Connect with us

ದಿನದ ಸುದ್ದಿ

ಬಾಣಲೆಯಿಂದ ಬೆಂಕಿಗೆ : ಕೊರೊನಾ ರಣವೈದ್ಯ ಬೆಳಕಿಗೆ

Published

on

ಚಿತ್ರ: ಛತ್ತೀಸಗಢದ ಅರಣ್ಯದ ಮಧ್ಯೆ ಅದಾನಿ ಕಂಪನಿಯ ಕಲ್ಲಿದ್ದಲ ಗಣಿಗಾರಿಕೆಯ ದೃಶ್ಯ | ಕೃಪೆ :qz.com
  • ನಾಗೇಶ್ ಹೆಗಡೆ

ಕೊರೊನಾಮಾರಿ ಬರುವ ಮೊದಲು ಭಾರತದ ನದಿಗಳೆಲ್ಲ ಕೊಳಕು ಕೂಪಗಳಾಗಿದ್ದವು. ವಾಯುಮಾಲಿನ್ಯ ದಟ್ಟವಾಗಿತ್ತು. ಟ್ರಾಫಿಕ್ ಗದ್ದಲ ಅತಿಯಾಗಿತ್ತು. ಕಾರ್ಖಾನೆಗಳು, ಗಣಿಗಳು ಲಂಗುಲಗಾಮಿಲ್ಲದೇ ನಿಸರ್ಗ ಸಂಪತ್ತನ್ನು, ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದವು. ಕೊರೊನಾ ಬಂದಮೇಲೆ ಎಲ್ಲಕಡೆ ಶಾಂತಿ ನೆಲೆಸಿತ್ತು. ಲಾಕ್ಡೌನ್ ಎಂಬ ಹಠಾತ್ ಎಡವಟ್ಟಿನಿಂದಾಗಿ ಅದೆಷ್ಟೊ ಲಕ್ಷ ಕಾರ್ಮಿಕರು ನೆಲೆತಪ್ಪಿ ಗುಳೆ ಹೊರಟು, ಘನಘೋರ ಸಂಕಷ್ಟಗಳಿಗೆ ತುತ್ತಾಗಿದ್ದನ್ನು ಬಿಟ್ಟರೆ , ಅಭಿವೃದ್ಧಿಯ ಭರಾಟೆಯಿಂದ ನಲುಗಿದ್ದ ನೆಲ-ನೀರು-ಗಾಳಿ-ವನ್ಯಜೀವ ಎಲ್ಲವೂ ತುಸು ಉಸಿರಾಡತೊಡಗಿದವು.

ಕೊರೊನಾ ನಂತರ ಹೊಸ ಭಾರತ ಉದಯಿಸಲಿದೆ ಎಂದು ನಮ್ಮಲ್ಲಿ ಅನೇಕರು ಸಣ್ಣ ಆಸೆಯನ್ನಿಟ್ಟುಕೊಂಡಿದ್ದರು. ಆದರೆ ಈಗಿನ ಸರಕಾರ ರಣವೈದ್ಯದ ವೈಖರಿ ನೋಡಿದರೆ, ಕಾಯಿಲೆಯ ನೆಪದಲ್ಲಿ ದುರ್ಬಲರನ್ನು (ಅಂದರೆ ಉದ್ಯೋಗ ಕಳಕೊಂಡವರನ್ನು, ನಡೆನಡೆದು ಸುಸ್ತಾದವರನ್ನು, ಹಸಿದವರನ್ನು) ಕಂದಕಕ್ಕೆ ದೂಡಿ ಮಣ್ಣು ಮುಚ್ಚಲು ಹೊರಟಂತೆ ಕಾಣುತ್ತದೆ. ನಮ್ಮಲ್ಲಿ ಹಕ್ಕಿಜ್ವರ ಬಂತೆಂದು ಹ್ಯಾಚರಿಯ ಸಾವಿರಾರು ಕೋಳಿಗಳನ್ನು ಕಂದಕಕ್ಕೆ ಹಾಕಿ ಮಣ್ಣು ಮುಚ್ಚಿದ ಹಾಗೆ.

(ಇಲ್ಲೊಂದು ಕ್ರೂರ ವ್ಯಂಗವಿದೆ: ಪ್ರಧಾನಿ ಮೋದಿಯವರು ಘೋಷಿಸಿದ 20 ಲಕ್ಷ ಕೋಟಿಯಲ್ಲಿ ಯಾವಯಾವ ಬಾಬ್ತಿಗೆ ಎಷ್ಟೆಷ್ಟು ಎಂಬುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಲ್ಕು ಟ್ರಾಂಚ್‌ (tranche)ಗಳಲ್ಲಿ ಹಂಚಿದ್ದಾರೆ. ನಾಲ್ಕನೆಯ ಕಂತಿನಲ್ಲಂತೂ ಗಣಿಗಾರಿಕೆ ವಿಸ್ತರಣೆಗೆ, ರಕ್ಷಣಾ ಉತ್ಪಾದನೆ, ವಿಮಾನಯಾನ, ಬಾಹ್ಯಾಕಾಶ ಸಾಹಸಕ್ಕೆ ಇತ್ಯಾದಿಯಂತೆ.

ಟ್ರಾಂಚ್ ಎಂದರೆ ಹೋಳು ಅಥವಾ ಭಾಗ. ಆದರೆ ನೀವು ಗೂಗಲ್ ಕನ್ನಡ ನಿಘಂಟಿನಲ್ಲಿ ಅದರ ಅರ್ಥವನ್ನು ಹುಡುಕಿದರೆ ಟ್ರಾಂಚ್ ಎಂದರೆ ‘ಕಂದಕ’ trench ಎಂಬ ತಪ್ಪು ಅರ್ಥವಿದೆ, ಬೇಕಿದ್ದರೆ ನೋಡಿ. ನಿಜಕ್ಕೂ 40 ಕೋಟಿ ಜನರನ್ನು ಕಂದಕಕ್ಕೆ ಬೀಳಿಸಿ ತಪ್ಪನ್ನೇ ಸರಿಯೆಂದು, trancheನ್ನೇ trench ಎಂದು ತೋರಿಸುವ ಹುನ್ನಾರವೆ?.)

ಹಳ್ಳಿಯ ಜನರು ಹಳ್ಳಿಗೇ ಮರಳಿ ವಲಸೆ ಬಂದಾಗ ಎಷ್ಟೊಂದು ವಿಧಗಳಲ್ಲಿ ಅವರಿಗೆ ನೆರವಾಗಲು ಸಾಧ್ಯವಿತ್ತು. ಅದರ ಕೆಲವು ಯಶಸ್ವೀ ಉದಾಹರಣೆಗಳು ನಮ್ಮಲ್ಲಿವೆ: ಮಹಾರಾಷ್ಟ್ರದಲ್ಲಿ ಹೀವ್ಡೆ ಬಝಾರ್ ಎಂಬ ಗ್ರಾಮವಿದೆ. ನಮ್ಮ ಕೋಲಾರದ ಯಾವುದೇ ಊರಿನ ಹಾಗೆ ಬರೀ 430 ಮಿ.ಮೀ. ಮಳೆ ಬೀಳುವ ಹಳ್ಳಿ.

1980ರ ದಶಕದಲ್ಲಿ ಬಹಳಷ್ಟು ಜನ ದಿಕ್ಕೆಟ್ಟು ಉದ್ಯೋಗ ಹುಡುಕಿ ಮುಂಬೈಗೋ ಪುಣೆಗೋ ಹೋದರು. ಆ ಊರಿನ ಪುಣ್ಯಾತ್ಮನೊಬ್ಬ ಸರಪಂಚನೆಂದು ಆಯ್ಕೆಯಾದ. ಮಳೆಕೊಯ್ಲು ಮಾಡಿಸಿದ. ಗಿಡಮರ ನೆಡಿಸಿದ. ಅಂತರ್ಜಲ ಹೆಚ್ಚಿತು. ಊರು ನಳನಳಿಸಿತು. ಕೃಷಿ, ಕುರಿಸಾಕಣೆ, ಡೇರಿ ಎಲ್ಲಕ್ಕೂ ಚೈತನ್ಯ ಬಂತು.

ಗುಳೆ ಹೋದವರು ಮರಳಿ ಬಂದರು. ಇಂದು ಆ ಊರಲ್ಲಿ (ನಂಬಿ ಇದನ್ನು) ಬಡತನದ ರೇಖೆಗಿಂತ ಕೆಳಗಿದ್ದ 135 ಕುಟುಂಬಗಳು ಮೇಲೆದ್ದು ಬಂದಿವೆ, 60 ಜನರು ದಶಲಕ್ಷಾಧೀಶರಾಗಿದ್ದಾರೆ. ಸರಕಾರಿ ಇಲಾಖೆಗಳ ಅಧಿಕಾರಿಗಳಿಗೆ ಈ ಊರೇ ಈಗ ಪ್ರವಾಸೀ ತಾಣವಾಗಿದೆ. ಬೇಕಿದ್ದರೆ Hewre Bazar ಎಂದು ಅಂತರಜಾಲದಲ್ಲಿ ಹುಡುಕಿ ನೋಡಿ.
ನಗರಮುಖೀ ವಲಸೆಯನ್ನು ಹೀಗೆ ಹಿಮ್ಮೊಗ ತಿರುಗಿಸಲು ಸಾಧ್ಯವೆಂದು ಮೊದಲು ತೋರಿಸಿದವರು ಅಣ್ಣಾ ಹಜಾರೆ ಮತ್ತು ರಾಜೇಂದ್ರ ಸಿಂಗ್.

ತಮ್ಮ ಊರಿನ ನೀರು, ನೆಲ, ಗಾಳಿ, ಬೆಳಕನ್ನೇ ಸಂಪತ್ತನ್ನಾಗಿ ಬಳಸಿಕೊಂಡು ಗ್ರಾಮದ ಸಮೃದ್ಧಿಗೆ ಕಾರಣರಾದ ಬೇರೆ ನೂರಾರು ಜನರ ಉದಾಹರಣೆಗಳು ನಮ್ಮಲ್ಲಿವೆ. ಕೊಯಮತ್ತೂರಿನ ಸಮೀಪದ ಒಡಂತ್ತುರೈ ಗ್ರಾಮ ತನ್ನ ಬಿಸಿಲಿನಿಂದ ಬರುವ ವಿದ್ಯುತ್ತನ್ನೇ ಮಾರಾಟ ಮಾಡುತ್ತ ಗ್ರಾಮಪಂಚಾಯತನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದೆ.

ಕಳೆದ ನಾಲ್ಕು ವರ್ಷಗಳಿಂದ ಆಮಿರ್ ಖಾನ್ ಆರಂಭಿಸಿದ ವಾಟರ್ ಕಪ್ ಮಳೆಕೊಯ್ಲಿನ ಸ್ಪರ್ಧೆಯಿಂದಾಗಿ ಮಹಾರಾಷ್ಟ್ರದಲ್ಲಿ ಅನೇಕ ಹಳ್ಳಿಗಳಲ್ಲಿ ಜಲ ಸಂವರ್ಧನೆ ಆಗಿದ್ದು, ಊರು ಬಿಟ್ಟು ಹೋದವರು ಮರಳಿ ಬರುತ್ತಿದ್ದಾರೆ. ಟ್ಯಾಂಕರ್ ನೀರನ್ನೇ ಆಧರಿಸಿದ್ದ ಬರಪೀಡಿತ ಹಳ್ಳಿಗಳು ಈಗ ತಮ್ಮ ಬಳಿಯ ಹೆಚ್ಚುವರಿ ನೀರನ್ನು ನಗರಕ್ಕೂ ಪೂರೈಸಲು ಮುಂದಾಗಿವೆ. ಇಂಧನ ವನಗಳನ್ನು ಸೃಷ್ಟಿಸಿ ನಗರಗಳಿಗೆ ಬಯೊಡೀಸೆಲ್ಲನ್ನೂ ಒದಗಿಸುವ ಕನಸು ಕಾಣುತ್ತಿದ್ದಾರೆ.

ಇಂಥ ಸ್ವಾವಲಂಬಿ ಗ್ರಾಮಗಳ ಒಂದು ಉದಾಹರಣೆಯೂ ಸರಕಾರದ ಗಮನಕ್ಕೆ ಬರಲೇ ಇಲ್ಲವೆ? ಗ್ರಾಮೀಣ ಜಲಸಂಪತ್ತನ್ನು ಹೆಚ್ಚಿಸುವ ಸರಳ ವಿಧಾನ ಅದಕ್ಕೆ ಗೊತ್ತೇ ಇಲ್ಲವೆ?
ಸರಕಾರ ಮನಸ್ಸು ಮಾಡಿದರೆ, ತಾಲ್ಲೂಕು ಮಟ್ಟದಲ್ಲೇ ಉತ್ತಮ ಗುಣಮಟ್ಟದ ಸಾಬೂನು, ಟೂಥ್ಪೇಸ್ಟ್, ಸೊಳ್ಳೆಪರದೆ, ಸೊಳ್ಳೆಬತ್ತಿ, ಶಾಂಪೂ, ಸುಗಂಧ ತೈಲ, ಪೇಯ, ಪ್ಯಾರಾಸಿಟೆಮಾಲ್, ಆಯುರ್ವೇದ ಔಷಧಗಳು, ಅಷ್ಟೇಕೆ ಗ್ರಾಮಗಳಿಗೆ ಬೇಕಾದ ಪ್ಲಾಸ್ಟಿಕ್ ಚಪ್ಪಲಿಗಳಿಂದ ಹಿಡಿದು ಕೃಷಿ ಸಲಕರಣೆ, ರಸಗೊಬ್ಬರಗಳ ಉತ್ಪಾದನೆಗೆ ಪ್ರೋತ್ಸಾಹ ನೀಡಬಹುದಿತ್ತು.

ಇವನ್ನೆಲ್ಲ ಬೃಹತ್, ನಗರಕೇಂದ್ರಿತ ಉದ್ಯಮಗಳ ಮುಷ್ಟಿಯಿಂದ ತಪ್ಪಿಸಿ ತಾಲ್ಲೂಕು ಮಟ್ಟಕ್ಕೆ ತಂದು ಸ್ಥಳೀಯರಿಗೆ ಉದ್ಯೋಗ ಸಿಗುವಂತೆ ಮಾಡಿ, ವಾಣಿಜ್ಯ ರಂಗದ ಅಸಲೀ ಸ್ವಾವಲಂಬನೆ ಸಾಧಿಸಬಹುದಿತ್ತು. ಅದರ ಬದಲಿಗೆ ಖನಿಜ ಮತ್ತು ಕಲ್ಲಿದ್ದಲ ಗಣಿಗಾರಿಕೆಗೆ ಹೆಬ್ಬಾಗಿಲು ತೆರೆಯಲಿದೆ.

ಕಲ್ಲಿದ್ದಲು ಎಂಬುದೇ ಮಹಾ ವಿಷವೃತ್ತ. ನಮ್ಮ ಎಲ್ಲ ಕಲ್ಲಿದ್ದಲ ನಿಕ್ಷೇಪಗಳೂ ಛತ್ತೀಸಗಢ, ಝಾರ್ಖಂಡ್, ಬಿಹಾರ್‌ನ ದಟ್ಟ ಅರಣ್ಯಗಳಲ್ಲಿವೆ. ಅಲ್ಲಿ ಆದಿವಾಸಿಗಳೂ ಮೂಲನಿವಾಸಿಗಳೂ ಇದ್ದಾರೆ. ಅವರನ್ನೆಲ್ಲ ಗುಡಿಸಿ ಒತ್ತಿ, ಜೀವಲೋಕವನ್ನು ಧ್ವಂಸ ಮಾಡಿ, ತೆರೆದ ಗಣಿಗಳ ಮೂಲಕ ಕಲ್ಲಿದ್ದಲನ್ನು ಸ್ಫೋಟಿಸಿ, (ಚಿತ್ರವನ್ನು ಗಮನಿಸಿ) ನೂರಾರು ಉಷ್ಣವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೆ ಹೊಮ್ಮುವ ಕಾರ್ಬನ್ ಡೈಆಕ್ಸೈಡ್‌ ಇಡೀ ಜಗತ್ತಿಗೇ ಮಾರಕ.

ಹಾರುಬೂದಿ, ಸೆಕೆ ಹೆಚ್ಚಳ, ಜಲಮಾಲಿನ್ಯ ಒಂದಲ್ಲ, ಎರಡಲ್ಲ. ಅಲ್ಲಿಂದ ಪಡೆದ ವಿದ್ಯುತ್ತು ನಗರಗಳ ಮಾಲ್‌ಗಳಿಗೆ.ಮತ್ತು ತರಾವರಿ ಯಂತ್ರಗಳಿಗೆ, ಕೊಳ್ಳುಬಾಕ ಶೋಕಿ ವಸ್ತುಗಳ ಉತ್ಪಾದನೆಗೆ ಹೋಗುತ್ತದೆ. ಅದರ ಲಾಭವೆಲ್ಲ ತಿರ್ಗಾ ಕೋಟ್ಯಧೀಶ ಉದ್ಯಮಿಗಳಿಗೆ.

ನಿಸರ್ಗ ಸಂಪತ್ತನ್ನು ಹೀಗೆ ಲೂಟಿ ಮಾಡಲು ದೊಡ್ಡ ಕಂಪನಿಗಳಿಗೆ ಅನುವು ಮಾಡಿಕೊಡಲೆಂದೇ ತೆರಿಗೆದಾರರ 50 ಸಾವಿರ ಕೋಟಿ ಮೀಸಲಿಡುವುದಾಗಿ ಸರಕಾರ ಘೋಷಿಸಿದೆ. ಅದಕ್ಕೆಂದು ಪರಿಸರ ಸಂರಕ್ಷಣೆಯ ಬಿಗಿ ಕಾನೂನುಗಳನ್ನು ಸಡಿಲ ಮಾಡುವ ಸಿದ್ಧತೆ ಆಗಲೇ ನಡೆದಿದೆ.

ನಿಸರ್ಗದ ದುರಂತ ಕತೆ ಹೀಗೆ. ಹಾಗಿದ್ದರೆ ಮನುಷ್ಯರ ಕತೆ? ಈ ರಣವೈದ್ಯ ಮಾಡಿದರೆ 40 ಕೋಟಿ ಬಡ, ಕಡುಬಡವರ ಹಾಗು ಆದಿವಾಸಿಗಳ ಸ್ಥಿತಿಗತಿ ಉತ್ತಮಗೊಂಡೀತೆ? ಅದೂ ಇಲ್ಲ.
ಮೂಲ ನಿವಾಸಿಗಳಿಗೆ ಅರಣ್ಯಾಧಾರಿತ ಉದ್ಯೋಗ ಕೊಡಲೆಂದು 6000 ಕೋಟಿ ಮೀಸಲಿದೆಯಂತೆ. ಅದರ ಕತೆ ಕೇಳಿ. ಅದು ಖಾಸಗಿಯ ಕಂಪನಿಗಳ ಜಂಟಿ ಯೋಜನೆಯಂತೆ. ಅಂದರೆ ಅರಣ್ಯಗಳಿಗೂ ಕೋಟ್ಯಧೀಶರು ಲಗ್ಗೆ ಇಡಲಿದ್ದಾರೆ. ಮೂಲನಿವಾಸಿಗಳ ಜಮೀನನ್ನು ಮುಗಿಸಿದ ನಂತರ ಮುಂದೇನು ಆದೀತೆಂದು ನಾವು ಊಹಿಸಬಹುದು.

ಆದಿವಾಸಿಗಳ ಕಲ್ಯಾಣವೇ ಮುಖ್ಯ ಗುರಿಯಾಗಿದ್ದಿದ್ದರೆ ಈಗಿರುವ ನರೇಗಾ ಸ್ಕೀಮನ್ನೇ ಸುಧಾರಿಸಿ ಅವರಿಗೂ ವಿಸ್ತರಿಸಬಹುದಿತ್ತು. ಗಿಡ ನೆಡುವ, ಬೇಲಿ ಕಂದಕಗಳಂಥ ಭದ್ರತಾ ಕೆಲಸವನ್ನು ಅವರೇ ಮಾಡಬಹುದಿತ್ತು. ಹಳ್ಳಿಗಳಲ್ಲೂ ನರೇಗಾ ದುಡಿಮೆಯ ಅವಧಿಯನ್ನು ಈಗಿನ 100 ದಿನಗಳ ಬದಲು 200-300 ಅಥವಾ ಅಗತ್ಯವಿದ್ದಷ್ಟು ದಿನಗಳಿಗೆ ವಿಸ್ತರಿಬಹುದಿತ್ತು. ಅದರತ್ತ ಆದ್ಯತೆಯೇ ಇಲ್ಲ.

ಅಷ್ಟೊಂದು ಜನರು ಹಳ್ಳಿಗಳಿಗೆ ಹಿಂದಿರುಗಿದ್ದಾರೆ. ಅವರಿಂದ ಎಷ್ಟೊಂದು ಗ್ರಾಮೀಣ ಅಭಿವೃದ್ಧಿಯ ಕೆಲಸ ಮಾಡಿಸಬಹುದಿತ್ತು. ಹಳ್ಳಿಗಳಿಗೆ ಹಿಂದಿರುಗಿದ ಆ ನತದೃಷ್ಟರಿಗೆ ಯಾವ ನೆರವೂ ಇಲ್ಲ. ನಗರ ನಿರ್ಮಾಣದಲ್ಲಿ ತೊಡಗಿದ್ದ ಅವರಲ್ಲಿ ಅನೇಕರು ಹಿಂದೆಲ್ಲ ಚುನಾವಣೆ ಬಂದಾಗ ತಮ್ಮದೇ ಖರ್ಚಿನಲ್ಲಿ ಊರಿಗೆ ಹೋಗಿ ಮತ ಹಾಕಿ ಈ ಸರಕಾರವನ್ನು ನಿಲ್ಲಿಸಿದವರು. ಪ್ರಧಾನಿಯವರ ಒಂದು ಅವಸರದ ಲಾಕ್‌ಡೌನ್‌ ಘೋಷಣೆಯಿಂದಾಗಿ ಇಡೀ ಜಗತ್ತೇ ಕಂಬನಿ ಮಿಡಿಯುವಂಥ ದುರ್ದೆಸೆಗೆ ಈಡಾದವರು. ಅವರ ಕೈ ಹಿಡಿಯುವ ಬದಲು ಬಹುಕೋಟ್ಯಧೀಶರ ಕೈ ಹಿಡಿಯಲು ಸರಕಾರ ಹೊರಟಿದೆ.

ದೇಶದ 20 ಕೋಟಿ ಮಹಿಳೆಯರ ಜನ್‌ಧನ್ ಖಾತೆಗೆ ತಿಂಗಳಿಗೆ 500 ರೂ. ಜೊತೆಗೆ 80 ಕೋಟಿ ಜನರಿಗೆ 6 ಕಿಲೊ ಧಾನ್ಯವನ್ನು ಮೂರು ತಿಂಗಳ ಅವಧಿಗೆ ಕೊಡುವುದಾಗಿ ಸರಕಾರ ಮಾರ್ಚ್‌ನಲ್ಲಿ ಹೇಳಿತ್ತು. ಅದನ್ನು ಇನ್ನೂ ಮೂರು ತಿಂಗಳಿಗೆ ವಿಸ್ತರಿಸಬಹುದಿತ್ತು. ಈ ತೀರಾ ಜುಜುಬಿ ಸಹಾಯದ ಮೊತ್ತವನ್ನು ಹೆಚ್ಚಿಸಬಹುದಿತ್ತು. ಹೆಚ್ಚಿಸುವುದು ಹಾಗಿರಲಿ, ಸರಕಾರದ್ದೇ ದಾಖಲೆಗಳ ಪ್ರಕಾರ ಈ ನೆರವೂ ಶೇ. 25ರಷ್ಟು ಜನರಿಗೆ ಮಾತ್ರ ತಲುಪಿದೆ. ಕೇವಲ 110 ಲಕ್ಷ ಟನ್ ಧಾನ್ಯ ಮಾತ್ರ ವಿತರಣೆಯಾಗಿದೆ.

ಹಾಗೆಂದು ನಮ್ಮ ದೇಶ ಅಷ್ಟೊಂದು ದರಿದ್ರ ಸ್ಥಿತಿಯಲ್ಲೇನೂ ಇಲ್ಲ. ತಜ್ಞರ ಲೆಕ್ಕಾಚಾರದ ಪ್ರಕಾರ ಕೆಲಸ ಕಳೆದುಕೊಂಡವರಿಗೆ ತಿಂಗಳಿಗೆ 7 ಸಾವಿರ ನಗದು ಮತ್ತು ದೇಶದ ಶೇ. 80ರಷ್ಟು ಜನಕ್ಕೆ ತಿಂಗಳಿಗೆ ಹತ್ತು ಕಿಲೊ ಧಾನ್ಯದಂತೆ ಆರು ತಿಂಗಳವರೆಗೆ ಉಚಿತವಾಗಿ ಕೊಟ್ಟಿದ್ದರೂ ನಮ್ಮ ಜಿಡಿಪಿಯ ಕೇವಲ 3%ರಷ್ಟು ವೆಚ್ಚವಾಗುತ್ತಿತ್ತು. ಅದನ್ನಂತೂ ಮಾಡಲಿಲ್ಲ. ತನ್ನ ಬಹುತೇಕ ವೈಫಲ್ಯಗಳಿಗೆ ರಾಜ್ಯಗಳನ್ನು ದೂರುವುದನ್ನು ಬಿಟ್ಟು ಸರಕಾರ ಏನನ್ನೂ ಮಾಡಲಿಲ್ಲ. ರಾಜ್ಯಗಳಿಗೂ ಸಿಗಬೇಕಾದ ಧನಸಹಾಯವನ್ನು ಪೂರ್ತಿ ನೀಡಲಿಲ್ಲ.

ಈಗ ಟ್ರಾಂಚ್ 3ರ ಕತೆ ಕೇಳಿ.
ಸಣ್ಣ ಮತ್ತು ಮಧ್ಯಮ ಉದ್ಯಮ(MSME)ಗಳು ಚೇತರಿಸಿಕೊಳ್ಳಲೆಂದು 3.7 ಲಕ್ಷ ಕೋಟಿ ಸಾಲ ಕೊಡುವುದಾಗಿ ಸರಕಾರ ಹೇಳಿದೆ. ಅದು ಆಮೇಲಾಗಲಿ, ಈವರೆಗೆ ಸಂದಾಯವಾಗಬೇಕಿದ್ದ 5 ಲಕ್ಷ ಕೋಟಿ ಬಾಕಿ ಹಣವನ್ನು ಮೊದಲು ಕೊಡ್ರಪ್ಪಾ ಎಂದು MSME ಗಳು ಕೇಳುತ್ತಿವೆ. ಅದಂತೂ ಬಾಕಿ ಇದೆ. ಈ ಹೊಸ ಸಾಲವನ್ನು ಪಡೆದು ಉತ್ಪಾದನೆ ಆರಂಭಿಸೋಣವೆಂದರೆ ಕಾರ್ಮಿಕರು ಎಲ್ಲಿದ್ದಾರೆ? ಅಂದಾಜು 12 ಕೋಟಿ ಕಾರ್ಮಿಕರು ಕೆಲಸ ಕಳೆದುಕೊಂಡು ತಂತಮ್ಮ ಹಳ್ಳಿಗಳಿಗೆ ಹೋಗಿದ್ದಾರೆ.

ಅವರು ಮರಳಿ ಬಾರದಂತೆ ಮಾಡಲು ಹೊಸ ಕಾರ್ಮಿಕ ನೀತಿಗಳನ್ನು ಜಾರಿಗೆ ತರಲು ಸರಕಾರ ಹೊರಟಿದೆ. ಕೆಲಸಗಾರರ ಹಕ್ಕುಗಳನ್ನೇ ಮೊಟಕುಗೊಳಿಸಿ ಅವರ ದುಡಿಮೆಯ ಅವಧಿಯನ್ನು 50% ಜಾಸ್ತಿ ಮಾಡುತ್ತಾರಂತೆ. ಸರಿ, ಕಾರ್ಮಿಕರು ಹೇಗೋ ಬಂದು ಉತ್ಪಾದನೆ ಆರಂಭಿಸಿದರೂ ಫ್ಯಾಕ್ಟರಿಯ ಉತ್ಪನ್ನಗಳನ್ನು ಖರೀದಿಸಲು ಜನರ ಬಳಿ ಹಣ ಎಲ್ಲಿದೆ? ಅದಕ್ಕೆ ಈಗ ಟ್ರಾಂಚ್‌ 4ನ್ನು ಹಣಕಾಸು ಸಚಿವೆ ಘೋಷಣೆ ಮಾಡಿದೆ.

ಹಣದ ಚಲಾವಣೆ ಹೆಚ್ಚಿಸಲೆಂದೇ ಎಗ್ಗಿಲ್ಲದ ಗಣಿಗಾರಿಕೆ, ಹೊಸ ವಿಮಾನ ನಿಲ್ದಾಣ ನಿರ್ಮಾಣ, ರಕ್ಷಣಾ ಸಾಮಗ್ರಿ ಉತ್ಪಾದನೆ, ಬಾಹ್ಯಾಕಾಶ ಎಲ್ಲವನ್ನೂ ಖಾಸಗಿ ಕಂಪನಿಗಳಿಗೆ ವಹಿಸುತ್ತಾರಂತೆ. ಲಾಕ್‌ಡೌನ್‌ ಸಡಿಲವಾಗುವ ಮೊದಲೇ ದೇಶದ ಹಿತಾಸಕ್ತಿಯನ್ನು ಕಾಯಬೇಕಿದ್ದ ನಿಯಮಗಳನ್ನೇ ಸಡಿಲ ಮಾಡಲಾಗುತ್ತಿದೆ.

ಅದಕ್ಕೇ, ‘ವಲಸಿಗರಿಗೆ ಮನೆ ತಲುಪಲು ಸಾಧ್ಯವಾಗುತ್ತಿಲ್ಲ; ಬಾಹ್ಯಾಕಾಶಕ್ಕೆ ಹೋಗಲು ಧನಿಕರಿಗೆ ಅನುಕೂಲ ಮಾಡುತ್ತಾರಂತೆ’ ಎಂದು ಜೈರಾಮ್ ರಮೇಶ್ ಕುಟುಕಿದ್ದಾರೆ. ಯಾರೆಷ್ಟೇ ಕುಟಕಿದರೂ ಪ್ರಭುತ್ವಕ್ಕೆ ವಂದಿಮಾಗಧರ ಮತ್ತು ಬಹುಕೋಟ್ಯಧೀಶರ ಭೋಪರಾಕ್ ಮಾತ್ರ ಕೇಳಿಸುತ್ತದೆ. ಕಂದಕಕ್ಕೆ ಕುಸಿದವರ ಆಕ್ರಂದನ ಮಾತ್ರ ಕೇಳಿಸುತ್ತಿಲ್ಲ.

ಅರಣ್ಯವಾಸಿಗಳನ್ನು ಹೊರಗಟ್ಟುವ ಗಣಿಗುತ್ತಿಗೆದಾರರ ಷಡ್ಯಂತ್ರದ ವಿರುದ್ಧ ಆದಿವಾಸಿಗಳ ಒಂದು ಸೊಗಸಾದ ಪ್ರತಿಭಟನಾ ಲಾವಣಿಯನ್ನು ಈ ಕೊಂಡಿಯಲ್ಲಿದೆ: ಕ್ಲಿಕ್ ಮಾಡಿ ನೋನೋಡಿ

https://www.youtube.com/watch?v=sFmsl7KrZn8

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending