್ಳಿಗಳಲ್ಲಿ ಜಲ ಸಂವರ್ಧನೆ ಆಗಿದ್ದು, ಊರು ಬಿಟ್ಟು ಹೋದವರು ಮರಳಿ ಬರುತ್ತಿದ್ದಾರೆ. ಟ್ಯಾಂಕರ್ ನೀರನ್ನೇ ಆಧರಿಸಿದ್ದ ಬರಪೀಡಿತ ಹಳ್ಳಿಗಳು ಈಗ ತಮ್ಮ ಬಳಿಯ ಹೆಚ್ಚುವರಿ ನೀರನ್ನು ನಗರಕ್ಕೂ ಪೂರೈಸಲು ಮುಂದಾಗಿವೆ. ಇಂಧನ ವನಗಳನ್ನು ಸೃಷ್ಟಿಸಿ ನಗರಗಳಿಗೆ ಬಯೊಡೀಸೆಲ್ಲನ್ನೂ ಒದಗಿಸುವ ಕನಸು ಕಾಣುತ್ತಿದ್ದಾರೆ.

ಇಂಥ ಸ್ವಾವಲಂಬಿ ಗ್ರಾಮಗಳ ಒಂದು ಉದಾಹರಣೆಯೂ ಸರಕಾರದ ಗಮನಕ್ಕೆ ಬರಲೇ ಇಲ್ಲವೆ? ಗ್ರಾಮೀಣ ಜಲಸಂಪತ್ತನ್ನು ಹೆಚ್ಚಿಸುವ ಸರಳ ವಿಧಾನ ಅದಕ್ಕೆ ಗೊತ್ತೇ ಇಲ್ಲವೆ?
ಸರಕಾರ ಮನಸ್ಸು ಮಾಡಿದರೆ, ತಾಲ್ಲೂಕು ಮಟ್ಟದಲ್ಲೇ ಉತ್ತಮ ಗುಣಮಟ್ಟದ ಸಾಬೂನು, ಟೂಥ್ಪೇಸ್ಟ್, ಸೊಳ್ಳೆಪರದೆ, ಸೊಳ್ಳೆಬತ್ತಿ, ಶಾಂಪೂ, ಸುಗಂಧ ತೈಲ, ಪೇಯ, ಪ್ಯಾರಾಸಿಟೆಮಾಲ್, ಆಯುರ್ವೇದ ಔಷಧಗಳು, ಅಷ್ಟೇಕೆ ಗ್ರಾಮಗಳಿಗೆ ಬೇಕಾದ ಪ್ಲಾಸ್ಟಿಕ್ ಚಪ್ಪಲಿಗಳಿಂದ ಹಿಡಿದು ಕೃಷಿ ಸಲಕರಣೆ, ರಸಗೊಬ್ಬರಗಳ ಉತ್ಪಾದನೆಗೆ ಪ್ರೋತ್ಸಾಹ ನೀಡಬಹುದಿತ್ತು.

ಇವನ್ನೆಲ್ಲ ಬೃಹತ್, ನಗರಕೇಂದ್ರಿತ ಉದ್ಯಮಗಳ ಮುಷ್ಟಿಯಿಂದ ತಪ್ಪಿಸಿ ತಾಲ್ಲೂಕು ಮಟ್ಟಕ್ಕೆ ತಂದು ಸ್ಥಳೀಯರಿಗೆ ಉದ್ಯೋಗ ಸಿಗುವಂತೆ ಮಾಡಿ, ವಾಣಿಜ್ಯ ರಂಗದ ಅಸಲೀ ಸ್ವಾವಲಂಬನೆ ಸಾಧಿಸಬಹುದಿತ್ತು. ಅದರ ಬದಲಿಗೆ ಖನಿಜ ಮತ್ತು ಕಲ್ಲಿದ್ದಲ ಗಣಿಗಾರಿಕೆಗೆ ಹೆಬ್ಬಾಗಿಲು ತೆರೆಯಲಿದೆ.

ಕಲ್ಲಿದ್ದಲು ಎಂಬುದೇ ಮಹಾ ವಿಷವೃತ್ತ. ನಮ್ಮ ಎಲ್ಲ ಕಲ್ಲಿದ್ದಲ ನಿಕ್ಷೇಪಗಳೂ ಛತ್ತೀಸಗಢ, ಝಾರ್ಖಂಡ್, ಬಿಹಾರ್‌ನ ದಟ್ಟ ಅರಣ್ಯಗಳಲ್ಲಿವೆ. ಅಲ್ಲಿ ಆದಿವಾಸಿಗಳೂ ಮೂಲನಿವಾಸಿಗಳೂ ಇದ್ದಾರೆ. ಅವರನ್ನೆಲ್ಲ ಗುಡಿಸಿ ಒತ್ತಿ, ಜೀವಲೋಕವನ್ನು ಧ್ವಂಸ ಮಾಡಿ, ತೆರೆದ ಗಣಿಗಳ ಮೂಲಕ ಕಲ್ಲಿದ್ದಲನ್ನು ಸ್ಫೋಟಿಸಿ, (ಚಿತ್ರವನ್ನು ಗಮನಿಸಿ) ನೂರಾರು ಉಷ್ಣವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೆ ಹೊಮ್ಮುವ ಕಾರ್ಬನ್ ಡೈಆಕ್ಸೈಡ್‌ ಇಡೀ ಜಗತ್ತಿಗೇ ಮಾರಕ.

ಹಾರುಬೂದಿ, ಸೆಕೆ ಹೆಚ್ಚಳ, ಜಲಮಾಲಿನ್ಯ ಒಂದಲ್ಲ, ಎರಡಲ್ಲ. ಅಲ್ಲಿಂದ ಪಡೆದ ವಿದ್ಯುತ್ತು ನಗರಗಳ ಮಾಲ್‌ಗಳಿಗೆ.ಮತ್ತು ತರಾವರಿ ಯಂತ್ರಗಳಿಗೆ, ಕೊಳ್ಳುಬಾಕ ಶೋಕಿ ವಸ್ತುಗಳ ಉತ್ಪಾದನೆಗೆ ಹೋಗುತ್ತದೆ. ಅದರ ಲಾಭವೆಲ್ಲ ತಿರ್ಗಾ ಕೋಟ್ಯಧೀಶ ಉದ್ಯಮಿಗಳಿಗೆ.

ನಿಸರ್ಗ ಸಂಪತ್ತನ್ನು ಹೀಗೆ ಲೂಟಿ ಮಾಡಲು ದೊಡ್ಡ ಕಂಪನಿಗಳಿಗೆ ಅನುವು ಮಾಡಿಕೊಡಲೆಂದೇ ತೆರಿಗೆದಾರರ 50 ಸಾವಿರ ಕೋಟಿ ಮೀಸಲಿಡುವುದಾಗಿ ಸರಕಾರ ಘೋಷಿಸಿದೆ. ಅದಕ್ಕೆಂದು ಪರಿಸರ ಸಂರಕ್ಷಣೆಯ ಬಿಗಿ ಕಾನೂನುಗಳನ್ನು ಸಡಿಲ ಮಾಡುವ ಸಿದ್ಧತೆ ಆಗಲೇ ನಡೆದಿದೆ.

ನಿಸರ್ಗದ ದುರಂತ ಕತೆ ಹೀಗೆ. ಹಾಗಿದ್ದರೆ ಮನುಷ್ಯರ ಕತೆ? ಈ ರಣವೈದ್ಯ ಮಾಡಿದರೆ 40 ಕೋಟಿ ಬಡ, ಕಡುಬಡವರ ಹಾಗು ಆದಿವಾಸಿಗಳ ಸ್ಥಿತಿಗತಿ ಉತ್ತಮಗೊಂಡೀತೆ? ಅದೂ ಇಲ್ಲ.
ಮೂಲ ನಿವಾಸಿಗಳಿಗೆ ಅರಣ್ಯಾಧಾರಿತ ಉದ್ಯೋಗ ಕೊಡಲೆಂದು 6000 ಕೋಟಿ ಮೀಸಲಿದೆಯಂತೆ. ಅದರ ಕತೆ ಕೇಳಿ. ಅದು ಖಾಸಗಿಯ ಕಂಪನಿಗಳ ಜಂಟಿ ಯೋಜನೆಯಂತೆ. ಅಂದರೆ ಅರಣ್ಯಗಳಿಗೂ ಕೋಟ್ಯಧೀಶರು ಲಗ್ಗೆ ಇಡಲಿದ್ದಾರೆ. ಮೂಲನಿವಾಸಿಗಳ ಜಮೀನನ್ನು ಮುಗಿಸಿದ ನಂತರ ಮುಂದೇನು ಆದೀತೆಂದು ನಾವು ಊಹಿಸಬಹುದು.

ಆದಿವಾಸಿಗಳ ಕಲ್ಯಾಣವೇ ಮುಖ್ಯ ಗುರಿಯಾಗಿದ್ದಿದ್ದರೆ ಈಗಿರುವ ನರೇಗಾ ಸ್ಕೀಮನ್ನೇ ಸುಧಾರಿಸಿ ಅವರಿಗೂ ವಿಸ್ತರಿಸಬಹುದಿತ್ತು. ಗಿಡ ನೆಡುವ, ಬೇಲಿ ಕಂದಕಗಳಂಥ ಭದ್ರತಾ ಕೆಲಸವನ್ನು ಅವರೇ ಮಾಡಬಹುದಿತ್ತು. ಹಳ್ಳಿಗಳಲ್ಲೂ ನರೇಗಾ ದುಡಿಮೆಯ ಅವಧಿಯನ್ನು ಈಗಿನ 100 ದಿನಗಳ ಬದಲು 200-300 ಅಥವಾ ಅಗತ್ಯವಿದ್ದಷ್ಟು ದಿನಗಳಿಗೆ ವಿಸ್ತರಿಬಹುದಿತ್ತು. ಅದರತ್ತ ಆದ್ಯತೆಯೇ ಇಲ್ಲ.

ಅಷ್ಟೊಂದು ಜನರು ಹಳ್ಳಿಗಳಿಗೆ ಹಿಂದಿರುಗಿದ್ದಾರೆ. ಅವರಿಂದ ಎಷ್ಟೊಂದು ಗ್ರಾಮೀಣ ಅಭಿವೃದ್ಧಿಯ ಕೆಲಸ ಮಾಡಿಸಬಹುದಿತ್ತು. ಹಳ್ಳಿಗಳಿಗೆ ಹಿಂದಿರುಗಿದ ಆ ನತದೃಷ್ಟರಿಗೆ ಯಾವ ನೆರವೂ ಇಲ್ಲ. ನಗರ ನಿರ್ಮಾಣದಲ್ಲಿ ತೊಡಗಿದ್ದ ಅವರಲ್ಲಿ ಅನೇಕರು ಹಿಂದೆಲ್ಲ ಚುನಾವಣೆ ಬಂದಾಗ ತಮ್ಮದೇ ಖರ್ಚಿನಲ್ಲಿ ಊರಿಗೆ ಹೋಗಿ ಮತ ಹಾಕಿ ಈ ಸರಕಾರವನ್ನು ನಿಲ್ಲಿಸಿದವರು. ಪ್ರಧಾನಿಯವರ ಒಂದು ಅವಸರದ ಲಾಕ್‌ಡೌನ್‌ ಘೋಷಣೆಯಿಂದಾಗಿ ಇಡೀ ಜಗತ್ತೇ ಕಂಬನಿ ಮಿಡಿಯುವಂಥ ದುರ್ದೆಸೆಗೆ ಈಡಾದವರು. ಅವರ ಕೈ ಹಿಡಿಯುವ ಬದಲು ಬಹುಕೋಟ್ಯಧೀಶರ ಕೈ ಹಿಡಿಯಲು ಸರಕಾರ ಹೊರಟಿದೆ.

ದೇಶದ 20 ಕೋಟಿ ಮಹಿಳೆಯರ ಜನ್‌ಧನ್ ಖಾತೆಗೆ ತಿಂಗಳಿಗೆ 500 ರೂ. ಜೊತೆಗೆ 80 ಕೋಟಿ ಜನರಿಗೆ 6 ಕಿಲೊ ಧಾನ್ಯವನ್ನು ಮೂರು ತಿಂಗಳ ಅವಧಿಗೆ ಕೊಡುವುದಾಗಿ ಸರಕಾರ ಮಾರ್ಚ್‌ನಲ್ಲಿ ಹೇಳಿತ್ತು. ಅದನ್ನು ಇನ್ನೂ ಮೂರು ತಿಂಗಳಿಗೆ ವಿಸ್ತರಿಸಬಹುದಿತ್ತು. ಈ ತೀರಾ ಜುಜುಬಿ ಸಹಾಯದ ಮೊತ್ತವನ್ನು ಹೆಚ್ಚಿಸಬಹುದಿತ್ತು. ಹೆಚ್ಚಿಸುವುದು ಹಾಗಿರಲಿ, ಸರಕಾರದ್ದೇ ದಾಖಲೆಗಳ ಪ್ರಕಾರ ಈ ನೆರವೂ ಶೇ. 25ರಷ್ಟು ಜನರಿಗೆ ಮಾತ್ರ ತಲುಪಿದೆ. ಕೇವಲ 110 ಲಕ್ಷ ಟನ್ ಧಾನ್ಯ ಮಾತ್ರ ವಿತರಣೆಯಾಗಿದೆ.

ಹಾಗೆಂದು ನಮ್ಮ ದೇಶ ಅಷ್ಟೊಂದು ದರಿದ್ರ ಸ್ಥಿತಿಯಲ್ಲೇನೂ ಇಲ್ಲ. ತಜ್ಞರ ಲೆಕ್ಕಾಚಾರದ ಪ್ರಕಾರ ಕೆಲಸ ಕಳೆದುಕೊಂಡವರಿಗೆ ತಿಂಗಳಿಗೆ 7 ಸಾವಿರ ನಗದು ಮತ್ತು ದೇಶದ ಶೇ. 80ರಷ್ಟು ಜನಕ್ಕೆ ತಿಂಗಳಿಗೆ ಹತ್ತು ಕಿಲೊ ಧಾನ್ಯದಂತೆ ಆರು ತಿಂಗಳವರೆಗೆ ಉಚಿತವಾಗಿ ಕೊಟ್ಟಿದ್ದರೂ ನಮ್ಮ ಜಿಡಿಪಿಯ ಕೇವಲ 3%ರಷ್ಟು ವೆಚ್ಚವಾಗುತ್ತಿತ್ತು. ಅದನ್ನಂತೂ ಮಾಡಲಿಲ್ಲ. ತನ್ನ ಬಹುತೇಕ ವೈಫಲ್ಯಗಳಿಗೆ ರಾಜ್ಯಗಳನ್ನು ದೂರುವುದನ್ನು ಬಿಟ್ಟು ಸರಕಾರ ಏನನ್ನೂ ಮಾಡಲಿಲ್ಲ. ರಾಜ್ಯಗಳಿಗೂ ಸಿಗಬೇಕಾದ ಧನಸಹಾಯವನ್ನು ಪೂರ್ತಿ ನೀಡಲಿಲ್ಲ.

ಈಗ ಟ್ರಾಂಚ್ 3ರ ಕತೆ ಕೇಳಿ.
ಸಣ್ಣ ಮತ್ತು ಮಧ್ಯಮ ಉದ್ಯಮ(MSME)ಗಳು ಚೇತರಿಸಿಕೊಳ್ಳಲೆಂದು 3.7 ಲಕ್ಷ ಕೋಟಿ ಸಾಲ ಕೊಡುವುದಾಗಿ ಸರಕಾರ ಹೇಳಿದೆ. ಅದು ಆಮೇಲಾಗಲಿ, ಈವರೆಗೆ ಸಂದಾಯವಾಗಬೇಕಿದ್ದ 5 ಲಕ್ಷ ಕೋಟಿ ಬಾಕಿ ಹಣವನ್ನು ಮೊದಲು ಕೊಡ್ರಪ್ಪಾ ಎಂದು MSME ಗಳು ಕೇಳುತ್ತಿವೆ. ಅದಂತೂ ಬಾಕಿ ಇದೆ. ಈ ಹೊಸ ಸಾಲವನ್ನು ಪಡೆದು ಉತ್ಪಾದನೆ ಆರಂಭಿಸೋಣವೆಂದರೆ ಕಾರ್ಮಿಕರು ಎಲ್ಲಿದ್ದಾರೆ? ಅಂದಾಜು 12 ಕೋಟಿ ಕಾರ್ಮಿಕರು ಕೆಲಸ ಕಳೆದುಕೊಂಡು ತಂತಮ್ಮ ಹಳ್ಳಿಗಳಿಗೆ ಹೋಗಿದ್ದಾರೆ.

ಅವರು ಮರಳಿ ಬಾರದಂತೆ ಮಾಡಲು ಹೊಸ ಕಾರ್ಮಿಕ ನೀತಿಗಳನ್ನು ಜಾರಿಗೆ ತರಲು ಸರಕಾರ ಹೊರಟಿದೆ. ಕೆಲಸಗಾರರ ಹಕ್ಕುಗಳನ್ನೇ ಮೊಟಕುಗೊಳಿಸಿ ಅವರ ದುಡಿಮೆಯ ಅವಧಿಯನ್ನು 50% ಜಾಸ್ತಿ ಮಾಡುತ್ತಾರಂತೆ. ಸರಿ, ಕಾರ್ಮಿಕರು ಹೇಗೋ ಬಂದು ಉತ್ಪಾದನೆ ಆರಂಭಿಸಿದರೂ ಫ್ಯಾಕ್ಟರಿಯ ಉತ್ಪನ್ನಗಳನ್ನು ಖರೀದಿಸಲು ಜನರ ಬಳಿ ಹಣ ಎಲ್ಲಿದೆ? ಅದಕ್ಕೆ ಈಗ ಟ್ರಾಂಚ್‌ 4ನ್ನು ಹಣಕಾಸು ಸಚಿವೆ ಘೋಷಣೆ ಮಾಡಿದೆ.

ಹಣದ ಚಲಾವಣೆ ಹೆಚ್ಚಿಸಲೆಂದೇ ಎಗ್ಗಿಲ್ಲದ ಗಣಿಗಾರಿಕೆ, ಹೊಸ ವಿಮಾನ ನಿಲ್ದಾಣ ನಿರ್ಮಾಣ, ರಕ್ಷಣಾ ಸಾಮಗ್ರಿ ಉತ್ಪಾದನೆ, ಬಾಹ್ಯಾಕಾಶ ಎಲ್ಲವನ್ನೂ ಖಾಸಗಿ ಕಂಪನಿಗಳಿಗೆ ವಹಿಸುತ್ತಾರಂತೆ. ಲಾಕ್‌ಡೌನ್‌ ಸಡಿಲವಾಗುವ ಮೊದಲೇ ದೇಶದ ಹಿತಾಸಕ್ತಿಯನ್ನು ಕಾಯಬೇಕಿದ್ದ ನಿಯಮಗಳನ್ನೇ ಸಡಿಲ ಮಾಡಲಾಗುತ್ತಿದೆ.

ಅದಕ್ಕೇ, ‘ವಲಸಿಗರಿಗೆ ಮನೆ ತಲುಪಲು ಸಾಧ್ಯವಾಗುತ್ತಿಲ್ಲ; ಬಾಹ್ಯಾಕಾಶಕ್ಕೆ ಹೋಗಲು ಧನಿಕರಿಗೆ ಅನುಕೂಲ ಮಾಡುತ್ತಾರಂತೆ’ ಎಂದು ಜೈರಾಮ್ ರಮೇಶ್ ಕುಟುಕಿದ್ದಾರೆ. ಯಾರೆಷ್ಟೇ ಕುಟಕಿದರೂ ಪ್ರಭುತ್ವಕ್ಕೆ ವಂದಿಮಾಗಧರ ಮತ್ತು ಬಹುಕೋಟ್ಯಧೀಶರ ಭೋಪರಾಕ್ ಮಾತ್ರ ಕೇಳಿಸುತ್ತದೆ. ಕಂದಕಕ್ಕೆ ಕುಸಿದವರ ಆಕ್ರಂದನ ಮಾತ್ರ ಕೇಳಿಸುತ್ತಿಲ್ಲ.

ಅರಣ್ಯವಾಸಿಗಳನ್ನು ಹೊರಗಟ್ಟುವ ಗಣಿಗುತ್ತಿಗೆದಾರರ ಷಡ್ಯಂತ್ರದ ವಿರುದ್ಧ ಆದಿವಾಸಿಗಳ ಒಂದು ಸೊಗಸಾದ ಪ್ರತಿಭಟನಾ ಲಾವಣಿಯನ್ನು ಈ ಕೊಂಡಿಯಲ್ಲಿದೆ: ಕ್ಲಿಕ್ ಮಾಡಿ ನೋನೋಡಿ

https://www.youtube.com/watch?v=sFmsl7KrZn8

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

Published

on

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.

ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.

ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ,‌ ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.

ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.

ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.

ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.

ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ‌ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.

ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ‌ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.

*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿ‌ಸಚಿವ ಎಚ್.ಆಂಜನೇಯ ‌ಅಧಿಕಾರಿಗಳೊಂದಿಗೆ ಭೇಟಿ‌ ನೀಡಿ‌ ಪರಿಶೀಲಿಸಿದರು.

Continue Reading

ದಿನದ ಸುದ್ದಿ

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

Published

on

ಮುಖ್ಯಾಂಶಗಳು


ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ

​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ

ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್

ಸುದ್ದಿದಿನ,​ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.

​ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.

ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ತನಿಖೆ ಎದುರಿಸುತ್ತಿರುವವರು

ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.

ಕಚೇರಿಯಲ್ಲಿ ತಪಾಸಣೆ

ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.

​ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

Published

on

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.

ಅವರು ಸೋಮವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲೂ ಕೂಡ ಸಾಮೂಹಿಕವಾಗಿ ಫಾರಂ ವಿತರಣೆ ಮಾಡುತ್ತಿಲ್ಲ ಮತ್ತು ಮಾಡುವುದೂ ಇಲ್ಲ, ಕೆಲವು ಬೂತ್‌ಗಳಲ್ಲಿ ಸಾರ್ವಜನಿಕರೇ ಗುಂಪುಗೂಡಿ ಇಲ್ಲೇ ಫಾರಂ ನೀಡಿ ಎಂದು ಕೇಳಿರುವ ಉದಾಹರಣೆಗಳು ಇವೆಯೇ ಹೊರತು, ಇಲಾಖೆಯಿಂದ ಸಾಮೂಹಿಕ ವಿತರಣೆ ನಡೆದಿಲ್ಲ ಎಂದರು.

ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ಲಿಖಿತ ಸೂಚನೆ ಹಾಗೂ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಅವರು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಮನೆಗೆ ಭೇಟಿ ನೀಡಿ ಫಾರಂಗಳನ್ನು ವಿತರಿಸುವರು. ಭೇಟಿ ನೀಡಿದ ನಂತರ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಬೇಕೆಂದು ಆದೇಶಿಸಲಾಗಿದೆ. ಹಳ್ಳಿಗಳಲ್ಲಿ ಹಾಗೂ ಕೆಲವು ಕಡೆ ಸಾರ್ವಜನಿಕರು ತಮ್ಮ ಫಾರಂಗಳನ್ನು ಬೇಗ ಮಾಡಿಕೊಡಿ ಎಂದು ಬಿ.ಎಲ್.ಓಗಳ ಬಳಿ ಗುಂಪುಗೂಡುತ್ತಿರುವುದು ಕಂಡುಬಂದಿದೆ. ಆದರೆ, ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲು ನಮ್ಮ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಪೂರ್ಣ ತಂಡವು ಬಿ.ಎಲ್.ಓ.ಗಳಿಗೆ ನೆರವಾಗಲಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 40 ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ನೇರವಾಗಿ ಈ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಫಾರಂಗಳನ್ನು ಭರ್ತಿ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಫಾರಂಗಳನ್ನು ಕಡ್ಡಾಯವಾಗಿ ಬಿ.ಎಲ್.ಓ.ಗಳಿಗೆ ಹಸ್ತಾಂತರಿಸಬೇಕು ಎಂದರು
ರಾಷ್ಟ್ರೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿ.ಎಲ್.ಎ (ಬೂತ್ ಮಟ್ಟದ ಏಜೆಂಟ್‌ಗಳು) ಸಾರ್ವಜನಿಕರಿಗೆ ಫಾರಂ ಭರ್ತಿ ಮಾಡಲು ಸಹಾಯ ಮಾಡಬಹುದು. ಅವರು ಮೊದಲ ಹಂತದಲ್ಲಿ ತಲಾ 50 ಫಾರಂಗಳನ್ನು ಸಂಗ್ರಹಿಸಿ, ಭರ್ತಿ ಮಾಡಿ ನಮ್ಮ ಬಿ.ಎಲ್.ಓ.ಗಳಿಗೆ ತಂದುಕೊಡಲು ಅವಕಾಶ ಕಲ್ಪಿಸಲಾಗಿದೆ. ಇದು ಗುಂಪಾಗಿ ಮಾಡುವುದಲ್ಲ, ಬದಲಿಗೆ ಮನೆ ಮನೆಗೆ ಹೋಗಿ ಬಿ.ಎಲ್.ಓಗಳ ಸಹಯೋಗದೊಂದಿಗೆ ಮಾಡುವ ಕಾರ್ಯವಾಗಿದೆ ಎಂದರು.

ಸಹಿ ಮಾಡುವ ಪ್ರಕ್ರಿಯೆಯು ಮತದಾರರದ್ದೇ ಆಗಿರುತ್ತದೆ. ಮೊಬೈಲ್ ಬಳಸಲು ಬಾರದ ಅನಕ್ಷರಸ್ಥರಿಗೆ ಅಥವಾ ತಾಂತ್ರಿಕ ತೊಂದರೆ ಇರುವವರಿಗೆ ಬಿ.ಎಲ್.ಓ ಹಾಗೂ ಬಿ.ಎಲ್.ಎ.ಗಳು ಸಹಾಯ ಮಾಡಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಅಡಿಯಲ್ಲೇ ನಮ್ಮ ಇಡೀ ತಂಡ ಕೆಲಸ ಮಾಡುತ್ತಿದೆ ಎಂದರು.

ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಶಿಫ್ಟ್ ಮಾಡಿಕೊಂಡಿರುವ ಮತದಾರರು, ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ. ಅಂತಹ ಮತದಾರರು ‘ಫಾರಂ-8’ ಅನ್ನು ಸಲ್ಲಿಸುವ ಮೂಲಕ ತಮ್ಮ ವಿಳಾಸವನ್ನು ಸುಲಭವಾಗಿ ಬದಲಾಯಿಸಿಕೊಳ್ಳಬಹುದು ಎಂದರು.

ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಒಂದು ವೇಳೆ ತಪ್ಪಾಗಿ ಮ್ಯಾಪಿಂಗ್ ಆಗಿದ್ದರೆ ಅಥವಾ ತಂದೆ-ತಾಯಿಯ ಹೆಸರುಗಳಲ್ಲಿ ತಪ್ಪುಗಳಾಗಿದ್ದರೆ, 2002ರ ಹಳೆಯ ವೋಟರ್ ಐಡಿ ವಿವರಗಳ ಆಧಾರದ ಮೇಲೆ ಬಿ.ಎಲ್.ಓ ಮೊಬೈಲ್ ಆಪ್ (BLO Mobile App) ಮೂಲಕ ತಿದ್ದುಪಡಿ ಹಾಗೂ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

18 ವರ್ಷ ತುಂಬಿರುವ ಅರ್ಹ ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದ ಫಾರಂಗಳನ್ನು ಪಡೆದು ಭರ್ತಿ ಮಾಡಬಹುದಾಗಿದೆ. ಇದಕ್ಕಾಗಿ ಸಾರ್ವಜನಿಕರು ಯಾರೂ ಮತಗಟ್ಟೆಗಳನ್ನಾಗಲಿ ಅಥವಾ ಬಿ.ಎಲ್.ಓಗಳನ್ನಾಗಲಿ ಹುಡುಕಿಕೊಂಡು ಹೋಗುವ ಅಗತ್ಯವಿಲ್ಲ, ನಾವೇ ನಿಮ್ಮ ಮನೆ ಬಾಗಿಲಿಗೆ ಬರುತ್ತೇವೆ ಎಂದು ತಿಳಿಸಿದರು.

ಅನಾಥಾಶ್ರಮಗಳಲ್ಲಿರುವ ಹಾಗೂ ತಂದೆ-ತಾಯಿಯರ ಮಾಹಿತಿ ಇಲ್ಲದವರಿಗೂ ಸಹ ಮತದಾನದ ಹಕ್ಕನ್ನು ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಕ್ರಮ ಕೈಗೊಂಡಿದೆ. ಸರ್ಕಾರಿ ಅನಾಥಾಶ್ರಮವೊಂದರಲ್ಲಿರುವ 43 ಯುವಕರು 2025ನೇ ಇಸವಿಯಲ್ಲೂ ಮತದಾರರ ಪಟ್ಟಿಯಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರವೇ ಅವರಿಗೆ ಪೋಷಕರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರೆ ಅವರ ಅಧಿಕೃತ ಪೋಷಕರಾಗಿರುತ್ತಾರೆ ಎಂದರು.

ದೇವದಾಸಿಯರಂತಹ ಪ್ರಕರಣಗಳಲ್ಲಿ ತಂದೆಯ ವಿವರಗಳು ಲಭ್ಯವಿಲ್ಲದಿದ್ದರೆ, ತಾಯಿಯ ವಿವರಗಳನ್ನು ನೀಡಿ ಹೆಸರು ನಮೂದಿಸಲು ಅವಕಾಶವಿದೆ. ಇನ್ನು ಕೆಲವು ಸಂದರ್ಭಗಳಲ್ಲಿ ತಂದೆ-ತಾಯಿ ಇಬ್ಬರೂ ಇಲ್ಲದಿದ್ದರೆ, ಅಂತವರು ತಮ್ಮ ಅಜ್ಜ ಅಥವಾ ಅಜ್ಜಿಯ ಹೆಸರನ್ನು ಸಂಬಂಧದ ಕಾಲಂನಲ್ಲಿ ನಮೂದಿಸಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗವು ಇಂತಹ ಎಲ್ಲಾ ಸವಾಲುಗಳಿಗೂ ಕಾನೂನಾತ್ಮಕವಾಗಿ ಹಾಗೂ ecinet ಮೊಬೈಲ್ ಆಪ್ ಮತ್ತು https://voters.eci.gov.in ಮೂಲಕ ಸೂಕ್ತ ಪರಿಹಾರವನ್ನು ಕಲ್ಪಿಸಿದೆ. ಹೀಗಾಗಿ ಯಾವುದೇ ಮತದಾರರು ಆತಂಕ ಪಡುವ ಅಗತ್ಯವಿಲ್ಲ. ಬಿ.ಎ.ಲ್.ಓ ಗಳು ಮನೆಗೆ ಬಂದಾಗ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸಾರ್ವಜನಿಕರು ಸ್ಪಂದಿಸಿ, ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಫಾರಂ ಹಂಚಿಕೆಯಲ್ಲಿ ರಾಜ್ಯದಲ್ಲೇ ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ; ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಪ್ರಗತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟಾರೆ ಶೇ. 94 ರಷ್ಟು ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಫಾರಂಗಳನ್ನು ಹಂಚಿಕೆ ಮಾಡುವ ಮೂಲಕ ದಾವಣಗೆರೆ ಜಿಲ್ಲೆಯು ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದು ಅಭೂತಪೂರ್ವ ಸಾಧನೆ ಮಾಡಿದೆ. ಇದೇ ವೇಳೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 99.81 ರಷ್ಟು ದಾಖಲೆ ಪ್ರಮಾಣದ ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಪಾರಂಗಳನ್ನು ಅತ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಲಾಗಿದ್ದು, ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಹಾಗೂ ಶೇ. 10.8 ರಷ್ಟು ಗಣಕೀಕರಣವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮನೆ ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹ ಪ್ರಗತಿಯಲ್ಲಿ

ದಾವಣಗೆರೆ ಜಿಲ್ಲೆಯಲ್ಲಿ ಜೂನ್‌ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಮುದ್ರಿಸಿ ಬಿಎಲ್‌ಓಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್‌ 06 ರಿಂದ ಜುಲೈ 29 ರ ಅವಧಿಯಲ್ಲಿ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.

ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮತ್ತು ಪ್ರಗತಿ ವಿವರ

ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್‌ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.

103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ. 105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ. 106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, 2,44,948 ನಮೂನೆಗಳನ್ನು ವಿತರಿಸಲಾಗಿದ್ದು, 7,120 ನಮೂನೆಗಳನ್ನು ಗಣಕೀಕರಿಸಲಾಗಿದೆ. 107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ. 108-ಮಾಯಕೊಂಡ: ಒಟ್ಟು 197,048 ಮತದಾರರಿದ್ದು, 196,486 ನಮೂನೆಗಳನ್ನು ವಿತರಿಸಲಾಗಿದ್ದು, 42,785 ನಮೂನೆಗಳನ್ನು ಗಣಕೀಕರಿಸಲಾಗಿದೆ. 109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ. 110- ಹೊನ್ನಾಳಿ ಒಟ್ಟು 2,00,033 ಮತದಾರರಿದ್ದು, 182,419 ನಮೂನೆಗಳನ್ನು ವಿತರಿಸಲಾಗಿದ್ದು, 12,350 ನಮೂನೆಗಳನ್ನು ಗಣಕೀಕರಿಸಲಾಗಿದೆ.

ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಮತದಾರರ ಗುರುತಿಸುವಿಕೆ ಪ್ರಗತಿ

ಜೂನ್‌ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ (Duplicate) ಪ್ರಕರಣಗಳಾಗಿವೆ.
ಜಗಳೂರು ಕ್ಷೇತ್ರದಲ್ಲಿ 122 ಪ್ರಕರಣಗಳನ್ನು ಗುರುತಿಸಲಾಗಿದ್ದು (2 ಗೈರು, 31 ಶಾಶ್ವತ ವಲಸೆ, 47 ಮರಣ, 40 ದ್ವಿಪ್ರತಿ, 2 ಇತರೆ), ಹರಿಹರ ಕ್ಷೇತ್ರದಲ್ಲಿ 149 ಪ್ರಕರಣಗಳು (2 ಗೈರು, 48 ಶಾಶ್ವತ ವಲಸೆ, 71 ಮರಣ, 26 ದ್ವಿಪ್ರತಿ, 2 ಇತರೆ), ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 246 ಪ್ರಕರಣಗಳು (5 ಗೈರು, 98 ಶಾಶ್ವತ ವಲಸೆ, 112 ಮರಣ, 31 ದ್ವಿಪ್ರತಿ), ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 235 ಪ್ರಕರಣಗಳು (6 ಗೈರು, 123 ಶಾಶ್ವತ ವಲಸೆ, 60 ಮರಣ, 44 ದ್ವಿಪ್ರತಿ, 2 ಇತರೆ), ಮಾಯಕೊಂಡ ಕ್ಷೇತ್ರದಲ್ಲಿ 337 ಪ್ರಕರಣಗಳು (4 ಗೈರು, 113 ಶಾಶ್ವತ ವಲಸೆ, 174 ಮರಣ, 45 ದ್ವಿಪ್ರತಿ,1 ಇತರೆ), ಚನ್ನಗಿರಿ ಕ್ಷೇತ್ರದಲ್ಲಿ 386 ಪ್ರಕರಣಗಳು (10 ಗೈರು, 139 ಶಾಶ್ವತ ವಲಸೆ, 167 ಮರಣ, 63 ದ್ವಿಪ್ರತಿ, 7 ಇತರೆ) ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 232 ಪ್ರಕರಣಗಳ (1 ಗೈರು, 89 ಶಾಶ್ವತ ವಲಸೆ, 120 ಮರಣ, 22 ದ್ವಿಪ್ರತಿ) ಗುರುತಿಸಿದೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಪಾರಂಗಳನ್ನು ನಮೂದಿಸಿ ಬಿ.ಎಲ್.ಓ ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ಕಾರ್ಯದರ್ಶಿ ಮಮತ ಹಸ ಗೌಡರ್‌, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಪಾಲಿಕೆ ಆಯುಕ್ತ ಮಹಾಂತೇಶ್‌ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending